ಲೈಫ್ ಸ್ಟೈಲ್
ಕಾರಹುಣ್ಣೀಮೇಯ ಕರಿ ಹರಿಯಲು ಸಜ್ಜಾದ ಕರುನಾಡು
ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಕಾರಹುಣ್ಣಿಮೆ ಒಂದಾಗಿದೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಕೆಲ ಕಡೆ ಒಂದಷ್ಟು ಅವಘಡಗಳು ಸಂಭವಿಸಿದರೂ ಒಟ್ಟಾರೆ ಕಾರಹುಣ್ಣಿಮೆ ಹಬ್ಬ ರೈತಾಪಿ ವರ್ಗದ ಕಳೆಯೇರಿಸಿದ್ದಂತೂ ಹೌದು. ಉತ್ತರ ಕರ್ನಾಟಕದದಲ್ಲಿ ವಿಭಿನ್ನ, ಹಾಗೂ ರೈತರು ನಂಬಿಕೆಯಿಂದ ಕಾರ ಹುಣ್ಣಿಮೆ ಆಚರಿಸುವ ಪದ್ಧತಿ ತಲೆತಲಾಂತರದಿಂದ ಬಂದಿದೆ.
ಹಬ್ಬದ ಅಂಗವಾಗಿ ನಗರ ಹಾಗೂ ಹಳ್ಳಿಗಳಲ್ಲಿ ವಿವಿಧೆಡೆ ಎತ್ತುಗಳ ಕರಿ ಹರಿಯುವ ಮೂಲಕ ಕಡು ಬೇಸಿಗೆ ಕಳೆದು ಮುಂಗಾರು ಸ್ವಾಗತಿಸಲು ಈ ಹಬ್ಬ ಸಾಕ್ಷಿಯಾಗುತ್ತದೆ. ರೈತರು ತಮ್ಮ ಎತ್ತು ಹಾಗೂ ಹೋರಿಗಳ ಮೈ ತೊಳೆದು, ರೈತರು ವಿವಿಧ ಬಗೆ ಶೃಂಗಾರದ ವಸ್ತುಗಳನ್ನು ಹಾಕುತ್ತಾರೆ. ಇನ್ನು ಎತ್ತು, ಹೋರಿಗಳ ಕೊಂಬುಗಳಿಗೆ ಬಣ್ಣ ಬಳೆಯುತ್ತಾರೆ. ಜೊತೆಗೆ ಮೈಮೇಲೆ ವಿಶೇಷವಾದ ಚಿತ್ತಾರ ಬಿಡಿಸಿ ಮೆರವಣಿಗೆ ಮಾಡುತ್ತಾರೆ.
ಸಂಜೆ ಹಮ್ಮಿಕೊಳ್ಳುವ ಕರಿ ಹರಿಯುವ ಸಂರ್ಭಮದಲ್ಲಿ ಭಾಗವಹಿಸಿ ರೋಮಾಂಚನಗೊಳಿಸುತ್ತಾರೆ. ವರ್ಷವಿಡೀ ದುಡಿಯುವ ಎತ್ತುಗಳಿಗೆ ಮನರಂಜನಾ ಕೂಟವಾಗಿ ಕಾರಹುಣ್ಣಿಮೆಯ ಕರಿ ಹರಿವುವ ಕಾರ ಹುಣ್ಣಿಮೆ ನಿಮಿತ್ತ ವಿಶೇಷವಾಗಿ ಶೃಂಗಾರಗೊಂಡಿರುವ ಎತ್ತು ಹೋರಿಗಳಿಗೆ ವಿವಿಧ ಬಗೆಯ ಭಕ್ಷ್ಯಗಳಾದ ಹೋಳಿಗೆ, ಕಡುಬು ಖಾದ್ಯಗಳನ್ನು ಮಾಡಿ ಉಣಬಡಿಸುವ ಮೂಲಕ ಅನ್ನದಾತರು ತಮ್ಮ ಎತ್ತುಗಳ ಮೇಲಿನ ಅಭಿಮಾನ ಮೆರೆಯುತ್ತಾರೆ.
ಎತ್ತು ಹೋರಿಗಳಿಗೆ ಉಣಿಸುವ ಸಂಪ್ರದಾಯ ಉತ್ತರ ಕರ್ನಾಟಕದಾದ್ಯಂತ ರೂಢಿಯಲ್ಲಿದೆ. ಗ್ರಾಮದ ರೈತರು ಹಾಗೂ ಯುವಕರು ಶೃಂಗರಿಸಿ ತಂದಿದ್ದ ತಮ್ಮ ಎತ್ತುಗಳನ್ನು ಸಾಲು ಸಾಲಾಗಿ ಓಡಿಸಿ ಸಂಭ್ರಮಪಡುತ್ತಾರೆ. ನಂತರ ರೈತರು ಮನೆಗೆ ಬಂದಾಗ ಅವುಗಳಿಗೆ ಆರತಿ ಎತ್ತಿ ಖುಷಿ ಪಟ್ಟರು. ಇದರ ಅಂಗವಾಗಿ ನಗರದ ಸುತ್ತ-ಮುತ್ತಲಿರುವ ವಿವಿಧ ಹಳ್ಳಿಯ ಜನರು ಎತ್ತುಗಳ ಕರಿ ಹರಿಯುವ ವಿಶಿಷ್ಠ ಆಚರಣೆಗೆ ನೂರಾರು ರೈತರು, ಗ್ರಾಮದ ಮಹಿಳೆಯರು ಹಾಗೂ ಯುವಕರು ಸಾಕ್ಷಿಯಾಗುತ್ತಾರೆ.
ಇದಕ್ಕೂ ಮೊದಲು ಮಹಿಳೆಯರು ಕಾರ ಹುಣ್ಣಿಮೆ ನಿಮಿತ್ತ ವಿಶೇಷ ಪೂಜೆ ನೆರವೇರಿಸಿ, ಈ ವರ್ಷನಾದ್ರೂ ಉತ್ತಮ ಮಳೆ-ಬೆಳೆ, ಸಿರಿ-ಧಾನ್ಯ ಸಂಪತ್ತು ಉತ್ತಮ ರೀತಿಯಲ್ಲಿ ನೀಡಿ ನಮ್ಮನ್ನು ಉದ್ದರಿಸು ಎಂದು ಭೂ ತಾಯಿ ಹಾಗೂ ಗೋಮಾತೆಯಲ್ಲಿ ಮೊರೆಯಿಡುತ್ತಾರೆ. ಅಲ್ಲದೆ ಸಮೀಪದ ಅರಳಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಂಗಾರನ್ನು ಬರಮಾಡಿಕೊಳ್ಳುತ್ತಾರೆ. ಕಾರಹುಣ್ಣಿಮೆ ದಿನದಂದು ಎತ್ತು, ಹೋರಿಗಳಿಗೆ ಕೃಷಿ ಚಟುವಟಿಕೆ ಯಿಂದ ವಿರಾಮ ನೀಡಲಾಗಿರುತ್ತೆ. ಹಬ್ಬದ ಅಂಗವಾಗಿ ಮನೆಯಲ್ಲಿ ತಯಾರಿಸಿದ ವಿಶೇಷ ಸಿಹಿ ಖಾದ್ಯಗಳನ್ನು ಸವಿದು ಸಂಭ್ರಮ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿ ಆಕರ್ಷಣೆಯಾಗಿರುತ್ತದೆ.
ಕಾರಹುಣ್ಣಿಮೆಯ ಉದ್ದೇಶ
ಕಾರಹುಣ್ಣಿಮೆ ದಿನದಂದು ಪ್ರಮುಖವಾಗಿ ಎತ್ತು, ಹೋರಿಗಳೇ ಆಕರ್ಷಣೆಯಾಗಿರುತ್ತವೆ.
ಕಾರ ಹಬ್ಬದ ವಿಶೇಷತೆಯಲ್ಲಿ ಕರಿ ಹರಿಯುವ ಕಾರ್ಯಕ್ರಮವೂ ಒಂದು. ಕಾರಹುಣ್ಣಿಮೆಯಂದು ಸಂಜೆಯಾಗುತ್ತಿದಂತೆ ಕರಿ ಹರಿಯುವ ಸಮಾರಂಭ ಹಮ್ಮಿಕೊಳ್ಳಲಾಗಿರುತ್ತೆ. ಊರ ಅಗಸಿಯಲ್ಲಿ ಬೇವಿನ ತಪ್ಪಲಿನ ತೋರಣದ ನಡುವೆ ಕೊಬ್ಬರಿ, ಶೇಂಗಾ, ಬೆಲ್ಲ, ಪುಟ್ಟಾಣಿ, ಚುರುಮುರಿ, ಉತ್ತತ್ತಿ ಹಾಗೂ ಕಲ್ಲುಸಕ್ಕರೆಯನ್ನು ಕಟ್ಟಲಾಗಿರುತ್ತೆ.
ಕರಿ ಹರಿಯಲು ಬಿಳಿ, ಹಾಗೂ ಕೆಂದು ಬಣ್ಣದ ಎತ್ತುಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ. ಹಲಗೆ ಸದ್ದು ಮಾಡುತ್ತಿದ್ದಂತೆ ಅಗಸಿ ಎದುರಿಗೆ ಕರಿ ಹರಿಯಲು ಎತ್ತುಗಳೊಂದಿಗೆ ರೈತರು ತಾ ಮುಂದು ನೀ ಮುಂದು ಎಂದು ಎತ್ತುಗಳನ್ನು ಓಡಿಸಿಕೊಂಡು ಬಂದು ಕರಿ ಹರಿಯುತ್ತಾರೆ. ಕರಿಯುವ ಓಟದಲ್ಲಿ ಇತರೆ ರೈತರು ಕೇಕೆ ಹಾಕಿ ಉತ್ಸಾಹ ತುಂಬುತ್ತಾರೆ. ಯಾವ ಬಣ್ಣದ ಎತ್ತು ಕರಿಹರಿಯುತ್ತೋ ಆ ಬಣ್ಣದ ಬೆಳೆ ಚೆನ್ನಾಗಿ ಬರುತ್ತೆ ಅನ್ನುವ ನಂಬಿಕೆ ರೈತರದ್ದಾಗಿದೆ.
ಈ ಬಾರಿಯ ಕಾರಹುಣ್ಣಿಮೆ ಹಬ್ಬದಂದು ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಕಾರಹುಣ್ಣಿಮೆ ಕರಿ ಹರಿಯುವ ಸಂಪ್ರದಾಯದ ನಡೆಸಲು ಎಲ್ಲ ಜನರು ಎತ್ತುಗಳ ಓಟದ ಕರಿ ಹಬ್ಬಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಸಾಕ್ಷಿಯಾಗಲು ಕಾತುರರಾಗಿದ್ದಾರೆ. ಈ ಬಾರಿ, ಓಟದಲ್ಲಿ ಯಾವ ಬಣ್ಣದ ಎತ್ತು ಮೊದಲ ಸ್ಥಾನದಲ್ಲಿ ಓಡಿ ಬಂದು ಕರಿ ಹರಿಯಲಿದೆ ಎನ್ನುವುದೆ ಒಂದು ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ಬಿಳಿ ಎತ್ತು ಮೊದಲು ಕರಿ ಹರಿದ್ರೆ ಬಿಳಿಜೋಳ, ಅಂದರೆ ಹಿಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ.
ಇನ್ನು ಕೆಂದು ಬಣ್ಣದ ಕರಿ ಹರಿದ್ರೆ ಮುಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ ಯನ್ನು ರೈತರು ಹೊಂದಿದ್ದಾರೆ. ಯಾವ ಬಣ್ಣದ ಎತ್ತು ಮೊದಲು ಬರುತ್ತದೆವೋ ಆ ಬೆಳೆ ಬಿತ್ತಲೂ ಕಾತೂರರಾಗಿದ್ದಾರೆ. ಇತ್ತ ಎತ್ತುಗಳು ಒಂದೆಡೆ ಕಂಡು ಬಂದ್ರೆ, ಸಾಲು ಸಾಲಾಗಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ರೈತ್ರು ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಮೊದಲು ಕರಿ ಹರಿದ ಎತ್ತಿಗೆ ರೈತರೆಲ್ಲರೂ ಸೇರಿ ಮೆರವಣಿಗೆ ಮಾಡುತ್ತಾರೆ.
ಕೆಲವು ಕಡೆಗಳಲ್ಲಿ ಕರಿ ಹರಿದ ಬಳಿಕ ಗುಂಡು ಎತ್ತುವ ಸ್ಪರ್ಧೆ ಏರ್ಪಡಿಸಲಾಗಿರುತ್ತೆ. ವರ್ಷವಿಡೀ ಕೃಷಿಯಲ್ಲಿ ತೊಡಗಿದ ರೈತರು ದೈಹಿಕ ಕಸರತ್ತು ನಡೆಸುವ ಮೂಲಕ ಕ್ರೀಡಾ ಮನೋಭಾವ ಮೆರೆಯುತ್ತಾರೆ. ಆನಂತರ ಶಕ್ತಿ ದೇವತೆಗಳ ದೇಗುಲಗಳಿಗೆ ತೆರಳಿ ರೈತರು ಮಳೆ ಕುರಿತಾಗಿ ದೇವರ ಹೇಳಿಕೆಯನ್ನು ಕೇಳುತ್ತಾರೆ. ಒಟ್ಟಿನಲ್ಲಿ ಕಾರಹುಣ್ಣಿಮೆ ಎಂದರೆ ರೈತರ- ಎತ್ತುಗಳ ಹಬ್ಬ ಅಂತಾನೆ ಫೇಮಸ್..
ಇನ್ನು ಕಪ್ಪು ಬಣ್ಣದ ಎತ್ತು ಅಪಶಕುನ ಎನ್ನುವ ಕಾರಣಕ್ಕೆ ಕರಿ ಹರಿಯಲು ಕಪ್ಪು ಬಣ್ಣದ ಎತ್ತನ್ನು ಓಟಕ್ಕೆ ಬಿಡುವುದಿಲ್ಲ.ಇನ್ನೊಂದು ನಂಬಿಕೆ ಎಂದರೆ ಕರಿ ಹರಿದ ಎತ್ತು ಕೈಗೆ ಸಿಗದೆ ಊರಿನ ಸೀಮೆ ದಾಟಿ ಹೋದರೆ ಕರಿ ಹರಿಯುದನ್ನು ನಿಷೇಧಿಸಿ ಕಾರಹುಣ್ಣಿಮೆ ಹಬ್ಬವನ್ನು ಕೈಬಿಡುತ್ತಾರೆ. ಒಟ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ-ಬೆಳೆ ಚೆನ್ನಾಗಿ ಬರಲಿ ಎನ್ನುವ ಬರವಸೆಯಲ್ಲಿ ಕಾಯುತ್ತಿದ್ದಾರೆ. ಈ ವರ್ಷನಾದ್ರು ಭೂತಾಯಿ ಹಾಗೂ ವರುಣದೇವರಿಬ್ಬರೂ ಸೇರಿ ರೇತನ ದುಖಃದ ಬದುಕು ಬವಣೆಯನ್ನು ನೀಗಿಸಲಿ ಎಂದು ಆಶಿಸುತ್ತೇವೆ.
- ಕಾರಹುಣ್ಣಿಮೆ ಹಬ್ಬ ಆಚರಿಸಲು ನಮಗೆ ತುಂಬಾ ಸಂತೋಷ ಇದೆ. ನಾನು ನಮ್ಮ ಎತ್ತುಗಳನ್ನು ಸಹ ಓಟಕ್ಕೆಂದು ಸಿಂಗಾರ ಮಾಡಿ ತಯಾರಿ ಮಾಡುತ್ತಿದ್ದೆವೆ. ಆದರೆ ವರ್ಷದಿಂದ ವರ್ಷಕ್ಕೆ ಮಳೆ ಬೆಳೆ ಕಡಿಮೆಯಾಗಿದೆ. ಈ ವರ್ಷನಾದ್ರು ದೇವರು ಉತ್ತಮ ಮಳೆ ಕೊಡುತ್ತಾನೆನೋ ಎನ್ನುವ ಬರವಸಲೆಯಲ್ಲಿ ಅನ್ನದಾತ ಕಾಯುತ್ತಿದ್ದಾನೆ. ಅನ್ನದಾತ ಪ್ರತಿವರ್ಷವು ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಇದು ಈ ವರ್ಷ ಕಡಿಯಾಗುತ್ತದೆ ಎಂದು ನಂಬಿದ್ದವೆ.
|ಸಂಗಪ್ಪ. ಚಂ. ಮೇತ್ರಿ (ವಿಜಯಪುರ ರೈತ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ19 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ



