ದಿನದ ಸುದ್ದಿ

ಪ್ರಮುಖ ಸಂಕ್ಷಿಪ್ತ ಸುದ್ದಿಗಳು

Published

on

ಪ್ರಮುಖ ಸಂಕ್ಷಿಪ್ತ ಸುದ್ದಿಗಳು

  1. ರಾಜ್ಯದಲ್ಲಿ ಸಹಕಾರ ಕ್ಷೇತ್ರ ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹ ಕೆಲಸ ಮಾಡಿಕೊಂಡು ಬರುತ್ತಿದೆ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲಗಳಾಗುತ್ತಿವೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಬೆಳಗಾವಿಯಲ್ಲಿಂದು ಹೇಳಿದ್ದಾರೆ. ಸಹಕಾರ ಇಲಾಖೆ ಸುಮಾರು 60 ಸಾವಿರ ಉದ್ಯೋಗಿಗಳ ಹೊಂದಿದ್ದು, ಬೃಹದಾಕಾರವಾಗಿ ಬೆಳೆಯುತ್ತಿದೆ. ಠೇವಣಿ ಹಣ ದುರುಪಯೋಗ ಪಡಿಸಿಕೊಳ್ಳುವ ಸಹಕಾರಿ ಬ್ಯಾಂಕ್‌ಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದ್ದಾರೆ.
  2. ಒತ್ತುವರಿದಾರರಿಗೆ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ಕಂದಾಯ ಸಚಿವ ಆರ್. ಅಶೋಕ್ ಏಪ್ರಿಲ್ ೨೮ ರಂದು ಚಿಕ್ಕಮಗಳೂರು ನಗರದಲ್ಲಿ ಪ್ರಕಟಿಸಲಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
  3. ಎಸ್.ಎಸ್.ಎಲ್.ಸಿ. ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ 22ರಿಂದ 30 ರವರೆಗೆ ಗದಗ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕಾರ್ಯಗಳು ಸುಗಮವಾಗಿ ನಡೆಯಲು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರ ಸುತ್ತಲಿನ 200 ಮೀಟರ್ ಪ್ರದೇಶ ನಿಷೇಧಿತ ಪ್ರದೇಶವೆಂದು ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  4. ಯಾದಗಿರಿ ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇದೇ ಏಪ್ರಿಲ್ 23 ರಿಂದ ನಡೆಸಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟು 10,428ವಿದ್ಯಾರ್ಥಿಗಳು ಬರೆಯಲಿದ್ದು, ಅಗತ್ಯ ಸಿದ್ಧತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಯಾದಗಿರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ್ ಜಿ.ಹಿಳ್ಳಿ ಅವರು ಆಕಾಶವಾಣಿಗೆ ಮಾಹಿತಿ ನೀಡಿದ್ದಾರೆ.
  5. ಆಜಾದಿ ಕಾ ಅಮೃತ್ ಮಹೋತ್ಸವ ರಾಷ್ಟ್ರೀಯ ಜಾಗೃತಿ, ಉತ್ತಮ ಆಡಳಿತದ ಕನಸು ನನಸಾಗಿಸುವ, ಜಾಗತಿಕ ಶಾಂತಿ ಹಾಗೂ ಅಭಿವೃದ್ಧಿಯ ಹಬ್ಬವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ನವದೆಹಲಿಯಲ್ಲಿಂದು ಹೇಳಿದ್ದಾರೆ. ಅಮೃತ ಮಹೋತ್ಸವದಡಿ ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಎಂಟು ಸಾವಿರದ 616 ಕಾರ್ಯಕ್ರಮ ನಡೆಸಿದ್ದರೆ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಒಂಬತ್ತು ಸಾವಿರದ 516ಕಾರ್ಯಕ್ರಮ ಆಯೋಜಿಸಿವೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version