ದಿನದ ಸುದ್ದಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನಡೆಸ್ಕ್:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ಹಾಗೂ ತಜ್ಞವೈದ್ಯರ ಕೊರತೆ ಹೆಚ್ಚಾಗಿದ್ದು, ಕೌನ್ಸಿಲಿಂಗ್ ಮೂಲಕ ತಜ್ಞವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ದಾದಿಯರು, ಟೆಕ್ನಿಷಿಯನ್‌ಗಳು ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಎಫ್‌ಡಿಎ ಯಿಂದ ಅನುಮತಿಯ ಅಗತ್ಯವಿದೆ. ಶೇಕಡ 75ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಮೇಲೆ ಅವಕಾಶವಿರುತ್ತದೆ ಎಂದು ಹೇಳಿದರು.

ಬಾಗಲಕೋಟೆ ಜಿಲ್ಲೆಯ ಮುದೋಳ ಹಾಗೂ ಹುನಗುಂದ ತಾಲೂಕಿನಲ್ಲಿ ತಾಯಿ-ಮಗುವಿನ ಎರಡು ಸರ್ಕಾರಿ ಆಸ್ಪತ್ರೆ ಆರಂಭಿಸಲಾಗುವುದು. ಮುಂಬರುವ 2-3 ತಿಂಗಳಲ್ಲಿ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನಿಂಗ್ ಮತ್ತು ಎಂಆರ್‌ಐ ಘಟಕಗಳ ಉಚಿತ ಸೇವೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಸಚಿವರು ಹೇಳಿದರು.

ಬಾಗಲಕೋಟೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಔಷಧಿ ಮತ್ತು ಪ್ರಯೋಗಾಲಯಗಳ ವ್ಯವಸ್ಥೆ ಕಲ್ಪಿಸಲಾಗುವುದು. ಆಸ್ಪತ್ರೆಗಳಲ್ಲಿ ಹೊರರೋಗಿ, ಒಳರೋಗಿಗಳ ಸಂಖ್ಯೆ, ವಾರ್ಡ್ಗಳ ಸಂಖ್ಯೆ ಹಾಗೂ ವೈದ್ಯರ ಕರ್ತವ್ಯ ನಿರ್ವಹಣೆ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version