Connect with us

ರಾಜಕೀಯ

ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿ-1: ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನಿಲ್ಲಿಸಿರುವ ಮೋದಿ ಸರಕಾರ

Published

on

 

ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ. ಬದಲಿಗೆ ರಾಜ್ಯಗಳನ್ನು ಆರ್ಥಿಕವಾಗಿ ಹಿಂಡಲು ಮುಂದಾಗುತ್ತದೆ, ರಾಜ್ಯಗಳಿಗೆ ಜಿಎಸ್‌ಟಿ ನಷ್ಟ ಪರಿಹಾರದ ಹಣ ಕೊಡುವುದನ್ನು ನಿಲ್ಲಿಸುತ್ತದೆ, ಬಡವರ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಕಡಿತವನ್ನು ಮಾಡುತ್ತದೆ. ಅದು, ಹಣಕಾಸು ಬಂಡವಾಳವು ಅರ್ಥವ್ಯವಸ್ಥೆಗೆ ಆಘಾತ ತಲುಪಿಸುವಂತಹ ಆಜ್ಞೆಗಳನ್ನು ಕೊಂಡೊಯ್ಯುವ ಕೊಳವೆಯ ಪಾತ್ರ ವಹಿಸಿದೆ. ಇಲ್ಲಿ ನವ ಉದಾರ ಆಳ್ವಿಕೆಯ ವಿಕೃತಿಯ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.

-ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ. ನಾಗರಾಜ್

ಒಂದು ಅರ್ಥವ್ಯವಸ್ಥೆಯಲ್ಲಿ ವರಮಾನಗಳ ವೃದ್ಧಿ ನಿಧಾನಗೊಳ್ಳುತ್ತಿರುವಾಗ, ಸರ್ಕಾರದ ತೆರಿಗೆ ಆದಾಯದ ಬೆಳವಣಿಗೆಯೂ ನಿಧಾನಗೊಳ್ಳುತ್ತದೆ. ಆದಾಗ್ಯೂ, ಸರ್ಕಾರಕ್ಕೆ ಕೆಲವು ನಿರ್ದಿಷ್ಟ ವೆಚ್ಚಗಳನ್ನು ಕೈಗೊಳ್ಳಲೇಬೇಕಾದ ಅನಿವಾರ್ಯತೆ ಇರುತ್ತದೆ. ಅಂತಹ ಅನಿವಾರ್ಯ ವೆಚ್ಚಗಳನ್ನು ಹೊಂದಿಸಿಕೊಳ್ಳುವ ಸಲುವಾಗಿ, ಸರ್ಕಾರವು ಅಧಿಕ ತೆರಿಗೆಗಳನ್ನು ಹೇರಬೇಕಾಗುತ್ತದೆ; ಇಲ್ಲವೇ ಸಾಲಮಾಡಬೇಕಾಗುತ್ತದೆ (ಅಂದರೆ, ವಿತ್ತೀಯ ಕೊರತೆಯ ಗಾತ್ರ ದೊಡ್ಡದಾಗುತ್ತದೆ).

ಮಹಾ ಯದ್ಧಾನಂತರದ ಕಾಲದಲ್ಲಿ ಎಲ್ಲ ಬಂಡವಾಳಶಾಹಿ ದೇಶಗಳೂ (ಆಗ, ಈ ದೇಶಗಳು ತಮ್ಮ ಅರ್ಥವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿದ್ದವು) ತಮ್ಮ ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತಮ್ಮ ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದವು, ಅಂದರೆ ಸಾಲ ಮಾಡುತ್ತಿದ್ದವು. ಸಾಲ ಮಾಡಿದ ಹಣವನ್ನು ಸರ್ಕಾರಗಳು ಧಾರಾಳವಾಗಿ ಖರ್ಚು ಮಾಡುತ್ತಿದ್ದ ಕಾರಣದಿಂದಾಗಿ, ಬೇಡಿಕೆ ಕುದುರುತ್ತಿತ್ತು ಮತ್ತು ಅರ್ಥವ್ಯವಸ್ಥೆಯು ಚೇತರಿಸಿಕೊಳ್ಳುತ್ತಿತ್ತು. ಇಂತಹ ವಿದ್ಯಮಾನವನ್ನು ಒಂದು ಸ್ವಯಂ ಸ್ಥಿರಕಾರಿ (automatic stabiliser) ಎಂಬುದಾಗಿ ಅರ್ಥಶಾಸ್ತ್ರದ ಪಠ್ಯ ಪುಸ್ತಕಗಳು ತಿಳಿಸುತ್ತವೆ.

ಸರ್ಕಾರಗಳು ಸಂದರ್ಭಾನುಸಾರವಾಗಿ ಸಾಲ ಮಾಡಿ ಅದನ್ನು ಖರ್ಚು ಮಾಡುತ್ತಿದ್ದ ಸಂಗತಿಯು, ತಮ್ಮ ಸಾಮಾಜಿಕ ಮತ್ತು ಆರ್ಥಿಕ ನೀತಿಗಳ ಮೇಲೆ ಎಲ್ಲ ದೇಶಗಳೂ ನಿಯಂತ್ರಣ ಹೊಂದಿದ್ದ ಕಾಲದಲ್ಲಿ ಸಂಗತವಾಗಿತ್ತು. ಆದರೆ, ನವ ಉದಾರವಾದದ ಆಳ್ವಿಕೆಯಲ್ಲಿ ಈ ಸಂಗತಿಯು ಅಸಂಗತವಾಗಿದೆ. ನವ ಉದಾರವಾದದ ಆಳ್ವಿಕೆಯಲ್ಲಿ, ಅರ್ಥವ್ಯವಸ್ಥೆಯ ಮಂದಗತಿಯಿಂದಾಗಿ ತೆರಿಗೆ ಸಂಗ್ರಹ ಇಳಿದಾಗ, ಸರ್ಕಾರವು ಬಂಡವಾಳಗಾರರ ಮೇಲೆ ಅಧಿಕ ತೆರಿಗೆ ವಿಧಿಸಲೂ ಆಗದ ಅಥವಾ ಹೆಚ್ಚು ಸಾಲ ಮಾಡಲೂ ಆಗದ ಪರಿಸ್ಥಿತಿಯಲ್ಲಿದೆ.

ಏಕೆಂದರೆ, ಈ ಎರಡೂ ಕ್ರಮಗಳನ್ನು ಅಂತಾರಾಷ್ಟ್ರೀಯ ಹಣ ಕಾಸು ಬಂಡವಾಳವು ವಿರೋಧಿಸುತ್ತದೆ. ಅದರ ಈ ನಿಲುವಿಗೆ ಸರ್ಕಾರ ಒಪ್ಪಿಕೊಳ್ಳದಿದ್ದರೆ ಬಂಡವಾಳವು ದೇಶದಿಂದ ಪಲಾಯನ ಮಾಡಿ ಒಂದು ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ. ಒಂದು ವೇಳೆ, ದುಡಿಯುವ ಜನತೆಯ ಮೇಲೆ ಅಧಿಕ ತೆರಿಗೆಗಳ ಭಾರ ಹೊರಿಸಿದರೆ, ಆಗಲೂ, ಒಟ್ಟಾರೆ ಬೇಡಿಕೆ ವೃದ್ಧಿಸುವುದಿಲ್ಲ. ಹಾಗಾಗಿ, ಅರ್ಥವ್ಯವಸ್ಥೆಯ ಮಂದಗತಿ ನಿಲ್ಲದು.

ಒಂದು ವಾಸ್ತವಾಂಶವಾಗಿ ಹೇಳುವುದಾದರೆ, ಅಮೇರಿಕಾ ದೇಶವನ್ನು ಹೊರತುಪಡಿಸಿದರೆ, ಎಲ್ಲಾ ದೇಶಗಳೂ ತಮ್ಮ ವಿತ್ತೀಯ ಕೊರತೆಯು ತಮ್ಮ ದೇಶದ ಜಿಡಿಪಿಯ 3% ಮೀರದಂತೆ ಕಾನೂನು ಮಾಡಿಕೊಂಡಿವೆ. ಭಾರತದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವಿತ್ತೀಯ ಕೊರತೆಯು ತಮ್ಮ ತಮ್ಮ ಜಿಡಿಪಿಯ 3% ಮೀರದಂತೆ ಕಾನೂನು ಮಾಡಿಕೊಂಡಿವೆ. ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತೆರಿಗೆ ಸಂಗ್ರಹವೂ ಇಳಿಯಲೇಬೇಕಾಗುತ್ತದೆ. ಹಾಗಾಗಿ ಸರ್ಕಾರವು ಸಾರ್ವಜನಿಕರಿಗಾಗಿ ಕೈಗೊಳ್ಳುವ ಖರ್ಚುಗಳೂ ಇಳಿಯುತ್ತವೆ.

ಆದ್ದರಿಂದ, ಒಂದು ನವ ಉದಾರ ಆಳ್ವಿಕೆಯಲ್ಲಿ, ಸರ್ಕಾರವು ಕೈಗೊಳ್ಳುವ ಖರ್ಚು ವೆಚ್ಚಗಳು, ಬೇಡಿಕೆ ಕುದುರಿಸುವ ಮತ್ತು ಅರ್ಥವ್ಯವಸ್ಥೆ ಚೇತರಿಸಿಕೊಳ್ಳುವ ಸ್ವಯಂ ಸ್ಥಿರಕಾರಿ ಪರಿಣಾಮವನ್ನು ನವ ಉದಾರ ಆಳ್ವಿಕೆ ಬರುವ ಮೊದಲಿನ ರೀತಿಯಲ್ಲಿ ಬೀರುವುದಿಲ್ಲ. ಮೇಲಾಗಿ, ಅರ್ಥವ್ಯವಸ್ಥೆಯು ಮಂದಗತಿಗೆ ಇಳಿದಾಗ ತೆರಿಗೆ ಸಂಗ್ರಹವೂ ಇಳಿಯುತ್ತದೆ ಮತ್ತು ಸರ್ಕಾರವು ಸಾರ್ವಜನಿಕರಿಗಾಗಿ ಕೈಗೊಳ್ಳುವ ಖರ್ಚುಗಳೂ ಇಳಿಯುತ್ತವೆ.

ಅದರ ಪರಿಣಾಮವಾಗಿ ಅರ್ಥವ್ಯವಸ್ಥೆಯು ಇನ್ನೂ ಹೆಚ್ಚಿನ ಮಂದಗತಿಗೆ ಇಳಿಯುತ್ತದೆ. ಸರ್ಕಾರದ ಕಡಿಮೆ ಖರ್ಚುಗಳು ಆವರ್ತಗಳಲ್ಲಿ ಉಂಟಾಗುವ ಬಿಕ್ಕಟ್ಟಿಗೆ ಇಂಬು ಕೊಡುತ್ತವೆ ಎಂದು ಹೇಳುವುದುಂಟು. ಬಿಕ್ಕಟ್ಟು ಯಾವಾಗಲೂ ಆವರ್ತನಗೊಳ್ಳುತ್ತದೆ ಎಂದು ಸೂಚಿಸುವ ಕಾರಣದಿಂದ ಈ ಹೇಳಿಕೆಯು ನಮ್ಮನ್ನು ತಪ್ಪುದಾರಿಗೆ ಎಳೆಯುತ್ತದೆ.

ಅನಿವಾರ್ಯ ವೆಚ್ಚಗಳನ್ನು ಹೊಂದಿಸಿಕೊಳ್ಳುವ ಸಲುವಾಗಿ ಸರ್ಕಾರಗಳು ಹೆಚ್ಚಿನ ಮಟ್ಟದ ಸಾಲ ಮಾಡುವ ಕ್ರಮವನ್ನು ವಿತ್ತೀಯ ಹೊಣೆಗಾರಿಕೆಯ ಹೆಸರಿನಲ್ಲಿ ಕೈಬಿಡಲಾಗಿದೆ ಮತ್ತು ಎಲ್ಲ ಸರ್ಕಾರಗಳು ವಿತ್ತೀಯ ಶಿಸ್ತು ಪಾಲಿಸುವಂತೆ ಆಜ್ಞಾಪಿಸಲಾಗಿದೆ. ಹಿಂದೆ, ಸರ್ಕಾರಗಳು ಸಂದರ್ಭಕ್ಕನುಸಾರವಾಗಿ ಹೆಚ್ಚಿನ ಮಟ್ಟದ ಸಾಲ ಮಾಡುತ್ತಿದ್ದ ಕ್ರಮವು ಅರ್ಥವ್ಯವಸ್ಥೆಯು ಮಂದಗತಿಗೆ ಇಳಿಯದಂತೆ ರಕ್ಷಿಸುವ ಒಂದು ತಡೆ ಗೋಡೆಯಂತೆ ಕೆಲಸ ಮಾಡುತ್ತಿತ್ತು. ಅಂತಹ ಕ್ರಮವನ್ನು ವಿರೋಧಿಸುವ ನವ ಉದಾರ ಆಳ್ವಿಕೆಯ ಹಠಮಾರಿತನದ ನಿಲುವು ಅರ್ಥವ್ಯವಸ್ಥೆಯ ಮಂದಗತಿಯನ್ನು ಅಧಿಕಗೊಳಿಸುತ್ತದೆ. ಈ ಅಂಶವೇ ನವ ಉದಾರ ವಿತ್ತೀಯ ಆಳ್ವಿಕೆಯ ವಿಕೃತಿಯ ತಿರುಳು.

ಈ ಹಿನ್ನೆಲೆಯಲ್ಲಿ, ತಾನು ಸಿಲುಕಿರುವ ಇಕ್ಕಟ್ಟಿನಿಂದ ನುಣಿಚಿಕೊಳ್ಳಲು ಸರ್ಕಾರವು ಎಲ್ಲ ರೀತಿಯ ಕುಯುಕ್ತಿಗಳನ್ನೂ ಬಳಸುತ್ತಿದೆ. ಭಾರತದಲ್ಲಿ ಈಗ ಎರಡು ಇಂತಹ ಕುಯುಕ್ತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಒಂದು, ಕೇಂದ್ರ ಸರ್ಕಾರವು ತಾನು ಹೊರಬೇಕಾಗಿರುವ ವಿತ್ತೀಯ ಭಾರವನ್ನು, ಬಲವಂತವಾಗಿ ಮತ್ತು ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ರಾಜ್ಯ ಸರ್ಕಾರಗಳ ಹೆಗಲಿಗೆ ಹೊರಿಸುತ್ತಿದೆ. ಇಂತಹ ಇನ್ನೊಂದು ಪ್ರಯತ್ನವೆಂದರೆ, ಸಾರ್ವಜನಿಕ ವಲಯವನ್ನು ಖಾಸಗಿಯವರಿಗೆ ಮಾರಲು ಸರ್ಕಾರ ಹುಚ್ಚು ಅವಸರದಲ್ಲಿದೆ. ಹೇಗಾದರೂ ಸರಿ ಒಂದಿಷ್ಟು ಹಣ ಕೈಗೆ ಸಿಕ್ಕಿದರೆ ಸಾಕು ಎನ್ನುವ ಅದರ ಮಂದದೃಷ್ಠಿಯ ಮನೋಭಾವ ಖಂಡನೀಯ. ಈ ಎರಡೂ ಪ್ರಯತ್ನಗಳನ್ನು ಒಂದೊಂದಾಗಿ ಪರಿಶೀಲಿಸೋಣ.

ಕೇಂದ್ರ ಸರ್ಕಾರವು ತಾನು ಹೊರಬೇಕಾಗಿರುವ ರಕ್ಷಣಾ ವೆಚ್ಚದ ಭಾರವನ್ನು, ಬಲವಂತವಾಗಿ ಮತ್ತು ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ಹೇಗೆ ರಾಜ್ಯ ಸರ್ಕಾರಗಳ ಹೆಗಲಿಗೆ ಹೊರಿಸಲು ಪ್ರಯತ್ನಿಸುತ್ತಿದೆ ಎಂಬ ಅಂಶವನ್ನು ಈಗಾಗಲೇ ಚರ್ಚಿಸಲಾಗಿದೆ (ಜನಶಕ್ತಿ- ಸಂಚಿಕೆ 37, ಸೆಪ್ಟೆಂಬರ್ 9-15, 2019). ದೇಶದ ರಕ್ಷಣೆ ಸಂಬಂಧಿತ ಖರ್ಚು ವೆಚ್ಚಗಳನ್ನು ಮತ್ತು ರಕ್ಷಣೆಗೆ ಸಂಬಂಧಿಸಿದ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಪ್ರತ್ಯೇಕವಾಗಿ ಮತ್ತು ಏಕಮಾತ್ರವಾಗಿ ಕೇಂದ್ರ ಸರ್ಕಾರಕ್ಕೆ ವಹಿಸಲಾಗಿದೆ.

ಇದನ್ನು ಸಂವಿಧಾನದ ಏಳನೆಯ ಷೆಡ್ಯೂಲಿನಲ್ಲಿ ನಿರ್ದಿಷ್ಟವಾಗಿ ನಮೂದಿಸಲಾಗಿದೆ. ಈ ಸಂವಿಧಾನಿಕ ಏರ್ಪಾಟಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದಾಗ್ಯೂ, ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ಉಲ್ಲಂಘಿಸಿ, ಕೇಂದ್ರ ಸರ್ಕಾರವು ತನ್ನ ಪಾಲಿಗೆ ವಹಿಸಿರುವ ರಕ್ಷಣಾ ಖರ್ಚು ವೆಚ್ಚಗಳನ್ನು, ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೆಯಾಗುವ ಹಣದಿಂದ ಮುರಿದುಕೊಳ್ಳಲು ಆದೇಶಿಸುವಂತೆ ಹದಿನೈದನೆಯ ಹಣ ಕಾಸು ಆಯೋಗವನ್ನು ಕೋರಿದೆ. ಅಂದರೆ, ಕೇಂದ್ರ ಸರ್ಕಾರವೇ ಹೊರಬೇಕಾದ ರಕ್ಷಣಾ ವೆಚ್ಚದ ಹೊರೆಯನ್ನು ಬಲವಂತವಾಗಿ ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲಾಗುತ್ತಿದೆ.

ಇಲ್ಲಿಯವರೆಗೆ, ಈ ವಿಷಯವು, ರಾಜ್ಯಗಳಿಗೆ ಒಡ್ಡಿದ ಒಂದು ಬೆದರಿಕೆಯಾಗಿ ಉಳಿದಿದೆ. ಆದರೆ, ಇನ್ನೊಂದು ವಿಷಯದಲ್ಲಿ-ಜಿಎಸ್‌ಟಿಯ ನಷ್ಟ ತುಂಬಿಕೊಡುವ ವಿಷಯದಲ್ಲಿ – ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಗಳನ್ನು ಹಿಂಡಿ ಹಿಪ್ಪೆ ಮಾಡಿದೆ. ಜಿಎಸ್‌ಟಿ ಜಾರಿ ಮಾಡುವ ಸಂದರ್ಭದಲ್ಲಿ, ರಾಜ್ಯಗಳು ಜಿಎಸ್‌ಟಿ ಪದ್ಧತಿಯನ್ನು ಒಪ್ಪಿಕೊಳ್ಳುವಂತೆ ಅವುಗಳ ಮನ ಒಲಿಸುವ ಸಲುವಾಗಿ, ಜಿಎಸ್‌ಟಿಯ ಜಾರಿಯಿಂದ ರಾಜ್ಯಗಳಿಗೆ ಉಂಟಾಗುವ ತೆರಿಗೆ ಆದಾಯದ ನಷ್ಟವನ್ನು ಐದು ವರ್ಷಗಳ ಅವಧಿಯವರೆಗೆ ತುಂಬಿಕೊಡುತ್ತೇವೆ ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಭರವಸೆ ಕೊಟ್ಟಿತ್ತು.

ಈ ಉದ್ದೇಶಕ್ಕಾಗಿ ಒಂದು ಪರಿಹಾರ ನಿಧಿಯನ್ನೂ ಸ್ಥಾಪಿಸಲಾಗಿತ್ತು ಮತ್ತು ಕೆಲವು ನಿರ್ದಿಷ್ಟ ತೆರಿಗೆಗಳಿಂದ ಬರುವ ಹಣವನ್ನು ಈ ನಿಧಿಗೆ ತುಂಬುವ ಏರ್ಪಾಟನ್ನೂ ಮಾಡಲಾಗಿತ್ತು. ತೆರಿಗೆ ಆದಾಯದ ನಷ್ಟವನ್ನು ಲೆಕ್ಕ ಹಾಕುವ ಸಲುವಾಗಿ, ಒಂದು ಮೂಲ ವರ್ಷದ ತೆರಿಗೆ ಆದಾಯದ ಮೇಲೆ ಪ್ರತಿ ವರ್ಷವೂ 14% ತೆರಿಗೆ ಅದಾಯ ಹೆಚ್ಚುವ ಒಂದು ವಾಸ್ತವಿಕ ಅಂದಾಜಿನ ಮೇಲೆ, ರಾಜ್ಯಗಳಿಗೆ ಉಂಟಾಗುವ ತೆರಿಗೆ ಆದಾಯದ ನಷ್ಟವನ್ನು ಲೆಕ್ಕ ಹಾಕುವ ವಿಧಾನವನ್ನೂ ಒಪ್ಪಿಕೊಳ್ಳಲಾಗಿತ್ತು.

ಆದರೆ, ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಿನಿಂದೀಚೆಗೆ ರಾಜ್ಯಗಳಿಗೆ ಜಿಎಸ್‌ಟಿ ನಷ್ಟ ಪರಿಹಾರದ ಹಣ ಕೊಡುವುದನ್ನು ನಿಲ್ಲಿಸಿದೆ. ನಷ್ಟ ಪರಿಹಾರ ನಿಧಿಯಲ್ಲಿ ಸಾಕಷ್ಟು ಹಣವಿಲ್ಲ ಎಂದು ಹೇಳುತ್ತಿದೆ. ಆದರೆ, ರಾಜ್ಯಗಳಿಗೆ ತೆರಿಗೆ ಆದಾಯ ನಷ್ಟ ತುಂಬಿಕೊಡುವುದಾಗಿ ಕೇಂದ್ರ ಕೊಟ್ಟ ಭರವಸೆಗೂ ಮತ್ತು ನಿಧಿಯಲ್ಲಿ ಎಷ್ಟು ಹಣ ಇದೆ ಎಂಬುದಕ್ಕೂ ಸಂಬಂಧವಿಲ್ಲ; ನಷ್ಟ ತುಂಬಿಕೊಡುವ ಅಂಶವನ್ನು ಸಂವಿಧಾನ ತಿದ್ದುಪಡಿಯಲ್ಲಿ ನಮೂದಿಸಲಾಗಿತ್ತು; ನಷ್ಟ ಪರಿಹಾರ ನಿಧಿಯಲ್ಲಿ ಸಾಕಷ್ಟು ಹಣವಿಲ್ಲದಿದ್ದರೆ ಕೇಂದ್ರ ಸರ್ಕಾರವು ತನ್ನ ಪಾಲಿನ ಜಿಎಸ್‌ಟಿ ಆದಾಯದಿಂದಲೇ ಕೊಡಲಿ ಎಂದು ರಾಜ್ಯಗಳು ಹೇಳುತ್ತಿರುವುದು ಸರಿಯಾಗಿಯೇ ಇದೆ.

ಜಿಎಸ್‌ಟಿ ಜಾರಿಯಿಂದಾಗಿ ಪ್ರಸಕ್ತ ಹಣ ಕಾಸು ವರ್ಷದ ಹೆಚ್ಚಿನ ತಿಂಗಳುಗಳಲ್ಲಿ ಮಾಸಿಕ ತೆರಿಗೆ ಸಂಗ್ರಹವು ಒಂದು ಲಕ್ಷ ಕೋಟಿ ರೂ. ದಾಟುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಜಿಎಸ್‌ಟಿಯಲ್ಲಿರುವ ನ್ಯೂನತೆಗಳ ಕಾರಣದಿಂದಾಗಿ ಮತ್ತು ಮಂದಗತಿಗೆ ಇಳಿದಿರುವ ಅರ್ಥವ್ಯವಸ್ಥೆಯ ಕಾರಣದಿಂದಾಗಿ ತೆರಿಗೆ ಸಂಗ್ರಹದಲ್ಲಿ ಕೊರತೆಯುಂಟಾಗುತ್ತಿದೆ. ಹಬ್ಬಗಳ ಕಾರಣದಿಂದಾಗಿ ವಹಿವಾಟು ಹೆಚ್ಚಿಗೆ ಇದ್ದ ನವೆಂಬರ್ ತಿಂಗಳಿನಲ್ಲಿ ಮಾತ್ರ ಒಂದು ಲಕ್ಷ ಕೋಟಿಗಿಂತಲೂ ಜಾಸ್ತಿ ತೆರಿಗೆ ಸಂಗ್ರಹವಾಗಿತ್ತು.

ಆದಾಯದ ಕೊರತೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು, ನಷ್ಟ ತುಂಬಿಕೊಡುವ ಸಂವಿಧಾನಿಕ ಭರವಸೆಯನ್ನು ಮುರಿದು, ತಲೆಯ ಮೇಲೆ ಮರಿಗಳನ್ನು ಹೊತ್ತಿದ್ದ ಕೋತಿಯೊಂದು ನೀರಿನ ಮಟ್ಟ ಮೂಗಿನವರೆಗೆ ಏರಿದಾಗ ಆ ಮರಿಗಳನ್ನೇ ನಿಂತ ಕಾಲ ಕೆಳಗೆ ಹಾಕಿಕೊಂಡು ಜೀವ ಉಳಿಸಿಕೊಳ್ಳುವ ಕೋತಿಯ ರೀತಿಯಲ್ಲಿ ರಾಜ್ಯಗಳನ್ನು ತುಳಿಯುತ್ತಿದೆ. ಅದರ ಜೊತೆಯಲ್ಲಿ, ಹಂಚಿಕೆಯಾಗಬೇಕಾದ ಸಂಯೋಜಿತ ಜಿಎಸ್‌ಟಿ(ಐಜಿಎಸ್‌ಟಿ) ಸಂಗ್ರಹದ ಸಿಂಹ ಪಾಲನ್ನು ಕೇಂದ್ರವೇ ಇಟ್ಟುಕೊಳ್ಳುತ್ತಿದೆ.

ಕೇಂದ್ರ ಸರ್ಕಾರದ ಇಂತಹ ಇಬ್ಬಗೆಯ ಹಿಂಡುವಿಕೆಯಿಂದಾಗಿ ರಾಜ್ಯಗಳ ಹಣಕಾಸಿನ ಪರಿಸ್ಥಿತಿ ಕಳವಳಕಾರಿಯಾಗಿದೆ. ಬಡವರ ಅರೋಗ್ಯ ರಕ್ಷಣೆ, ಶಿಕ್ಷಣ ಮುಂತಾದ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಹೆಚ್ಚಿನ ಭಾಗವನ್ನು ರಾಜ್ಯಗಳು ಭರಿಸುವ ಕಾರಣದಿಂದಾಗಿ, ರಾಜ್ಯಗಳ ಆದಾಯ ಇಳಿದಾಗ ಇಂತಹ ಕಲ್ಯಾಣ ಕಾರ್ಯಕ್ರಮಗಳ ವೆಚ್ಚಗಳ ಇಳಿಕೆಯು ಬಡವರನ್ನು ಇನ್ನೂ ಹೆಚ್ಚಿನ ಬಡತನಕ್ಕೆ ತಳ್ಳುತ್ತದೆ.

ಕೇಂದ್ರ ಸರ್ಕಾರವು ಸಾಲ ಮಾಡುವ ಮೂಲಕ (ಅಂದರೆ, ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ) ರಾಜ್ಯಗಳಿಗೆ ನಷ್ಟ ತುಂಬಿಕೊಡುವ ಭರವಸೆಯನ್ನು ಈಡೇರಿಸಿದ್ದರೆ, ಈ ರೀತಿಯಲ್ಲಿ ರಾಜ್ಯಗಳ ಹಿಂಡುವಿಕೆಯನ್ನು ತಪ್ಪಿಸಬಹುದಿತ್ತು. (ಬಂಡವಾಳಿಗರ ಮೇಲೆ ತೆರಿಗೆ ಹಾಕುವ ಕೆಚ್ಚೆದೆ ಕೇಂದ್ರ ಸರ್ಕಾರಕ್ಕೆ ಇಲ್ಲವೆಂಬ ಅಂಶವನ್ನು ಇತ್ತೀಚೆಗೆ ಅದು ಬಂಡವಾಳಿಗರಿಗೆ ಕೊಟ್ಟಿರುವ ತೆರಿಗೆ ವಿನಾಯ್ತಿಯ ಕ್ರಮವೇ ಸಾಬೀತು ಮಾಡುತ್ತದೆ).

ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಂಡು ಒಟ್ಟಾರೆ ಬೇಡಿಕೆಯನ್ನು ಉತ್ತೇಜಿಸಿ ಉದ್ಯೋಗ ಸೃಷ್ಠಿಸಬಹುದಿತ್ತು, ಅದೂ ಕೂಡ ಹಣದುಬ್ಬರಕ್ಕೆ ಎಡೆ ಇಲ್ಲದಂತೆ. ಇತ್ತೀಚೆಗೆ ಹಣದುಬ್ಬರ ನುಸುಳುತ್ತಿರುವುದು ನಿಜವಾದರೂ, ಅದು ನಿರ್ದಿಷ್ಟ ವಲಯಕ್ಕೆ (ಅದಕ್ಕೆ ಈರುಳ್ಳಿ ಒಂದು ಉದಾಹರಣೆ) ಸಂಬಂಧಿಸುತ್ತದೆ. ಸರಬರಾಜಿಗೆ ಸಂಬಂಧಿಸಿದ ಇಂತಹ ಸಮಸ್ಯೆಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನಿವಾರಿಸಿಕೊಂಡು, ಹಣದುಬ್ಬರಕ್ಕೆ ಆಸ್ಪದವಿಲ್ಲದ ರೀತಿಯಲ್ಲಿ, ವಿತ್ತೀಯ ಕೊರತೆಯನ್ನು ಹೆಚ್ಚಿಸಿಕೊಳ್ಳಬಹುದಿತ್ತು.

ಆದರೆ, ವಿತ್ತೀಯ ಕೊರತೆಯನ್ನು ಈ ರೀತಿಯಲ್ಲಿ ಹೆಚ್ಚಿಸಿಕೊಳ್ಳುವುದನ್ನು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಒಪ್ಪುವುದಿಲ್ಲ. ದೇಶದ ಅದೃಷ್ಟಹೀನ ಅಲ್ಪ ಸಂಖ್ಯಾತರ ಮೇಲೆ ಆರ್ಭಟಿಸುವ, ಜಬರ್ದಸ್ತು ಮಾಡುವ, ಆಡಂಬರದ ಗಂಡಸುತನ ತೋರಿಸುವ ಮೋದಿ ಸರ್ಕಾರವು ಹಣಕಾಸು ಬಂಡವಾಳದ ವಿರುದ್ಧ ನಿಲ್ಲುವ ಎದೆಗಾರಿಕೆ ಹೊಂದಿಲ್ಲ.

ಹಣಕಾಸು ಬಂಡವಾಳವು ಮುಖ ಸಿಂಡರಿಕೊಳ್ಳುವಂತಹ ಯಾವ ಕ್ರಮವನ್ನೂ ಅದು ಕೈಗೊಳ್ಳುವುದಕ್ಕಿಂತ ರಾಜ್ಯಗಳ ಹಿಂಡುವಿಕೆಯನ್ನು ಇಷ್ಟಪಡುತ್ತದೆ; ಬಡವರ ಕಲ್ಯಾಣ ಕಾರ್ಯಕ್ರಮಗಳ ವೆಚ್ಚದ ಕಡಿತವನ್ನು ಇಷ್ಟಪಡುತ್ತದೆ. ಅದು, ಹಣಕಾಸು ಬಂಡವಾಳವು ಅರ್ಥವ್ಯವಸ್ಥೆಗೆ ಆಘಾತ ತಲುಪಿಸುವಂತಹ ಆಜ್ಞೆಗಳನ್ನು ಕೊಂಡೊಯ್ಯುವ ಕೊಳವೆಯ ಪಾತ್ರ ವಹಿಸಿದೆ ಮತ್ತು ನವ ಉದಾರ ಆಳ್ವಿಕೆಯ ವಿಕೃತಿಯ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.

( ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending