Connect with us

ದಿನದ ಸುದ್ದಿ

ವೃತ್ತಿಧರ್ಮವನ್ನೂ ನಾಶ ಮಾಡುವ ದ್ವೇಷ ರಾಜಕಾರಣ

Published

on

  • ನಾ ದಿವಾಕರ

ಭಾರತದ ಪ್ರಜಾತಂತ್ರ ವ್ಯವಸ್ಥೆ ನಾಲ್ಕೂ ದಿಕ್ಕುಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. ಆಡಳಿತ ವ್ಯವಸ್ಥೆಯ ನಾಲ್ಕೂ ಸ್ತಂಭಗಳು ಶಿಥಿಲವಾಗುತ್ತಿರುವಂತೆ ಭಾಸವಾಗುತ್ತಿದೆ. ನ್ಯಾಯಾಂಗದ ಮೂಲಕ ಈ ದೇಶದ ಸಾಮಾನ್ಯ ಪ್ರಜೆಗಳು ಕೊಂಚ ಉಸಿರಾಡುತ್ತಿದ್ದರೂ ಕೆಲವು ಸಂದರ್ಭಗಳಲ್ಲಿ ನ್ಯಾಯಾಂಗವೂ ಮುಂಚಿನಂತಿಲ್ಲ ಎಂದೆನಿಸಿದರೆ ಅಚ್ಚರಿಯೇನಿಲ್ಲ.

ಇದು ಇಂದಿನ ಸಮಸ್ಯೆಯೂ ಅಲ್ಲ. ಅಧಿಕಾರ ರಾಜಕಾರಣದ ಒತ್ತಡಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪರಂಪರೆಗೆ ಐದು ದಶಕಗಳ ಇತಿಹಾಸವಿದೆ. ಒಂದೇ ವ್ಯತ್ಯಾಸ ಎಂದರೆ ಮೂರು ನಾಲ್ಕು ದಶಕಗಳ ಹಿಂದೆ ಇದ್ದಂತಹ ದಕ್ಷ, ನಿಷ್ಪಕ್ಷಪಾತ, ದಿಟ್ಟ ನ್ಯಾಯಮೂರ್ತಿಗಳನ್ನು ಇಂದು ಕಾಣುವುದು ವಿರಳ. ಶಾಸಕಾಂಗ ಮತ್ತು ಕಾರ್ಯಾಂಗಗಳು ಭ್ರಷ್ಟ ಹಾದಿ ಹಿಡಿದಿರುವ ಒಂದು ಶಿಥಿಲವಾಗುತ್ತಿರುವ ವ್ಯವಸ್ಥೆಯಲ್ಲಿ ಇದು ಸಹಜ ಪ್ರಕ್ರಿಯೆಯೇನೋ ಎನಿಸುತ್ತದೆ.

ಪ್ರಜಾತಂತ್ರ ವ್ಯವಸ್ಥೆ ಶಿಥಿಲವಾಗುತ್ತಿರುವ ಸಂದರ್ಭದಲ್ಲಿ, ಸಂವಿಧಾನ ಮತ್ತು ಪ್ರಜಾತಂತ್ರ ಮೌಲ್ಯಗಳ ಉಲ್ಲಂಘನೆಯಾಗುತ್ತಿರುವ ಹೊತ್ತಿನಲ್ಲಿ ಪ್ರಜೆಗಳಲ್ಲಿ ಜಾಗೃತಿ ಮೂಡಿಸುವ ಹೊಣೆಗಾರಿಕೆ ಮೂಲತಃ ಮಾಧ್ಯಮಗಳ ಮೇಲಿರುತ್ತದೆ. 1970ರ ದಶಕದಲ್ಲಿ ಮತ್ತು ಸ್ವತಂತ್ರ ಭಾರತದ ಆರಂಭದ ದಿನಗಳಲ್ಲೂ ಸಹ ಭಾರತದ ಸುದ್ದಿ ಮಾಧ್ಯಮಗಳು ಈ ಜವಾಬ್ದಾರಿಯನ್ನು ನಿಭಾಯಿಸಿವೆ.

ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಸಂವಹನ ಮಾಧ್ಯಮದ ವ್ಯಾಪ್ತಿ ಸೀಮಿತವಾಗಿದ್ದ ಸಂದರ್ಭದಲ್ಲೂ ಮಾಧ್ಯಮಗಳು , ಪತ್ರಿಕೆಗಳು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದನ್ನು ಸ್ಮರಿಸಬಹುದು. ಆಗಲೂ ಭಾರತದ ಸುದ್ದಿಮನೆಗಳು ಉದ್ಯಮಿಗಳ, ಪ್ರಬಲ ಮೇಲ್ಜಾತಿಗಳ ಮತ್ತು ಕೆಲವು ರಾಜಕೀಯ ನಾಯಕರ ಒಡೆತನದಲ್ಲೇ ಇದ್ದವು.

ಆದರೆ ವೃತ್ತಿ ಧರ್ಮದ ಬಗ್ಗೆ ಪ್ರಜ್ಞೆಯೂ ಇತ್ತು. ಹಾಗಾಗಿ ಆಡಳಿತ ವ್ಯವಸ್ಥೆಯ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಮಾಡುತ್ತಿದ್ದವು. ಇದಕ್ಕೆ ಮೂಲ ಕಾರಣ ಪತ್ರಿಕಾ ಸಂಪಾದಕರಿಗೆ ವೃತ್ತಿ ನಿಷ್ಠೆಯಷ್ಟೇ ಸಂವಿಧಾನ ನಿಷ್ಠೆಯೂ ಇತ್ತು. ಇಂದು ಇದು ಮರೆಯಾಗುತ್ತಿದೆ.

ಇಂದು ಮಾಧ್ಯಮಗಳ ನಿಷ್ಠೆ ಅಧಿಕಾರ ಪೀಠಗಳತ್ತ ವಾಲುತ್ತಿರುವ ಸಂದರ್ಭದಲ್ಲೇ ಮಾಧ್ಯಮ ಸ್ವಾತಂತ್ರ್ಯದ ಹರಣವೂ ನಡೆಯುತ್ತಿದೆ. ಏಕೆಂದರೆ ಬಹುಪಾಲು ಮಾಧ್ಯಮ ಸಮೂಹಗಳು, ಸುದ್ದಿಮನೆಗಳು, ಮುದ್ರಣ ಮಾಧ್ಯಮಗಳು ತಮ್ಮ ಜನಪರ ಮುಖವಾಡವನ್ನು ಸಂಪೂರ್ಣವಾಗಿ ಕಳಚಿಹಾಕಿಬಿಟ್ಟಿವೆ.

ಜಾಹೀರಾತಿನ ಪ್ರಲೋಭನೆ, ಅಧಿಕಾರ ಪೀಠಕ್ಕೆ ಹತ್ತಿರವಾಗುವ ಹಪಹಪಿ, ಸೌಲಭ್ಯ ಸವಲತ್ತುಗಳ ಆಮಿಷ ಮತ್ತು ಉದ್ದಿಮೆಯ ಅಳಿವು ಉಳಿವು ಇವೆಲ್ಲವೂ ಮಾಧ್ಯಮ ಸಂಹಿತೆಗಳನ್ನು ಬುಡಮೇಲು ಮಾಡುತ್ತಿವೆ. ಇದಾವುದರ ಗೊಡವೆಯೂ ಇಲ್ಲದೆ ಉಳಿಯಲು ಪ್ರಯತ್ನಿಸುವ ಮಾಧ್ಯಮಗಳ ವ್ಯಾಪ್ತಿ ಸಂಕುಚಿತವಾಗುತ್ತಲೇ ಹೋಗುತ್ತದೆ.

ಹೊಂದಾಣಿಕೆಯ ಸೂತ್ರ, ರಾಜಿ ಸೂತ್ರ ಮತ್ತು ಎಲ್ಲರನ್ನೂ ಮೆಚ್ಚಿಸುವ ಸೂತ್ರಗಳು ಪತ್ರಿಕೆಗಳ ಸ್ವರೂಪವನ್ನೇ ವಿರೂಪಗೊಳಿಸಿರುವುದನ್ನೂ ನೋಡಿದ್ದೇವೆ. ಈ ಹಂತದಿಂದ ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಮಾಧ್ಯಮ ಲೋಕ ಇಂದು ಸಂಪೂರ್ಣವಾಗಿ ರಾಜಕೀಯ ಬಂದಿಯಾಗಿದೆ. ಔದ್ಯಮಿಕ ಹಿತಾಸಕ್ತಿಯ ನೆಲೆಯಲ್ಲಿ ರಾಜಕೀಯ ಗುಂಪುಗಳೊಡನೆ ಬೆರೆತುಹೋಗಿದೆ.

ಈ ವಿಷಮ ಸ್ಥಿತಿಯಲ್ಲಿಯೇ ಸಾಂಸ್ಕೃತಿಕ ರಾಷ್ಟ್ರೀಯತೆ ಪೋಷಿಸುತ್ತಿರುವ ದ್ವೇಷ ರಾಜಕಾರಣ ಎಲ್ಲ ಕ್ಷೇತ್ರಗಳನ್ನು, ಎಲ್ಲ ಹಂತಗಳಲ್ಲೂ ಆವರಿಸುತ್ತಿದೆ. ಬಹುಪಕ್ಷೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಜಕೀಯ ದ್ವೇಷ ಸಹಜ. ಸ್ವತಂತ್ರ ಭಾರತದ ಮೊದಲ ನಾಲ್ಕು ದಶಕಗಳಲ್ಲಿ ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದವು, ಭಿನ್ನಮತ ಇತ್ತು, ಪರ ವಿರೋಧದ ನೆಲೆಗಳಿದ್ದವು. ಆದರೆ ರಾಜಕೀಯ ದ್ವೇಷ ಹೆಚ್ಚಾಗಿ ಇರಲಿಲ್ಲ.

ಅಧಿಕಾರ ರಾಜಕಾರಣದ ಚೌಕಟ್ಟಿನಲ್ಲೇ ಇದ್ದ ಸೈದ್ಧಾಂತಿಕ ಭಿನ್ನಮತಗಳನ್ನೂ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳುವ ಒಂದು ಸ್ವಸ್ಥ ಆಡಳಿತ ವ್ಯವಸ್ಥೆಯನ್ನೂ ನಾವು ಕಂಡಿದ್ದೇವೆ. ಶಾಸನ ಸಭೆಗಳಲ್ಲಿ ನಡೆಯುತ್ತಿದ್ದ ಚರ್ಚೆಗಳು, ವಿರೋಧ ಪಕ್ಷಗಳ ವಾಗ್ದಾಳಿ ಮತ್ತು ಆಡಳಿತಾರೂಢ ಪಕ್ಷದ ಸಂಯಮ ಇವೆಲ್ಲವೂ ಒಂದು ಸ್ವಸ್ಥ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಿದ್ದವು.

ಆದರೆ ನವ ಉದಾರವಾದ ಮತ್ತು ಬಲಪಂಥೀಯ ರಾಜಕಾರಣದ ಆಕ್ರಮಣದ ನಂತರ ಭಾರತದ ರಾಜಕೀಯ ನಕ್ಷೆಯೇ ಬದಲಾಗಿದೆ. ಜಾತಿ ಆಧಾರಿತ, ಮತಧರ್ಮ ಆಧಾರಿತ ರಾಜಕಾರಣ ಹೆಚ್ಚು ಪ್ರಬಲವಾಗುತ್ತಿರುವಂತೆಲ್ಲಾ ರಾಜಕೀಯ ದ್ವೇಷವೂ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಬಲಪಂಥೀಯ ರಾಜಕಾರಣ ಪೋಷಿಸುತ್ತಿರುವ ಸಾಂಸ್ಕೃತಿಕ ರಾಜಕಾರಣ ದ್ವೇಷ ರಾಜಕಾರಣವನ್ನೂ ಪೋಷಿಸುತ್ತಿದೆ.

ಬಹುತ್ವ ಮತ್ತು ಬಹುಸಂಸ್ಕೃತಿಯನ್ನೇ ಮೈಗೂಡಿಸಿಕೊಂಡು ಒಂದು ಬೃಹತ್ ದೇಶವಾಗಿ ರೂಪುಗೊಂಡಿರುವ ಭಾರತದಲ್ಲಿ ಇಂದು ಸಾಂಸ್ಕೃತಿಕ ವೈವಿಧ್ಯತೆಯೇ ನಿರಂತರ ಹಲ್ಲೆಗೊಳಗಾಗಿದೆ. ಒಂದು ರಾಷ್ಟ್ರ, ಒಂದು ಭಾಷೆ, ಒಂದು ಧರ್ಮ, ಒಂದು ಸಂಸ್ಕೃತಿಯ ವಿಕೃತ ಚಿಂತನೆ ಈಗ ಒಂದು ರಾಜಕೀಯ ಪಕ್ಷ, ಒಂದೇ ಚುನಾವಣೆಯವರೆಗೂ ವಿಸ್ತರಿಸಿದೆ.

ಈ ಸಂದರ್ಭದಲ್ಲೇ ಭಾರತದ ಸಾಂವಿಧಾನಿಕ ಸಾಂಸ್ಥಿಕ ನೆಲೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿವೆ. ಅಪರಾಧದ ನಿಷ್ಕರ್ಷೆ ಇಂದು ಈ ಸಾಂಸ್ಥಿಕ ನೆಲೆಗಳಿಂದ ಹೊರತಾಗಿ, ರಾಜಕೀಯ ಅಧಿಕಾರ ಕೇಂದ್ರಗಳಲ್ಲಿ ನಡೆಯುತ್ತಿದೆ. ಅಪರಾಧಿಗಳಿಗೆ ನೀಡುವ ಶಿಕ್ಷೆಯೂ ಸಹ ಈ ಅಧಿಕಾರ ಕೇಂದ್ರಗಳ ಅಣತಿಯಂತೆ ನಿರ್ಧಾರವಾಗುತ್ತಿದೆ.

ಭ್ರಷ್ಟಾಚಾರ ಮುಕ್ತ ಭಾರತ, ಕಾಂಗ್ರೆಸ್ ಮುಕ್ತ ಭಾರತ ಎನ್ನುವ ಪರಿಕಲ್ಪನೆಗಳನ್ನು ವೈಭವೀಕರಿಸುತ್ತಲೇ ಏಕಪಕ್ಷ ಆಡಳಿತವನ್ನು ಗಟ್ಟಿಗೊಳಿಸುವ ಪ್ರಯತ್ನಗಳ ನಡುವೆಯೇ ವ್ಯವಸ್ಥೆ ಇನ್ನೂ ಭ್ರಷ್ಟವಾಗುತ್ತಿದ್ದರೆ ಅದಕ್ಕೆ ಕಾರಣವನ್ನು ಇಲ್ಲಿ ಗುರುತಿಸಬಹುದು. ಇಂದು ಎಂತಹುದೇ ಭ್ರಷ್ಟ ರಾಜಕಾರಣಿ ಆಡಳಿತಾರೂಢ ಪಕ್ಷದೊಡನೆ ಗುರುತಿಸಿಕೊಳ್ಳುವುದರ ಮೂಲಕ ನಿರಪರಾಧಿಯಾಗಿ ಮುಕ್ತಿಪಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

ಇದರ ನಡುವೆಯೇ ಅಪರಾಧ ಮುಕ್ತ ರಾಜಕಾರಣದ ಬಗ್ಗೆ ಯಾವುದೇ ಪಕ್ಷವೂ ಮಾತನಾಡದಿರುವುದನ್ನೂ ಗಮನಿಸಬೇಕಿದೆ. ವಿರೋಧಿ ದನಿಗಳನ್ನು ದಮನಿಸಲು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಬಳಸುತ್ತಿರುವ ಕ್ರೂರ ಮಾರ್ಗಗಳಿಗೆ ಈಗಾಗಲೇ ಹಲವು ಚಿಂತಕರು ಬಲಿಯಾಗಿದ್ದಾರೆ. ನೂರಾರು ಜನರು ಯಾವುದೇ ಅಪರಾಧ ಎಸಗದೆ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ ಗುರುತರ ಅಪರಾಧಗಳನ್ನು ಎಸಗಿರುವಂತಹ ವ್ಯಕ್ತಿಗಳು ಅಧಿಕಾರ ಪೀಠಗಳನ್ನು ಅಲಂಕರಿಸಿದ್ದಾರೆ.

ಈ ವಿಡಂಬನೆಯ ನಡುವೆಯೇ ರಾಜಕೀಯೇತರ ಶಕ್ತಿಗಳು, ಸಂವಿಧಾನೇತರ ಸಂಸ್ಥೆಗಳು ಮತ್ತು ಸಂಘಟನೆಗಳು ಈ ದೇಶದ ಜನಸಾಮಾನ್ಯರ ಅಭಿಪ್ರಾಯ/ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಆಕ್ರಮಣ ನಡೆಸುತ್ತಿವೆ. ಇತ್ತೀಚೆಗೆ ಖ್ಯಾತ ಸಾಹಿತಿ, ವಿಚಾರವಾದಿ, ಚಿಂತಕ ಪ್ರೊ ಕೆ ಎಸ್ ಭಗವಾನ್ ಅವರ ಮೇಲೆ ವಕೀಲೆಯೊಬ್ಬರು ಹೈಕೋರ್ಟ್ ಆವರಣದಲ್ಲೇ ಹಲ್ಲೆ ನಡೆಸಿ ಮಸಿ ಎಸೆದಿರುವುದನ್ನು ಈ ಹಿನ್ನೆಲೆಯಲ್ಲೇ ನೋಡಬೇಕಾಗುತ್ತದೆ.

ಇದು ಅಭಿಪ್ರಾಯ ಸ್ವಾತಂತ್ತ್ಯವನ್ನು ಹತ್ತಿಕ್ಕುವ ಮತ್ತೊಂದು ಕ್ರೂರ ವಿಧಾನ. ಇತ್ತೀಚಗೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಪ್ರೊ ಭಗವಾನ್ ತಮ್ಮ ರಾಮ ಮಂದಿರ ಏಕೆ ಬೇಡ ಎಂಬ ಕೃತಿಯಲ್ಲಿ ಮೂಲ ವಾಲ್ಮೀಕಿ ರಾಮಾಯಣದ ಕೆಲವು ಸಾಲುಗಳನ್ನು ಉದ್ಧರಿಸಿದ್ದಾರೆ. ವಾಲ್ಮೀಕಿ ರಾಮಾಯಣದ ರಾಮನ್ನು ಕುರಿತಂತೆ ವ್ಯಾಖ್ಯಾನ ಮಾಡಿದ್ದಾರೆ.

ಒಬ್ಬ ಸಂಶೋಧಕರಾಗಿ, ಸಾಹಿತಿಯಾಗಿ ಪ್ರೊ ಭಗವಾನ್ ಅವರಿಗೆ ಈ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದೇ ಇರುತ್ತದೆ. ಇದು ಸಾಂವಿಧಾನಿಕ ಹಕ್ಕು ಸಹ ಹೌದು. ಪ್ರೊ ಭಗವಾನ್ ಅವರ ಉಲ್ಲೇಖಗಳು ಮತ್ತು ಅಭಿಪ್ರಾಯಗಳು ಪ್ರಶ್ನಾರ್ಹ ಎನಿಸಿದರೆ ಅದನ್ನು ನ್ಯಾಯಾಲಯದ ಮೂಲಕ ಪ್ರಶ್ನಿಸಬಹುದು. ಅವರ ವಿರುದ್ಧ ಮೊಕದ್ದಮೆಯನ್ನೂ ದಾಖಲಿಸಲಾಗಿದೆ.

ಈ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲೇ ವಕೀಲೆ ಮೀರ ರಾಘವೇಂದ್ರ ಭಗವಾನ್ ಅವರ ಮೇಲೆ ಮಸಿ ಎರಚಿ ಹಲ್ಲೆ ನಡೆಸಿದ್ದಾರೆ. ನ್ಯಾಯಾಲಯದ ಅವರಣದಲ್ಲಿ, ಪೊಲೀಸ್ ಸುರಕ್ಷತೆಯನ್ನು ಹೊಂದಿದ್ದ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ನಡೆಯುವುದು ನಮ್ಮ ಕಾನೂನು ವ್ಯವಸ್ಥೆಯ ದೌರ್ಬಲ್ಯವನ್ನು ತೋರುತ್ತದೆ. ಈ ಹಿಂದೆ ದೆಹಲಿಯ ಕೋರ್ಟ್ ಆವರಣದಲ್ಲಿ ಕನ್ಹಯ್ಯ ಕುಮಾರ್ ಅವರ ಮೇಲೆ ವಕೀಲರು ಹಲ್ಲೆ ನಡೆಸಿದ್ದರು.

ಆ ಪ್ರಕರಣದಲ್ಲಿ ವಕೀಲರಿಗೆ ಶಿಕ್ಷೆಯಾಗಬೇಕಿತ್ತು. ಈವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ನ್ಯಾಯಾಲಯಗಳ ಆವರಣದಲ್ಲಿ ಈ ರೀತಿಯ ಘಟನೆಗಳು ಸಂಭವಿಸುವುದು, ನ್ಯಾಯ ವ್ಯವಸ್ಥೆಯನ್ನು ಕಾಪಾಡಬೇಕಾದ ವಕೀಲರೇ ಇಂತಹ ಪುಂಡಾಟಿಕೆಯಲ್ಲಿ ತೊಡಗುವುದು ಶಿಕ್ಷಾರ್ಹ ಅಪರಾಧ ಎಂದು ಕಾನೂನು ರೂಪಿಸಬೇಕಿತ್ತು. ಆದರೆ ಇಂತಹ ಪ್ರಕರಣಗಳು ನಡೆಯುತ್ತಲೇ ಇದ್ದರೂ ಭಾರತದ ನ್ಯಾಯ ವ್ಯವಸ್ಥೆ ಮೌನ ಪ್ರೇಕ್ಷಕನಂತಾಗಿರುವುದು ದುರಂತ.

ವಕೀಲೆ ಮೀರ ರಾಘವೇಂದ್ರ ಅವರನ್ನು ಓರ್ವ ವ್ಯಕ್ತಿಯನ್ನಾಗಿ ನೋಡಲಾಗದು. ಇದು ಸಾಂಸ್ಥಿಕ ದಬ್ಬಾಳಿಕೆಯ ವ್ಯಕ್ತಿ ಸ್ವರೂಪವಷ್ಟೇ. ಇಂದು ವೈಚಾರಿಕತೆಯೇ ವ್ಯವಸ್ಥಿತವಾಗಿ ಹಲ್ಲೆಗೊಳಗಾಗುತ್ತಿದೆ. ಸಾಹಿತಿ, ಕಲಾವಿದರ ಅಭಿವ್ಯಕ್ತಿ ಸ್ವಾತಂತ್ರ್ಯ ಅಧಿಕಾರ ರಾಜಕಾರಣದ ಸಾಂಸ್ಥಿಕ ಒತ್ತಡಗಳಿಗೆ ಮಣಿಯಬೇಕಾದ ಸನ್ನಿವೇಶ ಎದುರಾಗಿದೆ.

ಮತ್ತೊಂದೆಡೆ ಯಾವುದೇ ಕಾನೂನು ಭೀತಿ ಇಲ್ಲದೆ ಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದು ನಡೆಯುತ್ತಲೇ ಇದೆ. ಕಳೆದ ಮೂರು ದಶಕಗಳಲ್ಲಿ ದೇಶದಲ್ಲಿ ವ್ಯವಸ್ಥಿತವಾಗಿ ಬೇರೂರಿರುವ ಮತಾಂಧತೆ ಮತ್ತು ಸಾಂಸ್ಕೃತಿಕ ರಾಷ್ಟ್ರೀಯತೆ ಈ ಧೋರಣೆಗೆ ಮತ್ತಷ್ಟು ಪುಷ್ಟಿ ನೀಡುತ್ತದೆ.

ಹಾಸ್ಯ ಕಲಾವಿದನ ಒಂದು ಜೋಕ್, ಒಂದು ಕಲಾಕೃತಿ, ಒಂದು ಸಿನಿಮಾ, ಒಂದು ಹಾಡು ಎಲ್ಲವೂ ಯಾವುದೋ ಒಂದು ಸಂಘಟನೆಯಿಂದ ನಿಬಂಧನೆಗೆ ಒಳಗಾಗುತ್ತಿದೆ. ಮೀರ ರಾಘವೇಂದ್ರ ಇಂತಹ ಒಂದು ಸಾಂಸ್ಥಿಕ/ಸಂಘಟಿತ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ.

ಪ್ರೊ ಭಗವಾನ್ ಅವರ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ ನಡೆಸಿರುವ ಮೀರ ರಾಘವೇಂದ್ರ ಅವರ ವಿರುದ್ಧ ಹೈಕೋರ್ಟ್ ಸ್ವಪ್ರೇರಣೆಯಿಂದ ಮೊಕದ್ದಮೆ ದಾಖಲಿಸಬಹುದಿತ್ತು. ಆದರೆ ಇತ್ತೀಚೆಗೆ ನ್ಯಾಯ ವ್ಯವಸ್ಥೆ ಇಂತಹ ಘಟನೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ, ಧರ್ಮ ರಕ್ಷಣೆಯ ಹೆಸರಿನಲ್ಲಿ ಸಾಹಿತಿ ಕಲಾವಿದರ ಮೇಲೆ ನಡೆಯುವ ಈ ರೀತಿಯ ಹಲ್ಲೆಗಳು ಸೃಜನಶೀಲತೆಯನ್ನೇ ಹಾಳುಮಾಡುತ್ತವೆ.

ವಾಲ್ಮೀಕಿಯ ರಾಮನನ್ನು ಡಾ ಬಿ ಆರ್ ಅಂಬೇಡ್ಕರ್ ಸೇರಿದಂತೆ ಹಲವು ಚಿಂತಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಈ ರೀತಿಯ ವಿಮರ್ಶಾತ್ಮಕ ಸಾಹಿತ್ಯದ ಮೂಲಕವೇ ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳು ಇಂದಿಗೂ ತಮ್ಮ ಅಂತಃಸತ್ವವನ್ನು ಉಳಿಸಿಕೊಂಡುಬಂದಿವೆ. ಸಾಂಸ್ಕೃತಿಕ ರಾಜಕಾರಣವನ್ನು ಪ್ರತಿನಿಧಿಸುವವರಿಗೆ ಈ ಸಾಹಿತ್ಯಕ ಆಯಾಮದ ಪರಿಜ್ಞಾನವೂ ಇರುವುದಿಲ್ಲ. ಏಕೆಂದರೆ ಈ ಪಕ್ಷ ಸಂಘಟನೆಗಳಿಗೆ ಮಹಾಕಾವ್ಯ ಮತ್ತು ಪೌರಾಣಿಕ ವ್ಯಕ್ತಿಗಳು ರಾಜಕೀಯ ಬಂಡವಾಳವಾಗಿ ಮಾತ್ರವೇ ಕಾಣಲು ಸಾಧ್ಯ.

ಈ ಘಟನೆಯನ್ನು ಖಂಡಿಸಬೇಕಾದ ರಾಜಕೀಯ ನಾಯಕರು ಮೌನ ವಹಿಸುತ್ತಾರೆ. ಭಗವಾನ್ ಪಾಕಿಸ್ತಾನದಲ್ಲಿದ್ದಿದ್ದರೆ ತಲೆ ಕಡಿಯಲಾಗುತ್ತಿತ್ತು ಎಂದು ಹೇಳುವ ಸಿ ಟಿ ರವಿ ಅವರಂತಹ ರಾಜಕೀಯ ನಾಯಕರು ಯಾವ ರೀತಿಯ ಮಾರ್ಗದರ್ಶನ ನೀಡಬಲ್ಲರು ಎಂದು ಯೋಚಿಸಬೇಕಿದೆ. ಇವರು ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದವರು.

ಅಭಿಪ್ರಾಯ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ, ಭಿನ್ನ ಅಭಿಪ್ರಾಯವನ್ನು ಪ್ರಶ್ನಿಸುವ ಅಧಿಕಾರವನ್ನೂ ನೀಡಿದೆ. ಆದರೆ ದೈಹಿಕವಾಗಿ ಹಲ್ಲೆ ನಡೆಸುವ ಅಧಿಕಾರ ಯಾರಿಗೂ ಇರುವುದಿಲ್ಲ. ನ್ಯಾಯ ವ್ಯವಸ್ಥೆಯ ಮೌಲ್ಯಗಳನ್ನು ಕಾಪಾಡಬೇಕಾದ್ದು ವಕೀಲ ವೃತ್ತಿಯಲ್ಲಿರುವವರ ವೃತ್ತಿ ಧರ್ಮ. ಆದರೆ ಈ ವೃತ್ತಿ ಧರ್ಮ ಭ್ರಷ್ಟವಾಗಿರುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ.

ಮೈಸೂರಿನ ವಿಶ್ವವಿದ್ಯಾಲಯದ ಅವರಣದಲ್ಲಿ ಕಳೆದ ವರ್ಷ ನಡೆದ ಘಟನೆಗಳ ಸಂದರ್ಭದಲ್ಲಿ ಆರೋಪಿಯ ಪರ ವಕಾಲತ್ತು ವಹಿಸುವ ವಕೀಲರನ್ನು ಬಹಿಷ್ಕರಿಸುವ ಮಟ್ಟಿಗೆ ವಕೀಲರ ಸಂಘ ಬೌದ್ಧಿಕವಾಗಿ ದಿವಾಳಿಯಾಗಿದೆ. ವಕೀಲರು, ಪೊಲೀಸರು, ಸೈನಿಕರು ಮತ್ತು ಇತರ ವೃತ್ತಿಪರರಿಗೆ ಮೂಲತಃ ಸಾಂವಿಧಾನಿಕ ಮೌಲ್ಯಗಳ ಪರಿವೆ, ಪರಿಜ್ಞಾನ ಇರಬೇಕಾಗುತ್ತದೆ.

ವಕೀಲರು ಧರಿಸುವ ಕರಿ ಕೋಟು, ಪೊಲೀಸರು ಧರಿಸುವ ಸಮವಸ್ತ್ರ ಮತ್ತು ಪದಕಗಳು, ಆಯಾ ವೃತ್ತಿಗೆ ಪ್ರವೇಶಿಸುವಾಗ ಮಾಡುವ ಪ್ರಮಾಣ ವಚನ ಇವೆಲ್ಲವೂ ಈ ದೇಶದ ಸಂವಿಧಾನ ರಕ್ಷಣೆಗೆ ಬದ್ಧವಾಗಿರುವುದಕ್ಕೆ ಸೂಚಕಗಳು. ಆದರೆ ಅಧಿಕಾರ ರಾಜಕಾರಣದ ಭ್ರಷ್ಟ ಮಾರ್ಗಗಳು ಈ ಸಾಂಸ್ಥಿಕ ನೆಲೆಗಳನ್ನೂ ಶಿಥಿಲಗೊಳಿಸುತ್ತಿರುವುದನ್ನು ಕಳೆದ ಐದಾರು ವರ್ಷಗಳಲ್ಲಿ ನೋಡುತ್ತಲೇ ಬಂದಿದ್ದೇವೆ.

ನಾಳೆ ಮೀರ ರಾಘವೇಂದ್ರ ಅವರಿಗೆ ಶಿಕ್ಷೆಯಾಗಬಹುದು ಅಥವಾ ಈಗಾಗಲೇ ಸನ್ಮಾನ, ಹಾರ ತುರಾಯಿಗಳ ನಡುವೆ ಮೆರೆಯುತ್ತಿರುವ ಆಕೆ ಅಧಿಕಾರ ರಾಜಕಾರಣದ ಫಲಾನುಭವಿಯೂ ಆಗಬಹುದು. ಆದರೆ ಆಕೆಯ ಮನಸ್ಥಿತಿ ಇಂದು ಎಲ್ಲ ಸಾಂಸ್ಥಿಕ ನೆಲೆಗಳನ್ನೂ ಪ್ರವೇಶಿಸಿದೆ, ಈ ಮನಸ್ಥಿತಿಯ ಹಿಂದೆ ಒಂದು ಸಾಂಸ್ಥಿಕ ಶಕ್ತಿ ಇದೆ, ಸಂಘಟನಾತ್ಮಕ ಒಳಹರಿವು ಇದೆ.

ಈ ಸಾಂಸ್ಥಿಕ ಶಕ್ತಿಯನ್ನು ಜನಸಾಮಾನ್ಯರ ನಡುವೆ ಪರಿಚಯಿಸಿ, ಜೀವಂತಿಕೆಯೊಂದಿಗೆ ಉಳಿಸಲು ನಮ್ಮ ವಿದ್ಯುನ್ಮಾನ ಮಾಧ್ಯಮಗಳು ತುದಿಗಾಲಲ್ಲಿ ನಿಂತಿವೆ. ಇದು ನಮ್ಮ ಮುಂದಿರುವ ದುರಂತ ಮತ್ತು ನಾವು ಎದುರಿಸುತ್ತಿರುವ ಸವಾಲು. ಸಾಂಸ್ಕೃತಿಕ ರಾಷ್ಟ್ರೀಯತೆಯ ಮತಾಂಧ ರಾಜಕಾರಣ ಬೇರೂರುತ್ತಾ ಹೋದಂತೆ ಭಾರತದ ಸಾಹಿತಿಗಳು ತಮ್ಮೊಳಗಿನ ಕಥೆಗಾರನನ್ನು, ಕವಿಯನ್ನು, ಕಾದಂಬರಿಕಾರನನ್ನು, ಕಲಾವಿದರು ತಮ್ಮೊಳಗಿನ ಕಲಾವಿದನನ್ನು, ಗಾಯಕರು ತಮ್ಮೊಳಗಿನ ಹಾಡುಗಾರರನ್ನು ಕೊಲ್ಲುತ್ತಲೇ ಹೋಗಬೇಕಾದ ಸನ್ನಿವೇಶ ಎದುರಾಗುತ್ತದೆ. ಈ ನಿಟ್ಟಿನಲ್ಲಿ ಪೆರುಮಾಳ್ ಮುರುಗನ್ ನಮ್ಮ ನಡುವೆ ಜೀವಂತ ಸಾಕ್ಷಿಯಾಗಿದ್ದಾರೆ.

ನ್ಯಾಯಾಂಗ, ಕಾನೂನು ಪಾಲನೆ, ಮತ್ತು ಮಾಧ್ಯಮ ಈ ಮೂರೂ ಕ್ಷೇತ್ರಗಳಲ್ಲಿ ವೃತ್ತಿಧರ್ಮದ ಪರಿಕಲ್ಪನೆಯೇ ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಬೆಳವಣಿಗೆಯ ವಿರುದ್ಧ ದನಿ ಎತ್ತದಿದ್ದರೆ ಬಹುಶಃ ಭಾರತದ ಪ್ರಜಾತಂತ್ರ ವ್ಯವಸ್ಥೆ ಮತ್ತು ಬಹುಸಂಸ್ಕೃತಿಯ ನೆಲೆಗಳು ಶಾಶ್ವತವಾಗಿ ವಿನಾಶದತ್ತ ಸಾಗುವ ಸಾಧ್ಯತೆಗಳೇ ಹೆಚ್ಚು.

ಈ ಸಂದರ್ಭದಲ್ಲಿ ಭಗವಾನ್ ಏಕಾಂಗಿಯಲ್ಲ ಎನ್ನುವ ಸಂದೇಶವನ್ನು ಸಾರುತ್ತಲೇ, ಮತ್ತೊಬ್ಬ ಪೆರುಮಾಳ್ ಮುರುಗನ್ ಸೃಷ್ಟಿಯಾಗದಂತೆ ಎಚ್ಚರವಹಿಸಬೇಕಿದೆ. ಗೌರಿ, ಕಲಬುರ್ಗಿ, ಪನ್ಸಾರೆ, ಧಬೋಲ್ಕರ್ ಅವರಂತೆ ಮತ್ತಷ್ಟು ಬೌದ್ಧಿಕ ಚೇತನಗಳು ನಿರ್ಗಮಿಸದಂತೆ ಎಚ್ಚರವಹಿಸಬೇಕಿದೆ. ಬದಲಾಗುತ್ತಿರುವ ಭಾರತದಲ್ಲಿ, ಆತ್ಮನಿರ್ಭರ ಭಾರತದಲ್ಲಿ ಪ್ರಜಾತಂತ್ರ ಮತ್ತು ಸಂವಿಧಾನವನ್ನು ಪ್ರೀತಿಸುವ, ಗೌರವಿಸುವ ಮನಸುಗಳ ಮುಂದಿರುವ ಮುಖ್ಯ ಸವಾಲು ಇದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending