Connect with us

ಅಂತರಂಗ

ಹೋಳಿ ಎಂಬ ಬಯಲು ಲೈಂಗಿಕತೆಯ ಪಳಿಯುಳಿಕೆ

Published

on

  • ಆರಡಿಮಲ್ಲಯ್ಯ ಕಟ್ಟೇರ

ಹೋಳಿ ಆಟವು ಫಲವಂತಿಕೆಯ ಬಯಲು ಲೈಂಗಿಕಕ್ರಿಯೆಯ ರೂಪವೆಂಬುದನ್ನು ಈ ಸಂಶೋಧನೆಯಲ್ಲಿ ಕಂಡುಕೊಳ್ಳಲಾಗಿದೆ. ವಿಲ್ ಡ್ಯೂರಾಂಟ್ ಕೂಡ ಹೋಳಿಯನ್ನು ಮುಕ್ತ ಲೈಂಗಿಕಕ್ರಿಯೆಯೆಂದು ಬರೆಯುತ್ತಾನೆ. ‘ವಾಸಂತಿದೇವಿಯ ಗೌರವಾರ್ಥ ಆಚರಿಸುವ ಹೋಲಿ ಹಚ್ಚುವ ಸ್ವೇಚ್ಚಾರದ ಲಕ್ಷಣವನ್ನು ತಳೆಯುತ್ತಿತ್ತು. ಲಾಂಛನಗಳನ್ನು ಮೆರವಣಿಗೆಗಳಲ್ಲಿ ಗೆದ್ದುಕೊಂಡು ಹೋಗುತ್ತಿದ್ದರು. ಅವುಗಳಿಂದ ಮೈಥುನದ ಚಲನೆಗಳನ್ನು ಅಭಿನಯಿಸಿ ತೋರಿಸುತ್ತಿದ್ದರು.

ಛೋಟಾನಾಗಪುರದಲ್ಲಿ ಸುಗ್ಗಿಯ ಕಾಲವು ಸಾರ್ವತ್ರಿಕ ಸ್ವೇಚ್ಛಾಚಾರಕ್ಕೆ ಸಂಕೇತವಾಗುತ್ತಿತ್ತು. ಪುರುಷರು ಎಲ್ಲಾ ರೀತಿಯ ರಿವಾಜುಗಳನ್ನು ಪಕ್ಕಕ್ಕಿಡುತ್ತಿದ್ದರು. ಮಹಿಳೆಯರು ಎಲ್ಲಾ ಲಜ್ಜೆಯನ್ನು ತೊರೆಯುತ್ತಿದ್ದರು. ತರುಣಿಯರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಕೊಡಲಾಗುತ್ತಿತ್ತು’ ಎನ್ನುತ್ತಾನೆ.

ಚೀನಾದೇಶದಲ್ಲಿಯೂ ನಾಟಕವು ಧಾರ್ಮಿಕ ಫಲವಂತಿಕೆಯ ಆಚರಣೆಯಾಗಿಯೇ ನಡೆಸಲ್ಪಡುತ್ತಿತ್ತೆಂದು ಡ್ಯೂರಾಂಟ್ ಬರೆಯುತ್ತಾನೆ. ‘ಚೌ’ ರಾಜವಂಶದ ಅವಧಿಯಲ್ಲಿ, ನಾಟಕ ಸ್ವಚಂದತೆ, ಅಶ್ಲೀಲಗಳು ಮುಜುಗರ ಉಂಟು ಮಾಡುತ್ತವೆ ಎಂಬ ಕಾರಣದಿಂದ ನಾಟಕವನ್ನು ನಿಷೇಧಿಸಲಾಯಿತು. ಬುದ್ಧನು ಭಿಕ್ಕುಗಳು ನಾಟಕವನ್ನು ಯಾವುದೇ ಕಾರಣಕ್ಕೆ ನೋಡಬಾರದೆಂದು ಎಚ್ಚರಿಕೆ ವಿಧಿಸಿದ್ದ.

ಬೇಟೆಯೆಂದರೆ ಸಂಭೋಗವೆಂಬ ಅರ್ಥವೂ ಇದೆ; ಬೇಟ ಎಂದರೂ ಪ್ರಣಯವೇ. ಆಹಾರ ಸಂಚಯದ ಬೇಟೆಗೂ ಬೇಟಕ್ಕೂ ಅವಿನಾಭಾವ ಸಂಬಂಧವಿದೆ. ನಿರ್ಧಿಷ್ಟ ಅವಶ್ಯಕ ಸಂದರ್ಭದ ಕ್ರಿಯಾತ್ಮಕ ರೂಪುರೇಷೆಯೇ ಅನುಕರಣೆಯ ಒತ್ತಡವಾಗಿರುತ್ತದೆ. ಮಾನವನ ಜೀವವಿಕಾಸದ ಹಂತಗಳ ಪ್ರತಿಯೊಂದು ನಡೆಯಲ್ಲೂ ಸಂದರ್ಭದ ಸ್ಥಿರ ಅನುಕರಣೆಯನ್ನು ಮೀರಿ ನಡೆಯುವುದು ಬಹುಮುಖ್ಯ ಹಂತವಾಗಿದೆ. ಆದಿ ಮಾನವನ ಬದುಕು ಮತ್ತು ವೈಜ್ಞಾನಿಕ ಅನ್ವೇಷಣೆ ಶುರುವಾಗುವುದು ಬೇಟೆಯಿಂದ.

ಬೇಟೆಯು ಆರಾಧನೆಯಲ್ಲವಾದರೂ, ಅನುಕರಣೆಯ ಅರ್ಧಭಾಗದ ಔಪಚಾರಿಕ ಶಿಕ್ಷಣವೆಂದರೆ ಸರಿಯಾದೀತು. ಇಂಥ ಸಂದರ್ಭದಲ್ಲಿ ಬೇಟೆಗೂ ಬೇಟಕ್ಕೂ ಪ್ರತ್ಯೇಕಿಸಲಾಗದ ತಳಾದಿಯ ಸಂಬಂಧಗಳಿವೆ. ಪ್ರಾಣಿಗಳ ಬೇಟೆಯ ವಿಧಾನವನ್ನು ಸೂಕ್ಷ್ಮವಾಗಿ ಗಮನಿಸಿದ ವ್ಯಕ್ತಿಯು ಅನುಕರಿಸಿಯೇ ಬೇಟೆ ಮತ್ತು ಲೈಂಗಿಕ ಶಿಕ್ಷಣವನ್ನು ಪಡೆದದ್ದು. ಮನುಷ್ಯನ ಬೌದ್ಧಿಕ ವಿಕಾಸದ ಹಾದಿಯಲ್ಲಿ ಬೇಟೆಯ ಕ್ರಮ ಸಂಭ್ರಮದ ವಾತಾವರಣವನ್ನು ನಿರ್ಮಿಸಿರಬೇಕು.
ಬೇಟೆಯನ್ನು ನೇರ ಪ್ರಾಣಿಗಳಿಂದ ಕಲಿಯಲಾಗದ ಕೆಲವರಿಗೆ ಅದು ಬೇಟೆಯಾಡುವ ಸಹಜಾಭಿನಯದ ಪ್ರಸ್ತುತಪಡಿಸುವಿಕೆಯಾಗಿರಬಹುದು.

ಇದರಿಂದಾಗಿ ಬೇಟೆಯ ಪ್ರಮಾಣ ಹೆಚ್ಚಿ ಆ ಸಮಾರಾಧನೆಯೇ ಮುಂದೆ ಆಚರಣೆಯ ರೂಪಕ್ಕೆ ತಿರುಗಿ ಬಯಲಾಟ ಆಗಿರಬಹುದಾದ ಸಾಧ್ಯತೆಗಳಿವೆ. ಬೆಂಕಿಯ ಮುಂದೆ ಸೇರಿದ ಗುಂಪು ಆಹಾರ, ಮೈಥುನ, ನಿದ್ದೆಯನ್ನೂ ಸಹಜವೆಂಬಂತೆ ಬೆಂಕಿಯ ಬಯಲಲ್ಲಿಯೇ ಸಾಂಗವಾಗಿ ಸಾಗಿಸಿಕೊಂಡು ಬಂದಿರಲೂ ಸಾಧ್ಯ. ಬಯಲಾಟದ ಸಂದರ್ಭದಲ್ಲಿ ಹಿಡಿಯುವ ದೀವಟಿಗೆಗಳ ಕ್ರಮವೂ ಅದನ್ನೇ ಸಂಕೇತಿಸುತ್ತದೆ. ಇಂದಿಗೂ ನಡೆಯುವ ಕಾಮದಹನ ಹೋಳಿಯಲ್ಲಿ ಬೆಂಕಿಯನ್ನು ಕಾಮಾಗ್ನಿಯಾಗಿ ಪರಿಭಾವಿಸುತ್ತಿರುವುದು ಕಂಡುಬರುತ್ತದೆ.

ಕಾಡುಪ್ರಾಣಿಗಳ ದೇಹಗಳನ್ನು ಸುಟ್ಟು ತಿನ್ನಲು, ಅವುಗಳಿಂದ ರಕ್ಷೆ ಪಡೆಯಲು, ಕತ್ತಲನ್ನು ನೀಗಿಸಿದ ಬೆಳಕಾಗಿ ಮಾತ್ರ ದ್ರಾವಿಡ ಆಚರಣೆಗಳಲ್ಲಿ ಬೆಂಕಿಗೆ ಸ್ಥಾನವಿದೆ. ವಿಶೇಷವೆಂದರೆ ಆಚರಣೆಯ ಸಂದರ್ಭಗಳಲ್ಲಿ ಬೆಂಕಿಯ ಪ್ರಸ್ತುತತೆಯು ನಿಷೇಧಾತ್ಮಕ ಹಾಗೂ ಸಂಘರ್ಷಾತ್ಮಕ ನೆಲೆಗಳಲ್ಲಿಯೇ ನೆಲವಾಸಿ ದ್ರಾವಿಡ ಮತಗಳಲ್ಲಿ ಕಂಡುಬರುತ್ತದೆ. ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ಸಂಬಂಧ ವರ್ತನಾತ್ಮಕ ಹಾಗೂ ಆಹಾರ, ಮೈಥುನ ಮುಂತಾದ ವೈಲಕ್ಷಣಗಳ ಮೂಲಕ ಈ ಕ್ರಮವನ್ನು ಗುರುತಿಸಲಾಗುತ್ತದೆ.

ಕಾಡುನಾಗರಿಕ ವ್ಯವಸ್ಥೆಯನ್ನು ದಾಟಿ ನಗರನಾಗರಿಕತೆಯ ಹೊಸ್ತಿಲನ್ನು ಮುಟ್ಟಿದ ಮೇಲೂ ಬಹಳ ಕಾಲದವರೆಗೆ ಮನುಷ್ಯ ಭೂತಕಾಲದ ಅನೇಕ ಅಭ್ಯಾಸಗಳನ್ನು ಪೂರ್ಣವಾಗಿ ಬಿಡಲಾರ. ನಾಗರಿಕ ಸಮಾಜದ ಮನುಷ್ಯನ ಗ್ರಹಿಕೆಗಳು ಹಾಗೂ ನಂಬಿಕೆಗಳಲ್ಲಿ ಆದಿಮಕಾಲದ ನಂಬಿಕೆಗಳು ಹಾಗೇ ಅಂಟಿಕೊಂಡಿವೆ.

ಆದುದರಿಂದಲೆ ನಾಗರಿಕತೆಯ ಪ್ರಾರಂಭದ ದೆಸೆಯ ವಿಷಯಗಳನ್ನು ಸರಿಯಾಗಿ ತಿಳಿದುಕೊಳ್ಳಲು ಕಾಡುನಾಗರಿಕ ಅವಸ್ಥೆಯ ಸನ್ನಿವೇಶಗಳನ್ನು ವಿಶೇಷವಾಗಿ ತಿಳಿದುಕೊಳ್ಳುವ ಅವಶ್ಯಕತೆಯಿದೆ. ಒಂದು ಆಚರಣೆಯನ್ನು ಹೊರಗಿನಿಂದ ನೋಡಿ ಅದರ ಆಶಯವನ್ನು ಗ್ರಹಿಸುವುದು ಕಷ್ಟವಾದಾಗ ಒಳಗಿನಿಂದಲೇ ಸೀಳಿನೋಡಬೇಕಾಗುತ್ತದೆ. ಅರ್ಥಾತ್ ಅದರಲ್ಲಿ ಬಳಕೆಯಾಗುವ ವಿವಿಧ ಸಾಧನ ಸಲಕರಣೆಗಳ ಸಾಂಕೇತಿಕತೆ ಮೂಲಕ ಅದರ ಆಶಯ ಗ್ರಹಿಸಬೇಕಾಗುತ್ತದೆ.

ನಾವು ಹೋಳಿಯನ್ನು ಇಂದಿನ ರೂಪದಲ್ಲಿ ನೋಡುವ ಮೊದಲು ಗತದ ಚಾರಿತ್ರಿಕ ಮಹತ್ವವನ್ನು ಗುರುತಿಸಬೇಕಾಗಿದೆ.
ಹೋಳಿ ಆಚರಣೆಯನ್ನು ಕುರಿತು ಎಸ್.ಎಸ್. ಹಿರೇಮಠರು, ಡಿ.ಲಿಂಗಯ್ಯನವರ ಲೇಖನದಲ್ಲಿ ಪ್ರಸ್ತಾಪವಾಗಿರುವುದನ್ನು ಉದ್ಧರಿಸುತ್ತಾರೆ. ‘ವೃಕ್ಷಾರಾಧನೆಯ ಪ್ರಾಚೀನ ಜನಾಂಗವೊಂದು ಕಾಮನಹಬ್ಬದ ಆಚರಣೆಗೆ ಕಾರಣವಾಗಿರುವ ಸಾಧ್ಯತೆಯಿದೆ. ಮಾವಿನಮರ ಅಥವಾ ಬೇವಿನಮರವನ್ನು ಪೂಜಿಸುತ್ತಿದ್ದ ಜನಪದ ಜನಾಂಗದ ಸಾಂಕೇತಿಕ ಆಚರಣೆ ಕಾಮನಹಬ್ಬ ಎಂದು ಊಹಿಸಲು ಅವಕಾಶವಿದೆ.

ಮೂಲದಲ್ಲಿ ಇದು ಶಿಶ್ನಪೂಜೆ, ಫಲವಂತಿಕೆಯ ಆರಾಧನೆ, ಕೃಷಿಕರ ಹಬ್ಬ ಶೂದ್ರ ಉತ್ಸವ. ಬೇವಿನ ಸೊಪ್ಪಿಗೆ ಕಾಮನ ಹೂವ್ವು ಎನ್ನುವ ಹೆಸರಿದೆ. ಎಸ್.ಎಸ್. ಹಿರೇಮಠರು ಹೊಸಪೇಟೆಯ ಕ್ಷೇತ್ರಕಾರ್ಯದ ಮಾಹಿತಿಯೊಂದನ್ನು ಹೇಳುತ್ತಾ ಹೋಳಿಯ ಸಂದರ್ಭದಲ್ಲಿ ಮಾಂಸಹಾರ ಭೋಜನ ಸಾಮೂಹಿಕವಾಗಿ ನಡೆಯುತ್ತದೆ. ಈ ಸಂದರ್ಭದಲ್ಲಿ ಲೈಂಗಿಕ ಸ್ವಚ್ಛಂದತೆಯಿರುತ್ತದೆ ಎಂದು ಮುದುಕರೊಬ್ಬರು ಹೇಳಿದ್ದನ್ನು ದಾಖಲಿಸಿದ್ದಾರೆ.

ಹೋಳಿ ಪ್ರಾದಿಮಕಾಲದ ಸಮುದಾಯದ ಸ್ಥಿರತೆ ಮತ್ತು ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಫಲವಂತಿಕೆಯೇ ಮೂಲ ಉದ್ದೇಶವಾಗಿದ್ದ ಬಯಲು ಆಟವೇ ಆಗಿತ್ತೆನ್ನುವುದನ್ನು ಅನೇಕರು ಪ್ರಸ್ತಾಪಿಸಿದ್ದಾರೆ. ‘ಈ ಪ್ರಾಚೀನ ಆಚರಣೆಗಳು ಬೇರೆಯದೆ ಉದ್ದೇಶಗಳಿಗಾಗಿ ಹುಟ್ಟಿಕೊಂಡವು ಎಂಬುದಂತೂ ನಿಜ. ಇದನ್ನು ಅರ್ಥಮಾಡಿಕೊಳ್ಳದೆ ಹೋಗಿರುವುದು ಈಗ ನಿಜವಾಗಿಯೂ ಸಮಸ್ಯೆಯಾಗಿದೆ.

ಉದಾಹರಣೆಗೆ: ವಸಂತನ ಹೋಳಿಹಬ್ಬವು ಇಂದು ಸಾರ್ವಜನಿಕರು ಮತ್ತು ಕಾನೂನುಗಳೆರಡರ ದೃಷ್ಠಿಯಲ್ಲಿಯೂ ಒಂದು ಅಶ್ಲೀಲ ಕಾಮುಕ ಹಾಗೂ ಅಸಹ್ಯಕರ ಹಬ್ಬ. ಈ ಹಬ್ಬ ಹುಟ್ಟಿಕೊಂಡದ್ದು ಅತ್ಯಂತ ಪ್ರಾಚೀನ ಅನಾಗರಿಕ ಕೃಷಿಪೂರ್ವ ಕಾಲದಲ್ಲಿ. ಆಗ ಆಹಾರದ ಕೊರತೆಯಿತ್ತು, ಅದರ ಪೂರೈಕೆಯೂ ಕೂಡ ಅನಿರ್ದಿಷ್ಟವಾಗಿತ್ತು. ಹೀಗೆ ಆಹಾರದ ಸಂಗ್ರಹಣೆಯೇ ಜೀವನೋಪಾಯವಾಗಿದ್ದ ಕಾಲದಲ್ಲಿ ಸಂತಾನಾಭಿವೃದ್ಧಿಗೆ ತೀವ್ರ ಪ್ರಚೋದನೆಯ ಅವಶ್ಯಕತೆಯಿತ್ತು. ಇಲ್ಲವಾದಲ್ಲಿ ಒಡಲಿನ ಹಸಿವು ಸಂತನೋತ್ಪತ್ತಿಗೆ ಮಾರಕವಾಗಿ ಬಿಡಬಹುದಿತ್ತು. ಹಾಗಾಗಿ ಮೂಲದಲ್ಲಿ ಹೋಳಿ ಒಂದು ಅಶ್ಲೀಲ ಹಬ್ಬವಾಗಿರಲೆ ಇಲ್ಲ’ ಎಂದು ದೇವಿಪ್ರಸಾದ್ ಚಟ್ಟೋಪಧ್ಯಾಯರು ಬರೆಯುತ್ತಾರೆ.

ಹೋಳಿಹಬ್ಬದ ಮೂಲ ಆಶಯವು ಮಾನವರ ಪ್ರಾಣಿಗಳ ಮತ್ತು ಬೆಳೆಗಳ ಫಲವತ್ತತೆಯನ್ನು ಹೆಚ್ಚಿಸುವುದೇ ಆಗಿತ್ತೆಂದು ಅನೇಕ ವಿದ್ವಾಂಸರು ವಿವರಿಸಿದ್ದಾರೆ. ಅದರ ಮೂಲರೂಪದಲ್ಲಿ ಹಾಗೂ ಲೈಂಗಿಕ ಸ್ವಚ್ಛಂದತೆಯೂ ಸೇರಿತ್ತು. ರಾಜಮಹಲ್ ಬೆಟ್ಟಗಳಲ್ಲಿ ಪರ್ಗಣ ಉತ್ಸವದ ವೇಳೆ ಅವಿವಾಹಿತರು ಲೈಂಗಿಕಕ್ರಿಯೆಯಲ್ಲಿ ತೊಡಗುತ್ತಿದ್ದರು. ಒರಿಸ್ಸಾದ ಭೂಮಿಯಾಗಳು ತಮ್ಮ ವಸಂತೋತ್ಸವದ ವೇಳೆ ರಕ್ತಸಂಬಂಧ ಪತಿ-ಪತ್ನಿ ಸಂಬಂಧ ಎಂಬುದಕ್ಕೆಲ್ಲಾ ಬೆಲೆ ಕೊಡುವುದಿಲ್ಲ. ನೀಲಗಿರಿ ಬೆಟ್ಟದ ಕೊತರಲ್ಲೂ ಇದೇ ಪದ್ಧತಿಯಿದೆ.

ಅಸ್ಸಾಮಿನ ಬುಡಕಟ್ಟುಗಳು ಬೊಂಬೆಗಳು ಮಣಿಪುರದ ಬುಡಕಟ್ಟುಗಳು ಇತ್ಯಾದಿಗಳು ಸಹ ಇದಕ್ಕೆ ಹೊರತಲ್ಲ. ಮೇಲೆ ಹೇಳಲಾದ ವಿದ್ವಾಂಸರ ಮಾತುಗಳನ್ನು ಒಪ್ಪಿಕೊಂಡು ಮುಂದುವರಿದರೆ ಬಯಲಾಟವು ಫಲವಂತಿಕೆಯ ಲೋಕವಾದಿ ಆಚರಣೆಯಾಗಿತ್ತೆಂದು; ಅದೇ ಆಚರಣೆ ಬಯಲಾಟವಾಯ್ತೆಂದು ತಿಳಿಯಲು ಸುಲಭವಾಗುತ್ತದೆ.
ಪ್ರಾಚೀನ ಇಂಡಿಯಾದ ಉತ್ಪಾದನಾ ವಿಧಿ ಆಚರಣೆಗಳ ಯಾವುದೋ ರೀತಿಯಲ್ಲಿ ಸಮಾಜಗಳ ಸೃಷ್ಟಿ ಹಾಗೂ ಪುನರುತ್ಪಾಧನೆಯನ್ನು ನಡೆಸುತ್ತವೆಂಬ ಸಹಜಜ್ಞಾನವು ಪ್ರಾಚೀನರು ಹಾಗೂ ಆಧುನಿಕರಿಬ್ಬರಿಗೂ ಇದೆಯೆಂದಾದಲ್ಲಿ ಈ ಸಹಜಜ್ಞಾನವನ್ನು ವಿವರಿಸುವುದು ನಮ್ಮ ಸಮಸ್ಯೆಯಾಗಿದೆ.

ಪ್ರಾರಂಭಕ್ಕೆ ಅತಿಮಾನವನ ಅಥವಾ ನಿಸರ್ಗದಾಚೆಗಿನ ಒಂದು ಶಕ್ತಿ ಎಂಬುದರ ಕಲ್ಪನೆ ಇಲ್ಲ. ಏಕೆಂದರೆ ಈ ಆದಿ ಬುಡಕಟ್ಟಿನ ಜನರಿಗೆ ಒಂದು ಮತವಿದೆ. ಆದರೆ ಅವರಿಗೆ ದೈವವೆಂಬುದರ ಕಲ್ಪನೆ ಇಲ್ಲ…. ಹಾಗೆ ಮತಧರ್ಮಕ್ಕೆ ದೈವದ ಕಲ್ಪನೆ ಇರಲೇಬೇಕೆಂದು ಭಾವಿಸುವುದಾದರೆ ಬೌದ್ಧಮತವು ಕೂಡ ಒಂದು ಧರ್ಮವಾಗಿ ಪರಿಗಣಿತವಾಗುವಂತಿಲ್ಲ. ಏಕೆಂದರೆ ಅಲ್ಲಿ ದೈವಕ್ಕೆ ಸ್ಥಾನವಿಲ್ಲ. ಅತಿ ಪ್ರಾಚೀನವಾದ ಮಾನವನ ಸಮುದಾಯಗಳಲ್ಲಿ ಮತಧರ್ಮವೆಂಬುದು ಇರಲು ಸಾಧ್ಯವಿರಲಿಲ್ಲವೆಂದು ಜಾನ್‌ಲುಬಾಕ್‌ನ ಅಭಿಪ್ರಾಯವಾಗಿದೆ.

ಹದಿನಾಲ್ಕನೆಯ ಶತಮಾನದ ನಂತರ ಭಕ್ತಿಪಂಥದ ಪ್ರಭಾವದಿಂದ ಭಾರತೀಯ ಬಹುಮುಖ್ಯ ಆಚರಣೆಗಳೆಲ್ಲವೂ ಲೌಕಿಕವನ್ನು ನಿರ್ಲಕ್ಷಿಸುವ ಪ್ರಯತ್ನ ಮಾಡಿದವು. ಭವವನ್ನು ನೀಗಿಸಿಕೊಳ್ಳುವ ಮೂಲಕ ಮೋಕ್ಷಕ್ಕೆ ಸಾಧನವೆಂಬಂತೆ ಭಕ್ತಿಯು ಮೂಲಸ್ಥಾಯಿಯಾಯಿತು. ಆಶಯವು ಏನೇ ಇದ್ದರೂ ಪರಿಣಾಮ ನೆಲಮೂಲ ಲೋಕವಾದಕ್ಕೆ ದೊಡ್ಡ ಪೆಟ್ಟು ನೀಡಿತು. ಒಳಿತೆಲ್ಲವೂ ದೈವಾನುಗ್ರಹವೆಂಬ ಮನೋಭಾವ ಪ್ರಬಲವಾದಂತೆ ನಾಟಕದ ಮೂಲವನ್ನೂ ದೈವತ್ವದ ಕೇಂದ್ರಕ್ಕೆ ಒಯ್ಯಲು ಸುಲಭವಾಯಿತು.

ನಂತರದ ದಿನಮಾನಗಳಲ್ಲಿ ನಾಟಕವನ್ನು ಅಧ್ಯಯನ ಮಾಡಿದವರೂ ಸಂಪ್ರದಾಯವಾದಿಗಳಾಗಿರದಿದ್ದರೂ ದೈವತ್ವವನ್ನು ನಿರಾಕರಿಸದವರಾದ ಕಾರಣ ದೈವಮೂಲ ಪ್ರಬಲವಾಗಿ ಸಂಶೋಧನೆಯಲ್ಲೂ ಮಹತ್ತರ ಸ್ಥಾನಪಡೆಯಿತು. ‘ಜನತಾ ರಂಗಭೂಮಿಯ ಹುಟ್ಟು ದೇವಪೂಜೆಯ ಮೂಲ ಮನೋಭಾವದಲ್ಲಿಯೇ ಅಡಗಿದೆ. ಕನ್ನಡನಾಡಿನ ಜಾನಪದ ರಂಗಭೂಮಿಯಾದರೂ ಈ ಮಾತಿಗೆ ಹೊರತಾದುದಲ್ಲ. ಆಹಾರ, ನಿದ್ರಾ, ಭಯ, ಮೈಥುನಗಳ ಕಾರಣದಿಂದಾಗಿ ದೇವರನ್ನೂ ದೆವ್ವಗಳನ್ನೂ ಆರಾಧಿಸುವ ಸಾಮಾನ್ಯ ಸಂಪ್ರದಾಯಗಳ ಆಚರಣೆಯಲ್ಲಿ ಹಳ್ಳಿಯ ನಾಟಕದ ಹುಟ್ಟನ್ನು ಕಾಣಬಹುದಾಗಿದೆ.

ಮಳೆ, ಗುಡುಗು, ಮಹಾಪೂರ, ಕ್ಷಾಮ, ರೋಗ, ಮರಣ ಈ ಎಲ್ಲವೂ ನೈಸರ್ಗಿಕ ಶಕ್ತಿಗಳ ಕೈವಾಡದ ಕಾರಣವೆಂದು ನೆರೆನಂಬಿದ್ದ ಪ್ರಾಚೀನ ಕನ್ನಡಿಗರು, ಆ ಶಕ್ತಿಗಳನ್ನು ಒಲಿಸಿಕೊಳ್ಳುವ ಸಲುವಾಗಿ ಮಾಡುತ್ತಿದ್ದ ಉಪಾಸನೆಗಳಲ್ಲಿ ಅಂತಹ ಶಕ್ತಿಗಳ ಅನುಕರಣವೂ ಅಡಗಿ ನಾಟಕ ಹುಟ್ಟಿತು’ ಎಂದು ಭಾವಿಸಿ ಪ್ರಾಚೀನಕಾಲದಲ್ಲಿ ನಡೆಯುತ್ತಿದ್ದ ಲೋಕಕ್ರಿಯೆಗಳನ್ನು ಸಾಂಕೇತಿಕಾರ್ಥದಲ್ಲಿ ಆಚರಿಸುವ ವಿಧಿಯಾಚರಣೆಗಳನ್ನು ಅಧ್ಯಯನಕಾರರು ದೈವಪೂಜೆ ವಿಧಿವಿಧಾನಗಳೆಂದು ಅರ್ಥೈಸಿಕೊಂಡಿದ್ದಾರೆ.

ದೈವಾರಾಧನೆಯೇ ಬಯಲಾಟದ ಮೂಲ ಎಂದು ಸಾಕ್ಷ್ಯ ಒದಗಿಸುವ ಸಂಶೋಧಕರು ಗ್ರೀಕ್‌ದೇಶದಲ್ಲೂ ದೈವಾರಾಧನೆಯಿಂದಲೇ ಬಯಲಾಟವು ಆರಂಭವಾಯಿತೆಂದು ಡಯೋನಿಸಿಯಸ್ ದೇವತೆಯ ಆಚರಣೆಯನ್ನು ಸಾಕ್ಷ್ಯವಾಗಿ ನೀಡುತ್ತಾರೆ. ಗ್ರೀಕ್ ರಂಗಭೂಮಿಯ ಮೂಲ ಡಯೋನಿಸಿಯಸ್ ಎಂಬ ಫಲಕೊಡುವ ದೇವರ ಪ್ರೀತ್ಯರ್ಥವಾಗಿ ನಡೆಯುತ್ತಿದ್ದ ಧಾರ್ಮಿಕ ಆಚರಣೆ. ಕ್ರಿ.ಪೂ. 13ನೆಯ ಶತಮಾನದಲ್ಲೇ ಪ್ರಚಲಿತವಾಗಿದ್ದ ಈ ಆಚರಣೆಯಲ್ಲಿ, ಮೆರವಣಿಗೆಯಲ್ಲಿ ಹೋತ ಬಲಿಕೊಡುವ ಸಂಪ್ರದಾಯವೂ ಮತ್ತು ಡಿಥಿರ್ಯಾಂಬ್ ಎಂಬ ಹೆಸರಿನ ಮೇಳ ಭಜನೆಯೂ ಇರುತ್ತಿತ್ತು. ಮೊದಲು ಈ ಆಚರಣೆ ಬಹುಶಃ ಒಂದು ಉನ್ಮತ್ತ ಕ್ರಿಯಾವಿಧಿಯಾಗಿತ್ತು; ನರಬಲಿಯೂ ಕೂಡಾ ಈ ಆಚರಣೆಯ ಅಂಗವಾಗಿತ್ತು.

ಆದರೆ, ಆಮೇಲೆ ಗ್ರೀಕ್ ನಾಗರಿಕತೆ ವಿಕಾಸಗೊಂಡಂತೆ ಈ ಆಚರಣೆಯೂ ನಾಗರಿಕವಾಗತೊಡಗಿತು. ಕ್ರಿ.ಪೂ. ಏಳನೆಯ ಶತಮಾನದ ಹೊತ್ತಿಗೆ ಗ್ರೀಕ್ ವೀರರ ಕಥೆಗಳು ಈ ಭಜನೆಯ ಪಠ್ಯವಾಗಿ ಸೇರಿಕೊಂಡವು. ಹೀಗೆ ಮಾರ್ಪಾಟುಗೊಂಡ ಈ ಆಚರಣೆಯೇ ಗ್ರೀಕ್ ಬುಡಕಟ್ಟುಗಳನ್ನು ಒಂದುಗೂಡಿಸುವ ಸಾಧನವೂ ಆಗಿದ್ದರಿಂದ ಇದಕ್ಕೆ ಕ್ರಿ.ಪೂ ಆರನೆಯ ಶತಮಾನದಲ್ಲಿ ರಾಜ್ಯದ ಮಾನ್ಯತೆಯೂ ದೊರಕಿತು. ಡಯೋನಿಸಿಯಸ್ ದೇವತಾಚರಣೆಯೂ ಬಯಲು ಲೈಂಗಿಕಕ್ರಿಯೆ ಆಗಿತ್ತೆಂಬುದನ್ನು ಮುಂದೆ ಆಧಾರ ಸಮೇತ ವಿವರಿಸಲಾಗುತ್ತದೆ.

ಪ್ರಾಚೀನ ಕಾಲದ ಕ್ರಿ.ಪೂ. ಶತಮಾನಗಳಲ್ಲಿ ‘ಅಥೆನ್ಸಿನಲ್ಲಿ ಸಮೃದ್ಧಿ ಇತ್ತು. ಆಲೀವ್ ಎಣ್ಣೆಯ ರಫ್ತು ವ್ಯವಹಾರ ಚೆನ್ನಾಗಿ ನಡೆಯುತ್ತಿತ್ತು. ಆ ಕಾರಣದಿಂದಲೇ ಮಣ್ಣಿನ ಜಾಡಿಗಳನ್ನು ಮಾಡುವ ಉಧ್ಯಮ ಬೆಳೆಯಿತು. ಮಣ್ಣಿನ ಹೂಜಿಯ ಮೇಲೆ ಕೆಂಪುಬಣ್ಣದ ಚಿತ್ರಗಳನ್ನು ಬಿಡಿಸುವ ಕಲೆ ಕ್ರಿ.ಪೂ. ೫೩೫ರ ಸುಮಾರಿಗೆ ಸಿದ್ದಿಸಿತು. ಇಡೀ ಜಾಡಿಯನ್ನು ಕಪ್ಪಾಗಿಸಿ ಅದರ ಮೇಲೆ ಸಹಜ ಕೆಂಪುಬಣ್ಣದಲ್ಲಿ ವಾಸ್ತವವೆಂಬಂತೆ ಕಾಣುವ ಚಿತ್ರಗಳನ್ನು ಮೂಡಿಸುತ್ತಿದ್ದರು.

ಎಣ್ಣೆಯ ವ್ಯಾಪಾರ ಒಳನಾಡಿನಲ್ಲೂ ನಡೆಯುತ್ತಾ ಜನಸಾಮಾನ್ಯರ ಆಚರಣೆ, ಸಮೂಹಗಾನ, ಅಣಕುನೃತ್ಯ, ಮದ್ಯ ದೇವತೆಯಾದ ಡಯೊನೀಸಿಯಸ್‌ನ ಆರಾಧನೆ, ಇವು ವ್ಯಾಪಕವಾಗಿ ನಗರಕ್ಕೂ ತಲುಪಿ ಈ ಆಚರಣೆಗಳೇ ರಂಗಭೂಮಿಯ ತಳಹದಿಗಳಾದವು. ಆಚರಣೆಯ ಸಮಯದಲ್ಲಿ ಹೋತದ ಬಲಿ ಕೊಡುತ್ತಿದ್ದರು. ಹಾಗಾಗಿ ಆ ಆಚರಣೆ ಟ್ರಾಗ್ ಓಡಿಯಾ ಅಥವಾ ಹೋತಗೀತೆ ಎಂಬ ಹೆಸರಿತ್ತು. ಅಂದರೆ ಬಲಿ ಮತ್ತು ಟ್ರಾಜಿಡಿಗಳ ನಡುವೆ ನೇರ ಸಂಬಂಧವಿದೆ. ಈ ಆದಿಮ ಬಲಿ ಆಚರಣೆಯೇ ಅತ್ಯಂತ ಶಕ್ತ ರಂಗಭೂಮಿ ಪ್ರತಿಮೆಯಾಗಿದೆ.

ಗ್ರೀಕ್‌ಮೂಲದಿಂದ ನಾಟಕಗಳ ಉಗಮವನ್ನು ಅನ್ವಯಿಕವಾಗಿ ಗುರುತಿಸುವುದೂ ಕನ್ನಡ ಸಂಶೋಧನೆಯ ಬಹುಮುಖ್ಯ ಲಕ್ಷಣಗಳಲ್ಲಿ ಒಂದು. ಪಾಶ್ಚಾತ್ಯ ಮಾದರಿಗಳ ಮೂಲಮಾನದಿಂದ ಕನ್ನಡದ ಅಸ್ಮಿತೆಗಳ ಆಂತರ್ಯವನ್ನು ಅರಿಯುವುದು ನಷ್ಟವಲ್ಲದಿದ್ದರೂ ನೆಲಮೂಲದ ಸತುವನ್ನು ಕಡೆಗಣಿಸದಿದ್ದರೆ ಆಯಿತು. ಎಲ್ಲವೂ ಗ್ರೀಕ್‌ನಿಂದಲೇ ಬಂದುವು ಎಂಬ ಪೂರ್ವ ತೀರ್ಮಾನವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಸಂಶೋಧನೆ ತೊಡಗುವುದು ಮಾತ್ರ ಅಪಾಯ. ಗ್ರೀಕ್ ಮೂಲದಿಂದ ಬಯಲಾಟದ ಸ್ವರೂಪ ಇತಿಹಾಸವನ್ನು ಹುಡುಕುವ ಸಂಶೋಧಕರು ಡಯೋನಿಸಸ್ ದೇವತೆಯ ಆಚರಣೆಯನ್ನು ಉದಾಹರಣೆ ನೀಡಿ ಇದರಿಂದ ಪ್ರಭಾವಿತಗೊಂಡ ಆಚರಣೆಗಳು ಕರ್ನಾಟಕದಲ್ಲೂ ಇದ್ದವು ಎಂದು ಬರೆಯುತ್ತಾರೆ.

‘ಡಯೋನಿಸಸ್‌ನ ಉತ್ಸವದಲ್ಲಿ ಲಿಂಗಪೂಜೆಯಿತ್ತು. ನೃತ್ಯಾದಿಗಳಿದ್ದವು. ಇವುಗಳ ವರ್ಣನೆಯನ್ನು ಓದಿದರೆ ಕಾಮದಹನದ ಉತ್ಸವ, ಮೆರವಣಿಗೆ, ವೇಷಭೂಷಣ, ಓಕುಳಿ, ಕುಣಿತ, ಸಂಭ್ರಮ, ಸ್ವಚ್ಛಂಧ ಮುಂತಾದವುಗಳ ಜ್ಞಾಪಕ ಬರುತ್ತದೆ. ಶಿವನು ಪ್ರಾಚೀನ ದೇವತೆ. ಲಿಂಗಪೂಜೆ ೫೦೦೦ ವರ್ಷಗಳ ಕೆಳಗೆ ಸಿಂಧೂ ಪ್ರಾಂತ್ಯದಲ್ಲಿತ್ತು. ಡಯೋನಿಸ್‌ಸನು ಗ್ರೀಸಿಗೆ ಪೂರ್ವದೇಶದಿಂದ ಬಂದ ದೇವತೆಯೆಂದು ಪಾಶ್ಚಾತ್ಯ ವಿದ್ವಾಂಸರೇ ಹೇಳುತ್ತಾರೆ’. ಸಂಸ್ಕೃತ ನಾಟಕಕಾರರು ಗುರುತಿಸುವಂತೆ ಡಯೋನಿಸಸ್ ದೇವತೆ ಪುರುಷದೇವತೆಯಾಗಿರದೆ ಸ್ತ್ರೀದೇವತೆಯಾಗಿದ್ದು ಮುಕ್ತ ಲೈಂಗಿಕತೆಯೇ ಅದರ ಮಾಂತ್ರಿಕ ಆಚರಣೆಯೂ ಆಗಿತ್ತು. ಮಾಂತ್ರಿಕ ಆಚರಣೆಗಳು ನೇರವಾಗಿ ಮಾತೃದೇವತೆಗಳಿಗೆ ಸಂಬಂಧಿಸುತ್ತವೆ.

‘ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಅದರ ಆಳ ತಿಳಿದುಕೊಳ್ಳಬೇಕೆಂದರೆ ದೃಷ್ಟಿಯನ್ನು ಹಿಂದಕ್ಕೋಡಿಸಬೇಕು. ಪಕ್ಷಪಾತವೆಂಬುದಿರಕೂಡದು. ಅಭಿಮಾನ ಎಂಬ ಮಾತನ್ನೇ ಕೈಬಿಡಬೇಕು. ಸತ್ಯವನ್ನು ಗ್ರಹಿಸಬೇಕೆಂಬ ಬುದ್ಧಿಮಾತ್ರ ಪ್ರಧಾನವಾಗಿರಬೇಕು. ಆ ಸತ್ಯ ಅವಮಾನಕರವಾಗಿದ್ದರೂ ಸರಿ, ಅಸಹ್ಯವಾಗಿ ಕಂಡರೂ ಸರಿ. ಇಷ್ಟಕ್ಕೂ ಇಂದು ನಮಗೆ ಅಸಹ್ಯ ಎನಿಸುವ ವಸ್ತುವನ್ನು ಅಂದು ಎಲ್ಲರೂ ಆಧರಿಸಿರಬಹುದಲ್ಲವೆ? ಇಂದು ನಮಗೆ ಅವಮಾನಕರವಾಗಿ ಕಂಡ ಸಂಗತಿ ಆ ದಿನಗಳಲ್ಲಿ ದೊಡ್ಡ ಗೌರವದ ವಿಷಯವಾಗಿರಬಹುದು.

ಆದ್ದರಿಂದ ಸತ್ಯವನ್ನೊಪ್ಪಿಕೊಂಡರೆ ಯಾವ ಪ್ರಮಾದವೂ ಇಲ್ಲ’ ಎಂಬ ತಾಪಿ ಧರ್ಮರಾವ್ ಅವರ ಮಾತು ಇಲ್ಲಿ ನೆನೆಸಿಕೊಳ್ಳುವಂಥಾಹದ್ದು. ಹೋಲಿಯನ್ನು ಕುರಿತೂ ಈ ಮಾತು ಅತ್ಯಂತ ಪ್ರಸ್ತುತ. ಬೇರೆ ದೇಶಗಳಲ್ಲಿ ಆಚರಿಸುವ ಹಬ್ಬಗಳನ್ನು ನೀಡಲಾಗಿದೆ. ಅವು ಭಾರತದಲ್ಲಿ ಹೋಳಿ ಎಂದು ಕರೆಯಲ್ಪಡುವ ಆಚರಣೆಯ ಪರ್ಯಾಯ ಹೆಸರುಗಳು.

(ಬಯಲಾಟವೆಂದರೆ ಮುಕ್ತ ಲೈಂಗಿಕಕ್ರಿಯೆಯೆಂಬುದರ ಪರಿಕಲ್ಪನಾತ್ಮಕ ಸಂಶೋಧನೆಯ ಪುಸ್ತಕವೊಂದನ್ನು ಕಳೆದ ಎರಡುವರ್ಷಗಳ ಹಿಂದೆ ಬರೆದು ಮುಗಿಸಿದ್ದೆ. ಅದು ಮತ್ತಷ್ಟು ಪರಿಷ್ಕರಣೆಗೊಂದು ಸೈಂಧವ_ಸಂಕಥನ ಎಂಬ ಹೆಸರಿನಲ್ಲಿ ಪ್ರಕಟವಾಗಲಿದೆ. ಕೆಲವೇ ದಿನಗಳಲ್ಲಿ ಪಲ್ಲವ ಪ್ರಕಾಶನ ಪ್ರಕಟಿಸಲಿದೆ. ಸಂಶೋಧನಾಕೃತಿಯಲ್ಲಿ ಪ್ರಸ್ತುತ ಲೇಖನವು ಇದೆ. ಕೃತಿಯಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಒಂದು ಸಣ್ಣ ಟಿಪ್ಪಣಿ ನಿಮ್ಮ ಓದಿಗೆ.) – ಆರಡಿಮಲ್ಲಯ್ಯ ಕಟ್ಟೇರ.

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending