ದಿನದ ಸುದ್ದಿ
ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್ ದಾಖಲು ಕಡ್ಡಾಯ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ಗಳನ್ನಾಗಿ ಪರಿವರ್ತಿಸಬೇಕು.
ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು. ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ, ಊಟೋಪಹಾರ ಗುಣಮಟ್ಟದ್ದಾಗಿರಬೇಕು.
ಇದನ್ನೂ ಓದಿ | ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ.ಕೆ.ಸುಧಾಕರ್
ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿಗದಿತ ಬೆಡ್ಗಳನ್ನು ಕೊಡಲೇಬೇಕು
ರಾಜ್ಯದಲ್ಲಿ ಸದ್ಯ ಕೋವಿಡ್ ತುರ್ತು ಸ್ಥಿತಿ ಇದೆ. ಎಲ್ಲ ಖಾಸಗಿ ಮೆಡಿಕಲ್ ಕಾಲೇಜುಗಳು ಶೇ. 75 ಹಾಗೂ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಲಾದ ರೋಗಿಗಳಿಗಾಗಿ ಒದಗಿಸಲೇಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಪ್ರಾಣ ರಕ್ಷಿಸುವುದು ನನ್ನ ಕರ್ತವ್ಯ.
ಆದರೆ ದಾವಣಗೆರೆಯಲ್ಲಿ 850 ಬೆಡ್ ಸಾಮಥ್ರ್ಯ ಹೊಂದಿರುವ ಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಕೇವಲ 54 ಹಾಗೂ 850 ಬೆಡ್ ಸಾಮಥ್ರ್ಯದ ಬಾಪೂಜಿ ಜೆಜೆಎಂಸಿ ಕಾಲೇಜಿನಲ್ಲಿ ಕೇವಲ 37 ಬೆಡ್ಗಳನ್ನು ಮಾತ್ರ ನೀಡಿದ್ದು, ಸರ್ಕಾರದ ಸೂಚನೆ ಪಾಲಿಸುತ್ತಿಲ್ಲ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯ ಮಟ್ಟದಲ್ಲಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜುಗಳು ಪಾಲಿಸದಿರುವುದು ನಿಜಕ್ಕೂ ಅಚ್ಚರಿ ಹಾಗೂ ನೋವು ತಂದಿದೆ. ಸರ್ಕಾರ ಖಾಸಗಿ ಆಡಳಿತ ಮಂಡಳಿಯೊಂದಿಗೆ ಘರ್ಷಣೆಯನ್ನು ಬಯಸುವುದಿಲ್ಲ. ರಾಜ್ಯದಲ್ಲಿ ಎಲ್ಲ ಖಾಸಗಿ ಮೆಡಿಕಲ್ ಕಾಲೇಜಗಳೂ ಕೂಡ ನಿಗದಿತ ಪ್ರಮಾಣದಲ್ಲಿ ಬೆಡ್ ನೀಡುವ ಮೂಲಕ ಸ್ಪಂದಿಸಿದ್ದಾರೆ. ಎಲ್ಲಿಯೂ ಕೂಡ ಈ ರೀತಿಯ ಅಸಹಾಕಾರ ಕಂಡುಬಂದಿಲ್ಲ.
ರಾಜ್ಯದ ಜನರ ಆರೋಗ್ಯ ಹಾಗೂ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ನಿಗದಿತ ಸಂಖ್ಯೆಯಷ್ಟು ಬೆಡ್ ನೀಡಲೇಬೇಕು. ನಾವೇನು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳುತ್ತಿಲ್ಲ. ಪ್ರತಿ ರೋಗಿಗೂ ಸರ್ಕಾರದಿಂದ ಹಣ ಪಾವತಿಸುತ್ತೇವೆ. ಇದು ಹೆಲ್ತ್ ಎಮರ್ಜೆನ್ಸಿ ಕಾಲವಾಗಿದ್ದು ಅತ್ಯಂತ ತುರ್ತು ನಾನ್ ಕೋವಿಡ್ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳು ಚಿಕಿತ್ಸೆ ನೀಡಬೇಕು.
ಇತರೆ ಚಿಕಿತ್ಸೆಗಳನ್ನು 2-3 ತಿಂಗಳು ಮುಂದೂಡಬೇಕು. ಕೋವಿಡ್ ರೋಗಿಗಳಿಗೇ ಬೆಡ್ಗಳನ್ನು ಒದಗಿಸಬೇಕು. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ನಿಗದಿಯಂತೆ ಕ್ರಮವಾಗಿ ಶೇ. 75 ಹಾಗೂ ಶೇ. 50 ರಷ್ಟು ಬೆಡ್ಗಳನ್ನು ನೀಡಲೇಬೇಕು ಹಾಗೂ ಬೆಡ್ ಲಭ್ಯತೆಯ ಸ್ಥಿತಿಗತಿಯ ಬೋರ್ಡ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಕಾನೂನು ಪ್ರಕಾರ ನಾವು ತೆಗೆದುಕೊಳ್ಳಬೇಕಾಗುತ್ತದೆ.
ನಿಗದಿಯಂತೆ ಬೆಡ್ಗಳನ್ನು ಪಡೆಯದಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಸಹಕಾರ ನೀಡದವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಒ ಅವರು ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರು ಸೂಚನೆ ನೀಡಿದರು.
2150 ವೈದ್ಯರ ನೇಮಕ
ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ಗಳನ್ನು ಒದಗಿಸಲಾಗಿದ್ದು, ಕೆಲವೆಡೆ ತಜ್ಞ ವೈದ್ಯರು ಹಾಗೂ ನುರಿತ ಸಿಬ್ಬಂದಿ ಕೊರತೆ ಕಾರಣ ಬಳಕೆಗೆ ತೊಂದರೆಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಲಿದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಳಕೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಿಬ್ಬಂದಿಗಳಿಗೆ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ತರಬೇತಿಯನ್ನು ಕೊಡಿಸಬೇಕು, ಜಿಲ್ಲೆಯಲ್ಲಿ ಕೂಡಲೆ ಈ ಕಾರ್ಯ ಆಗಬೇಕು ಎಂದು ಸಚಿವರು ತಾಕೀತು ಮಾಡಿದರು.
ಆಂಬುಲೆನ್ಸ್ಗೆ ದರ ನಿಗದಿ
ರಾಜ್ಯದಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವ ಸಂದರ್ಭದ ಪರಿಸ್ಥಿತಿಯ ದುರ್ಲಾಭ ಪಡೆದು, ಖಾಸಗಿ ಆಂಬುಲೆನ್ಸ್ಗಳು ರೋಗಿಗಳಿಂದ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ, ಮೊದಲೇ ನೊಂದಿರುವವರಿಗೆ ಇನ್ನಷ್ಟು ಹಿಂಸೆ ನೀಡುವಂತಹ ಅಮಾನವೀಯ ವರ್ತನೆ ತೋರುವುದು ಸಮಂಜಸವಲ್ಲ.
ಈ ಕುರಿತು ಬಹಳಷ್ಟು ದೂರುಗಳು ಕೇಳಿಬಂದಿದ್ದು, ಈಗಾಗಲೆ ಈ ದಿಸೆಯಲ್ಲಿ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಖಾಸಗಿ ಆಂಬುಲೆನ್ಸ್ಗಳಿಗೆ ದರವನ್ನು ನಿಗದಿಪಡಿಸಲಾಗುವುದು. ನಿಗದಿಗಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಎಲ್ಲ ತಾಲ್ಲೂಕುಗಳಿಗೆ ಆಕ್ಸಿಜನ್ ಘಟಕ : ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕವನ್ನು ಸ್ಥಾಪಿಸುವ ಆಲೋಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರು ತಮ್ಮ ಟ್ರಸ್ಟ್ ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕ ನೀಡಲು ಕ್ರಮ ವಹಿಸಿದ್ದಕ್ಕಾಗಿ ಹಾಗೂ ಚನ್ನಗಿರಿ ಶಾಸಕರು ಹಾಗೂ ಕೆಸ್ಎಸ್ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಕೂಡ ಚನ್ನಗಿರಿಯಲ್ಲಿ ನಿಗಮದ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಕ್ಕಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.
ದಾವಣಗೆರೆ ಜಿಲ್ಲೆಗೆ ಒಟ್ಟು 115 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ರಾಜ್ಯದಲ್ಲಿ 18-44 ವರ್ಷದವರಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮರು ಚಾಲನೆ ನೀಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಎಲ್ಲರಿಗೂ ಲಸಿಕೆ ಕೊಡಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಗೆ ಕೋವಿಡ್ಗೆ ನೀಡಲಾಗುವ ಯಾವುದೇ ಔಷಧಿಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.
ಬ್ಲ್ಯಾಕ್ ಫಂಗಸ್ ಆತಂಕದ ಅಗತ್ಯವಿಲ್ಲ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಿಗೆ ಸೋಂಕು ಕಂಡುಬಂದಿದೆ. ಈ ಸೋಂಕಿಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 03, 07, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸುವ ಮೂಲಕ, ಈಗಾಗಲೆ ಕೋವಿಡ್ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರಿಗೆ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ, ಯಾರು ಯಾವುದೇ ಮಟ್ಟದ ಪ್ರಭಾವ ಬಳಸಿದರೂ, ಬೆಡ್ ದೊರೆಯುತ್ತಿಲ್ಲ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದಲ್ಲಿ ಬೆಡ್ ಪಡೆಯದಿರುವುದನ್ನು ಪ್ರಸ್ತಾಪಿಸಿ, ಈ ನಿಟ್ಟಿನಲ್ಲಿ ಸಚಿವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದ್ದು, ಎಲ್ಲ ಶಿಕ್ಷಕರಿಗೂ ಲಸಿಕಾಕರಣ ಆಗಬೇಕು. ಜಿಲ್ಲೆಯಲ್ಲಿ ಇನ್ನೂ 700 ಕ್ಕೂ ಹೆಚ್ಚು ಶಿಕ್ಷಕರಿಗೆ ಲಸಿಕೆ ನೀಡಿಲ್ಲ. ಸೋಂಕಿತರ ಪ್ರಾಥಮಿಕ 10 ಹಾಗೂ ದ್ವಿತೀಯ ಹಂತದ 20 ಸಂಪರ್ಕಿತರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಆದರೆ ಜಿಲ್ಲೆಯಲ್ಲಿ ಇದು ಆಗುತ್ತಿಲ್ಲ. ಹೀಗಾಗಿ ಸೋಂಕು ಏರಿಕೆಯಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಈಗಾಗಲೆ ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಮಾಧ್ಯಮದವರು, ಬ್ಯಾಂಕ್ ಹಾಗೂ ರೈಲ್ವೆ ಸಿಬ್ಬಂದಿಗಳಿಗೆ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದ ಬೆಡ್ ಗಳನ್ನು ಸರ್ಕಾರದ ಆದೇಶಕ್ಕೆ ಅನುಗುಣವಾಗಿ ತಪ್ಪದೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ರಾಮಪ್ಪ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿಜಯ ಮಹಾಂತೇಶ್, ಜೆಜೆಎಂಸಿ ಹಾಗೂ ಎಸ್ಎಸ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಪ್ರಾಂಶುಪಾಲರು, ಡಿಹೆಚ್ಒ ಡಾ. ನಾಗರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

