Connect with us

ದಿನದ ಸುದ್ದಿ

ವಿಚಾರವಾದಿ ಡಾ.ಎಚ್. ನರಸಿಂಹಯ್ಯ ಬದುಕು : ಮಿಸ್ ಮಾಡ್ದೆ ಓದಿ ಈ ಲೇಖನ

Published

on

  • ಸಂಗಮೇಶ ಎನ್ ಜವಾದಿ

ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,
ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ, ಬದುಕಿನೂದ್ದಕ್ಕೂ ಸರಳತೆ ಜೀವನ
ಸಾಗಿಸಿದ ಸಾಧಕ.

ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದ
ಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿ
ಶಿಸ್ತು ಮತ್ತು ಸರಳತೆಗೆ ಎಚ್ಚೆನ್ ರವರು ಹೆಚ್ಚು ಆದ್ಯತೆ ನೀಡಿದವರು.

ಜೊತೆಗೆ ಕರ್ನಾಟಕದ ಮೂಡಲಸೀಮೆಯ ಹುಡುಗನೊಬ್ಬ ಅಮೆರಿಕ್ಕೆ ಹೋದರೂ ಉಪ್ಪಿಟ್ಟು ತಿನ್ನುವ, ಗಾಂಧಿಟೊಪ್ಪಿಯನ್ನೇ ತೊಡುವ ಮೂಲಕ ಭಾರತದ ಹಿರಿಮೆಯನ್ನು ಕಾಪಾಡಿಕೊಂಡು ಬಂದ ಶಿಕ್ಷಣಪ್ರೇಮಿ ಎನ್ನುವುದು ನಾವ್ಯಾರು ಮರೆಯುವಂತಿಲ್ಲ.

ಸರಳತೆ, ಪ್ರಾಮಾಣಿಕತೆ, ಸಮಾಜಿಕ ಚಿಂತನೆ, ಪರಿಶುದ್ಧತೆಯನ್ನು ತಮ್ಮ ಬಾಳಿನುದ್ದಕ್ಕೂ ಒಂದು ವ್ರತದಂತೆ ಕಾಯ್ದುಕೊಂಡು ಬಂದ ಎಚ್ಚೆನ್‍ರ ಬದುಕು ಇಂದಿನ ಸಮಾಜಕ್ಕೆ ಆದರ್ಶ ಮತ್ತು ಮಾರ್ಗದರ್ಶನ ಎಂಬುವುದರಲ್ಲಿ ಎರಡು ಮಾತಿಲ್ಲ ಬಂಧುಗಳೆ.

ಡಾ. ಎಚ್ ಎನ್ ಜನನ – ಜೀವನ

ಎಚ್.ನರಸಿಂಹಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದ ತಂದೆ ಹನುಮಂತಪ್ಪ, ತಾಯಿ ವೆಂಕಟಮ್ಮ ದಂಪತಿಗಳ ಮಗನಾಗಿ 06-06-1920 ರಲ್ಲಿ ಜನಿಸಿದರು.

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಹೊಸೂರಿನಲ್ಲಿಯೇ ಮುಗಿಸಿದರು. 1935ರಲ್ಲಿ ಬೆಂಗಳೂರಿನ ನ್ಯಾಷನಲ್‌ ಹೈಸ್ಕೂಲಿಗೆ ಸೇರಿದರು.ತದನಂತರ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್) ಮತ್ತು ಎಂ.ಎಸ್ಸಿ., ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಓದಿದರು. ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ (ಪ್ರಥಮ) ದರ್ಜೆಯಲ್ಲಿ ಉತ್ತೀರ್ಣರಾದರು. 1946ರಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕರಾದರು.

ಅಲ್ಲಿಯೇ ಪ್ರಾಧ್ಯಾಪಕರಾಗಿ, ಆಮೇಲೆ ಹನ್ನೆರಡು ವರ್ಷಗಳ ಕಾಲ ಪ್ರಿನ್ಸಿಪಾಲರಾಗಿದ್ದರು.ಹಾಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ್ದ ಶ್ರೇಯಸ್ಸಿನ ಜೊತೆಗೆ ಆ ಸಮಯದಲ್ಲಿ ಶಿಕ್ಷಣ ರಂಗದಲ್ಲಿ ಮಹತ್ವಪೂರ್ಣ ಬದಲಾವಣೆಗಳು ಮಾಡುವ ಮೂಲಕ ಸುಧಾರಣೆಗಳನ್ನು ಕೈಗೊಂಡ ಹೆಗ್ಗಳಿಕೆ ಇವರದಾಗಿತ್ತು. ಜೊತೆಗೆ ಕನ್ನಡವೆಂದರೆ ಹೆಚ್ಚು ಪ್ರೀತಿ, ಹಾಗೂ ಪ್ರಾವೀಣ್ಯತೆಯನ್ನು ಸಹ ಹೊಂದಿದರು.

ಇವರ ಇಡೀ ಜೀವನ ಶಿಕ್ಷಣಕ್ಕೆ ಮತ್ತು ನಾಲ್ಕು ನ್ಯಾಷನಲ್ ಕಾಲೇಜು, ಐದು ನ್ಯಾಷನ ಲ್ ಹೈಸ್ಕೂಲ್ ಮತ್ತು ಎರಡು ಪ್ರೈಮರಿ ಶಾಲೆಗಳನ್ನೊಳಗೊಂಡ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ ಮೀಸಲಿಟ್ಟಿದ್ದರು.ಜಯನಗರದ ನ್ಯಾಷನಲ್ ಕಾಲೇಜಿನಲ್ಲಿರುವ ಬೆಂಗಳೂರು ಲಲಿತಕಲಾ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿ ಸಂಸ್ಥೆಗಳ ಉನ್ನತಿಗಾಗಿ ಶ್ರಮಿಸಿದ್ದಾರೆ. ಹಾಗೂ ಎಚ್.ಎನ್.ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್‌ ಕರ್ನಾಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಹಿರಿಮೆಗೆ ಸಾಕ್ಷಿಯಾಗಿದಾರೆ.

ಇದಲ್ಲದೆ ಬೆಂಗಳೂರು ವಿಶ್ವವಿದ್ಯಾಲಯದ ಪ್ರಗತಿ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಬೆಳವಣಿಗೆ, ಭಾರತದ ಸ್ವಾತಂತ್ರ್ಯ ಚಳುವಳಿ, ಮೈಸೂರು ರಾಜ್ಯದ ಸ್ಥಾಪನೆಗಾಗಿ ಹೋರಾಟ ಹೀಗೆ ಅನೇಕ ವಿಷಯಗಳಲ್ಲಿ ಹೋರಾಟ ಮಾಡಿದ್ದ ಜೀವನದ ಬದುಕು ಇವರದು.

ಮತ್ತೆ ವಿಜ್ಞಾನದಲ್ಲಿ, ವೈಜ್ಞಾನಿಕ ಮನೋಭಾವದಲ್ಲಿ ಅವರಿಗೆ ಅಚಲವಾದ ನಂಬಿಕೆ.ಮೂಢನಂಬಿಕೆ, ಮೌಢ್ಯದ ವಿರುದ್ಧ ಸತತ ಹೋರಾಟ. ಮೂವತ್ತು ವರ್ಷಗಳ ಹಿಂದೆ ಅವರು ಬೆಂಗಳೂರು ವಿಜ್ಞಾನ ವೇದಿಕೆ (Bangalore Science forum) ಎಂಬ ವಿಜ್ಞಾನವೇದಿಕೆಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿದರು. ಸಂಗೀತ, ನಾಟಕ, ನೃತ್ಯ ಮುಂತಾದ ಲಲಿತ ಕಲೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಿರುತ್ತಾರೆ ಹಾಗೂ
ಸರಳ ಕಟ್ಟುನಿಟ್ಟಾದ ಬದುಕನ್ನು ಪಾಲಿಸಿದರು.

ಡಾ.ಎಚ್ ಎನ್ ರವರ ಸರಳತೆ

ಡಾ.ಎಚ್ ಎನ್ ರವರ ಬದುಕಿನಲ್ಲಿ ಅವರು ಕಂಡ ನೋವು, ಸಂಕಟ, ಅನುಭವಿಸಿದ ಬಡತನ, ತಂದೆಯ ಸಾವು, ಓದಿಗಾಗಿ ಊರೂರು ಅಲೆದದ್ದು, ಬರಿಗಾಲಿನಲ್ಲಿ ನಡೆದುಕೊಂಡೆ ಬೆಂಗಳೂರು ತಲುಪಿದ್ದು, ಬದುಕಿಗೊಂದು ಹೊಸ ತಿರುವು ನೀಡಿದ ನ್ಯಾಷನಲ್ ಹೈಸ್ಕೂಲು, ಉಚಿತ ಪ್ರಸಾದ ನಿಲಯದಲ್ಲಿ ಪ್ರವೇಶ ಪಡೆಯಲು ಮಾಡಿದ ಹೋರಾಟ, ಬರೀ ನೀರು ಕುಡಿದೇ ದಿನಗಳನ್ನು ನೂಕಿದ್ದು, ಫೇಲಾದರೆ ಮತ್ತೆ ಮರಳಿ ಊರಿಗೆ ಹೋಗಬೇಕಲ್ಲ ಎನ್ನುವ ಭೀತಿಯಿಂದ ಓದಿದ್ದು, ಪ್ರತಿ ತರಗತಿಯಲ್ಲೂ ಪಟ್ಟಣದ ಹುಡುಗರಿಗೆ ಸ್ಪರ್ಧೆ ಒಡಿದ್ದು ಹೀಗೆ ಹತ್ತು ಹಲವು ಸಂಗತಿಗಳು ಅವರ ಸರಳತೆಗೆ ಸಾಕ್ಷಿಯಾಗಿದೆ.

ಅವರು ಬಾಲ್ಯದಲ್ಲಿ ಅನುಭವಿಸಿದ ಕಡು ಬಡತನ ಮತ್ತು ವಿದ್ಯಾಭ್ಯಾಸಕ್ಕಾಗಿ ಮಾಡಿದ ಹೋರಾಟ ನಂತರದ ಪ್ರಾಮಾಣಿಕ ಸರಳತೆಯ ಬದುಕಿಗೆ ಗಟ್ಟಿ ಅಡಿಪಾಯ ಒದಗಿಸಿತು ಎನ್ನುವುದು ಸುಳ್ಳಲ್ಲ.ನಂತರದ ಭಾಗ ಶಿಕ್ಷಕರಾಗಿ ಎಚ್.ನರಸಿಂಹಯ್ಯನವರು ಮಾಡಿದ ಸಾಧನೆಗಳು ಅದ್ಭುತ. ತಮ್ಮ ಇಡೀ ಬದುಕನ್ನು ಶಿಕ್ಷಕ ವೃತ್ತಿಗಾಗಿ ಮುಡಿಪಾಗಿಟ್ಟ ನರಸಿಂಹಯ್ಯನವರ ಸರಳ ಬದುಕು ಇಂದಿನ ಜನರಿಗೆ ಪ್ರೇರಣೆ ನೀಡುತ್ತದೆ.

ಅಮೇರಿಕಾದಂಥ ಆಕರ್ಷಕ ರಾಷ್ಟ್ರದಲ್ಲಿ ಅಧ್ಯಯನ ಮಾಡಿಯೂ ತಾಯ್ನಾಡಿನಲ್ಲಿ ಸೇವೆ ಸಲ್ಲಿಸಬೇಕೆನ್ನುವ ಅವರ ಹಂಬಲ, ವಿದ್ಯೆ ಕೊಟ್ಟು ಬದುಕು ರೂಪಿಸಿದ ನ್ಯಾಷನಲ್ ಶಿಕ್ಷಣ ಸಂಸ್ಥೆಯಲ್ಲೆ ಕೆಲಸ ಮಾಡಬೇಕೆನ್ನುವ ಅವರ ತುಡಿತ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನಿವೃತ್ತಿಯ ನಂತರ ನ್ಯಾಷನಲ್ ಕಾಲೇಜಿಗೆ ಮರಳಿ ಬಂದ ಅವರ ಸರಳತೆಯ ನಿಷ್ಠೆ, ದೊಡ್ಡ ಹುದ್ಧೆಯಲ್ಲಿದ್ದೂ ವಿದ್ಯಾರ್ಥಿಗಳ ವಸತಿ ಗೃಹದ ಸಣ್ಣ ಕೋಣೆಯಲ್ಲಿ ವಾಸಿಸುತ್ತಿದ್ದ ಅವರ ಸರಳತೆ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಬದುಕಿನುದ್ದಕ್ಕೂ ಶ್ರಮಿಸಿದ್ದು, ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಸೇವೆಗಳು, ಪವಾಡಗಳ ದುರುಪಯೋಗವನ್ನು ವಿರೋಧಿಸಿದ ಅವರ ವೈಚಾರಿಕ ಕ್ರಾಂತಿ, ತಮ್ಮ ಅಂತ್ಯಕ್ರಿಯೆಯನ್ನು ಅತ್ಯಂತ ಸರಳವಾಗಿ ಮಾಡಬೇಕೆಂದು ಅವರು ಬರೆದಿಟ್ಟ ಉಯಿಲು ಹೀಗೆ ಅನೇಕ ಸಂಗತಿಗಳ ಮೂಲಕ ಎಚ್ಚೆನ್ ಅವರ ಅಗಾಧ ಸರಳ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ ಎನ್ನಬಹುದು.

ಅತ್ಯಂತ ಪ್ರಜ್ಞಾಪೂರ್ವಕವಾಗಿ ಅವರು ರೂಢಿಸಿಕೊಂಡಿದ್ದ ಸರಳ ಬದುಕು ಎಚ್ಚೆನ್ ಯವರು ಇಂದಿನ ಆಧುನಿಕ ಸಮಾಜಕ್ಕೆ ಇಷ್ಟವಾಗಲು ಮುಖ್ಯಕಾರಣವಾಗುತ್ತದೆ. ಸರಳತೆಗೆ ಇನ್ನೊಂದು ಹೆಸರೇ ಎಚ್.ನರಸಿಂಹಯ್ಯನವರು ಎನ್ನುವಂತೆ ಅವರು ಬದುಕಿ ಬಾಳಿದರು. ಧರಿಸುವ ಬಟ್ಟೆ, ಸೇವಿಸುವ ಆಹಾರ, ವಾಸಿಸುವ ಕೋಣೆ ಹೀಗೆ ಪ್ರತಿಯೊಂದು ಅವರ ಸರಳ ಬದುಕಿಗೆ ಸಾಕ್ಷಿಯಾಗಿದ್ದವು. ಸರಳತೆಗೂ ಮತ್ತು ಅವರ ಬದುಕಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದಾಗಲೂ ಅವರು ತಮ್ಮ ವೇಶ ಭೂಷಣಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿಲ್ಲ.

ಒಂದು ಹಂತದಲ್ಲಿ ಅಂಥದ್ದೊಂದು ಒತ್ತಡ ಬಂದಾಗ ಹುದ್ದೆಯನ್ನು ತ್ಯಜಿಸಲು ಮುಂದಾದರೆ ವಿನಹ ಸರಳತೆಯನ್ನು ಬಿಟ್ಟುಕೊಡಲು ಸ್ವಲ್ಪವೂ ಯೋಚಿಸಲಿಲ್ಲ. ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಯೋರ್ವ ತನ್ನ ಬದುಕಿನುದ್ದಕ್ಕೂ ವಿದ್ಯಾರ್ಥಿಗಳ ವಸತಿ ನಿಲಯದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದರೆನ್ನುವುದು ಕಲ್ಪನೆಗೂ ನಿಲುಕದ ಸಂಗತಿ. ಆ ಕೋಣೆಯಲ್ಲಾದರೂ ಏನಿತ್ತು ಮಲಗಲು ಒಂದೆರಡು ಹಾಸಿಗೆಗಳು, ಬರೆಯಲು ಸಣ್ಣ ಮೇಜು, ಅತಿಥಿಗಳಿಗಾಗಿ ಕೂಡಲು ಎರಡು ಕುರ್ಚಿಗಳು. ವಿಲಾಸಿ ಜೀವನವನ್ನು ನಡೆಸುತ್ತ ಸರಳತೆಯನ್ನು ಕೇವಲ ಉಪದೇಶವಾಗಿಟ್ಟುಕೊಂಡವರಿಗೆ ಎಚ್ಚೆನ್ ಅವರ ಸರಳ ಬದುಕು ಒಂದು ನೀತಿ ಪಾಠವಾಗುತ್ತದೆ.

ಡಾ.ಎಚ್ ಎನ್ ರವರಿಗೆ ಸಂಧ
ಪ್ರಶಸ್ತಿ-ಗೌರವಗಳು

ಅವರ ಸರಳತೇಯ ಹೋರಾಟ, ಸಮಾಜಿಕ ಚಿಂತನೆಯ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1968),ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನೀಡಿದ ತಾಮ್ರಪತ್ರ ಪ್ರಶಸ್ತಿ (1973), ಭಾರತ ಸರ್ಕಾರದ
ಪದ್ಮಭೂಷಣ ಪ್ರಶಸ್ತಿ (1984),
ಕಲ್ಬುರ್ಗಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ(1988), ದೇವರಾಜ ಅರಸು ಪ್ರಶಸ್ತಿ (1994) ಗಳು ದೊರೆಕಿವೆ. ಮತ್ತು
ಫೆಲೋಗಳಾಗಿರುವ ಕಮಿಟಿ ಫಾರ್ ದಿ ಸೈಂಟಿಪಿಕ್ ಇನ್ವೆಸ್ಟಿಗೇಷನ್ ಆಫ್ ದಿ ಕ್ಲೈಮ್ಸ್ ಆಫ್ ದಿ ಪ್ಯಾರಾ ನಾರ್ಮಲ್` ( Committee for Scientific Investigation of the claims of the Paranomal) ಸಂಸ್ಥೆಯು ಭಾರತದ ಏಕೈಕ ಫೆಲೋ ಎಂಬ ಗೌರವಕ್ಕೆ ಎಚ್ ಎನ್ ರವರು ಪಾತ್ರರಾಗಿದ್ದಾರೆ. 2004ರ ದಸರಾ ಮಹೋತ್ಸವದ ಉದ್ಘಾಟನೆ ಮಾಡುವ ಹಿರಿಮೆಗೆ ಭಾಜನರಾಗಿದ್ದಾರೆ . ಹೀಗೆ ಹತ್ತು ಹಲವು ಪ್ರಶಸ್ತಿ, ಗೌರವ, ಸನ್ಮಾನಗಳು ಸಂಧಿವೆ.

ಕೊನೆಯ ಮಾತು

ಎಚ್ಚೆನ್ ರವರ ನಿರ್ಮಲ ವ್ಯಕ್ತಿತ್ವ ಅದ್ಭುತ ಗುಣಗಳ ಒಂದು ಗಣಿ. ಕುಗ್ರಾಮವೊಂದರ ಅತ್ಯಂತ ಬಡತನದ ಕುಟುಂಬದಲ್ಲಿ ಹುಟ್ಟಿ ಬಂದ ಹಳ್ಳಿಯ ಹುಡುಗನೊಬ್ಬ ನಿರಂತರವಾದ ಸರಳತೆಯ,ಸಮಾಜಿಕ ಚಿಂತನೆಯ ಶ್ರಮದಿಂದ ಜೊತೆಗೆ ಅಚಲವಾದ ವಿಶ್ವಾಸದಿಂದ, ತನ್ನ ವೈಚಾರಿಕ ಮನೋಭಾವದಿಂದ ಅತ್ಯಂತ ಪ್ರತಿಭಾವಂತನಾಗಿ ಬೆಳೆದು ನಿಂತು ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿದ ಅಪ್ರತಿಮ ಸಾಧನೆ ನಮ್ಮಗೆಲ್ಲರಿಗೂ ಬೆರಗು ಹುಟ್ಟಿಸುತ್ತದೆ. ಜೊತೆಗೆ ಅವರ ಸರಳತೆಯ ಬದುಕು ಅನೇಕರಿಗೆ ಸ್ಪೂರ್ತಿಯ ಸೆಲೆಯಾಗುತ್ತದೆ.

ಮನುಷ್ಯ ಹೇಗೆ ಬದುಕಬೇಕೆನ್ನುವುದಕ್ಕೆ ಎಚ್ಚೆನ್ ಸದಾಕಾಲ ಮಾದರಿಯಾಗಿ ನಿಲ್ಲುತ್ತಾರೆ. ಎಚ್ಚೆನ್ ನಮಗೆಲ್ಲ ಇಷ್ಟವಾಗಲು ಅನೇಕ ಸಂಗತಿಗಳು ಕಾರಣವಾಗುತ್ತವೆ. ಅವರ ಸರಳ ಜೀವನ ಶೈಲಿ, ಅನನ್ಯ ರಾಷ್ಟ್ರ ಪ್ರೇಮ, ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಯ ಮೇಲಿನ ನಿಷ್ಠೆ, ಕಡು ಬಡತನದ ಬದುಕಿನೊಂದಿಗಿನ ಹೋರಾಟ, ಅವರಲ್ಲಿನ ಅಚಲವಾದ ಆತ್ಮವಿಶ್ವಾಸ, ವೈಚಾರಿಕ ಮನೋಭಾವ, ಬದುಕಿನ ಒಂದು ಭಾಗ ಎನ್ನುವಂತೆ ಬೆಳೆಸಿಕೊಂಡು ಬಂದ ನಿಷ್ಟೂರತೆ ಹೀಗೆ ಅನೇಕ ಕಾರಣಗಳಿಂದ ನರಸಿಂಹಯ್ಯನವರ ವ್ಯಕ್ತಿತ್ವ ನಮಗೆ ಆಪ್ತವಾಗುತ್ತದೆ.ಹಳ್ಳಿಯಿಂದ ಬಂದ ಅನಾಥ ಬಾಲಕ ನ್ಯಾಷನಲ್ ಹೈಸ್ಕೂಲಿನಲ್ಲಿ ಪ್ರವೇಶ ಪಡೆದು ತನ್ನ ಸ್ವಂತ ಪರಿಶ್ರಮದಿಂದ ಆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆರಿದ್ದು ಅವರ ಬದುಕಿನ ಮಹತ್ವದ ಸಾಧನೆಗಳಲ್ಲೊಂದು.

ವಿಶ್ವವಿದ್ಯಾಲಯದ ಉಪಕುಲಪತಿ, ಮೇಲ್ಮನೆಯ ಶಾಸಕ ಸ್ಥಾನ, ಕನ್ನಡ ಪ್ರಾಧಿಕಾರದ ಅಧ್ಯಕ್ಷತೆ, ಪದ್ಮಭೂಷಣ ಪ್ರಶಸ್ತಿ, ಗೌರವ ಡಾಕ್ಟರೇಟ್ ಈ ಎಲ್ಲವು ಎಚ್ಚೆನ್ ಅವರ ಪ್ರತಿಭೆಗೆ ಸಂದ ಗೌರವಗಳು. ಯಾವುದನ್ನೂ ಅವರು ಅಪೇಕ್ಷಿಸಿದವರಲ್ಲ. ಯಾವ ಪ್ರಶಸ್ತಿ, ಗೌರವಗಳ ಹಿಂದೆ ಬಿದ್ದವರಲ್ಲ. ಒಂದು ಪ್ರಶಸ್ತಿ, ಉನ್ನತ ಹುದ್ದೆ ದೊರೆತಾಗಲೂ ಅವರದು ನಿರ್ವಿಕಾರ ಭಾವ.

ತನ್ನದು ಎನ್ನುವ ಒಂದು ಕೌಟಂಬಿಕ ಚೌಕಟ್ಟನ್ನೂ ಕಟ್ಟಿ ಕೊಳ್ಳದ ವ್ಯಕ್ತಿಗೆ ಅನೇಕ ಸ್ಥಾನ ಮಾನಗಳು ಹುಡುಕಿಕೊಂಡು ಬಂದವು. ಪ್ರತಿಭೆ, ನಿರಂತರ ಪರಿಶ್ರಮ, ಪ್ರಾಮಾಣಿಕತೆ ಈ ಗುಣಗಳಿಂದ ಮನುಷ್ಯನೋರ್ವನ ಜೀವನದಲ್ಲಿ ಏನೆಲ್ಲ ಪವಾಡಗಳಾಗಬಹುದೆನ್ನುವುದಕ್ಕೆ ಎಚ್.ನರಸಿಂಹಯ್ಯನವರ ಸರಳತೆ ಬದುಕು, ಸಮಾಜಿಕ ಚಿಂತನೆಗಳು ಸಾಕ್ಷಿ ಹಾಗೂ ನಮಗೆಲ್ಲರಿಗೂ ಪ್ರೇರಣೆಯಾಗಿವೆ.

(ಲೇಖಕರು : ಸಂಗಮೇಶ ಎನ್ ಜವಾದಿ, ಕೊಡಂಬಲ.
ತಾಲೂಕು – ಚಿಟಗುಪ್ಪ, ಬೀದರ ಜಿಲ್ಲೆ.-9663809340.
Email I’d : snjawadi2009@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending