ದಿನದ ಸುದ್ದಿ
ಸಚಿವ ಡಾ.ಸುಧಾಕರ್ ಕ್ವಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ : ಶಾಸಕ ದಿನೇಶ್ ಗುಂಡೂರಾವ್ ಆರೋಪ
ಸುದ್ದಿದಿನ,ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಸುಧಾಕರ್ ಅವರು ಕಲ್ಲು ಕ್ವಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಸ್ಥಳೀಯವಾಗಿ ಕ್ವಾರಿಗಳ ವಿಚಾರದಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವೇ ಆಗಿದ್ದು ಸ್ಪೋಟ ಘಟನೆ ನಡೆದಿರುವ ಕ್ವಾರಿ ಸಹ ಅವರ ಸಂಬಂಧಿಕರದೇ ಆಗಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಮಾದರಿಯಲ್ಲೇ ಚಿಕ್ಕಬಳ್ಳಾಪುರದಲ್ಲಿ ಇಂದು ಜಿಲಟಿನ್ ಸ್ಫೋಟ ನಡೆದಿದ್ದು ಈ ಕ್ವಾರಿಯನ್ನು ನಡೆಸುತ್ತಿರುವುದು ಮಂತ್ರಿಗಳ ಸಂಬಂಧಿಕರು ಎಂಬ ಮಾಹಿತಿ ತಿಳಿದಿದೆ. ಇದರ ಹಿಂದಿರುವ ರಾಜಕಾರಣಿಗಳ ಪಾತ್ರದ ಬಗ್ಗೆ ತನಿಖೆ ಆಗಬೇಕು. ಈ ಸರ್ಕಾರ ಬರೀ ಲೂಟಿ ಮಾಡುವುದರಲ್ಲಿ ಮಗ್ನವಾಗಿದೆ ಐದಾರು ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಅವರು ಕಿಡಿಕಾರಿದರು.
ಇದನ್ನೂ ಓದಿ | ಗುಜರಾತ್ | ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ಘಟನೆಗೆ ಸರ್ಕಾರದ ಬೇಜವಾಬ್ದಾರಿತನವೇ ಕಾರಣವಾಗಿದ್ದು, ಬೆಳಿಗಿನ ಜಾವವೇ ಹೋಗಿ ಕೆಲಸ ಮಾಡಿ ಎಂದು ನಾವು ಹೇಳಿಲ್ಲ ಎಂದು ಸಿಎಂಬಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದೊಂದು ಅತ್ಯಂತ ಖಂಡನೀಯವಾದ ಹೇಳಿಕೆ. ಕೆಲಸ ಮಾಡಲು ಆಗುವುದಿಲ್ಲ ಎಂದರೆ ಬಿಟ್ಟು ಹೋಗಿ, ಸಮರ್ಥರು ಬಂದು ಕೆಲಸ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲೆಟಿನ್ ಅನ್ನು ಇಷ್ಟೊಂದು ಹೇಗೆ ಸಂಗ್ರಹ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಬ್ರಷ್ಠಾಚಾರ ಇರುವುದೇ ಕಾರಣ. ಸರ್ಕಾರ ಸತ್ತುಬಿದ್ದಿದ್ದು, ಲೂಟಿ ಮತ್ತು ದಂಧೆ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಹರಿಹಾಯ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243