ದಿನದ ಸುದ್ದಿ

ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ

Published

on

ಸುದ್ದಿದಿನ,ದಾವಣಗೆರೆ : ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು    ( monkeypox virus ) ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ( Chief Minister Basavaraj Bommai) ಹೇಳಿದರು.

ಸೋಮವಾರ ದಾವಣಗೆರೆಯಲ್ಲಿ ( Davangere ) ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಂಕಿಪಾಕ್ಸ್ ಸೋಂಕು ತಡೆಯುವ ಕುರಿತಂತೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಮಂಕಿಪಾಕ್ಸ್ ಕುರಿತಂತೆ ಕೆಲವು ನಿರ್ದೇಶನಗಳನ್ನು ಜಾರಿ ಮಾಡಲು ಹಾಗೂ ಪ್ರಯೋಗಾಲಯ ಸಿದ್ಧತೆ ಕುರಿತಂತೆ ನಾಳೆ ಬೆಂಗಳೂರಿನಲ್ಲಿ ( Bangalore) ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆಯಲಾಗಿದ್ದು ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ | ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ; ಮೇಲ್ವಿಚಾರಣೆಗೆ ಕಾರ್ಯಪಡೆ ರಚನೆ

ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಜಿ.ಎಂ ಸಿದ್ದೇಶ್ವರ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸಚಿವ ಡಾ.ಕೆ ಸುಧಾಕರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ ರಾಮಚಂದ್ರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಸುದ್ದಿದಿನ‌.ಕಾಂ|ವಾಟ್ಸಾಪ್|9980346243

Trending

Exit mobile version