ಲೈಫ್ ಸ್ಟೈಲ್
ನಮ್ಮನೆಗೂ ಕರೆಂಟ್ ಬಂತು..!
- ಡಾ.ಎನ್.ಬಿ.ಶ್ರೀಧರ
ಭಾಗ -01
“ಅಯ್ಯಯ್ಯೋ.ಕರೆಂಟಾ…ನಮ್ ಮನೇಗಂತೂ ಬ್ಯಾಡವೇ ಬ್ಯಾಡ… ಸ್ವಿಚ್ ಆಫ಼್ ಮಾಡದೇ ಮುಟ್ಟಿದ್ದ್ರೆ …ಸರ್ …ಅಂತ ಮೈಯಲ್ಲಿನ ರಕ್ತ ಎಲ್ಲಾ ಎಳ್ಕಳತ್ತೆ..ಮೈಯಲ್ಲಿನ ನರಗಳಲ್ಲಿ ಹರಿದು ಶಕ್ತಿಯನ್ನೆಲ್ಲಾ ಹಿಂಡಿ ಹಿಪ್ಪೆ ಮಾಡುತ್ತೆ.. ಪಂಪಿನಿಂದ ಎತ್ತಿದ ನೀರಲ್ಲಿ ಸತ್ವಾನೇ ಇರಲ್ಲ.. ಬರಿ ಸಪ್ಪೆ…. ಅದರ ಸಹವಾಸ ಸಾಕು”… ಇದು ವಿದ್ಯುಚ್ಚಕ್ತಿ (ಇನ್ಮುಂದೆ ಕರೆಂಟು) ಬಗ್ಗೆ 1985 ರ ಕಾಲದಲ್ಲಿನ ಹಿರಿಯರೊಬ್ಬರ ಅಂಬೋಣ.
ಉತ್ತರ ಕನ್ನಡದ ಅನೇಕ ಹಳ್ಳಿಗಳಂತೇ ನಮ್ಮೂರಿಗೂ ಸಹ 1985 ರವರೆಗೂ ಸಹ ಕರೆಂಟೇ ಇರಲಿಲ್ಲ. ನಾವೆಲ್ಲಾ ಗದ್ದೆಗಳಲ್ಲಿ ಕಾಡು ಹಂದಿಗಳು ಬಂದು ಬೆಳೆ ಹಾಳು ಮಾಡದಂತೆ ಕಾಯಲು ಗದ್ದೆ ತೋಟಗಳ ಮಧ್ಯೆ ಮಾಳಗಳಲ್ಲಿ ಲಾಟೀನು ದೀಪದಲ್ಲಿ ಓದಿದ್ದೇ ಜಾಸ್ತಿ. ಈ ಮಾಳ ಎಂದರೇನು ಎಂಬುದು ಮಲೆನಾಡಿಗರನ್ನು ಬಿಟ್ಟು ಬೇರೆ ಕೆಲವರಿಗೆ ಅರ್ಥವಾಗಲಿಕ್ಕಿಲ್ಲ.
ಗದ್ದೆಯನ್ನು ಕಾಡು ಹಂದಿಗಳಿಂದ ಕಾಯಲು ಅವುಗಳಿಗೆ ಮನುಷ್ಯರ ಭಯ ಇರಲಿ ಎಂದು ರಚಿಸಿದ ಸುಮಾರು 10 ಅಡಿ ಎತ್ತರದಲ್ಲಿ, ಹಾವು, ಕಪ್ಪೆ, ಇಲಿಗಳ ಕಾಟದಿಂದ ರಕ್ಷಣೆ ಪಡೆಯಲು ಮರದ ಕಂಬಗಳನ್ನು ಉಪಯೋಗಿಸಿ, ಅಡಿಕೆ ಸೋಗೆಗಳನ್ನು ಹಾಕಿ ಮಳೆಗೆ ಸೋರದಂತೆ ಕಟ್ಟಿದ ಆಕಾಶ ಚಪ್ಪರ ಎನ್ನಬಹುದೇನೋ.
ರಾತ್ರಿ ಊಟವಾದ ಮೇಲೆ ಸುರಿಯುತ್ತಿರುವ ಮಳೆಯಲ್ಲಿ ಗದ್ದೆ ಬದುಗಳಲ್ಲಿ ನಡೆದು ಹೋಗಿ ಲಾಟೀನುಗಳ ಸಹಾಯದಿಂದ ತಡರಾತ್ರಿಯವರೆಗೆ ಓದುವುದು ನನಗೆ ರೂಢಿಯಾಗಿತ್ತು. ಕೆಲವೊಮ್ಮೆ ಈ ಮಾಳದ ಮಾಡಿನಲ್ಲಿ ನಮ್ಮ ಹಾಗೇ ಬೆಚ್ಚನೆ ವಾಸಸ್ಥಳಕ್ಕಾಗಿ ಅಥವಾ ಅವುಗಳ ಅಹಾರವಾದ ಇಲಿ ಬೇಟೆಗಾಗಿ ಬಂದು ಕೆಲವು ನಾಗಸ್ನೇಹಿತರು ತಲೆ ಹೊರಹಾಕಿ, ಸೀಳಿದ ನಾಲಿಗೆಯನ್ನು ಲೊಚ ಲೊಚನೇ ಚಮಕಿಸಿ ನಮ್ಮ ಜೀವ ಬಾಯಿಗೆ ಬರುವ ಹಾಗೇ ಮಾಡಿದ್ದಿದೆ.
ಲಾಟೀನಿನ ಬೆಳಕಿಗೆ ಆಕರ್ಷಿತವಾದ ವಿವಿಧ ಬಣ್ಣದ ಮಿಡತೆಗಳನ್ನೋ ಅಥವಾ ಕಾಡು ಹುಳಗಳನ್ನೋ ತಿನ್ನಲೆಂದೋ ಬಂದ ಅಸಹ್ಯ ರೂಪದ ಹಲ್ಲಿಗಳು ಪಿಷ್ಟಿ ಹಾಕಿ ಹಾಸಿಕೆಯನ್ನೆಲ್ಲಾ ಅಸಹ್ಯ ಮಾಡುತ್ತಿದ್ದವು. ಒಮ್ಮೊಮ್ಮೆ ತಲೆಯ ಮೇಲೆಯೇ ಬಿದ್ದು ಬಗ್ಗೋಣ ಪಂಚಾಂಗದ ಹಲ್ಲಿ ಶಕುನದ “ತಲೆಯ ಮೇಲೆ ಬಿದ್ದರೆ ಮರಣ” ಬೆನ್ನಿನ ಮೇಲೆ ಬಿದ್ದರೆ ಅಪಘಾತ” ಎಂಬಿತ್ಯಾದಿಗಳನ್ನು ಅಪರಾತ್ರಿಯಲ್ಲಿ ನೆನಪಿಸಿದ್ದಿದೆ.
ಹಾಳಾಗಿ ಹೋಗಲಿ.. ಅವುಗಳು ಪುತ ಪುತನೇ ಉದುರಿಸುವ ಬುಳಿ ಕಂದು ಮಿಶ್ರಿತ ಇಕ್ಕೆಗಳು ಪುಸ್ತಕದ ಮೇಲೆ ಬಿದ್ದು ಪುಸ್ತಕದ ಅಂದ ಕೆಡಿಸುವುದಲ್ಲದೇ, ಅವುಗಳ ಗಬ್ಬು ಅಸಹ್ಯ ವಾಸನೆಯಿಂದ ವ್ಯಾಕ್.. ಎನಿಸುತ್ತಿದ್ದವು.
ಕುಂಬ್ಳಜ್ಜಿ ಎಂದು ಹಳ್ಳಿ ಭಾಷೆಯಲ್ಲಿ ಕರೆಯುವ ವಾಸನಾಯುಕ್ತ ಜೀರುಂಡೆ ಲಾಟಿನಿನ್ ಬೆಳಕಿಗೆ ಆಕರ್ಷಿತವಾಗಿ ಮೈತಾಕಿದಾಗ ದಿನವಾದರೂ ಉಳಿಯುವ ಅದರ ಅಸಹ್ಯ ಗಬ್ಬು ವಾಸನೆ, ಸಂಜೆಯಾದೊಣೆ ರೆಂವ್, ರೆಂವ್ ಅಂತ ಶಬ್ಧ ಮಾಡಿ ತಲೆ ಚಿಟ್ಟು ಹಿಡಿಸುವ ಹುಳ ಹುಪ್ಪಟೆಗಳು, ಇವುಗಳನ್ನು ತಿಂದು ಹೊಟ್ಟೆ ಡುಮ್ಮಣ್ಣನಾಗಲು ಬರುವ ಕಪ್ಪೆಗಳು, ಈ ಕಪ್ಪೆಗಳನ್ನು ಬೆನ್ನಟ್ಟಿ ಬರುವ ನಾನಾ ತರದ ಹಾವುಗಳು, ಈ ಹಾವುಗಳನ್ನು ಹೇಗಾದರೂ ಹೊಂಚುಹಾಕಿ ಹಿಡಿದು ಮುಕ್ಕಲು ಕಾದು ಕುಳಿತ ಗಿಡುಗಗಳು ಪರಿಸರದ ಆಹಾರ ಸರಪಳಿಗೆ ಅತ್ಯುತ್ತಮ ಜೀವಂತ ನೈಜ ಉದಾಹರಣೆಗಳಾಗಿದ್ದವು.
ಈ ಮಾಳವಿದ್ದ ಮೇಲೆ ಅದಕ್ಕೊಂದು ಜೋಡಿ ಜೀವವಾಗಿ ಒಂದು ಹೊಡಸಲು ಇರಲೇ ಬೇಕು. ಹೊಡಸಲು ಅಂದರೆ ಮಳೆಗಾಲದಲ್ಲಿ ಕಂಬಳಿಗಳನ್ನು ಒಣಹಾಕಲು ಬಳಸುವ ನೇತಾಡುವ ಮಂಚದಂತಿರುವ ಆಕೃತಿ. ಮಳೆಯ ರಭಸಕ್ಕೆ ಎಲ್ಲರೂ ಈ ಹೊಡಸಲಿನ ಸುತ್ತಮುತ್ತ ಗಟ್ಟಿಯಾಗಿ ತಳವೂರಿ ಹಲಸಿನ ಬೀಜ, ಗೇರು ಬೀಜಗಳನ್ನು ಅಡಿಯ ಬೆಂಕಿಯ ಕೆಂಡದಲ್ಲಿ ಬೇಯಿಸಿ ತಿನ್ನುತ್ತಾ ಡರ್ರ್ ಎಂದು ತೇಗಿ ಹಳೆಯ ರೈಲು ಇಂಜಿನ್ನಿನಂತೆ “ಟುಸ್.. ಟುಸ್ ಡ್ರುಸ್.. ಎಂದು ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಯಥಾನುಶಕ್ತಿ ವಾಯುಪ್ರಕೋಪಗಳನ್ನು ನೀಗಿಸಿಕೊಳ್ಳುವುದು ಮಲೆನಾಡಿಗರಿಗೆ ಸಾಮಾನ್ಯ.
ಹಲಸಿನ ಬೀಜಗಳು ಒಮ್ಮೊಮ್ಮೆ ಸ್ವಲ್ಪ ಹಸಿಯಾಗಿದ್ದರೆ “ಡಂ” ಎಂದು ಸಶಬ್ಧವಾಗಿ ಸಿಡಿದು ಕೆಂಡದುಂಡೆಗಳನ್ನು ಬೂಧಿಯ ಸಮೇತ ಅಕ್ಕ ಪಕ್ಕಕ್ಕೆ ಚಲ್ಲುತ್ತಿದ್ದವು. ಅದಕ್ಕೆ ಹಲಸಿನ ಬೀಜಗಳಿಗೆ ಕಬ್ಬಿಣದ ತಂತಿಯಿಂದ ತೂತು ಮಾಡಿ ಒಳಗೆ ಗ್ಯಾಸು ಸೇರದಂತೆ ಮಾಡಿ ನಿಗಿ ನಿಗಿ ಕೆಂಡದಲ್ಲಿ ಬೇಯಿಸುತ್ತಿದ್ದರು.
ಹಲಸಿನ ಕಾಯಿಯ ಹಪ್ಪಳವನ್ನು ಈ ಕೆಂಡದ ಮೇಲೆ ಇಟ್ಟು ಅದು ಹಿತ ಮಿತವಾಗಿ ಅರಳಿದೊಡನೆ ಅದಕ್ಕೊಂದಿಷ್ಟು ಕೊಬ್ಬರಿ ಎಣ್ಣೆ ಸವರಿ ಕರಂ.. ಕುರುಂ ಎನ್ನುತ್ತಾ ತಿಂದು ಒಂದು ಕುಡತೆ ಸಕ್ಕರೆ ಹಾಕದ ಚಪ್ಪೆ ಚಾ ಕುಡಿದರೆ ಅದೆಂತದೋ ತೃಪ್ತಿ. ಇನ್ನು ಗೇರುಬೀಜಗಳನ್ನು ಈ ಹೊಡಸಲಿನ ಬೆಂಕಿಯಲ್ಲಿ ಹಾಕಿ ಅದು ಬಿಡುವ ಎಣ್ಣೆಯಿಂದ ಅಗ್ನಿಯ ಕೆನ್ನಾಲಿಗೆ ಆಕಡೆ ಈ ಕಡೆ ಟಾಸ್ ಪುಸ್ ಎನ್ನುತ್ತಾ ಚಾಚುತ್ತಿದ್ದರೆ ಅದನ್ನು ಜಡಿಮಳೆಯಲ್ಲಿ ನೋಡುವುದೇ ಚಂದ.
ಆ ಕಾಲಕ್ಕೆ ಆಗಷ್ಟೇ ಪ್ರಾರಂಭವಾಗಿದ್ದ ರಮಾನಂದ ಸಾಗರರ ರಾಮಾಯಣ ಧಾರಾವಾಹಿಯನ್ನು ವಿದ್ಯುತ್ ಇರುವ ನೆಂಟರ ಮನೆಗೆ ಹೋಗಿ ಅಲ್ಲಿರುವ ಟಿವಿಯಲ್ಲಿ ಮಸುಕು ಮಸುಕಾಗಿ ಬರುತ್ತಿರುವ ರಾಮಾಯಣದ ಪಾತ್ರಗಳನ್ನು ನೋಡುವುದಕ್ಕೆ ಏನೆಲ್ಲಾ ನೆಪಗಳು !!.ಕರೆಂಟನ್ನು ನಮ್ಮ ಮನೆಗೂ ಹಾಕಿಸಬೇಕೆಂಬ ಉತ್ಕಟ ಆಸೆಗೆ ಇದೂ ಒಂದು ಕಾರಣವಿರಬಹುದು.
ನಮ್ಮೂರಿಗಿಂತ ದೂರದ ಅನೇಕ ಹಳ್ಳಿಗೆಲ್ಲಾ ಕರೆಂಟು ಹರಿದಾಗ ನಮ್ಮೂರಿಗೂ ಯಾಕೆ ಕರೆಂಟು ಬರಬಾರದು ಅನಿಸಿತು. ಸಾತೊಡ್ಡಿ, ದೇಹಳ್ಳಿ, ಬಳಗಾರು, ಬೀರಗದ್ದೆಗಳೆಂಬ ಊರುಗಳಿಗೆ ದಿನಕ್ಕೆ ಒಮ್ಮೆ ಮಾತ್ರ ಒಂದು ಬಸ್ಸು ಇದ್ದು ಅಲ್ಲಿಯ ಜನರೆಲ್ಲಾ ಬೇಸಿಗೆಯಲ್ಲೇ ಮಳೆಗಾಲಕ್ಕೆ ಅವಶ್ಯವಿರುವ ಎಲ್ಲಾ ವಸ್ತುಗಳನ್ನು ತಲೆಹೊರೆಯ ಮೇಲೆಯೇ ಸಾಗಿಸಬೇಕಿತ್ತು.
ಈ ಎಲ್ಲಾ ಹಳ್ಳಿಗಳಿಗೆ ಯಾವುದೋ ಸ್ಕೀಮಿನಲ್ಲಿ ವಿದ್ಯುತ್ ನೀಡಿ ಬಿಟ್ಟಿದ್ದರು. ವಿದ್ಯುತ್ ವೈರುಗಳು ಕರೆಂಟು ಕಂಬಗಳ ತಲೆಯ ಮೇಲೆ ನೇತಾಡುತ್ತಾ ಆ ಹಳ್ಳಿಗಳನ್ನು ಸೇರಿ ಅಲ್ಲಿ ಸ್ವಿಚ್ಚು ಹಾಕಿದ ಕೂಡಲೇ ಟಕ್ಕನೇ ಹತ್ತಿಕೊಂಡು ಮಹದಾಶ್ಚರ್ಯ ಮೂಡುತ್ತಿತ್ತು.
ನೂರಾರು ಅಡಿ ಆಳದ ಬಾವಿಯಿಂದ ಗುರ್ರೆಂದು ಶಬ್ಧ ಮಾಡುತ್ತಾ ನೀರೆತ್ತುವ ಪಂಪುಸೆಟ್ಟುಗಳು, ಕೇಜಿಗಟ್ಟಲೆ ಅಕ್ಕಿಯನ್ನು ಅನಾಯಾಸವಾಗಿ ಗರ ಗರನೇ ರುಬ್ಬಿ ಬಿಸಾಕುವ ಗ್ರೈಂಡರುಗಳು, ಐದಾರು ಗೆರಟೆ ತುಂಬಾ ಇರುವ ತೆಂಗಿನ ಕಾಯಿಯ ತಿರುಳನ್ನು ಕ್ಷಣ ಮಾತ್ರದಲ್ಲಿ ರೊಂಯ್ ಎಂದು ಚಟ್ನಿ ಮಾಡಿ ಹಾಕುವ ಮಿಕ್ಸಿಗಳು, ಗುಡಾಣ ಹೊಟ್ಟೆಯ ಸದಾ “ಗುಂಯ್” ಎನ್ನುತ್ತಿರುವ ಟ್ರಾನ್ಸ್ಫಾರ್ಮರುಗಳು ಪ್ರಶ್ನಾರ್ಥಕವಾಗಿ ಸೋಜಿಗದ ವಸ್ತುಗಳಾಗಿ ಆಶ್ಚರ್ಯ ಹುಟ್ಟಿಸುತ್ತಿದ್ದವು.
ಆದರೆ ಈ ವಿದ್ಯುತ್ತಿನ ಆಯಸ್ಸು ಮಳೆಗಾಲ ಬರುವ ವರೆಗೆ ಮಾತ್ರ ಎನ್ನುವುದನ್ನು ಅಲ್ಲಿನ ಜನ ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ಬಿಟ್ಟಿದ್ದರು. ಧೋ.. ಧೋ.. ಎಂದು ಎಡೆಬಿಡದೇ ಸುರಿಯುವ ಮಳೆಗಾಲದಲ್ಲಿ ಮರಗಳೆಲ್ಲಾ ಕರೆಂಟು ಕಂಬಗಳ ತಂತಿಗಳ ಮೇಲಾ ಲಗಾಟಿ ಹೊಡೆದು ಒಮ್ಮೆಯೇ ಹತ್ತು ಹದಿನೈದು ಕಂಬಗಳು ಧರಾಶಾಯಿಯಾದವು ಎಂದರೆ ಆ ವರ್ಷ ಮಳೆಗಾಲದಲ್ಲಿ ಪುನ: ಚಿಮಣಿ ಬುರುಡೆ ಲಾಟೀನುಗಳೇ ಗತಿ.
ಪಿಯುಸಿ ಸಮಯದಲ್ಲಿ ಕೊಟ್ಟಿಗೆಯ ಕೆಲಸ ಮುಗಿಸಿಯೇ ಕಾಲೇಜಿಗೆ ಹೋಗುವ ವೇಳೆಗೆ ಕೆಲ ಸಮಯ ತಡವಾಗುತ್ತಿತ್ತು. ಈಗಿನಂತೆ ಕೊಟ್ಟಿಗೆಗೆ ಚಪ್ಪಡಿ ಏನೂ ಇರಲಿಲ್ಲ. ದೊಡ್ಡ ಹೊಂಡ ಗುಂಡಿಗಳ ಮೇಲೆ ಮರಗಿಡಗಳಿಂದ ಸೊಪ್ಪಿನ ಬೆಟ್ಟದಿಂದ ತಂದ ಸೊಪ್ಪುಗಳನ್ನು ಹಾಸಿ ಜಾನುವಾರು ಮಲಗಲು ಅನುವು ಮಾಡಲಾಗುತ್ತಿತ್ತು. ಅವುಗಳ ಸಗಣಿ, ಮೂತ್ರ ಈ ಹೊಂಡಗಳಲ್ಲಿ ಸಂಗ್ರಹವಾಗುತ್ತಿತ್ತು.
ಈ ಹೊಂಡಗಳಲ್ಲಿರುವ ಕೊಳೆದ ಸೊಪ್ಪು ಸದೆ ಸೇರಿ ವಿಚಿತ್ರ “ಪರಿಮಳ” ಹೊರಹೊಮ್ಮುತ್ತಿತ್ತು. ಇದನ್ನು ಸ್ವಚ್ಚ ಮಾಡಿ, ಸ್ನಾನ ಮುಗಿಸಿ, ಪಿಟಿ ಕ್ಲಾಸಿಗೆ ಹೋಗಬೇಕಾದರೆ ಏನಾದರೂ ತಡವಾದರೆ ಪಿಟಿ ಮಾಸ್ತರ್ ಶೀಟಿ ಬೆಲ್ಟ್ ಏಟು ಖಚಿತ. ಎಮ್ಮೆಗಳು ಅವುಗಳ ಮೂತ್ರದಲ್ಲಿ ಬಾಲ ಅದ್ದಿ ರಫ಼್ ಅಂತ ಬೀಸಿದರೆ ಮೈಯೆಲ್ಲಾ ಒಂದು ರೀತಿಯ ಗಮಲು ವಾಸನೆಯಿಂದ ಅಸಹ್ಯವಾಗುತ್ತಿತ್ತು. ಆಗ ಮೇಷ್ಟ್ರು “ಏ ದನಾ ಕಾಯವ್ನೇ.. ಈವತ್ತೂ ಲೇಟೇನೋ?!! ಅಂತ ತರಾಟೆಗೆ ತೆಗೆದು ಕೊಳ್ಳೋದು ಗ್ಯಾರಂಟಿ ಅಂತ ಭಯ. ಈ ಪಿಟಿ ಮೇಷ್ಟ ’ಹೊಡೆತ” ತಾಳಲಾರದೇ ಕೆಲವು ಹುಡುಗರು ಶಾಲೆಯನ್ನೇ ಬಿಟ್ಟಿದ್ದಾರೆ ಎನ್ನುವುದೂ ಒಂದು ಸುದ್ಧಿ.
ಎಲ್ಲರ ಮನೆಯಲ್ಲಿರುವ ಕರೆಂಟೆಂಬ ಮಾಯೆ ನಮ್ಮಲ್ಲಿರಬೇಕಾಗಿತ್ತು ಎಂಬ ಹಪ ಹಪಿ ಪ್ರಾರಂಭವಾದೊಡನೆ ಸಿಕ್ಕ ಸಿಕ್ಕ ಕರೆಂಟು ಕಂಬಗಳೆಲ್ಲಾ ರವಿವರ್ಮನ ಕುಂಚದ ಕಲೆಯ ಅದ್ಭುತ ಕಲಾಕೃತಿಗಳ ಗೋಚರಿಸತೊಡಗಿದವು. ಅದಕ್ಕೆ ನೇತಾಕಿದ ಆಗಾಗ ಅಕ್ಕ ಪಕ್ಕದ ಮರಗಳಿಗೆ ತಾಗಿ ಜೊರ್ ಎಂದು ಶಬ್ಧ ಮಾಡುವ ಅಲ್ಯುಮಿನಿಯಂ ವೈರುಗಳು ಹರಿಪ್ರಿಯಾಳ ಮುಂಗುರಳಂತೆ ಮೋಹಕವಾಗಿ ಮನಸೂರೆ ಮಾಡುತ್ತಿದ್ದವು.
ಬೇಕಾದೊಡನೆ ಬಂದು ಬಿಡಲು ಕರೆಂಟು ಅಷ್ಟು ಸುಲಭಕ್ಕೆ ಸಿಗುವ ವಸ್ತುವೇ? ಸೀದಾ ಕರೆಂಟಾಫೀಸಿಗೆ ನಡೆಯಿತು ನನ್ನ ಆಕೃತಿ. ಅಲ್ಲೊಬ್ಬ ದಢೂತಿ ಕೆಂಪನೇ ಮನುಷ್ಯ ಕೆಂಪು ಮಾನವರ ತರ ಆಗ ತಾನೆ ಸಮುದ್ರ ಸ್ನಾನ ಮಾಡಿ ಬಂದ ವ್ಯಕ್ತಿ ಕೂತಿದ್ದ. ನಮಗೂ ಕರೆಂಟು ಬೇಕೆಂಬ ನನ್ನ ಅದ್ಭುತ ಅಹವಾಲನ್ನು ಹೇಳಿಕೊಂಡೆ.
ಕಿವಿಯಲ್ಲಿ ಕಡ್ಡಿಯೊಂದಕ್ಕೆ ಸ್ವಲ್ಪ ಹತ್ತಿಯನ್ನು ಹಾಕಿ ಮೀಟಿ ಮೀಟಿ ಅದೇನೋ ವಸ್ತುವನ್ನು ತೆಗೆದು ಮೂಸಿ ಮೂಸಿ ಬಿಸಾಕುತ್ತಿದ್ದ ಆ ವ್ಯಕ್ತಿಯ ಮುಂದಿನ ಬೋರ್ಡು ನೋಡಿದೆ. ಅದರಲ್ಲಿ ಅದೆಂತದೋ ಹೆಸರು ಬರೆದು ಸೆಕ್ಷನ್ ಆಫೀಸರ್ ಎಂದು ಪೇಂಟಿನಲ್ಲಿ ಬರೆದಿತ್ತು. ಅತ್ಯಂತ ಅಸಡ್ಡೆಯಿಂದ ಆ ವ್ಯಕ್ತಿ “ನಿಮ್ಮೂರಿಗೆ ಕರೆಂಟಾ? ಇನ್ನೈದು ವರ್ಷ ಬಿಟ್ಕಂಡ್ ಬನ್ನಿ. ನಿಮ್ಮ ಕ್ಯೂ ಬರಕ್ಕೆ ಇನ್ನೂ ಅಷ್ಟು ವರ್ಷ ಆಗ್ತದೆ” ಎಂದು ಈಗೆಲ್ಲಾ ಆನ್ಲೈನ್ ಬಹಳ ಕಷ್ಟ ಎಂದೊರಲುವ ಕಛೇರಿ ಗುಮಾಸ್ತರ ತರ ಉಡಾಪೆಯಿಂದ ಉತ್ತರಿಸಿದ.
ಛಲಬಿಡದ ತ್ರಿವಿಕ್ರಮನಂತೆ ದಿನಾ ಕಾಲೇಜಿಗೆ ಹೋಗಿ ವಾಪಸ್ಸು ಬರುತ್ತಾ ಕರೆಂಟು ಕಛೇರಿಗೆ ಪೆನ್ಶನ್ನು ಬರದ ತಬರನಂತೆ ಎಡತಾಕತೊಡಗಿದೆ. ಕೊನೆಗೂ ನನ್ನ ಕಾಟ ತಡೆಯಲಾರದೇ ಆ ಸೆಕ್ಷನ್ನು ಆಫೀಸರ್ರು ಹತ್ತು ಹಲವು ಪುಟಗಳ ಒಂದು ಅರ್ಜಿ ಫಾರಮ್ಮನ್ನು ಹಲವು ಕಡೆ ಇಂಟು ಮಾರ್ಕು ಹಾಕಿ ನಮ್ಮಪ್ಪನ ಹತ್ತಿರ ಸಹಿ ಮಾಡುವಂತೆಯೂ ಹಾಗೂ ಒಂದಿಷ್ಟು ದುಡ್ಡನ್ನು ಕರೆಂಟು ಇಲಾಖೆಗೆ ಕಟ್ಟುವಂತೆ ಆಜ್ಞೆ ಹೊರಡಿಸಿದ.
ನಾನು ಅರ್ಜಿಯನ್ನು ಶಬರಿಯು ರಾಮನು ಕಚ್ಚಿ ಬಿಸಾಕಿದ ಹಣ್ಣನ್ನು ಜತನದಿಂದ ಎತ್ತಿಕೊಂಡಂತೆ ಎತ್ತಿಕೊಂಡು ಬಂದು ಮನೆಗೆ ತಂದೆ. ಘನಘೋರ ಚರ್ಚೆಯ ನಂತರ ಕರೆಂಟಿನ ಸಾಧಕ ಬಾಧಕಗಳನ್ನು ವಿಚಾರಿಸಿದ ನಂತರ ಕರೆಂಟೊಂದು ಅತ್ಯವಶ್ಯಕ ವಸ್ತುವೆಂದು ಅದು ಮನೆಯಲ್ಲಿದ್ದರೆ ಅನುಕೂಲವೆಂಬ ತೀರ್ಮಾನವಾಗಿ ಅಪ್ಪನ ಸಹಿ ಬಿದ್ದ ನಂತರ ಪುನ: ಅರ್ಜಿಯು ಕರೆಂಟಾಫಿಸಿಗೆ ಬಂದು ದುಡ್ಡು ತುಂಬಿಸಿಕೊಂಡು ಸೆಕ್ಷನ್ನಾಫಿಸರಿನ ಮುಂದೆ ಮಂಡಿಯೂರಿತು.
ಅದರ ತಲೆಯ ಮೇಲೆ ಗೆಜ಼ೆಟಡ್ ಅಧಿಕಾರಿಯಾದ ಆತ ಹಸಿರಿಂಕಿನಲ್ಲಿ ದಸ್ಕತ್ತು ಹಾಕಿ ಪಕ್ಕದ ಗುಮಾಸ್ಥನಿಗೆ ರವಾನಿಸಿದ. ನಾನು ಅಳುಕುತ್ತಲೇ ಮತ್ತೊಮ್ಮೆ ಹೋಗಿ ಕರೆಂಟು ಕೊಡಲು ಇನ್ನೆಷ್ಟು ದಿನಗಳಾಗಬಹುದೆಂದು ಕೇಳಿಕೊಂಡೆ. ಆತ ಸರ್ರನೇ ರೇಗಿ “ ಈಗಷ್ಟೇ ಅರ್ಜಿ ಕೊಟ್ಟಿದ್ದಿಯಾ.. ಆಗ್ಲೇ ಕರೆಂಟು ಬೇಕೋ ನಿಂಗೆ. ಪೇಟೆಂದ ಒಂದು ಹತ್ತು ಕೆಜಿ ತಗೊಂಡು ಹೋಗು. ಇನ್ನೈದು ವರ್ಷ ಬಿಟ್ಟು ಬಾ” ಎನ್ನುತ್ತಾ ನನ್ನ ಅರ್ಜಿಯ ಮೇಲೆ ನನ್ನ ವೇಟಿಂಗ್ ಸಂಖ್ಯೆ ಹಾಕಿ ಕೊಟ್ಟ.
ಈ ಕರೆಂಟು ಆಸೆ ಯಾಕೆ ಹುಟ್ಟಿಕೊಂಡ್ತೋ ಗೊತ್ತಿಲ್ಲ. ನಾನು ಸಂಪೂರ್ಣ ಪರಧ್ಯಾನಿಯಾದೆ. ಕಾಲೇಜಿಗೆ ಸೈಕಲ್ಲಿನಲ್ಲಿ ಹೋಗುವಾಗ ದೇಹಳ್ಳಿ ರಸ್ತೆಯ ಬದಿಯಲ್ಲೇ ಹಾದು ಹೋಗುವ ಹೊಸ ಕರೆಂಟು ಕಂಬಗಳು ಆಸೆ ಉಕ್ಕಿಸುತ್ತಿದ್ದವು. ರಾತ್ರಿ ಕನಸಿನಲ್ಲಿ ನಮ್ಮನೆಗೂ ಕರೆಂಟು ಬಂದಾಂಗೆ, ಸ್ವಿಚ್ಚು ಹಾಕಿದ ಕೂಡಲೇ ಟಕ್ಕನೆ ಹೊಸ ಟ್ಯೂಬು ಲೈಟು ಹತ್ತಿದ ಹಾಗೇ ತರಾವರಿ ಕನಸು ಬೀಳತೊಡಗಿದವು. ಸೆಕ್ಷನ್ನಾಫೀಸರು ಏನೇ ಬಯ್ದರೂ ಸಹ ಈ ಕರೆಂಟಿನಾಸೆ ನನ್ನನ್ನು ಕರೆಂಟಾಫೀಸಿನ ಕಡೆ ಪದೇಪದೇ ಕರೆದುಕೊಂಡು ಹೋಗುತ್ತಿತ್ತು. ಹೀಗೆಯೇ ಪಾದಯಾತ್ರೆ ನಡೆದಾಗ ನನ ಕಾಟ ತಡೆಯದೇ ಆತ ಒಂದು ಎಸ್ಟಿಮೇಟ್ ತಯಾರಿಸಿಯೇ ಬಿಟ್ಟ.
ಅದರಲ್ಲಿ ನಮ್ಮ ಮನೆಯಿಂದ ನಾಲ್ಕು ಕಿಲೋಮಿಟರ್ ದೂರದಿಂದ ಇರುವ ಟ್ರಾನ್ಸ್ಫಾರ್ಮರಿನಿಂದ ವೈರುಗಳನ್ನು ಎಳೆದು ತರಬೇಕೆಂದೂ ಕಂಬ, ವೈರು, ತಂತಿ ಕೂಲಿ ಸೇರಿ ಅನೇಕ ಲಕ್ಷಗಳಾಗುತ್ತವೆಯೆಂದೂ, ಅಲ್ಲಿ ವರೆಗೆ ಲೈನು ಬರುವುದರಿಂದ ವೋಲ್ಟೇಜು ಕಡಿಮೆಯಾಗಿ ದೀಪ ಕುರುಡು ಕೆರೋಸಿನ್ನು ದೀಪದಂತೆ ಉರಿಯುವುದೆಂದೂ, ಇದಕ್ಕೆಲ್ಲಾ ಸುಮಾರು ೫ ಲಕ್ಷಗಳ ಖರ್ಚು ಬರುವುದೆಂದೂ, ಒಂದೇ ಮನೆಯಿರುವುದರಿಂದ ಇಷ್ಟೆಲ್ಲಾ ಖರ್ಚು ಮಾಡುವುದು ವ್ಯರ್ಥವೆಂಬ ರೀತಿಯಲ್ಲಿ ಹಸಿರು ಇಂಕಿನ ಶರಾ ಬರೆದು ಇಟ್ಟಿದ್ದ.
ಅಯ್ಯೋ ದೇವ್ರೆ? ಇದೇನಿದು? ಕರೆಂಟನ್ನು ಅಷ್ಟು ದೂರದಿಂದ ತರಬೇಕೇ? ತಂದರೂ ಸಹ ನಮ್ಮನೆಲಿ ಬೆಳಕು ಡಿಮ್ಮೇ? ಪಂಪಿನ ಮೋಟರ್ರು ತಿರುಗಲ್ವೇ? ನಮ್ಮನೆಗೆ ಕರೆಂಟು ಬರಲು ಇಷ್ಟೆಲ್ಲಾ ಕಸರತ್ತು ಇದೆಯೇ? ಎಂಬೆಲ್ಲಾ ಯಕ್ಷಪ್ರಶ್ನೆಗಳು ಕಾಡತೊಡಗಿದವು. ನಮ್ಮನೆಯ ಹತ್ತಿರದಲ್ಲೇ ದೊಡ್ಡ ದೊಡ್ಡ ಕಂಬಗಳ ಮೇಲೆ ಹಾದು ಹೋದ ತಂತಿಯ ಮೂಲಕ ಹಾದುಹೋಗುವ ತಂತಿಗಳಿಂದ ನಮ್ಮನೆಗೆ ಕರೆಂಟು ಯಾಕೆ ಕೊಡಬಾರದು ಎಂಬುದು ನನಗೆ ಚಿದಂಬರ ರಹಸ್ಯವಾಗಿತ್ತು.
ಇದಕ್ಕೆ ಸೆಕ್ಷನ್ನಾಫೀಸರ್ರು ಚೆನ್ನಾಗಿ ಉತ್ತರ ನೀಡಿದ್ದ.
ನಮ್ಮನೆ ಪಕ್ಕದಲ್ಲಿ ಹಾದು ಹೋಗುವುದು 11 ಕೆವಿಯ ಭಯಂಕರ ವೋಲ್ಟೆಜು ಇರುವ ಲೈನಾಗಿದ್ದು ಅದರಿಂದೆಲ್ಲಾ ಕರೆಂಟು ತಗಳ್ಳಕ್ಕೆ ಆಗಲ್ವಂತೆ.ಅದು ಜೋಗದಿಂದ ಸೀದಾ ಬಂದ ಲೈನಾಗಿದ್ದರಿಂದ ಅದು ಬೆಂಗಳೂರಿಗೇ ಸೇರಿಯೇ ನಿಲ್ಲುವುದಂತೆ. ಅದಕ್ಕೆ ಅಲ್ಲಿ ದೊಡ್ಡ ದೊಡ್ಡ ಟ್ರಾನ್ಸ್ ಫಾರ್ರ್ಮರುಗಳನ್ನು ಹಾಕಿ ಕರೆಂಟನ್ನು ಕಡಿಮೆ ಗೊಳಿಸಿ ಹಂಚುತ್ತಾರಂತೆ ಎಂದೆಲ್ಲಾ ತಲೆ ಬುಡ ಗೊತ್ತಾಗದ ತಾಂತ್ರಿಕ ವಿಷಯದಿಂದ ಆ ಲೈನಿನಿಂದ ನಮಗೆ ಕರೆಂಟು ಬರಲ್ಲ. ಅದಕ್ಕೆ ಪ್ರತ್ಯೇಕ ಟ್ರಾನ್ಸಫಾರ್ಮರು ಹಾಕಿ ತರಬೇಕು ಎನ್ನುವ ಮಹತ್ವದ ವಿಷಯದ ಅರಿವಾಯ್ತು. ಇಲ್ಲಿಂದ ಶುರುವಾಗಿದ್ದು ಮಹಾ ಭಗೀರಥ ಪ್ರಯತ್ನ..
ಮುಂದುವರೆಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ3 hours agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ


