ದಿನದ ಸುದ್ದಿ
ಹಿಮೋಫಿಲಿಯಾ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರ ಬಂದಿದ್ದೇನೆ : ನಟ ಚೇತನ್
ಸುದ್ದಿದಿನ,ದಾವಣಗೆರೆ: ಹಿಮೋಫಿಲಿಯಾಕ್ಕೆ ತುತ್ತಾಗಿರುವ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದಕ್ಕೋಸ್ಕರವೆಂದೇ ನಾನು ಇಲ್ಲಿಗೆ ಬಂದಿದ್ದೇನೆ ಎಂದು ನಟ ಚೇತನ್ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿಯಲ್ಲಿ ವಿಶ್ವ ಹಿಮೋಫಿಲಿಯಾ ದಿನಾಚರಣೆ ಅಂಗವಾಗಿ ನಡೆದ ಸಮಾರಂಭವನ್ನು ಹಿಮೋಫಿಲಿಯಾ ಮಕ್ಕಳ ಜೊತೆ ಬಲೂನ್ ಹಾರಿ ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಸಿನಿಮಾ ರಂಗದೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾನು ಹಿಮೋಫಿಲಿಯಾ ಜತೆ ದೇವದಾಸಿ ಪದ್ದತಿ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರಲ್ಲಿಯೂ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇನೆ. ಇನ್ನು ಸರಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಹಿಮೋಫಿಲಿಯಾದ ರೋಗಿಗಳ ಬಗ್ಗೆ ಗಮನ ಹರಿಸಿ ಸಹಾಯ ಮಾಡುವುದರ ಜತೆ ಈ ರೋಗಿಗಳ ಬಗ್ಗೆ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.
ಔಷಧಿ ತೆಗೆದುಕೋಳ್ಳಲು ಜನಸಾಮಾನ್ಯರಿಗೆ ಬಲುಕಷ್ಟ
ವಿಜ್ಞಾನ ಮುಂದುವರೆದಿದ್ದು, ಈ ಕಾಯಿಲೆಗೆ ಔಷಧಿ ಕಂಡುಹಿಡಿಯಲಾಗಿದೆ. ಆದರೆ ಈ ಔಷಧಿಗಳ ಬೆಲೆ ತುಂಬಾ ದುಬಾರಿಯಾಗಿದೆ. ಆದ್ದರಿಂದ ಮಧ್ಯಮ ಮತ್ತು ಬಡಕುಟುಂಬದ ಜನರು ಇಷ್ಟು ಹಣ ಹೊಂದಿಸುವುದು ಕಷ್ಟವಾಗಿದೆ. ಮಾನವೀಯತೆ ನೆಲೆಯಲ್ಲಿ ನಿಂತು ನಾವು ರೋಗಿಗಳನ್ನು ನೋಡಬೇಕಿದೆ. ಕಷ್ಟದಲ್ಲಿರುವವರ ಪರವಾಗಿ ಎಲ್ಲರು ಸಹಾಯಹಸ್ತ ಚಾಚಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಸರಕಾರಗಳು ಕೂಡ ಇಂಥಹ ಸಾಮಾಜಿಕ ಸೇವಾ ಕಾರ್ಯವನ್ನು ಹೆಚ್ಚಾಗಿ ಮಾಡಬೇಕಾದ ಅಗತ್ಯವಿದೆ ಎಂದರು. ಇನ್ನು ಹಿಮೋಫಿಲಿಯಾ ಬಾಧಿತರೊಂದಿಗೆ ಕೆಲ ಸಮಯ ವಿನಿಯೋಗಿಸಿದ ನಟ ಚೇತನ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಖ್ಯಾತ ವೈದ್ಯ ಸುರೇಶ್ ಹನಗವಾಡಿ ಮಾತನಾಡಿ, ಏ.17ಕ್ಕೆ ವಿಶ್ವ ಹಿಮೊಫಿಲಿಯಾ ದಿನಾಚರಣೆ ಇದ್ದು, ಇದರ ನಿಮಿತ್ತ ಸಾರ್ವಜನಿಕರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಹಿಮೊಫಿಲಿಯಾ ಫೆಡರೇಷನ್ನ್ನು 1963ರಲ್ಲಿ ಕೆನಡಾ ದೇಶದ ಮಾಂಟ್ರಿಯಲ್ನಲ್ಲಿ ವ್ಯಾಪಾರಿ ಫ್ರಾಂಕ್ ಶಾನ್ ಬೆಲ್ ಹುಟ್ಟು ಹಾಕಿದ್ದು, ಆ ನಿಮಿತ್ತ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಕಾಯಿಲೆ 10,000 ಜನರಲ್ಲಿ ಒಬ್ಬರಿಗೆ ಬರಲಿದ್ದು, ರಕ್ತದಲ್ಲಿ ಪ್ರೋಟಿನ್ಗಳು ಕಡಿಮೆಯಾದಾಗ ರಕ್ತಸ್ರಾವ ಆಗುತ್ತದೆ. ಈ ಕಾಯಿಲೆ ಜೀವನ ಪರ್ಯಂತ ಇರುತ್ತದೆ. ಇಂಜೆಕ್ಷನ್ ಮೂಲಕ ಪ್ರೋಟಿನ್ಗಳನ್ನು ಕೊಡುವ ಮುಖಾಂತರ ಮಾತ್ರ ಇದನ್ನು ನಿಯಂತ್ರಿಸಬಹುದಾಗಿದೆ. ಆದರೆ ಈ ಇಂಜೆಕ್ಷನ್ ಹೆಚ್ಚು ಬೆಲೆವುಳ್ಳದಾಗಿದ್ದು, ನಮ್ಮ ಸಂಸ್ಥೆಯಲ್ಲಿ ಉಚಿತವಾಗಿ ಸಿಗುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ 126 ರೋಗಿಗಳು
27ವರ್ಷದಿಂದ ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಈ ರೋಗಕ್ಕೆ ತುತ್ತಾಗಿದ್ದಾರೆ. ದಾವಣಗೆರೆಯಲ್ಲಿ 126 ಹಿಮೋಫಿಲಿಯಾ ರೋಗಿಗಳಿದ್ದು, ರಾಜ್ಯದಲ್ಲಿ 6,000 ರೋಗಿಗಳಿದ್ದಾರೆ. ಅದರಲ್ಲಿ 2,000 ರೋಗಿಗಳು ಮಾತ್ರ ನೋಂದಣಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶ, ಸ್ಲಂ ಸೇರಿದಂತೆ ಇತರೆಡೆ ಈ ಬಗ್ಗೆ ಜಾಗೃತಿ ಇಲ್ಲದ ಕಾರಣ ಇನ್ನೂ 4,000 ರೋಗಿಗಳು ನೋಂದಣಿಯಾಗಿಲ್ಲ.
ಲೋಕಸಭೆಯಲ್ಲಿ ಅಂಗೀಕಾರ: ಇನ್ನು ಶಾಶ್ವತ ವಿಕಲಚೇತನರ ಪಟ್ಟಿಗೆ ಇವರನ್ನು ಸೇರಿಸಲು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಹಿಂದೆ ಸರಕಾರ ಹಿಮೋಫಿಲಿಯಾ ಬಂದವರಿಗೆ ಕೀಲು, ಮೂಳೆ ನೋವು ಬಂದ ನಂತರ ಅವರನ್ನು ವಿಕಲಚೇತನರ ಸರ್ಟೀಫಿಕೇಟ್ ಕೊಡಲಾಗುತ್ತಿತ್ತು. ಆದರೆ ಈಗ ಆ್ಯಕ್ಟ್ನಲ್ಲಿ ಸೇರಿಸುವುದರಿಂದ ಅವರಿಗೆ ವಿಕಲಚೇತನರ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಸರಕಾರ, ನಾನಾ ವೈದ್ಯರ ತಂಡ ಈ ರೋಗಿಗಳಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ಇನ್ನೂ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ನಮ್ಮ ಸಂಸ್ಥೆಗೆ ಮಹಾಪೋಷಕರಾಗಿ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಹಾಡುಗಳನ್ನು ಹೇಳುತ್ತಾರೆ. ಎಂದು ಅಭಿಪ್ರಾಯಿಸಿದರು. ಈ ಸಂದರ್ಭದಲ್ಲಿ ದಾನಿಗಳಾದ ಕಿರುವಾಡಿ ಗಿರಿಜಮ್ಮ, ಸೊಸೈಟಿ ಅಧ್ಯಕ್ಷ ಡಾ. ಸುರೇಶ್ ಹನಗವಾಡಿ, ಹೈಕೋರ್ಟ್ವಕೀಲ ಅನಂತ ನಾಯ್ಕ, ಮೀರಾ ಹನಗವಾಡಿ ಸೇರಿದಂತೆ ಇತರರು ಇದ್ದರು.
ರಷ್ಯಾ ದೊರೆಗೆ ಮತ್ತು ಕ್ಲಿಯೋಪಾತ್ರಗೂ ಇತ್ತು ಹಿಮೋಫಿಲಿಯಾ
ಹಿಮೋಫಿಲಿಯಾ ಬಗ್ಗೆ ನನಗೆ ಚಿಕ್ಕಂದಿನಿಂದಲೂ ಹೆಚ್ಚು ಆಸಕ್ತಿ ಇತ್ತು. ಈ ಕಾಯಿಲೆ ಬಗ್ಗೆ ಇತಿಹಾಸದಲ್ಲಿಯೇ ದಾಖಲೆಗಳಿವೆ. ರಷ್ಯಾ ದೊರೆ ನಿಕೋಸಲ್ನ ಎರಡನೇ ಮಗನಿಗೆ ಈ ಖಾಯಿಲೆ ಇತ್ತು. ಈ ಸಂದರ್ಭದಲ್ಲಿ ಆ ರಾಜಮನೆತನದಲ್ಲಿ ನಡೆದ ಬೆಳವಣಿಗೆಗಳು ಮತ್ತು ಅದರ ನಂತರ ನಡೆದ ಸಾಮಾಜಿಕ ಬೆವಳಣಿಗೆಗಳು ನನ್ನ ಕುತೂಹಲಕ್ಕೆ ಕಾರಣವಾಯಿತು ಎಂದು ನಟ ಚೇತನ ಹೇಳಿದರು.
ಸುದ್ದಿಗಾಗಿ ಸುದ್ದಿದಿನ.ಕಾಂ | 9986715401

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


