ದಿನದ ಸುದ್ದಿ
ಬೆಳಗಾವಿ | ಮುಳುಗಿರುವ ಬೆಳೆಗೆ ತಕ್ಷಣ ತಾತ್ಕಾಲಿಕ ಪರಿಹಾರ : ನಿರ್ಮಲಾ ಸೀತಾರಾಮನ್ ಭರವಸೆ

ಸುದ್ದಿದಿನ,ಬೆಳಗಾವಿ : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮುಳುಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರವನ್ನು ನೀಡುವಂತೆ ವಿಮಾ ಕಂಪೆನಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಶನಿವಾರ ಭೇಟಿ ಹಾಗೂ ವೈಮಾನಿಕ ಸಮೀಕ್ಷೆ ಬಳಿಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಬೆಳೆವಿಮೆ ಕಂಪನಿಗಳು ಪ್ರವಾಹ ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ, ಮುಳುಗಡೆಯಾಗಿರುವ ಬೆಳೆಯ ಸಮೀಕ್ಷೆಗೆ ಮುಂದಾಗದೇ ತಕ್ಷಣವೇ ತಾತ್ಕಾಲಿಕವಾಗಿ ಪರಿಹಾರ ನೀಡಬೇಕು. ಸಮೀಕ್ಷೆ ಹಾಗೂ ಹೆಚ್ಚಿನ ಪರಿಹಾರದ ಬಗ್ಗೆ ನಂತರ ನಿರ್ಧರಿಸಬೇಕು ಎಂದು ಸೂಚನೆ ನೀಡಲಾಗುವುದು ಎಂದರು.
ಬೆಳೆವಿಮೆ ಅವಧಿ ವಿಸ್ತರಣೆ
ಬೆಳೆವಿಮೆ ಕಂತು ಪಾವತಿಸುವ ಅವಧಿಯನ್ನು ವಿಸ್ತರಿಸುವ ಅಗತ್ಯತೆ ತಮಗೆ ಮನವರಿಕೆಯಾಗಿದೆ. ಆದ್ದರಿಂದ ಬೆಳೆವಿಮೆ ಕಂತು ಪಾವತಿಸುವ ಅವಧಿ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ವಿಮೆ ಕಂತು ತುಂಬಲು ಆಗಸ್ಟ್ 16 ರ ನಂತರವೂ ಅವಧಿ ವಿಸ್ತರಿಸುವಂತೆ ಸಂಬಂಧಿಸಿದ ಕಂಪನಿಗಳಿಗೆ ಸೂವನೆ ನೀಡಲಾಗುವುದು.
ಪ್ರವಾಹ ಪರಿಸ್ಥಿತಿ ಗಂಭೀರ
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದಾಗ ಪ್ರವಾಹ ತೀವ್ರವಾಗಿರುವುದು ಕಂಡುಬಂದಿದೆ. ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿ ತೀರದ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.
ಅನೇಕ ಸೇತುವೆಗಳು ಮುಳುಗಡೆಗೊಂಡಿದ್ದು, ಜನ-ಜಾನುವಾರುಗಳಿಗೆ ಅಪಾಯವಿದೆ ಎಂದರು.
ನೇಕಾರರ ಸಾಲ ಪಾವತಿ; ಅವಧಿ ವಿಸ್ತರಣೆ
ಬೆಳಗಾವಿಯ ನಗರದಲ್ಲಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದಾಗ ಪ್ರವಾಹದಿಂದ ನೇಕಾರ ಕುಟುಂಬಗಳು ಸಂಕಷ್ಟಕ್ಕೀಡಾಗಿರುವುದು ಕಂಡುಬಂದಿದೆ. ಆದ್ದರಿಂದ ನೇಕಾರರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಅವಕಾಶ ನೀಡುವಂತೆ ಕ್ರಮವಹಿಸಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದರು.
ಬೆಳಗಾವಿ ನೇಕಾರರ ಮಗ್ಗಗಳು ಮತ್ತು ಕಚ್ಚಾ ವಸ್ತುಗಳು ಪ್ರವಾಹದಿಂದ ಹಾನಯಾಗಿರುವುದರಿಂದ ನೇಕಾರರ ಸಾಲ ಮರುಪಾವತಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಪಾವತಿಸುವಂತೆ ಪ್ರವಾಹ ಪೀಡಿತರಿಗೆ ಕಿರುಕುಳ ಕೊಡದೇ ಸಾಲ ಮರುಪಾವತಿಗೆ ಅವಕಾಶ ನೀಡಬೇಕು.
ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಆದೇಶ ನೀಡಲಿದೆ ಎಂದು ಭರವಸೆ ನೀಡಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕ ಅಭಯ ಪಾಟೀಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
