ದಿನದ ಸುದ್ದಿ
ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್ ದಾಖಲು ಕಡ್ಡಾಯ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ಗಳನ್ನಾಗಿ ಪರಿವರ್ತಿಸಬೇಕು.
ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು. ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ, ಊಟೋಪಹಾರ ಗುಣಮಟ್ಟದ್ದಾಗಿರಬೇಕು.
ಇದನ್ನೂ ಓದಿ | ಸೋಂಕು ದೃಢಪಟ್ಟ 5 ತಾಸಿನೊಳಗಾಗಿ ಕೋವಿಡ್ ಕಿಟ್ ಒದಗಿಸಿ : ಸಚಿವ ಡಾ.ಕೆ.ಸುಧಾಕರ್
ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಿಗದಿತ ಬೆಡ್ಗಳನ್ನು ಕೊಡಲೇಬೇಕು
ರಾಜ್ಯದಲ್ಲಿ ಸದ್ಯ ಕೋವಿಡ್ ತುರ್ತು ಸ್ಥಿತಿ ಇದೆ. ಎಲ್ಲ ಖಾಸಗಿ ಮೆಡಿಕಲ್ ಕಾಲೇಜುಗಳು ಶೇ. 75 ಹಾಗೂ ಖಾಸಗಿ ಆಸ್ಪತ್ರೆಗಳು ಶೇ. 50 ರಷ್ಟು ಬೆಡ್ಗಳನ್ನು ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡಲಾದ ರೋಗಿಗಳಿಗಾಗಿ ಒದಗಿಸಲೇಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಜನರ ಪ್ರಾಣ ರಕ್ಷಿಸುವುದು ನನ್ನ ಕರ್ತವ್ಯ.
ಆದರೆ ದಾವಣಗೆರೆಯಲ್ಲಿ 850 ಬೆಡ್ ಸಾಮಥ್ರ್ಯ ಹೊಂದಿರುವ ಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಕೇವಲ 54 ಹಾಗೂ 850 ಬೆಡ್ ಸಾಮಥ್ರ್ಯದ ಬಾಪೂಜಿ ಜೆಜೆಎಂಸಿ ಕಾಲೇಜಿನಲ್ಲಿ ಕೇವಲ 37 ಬೆಡ್ಗಳನ್ನು ಮಾತ್ರ ನೀಡಿದ್ದು, ಸರ್ಕಾರದ ಸೂಚನೆ ಪಾಲಿಸುತ್ತಿಲ್ಲ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯ ಮಟ್ಟದಲ್ಲಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜುಗಳು ಪಾಲಿಸದಿರುವುದು ನಿಜಕ್ಕೂ ಅಚ್ಚರಿ ಹಾಗೂ ನೋವು ತಂದಿದೆ. ಸರ್ಕಾರ ಖಾಸಗಿ ಆಡಳಿತ ಮಂಡಳಿಯೊಂದಿಗೆ ಘರ್ಷಣೆಯನ್ನು ಬಯಸುವುದಿಲ್ಲ. ರಾಜ್ಯದಲ್ಲಿ ಎಲ್ಲ ಖಾಸಗಿ ಮೆಡಿಕಲ್ ಕಾಲೇಜಗಳೂ ಕೂಡ ನಿಗದಿತ ಪ್ರಮಾಣದಲ್ಲಿ ಬೆಡ್ ನೀಡುವ ಮೂಲಕ ಸ್ಪಂದಿಸಿದ್ದಾರೆ. ಎಲ್ಲಿಯೂ ಕೂಡ ಈ ರೀತಿಯ ಅಸಹಾಕಾರ ಕಂಡುಬಂದಿಲ್ಲ.
ರಾಜ್ಯದ ಜನರ ಆರೋಗ್ಯ ಹಾಗೂ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ನಿಗದಿತ ಸಂಖ್ಯೆಯಷ್ಟು ಬೆಡ್ ನೀಡಲೇಬೇಕು. ನಾವೇನು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳುತ್ತಿಲ್ಲ. ಪ್ರತಿ ರೋಗಿಗೂ ಸರ್ಕಾರದಿಂದ ಹಣ ಪಾವತಿಸುತ್ತೇವೆ. ಇದು ಹೆಲ್ತ್ ಎಮರ್ಜೆನ್ಸಿ ಕಾಲವಾಗಿದ್ದು ಅತ್ಯಂತ ತುರ್ತು ನಾನ್ ಕೋವಿಡ್ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳು ಚಿಕಿತ್ಸೆ ನೀಡಬೇಕು.
ಇತರೆ ಚಿಕಿತ್ಸೆಗಳನ್ನು 2-3 ತಿಂಗಳು ಮುಂದೂಡಬೇಕು. ಕೋವಿಡ್ ರೋಗಿಗಳಿಗೇ ಬೆಡ್ಗಳನ್ನು ಒದಗಿಸಬೇಕು. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ನಿಗದಿಯಂತೆ ಕ್ರಮವಾಗಿ ಶೇ. 75 ಹಾಗೂ ಶೇ. 50 ರಷ್ಟು ಬೆಡ್ಗಳನ್ನು ನೀಡಲೇಬೇಕು ಹಾಗೂ ಬೆಡ್ ಲಭ್ಯತೆಯ ಸ್ಥಿತಿಗತಿಯ ಬೋರ್ಡ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಕಾನೂನು ಪ್ರಕಾರ ನಾವು ತೆಗೆದುಕೊಳ್ಳಬೇಕಾಗುತ್ತದೆ.
ನಿಗದಿಯಂತೆ ಬೆಡ್ಗಳನ್ನು ಪಡೆಯದಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಸಹಕಾರ ನೀಡದವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಒ ಅವರು ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರು ಸೂಚನೆ ನೀಡಿದರು.
2150 ವೈದ್ಯರ ನೇಮಕ
ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ಗಳನ್ನು ಒದಗಿಸಲಾಗಿದ್ದು, ಕೆಲವೆಡೆ ತಜ್ಞ ವೈದ್ಯರು ಹಾಗೂ ನುರಿತ ಸಿಬ್ಬಂದಿ ಕೊರತೆ ಕಾರಣ ಬಳಕೆಗೆ ತೊಂದರೆಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಲಿದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್ ಬಳಕೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಿಬ್ಬಂದಿಗಳಿಗೆ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ತರಬೇತಿಯನ್ನು ಕೊಡಿಸಬೇಕು, ಜಿಲ್ಲೆಯಲ್ಲಿ ಕೂಡಲೆ ಈ ಕಾರ್ಯ ಆಗಬೇಕು ಎಂದು ಸಚಿವರು ತಾಕೀತು ಮಾಡಿದರು.
ಆಂಬುಲೆನ್ಸ್ಗೆ ದರ ನಿಗದಿ
ರಾಜ್ಯದಲ್ಲಿ ಕೋವಿಡ್ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವ ಸಂದರ್ಭದ ಪರಿಸ್ಥಿತಿಯ ದುರ್ಲಾಭ ಪಡೆದು, ಖಾಸಗಿ ಆಂಬುಲೆನ್ಸ್ಗಳು ರೋಗಿಗಳಿಂದ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ, ಮೊದಲೇ ನೊಂದಿರುವವರಿಗೆ ಇನ್ನಷ್ಟು ಹಿಂಸೆ ನೀಡುವಂತಹ ಅಮಾನವೀಯ ವರ್ತನೆ ತೋರುವುದು ಸಮಂಜಸವಲ್ಲ.
ಈ ಕುರಿತು ಬಹಳಷ್ಟು ದೂರುಗಳು ಕೇಳಿಬಂದಿದ್ದು, ಈಗಾಗಲೆ ಈ ದಿಸೆಯಲ್ಲಿ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಖಾಸಗಿ ಆಂಬುಲೆನ್ಸ್ಗಳಿಗೆ ದರವನ್ನು ನಿಗದಿಪಡಿಸಲಾಗುವುದು. ನಿಗದಿಗಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಎಲ್ಲ ತಾಲ್ಲೂಕುಗಳಿಗೆ ಆಕ್ಸಿಜನ್ ಘಟಕ : ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕವನ್ನು ಸ್ಥಾಪಿಸುವ ಆಲೋಚನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾದ ಜಿ.ಎಂ. ಸಿದ್ದೇಶ್ವರ್ ಅವರು ತಮ್ಮ ಟ್ರಸ್ಟ್ ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕ ನೀಡಲು ಕ್ರಮ ವಹಿಸಿದ್ದಕ್ಕಾಗಿ ಹಾಗೂ ಚನ್ನಗಿರಿ ಶಾಸಕರು ಹಾಗೂ ಕೆಸ್ಎಸ್ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರುಪಾಕ್ಷಪ್ಪ ಅವರು ಕೂಡ ಚನ್ನಗಿರಿಯಲ್ಲಿ ನಿಗಮದ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಕ್ಕಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.
ದಾವಣಗೆರೆ ಜಿಲ್ಲೆಗೆ ಒಟ್ಟು 115 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ರಾಜ್ಯದಲ್ಲಿ 18-44 ವರ್ಷದವರಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಮರು ಚಾಲನೆ ನೀಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಎಲ್ಲರಿಗೂ ಲಸಿಕೆ ಕೊಡಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಗೆ ಕೋವಿಡ್ಗೆ ನೀಡಲಾಗುವ ಯಾವುದೇ ಔಷಧಿಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.
ಬ್ಲ್ಯಾಕ್ ಫಂಗಸ್ ಆತಂಕದ ಅಗತ್ಯವಿಲ್ಲ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಿಗೆ ಸೋಂಕು ಕಂಡುಬಂದಿದೆ. ಈ ಸೋಂಕಿಗೆ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 03, 07, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸುವ ಮೂಲಕ, ಈಗಾಗಲೆ ಕೋವಿಡ್ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸೋಂಕಿತರಿಗೆ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ, ಯಾರು ಯಾವುದೇ ಮಟ್ಟದ ಪ್ರಭಾವ ಬಳಸಿದರೂ, ಬೆಡ್ ದೊರೆಯುತ್ತಿಲ್ಲ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದಲ್ಲಿ ಬೆಡ್ ಪಡೆಯದಿರುವುದನ್ನು ಪ್ರಸ್ತಾಪಿಸಿ, ಈ ನಿಟ್ಟಿನಲ್ಲಿ ಸಚಿವರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದ್ದು, ಎಲ್ಲ ಶಿಕ್ಷಕರಿಗೂ ಲಸಿಕಾಕರಣ ಆಗಬೇಕು. ಜಿಲ್ಲೆಯಲ್ಲಿ ಇನ್ನೂ 700 ಕ್ಕೂ ಹೆಚ್ಚು ಶಿಕ್ಷಕರಿಗೆ ಲಸಿಕೆ ನೀಡಿಲ್ಲ. ಸೋಂಕಿತರ ಪ್ರಾಥಮಿಕ 10 ಹಾಗೂ ದ್ವಿತೀಯ ಹಂತದ 20 ಸಂಪರ್ಕಿತರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಆದರೆ ಜಿಲ್ಲೆಯಲ್ಲಿ ಇದು ಆಗುತ್ತಿಲ್ಲ. ಹೀಗಾಗಿ ಸೋಂಕು ಏರಿಕೆಯಾಗುತ್ತಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಈಗಾಗಲೆ ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಮಾಧ್ಯಮದವರು, ಬ್ಯಾಂಕ್ ಹಾಗೂ ರೈಲ್ವೆ ಸಿಬ್ಬಂದಿಗಳಿಗೆ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಂದ ನಿಗದಿತ ಪ್ರಮಾಣದ ಬೆಡ್ ಗಳನ್ನು ಸರ್ಕಾರದ ಆದೇಶಕ್ಕೆ ಅನುಗುಣವಾಗಿ ತಪ್ಪದೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ರಾಮಪ್ಪ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಡಾ. ವಿಜಯ ಮಹಾಂತೇಶ್, ಜೆಜೆಎಂಸಿ ಹಾಗೂ ಎಸ್ಎಸ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಪ್ರಾಂಶುಪಾಲರು, ಡಿಹೆಚ್ಒ ಡಾ. ನಾಗರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.
ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.
ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.
ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್ಮೆಂಟ್ ಆಫೀಸರ್ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ5 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ5 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ16 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
-
ದಿನದ ಸುದ್ದಿ6 hours agoಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

