ದಿನದ ಸುದ್ದಿ
ಹಾವೇರಿ | ಪರಿಹಾರ ಕಾರ್ಯಕ್ಕಾಗಿ ಜಿಲ್ಲೆಯ ವಿಪತ್ತು ನಿಧಿಯಲ್ಲಿ ರೂ.16 ಕೋಟಿ ಹಣವಿದೆ : ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ
ಸುದ್ದಿದಿನ,ಹಾವೇರಿ: ಜಿಲ್ಲಾ ವಿಪತ್ತು ನಿಧಿಯಲ್ಲಿ 16 ಕೋಟಿ ರೂ, ತಾಲೂಕಾ ಆಡಳಿತ ಬಳಿ 15 ರಿಂದ 20 ಲಕ್ಷ ರೂ. ಹಣವಿದ್ದು, ಸಂತ್ರಸ್ಥರ ನೆರವಿಗೆ ಜಿಲ್ಲಾಡಳಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.
ಅತಿವೃಷ್ಠಿ ಹಾಗೂ ನೆರೆ ಪರಿಹಾರ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಸಂತ್ರಸ್ತರಿಗಾಗಿ ಜಿಲ್ಲೆಯಲ್ಲಿ 76 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ. ಮಳೆ ಹಾಗೂ ನೆರೆಯ ಸಂಕಷ್ಟದಲ್ಲಿರುವವರು ಪರಿಹಾರ ಕೇಂದ್ರಕ್ಕೆ ಆಗಮಿಸಿ ಆಶ್ರಯಪಡೆಯುವಂತೆ ತಿಳಿಸಿದರು.
ಆಗಸ್ಟ್ 8 ಮತ್ತು 9 ರಂದು 591.7 ಎಂ ಎಂ ಹಾಗೂ 9 ರಿಂದ 10 ರಂದು 224.3 ಎಂ.ಎಂ. ಮಳೆಯಾಗಿದೆ. ತುಂಗಭದ್ರಾ ನದಿಯಿಂದ 1.15 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ವರದಾ ನದಿಯಿಂದ 32 ಕ್ಯೂಸೆಕ್ ಮತ್ತು ಧರ್ಮಾ ನದಿಯಿಂದ ಐದುಸಾವಿರ ಕ್ಯೂಸೆಕ್ ನೀರು ಹರಿದುಬಂದಿರುವುದರಿಂದ ನದಿಪಾತ್ರದ ಗ್ರಾಮಗಳಿಗೆ ನೆರೆ ತುಂಬಲು ಕಾರಣವಾಗಿ ಹಾನಿ ಹೆಚ್ಚಾಗಿದೆ. ಹಾನಗಲ್ ತಾಲೂಕಿನ ನಾಲ್ಕು ಗ್ರಾಮಗಳು, ಸವಣೂರ ತಾಲೂಕಿನ ನಾಲ್ಕ ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದವು. ಉಳಿದಂತೆ ಗ್ರಾಮಗಳಲ್ಲಿ ಭಾಗಶಃ ನೀರು ತುಂಬಿಹಾನಿ ಸಂಭವಿಸಿದೆ. ಸಂತ್ರಸ್ಥ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪರಿಹಾರ ಕೇಂದ್ರ
76 ಗ್ರಾಮಗಳು ಬಾಧಿತವಾಗಿದ್ದು, 6493 ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಹಾವೇರಿಯಲ್ಲಿ 53, ರಾಣೇಬೆನ್ನೂರಿನಲ್ಲಿ ಎರಡು, ಬ್ಯಾಡಗಿಯಲ್ಲಿ ಎರಡು, ಸವಣೂರಿನಲ್ಲಿ ನಾಲ್ಕು, ಶಿಗ್ಗಾವಿಯಲ್ಲಿ ನಾಲ್ಕು ಹಾಗೂ ಹಾನಗಲ್ನಲ್ಲಿ 11 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದಿರುವ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಹೊದಿಕೆಗಳನ್ನು ನೀಡಲಾಗಿದೆ, ಅಗತ್ಯ ವೈದ್ಯೋಪಚಾರದ ವ್ಯವಸ್ಥೆ ಮಾಡಲಾಗಿದೆ. ಸಂತ್ರಸ್ಥರ ಬೇಡಿಕೆಗೆ ಅನುಸಾರ ಯಾವುದೇ ಕೊರತೆಯಾಗದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರವಾಹದಲ್ಲಿ ಓರ್ವ ವ್ಯಕ್ತಿ ಕೊಚ್ಚಿಹೋಗಿದ್ದು ಈವರೆಗೆ ಪತ್ತೆಯಾಗಿಲ್ಲ ಹಾಗೂ ಐದು ಜನ ಗಾಯಾಳುಗಳಾಗಿದ್ದಾರೆ ಎಂದು ತಿಳಿಸಿದರು.
ಹಿರೇಕೆರೂರಿನಲ್ಲಿ ಒಂದು ಜಾನುವಾರು ಕ್ಯಾಂಪ್ನ್ನು ಸ್ಥಾಪಿಸಿ ಪರಿಹಾರ ಕೇಂದ್ರದಲ್ಲಿ ಇರಿಸಲಾಗಿದೆ. ಏಳು ತಾಲೂಕಿನಲ್ಲಿ ಜಾನುವಾರುಗಳಿಗಾಗಿ ಮೇವಿನ ಬ್ಯಾಂಕುಗಳನ್ನು ಸ್ಥಾಪಿಸಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. 23 ಕುರಿಗಳು, 10 ಮೇಕೆ, ಎರಡು ಎಮ್ಮೆ, ಎರಡು ಹಸು ಸಾವನ್ನಪ್ಪಿವೆ ಎಂದು ಮಾಹಿತಿ ಲಭ್ಯವಿದೆ ಎಂದರು.
ಮನೆ ಹಾನಿ
ಜಿಲ್ಲೆಯಲ್ಲಿ 2822 ಮನೆಗಳಿಗೆ ಹಾನಿಯಾಗಿದ್ದು 271.25 ಲಕ್ಷ ರೂ. ನಷ್ಟ ಸಂಭವಿಸಿದೆ. ಈ ಪೈಕಿ 2817 ಮನೆಗಳು ಭಾಗಶಃ ಹಾಳಾಗಿವೆ. ಅಂದಾಜು 266.41 ಲಕ್ಷ ರೂ. ಹಾನಿಯಾಗಿದೆ. ಐದು ಮನೆಗಳು ಪೂರ್ಣಪ್ರಮಾಣದಲ್ಲಿ ಹಾಳಾಗಿದ್ದು, ರೂ.4.88 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ ಎಂದು ತಿಳಿಸಿದರು.
ರಸ್ತೆಹಾನಿ
ಗುಡೂರು, ಗುಯಿಲಗುಂದಿ, ಮಣ್ಣೂರು, ಚಿಕ್ಕನೆಲ್ಲರೂ, ಹರವಿ, ಚಪ್ಪರದಿನ್ನಿ, ಅಲ್ಲಾಪುರ, ಹರನಗಿರಿ ಗ್ರಾಮಗಳ ಎಂಟು ಪಂಚಾಯತ್ ರಾಜ್ ಇಂಜನೀಯರಿಂಗ್ ವಿಭಾಗದ ರಸ್ತೆಗಳಿಗೆ ಹಾನಿಯಾಗಿದೆ. ಏಳು ರಾಜ್ಯ ಹೆದ್ದಾರಿಗಳು, 32 ಎಂ.ಡಿ.ಆರ್., ಆರು ಸಿಡಿಗಳು , ಒಂದು ಹೆಡ್ವಾಲ್ಸ್ ಹಾನಿಯಾಗಿದ್ದು ರೂ. 273.1 ಲಕ್ಷ ಮೌಲ್ಯದ ಲೋಕೋಪಯೋಗಿ ರಸ್ತೆ ಸೇತುವೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.
ವಿದ್ಯುತ್ ಹಾನಿ
701 ವಿದ್ಯುತ್ ಕಂಬಗಳು ಮುಳುಗಿಹೋಗಿವೆ. 177 ಕಂಬಳಿಗೆ ಹಾನಿಯಾಗಿದೆ. 137 ಡಿಟಿಸಿ ಹಾಗೂ ಡಿಟಿಆರ್. ಮುಳುಗಿ ಹೋಗಿವೆ. ಏಳು ಡಿಟಿಸಿಗೆ ಹಾನಿಯಾಗಿವೆ ನಷ್ಟದ ಅಂದಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬೆಳೆಹಾನಿ
ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಬೆಳೆಹಾನಿ ಸಮೀಕ್ಷೆಯನ್ನು ಡ್ರೋನ್ ಕ್ಯಾಮರಾ ಬಳಸಿ ಸಮೀಕ್ಷೆ ನಡೆಸಲಾಗುತ್ತದೆ. ಪ್ರಾಥಮಿಕ ವರದಿಯಂತೆ ಐದು ಕೋಟಿ ರೂ. ಬೆಳೆನಷ್ಟ ಸಂಭವಿಸಿದೆ. 7261.95 ಹೆಕ್ಟೇರ್ ಬೆಳೆಹಾನಿಯಾಗಿದೆ. ಹಾನಗಲ್, ಹಾವೇರಿ, ಶಿಗ್ಗಾಂವ ಹಾಗೂ ಸವಣೂರ ತಾಲೂಕಿನಲ್ಲಿ ಹೆಚ್ಚಿನ ಬೆಳೆಹಾನಿ ಸಂಭವಿಸಿರುವುದಾಗಿ ತಿಳಿಸಿದರು.
ಕುಡಿಯುವ ನೀರು
ಹದಿನೈದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಹತ್ತು ಜಾಕ್ವೆಲ್ಗಳು ನೀರಿನಲ್ಲಿ ಮುಳುಗಿ ಹೋಗಿವೆ. ನದಿನೀರಲಗಿ ಗ್ರಾಮಕ್ಕೆ ಬೋಟ್ ಮುಖಾಂತರ ನೀರಿನ ಕ್ಯಾನ್ಗಳನ್ನು ಕುಡಿಯಲು ಜನರಿಗೆ ಪೂರೈಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಾಚರಣೆ ಬೋಟ್ ವ್ಯವಸ್ಥೆ
ಬಳ್ಳಾರಿ ಹಾಗೂ ಚಿತ್ರದುರ್ಗದಿಂದ ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನಾಲ್ಕು ಯಾಂತ್ರಿಕೃತ ಬೋಟ್ಗಳು ಜಿಲ್ಲೆಗೆ ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಇದ್ದರು.
ಕೃಪೆ : ಉದಯ ಕಾಲ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


