Connect with us

ದಿನದ ಸುದ್ದಿ

ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್ ದಾಖಲು ಕಡ್ಡಾಯ : ಸಚಿವ ಡಾ. ಕೆ. ಸುಧಾಕರ್

Published

on

ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್‍ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್‍ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್‍ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್‍ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.

ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್‍ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್‍ಗಳನ್ನಾಗಿ ಪರಿವರ್ತಿಸಬೇಕು.

ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು. ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ, ಊಟೋಪಹಾರ ಗುಣಮಟ್ಟದ್ದಾಗಿರಬೇಕು.

ಇದನ್ನೂ ಓದಿ | ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ‌.ಕೆ.ಸುಧಾಕರ್ 

ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿಗದಿತ ಬೆಡ್‍ಗಳನ್ನು ಕೊಡಲೇಬೇಕು

ರಾಜ್ಯದಲ್ಲಿ ಸದ್ಯ ಕೋವಿಡ್ ತುರ್ತು ಸ್ಥಿತಿ ಇದೆ. ಎಲ್ಲ ಖಾಸಗಿ ಮೆಡಿಕಲ್ ಕಾಲೇಜುಗಳು ಶೇ. 75 ಹಾಗೂ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್‍ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಲಾದ ರೋಗಿಗಳಿಗಾಗಿ ಒದಗಿಸಲೇಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಪ್ರಾಣ ರಕ್ಷಿಸುವುದು ನನ್ನ ಕರ್ತವ್ಯ.

ಆದರೆ ದಾವಣಗೆರೆಯಲ್ಲಿ 850 ಬೆಡ್ ಸಾಮಥ್ರ್ಯ ಹೊಂದಿರುವ ಎಸ್‍ಎಸ್ ಮೆಡಿಕಲ್ ಕಾಲೇಜಿನಲ್ಲಿ ಕೇವಲ 54 ಹಾಗೂ 850 ಬೆಡ್ ಸಾಮಥ್ರ್ಯದ ಬಾಪೂಜಿ ಜೆಜೆಎಂಸಿ ಕಾಲೇಜಿನಲ್ಲಿ ಕೇವಲ 37 ಬೆಡ್‍ಗಳನ್ನು ಮಾತ್ರ ನೀಡಿದ್ದು, ಸರ್ಕಾರದ ಸೂಚನೆ ಪಾಲಿಸುತ್ತಿಲ್ಲ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯ ಮಟ್ಟದಲ್ಲಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜುಗಳು ಪಾಲಿಸದಿರುವುದು ನಿಜಕ್ಕೂ ಅಚ್ಚರಿ ಹಾಗೂ ನೋವು ತಂದಿದೆ. ಸರ್ಕಾರ ಖಾಸಗಿ ಆಡಳಿತ ಮಂಡಳಿಯೊಂದಿಗೆ ಘರ್ಷಣೆಯನ್ನು ಬಯಸುವುದಿಲ್ಲ. ರಾಜ್ಯದಲ್ಲಿ ಎಲ್ಲ ಖಾಸಗಿ ಮೆಡಿಕಲ್ ಕಾಲೇಜಗಳೂ ಕೂಡ ನಿಗದಿತ ಪ್ರಮಾಣದಲ್ಲಿ ಬೆಡ್ ನೀಡುವ ಮೂಲಕ ಸ್ಪಂದಿಸಿದ್ದಾರೆ. ಎಲ್ಲಿಯೂ ಕೂಡ ಈ ರೀತಿಯ ಅಸಹಾಕಾರ ಕಂಡುಬಂದಿಲ್ಲ.

ರಾಜ್ಯದ ಜನರ ಆರೋಗ್ಯ ಹಾಗೂ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ನಿಗದಿತ ಸಂಖ್ಯೆಯಷ್ಟು ಬೆಡ್ ನೀಡಲೇಬೇಕು. ನಾವೇನು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳುತ್ತಿಲ್ಲ. ಪ್ರತಿ ರೋಗಿಗೂ ಸರ್ಕಾರದಿಂದ ಹಣ ಪಾವತಿಸುತ್ತೇವೆ. ಇದು ಹೆಲ್ತ್ ಎಮರ್ಜೆನ್ಸಿ ಕಾಲವಾಗಿದ್ದು ಅತ್ಯಂತ ತುರ್ತು ನಾನ್ ಕೋವಿಡ್ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳು ಚಿಕಿತ್ಸೆ ನೀಡಬೇಕು.

ಇತರೆ ಚಿಕಿತ್ಸೆಗಳನ್ನು 2-3 ತಿಂಗಳು ಮುಂದೂಡಬೇಕು. ಕೋವಿಡ್ ರೋಗಿಗಳಿಗೇ ಬೆಡ್‍ಗಳನ್ನು ಒದಗಿಸಬೇಕು. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ನಿಗದಿಯಂತೆ ಕ್ರಮವಾಗಿ ಶೇ. 75 ಹಾಗೂ ಶೇ. 50 ರಷ್ಟು ಬೆಡ್‍ಗಳನ್ನು ನೀಡಲೇಬೇಕು ಹಾಗೂ ಬೆಡ್ ಲಭ್ಯತೆಯ ಸ್ಥಿತಿಗತಿಯ ಬೋರ್ಡ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಕಾನೂನು ಪ್ರಕಾರ ನಾವು ತೆಗೆದುಕೊಳ್ಳಬೇಕಾಗುತ್ತದೆ.

ನಿಗದಿಯಂತೆ ಬೆಡ್‍ಗಳನ್ನು ಪಡೆಯದಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಸಹಕಾರ ನೀಡದವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಡಿಹೆಚ್‍ಒ ಅವರು ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರು ಸೂಚನೆ ನೀಡಿದರು.

2150 ವೈದ್ಯರ ನೇಮಕ

ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್‍ಗಳನ್ನು ಒದಗಿಸಲಾಗಿದ್ದು, ಕೆಲವೆಡೆ ತಜ್ಞ ವೈದ್ಯರು ಹಾಗೂ ನುರಿತ ಸಿಬ್ಬಂದಿ ಕೊರತೆ ಕಾರಣ ಬಳಕೆಗೆ ತೊಂದರೆಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ.

ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಲಿದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಳಕೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಿಬ್ಬಂದಿಗಳಿಗೆ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ತರಬೇತಿಯನ್ನು ಕೊಡಿಸಬೇಕು, ಜಿಲ್ಲೆಯಲ್ಲಿ ಕೂಡಲೆ ಈ ಕಾರ್ಯ ಆಗಬೇಕು ಎಂದು ಸಚಿವರು ತಾಕೀತು ಮಾಡಿದರು.

ಆಂಬುಲೆನ್ಸ್‍ಗೆ ದರ ನಿಗದಿ

ರಾಜ್ಯದಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವ ಸಂದರ್ಭದ ಪರಿಸ್ಥಿತಿಯ ದುರ್ಲಾಭ ಪಡೆದು, ಖಾಸಗಿ ಆಂಬುಲೆನ್ಸ್‍ಗಳು ರೋಗಿಗಳಿಂದ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ, ಮೊದಲೇ ನೊಂದಿರುವವರಿಗೆ ಇನ್ನಷ್ಟು ಹಿಂಸೆ ನೀಡುವಂತಹ ಅಮಾನವೀಯ ವರ್ತನೆ ತೋರುವುದು ಸಮಂಜಸವಲ್ಲ.

ಈ ಕುರಿತು ಬಹಳಷ್ಟು ದೂರುಗಳು ಕೇಳಿಬಂದಿದ್ದು, ಈಗಾಗಲೆ ಈ ದಿಸೆಯಲ್ಲಿ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಖಾಸಗಿ ಆಂಬುಲೆನ್ಸ್‍ಗಳಿಗೆ ದರವನ್ನು ನಿಗದಿಪಡಿಸಲಾಗುವುದು. ನಿಗದಿಗಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಎಲ್ಲ ತಾಲ್ಲೂಕುಗಳಿಗೆ ಆಕ್ಸಿಜನ್ ಘಟಕ : ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕವನ್ನು ಸ್ಥಾಪಿಸುವ ಆಲೋಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರು ತಮ್ಮ ಟ್ರಸ್ಟ್ ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕ ನೀಡಲು ಕ್ರಮ ವಹಿಸಿದ್ದಕ್ಕಾಗಿ ಹಾಗೂ ಚನ್ನಗಿರಿ ಶಾಸಕರು ಹಾಗೂ ಕೆಸ್‍ಎಸ್‍ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಕೂಡ ಚನ್ನಗಿರಿಯಲ್ಲಿ ನಿಗಮದ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಕ್ಕಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.

ದಾವಣಗೆರೆ ಜಿಲ್ಲೆಗೆ ಒಟ್ಟು 115 ಆಕ್ಸಿಜನ್ ಕಾನ್ಸನ್‍ಟ್ರೇಟರ್‍ಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ರಾಜ್ಯದಲ್ಲಿ 18-44 ವರ್ಷದವರಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮರು ಚಾಲನೆ ನೀಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಎಲ್ಲರಿಗೂ ಲಸಿಕೆ ಕೊಡಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಗೆ ಕೋವಿಡ್‍ಗೆ ನೀಡಲಾಗುವ ಯಾವುದೇ ಔಷಧಿಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.

ಬ್ಲ್ಯಾಕ್ ಫಂಗಸ್ ಆತಂಕದ ಅಗತ್ಯವಿಲ್ಲ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಿಗೆ ಸೋಂಕು ಕಂಡುಬಂದಿದೆ. ಈ ಸೋಂಕಿಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ.

ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 03, 07, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸುವ ಮೂಲಕ, ಈಗಾಗಲೆ ಕೋವಿಡ್‍ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರಿಗೆ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ, ಯಾರು ಯಾವುದೇ ಮಟ್ಟದ ಪ್ರಭಾವ ಬಳಸಿದರೂ, ಬೆಡ್ ದೊರೆಯುತ್ತಿಲ್ಲ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದಲ್ಲಿ ಬೆಡ್ ಪಡೆಯದಿರುವುದನ್ನು ಪ್ರಸ್ತಾಪಿಸಿ, ಈ ನಿಟ್ಟಿನಲ್ಲಿ ಸಚಿವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದ್ದು, ಎಲ್ಲ ಶಿಕ್ಷಕರಿಗೂ ಲಸಿಕಾಕರಣ ಆಗಬೇಕು. ಜಿಲ್ಲೆಯಲ್ಲಿ ಇನ್ನೂ 700 ಕ್ಕೂ ಹೆಚ್ಚು ಶಿಕ್ಷಕರಿಗೆ ಲಸಿಕೆ ನೀಡಿಲ್ಲ. ಸೋಂಕಿತರ ಪ್ರಾಥಮಿಕ 10 ಹಾಗೂ ದ್ವಿತೀಯ ಹಂತದ 20 ಸಂಪರ್ಕಿತರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಆದರೆ ಜಿಲ್ಲೆಯಲ್ಲಿ ಇದು ಆಗುತ್ತಿಲ್ಲ. ಹೀಗಾಗಿ ಸೋಂಕು ಏರಿಕೆಯಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಈಗಾಗಲೆ ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಮಾಧ್ಯಮದವರು, ಬ್ಯಾಂಕ್ ಹಾಗೂ ರೈಲ್ವೆ ಸಿಬ್ಬಂದಿಗಳಿಗೆ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದ ಬೆಡ್ ಗಳನ್ನು ಸರ್ಕಾರದ ಆದೇಶಕ್ಕೆ ಅನುಗುಣವಾಗಿ ತಪ್ಪದೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ರಾಮಪ್ಪ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿಜಯ ಮಹಾಂತೇಶ್, ಜೆಜೆಎಂಸಿ ಹಾಗೂ ಎಸ್‍ಎಸ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಪ್ರಾಂಶುಪಾಲರು, ಡಿಹೆಚ್‍ಒ ಡಾ. ನಾಗರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

Published

on

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ.

ಈ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು

ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್‌ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.

ವಿವಿಧ ಸೌಲಭ್ಯಗಳ ವಿತರಣೆ

ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.

ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 20 ಪ್ರಕರಣ ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending