ದಿನದ ಸುದ್ದಿ

ರಾಜ್ಯಾದ್ಯಂತ ಮುಂದುವರೆದ ಮಳೆ ; ಹಲವೆಡೆ ಯೆಲ್ಲೋ ಆಲರ್ಟ್ ಘೋಷಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಭಾರೀ ವರ್ಷಧಾರೆ (HeavyRain ) ಮುಂದುವರೆದಿದೆ. ಬೆಂಗಳೂರು, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ( Yellow Alert ) ಘೋಷಿಸಿದೆ.

ಅನೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದ ರಾಜ್ಯದ ಅನೇಕ ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅನೇಕ ಭಾಗಗಳಲ್ಲಿ ಮರಗಳು ಧರೆಗುರುಳಿವೆ, ವಿದ್ಯುತ್ ಪೂರೈಕೆಗೆ ಅಡಚಣೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಬೀಳುವ ಮುನ್ಸೂಚನೆ ಹಿನ್ನೆಲೆಯಲ್ಲಿ ಅನೇಕ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು, ರಾಮನಗರ ಮತ್ತು ಚನ್ನಪಟ್ಟಣ ಭಾಗಕ್ಕೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಾಮರ್ಶಿಸಿದ್ದರು. ಮಳೆಯಿಂದಾದ ಬೆಳೆ ನಷ್ಟ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಲಿದ್ದಾರೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸರಿ ಸುಮಾರು 16 ಜಿಲ್ಲೆಗಳು ಬಾಧಿತವಾಗಿವೆ.

ರಾಮನಗರ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚನ್ನಪಟ್ಟಣದಲ್ಲಿ ಸ್ಥಾಪಿಸಲಾಗಿರುವ ’ಕಾಳಜಿ ಕೇಂದ್ರಕ್ಕೆ ಭೇಟಿ’ ನೀಡಿದ ಕುಮಾರಸ್ವಾಮಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಜಿಲ್ಲಾಡಳಿತ ನೆರೆಪಿಡಿತ ಸಂತ್ರಸ್ತರ ನೆರವಿಗೆ ಅಗತ್ಯ ಕ್ರಮ ವಹಿಸಿದೆ. ಕೆರೆಗಳ ದಂಡೆಯಲ್ಲಿರುವ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಪರಿಹಾರ ವಿತರಣೆಗೆ ತ್ವರಿತ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ | ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಐದು ಮನೆಗಳು ಕುಸಿದಿದ್ದು, ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ತಾಲ್ಲೂಕು ಆಡಳಿತಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಉಂಟಾದ ಹಾನಿಯ ಬಗ್ಗೆ ತುರ್ತಾಗಿ ಸಮೀಕ್ಷೆ ಕೈಗೊಂಡು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version