ರಾಜಕೀಯ
ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿ-1: ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನಿಲ್ಲಿಸಿರುವ ಮೋದಿ ಸರಕಾರ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/12/Gst-narendra-modi-Suddidina-6.jpg&description=ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿ-1: ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನಿಲ್ಲಿಸಿರುವ ಮೋದಿ ಸರಕಾರ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/12/Gst-narendra-modi-Suddidina-6.jpg&description=ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿ-1: ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನಿಲ್ಲಿಸಿರುವ ಮೋದಿ ಸರಕಾರ', 'pinterestShare', 'width=750,height=350'); return false;" title="Pin This Post">
ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ. ಬದಲಿಗೆ ರಾಜ್ಯಗಳನ್ನು ಆರ್ಥಿಕವಾಗಿ ಹಿಂಡಲು ಮುಂದಾಗುತ್ತದೆ, ರಾಜ್ಯಗಳಿಗೆ ಜಿಎಸ್ಟಿ ನಷ್ಟ ಪರಿಹಾರದ ಹಣ ಕೊಡುವುದನ್ನು ನಿಲ್ಲಿಸುತ್ತದೆ, ಬಡವರ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಕಡಿತವನ್ನು ಮಾಡುತ್ತದೆ. ಅದು, ಹಣಕಾಸು ಬಂಡವಾಳವು ಅರ್ಥವ್ಯವಸ್ಥೆಗೆ ಆಘಾತ ತಲುಪಿಸುವಂತಹ ಆಜ್ಞೆಗಳನ್ನು ಕೊಂಡೊಯ್ಯುವ ಕೊಳವೆಯ ಪಾತ್ರ ವಹಿಸಿದೆ. ಇಲ್ಲಿ ನವ ಉದಾರ ಆಳ್ವಿಕೆಯ ವಿಕೃತಿಯ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.
-ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ. ನಾಗರಾಜ್
ಒಂದು ಅರ್ಥವ್ಯವಸ್ಥೆಯಲ್ಲಿ ವರಮಾನಗಳ ವೃದ್ಧಿ ನಿಧಾನಗೊಳ್ಳುತ್ತಿರುವಾಗ, ಸರ್ಕಾರದ ತೆರಿಗೆ ಆದಾಯದ ಬೆಳವಣಿಗೆಯೂ ನಿಧಾನಗೊಳ್ಳುತ್ತದೆ. ಆದಾಗ್ಯೂ, ಸರ್ಕಾರಕ್ಕೆ ಕೆಲವು ನಿರ್ದಿಷ್ಟ ವೆಚ್ಚಗಳನ್ನು ಕೈಗೊಳ್ಳಲೇಬೇಕಾದ ಅನಿವಾರ್ಯತೆ ಇರುತ್ತದೆ. ಅಂತಹ ಅನಿವಾರ್ಯ ವೆಚ್ಚಗಳನ್ನು ಹೊಂದಿಸಿಕೊಳ್ಳುವ ಸಲುವಾಗಿ, ಸರ್ಕಾರವು ಅಧಿಕ ತೆರಿಗೆಗಳನ್ನು ಹೇರಬೇಕಾಗುತ್ತದೆ; ಇಲ್ಲವೇ ಸಾಲಮಾಡಬೇಕಾಗುತ್ತದೆ (ಅಂದರೆ, ವಿತ್ತೀಯ ಕೊರತೆಯ ಗಾತ್ರ ದೊಡ್ಡದಾಗುತ್ತದೆ).
ಮಹಾ ಯದ್ಧಾನಂತರದ ಕಾಲದಲ್ಲಿ ಎಲ್ಲ ಬಂಡವಾಳಶಾಹಿ ದೇಶಗಳೂ (ಆಗ, ಈ ದೇಶಗಳು ತಮ್ಮ ಅರ್ಥವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿದ್ದವು) ತಮ್ಮ ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತಮ್ಮ ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದವು, ಅಂದರೆ ಸಾಲ ಮಾಡುತ್ತಿದ್ದವು. ಸಾಲ ಮಾಡಿದ ಹಣವನ್ನು ಸರ್ಕಾರಗಳು ಧಾರಾಳವಾಗಿ ಖರ್ಚು ಮಾಡುತ್ತಿದ್ದ ಕಾರಣದಿಂದಾಗಿ, ಬೇಡಿಕೆ ಕುದುರುತ್ತಿತ್ತು ಮತ್ತು ಅರ್ಥವ್ಯವಸ್ಥೆಯು ಚೇತರಿಸಿಕೊಳ್ಳುತ್ತಿತ್ತು. ಇಂತಹ ವಿದ್ಯಮಾನವನ್ನು ಒಂದು ಸ್ವಯಂ ಸ್ಥಿರಕಾರಿ (automatic stabiliser) ಎಂಬುದಾಗಿ ಅರ್ಥಶಾಸ್ತ್ರದ ಪಠ್ಯ ಪುಸ್ತಕಗಳು ತಿಳಿಸುತ್ತವೆ.
ಸರ್ಕಾರಗಳು ಸಂದರ್ಭಾನುಸಾರವಾಗಿ ಸಾಲ ಮಾಡಿ ಅದನ್ನು ಖರ್ಚು ಮಾಡುತ್ತಿದ್ದ ಸಂಗತಿಯು, ತಮ್ಮ ಸಾಮಾಜಿಕ ಮತ್ತು ಆರ್ಥಿಕ ನೀತಿಗಳ ಮೇಲೆ ಎಲ್ಲ ದೇಶಗಳೂ ನಿಯಂತ್ರಣ ಹೊಂದಿದ್ದ ಕಾಲದಲ್ಲಿ ಸಂಗತವಾಗಿತ್ತು. ಆದರೆ, ನವ ಉದಾರವಾದದ ಆಳ್ವಿಕೆಯಲ್ಲಿ ಈ ಸಂಗತಿಯು ಅಸಂಗತವಾಗಿದೆ. ನವ ಉದಾರವಾದದ ಆಳ್ವಿಕೆಯಲ್ಲಿ, ಅರ್ಥವ್ಯವಸ್ಥೆಯ ಮಂದಗತಿಯಿಂದಾಗಿ ತೆರಿಗೆ ಸಂಗ್ರಹ ಇಳಿದಾಗ, ಸರ್ಕಾರವು ಬಂಡವಾಳಗಾರರ ಮೇಲೆ ಅಧಿಕ ತೆರಿಗೆ ವಿಧಿಸಲೂ ಆಗದ ಅಥವಾ ಹೆಚ್ಚು ಸಾಲ ಮಾಡಲೂ ಆಗದ ಪರಿಸ್ಥಿತಿಯಲ್ಲಿದೆ.
ಏಕೆಂದರೆ, ಈ ಎರಡೂ ಕ್ರಮಗಳನ್ನು ಅಂತಾರಾಷ್ಟ್ರೀಯ ಹಣ ಕಾಸು ಬಂಡವಾಳವು ವಿರೋಧಿಸುತ್ತದೆ. ಅದರ ಈ ನಿಲುವಿಗೆ ಸರ್ಕಾರ ಒಪ್ಪಿಕೊಳ್ಳದಿದ್ದರೆ ಬಂಡವಾಳವು ದೇಶದಿಂದ ಪಲಾಯನ ಮಾಡಿ ಒಂದು ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ. ಒಂದು ವೇಳೆ, ದುಡಿಯುವ ಜನತೆಯ ಮೇಲೆ ಅಧಿಕ ತೆರಿಗೆಗಳ ಭಾರ ಹೊರಿಸಿದರೆ, ಆಗಲೂ, ಒಟ್ಟಾರೆ ಬೇಡಿಕೆ ವೃದ್ಧಿಸುವುದಿಲ್ಲ. ಹಾಗಾಗಿ, ಅರ್ಥವ್ಯವಸ್ಥೆಯ ಮಂದಗತಿ ನಿಲ್ಲದು.
ಒಂದು ವಾಸ್ತವಾಂಶವಾಗಿ ಹೇಳುವುದಾದರೆ, ಅಮೇರಿಕಾ ದೇಶವನ್ನು ಹೊರತುಪಡಿಸಿದರೆ, ಎಲ್ಲಾ ದೇಶಗಳೂ ತಮ್ಮ ವಿತ್ತೀಯ ಕೊರತೆಯು ತಮ್ಮ ದೇಶದ ಜಿಡಿಪಿಯ 3% ಮೀರದಂತೆ ಕಾನೂನು ಮಾಡಿಕೊಂಡಿವೆ. ಭಾರತದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವಿತ್ತೀಯ ಕೊರತೆಯು ತಮ್ಮ ತಮ್ಮ ಜಿಡಿಪಿಯ 3% ಮೀರದಂತೆ ಕಾನೂನು ಮಾಡಿಕೊಂಡಿವೆ. ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತೆರಿಗೆ ಸಂಗ್ರಹವೂ ಇಳಿಯಲೇಬೇಕಾಗುತ್ತದೆ. ಹಾಗಾಗಿ ಸರ್ಕಾರವು ಸಾರ್ವಜನಿಕರಿಗಾಗಿ ಕೈಗೊಳ್ಳುವ ಖರ್ಚುಗಳೂ ಇಳಿಯುತ್ತವೆ.
ಆದ್ದರಿಂದ, ಒಂದು ನವ ಉದಾರ ಆಳ್ವಿಕೆಯಲ್ಲಿ, ಸರ್ಕಾರವು ಕೈಗೊಳ್ಳುವ ಖರ್ಚು ವೆಚ್ಚಗಳು, ಬೇಡಿಕೆ ಕುದುರಿಸುವ ಮತ್ತು ಅರ್ಥವ್ಯವಸ್ಥೆ ಚೇತರಿಸಿಕೊಳ್ಳುವ ಸ್ವಯಂ ಸ್ಥಿರಕಾರಿ ಪರಿಣಾಮವನ್ನು ನವ ಉದಾರ ಆಳ್ವಿಕೆ ಬರುವ ಮೊದಲಿನ ರೀತಿಯಲ್ಲಿ ಬೀರುವುದಿಲ್ಲ. ಮೇಲಾಗಿ, ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತೆರಿಗೆ ಸಂಗ್ರಹವೂ ಇಳಿಯುತ್ತದೆ ಮತ್ತು ಸರ್ಕಾರವು ಸಾರ್ವಜನಿಕರಿಗಾಗಿ ಕೈಗೊಳ್ಳುವ ಖರ್ಚುಗಳೂ ಇಳಿಯುತ್ತವೆ.
ಅದರ ಪರಿಣಾಮವಾಗಿ ಅರ್ಥವ್ಯವಸ್ಥೆಯು ಇನ್ನೂ ಹೆಚ್ಚಿನ ಮಂದಗತಿಗೆ ಇಳಿಯುತ್ತದೆ. ಸರ್ಕಾರದ ಕಡಿಮೆ ಖರ್ಚುಗಳು ಆವರ್ತಗಳಲ್ಲಿ ಉಂಟಾಗುವ ಬಿಕ್ಕಟ್ಟಿಗೆ ಇಂಬು ಕೊಡುತ್ತವೆ ಎಂದು ಹೇಳುವುದುಂಟು. ಬಿಕ್ಕಟ್ಟು ಯಾವಾಗಲೂ ಆವರ್ತನಗೊಳ್ಳುತ್ತದೆ ಎಂದು ಸೂಚಿಸುವ ಕಾರಣದಿಂದ ಈ ಹೇಳಿಕೆಯು ನಮ್ಮನ್ನು ತಪ್ಪುದಾರಿಗೆ ಎಳೆಯುತ್ತದೆ.
ಅನಿವಾರ್ಯ ವೆಚ್ಚಗಳನ್ನು ಹೊಂದಿಸಿಕೊಳ್ಳುವ ಸಲುವಾಗಿ ಸರ್ಕಾರಗಳು ಹೆಚ್ಚಿನ ಮಟ್ಟದ ಸಾಲ ಮಾಡುವ ಕ್ರಮವನ್ನು ವಿತ್ತೀಯ ಹೊಣೆಗಾರಿಕೆಯ ಹೆಸರಿನಲ್ಲಿ ಕೈಬಿಡಲಾಗಿದೆ ಮತ್ತು ಎಲ್ಲ ಸರ್ಕಾರಗಳು ವಿತ್ತೀಯ ಶಿಸ್ತು ಪಾಲಿಸುವಂತೆ ಆಜ್ಞಾಪಿಸಲಾಗಿದೆ. ಹಿಂದೆ, ಸರ್ಕಾರಗಳು ಸಂದರ್ಭಕ್ಕನುಸಾರವಾಗಿ ಹೆಚ್ಚಿನ ಮಟ್ಟದ ಸಾಲ ಮಾಡುತ್ತಿದ್ದ ಕ್ರಮವು ಅರ್ಥವ್ಯವಸ್ಥೆಯು ಮಂದಗತಿಗೆ ಇಳಿಯದಂತೆ ರಕ್ಷಿಸುವ ಒಂದು ತಡೆ ಗೋಡೆಯಂತೆ ಕೆಲಸ ಮಾಡುತ್ತಿತ್ತು. ಅಂತಹ ಕ್ರಮವನ್ನು ವಿರೋಧಿಸುವ ನವ ಉದಾರ ಆಳ್ವಿಕೆಯ ಹಠಮಾರಿತನದ ನಿಲುವು ಅರ್ಥವ್ಯವಸ್ಥೆಯ ಮಂದಗತಿಯನ್ನು ಅಧಿಕಗೊಳಿಸುತ್ತದೆ. ಈ ಅಂಶವೇ ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿಯ ತಿರುಳು.
ಈ ಹಿನ್ನೆಲೆಯಲ್ಲಿ, ತಾನು ಸಿಲುಕಿರುವ ಇಕ್ಕಟ್ಟಿನಿಂದ ನುಣಿಚಿಕೊಳ್ಳಲು ಸರ್ಕಾರವು ಎಲ್ಲ ರೀತಿಯ ಕುಯುಕ್ತಿಗಳನ್ನೂ ಬಳಸುತ್ತಿದೆ. ಭಾರತದಲ್ಲಿ ಈಗ ಎರಡು ಇಂತಹ ಕುಯುಕ್ತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಒಂದು, ಕೇಂದ್ರ ಸರ್ಕಾರವು ತಾನು ಹೊರಬೇಕಾಗಿರುವ ವಿತ್ತೀಯ ಭಾರವನ್ನು, ಬಲವಂತವಾಗಿ ಮತ್ತು ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ರಾಜ್ಯ ಸರ್ಕಾರಗಳ ಹೆಗಲಿಗೆ ಹೊರಿಸುತ್ತಿದೆ. ಇಂತಹ ಇನ್ನೊಂದು ಪ್ರಯತ್ನವೆಂದರೆ, ಸಾರ್ವಜನಿಕ ವಲಯವನ್ನು ಖಾಸಗಿಯವರಿಗೆ ಮಾರಲು ಸರ್ಕಾರ ಹುಚ್ಚು ಅವಸರದಲ್ಲಿದೆ. ಹೇಗಾದರೂ ಸರಿ ಒಂದಿಷ್ಟು ಹಣ ಕೈಗೆ ಸಿಕ್ಕಿದರೆ ಸಾಕು ಎನ್ನುವ ಅದರ ಮಂದದೃಷ್ಠಿಯ ಮನೋಭಾವ ಖಂಡನೀಯ. ಈ ಎರಡೂ ಪ್ರಯತ್ನಗಳನ್ನು ಒಂದೊಂದಾಗಿ ಪರಿಶೀಲಿಸೋಣ.
ಕೇಂದ್ರ ಸರ್ಕಾರವು ತಾನು ಹೊರಬೇಕಾಗಿರುವ ರಕ್ಷಣಾ ವೆಚ್ಚದ ಭಾರವನ್ನು, ಬಲವಂತವಾಗಿ ಮತ್ತು ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ಹೇಗೆ ರಾಜ್ಯ ಸರ್ಕಾರಗಳ ಹೆಗಲಿಗೆ ಹೊರಿಸಲು ಪ್ರಯತ್ನಿಸುತ್ತಿದೆ ಎಂಬ ಅಂಶವನ್ನು ಈಗಾಗಲೇ ಚರ್ಚಿಸಲಾಗಿದೆ (ಜನಶಕ್ತಿ- ಸಂಚಿಕೆ 37, ಸೆಪ್ಟೆಂಬರ್ 9-15, 2019). ದೇಶದ ರಕ್ಷಣೆ ಸಂಬಂಧಿತ ಖರ್ಚು ವೆಚ್ಚಗಳನ್ನು ಮತ್ತು ರಕ್ಷಣೆಗೆ ಸಂಬಂಧಿಸಿದ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಪ್ರತ್ಯೇಕವಾಗಿ ಮತ್ತು ಏಕಮಾತ್ರವಾಗಿ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ.
ಇದನ್ನು ಸಂವಿಧಾನದ ಏಳನೆಯ ಷೆಡ್ಯೂಲಿನಲ್ಲಿ ನಿರ್ದಿಷ್ಟವಾಗಿ ನಮೂದಿಸಲಾಗಿದೆ. ಈ ಸಂವಿಧಾನಿಕ ಏರ್ಪಾಟಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದಾಗ್ಯೂ, ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ಕೇಂದ್ರ ಸರ್ಕಾರವು ತನ್ನ ಪಾಲಿಗೆ ವಹಿಸಿರುವ ರಕ್ಷಣಾ ಖರ್ಚು ವೆಚ್ಚಗಳನ್ನು, ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೆಯಾಗುವ ಹಣದಿಂದ ಮುರಿದುಕೊಳ್ಳಲು ಆದೇಶಿಸುವಂತೆ ಹದಿನೈದನೆಯ ಹಣ ಕಾಸು ಆಯೋಗವನ್ನು ಕೋರಿದೆ. ಅಂದರೆ, ಕೇಂದ್ರ ಸರ್ಕಾರವೇ ಹೊರಬೇಕಾದ ರಕ್ಷಣಾ ವೆಚ್ಚದ ಹೊರೆಯನ್ನು ಬಲವಂತವಾಗಿ ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲಾಗುತ್ತಿದೆ.
ಇಲ್ಲಿಯವರೆಗೆ, ಈ ವಿಷಯವು, ರಾಜ್ಯಗಳಿಗೆ ಒಡ್ಡಿದ ಒಂದು ಬೆದರಿಕೆಯಾಗಿ ಉಳಿದಿದೆ. ಆದರೆ, ಇನ್ನೊಂದು ವಿಷಯದಲ್ಲಿ-ಜಿಎಸ್ಟಿಯ ನಷ್ಟ ತುಂಬಿಕೊಡುವ ವಿಷಯದಲ್ಲಿ – ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಗಳನ್ನು ಹಿಂಡಿ ಹಿಪ್ಪೆ ಮಾಡಿದೆ. ಜಿಎಸ್ಟಿ ಜಾರಿ ಮಾಡುವ ಸಂದರ್ಭದಲ್ಲಿ, ರಾಜ್ಯಗಳು ಜಿಎಸ್ಟಿ ಪದ್ಧತಿಯನ್ನು ಒಪ್ಪಿಕೊಳ್ಳುವಂತೆ ಅವುಗಳ ಮನ ಒಲಿಸುವ ಸಲುವಾಗಿ, ಜಿಎಸ್ಟಿಯ ಜಾರಿಯಿಂದ ರಾಜ್ಯಗಳಿಗೆ ಉಂಟಾಗುವ ತೆರಿಗೆ ಆದಾಯದ ನಷ್ಟವನ್ನು ಐದು ವರ್ಷಗಳ ಅವಧಿಯವರೆಗೆ ತುಂಬಿಕೊಡುತ್ತೇವೆ ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಭರವಸೆ ಕೊಟ್ಟಿತ್ತು.
ಈ ಉದ್ದೇಶಕ್ಕಾಗಿ ಒಂದು ಪರಿಹಾರ ನಿಧಿಯನ್ನೂ ಸ್ಥಾಪಿಸಲಾಗಿತ್ತು ಮತ್ತು ಕೆಲವು ನಿರ್ದಿಷ್ಟ ತೆರಿಗೆಗಳಿಂದ ಬರುವ ಹಣವನ್ನು ಈ ನಿಧಿಗೆ ತುಂಬುವ ಏರ್ಪಾಟನ್ನೂ ಮಾಡಲಾಗಿತ್ತು. ತೆರಿಗೆ ಆದಾಯದ ನಷ್ಟವನ್ನು ಲೆಕ್ಕ ಹಾಕುವ ಸಲುವಾಗಿ, ಒಂದು ಮೂಲ ವರ್ಷದ ತೆರಿಗೆ ಆದಾಯದ ಮೇಲೆ ಪ್ರತಿ ವರ್ಷವೂ 14% ತೆರಿಗೆ ಅದಾಯ ಹೆಚ್ಚುವ ಒಂದು ವಾಸ್ತವಿಕ ಅಂದಾಜಿನ ಮೇಲೆ, ರಾಜ್ಯಗಳಿಗೆ ಉಂಟಾಗುವ ತೆರಿಗೆ ಆದಾಯದ ನಷ್ಟವನ್ನು ಲೆಕ್ಕ ಹಾಕುವ ವಿಧಾನವನ್ನೂ ಒಪ್ಪಿಕೊಳ್ಳಲಾಗಿತ್ತು.
ಆದರೆ, ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಿನಿಂದೀಚೆಗೆ ರಾಜ್ಯಗಳಿಗೆ ಜಿಎಸ್ಟಿ ನಷ್ಟ ಪರಿಹಾರದ ಹಣ ಕೊಡುವುದನ್ನು ನಿಲ್ಲಿಸಿದೆ. ನಷ್ಟ ಪರಿಹಾರ ನಿಧಿಯಲ್ಲಿ ಸಾಕಷ್ಟು ಹಣವಿಲ್ಲ ಎಂದು ಹೇಳುತ್ತಿದೆ. ಆದರೆ, ರಾಜ್ಯಗಳಿಗೆ ತೆರಿಗೆ ಆದಾಯ ನಷ್ಟ ತುಂಬಿಕೊಡುವುದಾಗಿ ಕೇಂದ್ರ ಕೊಟ್ಟ ಭರವಸೆಗೂ ಮತ್ತು ನಿಧಿಯಲ್ಲಿ ಎಷ್ಟು ಹಣ ಇದೆ ಎಂಬುದಕ್ಕೂ ಸಂಬಂಧವಿಲ್ಲ; ನಷ್ಟ ತುಂಬಿಕೊಡುವ ಅಂಶವನ್ನು ಸಂವಿಧಾನ ತಿದ್ದುಪಡಿಯಲ್ಲಿ ನಮೂದಿಸಲಾಗಿತ್ತು; ನಷ್ಟ ಪರಿಹಾರ ನಿಧಿಯಲ್ಲಿ ಸಾಕಷ್ಟು ಹಣವಿಲ್ಲದಿದ್ದರೆ ಕೇಂದ್ರ ಸರ್ಕಾರವು ತನ್ನ ಪಾಲಿನ ಜಿಎಸ್ಟಿ ಆದಾಯದಿಂದಲೇ ಕೊಡಲಿ ಎಂದು ರಾಜ್ಯಗಳು ಹೇಳುತ್ತಿರುವುದು ಸರಿಯಾಗಿಯೇ ಇದೆ.
ಜಿಎಸ್ಟಿ ಜಾರಿಯಿಂದಾಗಿ ಪ್ರಸಕ್ತ ಹಣ ಕಾಸು ವರ್ಷದ ಹೆಚ್ಚಿನ ತಿಂಗಳುಗಳಲ್ಲಿ ಮಾಸಿಕ ತೆರಿಗೆ ಸಂಗ್ರಹವು ಒಂದು ಲಕ್ಷ ಕೋಟಿ ರೂ. ದಾಟುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಜಿಎಸ್ಟಿಯಲ್ಲಿರುವ ನ್ಯೂನತೆಗಳ ಕಾರಣದಿಂದಾಗಿ ಮತ್ತು ಮಂದಗತಿಗೆ ಇಳಿದಿರುವ ಅರ್ಥವ್ಯವಸ್ಥೆಯ ಕಾರಣದಿಂದಾಗಿ ತೆರಿಗೆ ಸಂಗ್ರಹದಲ್ಲಿ ಕೊರತೆಯುಂಟಾಗುತ್ತಿದೆ. ಹಬ್ಬಗಳ ಕಾರಣದಿಂದಾಗಿ ವಹಿವಾಟು ಹೆಚ್ಚಿಗೆ ಇದ್ದ ನವೆಂಬರ್ ತಿಂಗಳಿನಲ್ಲಿ ಮಾತ್ರ ಒಂದು ಲಕ್ಷ ಕೋಟಿಗಿಂತಲೂ ಜಾಸ್ತಿ ತೆರಿಗೆ ಸಂಗ್ರಹವಾಗಿತ್ತು.
ಆದಾಯದ ಕೊರತೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು, ನಷ್ಟ ತುಂಬಿಕೊಡುವ ಸಂವಿಧಾನಿಕ ಭರವಸೆಯನ್ನು ಮುರಿದು, ತಲೆಯ ಮೇಲೆ ಮರಿಗಳನ್ನು ಹೊತ್ತಿದ್ದ ಕೋತಿಯೊಂದು ನೀರಿನ ಮಟ್ಟ ಮೂಗಿನವರೆಗೆ ಏರಿದಾಗ ಆ ಮರಿಗಳನ್ನೇ ನಿಂತ ಕಾಲ ಕೆಳಗೆ ಹಾಕಿಕೊಂಡು ಜೀವ ಉಳಿಸಿಕೊಳ್ಳುವ ಕೋತಿಯ ರೀತಿಯಲ್ಲಿ ರಾಜ್ಯಗಳನ್ನು ತುಳಿಯುತ್ತಿದೆ. ಅದರ ಜೊತೆಯಲ್ಲಿ, ಹಂಚಿಕೆಯಾಗಬೇಕಾದ ಸಂಯೋಜಿತ ಜಿಎಸ್ಟಿ(ಐಜಿಎಸ್ಟಿ) ಸಂಗ್ರಹದ ಸಿಂಹ ಪಾಲನ್ನು ಕೇಂದ್ರವೇ ಇಟ್ಟುಕೊಳ್ಳುತ್ತಿದೆ.
ಕೇಂದ್ರ ಸರ್ಕಾರದ ಇಂತಹ ಇಬ್ಬಗೆಯ ಹಿಂಡುವಿಕೆಯಿಂದಾಗಿ ರಾಜ್ಯಗಳ ಹಣಕಾಸಿನ ಪರಿಸ್ಥಿತಿ ಕಳವಳಕಾರಿಯಾಗಿದೆ. ಬಡವರ ಅರೋಗ್ಯ ರಕ್ಷಣೆ, ಶಿಕ್ಷಣ ಮುಂತಾದ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಹೆಚ್ಚಿನ ಭಾಗವನ್ನು ರಾಜ್ಯಗಳು ಭರಿಸುವ ಕಾರಣದಿಂದಾಗಿ, ರಾಜ್ಯಗಳ ಆದಾಯ ಇಳಿದಾಗ ಇಂತಹ ಕಲ್ಯಾಣ ಕಾರ್ಯಕ್ರಮಗಳ ವೆಚ್ಚಗಳ ಇಳಿಕೆಯು ಬಡವರನ್ನು ಇನ್ನೂ ಹೆಚ್ಚಿನ ಬಡತನಕ್ಕೆ ತಳ್ಳುತ್ತದೆ.
ಕೇಂದ್ರ ಸರ್ಕಾರವು ಸಾಲ ಮಾಡುವ ಮೂಲಕ (ಅಂದರೆ, ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ) ರಾಜ್ಯಗಳಿಗೆ ನಷ್ಟ ತುಂಬಿಕೊಡುವ ಭರವಸೆಯನ್ನು ಈಡೇರಿಸಿದ್ದರೆ, ಈ ರೀತಿಯಲ್ಲಿ ರಾಜ್ಯಗಳ ಹಿಂಡುವಿಕೆಯನ್ನು ತಪ್ಪಿಸಬಹುದಿತ್ತು. (ಬಂಡವಾಳಿಗರ ಮೇಲೆ ತೆರಿಗೆ ಹಾಕುವ ಕೆಚ್ಚೆದೆ ಕೇಂದ್ರ ಸರ್ಕಾರಕ್ಕೆ ಇಲ್ಲವೆಂಬ ಅಂಶವನ್ನು ಇತ್ತೀಚೆಗೆ ಅದು ಬಂಡವಾಳಿಗರಿಗೆ ಕೊಟ್ಟಿರುವ ತೆರಿಗೆ ವಿನಾಯ್ತಿಯ ಕ್ರಮವೇ ಸಾಬೀತು ಮಾಡುತ್ತದೆ).
ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಂಡು ಒಟ್ಟಾರೆ ಬೇಡಿಕೆಯನ್ನು ಉತ್ತೇಜಿಸಿ ಉದ್ಯೋಗ ಸೃಷ್ಠಿಸಬಹುದಿತ್ತು, ಅದೂ ಕೂಡ ಹಣದುಬ್ಬರಕ್ಕೆ ಎಡೆ ಇಲ್ಲದಂತೆ. ಇತ್ತೀಚೆಗೆ ಹಣದುಬ್ಬರ ನುಸುಳುತ್ತಿರುವುದು ನಿಜವಾದರೂ, ಅದು ನಿರ್ದಿಷ್ಟ ವಲಯಕ್ಕೆ (ಅದಕ್ಕೆ ಈರುಳ್ಳಿ ಒಂದು ಉದಾಹರಣೆ) ಸಂಬಂಧಿಸುತ್ತದೆ. ಸರಬರಾಜಿಗೆ ಸಂಬಂಧಿಸಿದ ಇಂತಹ ಸಮಸ್ಯೆಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನಿವಾರಿಸಿಕೊಂಡು, ಹಣದುಬ್ಬರಕ್ಕೆ ಆಸ್ಪದವಿಲ್ಲದ ರೀತಿಯಲ್ಲಿ, ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳಬಹುದಿತ್ತು.
ಆದರೆ, ವಿತ್ತೀಯ ಕೊರತೆಯನ್ನು ಈ ರೀತಿಯಲ್ಲಿ ಹೆಚ್ಚಿಸಿಕೊಳ್ಳುವುದನ್ನು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಒಪ್ಪುವುದಿಲ್ಲ. ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ.
ಹಣಕಾಸು ಬಂಡವಾಳವು ಮುಖ ಸಿಂಡರಿಕೊಳ್ಳುವಂತಹ ಯಾವ ಕ್ರಮವನ್ನೂ ಅದು ಕೈಗೊಳ್ಳುವುದಕ್ಕಿಂತ ರಾಜ್ಯಗಳ ಹಿಂಡುವಿಕೆಯನ್ನು ಇಷ್ಟಪಡುತ್ತದೆ; ಬಡವರ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಕಡಿತವನ್ನು ಇಷ್ಟಪಡುತ್ತದೆ. ಅದು, ಹಣಕಾಸು ಬಂಡವಾಳವು ಅರ್ಥವ್ಯವಸ್ಥೆಗೆ ಆಘಾತ ತಲುಪಿಸುವಂತಹ ಆಜ್ಞೆಗಳನ್ನು ಕೊಂಡೊಯ್ಯುವ ಕೊಳವೆಯ ಪಾತ್ರ ವಹಿಸಿದೆ ಮತ್ತು ನವ ಉದಾರ ಆಳ್ವಿಕೆಯ ವಿಕೃತಿಯ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.
( ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ3 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

