ದಿನದ ಸುದ್ದಿ
ಕೊರೊನಾ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ನಿಂತಿದೆ : ಸಚಿವ ಭೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ :1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೊರೊನಾದಂತಹ ಸಂದರ್ಭವನ್ನೂ ದೇಶ ಸಮರ್ಥವಾಗಿ ಎದುರಿಸಿ ಜನರ ನೆರವಿಗೆ ಸರ್ಕಾರ ನಿಂತಿದೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ನುಡಿದರು.
ಜಿಲ್ಲಾಡಳಿತ ವತಿಯಿಂದ ಜ.26 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರೆವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು.
ಮಹಾತ್ಮಾ ಗಾಂಧಿ, ನೆಹರೂ, ಜವಹರಲಾಲ್, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ರಂಥ ನಾಯಕರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದ ಸ್ವಾತಂತ್ರ್ಯ ಸತ್ಯ-ಶಾಂತಿ ಹಾಗೂ ಅಹಿಂಸೆಯಿಂದ ಪ್ರೇರಿತ ಗೊಂಡದ್ದಾಗಿದೆ. ಈ ಹಿನ್ನೆಲೆಯಲ್ಲಿ ಅಸ್ತಿತ್ವಕ್ಕೆ ಬಂದ ಭಾರತಕ್ಕೆ ಈಗ 74 ರ ಹರೆಯ. ಭಾರತಕ್ಕೆ ಸಂವಿಧಾನ ಪ್ರಾಪ್ತವಾಗಿ 72 ವರ್ಷಗಳು ಸಂದದ್ದೂ ಅವಿಸ್ಮರಣೀಯ.
ಸಂವಿಧಾನದ ಕರಡು ರಚನಾ ಸಮಿತಿಯಲ್ಲಿ ಡಾ|| ಅಂಬೇಡ್ಕರ್ ಅವರ ಪಾತ್ರ ಮಹತ್ತರವಾಗಿತ್ತು. ತಮ್ಮ ಪಾತ್ರವನ್ನು ಸಂಪೂರ್ಣವಾಗಿ ನಿರ್ವಹಿಸುವಲ್ಲಿ ಅಂಬೇಡ್ಕರ್ ಅವರಿಗೆ ಹಲವಾರು ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿದ ಅನುಭವ ನೆರವಾಯಿತು. ಡಾ|| ಅಂಬೇಡ್ಕರ್ರವರ ಸೇವೆಗೆ ದೊರೆತ ಮನ್ನಣೆಗೆ ಇವರನ್ನು “ಸಂವಿಧಾನದ ಪಿತಾಮಹ” ಎಂದು ನಾವು ಸ್ಮರಿಸುವಂತಾಗಿದೆ.
ಗಣರಾಜ್ಯವಾದ ತರುವಾಯ ದಾವಣಗೆರೆ ಜಿಲ್ಲೆಯು ಅನೇಕ ಬೆಳವಣಿಗೆಯನ್ನು ಕಂಡಿದೆ. ಈ ಜಿಲ್ಲೆಯ ಇತಿಹಾಸ ನೋಡುವುದಾದರೆ ದಾವಣಗೆರೆ ಜಿಲ್ಲೆಯು ಭೌಗೋಳಿಕವಾಗಿ ಧಾರವಾಡ ಶಿಲಾ ಪದರಿನ ವಿನ್ಯಾಸದ ಮೇಲೆ ರಚನೆಗೊಂಡಿದ್ದು, ಆಗಸ್ಟ್ 15, 1997 ರಲ್ಲಿ ನೂತನ ಜಿಲ್ಲೆಯಾಗಿ ರೂಪುಗೊಂಡಿತು.
2020 ರ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಜಗತ್ತೇ ತಲ್ಲಣಿಸುವಂತೆ ಮಾಡಿದ ಸಂದರ್ಭದಲ್ಲಿ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಕಟ್ಟಿಹಾಕಲು ಕಾರ್ಯೋನ್ಮುಖವಾಗಿ ಮಾಡಿದ ವ್ಯವಸ್ಥಿತ ಹೋರಾಟದ ಫಲವಾಗಿ ಇಂದು ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಇದಕ್ಕಾಗಿ ಶ್ರಮಿಸಿದ ಜಿಲ್ಲಾಡಳಿತದ ಕಾರ್ಯವನ್ನು ಶ್ಲಾಘಿಸುತ್ತೇನೆ. ಸಾವಿರ ಸಂಖ್ಯೆಯಲ್ಲಿದ್ದ ಕೊರೊನಾ ಪ್ರಕರಣಗಳು ಇಂದು ಎರಡಂಕಿಗೆ ಬಂದಿವೆ.. ಇದೇ ಸಂದರ್ಭದಲ್ಲಿ ಸಂಜೀವಿನಿಯಂತೆ ಬಂದಿರುವ ಲಸಿಕೆ ನಮ್ಮಲ್ಲಿ ಮತ್ತಷ್ಟು ಹುಮ್ಮಸ್ಸನ್ನು ತುಂಬಿದೆ. ಈ ಲಸಿಕೆ ಅಭಿಯಾನವು ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.
ಕೊರೊನಾ ಸಂದರ್ಭದಲ್ಲಿ ನಮ್ಮ ಸರ್ಕಾರ ಎಲ್ಲ ಜನ ವರ್ಗಗಳ ಶ್ರೇಯೋಭಿವೃದ್ದಿಗಾಗಿ ಕಂಕಣಬದ್ದವಾಗಿ ಶ್ರಮಿಸಿ, ರೈತರು, ಕಾರ್ಮಿಕರು, ನೇಕಾರರು ಸೇರಿದಂತೆ ದುಡಿಯುವ ವರ್ಗಗಳ ನೆರವಿಗೆ ನಿಂತಿದ್ದು, ಇದೇ ಸಂದರ್ಭದಲ್ಲಿ ಅತಿವೃಷಿಯಿಂದಾದ ಬೆಳೆ, ಮನೆ, ಜಾನುವಾರು ಹಾನಿಗಳಿಗೆ ಪರಿಹಾರವನ್ನು ನೀಡಿ ಎಲ್ಲರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಕೋವಿಡ್-19ರ ಹೋರಾಟದಲ್ಲಿ ಸೇನಾನಿಗಳಾಗಿ ಕಾರ್ಯನಿರ್ವಹಿಸಿ ಮೃತಪಟ್ಟ ನಾಲ್ಕು ಪೊಲೀಸರ ಕುಟುಂಬಗಳಿಗೆ ತಲಾ 30 ಲಕ್ಷದಂತೆ ಪರಿಹಾರ ನೀಡಲಾಗಿದೆ.
ಮಹನೀಯರೇ, ಜನಸಮಾನ್ಯರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಕೊಳ್ಳುತ್ತಿದ್ದು, ಸರ್ಕಾರದ ಉತ್ತಮ ಕಾರ್ಯಗಳಿಗೆ ಸಾರ್ವಜನಿಕರು ಒತ್ತಾಸೆಯಾಗಿ ನಿಲ್ಲಬೇಕು ಮತ್ತು ಅವುಗಳ ಸಂಪೂರ್ಣ ಲಾಭವನ್ನು ವೈಯಕ್ತಿಕವಾಗಿ ಮತ್ತು ಸಮಷ್ಠಿಯಾಗಿ ಪಡೆಯಬೇಕು ಎಂದು ವಿನಂತಿಸುತ್ತೇನೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ 2020-21 ನೇ ಸಾಲಿನಲ್ಲಿ 826 ಮಿಮೀ ಮಳೆಯಾಗಿದ್ದು ಶೇ.25 ರಷ್ಟು ಹೆಚ್ಚು ಮಳೆಯಾಗಿರುತ್ತದೆ. 2020-21 ನೇ ಸಾಲಿನಲ್ಲಿ ಇದುವರೆಗೂ ವಿವಿಧ ಬೆಳೆಗಳ ವಿವಿಧ ತಳಿಗಳ 17070 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ.
2019-20 ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಶೇಂಗಾ ಬೆಳೆಯಲ್ಲಿ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದ ರಮೇಶಪ್ಪ ಕೆ ಇವರು ಪ್ರಥಮ ಸ್ಥಾನ ಹಾಗೂ ನಾಗರಾಜಪ್ಪ ಇವರು ದ್ವಿತೀಯ ಸ್ಥಾನ ಮತ್ತು ಭತ್ತ (ನೀರಾವರಿ) ಬೆಳೆಯಲ್ಲಿ ಹರಿಹರ ತಾಲ್ಲೂಕಿನ ಧೂಳೆಹೊಳೆಯ ರಮೇಶ್ ಜಿ. ಎನ್. ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಜಿಲ್ಲೆಯಲ್ಲಿ ಕೋವಿಡ್ನ್ನು ಎಲ್ಲರ ಸಹಕಾರದಿಂದ ದಿಟ್ಟವಾಗಿ ಎದುರಿಸಲಾಗಿದ್ದು, ಪಾಸಿಟಿವಿಟಿ ದರವು 0.6% ಇರುತ್ತದೆ. ಕೋವಿಡ್-19 ಸೋಂಕು ಹೊಂದಿದ ರೋಗಿಗಳಿಗೆ 240 ಹಾಸಿಗೆಗಳ ಆಕ್ಸಿಜನ್ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್-19 ಸೋಂಕು ಹೊಂದಿದ ರೋಗಿಗಳಿಗೆ 20 ಹಾಸಿಗೆಗಳ ವೈದ್ಯಕೀಯ ತೀವ್ರ ನಿಗಾ ಘಟಕದ ವ್ಯವಸ್ಥೆ ಮಾಡಲಾಗಿದೆ. 6000 ಲೀಟರ್ ಸಾಮಥ್ರ್ಯದ ಮೆಡಿಕಲ್ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್-19 ರೋಗಿಗಳಿಗೆ ದಿನದ 24 ಗಂಟೆ ಆಕ್ಸಿಜನ್ ವ್ಯವಸ್ಥೆ ದೊರೆಯುವಂತೆ ಮಾಡಲಾಗಿದೆ. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ರೋಗ ಪತ್ತೆಗಾಗಿ ದಿನಕ್ಕೆ ಒಂದು ಸಾವಿರ ಪರೀಕ್ಷಾ ಪ್ರಯೋಗಗಳ ವ್ಯವಸ್ಥೆ ಇರುವ ಸುಸಜ್ಜಿತ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯವನ್ನು ಸ್ಥಾಪಿಸಿದ್ದು, ಇಲ್ಲಿಯವರೆಗೆ 1 ಲಕ್ಷದ 40 ಸಾವಿರ ಪ್ರಯೋಗಗಳನ್ನು ಮಾಡಿದ್ದು, ಅದರಿಲ್ಲಿ 5429 ಪಾಸಿಟೀವ್ ಪ್ರಕರಣಗಳು ದಾಖಲಾಗಿವೆ.
ಲಾಕ್ಡೌನ್ ವೇಳೆಯಲ್ಲಿ ಸರ್ಕಾರ ವಿವಿಧ ಯೋಜನೆಗಳಡಿ ಸಂತ್ರಸ್ತರಿಗೆ ಪರಿಹಾರ ನೀಡಿ ಸಂತ್ರಸ್ತರ ನೆರವಿಗೆ ನಿಂತಿದ್ದು, ಮೆಕ್ಕೆಜೋಳ ಬೆಳೆದ 66148 ರೈತರಿಗೆ ರೂ. 33.7 ಕೋಟಿ, ಹೂ, ಹಣ್ಣು ಹಾಗೂ ತರಕಾರಿ ಬೆಳೆದ 4199 ರೈತರಿಗೆ 3. 97 ಕೋಟಿ, ಕಟ್ಟಡ ಕಾರ್ಮಿಕರಿಗೆ ರೂ. 45.90 ಕೋಟಿ, 1438 ಕ್ಷೌರಿಕರು ಹಾಗೂ 2200 ಅಗಸರು ಒಟ್ಟು 3638 ಫಲಾನುಭವಿಗಳಿಗೆ 1.81 ಕೋಟಿ ಮತ್ತು 5159 ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರೂ. 2,57,95,000/- ಸಹಾಯಧನ ವಿತರಿಸಲಾಗಿರುತ್ತದೆ.
ಲಾಕ್ಡೌನ್ ವೇಳೆ ನಗರ ಸ್ಥಳೀಯ ಸಂಸ್ಥೆ ವತಿಯಿಂದ 5.73 ಲಕ್ಷ ಲೀಟರ್ ಹಾಲು ವಿತರಣೆ ಮಾಡಲಾಗಿರುತ್ತದೆ. 13.19 ಲಕ್ಷ ರ 583 ಪಡಿತರ ಚೀಟಿದಾರರಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ 6979 ವಲಸೆ ಕಾರ್ಮಿಕರು, ಅಲೆಮಾರಿಗಳು, ಸಂಕಷ್ಟದಲ್ಲಿದ್ದ ಪಡಿತರಚೀಟಿರಹಿತ ಕುಟುಂಬಗಳು, ಭಿಕ್ಷುಕರು, ತೃತೀಯ ಲಿಂಗಿಗಳಿಗೆ ರೂ. 67.69 ಮೊತ್ತದ ಆಹಾರ ಕಿಟ್ಗಳನ್ನು ನೀಡಲಾಗಿರುತ್ತದೆ.
ಗ್ರಾಮವಿಕಾಸ ಯೋಜನೆಯಡಿ ದಾವಣಗೆರೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರದ 27 ಗ್ರಾಮಗಳನ್ನು ಆಯ್ಕೆ ಮಾಡಿ, ರೂ. 14.19 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿರುತ್ತದೆ. ಹಾಗೂ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಒಟ್ಟು 25 ಗ್ರಾಮಗಳು ಆಯ್ಕೆಯಾಗಿದ್ದು, ಪ್ರತಿ ಗ್ರಾಮಕ್ಕೆ ರೂ. 1 ಕೋಟಿಯಂತೆ ನಿಗದಿಯಾಗಿದ್ದು ಈವರೆಗೆ ಸರ್ಕಾರದಿಂದ ರೂ. 13.87 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 28 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡು ಕಾರ್ಯಾಚರಣೆÉಯಲ್ಲಿವೆ.
ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿನ 1723 ಅಂಗನವಾಡಿ ಕೇಂದ್ರಗಳ ಮುಖಾಂತರ 6 ತಿಂಗಳಿಂದ 6 ವರ್ಷ ಒಳಪಟ್ಟ 1,11,264 ಫಲಾನುಭವಿಗಳಿಗೆ ಪ್ರತಿ ತಿಂಗಳು ಕೆನೆಸಹಿತ ಹಾಲಿನ ಪುಡಿ ವಿತರಿಸಲಾಗುತ್ತಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ 2020-21ನೇ ಸಾಲಿಗೆ 5068 ಹೆಣ್ಣು ಮಕ್ಕಳಿಗೆ ತಲಾ ರೂ.1 ಲಕ್ಷ ಮೌಲ್ಯದ ಭಾಗ್ಯಲಕ್ಷ್ಮಿ ಬಾಂಡ್ಗಳನ್ನು ಒದಗಿಸಲಾಗಿದೆ.
ಕೋವಿಡ್ 19 ರ ಪ್ರಯುಕ್ತ ಮಾರ್ಚ್-2020 ರಿಂದ ಇಲ್ಲಿಯವರೆಗೆ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿಲಾಗಿದ್ದು, ಈ ಅವಧಿಯಲ್ಲಿ ಎಲ್ಲಾ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರಿಂದ ಹಾಲಿನ ಪುಡಿ, ಮೊಟ್ಟೆ, ಅಕ್ಕಿ, ಗೋಧಿ, ಹೆಸರುಕಾಳು, ಶೇಂಗಾ ಬೀಜ, ಮಸಾಲೆ ಪುಡಿ, ಸಕ್ಕರೆ ಹಾಗೂ ಇತರೆ ಆಹಾರ ಪದಾರ್ಥಗಳನ್ನು ಕಿಟ್ ರೂಪದಲ್ಲಿ ಫಲಾನುಭವಿಗಳ ಮನೆ-ಮನೆಗೆ ವಿತರಿಸಲಾಗುತ್ತಿದೆ. ಅಲ್ಲದೇ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣೆಯನ್ನು ಸಹ ಮಾಡಿಸಲಾಗುತ್ತಿದೆ.
2019-20ನೇ ಸಾಲಿನಲ್ಲಿ ಡಾ|| ಬಿ.ಆರ್.ಅಂಬೇಡ್ಕರ್, ಡಾ|| ಬಾಬು ಜಗಜೀವನ್ ರಾಂ ಸಮುದಾಯ ಭವನಗಳ ನಿರ್ಮಾಣ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಗೆ ಒಟ್ಟು 29 ಭವನಗಳ ನಿರ್ಮಾಣಕ್ಕೆ ರೂ.404 ಲಕ್ಷಗಳ ಮಂಜೂರಾತಿಯೊಂದಿಗೆ ಕೇಂದ್ರ ಕಛೇರಿಯಿಂದ ಮೊದಲನೇ ಕಂತಾಗಿ ಬಿಡುಗಡೆ ಮಾಡಲಾದ ರೂ.121.20 ಲಕ್ಷಗಳ ಅನುದಾನ ವೆಚ್ಚ ಭರಿಸಲಾಗಿರುತ್ತದೆ.
2018-19ಸಾಲಿನಲ್ಲಿ ಸ್ವಯಂ ಉದ್ಯೋಗದ ವಿವಿಧ ಕಾರ್ಯಕ್ರಮಗಳಿಗೆ (ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ / ಮೇಕೆ ಘಟಕ,ಸರಕು ಸಾಗಾಣಿಕೆ ವಾಹನ, ಮೊಲ ಸಾಕಾಣಿಕೆ) ಜಿಲ್ಲೆಗೆ ಒಟ್ಟು 164 ಫಲಾನಭವಿಗಳಿಗೆ ಆಯ್ಕೆ ಮಾಡಿ ರೂ. 127.00 ಲಕ್ಷಗಳನ್ನು ಬಿಡುಗಡೆ ಮಾಡಿ ಫಲಾನುಭವಿಗಳಿಗೆ ಚೆಕ್ ಮೂಲಕ ವಿತರಿಸಲಾಗಿದೆ. ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳ ವಿವಾಹವಾದ ಪರಿಶಿಷ್ಟ ಪಂಗಡದ ಪ್ರತಿ ಜೋಡಿಗೆ ರೂ. 50,000/-ಗಳಂತೆ ಒಟ್ಟು 178 ಜೋಡಿಗಳಿಗೆ 89 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಲಾಗಿರುತ್ತದೆ.
‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ (ಎನ್.ಹೆಚ್.ಎಂ.) ಅಡಿಯಲ್ಲಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಕಲ್ಪಿಸಲಾಗುವುದು ಹಾಗೂ ಸಂಸ್ಕರಣಾಘಟಕ, ಪ್ಯಾಕ್ ಹೌಸ್ಗಳು, ಹಣ್ಣು ಮಾಗಿಸುವ ಘಟಕ, ಹಸಿರುಮನೆ, ನೆರಳು ಪರದೆಗಳ ನಿರ್ಮಾಣಕ್ಕೆ ಹಾಗೂ ಇತರೇ ಕಾರ್ಯಕ್ರಮಗಳಿಗೆ ರೂ.892 ಲಕ್ಷಗಳ ಮೊತ್ತವನ್ನು ನಿಗದಿಪಡಿಸಲಾಗಿದ್ದು ಅದರಲ್ಲಿ ಇದುವರೆಗೂ 762.00 ಬಿಡುಗಡೆಯಾಗಿದ್ದು 812 ಪಲಾನುಭವಿಗಳಿಗೆ 526 ಲಕ್ಷ ಸಹಾಯಧನ ವಿತರಿಸಲಾಗಿದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 2020-21 ನೇ ಸಾಲಿನಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಹನಿ ನೀರಾವರಿ ಅಳವಡಿಸಲು ಶೇಕಡಾ 90 ರಷ್ಟು ಸಹಾಯಧನ ಒದಗಿಸುತ್ತಿದ್ದು ಒಟ್ಟು ರೂ. 28.70 ಕೋಟಿಗಳ ಅನುದಾನ ನಿಗದಿಪಡಿಸಲಾಗಿದ್ದು ಅದರಲ್ಲಿ ಇದುವರೆಗೂ ರೂ.16.33 ಕೋಟಿ ಬಿಡುಗಡೆಯಾಗಿದ್ದು 2864 ಪಲಾನುಭವಿಗಳಿಗೆ ರೂ. 14.60 ಕೋಟಿ ಸಹಾಯಧನ ವಿತರಿಸಲಾಗಿದೆ.
ಸ್ಮಾರ್ಟ್ಸಿಟಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಒಟ್ಟಾರೆ ರೂ.1,014 ಕೋಟಿಗಳ ಯೋಜನಾ ಮೊತ್ತದಲ್ಲಿ 95 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದಾವಣಗೆರೆ ನಗರಕ್ಕೆ ಎ.ಡಿ.ಬಿ. ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ನಿರಂತರ (24*7) ಕುಡಿಯುವ ನೀರು ಸರಬರಾಜು ಯೋಜನೆಯ ಯಶಸ್ಸಿಗೆ ಅವಶ್ಯವಿರುವ ನೀರಿನ ಮೂಲವನ್ನು ಶಾಶ್ವತವಾಗಿ ಬಲಪಡಿಸಲು ತುಂಗಭದ್ರ ನದಿಗೆ ಅಡ್ಡಲಾಗಿ ರೂ.91.86 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಪೌರಕಾರ್ಮಿಕರಿಗೆ 381 ಜಿ+1 ಮಾದರಿಯಲ್ಲಿ ವಸತಿ ಸಮುಚ್ಛಯಗಳನ್ನು ನಿರ್ಮಿಸುವ ಕಾಮಗಾರಿಯು ಪ್ರಗತಿಯ ಹಂತದಲ್ಲಿದ್ದು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರಿಸಲು ಕ್ರಮ ವಹಿಸಲಾಗುತ್ತದೆ.
ಜಲಸಿರಿ ಯೋಜನೆಯಡಿಯಲ್ಲಿ ದಾವಣಗೆರೆ ಸಿಟಿಗೆ (24ಘಿ7) ನೀರು ಪೂರೈಸಲು ಅಂದಾಜು ಮೊತ್ತ ರೂ 83.37 ಕೋಟಿಯಲ್ಲಿ ರಾಜನಹಳ್ಳಿಯಲ್ಲಿ 120 ಎಂಎಲ್ಡಿ ಸಾಮಥ್ರ್ಯದ ಜಾಕ್ವೆಲ್ ಮತ್ತು ಬಾತಿಯಲ್ಲಿ 40 ಎಂ.ಎಲ್.ಡಿ ಸಾಮಥ್ರ್ಯದ ನೀರು ಶುದ್ಧೀಕರಣ ಘಟಕ ಹಾಗೂ ದಾವಣಗೆರೆ ನಗರದವರೆಗೆ ಮುಖ್ಯ ನೀರು ಸರಬರಾಜು ಕೊಳವೆಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಶಿಸ್ತಿನ ಪಥಸಂಚಲನ
ಡಿಎಆರ್ ಪೊಲೀಸ್ ತಂಡ, ನಾಗರಿಕ ಪೊಲೀಸ್ ತಂಡ, ಗೃಹ ರಕ್ಷಕದಳ, ಅರಣ್ಯ ಇಲಾಖೆ, ಅಬಕಾರಿ ಪೊಲೀಸ್ ತಂಡ, ಅಗ್ನಿಶಾಮಕ ದಳಗಳು ಪೊಲೀಸ್ ವಾದ್ಯವೃಂದದ ಹಿಮ್ಮೇಳದಲ್ಲಿ ಶಿಸ್ತಿನ ಪಥಸಂಚಲನ ನಡೆಸಿದವು.
ಸನ್ಮಾನ
ಕೋವಿಡ್ ಹಿನ್ನೆಲೆಯಲ್ಲಿ ಸೇವೆ ಸಲ್ಲಿಸಿದ ಡಾ. ಮುನಾವರ್ ಹುಸೇನ್, ವೈದ್ಯರು, ಚಿಗಟೇರಿ ಜಿಲ್ಲಾ ಆಸ್ಪತ್ರೆ ದಾವಣಗೆರೆ. ಡಾ. ಚಂದ್ರಪ್ಪ, ಆಡಳಿತ ವೈದ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿ. ಡಾ. ಆರ್.ಎಮ್.ಗಿರಿ, ಆಡಳಿತ ವೈದ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ ಚನ್ನಗಿರಿ. ಡಾ.ಹರ್ಷ ಬಿ.ಎಮ್.ವೈದ್ಯಕೀಯ ನಿರ್ದೇಶಕರು ಬಾಪೂಜಿ ಮಕ್ಕಳ ಆಸ್ಪತ್ರೆ ದಾವಣಗೆರೆ. ಡಾ.ನವೀನ್, ಹೆಚ್.ಎನ್.ವೈದ್ಯಕೀಯ ನಿರ್ದೇಶಕರು, ಸ್ಪಂದನಾ ಯೂರಾಲಜಿ ಸೆಂಟರ್ ದಾವಣಗೆರೆ. ಕುಮಾರಿ ಶ್ರೀಷ್ಮ ಹೆಗಡೆ ಎನ್.ಸಿ.ಸಿ ದಾವಣಗೆರೆ. ಕುಮಾರ ಮಹಮ್ಮದ್ ಮುಸವೀರ್ ಪಾಷಾ ಎನ್.ಸಿ.ಸಿ ದಾವಣಗೆರೆ. ಕುಮಾರಿ ಇಂಫನಾ ಆರ್.ಎ ಎನ್.ಸಿ.ಸಿ ದಾವಣಗೆರೆ. ಕುಮಾರಿ ಅನುಶ್ರೀ ಬಿ.ಜಿ ಎನ್.ಸಿ.ಸಿ ದಾವಣಗೆರೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ21 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

