Connect with us

ದಿನದ ಸುದ್ದಿ

ಕೊರೊನಾ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ನಿಂತಿದೆ : ಸಚಿವ ಭೈರತಿ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ :1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೊರೊನಾದಂತಹ ಸಂದರ್ಭವನ್ನೂ ದೇಶ ಸಮರ್ಥವಾಗಿ ಎದುರಿಸಿ ಜನರ ನೆರವಿಗೆ ಸರ್ಕಾರ ನಿಂತಿದೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ನುಡಿದರು.

ಜಿಲ್ಲಾಡಳಿತ ವತಿಯಿಂದ ಜ.26 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರೆವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು.

ಮಹಾತ್ಮಾ ಗಾಂಧಿ, ನೆಹರೂ, ಜವಹರಲಾಲ್, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ರಂಥ ನಾಯಕರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದ ಸ್ವಾತಂತ್ರ್ಯ ಸತ್ಯ-ಶಾಂತಿ ಹಾಗೂ ಅಹಿಂಸೆಯಿಂದ ಪ್ರೇರಿತ ಗೊಂಡದ್ದಾಗಿದೆ. ಈ ಹಿನ್ನೆಲೆಯಲ್ಲಿ ಅಸ್ತಿತ್ವಕ್ಕೆ ಬಂದ ಭಾರತಕ್ಕೆ ಈಗ 74 ರ ಹರೆಯ. ಭಾರತಕ್ಕೆ ಸಂವಿಧಾನ ಪ್ರಾಪ್ತವಾಗಿ 72 ವರ್ಷಗಳು ಸಂದದ್ದೂ ಅವಿಸ್ಮರಣೀಯ.

ಸಂವಿಧಾನದ ಕರಡು ರಚನಾ ಸಮಿತಿಯಲ್ಲಿ ಡಾ|| ಅಂಬೇಡ್ಕರ್ ಅವರ ಪಾತ್ರ ಮಹತ್ತರವಾಗಿತ್ತು. ತಮ್ಮ ಪಾತ್ರವನ್ನು ಸಂಪೂರ್ಣವಾಗಿ ನಿರ್ವಹಿಸುವಲ್ಲಿ ಅಂಬೇಡ್ಕರ್ ಅವರಿಗೆ ಹಲವಾರು ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿದ ಅನುಭವ ನೆರವಾಯಿತು. ಡಾ|| ಅಂಬೇಡ್ಕರ್‍ರವರ ಸೇವೆಗೆ ದೊರೆತ ಮನ್ನಣೆಗೆ ಇವರನ್ನು “ಸಂವಿಧಾನದ ಪಿತಾಮಹ” ಎಂದು ನಾವು ಸ್ಮರಿಸುವಂತಾಗಿದೆ.

ಗಣರಾಜ್ಯವಾದ ತರುವಾಯ ದಾವಣಗೆರೆ ಜಿಲ್ಲೆಯು ಅನೇಕ ಬೆಳವಣಿಗೆಯನ್ನು ಕಂಡಿದೆ. ಈ ಜಿಲ್ಲೆಯ ಇತಿಹಾಸ ನೋಡುವುದಾದರೆ ದಾವಣಗೆರೆ ಜಿಲ್ಲೆಯು ಭೌಗೋಳಿಕವಾಗಿ ಧಾರವಾಡ ಶಿಲಾ ಪದರಿನ ವಿನ್ಯಾಸದ ಮೇಲೆ ರಚನೆಗೊಂಡಿದ್ದು, ಆಗಸ್ಟ್ 15, 1997 ರಲ್ಲಿ ನೂತನ ಜಿಲ್ಲೆಯಾಗಿ ರೂಪುಗೊಂಡಿತು.

2020 ರ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಜಗತ್ತೇ ತಲ್ಲಣಿಸುವಂತೆ ಮಾಡಿದ ಸಂದರ್ಭದಲ್ಲಿ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಕಟ್ಟಿಹಾಕಲು ಕಾರ್ಯೋನ್ಮುಖವಾಗಿ ಮಾಡಿದ ವ್ಯವಸ್ಥಿತ ಹೋರಾಟದ ಫಲವಾಗಿ ಇಂದು ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಇದಕ್ಕಾಗಿ ಶ್ರಮಿಸಿದ ಜಿಲ್ಲಾಡಳಿತದ ಕಾರ್ಯವನ್ನು ಶ್ಲಾಘಿಸುತ್ತೇನೆ. ಸಾವಿರ ಸಂಖ್ಯೆಯಲ್ಲಿದ್ದ ಕೊರೊನಾ ಪ್ರಕರಣಗಳು ಇಂದು ಎರಡಂಕಿಗೆ ಬಂದಿವೆ.. ಇದೇ ಸಂದರ್ಭದಲ್ಲಿ ಸಂಜೀವಿನಿಯಂತೆ ಬಂದಿರುವ ಲಸಿಕೆ ನಮ್ಮಲ್ಲಿ ಮತ್ತಷ್ಟು ಹುಮ್ಮಸ್ಸನ್ನು ತುಂಬಿದೆ. ಈ ಲಸಿಕೆ ಅಭಿಯಾನವು ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.

ಕೊರೊನಾ ಸಂದರ್ಭದಲ್ಲಿ ನಮ್ಮ ಸರ್ಕಾರ ಎಲ್ಲ ಜನ ವರ್ಗಗಳ ಶ್ರೇಯೋಭಿವೃದ್ದಿಗಾಗಿ ಕಂಕಣಬದ್ದವಾಗಿ ಶ್ರಮಿಸಿ, ರೈತರು, ಕಾರ್ಮಿಕರು, ನೇಕಾರರು ಸೇರಿದಂತೆ ದುಡಿಯುವ ವರ್ಗಗಳ ನೆರವಿಗೆ ನಿಂತಿದ್ದು, ಇದೇ ಸಂದರ್ಭದಲ್ಲಿ ಅತಿವೃಷಿಯಿಂದಾದ ಬೆಳೆ, ಮನೆ, ಜಾನುವಾರು ಹಾನಿಗಳಿಗೆ ಪರಿಹಾರವನ್ನು ನೀಡಿ ಎಲ್ಲರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಕೋವಿಡ್-19ರ ಹೋರಾಟದಲ್ಲಿ ಸೇನಾನಿಗಳಾಗಿ ಕಾರ್ಯನಿರ್ವಹಿಸಿ ಮೃತಪಟ್ಟ ನಾಲ್ಕು ಪೊಲೀಸರ ಕುಟುಂಬಗಳಿಗೆ ತಲಾ 30 ಲಕ್ಷದಂತೆ ಪರಿಹಾರ ನೀಡಲಾಗಿದೆ.

ಮಹನೀಯರೇ, ಜನಸಮಾನ್ಯರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಕೊಳ್ಳುತ್ತಿದ್ದು, ಸರ್ಕಾರದ ಉತ್ತಮ ಕಾರ್ಯಗಳಿಗೆ ಸಾರ್ವಜನಿಕರು ಒತ್ತಾಸೆಯಾಗಿ ನಿಲ್ಲಬೇಕು ಮತ್ತು ಅವುಗಳ ಸಂಪೂರ್ಣ ಲಾಭವನ್ನು ವೈಯಕ್ತಿಕವಾಗಿ ಮತ್ತು ಸಮಷ್ಠಿಯಾಗಿ ಪಡೆಯಬೇಕು ಎಂದು ವಿನಂತಿಸುತ್ತೇನೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ 2020-21 ನೇ ಸಾಲಿನಲ್ಲಿ 826 ಮಿಮೀ ಮಳೆಯಾಗಿದ್ದು ಶೇ.25 ರಷ್ಟು ಹೆಚ್ಚು ಮಳೆಯಾಗಿರುತ್ತದೆ. 2020-21 ನೇ ಸಾಲಿನಲ್ಲಿ ಇದುವರೆಗೂ ವಿವಿಧ ಬೆಳೆಗಳ ವಿವಿಧ ತಳಿಗಳ 17070 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ.

2019-20 ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಶೇಂಗಾ ಬೆಳೆಯಲ್ಲಿ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದ ರಮೇಶಪ್ಪ ಕೆ ಇವರು ಪ್ರಥಮ ಸ್ಥಾನ ಹಾಗೂ ನಾಗರಾಜಪ್ಪ ಇವರು ದ್ವಿತೀಯ ಸ್ಥಾನ ಮತ್ತು ಭತ್ತ (ನೀರಾವರಿ) ಬೆಳೆಯಲ್ಲಿ ಹರಿಹರ ತಾಲ್ಲೂಕಿನ ಧೂಳೆಹೊಳೆಯ ರಮೇಶ್ ಜಿ. ಎನ್. ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಜಿಲ್ಲೆಯಲ್ಲಿ ಕೋವಿಡ್‍ನ್ನು ಎಲ್ಲರ ಸಹಕಾರದಿಂದ ದಿಟ್ಟವಾಗಿ ಎದುರಿಸಲಾಗಿದ್ದು, ಪಾಸಿಟಿವಿಟಿ ದರವು 0.6% ಇರುತ್ತದೆ. ಕೋವಿಡ್-19 ಸೋಂಕು ಹೊಂದಿದ ರೋಗಿಗಳಿಗೆ 240 ಹಾಸಿಗೆಗಳ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್-19 ಸೋಂಕು ಹೊಂದಿದ ರೋಗಿಗಳಿಗೆ 20 ಹಾಸಿಗೆಗಳ ವೈದ್ಯಕೀಯ ತೀವ್ರ ನಿಗಾ ಘಟಕದ ವ್ಯವಸ್ಥೆ ಮಾಡಲಾಗಿದೆ. 6000 ಲೀಟರ್ ಸಾಮಥ್ರ್ಯದ ಮೆಡಿಕಲ್ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್-19 ರೋಗಿಗಳಿಗೆ ದಿನದ 24 ಗಂಟೆ ಆಕ್ಸಿಜನ್ ವ್ಯವಸ್ಥೆ ದೊರೆಯುವಂತೆ ಮಾಡಲಾಗಿದೆ. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ರೋಗ ಪತ್ತೆಗಾಗಿ ದಿನಕ್ಕೆ ಒಂದು ಸಾವಿರ ಪರೀಕ್ಷಾ ಪ್ರಯೋಗಗಳ ವ್ಯವಸ್ಥೆ ಇರುವ ಸುಸಜ್ಜಿತ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯವನ್ನು ಸ್ಥಾಪಿಸಿದ್ದು, ಇಲ್ಲಿಯವರೆಗೆ 1 ಲಕ್ಷದ 40 ಸಾವಿರ ಪ್ರಯೋಗಗಳನ್ನು ಮಾಡಿದ್ದು, ಅದರಿಲ್ಲಿ 5429 ಪಾಸಿಟೀವ್ ಪ್ರಕರಣಗಳು ದಾಖಲಾಗಿವೆ.

ಲಾಕ್‍ಡೌನ್ ವೇಳೆಯಲ್ಲಿ ಸರ್ಕಾರ ವಿವಿಧ ಯೋಜನೆಗಳಡಿ ಸಂತ್ರಸ್ತರಿಗೆ ಪರಿಹಾರ ನೀಡಿ ಸಂತ್ರಸ್ತರ ನೆರವಿಗೆ ನಿಂತಿದ್ದು, ಮೆಕ್ಕೆಜೋಳ ಬೆಳೆದ 66148 ರೈತರಿಗೆ ರೂ. 33.7 ಕೋಟಿ, ಹೂ, ಹಣ್ಣು ಹಾಗೂ ತರಕಾರಿ ಬೆಳೆದ 4199 ರೈತರಿಗೆ 3. 97 ಕೋಟಿ, ಕಟ್ಟಡ ಕಾರ್ಮಿಕರಿಗೆ ರೂ. 45.90 ಕೋಟಿ, 1438 ಕ್ಷೌರಿಕರು ಹಾಗೂ 2200 ಅಗಸರು ಒಟ್ಟು 3638 ಫಲಾನುಭವಿಗಳಿಗೆ 1.81 ಕೋಟಿ ಮತ್ತು 5159 ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರೂ. 2,57,95,000/- ಸಹಾಯಧನ ವಿತರಿಸಲಾಗಿರುತ್ತದೆ.

ಲಾಕ್‍ಡೌನ್ ವೇಳೆ ನಗರ ಸ್ಥಳೀಯ ಸಂಸ್ಥೆ ವತಿಯಿಂದ 5.73 ಲಕ್ಷ ಲೀಟರ್ ಹಾಲು ವಿತರಣೆ ಮಾಡಲಾಗಿರುತ್ತದೆ. 13.19 ಲಕ್ಷ ರ 583 ಪಡಿತರ ಚೀಟಿದಾರರಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ 6979 ವಲಸೆ ಕಾರ್ಮಿಕರು, ಅಲೆಮಾರಿಗಳು, ಸಂಕಷ್ಟದಲ್ಲಿದ್ದ ಪಡಿತರಚೀಟಿರಹಿತ ಕುಟುಂಬಗಳು, ಭಿಕ್ಷುಕರು, ತೃತೀಯ ಲಿಂಗಿಗಳಿಗೆ ರೂ. 67.69 ಮೊತ್ತದ ಆಹಾರ ಕಿಟ್‍ಗಳನ್ನು ನೀಡಲಾಗಿರುತ್ತದೆ.

ಗ್ರಾಮವಿಕಾಸ ಯೋಜನೆಯಡಿ ದಾವಣಗೆರೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರದ 27 ಗ್ರಾಮಗಳನ್ನು ಆಯ್ಕೆ ಮಾಡಿ, ರೂ. 14.19 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿರುತ್ತದೆ. ಹಾಗೂ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಒಟ್ಟು 25 ಗ್ರಾಮಗಳು ಆಯ್ಕೆಯಾಗಿದ್ದು, ಪ್ರತಿ ಗ್ರಾಮಕ್ಕೆ ರೂ. 1 ಕೋಟಿಯಂತೆ ನಿಗದಿಯಾಗಿದ್ದು ಈವರೆಗೆ ಸರ್ಕಾರದಿಂದ ರೂ. 13.87 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 28 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡು ಕಾರ್ಯಾಚರಣೆÉಯಲ್ಲಿವೆ.

ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿನ 1723 ಅಂಗನವಾಡಿ ಕೇಂದ್ರಗಳ ಮುಖಾಂತರ 6 ತಿಂಗಳಿಂದ 6 ವರ್ಷ ಒಳಪಟ್ಟ 1,11,264 ಫಲಾನುಭವಿಗಳಿಗೆ ಪ್ರತಿ ತಿಂಗಳು ಕೆನೆಸಹಿತ ಹಾಲಿನ ಪುಡಿ ವಿತರಿಸಲಾಗುತ್ತಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ 2020-21ನೇ ಸಾಲಿಗೆ 5068 ಹೆಣ್ಣು ಮಕ್ಕಳಿಗೆ ತಲಾ ರೂ.1 ಲಕ್ಷ ಮೌಲ್ಯದ ಭಾಗ್ಯಲಕ್ಷ್ಮಿ ಬಾಂಡ್‍ಗಳನ್ನು ಒದಗಿಸಲಾಗಿದೆ.

ಕೋವಿಡ್ 19 ರ ಪ್ರಯುಕ್ತ ಮಾರ್ಚ್-2020 ರಿಂದ ಇಲ್ಲಿಯವರೆಗೆ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿಲಾಗಿದ್ದು, ಈ ಅವಧಿಯಲ್ಲಿ ಎಲ್ಲಾ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರಿಂದ ಹಾಲಿನ ಪುಡಿ, ಮೊಟ್ಟೆ, ಅಕ್ಕಿ, ಗೋಧಿ, ಹೆಸರುಕಾಳು, ಶೇಂಗಾ ಬೀಜ, ಮಸಾಲೆ ಪುಡಿ, ಸಕ್ಕರೆ ಹಾಗೂ ಇತರೆ ಆಹಾರ ಪದಾರ್ಥಗಳನ್ನು ಕಿಟ್ ರೂಪದಲ್ಲಿ ಫಲಾನುಭವಿಗಳ ಮನೆ-ಮನೆಗೆ ವಿತರಿಸಲಾಗುತ್ತಿದೆ. ಅಲ್ಲದೇ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣೆಯನ್ನು ಸಹ ಮಾಡಿಸಲಾಗುತ್ತಿದೆ.

2019-20ನೇ ಸಾಲಿನಲ್ಲಿ ಡಾ|| ಬಿ.ಆರ್.ಅಂಬೇಡ್ಕರ್, ಡಾ|| ಬಾಬು ಜಗಜೀವನ್ ರಾಂ ಸಮುದಾಯ ಭವನಗಳ ನಿರ್ಮಾಣ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಗೆ ಒಟ್ಟು 29 ಭವನಗಳ ನಿರ್ಮಾಣಕ್ಕೆ ರೂ.404 ಲಕ್ಷಗಳ ಮಂಜೂರಾತಿಯೊಂದಿಗೆ ಕೇಂದ್ರ ಕಛೇರಿಯಿಂದ ಮೊದಲನೇ ಕಂತಾಗಿ ಬಿಡುಗಡೆ ಮಾಡಲಾದ ರೂ.121.20 ಲಕ್ಷಗಳ ಅನುದಾನ ವೆಚ್ಚ ಭರಿಸಲಾಗಿರುತ್ತದೆ.

2018-19ಸಾಲಿನಲ್ಲಿ ಸ್ವಯಂ ಉದ್ಯೋಗದ ವಿವಿಧ ಕಾರ್ಯಕ್ರಮಗಳಿಗೆ (ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ / ಮೇಕೆ ಘಟಕ,ಸರಕು ಸಾಗಾಣಿಕೆ ವಾಹನ, ಮೊಲ ಸಾಕಾಣಿಕೆ) ಜಿಲ್ಲೆಗೆ ಒಟ್ಟು 164 ಫಲಾನಭವಿಗಳಿಗೆ ಆಯ್ಕೆ ಮಾಡಿ ರೂ. 127.00 ಲಕ್ಷಗಳನ್ನು ಬಿಡುಗಡೆ ಮಾಡಿ ಫಲಾನುಭವಿಗಳಿಗೆ ಚೆಕ್ ಮೂಲಕ ವಿತರಿಸಲಾಗಿದೆ. ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳ ವಿವಾಹವಾದ ಪರಿಶಿಷ್ಟ ಪಂಗಡದ ಪ್ರತಿ ಜೋಡಿಗೆ ರೂ. 50,000/-ಗಳಂತೆ ಒಟ್ಟು 178 ಜೋಡಿಗಳಿಗೆ 89 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಲಾಗಿರುತ್ತದೆ.

‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ (ಎನ್.ಹೆಚ್.ಎಂ.) ಅಡಿಯಲ್ಲಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಕಲ್ಪಿಸಲಾಗುವುದು ಹಾಗೂ ಸಂಸ್ಕರಣಾಘಟಕ, ಪ್ಯಾಕ್ ಹೌಸ್‍ಗಳು, ಹಣ್ಣು ಮಾಗಿಸುವ ಘಟಕ, ಹಸಿರುಮನೆ, ನೆರಳು ಪರದೆಗಳ ನಿರ್ಮಾಣಕ್ಕೆ ಹಾಗೂ ಇತರೇ ಕಾರ್ಯಕ್ರಮಗಳಿಗೆ ರೂ.892 ಲಕ್ಷಗಳ ಮೊತ್ತವನ್ನು ನಿಗದಿಪಡಿಸಲಾಗಿದ್ದು ಅದರಲ್ಲಿ ಇದುವರೆಗೂ 762.00 ಬಿಡುಗಡೆಯಾಗಿದ್ದು 812 ಪಲಾನುಭವಿಗಳಿಗೆ 526 ಲಕ್ಷ ಸಹಾಯಧನ ವಿತರಿಸಲಾಗಿದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 2020-21 ನೇ ಸಾಲಿನಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಹನಿ ನೀರಾವರಿ ಅಳವಡಿಸಲು ಶೇಕಡಾ 90 ರಷ್ಟು ಸಹಾಯಧನ ಒದಗಿಸುತ್ತಿದ್ದು ಒಟ್ಟು ರೂ. 28.70 ಕೋಟಿಗಳ ಅನುದಾನ ನಿಗದಿಪಡಿಸಲಾಗಿದ್ದು ಅದರಲ್ಲಿ ಇದುವರೆಗೂ ರೂ.16.33 ಕೋಟಿ ಬಿಡುಗಡೆಯಾಗಿದ್ದು 2864 ಪಲಾನುಭವಿಗಳಿಗೆ ರೂ. 14.60 ಕೋಟಿ ಸಹಾಯಧನ ವಿತರಿಸಲಾಗಿದೆ.

ಸ್ಮಾರ್ಟ್‍ಸಿಟಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಒಟ್ಟಾರೆ ರೂ.1,014 ಕೋಟಿಗಳ ಯೋಜನಾ ಮೊತ್ತದಲ್ಲಿ 95 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದಾವಣಗೆರೆ ನಗರಕ್ಕೆ ಎ.ಡಿ.ಬಿ. ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ನಿರಂತರ (24*7) ಕುಡಿಯುವ ನೀರು ಸರಬರಾಜು ಯೋಜನೆಯ ಯಶಸ್ಸಿಗೆ ಅವಶ್ಯವಿರುವ ನೀರಿನ ಮೂಲವನ್ನು ಶಾಶ್ವತವಾಗಿ ಬಲಪಡಿಸಲು ತುಂಗಭದ್ರ ನದಿಗೆ ಅಡ್ಡಲಾಗಿ ರೂ.91.86 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.

ಪೌರಕಾರ್ಮಿಕರಿಗೆ 381 ಜಿ+1 ಮಾದರಿಯಲ್ಲಿ ವಸತಿ ಸಮುಚ್ಛಯಗಳನ್ನು ನಿರ್ಮಿಸುವ ಕಾಮಗಾರಿಯು ಪ್ರಗತಿಯ ಹಂತದಲ್ಲಿದ್ದು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರಿಸಲು ಕ್ರಮ ವಹಿಸಲಾಗುತ್ತದೆ.

ಜಲಸಿರಿ ಯೋಜನೆಯಡಿಯಲ್ಲಿ ದಾವಣಗೆರೆ ಸಿಟಿಗೆ (24ಘಿ7) ನೀರು ಪೂರೈಸಲು ಅಂದಾಜು ಮೊತ್ತ ರೂ 83.37 ಕೋಟಿಯಲ್ಲಿ ರಾಜನಹಳ್ಳಿಯಲ್ಲಿ 120 ಎಂಎಲ್‍ಡಿ ಸಾಮಥ್ರ್ಯದ ಜಾಕ್‍ವೆಲ್ ಮತ್ತು ಬಾತಿಯಲ್ಲಿ 40 ಎಂ.ಎಲ್.ಡಿ ಸಾಮಥ್ರ್ಯದ ನೀರು ಶುದ್ಧೀಕರಣ ಘಟಕ ಹಾಗೂ ದಾವಣಗೆರೆ ನಗರದವರೆಗೆ ಮುಖ್ಯ ನೀರು ಸರಬರಾಜು ಕೊಳವೆಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಶಿಸ್ತಿನ ಪಥಸಂಚಲನ

ಡಿಎಆರ್ ಪೊಲೀಸ್ ತಂಡ, ನಾಗರಿಕ ಪೊಲೀಸ್ ತಂಡ, ಗೃಹ ರಕ್ಷಕದಳ, ಅರಣ್ಯ ಇಲಾಖೆ, ಅಬಕಾರಿ ಪೊಲೀಸ್ ತಂಡ, ಅಗ್ನಿಶಾಮಕ ದಳಗಳು ಪೊಲೀಸ್ ವಾದ್ಯವೃಂದದ ಹಿಮ್ಮೇಳದಲ್ಲಿ ಶಿಸ್ತಿನ ಪಥಸಂಚಲನ ನಡೆಸಿದವು.

ಸನ್ಮಾನ

ಕೋವಿಡ್ ಹಿನ್ನೆಲೆಯಲ್ಲಿ ಸೇವೆ ಸಲ್ಲಿಸಿದ ಡಾ. ಮುನಾವರ್ ಹುಸೇನ್, ವೈದ್ಯರು, ಚಿಗಟೇರಿ ಜಿಲ್ಲಾ ಆಸ್ಪತ್ರೆ ದಾವಣಗೆರೆ. ಡಾ. ಚಂದ್ರಪ್ಪ, ಆಡಳಿತ ವೈದ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿ. ಡಾ. ಆರ್.ಎಮ್.ಗಿರಿ, ಆಡಳಿತ ವೈದ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ ಚನ್ನಗಿರಿ. ಡಾ.ಹರ್ಷ ಬಿ.ಎಮ್.ವೈದ್ಯಕೀಯ ನಿರ್ದೇಶಕರು ಬಾಪೂಜಿ ಮಕ್ಕಳ ಆಸ್ಪತ್ರೆ ದಾವಣಗೆರೆ. ಡಾ.ನವೀನ್, ಹೆಚ್.ಎನ್.ವೈದ್ಯಕೀಯ ನಿರ್ದೇಶಕರು, ಸ್ಪಂದನಾ ಯೂರಾಲಜಿ ಸೆಂಟರ್ ದಾವಣಗೆರೆ. ಕುಮಾರಿ ಶ್ರೀಷ್ಮ ಹೆಗಡೆ ಎನ್.ಸಿ.ಸಿ ದಾವಣಗೆರೆ. ಕುಮಾರ ಮಹಮ್ಮದ್ ಮುಸವೀರ್ ಪಾಷಾ ಎನ್.ಸಿ.ಸಿ ದಾವಣಗೆರೆ. ಕುಮಾರಿ ಇಂಫನಾ ಆರ್.ಎ ಎನ್.ಸಿ.ಸಿ ದಾವಣಗೆರೆ. ಕುಮಾರಿ ಅನುಶ್ರೀ ಬಿ.ಜಿ ಎನ್.ಸಿ.ಸಿ ದಾವಣಗೆರೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending