ದಿನದ ಸುದ್ದಿ
ಸಹಭಾಗಿತ್ವ ಸೇವಾಮನೋಭಾವದಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ : ಪ್ರಾಂಶುಪಾಲ ಡಾ.ರಮೇಶ್.ಎಂ.ಎನ್
ಸುದ್ದಿದಿನ,ಹರಿಹರ:ನೌಕರರ ನಿಸ್ವಾರ್ಥತೆ, ಸಹಭಾಗಿತ್ವ ಹಾಗೂ ಅನ್ಯೋನ್ಯತೆಯ ಸೇವೆಯ ಮನೋಭಾವದಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕರಾದ ವೀರಭದ್ರಯ್ಯ.ಆರ್.ಎಂ ಅವರ ವಯೋನಿವೃತ್ತಿ ಪ್ರಯುಕ್ತ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದ ಸರ್ವರ ಏಳ್ಗೆಗಾಗಿ ಕಾರ್ಯನಿರ್ವಹಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ಸಹೋಗ್ಯೋಗಿಗಳ ನಡುವೆ ಸಮನ್ವಯತೆ ಪ್ರಮುಖವಾದದ್ದು, ಈ ಹಿನ್ನೆಲೆಯಲ್ಲಿ ಅಧೀಕ್ಷಕರಾದ ವೀರಭದ್ರಯ್ಯ ಅವರ ಕರ್ತವ್ಯ ಎಲ್ಲರಿಗೂ ಅನುಕರಣೀಯ ಎಂದು ಅವರ ಸುಧೀರ್ಘ ಸೇವೆಯನ್ನು ನೆನೆದರು.
ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಕುಮಾರ್.ಎಂ ಅವರು ಮಾತನಾಡಿ, ಅಧೀಕ್ಷಕರಾದ ವೀರಭದ್ರಯ್ಯ ಅವರ 38 ವರ್ಷಗಳ ವೃತ್ತಿಯಲ್ಲಿ ಎಲ್ಲೂ ಕಳಂಕವನ್ನು ಪಡೆಯದೆ ಶುದ್ಧ ಅಸ್ತರಾಗಿ ವೃತ್ತಿ ನಿಷ್ಠೆ, ಪ್ರಮಾಣಿಕತೆ, ಕರ್ತವ್ಯ ಮತ್ತು ಸಮಯ ಪ್ರಜ್ಞೆ ಹೊಂದಿದ್ದರು. ಮಿತ ಭಾಷಿಕರಾದ ಶ್ರೀಯುತರು ನಮ್ಮ ಕಾಲೇಜಿನಲ್ಲೇ ವೃತ್ತಿ ಜೀವನದ ಭಾಗಶಃ ಭಾಗವನ್ನು ಕಳೆದಿದ್ದು, ಅವರ ಸೇವೆಯು ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.
ಈ ಸಮಯದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್.ಹೆಚ್.ಪಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ.ಬಿ.ಕೆ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ತಿಪ್ಪೇಸ್ವಾಮಿ.ಹೆಚ್, ರಾಜ್ಯಶಾಸ್ತ್ರ ಅಧ್ಯಾಪಕರಾದ ಕಳಕಪ್ಪ ಚೌರಿ, ಪ್ರಥಮ ದರ್ಜಿ ಸಹಾಯಕರಾದ ರವೀಂದ್ರನಾಥ್.ಬಿ.ಜೆ ಅವರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ಕಾಲೇಜಿನ ಎಲ್ಲರೂ ಸಿಬ್ಬಂದಿಯವರು ಅಧೀಕ್ಷಕರಾದ ವೀರಭದ್ರಯ್ಯ.ಆರ್.ಎಂ ಅವರನ್ನು ಸನ್ಮಾನಿಸಿದರು.
ವಿದ್ಯಾರ್ಥಿನಿ ಕು.ಆಷ್ಲೇಷಾ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗೌರಮ್ಮ.ಎಸ್.ಎಂ ಅವರು ವಯೋನಿವೃತ್ತಿ ಹೊಂದುತ್ತಿರುವ ವೀರಭದ್ರಯ್ಯ ಅವರನ್ನು ಪರಿಚಯಿಸಿ, ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಪ್ಪನವರ ಬಸವರಾಜು ಅವರು ಅವರು ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


