ದಿನದ ಸುದ್ದಿ
ಕೊಡಗಿನಲ್ಲಿ ವರುಣನ ಅರ್ಭಟ ಕ್ಕೆ ಜಲಾವೃತಗೊಂಡ ಭಾಗಮಂಡಲ..!
ಸುದ್ದಿದಿನ ಡೆಸ್ಕ್ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಜನ ತತ್ತರಿಸಿದ್ದಾರೆ. ಎಡೆಬಿಡದೆ ಮಳೆ ಸುರಿಯುತ್ತಿರೋದ್ರಿಂದ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳ ಸೇತುವೆ, ರಸ್ತೆಗಳು ಸೇರಿದಂತೆ ದಕ್ಷಿಣ ಕಾಶಿ ಖ್ಯಾತಿಯ ತಲಕಾವೇರಿ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತವಾಗಿದೆ. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮೆಟ್ಟಿಲಿನವರೆಗೂ ನೀರು ಬಂದಿದ್ದು, ಮಡಿಕೇರಿ-ಭಾಗಮಂಡಲ-ತಲಕಾವೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸ್ಥಳೀಯರು ಹಾಗೂ ಯಾತ್ರಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಹನಿ ತುಂಡಾಗದಂತೆ ಎಡೆಬಿಡದೆ ಧೋ ಎಂದು ಸುರಿಯುತ್ತಿರೋ ಮಳೆ. ಉಕ್ಕಿ ಹರಿಯುತ್ತಿರುವ ಜಲಧಾರೆಗಳು. ನೀರಿನಿಂದ ಆವೃತವಾಗಿರುವ ರಸ್ತೆ-ಸೇತುವೆಗಳು. ಜಲಾವೃತಗೊಂಡು ದ್ವೀಪದಂತಾಗಿರುವ ಗ್ರಾಮಗಳು. ಮುಳುಗಡೆಯಾಗಿರುವ ರಸ್ತೆಯಲ್ಲಿ ಸಾಗಲು ಜನರ ಪರದಾಟ. ಅಲ್ಲಲ್ಲಿ ಧರೆಗುರುಳಿರೋ ಬೃಹದಾಕಾರದ ಮರಗಳು.ಕುಸಿದಿರುವ ರಸ್ತೆಗಳು. ತೀರ್ಥ ಕ್ಷೇತ್ರದ ಭೇಟಿ ಬಂದು ಸಂಕಷ್ಟದಲ್ಲಿ ಸಿಲುಕಿರೋ ಯಾತ್ರಾರ್ಥಿಗಳು.ಭರದಿಂದ ನಡೆಯುತ್ತಿರೋ ರಕ್ಷಣಾ ಕಾರ್ಯಾಚರಣೆ. ಕಣ್ಣೆತ್ತಿ ನೋಡಿದಷ್ಟೂ ದೂರ ನೀರೋ ನೀರು. ಇಂತಹ ದೃಷ್ಯಕ್ಕೆ ಸಾಕ್ಷಿಯಾಗ್ತಿರೋದು ಕೊಡಗು ಜಿಲ್ಲೆ. ಕೊಡಗಿನಲ್ಲಿ ಕಳೆದ 1 ವಾರದಿಂದ ಎಡೆಬಿಡದೆ ಸುರಿಯುತ್ತಿರೋ ಮಳೆಯಿಂದ ಇಡೀ ಜಿಲ್ಲೆ ತತ್ತರಿಸಿದೆ. ಮುಂಗಾರಿನ ಅಬ್ಬರ ಹಲವು ಅನಾಹುತಗಳನ್ನೇ ಸೃಷ್ಟಿಸಿದೆ. ರಸ್ತೆಗಳು ಬಂದ್ ಆಗಿವೆ. ಹಲವು ಗ್ರಾಮಗಳು ಜಲಾವೃತಗೊಂಡು, ಕರೆಂಟ್ ಇಲ್ಲದೆ ಕತ್ತಲಲ್ಲಿ ಮುಳುಗಿವೆ. ಅದ್ರಲ್ಲೂ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ, ಕನ್ನಿಕೆ, ಸುಜೋತಿ ನಡಿಗಳು ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ ಭಗಂಡೇಶ್ವರ ದೇವಾಲಯದ ಪ್ರದೇಶ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಮಡಿಕೇರಿ-ಭಾಗಮಂಡಲ-ತಲಕಾವೇರಿ ಹಾಗೂ ಭಾಗಮಂಡಲ ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆಯಾದ ಪರಿಣಾಮ ಕಾವೇರಿ , ಕನ್ನಿಕೆ ಹಾಗೂ ಸುಜೋತಿ ನದಿಗಳು ಉಕ್ಕಿ ಹರಿಯುತ್ತಿವೆ. 3 ನದಿಗಳು ಸಂಗಮವಾಗುವ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪುರಾಣ ಪ್ರಸಿದ್ಧ ಭಾಗಮಂಡಲ ಭಗಂಡೇಶ್ವರ ದೇವಾಲಯದ ಮೆಟ್ಟಿಲಿನವರೆಗೂ ನೀರು ನುಗ್ಗಿದೆ. ರಸ್ತೆಯ ಮೇಲೆ ನಾಲ್ಕೈದು ಅಡಿ ಎತ್ತರದಲ್ಲಿ ನೀರು ಹರಿಯುತ್ತಿರೋದ್ರಿಂದ ತಲಕಾವೇರಿ ಭಾಗದ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಇನ್ನು ಭಾಗಮಂಡಲ-ತಲಕಾವೇರಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಯಾತ್ರಾರ್ಥಿಗಳು ಸೇರಿದಂತೆ ಈ ಭಾಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಡಳಿತ ಮೋಟಾರ್ ಬೋಟ್ ಹಾಗೂ ರ್ಯಾಫ್ಟಿಂಗ್ ಬೋಟ್ ಗಳ ಮೂಲಕ ಯಾತ್ರಾರ್ಥಿಗಳು ಹಾಗೂ ಸ್ಥಳೀಯರನ್ನು ಒಂದು ಬದಿಯಿಂದ ಮತ್ತೊಂದು ಬದಿಗೆ ಕರೆದೊಯ್ದು ಕರೆತರುವ ಕಾರ್ಯದಲ್ಲಿ ನಿರತವಾಗಿದೆ. ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಬೀಡು ಬಿಟ್ಟು ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಪರಿಣಾಮ ಇಲ್ಲಿಗೆ ಭೇಟಿ ನೀಡೋ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರ ಸಂಖ್ಯೆಯೂ ಇಳಿಮುಖವಾಗಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಜಲಾವೃತವಾಗುವ ತ್ರಿವೇಣಿ ಸಂಗಮದ ಬಳಿ ಬಹುಕೋಟಿಯ ಮೇಲ್ಸೇತುವೆ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬರದಿರೋದು ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.
ಕೇವಲ ಭಾಗಮಂಡಲ ಮಾತ್ರವಲ್ಲದೆ ಜಿಲ್ಲೆಯ ಇತರೆಡೆಯ ತಗ್ಗು ಪ್ರದೇಶ ಹಾಗೂ ನದಿ ತಟದಲ್ಲಿರೋ ಗ್ರಾಮಗಳೂ ನೀರಿನಿಂದ ಮುಳುಗುತ್ತಿವೆ. ಕಳೆದ ರಾತ್ರಿ ಮಡಿಕೇರಿಯಲ್ಲಿ ಸುರಿದ ಭಾರೀ ಮಳೆಗೆ ಕಾರಿನ ಮೇಲೆ ಮಣ್ಣು ಕುಸಿದು, ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಮಾಕುಟ್ಟ ರಸ್ತೆಯ ಮೇಲೆ ನೆನ್ನೆ ಮರ ಸಹಿತ ಗುಡ್ಡಗಳು ಕುಸಿದ ಪರಿಣಾಮ ಓರ್ವನ ಬಲಿಯಾಗಿದ್ದು, ಈ ಮಾರ್ಗದಲ್ಲಿ ರಸ್ತೆ ಸಂಚಾರವನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ದೆ ವಿರಾಜಪೇಟೆ-ಹುಣಸೂರು-ಮೈಸೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ವಿರಾಜಪೇಟೆ ತಾಲೂಕಿನ ತಿತಿಮತಿ ಎಂಬಲ್ಲಿ ಸೇತುವೆ ಕುಸಿತು ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಒಟ್ನಲ್ಲಿ ಮುಂಗಾರಿನ ಅಬ್ಬರ ಕೊಡಗಿನಲ್ಲಿ ಹಲವು ಅನಾಹುತಗಳನ್ನು ಸೃಷ್ಠಿಸೋ ಮೂಲಕ ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


