ದಿನದ ಸುದ್ದಿ
ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ,ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲೇ ನಮ್ಮ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ/ನೌಕರರ ಶ್ರಮವೂ ಕಾರಣವಾಗಿದೆ. ಅವರನ್ನು ಈ ಸಮಯದಲ್ಲಿ ಸ್ಮರಿಸುತ್ತಾ ಅಭಿನಂದಿಸುತ್ತೇನೆ. ಈ ಪರಂಪರೆ ಹೀಗೇ ಮುಂದುವರೆಸುವ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿ ನಿಮ್ಮ ಮೇಲಿದೆ. ನಮ್ಮ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ನಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದಾದ್ದರಿಂದ ಆಡಳಿತ ಯಂತ್ರದ ಬಗ್ಗೆ ಸ್ಪಷ್ಟತೆ ಇರಬೇಕು.
ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಆದ್ದರಿಂದ ನಾವು ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಟೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನತೆಗೆ ಅಭಿವೃದ್ದಿಯ ಫಲ ನೀಡಲು ಸಾಧ್ಯ.
ಪ್ಯೂನ್ನಿಂದ ಹಿಡಿದು ಅಧಿಕಾರಿವರೆಗೆ ತಮ್ಮ ಅಧಿಕಾರವನ್ನು ಜನಪರವಾಗಿ ಬಳಸಬೇಕು. ಕಾನೂನು ಬದ್ದವಾಗಿ ಕೆಲಸ ಮಾಡಬೇಕು. ವಿವೇಚನೆ ಬಳಸುವ ಸಂದರ್ಭದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿ ಪರವಾಗಿ ಚಿಂತಿಸಿ ನಿರ್ಣಯ ಕೈಗೊಳ್ಳಬೇಕು. ಶ್ರೀಮಂತನ ಪರವಾಗಿ ಅಲ್ಲ. ಬಡವರು, ಜನ ಸಾಮಾನ್ಯರ ಪರವಾದ ನಿರ್ಣಯ ಕೈಗೊಳ್ಳಬೇಕು ಎಂದರು.
ಆಡಳಿತ ಸುಧಾರಣೆ 2ನೇ ಆಯೋಗದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗುಕೊಂಡಿದ್ದೇವೆ. ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳು ಸರ್ಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಸರ್ಕಾರಿ, ಖಾಸಗಿ ಎಲ್ಲರ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಿದೆ. ಈಗ ನಮ್ಮ ಚಿಂತನೆ, ಕಾರ್ಯವೈಖರಿಗಳು ಬದಲಾಗಬೇಕು.
ಗ್ರಾ.ಪಂ ಯಿಂದ ಹಿಡಿದು ವಿಧಾನಸೌಧದ ವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ನೀವು ನಿಗದಿತ ಅವಧಿಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಜನಪರ ಕಳಕಳಿಯನ್ನು ತೋರುತ್ತದೆ. ಜನರ ಓಡಾಟ ತಪ್ಪಿಸುತ್ತದೆ, ಭ್ರಷ್ಟರನ್ನಾಗುವುದನ್ನು ತಪ್ಪಿಸುತ್ತದೆ, ಆರೋಪವನ್ನು ತಪ್ಪಿಸುತ್ತದೆ.
ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ. ಅದಕ್ಕೆ ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ. ಬನ್ನಿ ಬದಲಾವಣೆ ಮಾಡೋಣ. ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ, ಆಳುವ ರೀತಿಯನ್ನು ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ ದಲಿತರು ಸೇರಿದಂತೆ ಎಲ್ಲರ ಅಭಿವೃದ್ದಿಗಾಗಿ ಸ್ಥಿತಪ್ರಜ್ಞ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ನಮ್ಮ ರಾಜ್ಯ ಘನ ಸರ್ಕಾರವು ಸರ್ಕಾರಿ ನೌಕರರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಹ ವೇತನ ಮತ್ತು ಸೌಲಭ್ಯಗಳನ್ನು ನೀಡಿದೆ. ಕಾನೂನು ರೂಪಿಸುವವರು ನಾವಾದರೂ ಅದನ್ನು ಜಾರಿಗೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ಸಾಕಷ್ಟು ಅಭಿವೃದ್ದಿ ಕಾರ್ಯಗಳಾದ ಬಗ್ಗೆ ಹೆಮ್ಮ, ಗೌರವ ಸಲ್ಲುತ್ತಿರುವುದು ಕೂಡ ನಿಮ್ಮ ಪರಿಶ್ರಮದಿಂದ ಎಂದ ಹೇಳಬಯಸುತ್ತೇನೆ.
ಸರ್ಕಾರದ ಕೆಲಸ ದೇವರ ಕೆಲಸವಾಗಿದ್ದು ಎಲ್ಲರೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ಒದಗಿಸಬೇಕು. ನಾವೆಲ್ಲ ಸೇರಿ ಸರ್ವಾಂಗೀಣ ಅಭಿವೃದ್ದಿ ಮಾಡೋಣ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದು, ದೇಶದಲ್ಲೇ ಪ್ರಥಮವಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಘೋಷಿಸಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಸರ್ಕಾರಿ ನೌಕರರು ಅನೇಕ ಒತ್ತಡಗಳು, ಸಮಸ್ಯೆಗಳು ಮತ್ತು ಸವಾಲುಗಳ ನಡುವೆಯೂ ತಮ್ಮ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಮನವಿಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಕೇಂದ್ರಕ್ಕೆ ಸಮಾನ ವೇತನ ನೀಡಲು ವೇತನ ಆಯೋಗ ರಚನೆ ಸೇರಿದಂತೆ ನೌಕರರ ಹಿತರಕ್ಷಕರಾಗಿರುವ ಅವರಿಗೆ ಎಲ್ಲ ನೌಕರರ ಪರವಾಗಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ.ಅಶ್ವಥನಾರಾಯಣ, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಶಾಸಕರಾದ ಲಕ್ಷ್ಮಣ ಸವದಿ, ಶಾಸಕ ಅಶೋಕ್ನಾಯ್ಕ್ ಎಂಎಡಿಬಿ ಅಧ್ಯಕ್ಷರಾದ ಗುರುಮೂರ್ತಿ, ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ, ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಶಾಖೆ ಪದಾಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

