ದಿನದ ಸುದ್ದಿ
ಬೇಸಿಗೆ ಬೆಳೆಗಳಿಗೆ ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯವಿಲ್ಲ : ಸಚಿವ ಗೋವಿಂದ ಕಾರಜೋಳ
ಸುದ್ದಿದಿನ, ಬೆಳಗಾವಿ : ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಈಗಾಗಲೇ ಜಲಾಶಯಗಳಲ್ಲಿ ನೀರು ಸಂಗ್ರಹಿಸಲಾಗಿದ್ದು, ಕುಡಿಯುವ ನೀರಿನ ತೊಂದರೆ ಎದುರಾದರೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಕ್ಕೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮತ್ತು ನಗರ ಭಾಗಕ್ಕೆ ನಗರಾಭಿವೃದ್ಧಿ ಇಲಾಖೆಗೆ ನೀರು ಪೂರೈಸುವ ಜವಾಬ್ದಾರಿ ನೀಡಲಾಗಿದೆ. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೇ ಇದ್ದರೂ ಪರಿಹಾರ ಮಾಡಲು ಸೂಚನೆ ಕೊಡುತ್ತೇನೆ. ಜಲಾಶಯದಲ್ಲಿ ಬೇಸಿಗೆಗೆ ಅಗತ್ಯವಿರುವಷ್ಟು ನೀರು ಸಂಗ್ರಹಿಸಿದ್ದೇವೆ ಎಂದು ಹೇಳಿದರು.
ಬೇಸಿಗೆ ಕಾಲದಲ್ಲಿ ಕುಡಿಯುವ ಉದ್ದೇಶಕ್ಕೆ ನೀರು ಬಳಕೆ ಮಾಡಿಕೊಳ್ಳುತ್ತಿದ್ದು, ಬೇಸಿಗೆ ಕಾಲದಲ್ಲಿ ಬೆಳೆಗಳಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಕೇಂದ್ರದ ಮಹತ್ವಾಕಾಂಕ್ಷೆಯ ಜಲ ಜೀವನ್ ಅಭಿಯಾನ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಕ್ರಮ ಜರುಗಿಸಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243