ದಿನದ ಸುದ್ದಿ
ಗೃಹಲಕ್ಷ್ಮೀ ಯೋಜನೆಗೆ ವರ್ಷ ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ
ಸುದ್ದಿದಿನಡೆಸ್ಕ್: ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಹಿಸಿದ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದರು.
ಚುನಾವಣೆ ಪ್ರಣಾಳಿಕೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ವಾಗ್ದಾನ ನೀಡಿದಾಗ ವಿರೋಧ ಪಕ್ಷಗಳು ಇದು ಕೇವಲ ಚುನಾವಣೆ ಗಿಮಿಕ್ ಎಂದಿದ್ದವು. ಆದರೆ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಯೋಜನೆ ಜಾರಿ ಮಾಡಿ ರಾಜ್ಯದ ಅರ್ಹ ಮಹಿಳೆಯರ ಖಾತೆಗೆ ಪ್ರತಿ ಮಾಹೆ ರೂ.2000 ಜಮೆ ಮಾಡಲಾಗುತ್ತಿದೆ. ಇದುವರೆಗೂ ಜೂನ್ ಮಾಹೆಯವರೆಗಿನ ಗೃಹಲಕ್ಷ್ಮೀ ಹಣವನ್ನು ಜಮೆ ಮಾಡಲಾಗಿದೆ. ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು 5 ರಿಂದ 10 ದಿನದೊಳಗೆ ಜಮೆ ಮಾಡುವುದಾಗಿ ಹೇಳಿದರು.
ಗೃಹಲಕ್ಷ್ಮೀ ಯೋಜನೆಯಡಿ ಇದುವರೆಗೂ ರೂ.26,260 ಕೋಟಿ ಹಣ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣ, ದೇಶದ ಸಣ್ಣ ಪುಟ್ಟ ರಾಜ್ಯಗಳ ವಾರ್ಷಿಕ ಆಯವ್ಯಯಕ್ಕೆ ಸಮನಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಯೋಜನೆ ಲಾಭ ಪಡೆದ ಮಹಿಳೆಯರು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮೂಲಕ ಹಿಮ್ಮಾಯಿತಿ ನೀಡಬಹುದು. ಫೇಸ್ಬುಕ್, ಯುಟ್ಯೂಬ್, ಇನ್ಸ್ಟಾಗ್ರಾಂ ಮೂಲಕ ಅಭಿಪ್ರಾಯವನ್ನು ರೀಲ್ಸ್ ವಿಡಿಯೋ ಮೂಲಕ ವ್ಯಕ್ತಪಡಿಸಲು ಕೋರಿದ್ದು, ಅತ್ಯುತ್ತಮ ವಿಡಿಯೋ ರೀಲ್ಸ್ಗೆ ಬಹುಮಾನ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದರು.
ಪಿಂಚಣಿ ಅದಾಲತ್ ನಡೆಸಿ
ಸಂಧ್ಯಾ ಸುರಕ್ಷಾ, ಮನಸ್ವಿನಿ, ಮೈತ್ರಿ, ಅಂಗವಿಕಲರ ಮಾಸಾಶನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳು ಅರ್ಹರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪಿಂಚಣಿ ಅದಾಲತ್ ನಡೆಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ 3-4 ತಿಂಗಳಿಂದ ಮಾಸಾಶನ ಬರುತ್ತಿಲ್ಲ ಎಂದು ದೂರುಗಳಿದ್ದು, ಈ ಹಿನ್ನಲೆಯಲ್ಲಿ ಪಿಂಚಣಿ ಹಣ ಅರ್ಹರಿಗೆ ಸಮರ್ಪಕವಾಗಿ ವಿತರಣೆಗೆ ಕ್ರಮವಹಿಸಬೇಕು. ಕಾಲಕಾಲಕ್ಕೆ ಪಿಂಚಣಿ ಅದಾಲತ್ ನಡೆಸಿ, ಅವರ ಸಮಸ್ಯೆಗಳನ್ನು ಬಗೆಹರಿಸಬೇಕು. ಅಂಗವಿಕಲರು, ವಯೋವೃದ್ಧರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243