Connect with us

ಲೈಫ್ ಸ್ಟೈಲ್

ನಮ್ಮನೆಗೂ ಕರೆಂಟ್ ಬಂತು..!

Published

on

  • ಡಾ.ಎನ್.ಬಿ.ಶ್ರೀಧರ

ಭಾಗ -01

“ಅಯ್ಯಯ್ಯೋ.ಕರೆಂಟಾ…ನಮ್ ಮನೇಗಂತೂ ಬ್ಯಾಡವೇ ಬ್ಯಾಡ… ಸ್ವಿಚ್ ಆಫ಼್ ಮಾಡದೇ ಮುಟ್ಟಿದ್ದ್ರೆ …ಸರ್ …ಅಂತ ಮೈಯಲ್ಲಿನ ರಕ್ತ ಎಲ್ಲಾ ಎಳ್ಕಳತ್ತೆ..ಮೈಯಲ್ಲಿನ ನರಗಳಲ್ಲಿ ಹರಿದು ಶಕ್ತಿಯನ್ನೆಲ್ಲಾ ಹಿಂಡಿ ಹಿಪ್ಪೆ ಮಾಡುತ್ತೆ.. ಪಂಪಿನಿಂದ ಎತ್ತಿದ ನೀರಲ್ಲಿ ಸತ್ವಾನೇ ಇರಲ್ಲ.. ಬರಿ ಸಪ್ಪೆ…. ಅದರ ಸಹವಾಸ ಸಾಕು”… ಇದು ವಿದ್ಯುಚ್ಚಕ್ತಿ (ಇನ್ಮುಂದೆ ಕರೆಂಟು) ಬಗ್ಗೆ 1985 ರ ಕಾಲದಲ್ಲಿನ ಹಿರಿಯರೊಬ್ಬರ ಅಂಬೋಣ.

ಉತ್ತರ ಕನ್ನಡದ ಅನೇಕ ಹಳ್ಳಿಗಳಂತೇ ನಮ್ಮೂರಿಗೂ ಸಹ 1985 ರವರೆಗೂ ಸಹ ಕರೆಂಟೇ ಇರಲಿಲ್ಲ. ನಾವೆಲ್ಲಾ ಗದ್ದೆಗಳಲ್ಲಿ ಕಾಡು ಹಂದಿಗಳು ಬಂದು ಬೆಳೆ ಹಾಳು ಮಾಡದಂತೆ ಕಾಯಲು ಗದ್ದೆ ತೋಟಗಳ ಮಧ್ಯೆ ಮಾಳಗಳಲ್ಲಿ ಲಾಟೀನು ದೀಪದಲ್ಲಿ ಓದಿದ್ದೇ ಜಾಸ್ತಿ. ಈ ಮಾಳ ಎಂದರೇನು ಎಂಬುದು ಮಲೆನಾಡಿಗರನ್ನು ಬಿಟ್ಟು ಬೇರೆ ಕೆಲವರಿಗೆ ಅರ್ಥವಾಗಲಿಕ್ಕಿಲ್ಲ.

ಗದ್ದೆಯನ್ನು ಕಾಡು ಹಂದಿಗಳಿಂದ ಕಾಯಲು ಅವುಗಳಿಗೆ ಮನುಷ್ಯರ ಭಯ ಇರಲಿ ಎಂದು ರಚಿಸಿದ ಸುಮಾರು 10 ಅಡಿ ಎತ್ತರದಲ್ಲಿ, ಹಾವು, ಕಪ್ಪೆ, ಇಲಿಗಳ ಕಾಟದಿಂದ ರಕ್ಷಣೆ ಪಡೆಯಲು ಮರದ ಕಂಬಗಳನ್ನು ಉಪಯೋಗಿಸಿ, ಅಡಿಕೆ ಸೋಗೆಗಳನ್ನು ಹಾಕಿ ಮಳೆಗೆ ಸೋರದಂತೆ ಕಟ್ಟಿದ ಆಕಾಶ ಚಪ್ಪರ ಎನ್ನಬಹುದೇನೋ.

ರಾತ್ರಿ ಊಟವಾದ ಮೇಲೆ ಸುರಿಯುತ್ತಿರುವ ಮಳೆಯಲ್ಲಿ ಗದ್ದೆ ಬದುಗಳಲ್ಲಿ ನಡೆದು ಹೋಗಿ ಲಾಟೀನುಗಳ ಸಹಾಯದಿಂದ ತಡರಾತ್ರಿಯವರೆಗೆ ಓದುವುದು ನನಗೆ ರೂಢಿಯಾಗಿತ್ತು. ಕೆಲವೊಮ್ಮೆ ಈ ಮಾಳದ ಮಾಡಿನಲ್ಲಿ ನಮ್ಮ ಹಾಗೇ ಬೆಚ್ಚನೆ ವಾಸಸ್ಥಳಕ್ಕಾಗಿ ಅಥವಾ ಅವುಗಳ ಅಹಾರವಾದ ಇಲಿ ಬೇಟೆಗಾಗಿ ಬಂದು ಕೆಲವು ನಾಗಸ್ನೇಹಿತರು ತಲೆ ಹೊರಹಾಕಿ, ಸೀಳಿದ ನಾಲಿಗೆಯನ್ನು ಲೊಚ ಲೊಚನೇ ಚಮಕಿಸಿ ನಮ್ಮ ಜೀವ ಬಾಯಿಗೆ ಬರುವ ಹಾಗೇ ಮಾಡಿದ್ದಿದೆ.

ಲಾಟೀನಿನ ಬೆಳಕಿಗೆ ಆಕರ್ಷಿತವಾದ ವಿವಿಧ ಬಣ್ಣದ ಮಿಡತೆಗಳನ್ನೋ ಅಥವಾ ಕಾಡು ಹುಳಗಳನ್ನೋ ತಿನ್ನಲೆಂದೋ ಬಂದ ಅಸಹ್ಯ ರೂಪದ ಹಲ್ಲಿಗಳು ಪಿಷ್ಟಿ ಹಾಕಿ ಹಾಸಿಕೆಯನ್ನೆಲ್ಲಾ ಅಸಹ್ಯ ಮಾಡುತ್ತಿದ್ದವು. ಒಮ್ಮೊಮ್ಮೆ ತಲೆಯ ಮೇಲೆಯೇ ಬಿದ್ದು ಬಗ್ಗೋಣ ಪಂಚಾಂಗದ ಹಲ್ಲಿ ಶಕುನದ “ತಲೆಯ ಮೇಲೆ ಬಿದ್ದರೆ ಮರಣ” ಬೆನ್ನಿನ ಮೇಲೆ ಬಿದ್ದರೆ ಅಪಘಾತ” ಎಂಬಿತ್ಯಾದಿಗಳನ್ನು ಅಪರಾತ್ರಿಯಲ್ಲಿ ನೆನಪಿಸಿದ್ದಿದೆ.

ಹಾಳಾಗಿ ಹೋಗಲಿ.. ಅವುಗಳು ಪುತ ಪುತನೇ ಉದುರಿಸುವ ಬುಳಿ ಕಂದು ಮಿಶ್ರಿತ ಇಕ್ಕೆಗಳು ಪುಸ್ತಕದ ಮೇಲೆ ಬಿದ್ದು ಪುಸ್ತಕದ ಅಂದ ಕೆಡಿಸುವುದಲ್ಲದೇ, ಅವುಗಳ ಗಬ್ಬು ಅಸಹ್ಯ ವಾಸನೆಯಿಂದ ವ್ಯಾಕ್.. ಎನಿಸುತ್ತಿದ್ದವು.

ಕುಂಬ್ಳಜ್ಜಿ ಎಂದು ಹಳ್ಳಿ ಭಾಷೆಯಲ್ಲಿ ಕರೆಯುವ ವಾಸನಾಯುಕ್ತ ಜೀರುಂಡೆ ಲಾಟಿನಿನ್ ಬೆಳಕಿಗೆ ಆಕರ್ಷಿತವಾಗಿ ಮೈತಾಕಿದಾಗ ದಿನವಾದರೂ ಉಳಿಯುವ ಅದರ ಅಸಹ್ಯ ಗಬ್ಬು ವಾಸನೆ, ಸಂಜೆಯಾದೊಣೆ ರೆಂವ್, ರೆಂವ್ ಅಂತ ಶಬ್ಧ ಮಾಡಿ ತಲೆ ಚಿಟ್ಟು ಹಿಡಿಸುವ ಹುಳ ಹುಪ್ಪಟೆಗಳು, ಇವುಗಳನ್ನು ತಿಂದು ಹೊಟ್ಟೆ ಡುಮ್ಮಣ್ಣನಾಗಲು ಬರುವ ಕಪ್ಪೆಗಳು, ಈ ಕಪ್ಪೆಗಳನ್ನು ಬೆನ್ನಟ್ಟಿ ಬರುವ ನಾನಾ ತರದ ಹಾವುಗಳು, ಈ ಹಾವುಗಳನ್ನು ಹೇಗಾದರೂ ಹೊಂಚುಹಾಕಿ ಹಿಡಿದು ಮುಕ್ಕಲು ಕಾದು ಕುಳಿತ ಗಿಡುಗಗಳು ಪರಿಸರದ ಆಹಾರ ಸರಪಳಿಗೆ ಅತ್ಯುತ್ತಮ ಜೀವಂತ ನೈಜ ಉದಾಹರಣೆಗಳಾಗಿದ್ದವು.

ಈ ಮಾಳವಿದ್ದ ಮೇಲೆ ಅದಕ್ಕೊಂದು ಜೋಡಿ ಜೀವವಾಗಿ ಒಂದು ಹೊಡಸಲು ಇರಲೇ ಬೇಕು. ಹೊಡಸಲು ಅಂದರೆ ಮಳೆಗಾಲದಲ್ಲಿ ಕಂಬಳಿಗಳನ್ನು ಒಣಹಾಕಲು ಬಳಸುವ ನೇತಾಡುವ ಮಂಚದಂತಿರುವ ಆಕೃತಿ. ಮಳೆಯ ರಭಸಕ್ಕೆ ಎಲ್ಲರೂ ಈ ಹೊಡಸಲಿನ ಸುತ್ತಮುತ್ತ ಗಟ್ಟಿಯಾಗಿ ತಳವೂರಿ ಹಲಸಿನ ಬೀಜ, ಗೇರು ಬೀಜಗಳನ್ನು ಅಡಿಯ ಬೆಂಕಿಯ ಕೆಂಡದಲ್ಲಿ ಬೇಯಿಸಿ ತಿನ್ನುತ್ತಾ ಡರ್ರ್ ಎಂದು ತೇಗಿ ಹಳೆಯ ರೈಲು ಇಂಜಿನ್ನಿನಂತೆ “ಟುಸ್.. ಟುಸ್ ಡ್ರುಸ್.. ಎಂದು ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಯಥಾನುಶಕ್ತಿ ವಾಯುಪ್ರಕೋಪಗಳನ್ನು ನೀಗಿಸಿಕೊಳ್ಳುವುದು ಮಲೆನಾಡಿಗರಿಗೆ ಸಾಮಾನ್ಯ.

ಹಲಸಿನ ಬೀಜಗಳು ಒಮ್ಮೊಮ್ಮೆ ಸ್ವಲ್ಪ ಹಸಿಯಾಗಿದ್ದರೆ “ಡಂ” ಎಂದು ಸಶಬ್ಧವಾಗಿ ಸಿಡಿದು ಕೆಂಡದುಂಡೆಗಳನ್ನು ಬೂಧಿಯ ಸಮೇತ ಅಕ್ಕ ಪಕ್ಕಕ್ಕೆ ಚಲ್ಲುತ್ತಿದ್ದವು. ಅದಕ್ಕೆ ಹಲಸಿನ ಬೀಜಗಳಿಗೆ ಕಬ್ಬಿಣದ ತಂತಿಯಿಂದ ತೂತು ಮಾಡಿ ಒಳಗೆ ಗ್ಯಾಸು ಸೇರದಂತೆ ಮಾಡಿ ನಿಗಿ ನಿಗಿ ಕೆಂಡದಲ್ಲಿ ಬೇಯಿಸುತ್ತಿದ್ದರು.

ಹಲಸಿನ ಕಾಯಿಯ ಹಪ್ಪಳವನ್ನು ಈ ಕೆಂಡದ ಮೇಲೆ ಇಟ್ಟು ಅದು ಹಿತ ಮಿತವಾಗಿ ಅರಳಿದೊಡನೆ ಅದಕ್ಕೊಂದಿಷ್ಟು ಕೊಬ್ಬರಿ ಎಣ್ಣೆ ಸವರಿ ಕರಂ.. ಕುರುಂ ಎನ್ನುತ್ತಾ ತಿಂದು ಒಂದು ಕುಡತೆ ಸಕ್ಕರೆ ಹಾಕದ ಚಪ್ಪೆ ಚಾ ಕುಡಿದರೆ ಅದೆಂತದೋ ತೃಪ್ತಿ. ಇನ್ನು ಗೇರುಬೀಜಗಳನ್ನು ಈ ಹೊಡಸಲಿನ ಬೆಂಕಿಯಲ್ಲಿ ಹಾಕಿ ಅದು ಬಿಡುವ ಎಣ್ಣೆಯಿಂದ ಅಗ್ನಿಯ ಕೆನ್ನಾಲಿಗೆ ಆಕಡೆ ಈ ಕಡೆ ಟಾಸ್ ಪುಸ್ ಎನ್ನುತ್ತಾ ಚಾಚುತ್ತಿದ್ದರೆ ಅದನ್ನು ಜಡಿಮಳೆಯಲ್ಲಿ ನೋಡುವುದೇ ಚಂದ.

ಆ ಕಾಲಕ್ಕೆ ಆಗಷ್ಟೇ ಪ್ರಾರಂಭವಾಗಿದ್ದ ರಮಾನಂದ ಸಾಗರರ ರಾಮಾಯಣ ಧಾರಾವಾಹಿಯನ್ನು ವಿದ್ಯುತ್ ಇರುವ ನೆಂಟರ ಮನೆಗೆ ಹೋಗಿ ಅಲ್ಲಿರುವ ಟಿವಿಯಲ್ಲಿ ಮಸುಕು ಮಸುಕಾಗಿ ಬರುತ್ತಿರುವ ರಾಮಾಯಣದ ಪಾತ್ರಗಳನ್ನು ನೋಡುವುದಕ್ಕೆ ಏನೆಲ್ಲಾ ನೆಪಗಳು !!.ಕರೆಂಟನ್ನು ನಮ್ಮ ಮನೆಗೂ ಹಾಕಿಸಬೇಕೆಂಬ ಉತ್ಕಟ ಆಸೆಗೆ ಇದೂ ಒಂದು ಕಾರಣವಿರಬಹುದು.

ನಮ್ಮೂರಿಗಿಂತ ದೂರದ ಅನೇಕ ಹಳ್ಳಿಗೆಲ್ಲಾ ಕರೆಂಟು ಹರಿದಾಗ ನಮ್ಮೂರಿಗೂ ಯಾಕೆ ಕರೆಂಟು ಬರಬಾರದು ಅನಿಸಿತು. ಸಾತೊಡ್ಡಿ, ದೇಹಳ್ಳಿ, ಬಳಗಾರು, ಬೀರಗದ್ದೆಗಳೆಂಬ ಊರುಗಳಿಗೆ ದಿನಕ್ಕೆ ಒಮ್ಮೆ ಮಾತ್ರ ಒಂದು ಬಸ್ಸು ಇದ್ದು ಅಲ್ಲಿಯ ಜನರೆಲ್ಲಾ ಬೇಸಿಗೆಯಲ್ಲೇ ಮಳೆಗಾಲಕ್ಕೆ ಅವಶ್ಯವಿರುವ ಎಲ್ಲಾ ವಸ್ತುಗಳನ್ನು ತಲೆಹೊರೆಯ ಮೇಲೆಯೇ ಸಾಗಿಸಬೇಕಿತ್ತು.

ಈ ಎಲ್ಲಾ ಹಳ್ಳಿಗಳಿಗೆ ಯಾವುದೋ ಸ್ಕೀಮಿನಲ್ಲಿ ವಿದ್ಯುತ್ ನೀಡಿ ಬಿಟ್ಟಿದ್ದರು. ವಿದ್ಯುತ್ ವೈರುಗಳು ಕರೆಂಟು ಕಂಬಗಳ ತಲೆಯ ಮೇಲೆ ನೇತಾಡುತ್ತಾ ಆ ಹಳ್ಳಿಗಳನ್ನು ಸೇರಿ ಅಲ್ಲಿ ಸ್ವಿಚ್ಚು ಹಾಕಿದ ಕೂಡಲೇ ಟಕ್ಕನೇ ಹತ್ತಿಕೊಂಡು ಮಹದಾಶ್ಚರ್ಯ ಮೂಡುತ್ತಿತ್ತು.

ನೂರಾರು ಅಡಿ ಆಳದ ಬಾವಿಯಿಂದ ಗುರ್ರೆಂದು ಶಬ್ಧ ಮಾಡುತ್ತಾ ನೀರೆತ್ತುವ ಪಂಪುಸೆಟ್ಟುಗಳು, ಕೇಜಿಗಟ್ಟಲೆ ಅಕ್ಕಿಯನ್ನು ಅನಾಯಾಸವಾಗಿ ಗರ ಗರನೇ ರುಬ್ಬಿ ಬಿಸಾಕುವ ಗ್ರೈಂಡರುಗಳು, ಐದಾರು ಗೆರಟೆ ತುಂಬಾ ಇರುವ ತೆಂಗಿನ ಕಾಯಿಯ ತಿರುಳನ್ನು ಕ್ಷಣ ಮಾತ್ರದಲ್ಲಿ ರೊಂಯ್ ಎಂದು ಚಟ್ನಿ ಮಾಡಿ ಹಾಕುವ ಮಿಕ್ಸಿಗಳು, ಗುಡಾಣ ಹೊಟ್ಟೆಯ ಸದಾ “ಗುಂಯ್” ಎನ್ನುತ್ತಿರುವ ಟ್ರಾನ್ಸ್‍ಫಾರ್ಮರುಗಳು ಪ್ರಶ್ನಾರ್ಥಕವಾಗಿ ಸೋಜಿಗದ ವಸ್ತುಗಳಾಗಿ ಆಶ್ಚರ್ಯ ಹುಟ್ಟಿಸುತ್ತಿದ್ದವು.

ಆದರೆ ಈ ವಿದ್ಯುತ್ತಿನ ಆಯಸ್ಸು ಮಳೆಗಾಲ ಬರುವ ವರೆಗೆ ಮಾತ್ರ ಎನ್ನುವುದನ್ನು ಅಲ್ಲಿನ ಜನ ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ಬಿಟ್ಟಿದ್ದರು. ಧೋ.. ಧೋ.. ಎಂದು ಎಡೆಬಿಡದೇ ಸುರಿಯುವ ಮಳೆಗಾಲದಲ್ಲಿ ಮರಗಳೆಲ್ಲಾ ಕರೆಂಟು ಕಂಬಗಳ ತಂತಿಗಳ ಮೇಲಾ ಲಗಾಟಿ ಹೊಡೆದು ಒಮ್ಮೆಯೇ ಹತ್ತು ಹದಿನೈದು ಕಂಬಗಳು ಧರಾಶಾಯಿಯಾದವು ಎಂದರೆ ಆ ವರ್ಷ ಮಳೆಗಾಲದಲ್ಲಿ ಪುನ: ಚಿಮಣಿ ಬುರುಡೆ ಲಾಟೀನುಗಳೇ ಗತಿ.

ಪಿಯುಸಿ ಸಮಯದಲ್ಲಿ ಕೊಟ್ಟಿಗೆಯ ಕೆಲಸ ಮುಗಿಸಿಯೇ ಕಾಲೇಜಿಗೆ ಹೋಗುವ ವೇಳೆಗೆ ಕೆಲ ಸಮಯ ತಡವಾಗುತ್ತಿತ್ತು. ಈಗಿನಂತೆ ಕೊಟ್ಟಿಗೆಗೆ ಚಪ್ಪಡಿ ಏನೂ ಇರಲಿಲ್ಲ. ದೊಡ್ಡ ಹೊಂಡ ಗುಂಡಿಗಳ ಮೇಲೆ ಮರಗಿಡಗಳಿಂದ ಸೊಪ್ಪಿನ ಬೆಟ್ಟದಿಂದ ತಂದ ಸೊಪ್ಪುಗಳನ್ನು ಹಾಸಿ ಜಾನುವಾರು ಮಲಗಲು ಅನುವು ಮಾಡಲಾಗುತ್ತಿತ್ತು. ಅವುಗಳ ಸಗಣಿ, ಮೂತ್ರ ಈ ಹೊಂಡಗಳಲ್ಲಿ ಸಂಗ್ರಹವಾಗುತ್ತಿತ್ತು.

ಈ ಹೊಂಡಗಳಲ್ಲಿರುವ ಕೊಳೆದ ಸೊಪ್ಪು ಸದೆ ಸೇರಿ ವಿಚಿತ್ರ “ಪರಿಮಳ” ಹೊರಹೊಮ್ಮುತ್ತಿತ್ತು. ಇದನ್ನು ಸ್ವಚ್ಚ ಮಾಡಿ, ಸ್ನಾನ ಮುಗಿಸಿ, ಪಿಟಿ ಕ್ಲಾಸಿಗೆ ಹೋಗಬೇಕಾದರೆ ಏನಾದರೂ ತಡವಾದರೆ ಪಿಟಿ ಮಾಸ್ತರ್ ಶೀಟಿ ಬೆಲ್ಟ್ ಏಟು ಖಚಿತ. ಎಮ್ಮೆಗಳು ಅವುಗಳ ಮೂತ್ರದಲ್ಲಿ ಬಾಲ ಅದ್ದಿ ರಫ಼್ ಅಂತ ಬೀಸಿದರೆ ಮೈಯೆಲ್ಲಾ ಒಂದು ರೀತಿಯ ಗಮಲು ವಾಸನೆಯಿಂದ ಅಸಹ್ಯವಾಗುತ್ತಿತ್ತು. ಆಗ ಮೇಷ್ಟ್ರು “ಏ ದನಾ ಕಾಯವ್ನೇ.. ಈವತ್ತೂ ಲೇಟೇನೋ?!! ಅಂತ ತರಾಟೆಗೆ ತೆಗೆದು ಕೊಳ್ಳೋದು ಗ್ಯಾರಂಟಿ ಅಂತ ಭಯ. ಈ ಪಿಟಿ ಮೇಷ್ಟ ’ಹೊಡೆತ” ತಾಳಲಾರದೇ ಕೆಲವು ಹುಡುಗರು ಶಾಲೆಯನ್ನೇ ಬಿಟ್ಟಿದ್ದಾರೆ ಎನ್ನುವುದೂ ಒಂದು ಸುದ್ಧಿ.

ಎಲ್ಲರ ಮನೆಯಲ್ಲಿರುವ ಕರೆಂಟೆಂಬ ಮಾಯೆ ನಮ್ಮಲ್ಲಿರಬೇಕಾಗಿತ್ತು ಎಂಬ ಹಪ ಹಪಿ ಪ್ರಾರಂಭವಾದೊಡನೆ ಸಿಕ್ಕ ಸಿಕ್ಕ ಕರೆಂಟು ಕಂಬಗಳೆಲ್ಲಾ ರವಿವರ್ಮನ ಕುಂಚದ ಕಲೆಯ ಅದ್ಭುತ ಕಲಾಕೃತಿಗಳ ಗೋಚರಿಸತೊಡಗಿದವು. ಅದಕ್ಕೆ ನೇತಾಕಿದ ಆಗಾಗ ಅಕ್ಕ ಪಕ್ಕದ ಮರಗಳಿಗೆ ತಾಗಿ ಜೊರ್ ಎಂದು ಶಬ್ಧ ಮಾಡುವ ಅಲ್ಯುಮಿನಿಯಂ ವೈರುಗಳು ಹರಿಪ್ರಿಯಾಳ ಮುಂಗುರಳಂತೆ ಮೋಹಕವಾಗಿ ಮನಸೂರೆ ಮಾಡುತ್ತಿದ್ದವು.

ಬೇಕಾದೊಡನೆ ಬಂದು ಬಿಡಲು ಕರೆಂಟು ಅಷ್ಟು ಸುಲಭಕ್ಕೆ ಸಿಗುವ ವಸ್ತುವೇ? ಸೀದಾ ಕರೆಂಟಾಫೀಸಿಗೆ ನಡೆಯಿತು ನನ್ನ ಆಕೃತಿ. ಅಲ್ಲೊಬ್ಬ ದಢೂತಿ ಕೆಂಪನೇ ಮನುಷ್ಯ ಕೆಂಪು ಮಾನವರ ತರ ಆಗ ತಾನೆ ಸಮುದ್ರ ಸ್ನಾನ ಮಾಡಿ ಬಂದ ವ್ಯಕ್ತಿ ಕೂತಿದ್ದ. ನಮಗೂ ಕರೆಂಟು ಬೇಕೆಂಬ ನನ್ನ ಅದ್ಭುತ ಅಹವಾಲನ್ನು ಹೇಳಿಕೊಂಡೆ.

ಕಿವಿಯಲ್ಲಿ ಕಡ್ಡಿಯೊಂದಕ್ಕೆ ಸ್ವಲ್ಪ ಹತ್ತಿಯನ್ನು ಹಾಕಿ ಮೀಟಿ ಮೀಟಿ ಅದೇನೋ ವಸ್ತುವನ್ನು ತೆಗೆದು ಮೂಸಿ ಮೂಸಿ ಬಿಸಾಕುತ್ತಿದ್ದ ಆ ವ್ಯಕ್ತಿಯ ಮುಂದಿನ ಬೋರ್ಡು ನೋಡಿದೆ. ಅದರಲ್ಲಿ ಅದೆಂತದೋ ಹೆಸರು ಬರೆದು ಸೆಕ್ಷನ್ ಆಫೀಸರ್ ಎಂದು ಪೇಂಟಿನಲ್ಲಿ ಬರೆದಿತ್ತು. ಅತ್ಯಂತ ಅಸಡ್ಡೆಯಿಂದ ಆ ವ್ಯಕ್ತಿ “ನಿಮ್ಮೂರಿಗೆ ಕರೆಂಟಾ? ಇನ್ನೈದು ವರ್ಷ ಬಿಟ್ಕಂಡ್ ಬನ್ನಿ. ನಿಮ್ಮ ಕ್ಯೂ ಬರಕ್ಕೆ ಇನ್ನೂ ಅಷ್ಟು ವರ್ಷ ಆಗ್ತದೆ” ಎಂದು ಈಗೆಲ್ಲಾ ಆನ್ಲೈನ್ ಬಹಳ ಕಷ್ಟ ಎಂದೊರಲುವ ಕಛೇರಿ ಗುಮಾಸ್ತರ ತರ ಉಡಾಪೆಯಿಂದ ಉತ್ತರಿಸಿದ.

ಛಲಬಿಡದ ತ್ರಿವಿಕ್ರಮನಂತೆ ದಿನಾ ಕಾಲೇಜಿಗೆ ಹೋಗಿ ವಾಪಸ್ಸು ಬರುತ್ತಾ ಕರೆಂಟು ಕಛೇರಿಗೆ ಪೆನ್ಶನ್ನು ಬರದ ತಬರನಂತೆ ಎಡತಾಕತೊಡಗಿದೆ. ಕೊನೆಗೂ ನನ್ನ ಕಾಟ ತಡೆಯಲಾರದೇ ಆ ಸೆಕ್ಷನ್ನು ಆಫೀಸರ್ರು ಹತ್ತು ಹಲವು ಪುಟಗಳ ಒಂದು ಅರ್ಜಿ ಫಾರಮ್ಮನ್ನು ಹಲವು ಕಡೆ ಇಂಟು ಮಾರ್ಕು ಹಾಕಿ ನಮ್ಮಪ್ಪನ ಹತ್ತಿರ ಸಹಿ ಮಾಡುವಂತೆಯೂ ಹಾಗೂ ಒಂದಿಷ್ಟು ದುಡ್ಡನ್ನು ಕರೆಂಟು ಇಲಾಖೆಗೆ ಕಟ್ಟುವಂತೆ ಆಜ್ಞೆ ಹೊರಡಿಸಿದ.

ನಾನು ಅರ್ಜಿಯನ್ನು ಶಬರಿಯು ರಾಮನು ಕಚ್ಚಿ ಬಿಸಾಕಿದ ಹಣ್ಣನ್ನು ಜತನದಿಂದ ಎತ್ತಿಕೊಂಡಂತೆ ಎತ್ತಿಕೊಂಡು ಬಂದು ಮನೆಗೆ ತಂದೆ. ಘನಘೋರ ಚರ್ಚೆಯ ನಂತರ ಕರೆಂಟಿನ ಸಾಧಕ ಬಾಧಕಗಳನ್ನು ವಿಚಾರಿಸಿದ ನಂತರ ಕರೆಂಟೊಂದು ಅತ್ಯವಶ್ಯಕ ವಸ್ತುವೆಂದು ಅದು ಮನೆಯಲ್ಲಿದ್ದರೆ ಅನುಕೂಲವೆಂಬ ತೀರ್ಮಾನವಾಗಿ ಅಪ್ಪನ ಸಹಿ ಬಿದ್ದ ನಂತರ ಪುನ: ಅರ್ಜಿಯು ಕರೆಂಟಾಫಿಸಿಗೆ ಬಂದು ದುಡ್ಡು ತುಂಬಿಸಿಕೊಂಡು ಸೆಕ್ಷನ್ನಾಫಿಸರಿನ ಮುಂದೆ ಮಂಡಿಯೂರಿತು.

ಅದರ ತಲೆಯ ಮೇಲೆ ಗೆಜ಼ೆಟಡ್ ಅಧಿಕಾರಿಯಾದ ಆತ ಹಸಿರಿಂಕಿನಲ್ಲಿ ದಸ್ಕತ್ತು ಹಾಕಿ ಪಕ್ಕದ ಗುಮಾಸ್ಥನಿಗೆ ರವಾನಿಸಿದ. ನಾನು ಅಳುಕುತ್ತಲೇ ಮತ್ತೊಮ್ಮೆ ಹೋಗಿ ಕರೆಂಟು ಕೊಡಲು ಇನ್ನೆಷ್ಟು ದಿನಗಳಾಗಬಹುದೆಂದು ಕೇಳಿಕೊಂಡೆ. ಆತ ಸರ್ರನೇ ರೇಗಿ “ ಈಗಷ್ಟೇ ಅರ್ಜಿ ಕೊಟ್ಟಿದ್ದಿಯಾ.. ಆಗ್ಲೇ ಕರೆಂಟು ಬೇಕೋ ನಿಂಗೆ. ಪೇಟೆಂದ ಒಂದು ಹತ್ತು ಕೆಜಿ ತಗೊಂಡು ಹೋಗು. ಇನ್ನೈದು ವರ್ಷ ಬಿಟ್ಟು ಬಾ” ಎನ್ನುತ್ತಾ ನನ್ನ ಅರ್ಜಿಯ ಮೇಲೆ ನನ್ನ ವೇಟಿಂಗ್ ಸಂಖ್ಯೆ ಹಾಕಿ ಕೊಟ್ಟ.

ಈ ಕರೆಂಟು ಆಸೆ ಯಾಕೆ ಹುಟ್ಟಿಕೊಂಡ್ತೋ ಗೊತ್ತಿಲ್ಲ. ನಾನು ಸಂಪೂರ್ಣ ಪರಧ್ಯಾನಿಯಾದೆ. ಕಾಲೇಜಿಗೆ ಸೈಕಲ್ಲಿನಲ್ಲಿ ಹೋಗುವಾಗ ದೇಹಳ್ಳಿ ರಸ್ತೆಯ ಬದಿಯಲ್ಲೇ ಹಾದು ಹೋಗುವ ಹೊಸ ಕರೆಂಟು ಕಂಬಗಳು ಆಸೆ ಉಕ್ಕಿಸುತ್ತಿದ್ದವು. ರಾತ್ರಿ ಕನಸಿನಲ್ಲಿ ನಮ್ಮನೆಗೂ ಕರೆಂಟು ಬಂದಾಂಗೆ, ಸ್ವಿಚ್ಚು ಹಾಕಿದ ಕೂಡಲೇ ಟಕ್ಕನೆ ಹೊಸ ಟ್ಯೂಬು ಲೈಟು ಹತ್ತಿದ ಹಾಗೇ ತರಾವರಿ ಕನಸು ಬೀಳತೊಡಗಿದವು. ಸೆಕ್ಷನ್ನಾಫೀಸರು ಏನೇ ಬಯ್ದರೂ ಸಹ ಈ ಕರೆಂಟಿನಾಸೆ ನನ್ನನ್ನು ಕರೆಂಟಾಫೀಸಿನ ಕಡೆ ಪದೇಪದೇ ಕರೆದುಕೊಂಡು ಹೋಗುತ್ತಿತ್ತು. ಹೀಗೆಯೇ ಪಾದಯಾತ್ರೆ ನಡೆದಾಗ ನನ ಕಾಟ ತಡೆಯದೇ ಆತ ಒಂದು ಎಸ್ಟಿಮೇಟ್ ತಯಾರಿಸಿಯೇ ಬಿಟ್ಟ.

ಅದರಲ್ಲಿ ನಮ್ಮ ಮನೆಯಿಂದ ನಾಲ್ಕು ಕಿಲೋಮಿಟರ್ ದೂರದಿಂದ ಇರುವ ಟ್ರಾನ್ಸ್‍ಫಾರ್ಮರಿನಿಂದ ವೈರುಗಳನ್ನು ಎಳೆದು ತರಬೇಕೆಂದೂ ಕಂಬ, ವೈರು, ತಂತಿ ಕೂಲಿ ಸೇರಿ ಅನೇಕ ಲಕ್ಷಗಳಾಗುತ್ತವೆಯೆಂದೂ, ಅಲ್ಲಿ ವರೆಗೆ ಲೈನು ಬರುವುದರಿಂದ ವೋಲ್ಟೇಜು ಕಡಿಮೆಯಾಗಿ ದೀಪ ಕುರುಡು ಕೆರೋಸಿನ್ನು ದೀಪದಂತೆ ಉರಿಯುವುದೆಂದೂ, ಇದಕ್ಕೆಲ್ಲಾ ಸುಮಾರು ೫ ಲಕ್ಷಗಳ ಖರ್ಚು ಬರುವುದೆಂದೂ, ಒಂದೇ ಮನೆಯಿರುವುದರಿಂದ ಇಷ್ಟೆಲ್ಲಾ ಖರ್ಚು ಮಾಡುವುದು ವ್ಯರ್ಥವೆಂಬ ರೀತಿಯಲ್ಲಿ ಹಸಿರು ಇಂಕಿನ ಶರಾ ಬರೆದು ಇಟ್ಟಿದ್ದ.

ಅಯ್ಯೋ ದೇವ್ರೆ? ಇದೇನಿದು? ಕರೆಂಟನ್ನು ಅಷ್ಟು ದೂರದಿಂದ ತರಬೇಕೇ? ತಂದರೂ ಸಹ ನಮ್ಮನೆಲಿ ಬೆಳಕು ಡಿಮ್ಮೇ? ಪಂಪಿನ ಮೋಟರ್ರು ತಿರುಗಲ್ವೇ? ನಮ್ಮನೆಗೆ ಕರೆಂಟು ಬರಲು ಇಷ್ಟೆಲ್ಲಾ ಕಸರತ್ತು ಇದೆಯೇ? ಎಂಬೆಲ್ಲಾ ಯಕ್ಷಪ್ರಶ್ನೆಗಳು ಕಾಡತೊಡಗಿದವು. ನಮ್ಮನೆಯ ಹತ್ತಿರದಲ್ಲೇ ದೊಡ್ಡ ದೊಡ್ಡ ಕಂಬಗಳ ಮೇಲೆ ಹಾದು ಹೋದ ತಂತಿಯ ಮೂಲಕ ಹಾದುಹೋಗುವ ತಂತಿಗಳಿಂದ ನಮ್ಮನೆಗೆ ಕರೆಂಟು ಯಾಕೆ ಕೊಡಬಾರದು ಎಂಬುದು ನನಗೆ ಚಿದಂಬರ ರಹಸ್ಯವಾಗಿತ್ತು.
ಇದಕ್ಕೆ ಸೆಕ್ಷನ್ನಾಫೀಸರ್ರು ಚೆನ್ನಾಗಿ ಉತ್ತರ ನೀಡಿದ್ದ.

ನಮ್ಮನೆ ಪಕ್ಕದಲ್ಲಿ ಹಾದು ಹೋಗುವುದು 11 ಕೆವಿಯ ಭಯಂಕರ ವೋಲ್ಟೆಜು ಇರುವ ಲೈನಾಗಿದ್ದು ಅದರಿಂದೆಲ್ಲಾ ಕರೆಂಟು ತಗಳ್ಳಕ್ಕೆ ಆಗಲ್ವಂತೆ.ಅದು ಜೋಗದಿಂದ ಸೀದಾ ಬಂದ ಲೈನಾಗಿದ್ದರಿಂದ ಅದು ಬೆಂಗಳೂರಿಗೇ ಸೇರಿಯೇ ನಿಲ್ಲುವುದಂತೆ. ಅದಕ್ಕೆ ಅಲ್ಲಿ ದೊಡ್ಡ ದೊಡ್ಡ ಟ್ರಾನ್ಸ್‍ ಫಾರ್ರ್ಮರುಗಳನ್ನು ಹಾಕಿ ಕರೆಂಟನ್ನು ಕಡಿಮೆ ಗೊಳಿಸಿ ಹಂಚುತ್ತಾರಂತೆ ಎಂದೆಲ್ಲಾ ತಲೆ ಬುಡ ಗೊತ್ತಾಗದ ತಾಂತ್ರಿಕ ವಿಷಯದಿಂದ ಆ ಲೈನಿನಿಂದ ನಮಗೆ ಕರೆಂಟು ಬರಲ್ಲ. ಅದಕ್ಕೆ ಪ್ರತ್ಯೇಕ ಟ್ರಾನ್ಸಫಾರ್ಮರು ಹಾಕಿ ತರಬೇಕು ಎನ್ನುವ ಮಹತ್ವದ ವಿಷಯದ ಅರಿವಾಯ್ತು. ಇಲ್ಲಿಂದ ಶುರುವಾಗಿದ್ದು ಮಹಾ ಭಗೀರಥ ಪ್ರಯತ್ನ..

ಮುಂದುವರೆಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending