ಬಹಿರಂಗ
ನಿಷ್ಕ್ರಿಯತೆ ಉನ್ಮಾದದ ನಡುವೆ ಪ್ರಜಾಸತ್ತೆಯ ರಕ್ಷಣೆಗಾಗಿ
- ನಾ ದಿವಾಕರ
ಪ್ರಜಾಪ್ರಭುತ್ವ ಎಂದರೆ ಅದು ಕೇವಲ ಒಂದು ಆಡಳಿತ ವ್ಯವಸ್ಥೆ ಅಲ್ಲ, ಒಂದು ನಾಗರಿಕ ಸಮಾಜವನ್ನು ಮಾನವೀಯ ಮೌಲ್ಯಗಳ ಚೌಕಟ್ಟಿನಲ್ಲಿ ಬಂಧಿಸುವ ಒಂದು ಸಂವೇದನಾಶೀಲ ತತ್ವ . ಈ ಸಂವೇದನೆಯನ್ನು ಕಳೆದುಕೊಂಡ ಯಾವುದೇ ಸಮಾಜ ಸುಲಭವಾಗಿ ಸರ್ವಾಧಿಕಾರದತ್ತ ಹೊರಳಿಬಿಡುತ್ತದೆ. ತನ್ನೊಳಗಿನ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡ ಮನುಷ್ಯ ತನ್ನ ಸುತ್ತಲಿನ ಶೋಷಣೆಗೆ, ಹಿಂಸೆಗೆ, ಅನ್ಯಾಯಗಳಿಗೆ ಕುರುಡಾಗಿಬಿಡುತ್ತಾನೆ.
ಸ್ವಾಭಾವಿಕವಾಗಿಯೇ ಒಂದು ಸಮಾಜವೂ ಇದೇ ಸನ್ನಿವೇಶವನ್ನು ಎದುರಿಸುತ್ತದೆ. ರಾಜಕೀಯವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಒಪ್ಪಿಕೊಳ್ಳುವ ಒಂದು ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ನೆಲೆಗಟ್ಟಿನಲ್ಲೂ ಪ್ರಜಾಪ್ರಭುತ್ವ ಸ್ಥಾಪಿತವಾದಲ್ಲಿ ಮಾತ್ರ ಒಂದು ಸಮ ಸಮಾಜದ ನಿರ್ಮಾಣ ಸಾಧ್ಯ ಎಂದು ಡಾ ಬಿ ಆರ್ ಅಂಬೇಡ್ಕರ್ ಪ್ರತಿಪಾದಿಸುತ್ತಾರೆ.
ಆತ್ಮನಿರ್ಭರ ಭಾರತದ ಇಂದಿನ ಪರಿಸ್ಥಿತಿಯನ್ನು ನೋಡಿದರೆ ಈ ದಾರ್ಶನಿಕ ದೃಷ್ಟಿಕೋನ ಎಷ್ಟು ವಾಸ್ತವತೆಯಿಂದ ಕೂಡಿತ್ತು ಎನಿಸುತ್ತದೆ. ಇಂದು ರಾಜಕೀಯ ನೆಲೆಯಲ್ಲಿ ಭಾರತ ಪ್ರಜಾಪ್ರಭುತ್ವದ ತಳಹದಿಯನ್ನೇ ಕಳೆದುಕೊಳ್ಳುತ್ತಿದೆ. ಗ್ರಾಂಥಿಕವಾಗಿ ಭಾರತದ ಶ್ರೇಷ್ಠ ಸಂವಿಧಾನ ಸುರಕ್ಷಿತವಾಗಿಯೇ ಇದ್ದರೂ, ಮೌಲಿಕವಾಗಿ ಸಂವಿಧಾನದ ಒಂದೊಂದೇ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ದಿನಬೆಳಗಾದರೆ ಸಂವಿಧಾನದ ಧ್ಯಾನ ಮಾಡುವ ಅಸಂಖ್ಯಾತ ಜನಪ್ರತಿನಿಧಿಗಳು ಮೌನವಾಗಿಯೇ ಎಲ್ಲವನ್ನೂ ಸಹಿಸಿಕೊಳ್ಳುತ್ತಿದ್ದಾರೆ. ಉನ್ಮತ್ತ ಮನಸ್ಥಿತಿ ತಲುಪಿರುವ ನಾಗರಿಕ ಸಮಾಜದ ಬೃಹತ್ ವರ್ಗ ಸಂಪೂರ್ಣ ನಿಷ್ಕ್ರಿಯವಾಗಿದೆ.
ಅಸಮಾನತೆ, ಅಸಹಿಷ್ಣುತೆ ಮತ್ತು ಶ್ರೇಷ್ಠತೆಯ ವ್ಯಸನದೊಂದಿಗೇ ಶತಮಾನಗಳನ್ನು ಕಳೆದಿರುವ ಭಾರತೀಯ ಸಮಾಜ ತನ್ನ ಸಾಂಪ್ರದಾಯಿಕ ಪೊರೆಯನ್ನು ಇನ್ನೂ ಸಂಪೂರ್ಣವಾಗಿ ಕಳಚಿಹಾಕಿಲ್ಲ ಎನ್ನುವುದು ಕಳೆದ ಹಲವು ವರ್ಷಗಳಲ್ಲಿ ಸ್ಪಷ್ಟವಾಗಿ ಸಾಬೀತಾಗಿದೆ. ಅನ್ಯಾಯಗಳನ್ನು ಸಹಿಸಿಕೊಳ್ಳುವುದನ್ನು ಸಹಿಷ್ಣುತೆ ಎನ್ನುವುದಾದರೆ ಭಾರತ ಸಹಿಷ್ಣುತೆಯ ಕರ್ಮಭೂಮಿ ಎಂದೇ ಹೇಳಬಹುದು. ಇದು ವಾಸ್ತವವೂ ಹೌದು.
ಇಲ್ಲಿ ನ್ಯಾಯಾನ್ಯಾಯಗಳ ನಿಷ್ಕರ್ಷೆಯಾಗುವುದು ಮನುಜ ಭೂಮಿಕೆಯ ಮೇಲಲ್ಲ. ಜಾತಿ-ಧರ್ಮ-ಸಮುದಾಯದ ಅಸ್ಮಿತೆಗಳ ಭೂಮಿಕೆಯ ಮೇಲೆ. ಅನ್ಯಾಯಕ್ಕೊಳಗಾದವರ, ದೌರ್ಜನ್ಯಕ್ಕೊಳಗಾದವರ ಸಮಾಜೋ ಸಾಂಸ್ಕೃತಿಕ ಅಸ್ಮಿತೆಗಳು ನ್ಯಾಯದ ಪರಾಮರ್ಶೆಗೆ ವೇದಿಕೆಯಾಗುತ್ತವೆ. ಭಾರತದ ಸಾಂಪ್ರದಾಯಿಕ ಸಮಾಜ ಎಷ್ಟು ಬಲಿಷ್ಠವಾಗಿದೆ ಎಂದರೆ ತುಳಿತಕ್ಕೊಳಗಾದ ಸಮುದಾಯದಿಂದಲೇ ಬೆಳೆದು ನಿಂತವರೂ ಸಹ ತಮ್ಮೆದುರಿನ ದೌರ್ಜನ್ಯಕ್ಕೆ ಕುರುಡಾಗಿಬಿಡುತ್ತಾರೆ. ಇದು ನಮ್ಮ ದೇಶದ ಸಾಂಸ್ಕೃತಿಕ ನಾಗರಿಕತೆ ಶತಮಾನಗಳಿಂದ ಸೃಷ್ಟಿಸಿರುವ ವಿಕೃತ ವಾತಾವರಣದ ಫಲ.
ತಮ್ಮ ಅಧಿಕಾರ, ಅಸ್ತಿತ್ವ ಮತ್ತು ರಾಜಕೀಯ ಪ್ರಾಬಲ್ಯ ಕಾಪಾಡಿಕೊಳ್ಳಲು ದೇಶಾದ್ಯಂತ ನೂರಾರು ಮಸಣಗಳನ್ನು ಸೃಷ್ಟಿಸಿ, ಸಾವಿರಾರು ಜನರ ಹತ್ಯೆಗೈದಿರುವ ಒಂದು ರಾಜಕೀಯ ಆಡಳಿತ ವ್ಯವಸ್ಥೆಯಲ್ಲಿ , ಜನಸಾಮಾನ್ಯರ ಶವಸಂಸ್ಕಾರಕ್ಕೆ ಸೂಕ್ತವಾದ ಸ್ಮಶಾನ ಇಲ್ಲದಿರುವುದನ್ನು ನೋಡಿದರೆ ನಾವು ಎಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಅರಿವಾಗುತ್ತದೆ. ಇದು ಕೇವಲ ಒಂದು ಕೊರಟಗೆರೆಯ ಪ್ರಶ್ನೆಯಲ್ಲ.
ತುಮಕೂರು ಬಳಿ ಇರುವ ಕೊರಟಗೆರೆಯಲ್ಲಿ ದಲಿತ ಕುಟುಂಬದ ಒಂದು ಹಸುಳೆಯ ಶವಕ್ಕೆ ಮಣ್ಣುಮಾಡಲು ಅವಕಾಶವೀಯದೆ, ಹೂತ ಶವವನ್ನು ಹೊರಕ್ಕೆ ತೆಗೆಸುವಷ್ಟು ಕ್ರೌರ್ಯ ನಮ್ಮ ನಡುವೆ ಇದೆ. ಈ ಘಟನೆಗೆ ಕಾರಣವಾದವರ ವಿಕೃತಿ, ಕ್ರೌರ್ಯ ಜಾತಿ ಪೀಡಿತ ಸಮಾಜದ ಒಂದು ಆಯಾಮವನ್ನು ತೋರಿಸಿದರೆ, ಈ ಘಟನೆಯ ಬಗ್ಗೆ ಪ್ರತಿಕ್ರಯಿಸಲೂ ಮುಂದಾಗದೆ ನಿಷ್ಕ್ರಿಯ ಮೌನ ವಹಿಸಿರುವ ಚುನಾಯಿತ ಪ್ರತಿನಿಧಿಗಳು, ಮಾಧ್ಯಮಗಳು ಮತ್ತು ನಾಗರಿಕ ಸಮಾಜ ಈ ಸಮಾಜದ ನಿರ್ಲಜ್ಜತೆಯನ್ನು ಹೊರಗೆಡಹಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ, 21ನೆಯ ಶತಮಾನದ ಮೂರನೆಯ ದಶಕದಲ್ಲೂ ಸಹ, ನಾವು ಹಲವಾರು ಕೊರಟಗೆರೆಗಳನ್ನು ಕಂಡಿದ್ದೇವೆ. ಒಂದೆಡೆ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸುವ ಸಮಾಜವೇ ಮತ್ತೊಂದೆಡೆ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಸಂತ್ರಸ್ತೆಯೊಬ್ಬಳ ಶವಸಂಸ್ಕಾರವನ್ನು ರಾತ್ರೋರಾತ್ರಿ ನಡೆಸುತ್ತದೆ.. ಇಲ್ಲಿ ಹೂಳಲಾಗಿದ್ದ ಶವವನ್ನು ಹೊರಗೆಳೆಯಲಾಗುತ್ತದೆ ಅಲ್ಲಿ ಶವದ ಸುಳಿವು ಸಿಗದಂತೆ ಸುಟ್ಟುಹಾಕಲಾಗುತ್ತದೆ.
ಎರಡೂ ಶವಗಳು ಸಾಂಪ್ರದಾಯಿಕ ಭಾರತದ ದೃಷ್ಟಿಯಲ್ಲಿ ಬಹಿಷ್ಕೃತವೇ ಆಗಿರುವುದು ಕಾಕತಾಳೀಯವೇನಲ್ಲ. ಈ ಎರಡು ವೈಪರೀತ್ಯಗಳ ನಡುವೆ ಒಂದು ನಾಗರಿಕತೆಯ ಎಳೆಯನ್ನು ಶೋಧಿಸಲು ಈ ದೇಶದ ಕೆಲವೇ ಕೆಲವು ಮನಸುಗಳು ಹಾತೊರೆಯುತ್ತಿವೆ. ಮತ್ತೊಂದೆಡೆ ನಾಗರಿಕ ಸಮಾಜದ ಒಂದು ವರ್ಗ ನಿಷ್ಕ್ರಿಯ ಮೌನ ವಹಿಸುತ್ತದೆ.
ಹುಟ್ಟಿನಿಂದ ಸಾಯುವವರೆಗೂ ಜಾತಿಯ ಚೌಕಟ್ಟಿನಲ್ಲೇ ಬದುಕು ಸವೆಸುವ ಭಾರತೀಯ ಸಮಾಜ ಮಸಣದಲ್ಲೂ ಜಾತಿ ಸೂಚಕಗಳನ್ನು ಹುಡುಕುವುದು ದುರಂತ ಅಲ್ಲವೇ ? ಹೂಳುವವರಿಗೆ ಅಸ್ಮಿತೆಯ ಪ್ರಶ್ನೆ ಕಾಡುವುದು ಸಹಜ ಆದರೆ ಹೂತು ಹೋಗುವ ಜೀವಕ್ಕೆ ಯಾವ ಅಸ್ಮಿತೆ ಇರಲು ಸಾಧ್ಯ ? ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನನ್ನು ಜಾತಿಯಿಂದಲೇ ಗುರುತಿಸಿಕೊಳ್ಳುತ್ತಾನೆ ಎಂದು ಅಂಬೇಡ್ಕರ್ ಹೇಳಿದ್ದುದು ಎಷ್ಟು ಮಾರ್ಮಿಕ ಅಲ್ಲವೇ ?
ಸಾವಿನ ನಂತರವೂ ಜಾತಿಯ ಭೂತ ನಮ್ಮ ಬೆನ್ನೇರಿರುತ್ತದೆ, ನಾವು ಜಾತಿಯ ಬೆನ್ನಟ್ಟಿ ನಡೆದಿರುತ್ತೇವೆ. ನಮ್ಮ ಅಂತರ್ ಪ್ರಜ್ಞೆಯನ್ನು ಪ್ರಕ್ಷುಬ್ಧಗೊಳಿಸುವ ಕೊರಟಗೆರೆಯಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ, ನಾವು ಸಂವಿಧಾನದ ರಕ್ಷಣೆಗೆ ಪಣ ತೊಡುತ್ತಲೇ ಇದ್ದೇವೆ.
70 ವರ್ಷಗಳ ನಂತರವೂ ಅಂಬೇಡ್ಕರ್ ಕನಸಿನ ಸಾಮಾಜಿಕ ಪ್ರಜಾಪ್ರಭುತ್ವವನ್ನು , ಗಾಂಧಿ ಕನಸಿನ ನಿರ್ಭೀತ ಪ್ರಾಮಾಣಿಕ ಸಮಾಜವನ್ನು ಸಾಧಿಸಲು ಸಾಧ್ಯವಾಗದ ಭಾರತ ಈಗ ರಾಜಕೀಯ ಪ್ರಜಾಪ್ರಭುತ್ವವನ್ನೂ ಕಳೆದುಕೊಳ್ಳುತ್ತಿದೆ. ಆರ್ಥಿಕವಾಗಿ ಭಾರತದ ಬಹುಸಂಖ್ಯೆಯ ಜನರು ಈಗಾಗಲೇ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ.
ತಾವೇ ಕಟ್ಟಿ ಬೆಳೆಸಿದ ಬೃಹತ್ ಸಾರ್ವಜನಿಕ ಉದ್ದಿಮೆಗಳು, ಸಂಸ್ಥೆಗಳು ತಮ್ಮ ಕಣ್ಣೆದುರಿನಲ್ಲೇ ಖಾಸಗಿ ಬಂಡವಾಳಿಗರ ಪಾಲಾಗುತ್ತಿರುವುದನ್ನು ಸಂಭ್ರಮಿಸುವ ಮಧ್ಯಮ ವರ್ಗದ ಉನ್ಮತ್ತರ ನಡುವೆಯೇ ಅಸಹಾಯಕರಂತೆ ಕಾಣುವ ಒಂದು ವರ್ಗವೂ ನಮ್ಮ ನಡುವೆ ಇದೆ. 136 ಕೋಟಿ ಜನಸಂಖ್ಯೆಗೆ ಅನ್ನ ಬೆಳೆಯುವ ರೈತ ಸಮುದಾಯ ತನ್ನ ನೆಲೆಯನ್ನು ಉಳಿಸಿಕೊಳ್ಳಲು 119 ದಿನಗಳಿಂದಲೂ ಹೋರಾಡುತ್ತಿದೆ.
ಮುಂಬರುವ ದಿನಗಳಲ್ಲಿ ಈ ರೈತಾಪಿಯೊಡನೆ ಕಾರ್ಮಿಕ ವರ್ಗವೂ ಸೇರಿಕೊಳ್ಳುತ್ತದೆ. ಸಂಘಟಿತ/ಅಸಂಘಟಿತ ಕಾರ್ಮಿಕ ವಲಯ ದಿನದಿಂದ ದಿನಕ್ಕೆ ಅನಿಶ್ಚಿತತೆಯನ್ನೇ ಎದುರಿಸುತ್ತಿದ್ದು ದೇಶದ ಸಕಲ ಸಂಪನ್ಮೂಲಗಳೂ ಖಾಸಗಿ ಕಾರ್ಪೋರೇಟ್ ಬಂಡವಾಳಿಗರ ಪಾಲಾಗುತ್ತಿರುವ ಸಂದರ್ಭದಲ್ಲಿ ದುಡಿಯುವ ವರ್ಗಗಳ ನಾಳಿನ ಪ್ರಶ್ನೆ ಜಟಿಲವಾಗುತ್ತಿದೆ. ಏಪ್ರಿಲ್ 1 ರಿಂದ ಜಾರಿಯಾಗಲಿರುವ ಹೊಸ ಕಾರ್ಮಿಕ ಸಂಹಿತೆಗಳು ಶ್ರಮಜೀವಿಗಳ ಬದುಕುವ ಹಕ್ಕನ್ನೂ ಕಸಿದುಕೊಳ್ಳುವ ಕರಾಳ ಅಧ್ಯಾಯವನ್ನು ತೆರೆಯಲಿವೆ.
ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, ಜೀವನೋಪಾಯದ ರಕ್ಷಣೆಗಾಗಿ ಉದ್ಯಮಗಳನ್ನು ಕಳೆದುಕೊಳ್ಳುವ ಸ್ವಾವಲಂಬಿ ಭಾರತ ಸತ್ತುಹೋಗಿದೆ. ಇಂದು ಉದ್ಯಮಿಗಳ ಹಿತಾಸಕ್ತಿ ಕಾಪಾಡಲು ನಮ್ಮ ರಾಜಕೀಯ ವ್ಯವಸ್ಥೆ ಕಾರ್ಮಿಕರ ಹಿತಾಸಕ್ತಿಗಳನ್ನು ಬಲಿಕೊಡಲು ಸಿದ್ಧವಾಗಿದೆ. ಅಳಿವು ಉಳಿವಿನ ಪ್ರಶ್ನೆ ಎದುರಾದಾಗ ಸಹಜವಾಗಿಯೇ ಕಾರ್ಮಿಕರು ಇದ್ದುದರಲ್ಲಿ ತೃಪ್ತಿಪಟ್ಟುಕೊಳ್ಳುವ ಸಾಂಪ್ರದಾಯಿಕ ಬದುಕನ್ನು ಅಪ್ಪಿಕೊಂಡುಬಿಡುತ್ತಾರೆ.
ಈ ಜಟಿಲ ಸವಾಲುಗಳ ನಡುವೆಯೇ ಭಾರತದ “ ಪ್ರಗತಿಪರ-ಜನಪರ ” ಹೋರಾಟಗಳು, ಸಂಘರ್ಷದ ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಮೂಲತಃ ಊಳಿಗಮಾನ್ಯ ಧೋರಣೆಯನ್ನೇ ಪ್ರತಿಪಾದಿಸುವ ರೈತ ಸಂಘಟನೆಗಳು ಒಂದು ಪ್ರಜಾಸತ್ತಾತ್ಮಕ ಹೋರಾಟಕ್ಕೆ ಹೊಸ ಆಯಾಮವನ್ನು ನೀಡಿರುವುದು ವಿಡಂಬನೆ ಎನಿಸಿದರೂ, ಚಾರಿತ್ರಿಕವೂ ಆಗಿದೆ. ಮುಂಬರುವ ದಿನಗಳ ಕಾರ್ಮಿಕ ಸಂಘರ್ಷಗಳಿಗೆ ಈ ರೈತ ಮುಷ್ಕರ ಸ್ಫೂರ್ತಿಯಾಗಲಿಕ್ಕೂ ಸಾಕು.
ಈ ಹೋರಾಟದ ಗರ್ಭದಲ್ಲೇ ನೂರಾರು ಜೀವನ್ಮುಖಿ ಸಂಘರ್ಷಗಳು ಅಡಗಿರುವುದನ್ನು ಗಮನಿಸುವುದು ಸಮಾಜೋ ಆರ್ಥಿಕ ಮತ್ತು ರಾಜಕೀಯ ಪ್ರಜಾಪ್ರಭುತ್ವಕ್ಕಾಗಿ ಹಂಬಲಿಸುವ ಮನಸುಗಳ ಆದ್ಯತೆಯೂ ಆಗಬೇಕಿದೆ. ಏಕೆಂದರೆ ರೈತರ ಇಂದಿನ ಹೋರಾಟ ಸಮಸ್ತ ಜನತೆಯ ಹೋರಾಟವೂ ಆಗಿದೆ.
ಈ ನಡುವೆಯೇ ನಮ್ಮ ರಾಜಕೀಯ ಪ್ರಜಾಪ್ರಭುತ್ವದ ಸ್ಥಾವರಗಳು, ಸ್ತಂಭಗಳು ಕುಸಿಯುತ್ತಿವೆ. ಪ್ರಜಾತಂತ್ರದ ನಾಲ್ಕನೆಯ ಸ್ತಂಭ ಎನ್ನಲಾಗುವ ಮಾಧ್ಯಮಗಳು ಈಗಾಗಲೇ ಕುಸಿದು ಭೂತಳಕ್ಕೆ ಸೇರಿರುವುದರಿಂದ ಉಳಿದ ಸ್ಥಾವರ-ಸ್ತಂಭಗಳನ್ನಾದರೂ ಉಳಿಸಿಕೊಳ್ಳುವ, ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ. ಈ ಸಾಂಸ್ಥಿಕ ಪ್ರಜಾಪ್ರಭುತ್ವದ ತಳಹದಿ ಭಾರತದ ಒಕ್ಕೂಟ ವ್ಯವಸ್ಥೆ. ಇಂದು ಒಕ್ಕೂಟ ವ್ಯವಸ್ಥೆಯೇ ಅಪಾಯದ ಅಂಚಿನಲ್ಲಿರುವುದನ್ನು ದೆಹಲಿ ಸರ್ಕಾರದ ಸುತ್ತಲಿನ ಬೆಳವಣಿಗೆಗಳಲ್ಲಿ ಕಾಣುತ್ತಿದ್ದೇವೆ.
ಸಂವಿಧಾನ ವಿಧಿ 370ನ್ನು ರದ್ದುಪಡಿಸಿ, ಜಮ್ಮು ಕಾಶ್ಮೀರ ರಾಜ್ಯದ ಭಾಗವಾಗಿದ್ದ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದಾಗಲೇ, ಭಾರತದ ಒಕ್ಕೂಟ ವ್ಯವಸ್ಥೆಗೆ ಸಂಚಕಾರ ಎದುರಾಗುವ ಸೂಚನೆಗಳು ದೊರೆತಿದ್ದವು. ಈಗ ದೇಶದ ರಾಜಧಾನಿಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿರುವ ದೆಹಲಿಯ “ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ” 2021 ಜಾರಿಯಾದರೆ ಬಹುಶಃ ಮುಂಬರುವ ದಿನಗಳಲ್ಲಿ ದೆಹಲಿಯ ಜನತೆ ಮತಗಟ್ಟೆಗಳಿಂದ ಶಾಶ್ವತವಾಗಿ ದೂರ ಉಳಿಯಬಹುದು. ಏಕೆಂದರೆ ದೆಹಲಿಯ ಪ್ರಜೆಗಳು ಚುನಾಯಿಸುವ ಸರ್ಕಾರದ ಯಾವುದೇ ನಿರ್ಧಾರಗಳು ಊರ್ಜಿತವಾಗಬೇಕಾದರೆ ಲೆಫ್ಟಿನೆಂಟ್ ಜನರಲ್ ಸಮ್ಮತಿ ಪಡೆಯಬೇಕಾಗುತ್ತದೆ.
ದೆಹಲಿಯ ವಿಧಾನಸಭೆ ಅಂಗೀಕರಿಸುವ ಯಾವುದೇ ಕಾಯ್ದೆಯಲ್ಲಿ ಉಲ್ಲೇಖವಾಗುವ ‘ಸರಕಾರ’ ಎನ್ನುವ ಪದವನ್ನು ‘ಲೆಫ್ಟಿನೆಂಟ್ ಗವರ್ನರ್’ ಎಂದೇ ಪರಿಭಾವಿಸಲಾಗುತ್ತದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ. ಅಂದರೆ ದೆಹಲಿ ಸರ್ಕಾರ ಅನುಮೋದಿಸುವ ಯಾವುದೇ ಮಸೂದೆಗೆ ಅಂಗೀಕಾರ ನೀಡಲು ಲೆಫ್ಟಿನೆಂಟ್ ಗವರ್ನರ್ ನಿರಾಕರಿಸಬಹುದು ಅಥವಾ ರಾಷ್ಟ್ರಪತಿ ಕಚೇರಿಗೆ ರವಾನಿಸಬಹುದು. ಇನ್ನೂ ಆತಂಕಕಾರಿ ಅಂಶ ಎಂದರೆ ದೆಹಲಿಯ ಕಾರ್ಯಾಂಗ ಯಾವುದೇ ಕಾರ್ಯವನ್ನು ಕೈಗೊಳ್ಳುವ ಮುನ್ನ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಪಡೆಯಬೇಕಾಗುತ್ತದೆ.
ಕೇಂದ್ರಾಡಳಿತ ದೆಹಲಿಗೆ ವಿಶೇಷ ಸ್ಥಾನಮಾನ ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಸಂವಿಧಾನದ ಅನುಚ್ಚೇದ 293(ಎಎ)ನ್ನು ಆಧರಿಸಿ ತೀರ್ಪು ನೀಡಿತ್ತು. ಈ ಅನುಚ್ಚೇದವನ್ನು ಈವರೆಗೂ ತಿದ್ದುಪಡಿ ಮಾಡಲಾಗಿಲ್ಲ. ಹಾಗಾಗಿ ಇದರ ಅನ್ವಯ ರೂಪಿಸಲಾಗಿರುವ ದೆಹಲಿಯ ಆಡಳಿತ ವ್ಯವಸ್ಥೆಯನ್ನು ಬದಲಾಯಿಸುವ ಯಾವುದೇ ಮಸೂದೆ ಅಸಾಂವಿಧಾನಿಕ ಮತ್ತು ಕಾನೂನುಬಾಹಿರವಾಗುತ್ತವೆ. ಕೇಂದ್ರ ಸರ್ಕಾರ ಈ ದುಸ್ಸಾಹಸಕ್ಕೆ ಕೈಹಾಕಿದೆ.
ಈ ತೀರ್ಪಿನ ಅನುಸಾರ ದೆಹಲಿ ಸರ್ಕಾರ ಜಾರಿಗೊಳಿಸುವ ಯಾವುದೇ ಕಾನೂನು ಕಾಯ್ದೆಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್ಗೆ ಮಾಹಿತಿ ನೀಡಬೇಕಾಗುತ್ತದೆ. ಒಂದು ವೇಳೆ ಭಿನ್ನಾಭಿಪ್ರಾಯ ತಲೆದೋರಿದರೆ ಅದನ್ನು ರಾಷ್ಟ್ರಪತಿಯವರ ಸಮ್ಮತಿಗೆ ಕಳುಹಿಸುವ ಅವಕಾಶವೂ ಇರುತ್ತದೆ. ಆದರೆ ರಾಷ್ಟ್ರಪತಿಯವರ ಸಮ್ಮತಿ ಪಡೆಯುವುದು ಕೇವಲ ಅಪವಾದವಾಗಿರಬೇಕಷ್ಟೇ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಚುನಾಯಿತ ಜನಪ್ರತಿನಿಧಿಗಳು ಮತದಾರರಿಗೆ ಮತ್ತು ಸಾರ್ವಭೌಮ ಪ್ರಜೆಗಳಿಗೆ ಉತ್ತರದಾಯಿತ್ವ ಹೊಂದಿರುವುದು ಪ್ರಜಾತಂತ್ರದ ಲಕ್ಷಣವಾಗಿದ್ದು ಸರ್ಕಾರದ ಯಾವುದೇ ಯೋಜನೆ, ಕಾಯ್ದೆ ಕಾನೂನುಗಳನ್ನು ಜನರಿಂದ ಚುನಾಯಿತರಾದ ಪ್ರತಿನಿಧಿಗಳೇ ನಿರ್ಧರಿಸಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದರೆ ಒಂದೆಡೆ ಸಂವಿಧಾನವನ್ನೂ ಮತ್ತೊಂದೆಡೆ ದೇಶದ ಸರ್ವೋಚ್ಚ ನ್ಯಾಯಾಲಯವನ್ನೂ ಧಿಕ್ಕರಿಸಿ ಕೇಂದ್ರ ಸರ್ಕಾರ ಹೊಸ ಮಸೂದೆಗೆ ಅಂಗೀಕಾರ ನೀಡಿದೆ.
ಕಳೆದ ಹಲವು ವರ್ಷಗಳಿಂದಲೂ ದೆಹಲಿಯಲ್ಲಿ ಅಧಿಕಾರ ಹಿಡಿಯಲು ಹೆಣಗಾಡುತ್ತಿರುವ ಬಿಜೆಪಿ ಈ ರೀತಿಯ ವಾಮಮಾರ್ಗದಿಂದ ತನ್ನ ಅಧಿಪತ್ಯ ಸಾಧಿಸಲು ಲೆಫ್ಟಿನೆಂಟ್ ಗವರ್ನರ್ ಕಚೇರಿಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.
ಈ ಮಸೂದೆಯ ಬಗ್ಗೆ ಸಹಜವಾಗಿಯೇ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಇದು ಕೇವಲ ಒಂದು ಭೂ ಪ್ರದೇಶದ, ಪ್ರಾಂತ್ಯದ , ರಾಜ್ಯದ ಪ್ರಶ್ನೆಯಲ್ಲ. ಇದು ಭಾರತದ ಗಣತಂತ್ರ ವ್ಯವಸ್ಥೆಯ, ಒಕ್ಕೂಟ ವ್ಯವಸ್ಥೆಯ ಮತ್ತು ಸಾಂವಿಧಾನಿಕ ನಿಯಮಗಳ ಪ್ರಶ್ನೆ. ಇಂದು ದೆಹಲಿಯಲ್ಲಾದುದೇ ನಾಳೆ ಪಾಂಡಿಚೆರಿಯಲ್ಲಿ ಆಗಬಹುದು. ಅಲ್ಲಿಯೂ ಚುನಾವಣೆ ನಡೆಯಲಿದೆ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗದೆ ಹೋದರೆ ಅಲ್ಲಿಯೂ ಲೆಫ್ಟಿನೆಂಟ್ ಗವರ್ನರ್ ಆಳಲು ಅವಕಾಶ ಕಲ್ಪಿಸಬಹುದು. ಡಿಯು ಮತ್ತು ಡಮನ್, ಅಂಡಮಾನ್ ಮತ್ತು ನಿಕೋಬಾರ್, ಲಡಾಖ್ ಹೀಗೆ ಎಲ್ಲ ಕೇಂದ್ರಾಡಳಿತ ಪ್ರದೇಶಗಳೂ ವಸ್ತುಶಃ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಅಧಿಪತ್ಯಕ್ಕೆ ಒಳಪಡುವ ಸಾಧ್ಯತೆಗಳಿವೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಮಸೂದೆಯನ್ನು ಆಡಳಿತ ಪಕ್ಷದಲ್ಲಿರುವ ಎಲ್ಲ ಸಂವಿಧಾನ ಪ್ರೇಮಿಗಳೂ ವಿರೋಧಿಸಬೇಕಿತ್ತಲ್ಲವೇ ? ಡಾ ಅಂಬೇಡ್ಕರ್ ಅವರ ಸಾಂವಿಧಾನಿಕ ಚಿಂತನಾ ವಾಹಿನಿಯಲ್ಲಿ ಪ್ರಮುಖವಾದ ತೊರೆಗಳೆಂದರೆ ಈ ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಹಾಗೂ ಇದಕ್ಕೆ ಪೂರಕವಾದ ಮೂಲಭೂತ ಹಕ್ಕುಗಳು. ತಮ್ಮ ಪಕ್ಷಕ್ಕೆ ನಿಷ್ಠೆಯಿಂದಿರಬೇಕು ಎನ್ನುವುದು ಎಲ್ಲ ರಾಜಕಾರಣಿಗಳ ಮೂಲ ಮಂತ್ರ , ಇದು ಸಹಜ. ಆದರೆ ಸಂವಿಧಾನವನ್ನೇ ಅಪಮೌಲ್ಯಗೊಳಿಸುವ ಕಾಯ್ದೆ ಕಾನೂನುಗಳನ್ನು ಜಾರಿಗೊಳಿಸಿದಾಗಲೂ ಸ್ವಾಮಿನಿಷ್ಠೆಯಿಂದಿರುವುದು ಅಧಿಕಾರ ದಾಹದ ದ್ಯೋತಕವಾಗಷ್ಟೇ ಕಾಣುತ್ತದೆ.
ಮುಂದೊಂದು ದಿನ ಬೆಳಗಾವಿ ವಿವಾದ ರಾಜಕೀಯ ಲಾಭ ನಷ್ಟಗಳ ಕೇಂದ್ರ ಬಿಂದುವಾದರೆ, ಬೆಳಗಾವಿ ಸುತ್ತಲಿನ ವಿವಾದಿತ ಪ್ರದೇಶಗಳನ್ನೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ, ಇದೇ ನಿಯಮವನ್ನು ಜಾರಿಗೊಳಿಸಬಹುದಲ್ಲವೇ ? ಒಂದು ರಾಜ್ಯದ ಭಾಗವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವ ಪರಂಪರೆಗೆ ಲಡಾಖ್ ನಾಂದಿ ಹಾಡಿದೆ ಅಲ್ಲವೇ ?
ಸಂವಿಧಾನ ಶಿಲ್ಪಿಗಳ ಸಾಮಾಜಿಕ ಪ್ರಜಾಪ್ರಭುತ್ವದ ಕನಸು ಕನಸಾಗಿಯೇ ಉಳಿದಿದೆ, ಈಗ ರಾಜಕೀಯ ಪ್ರಜಾಪ್ರಭುತ್ವದ ಕನಸೂ ಮಣ್ಣುಪಾಲಾಗುತ್ತಿದೆ. ಆರ್ಥಿಕ ಪ್ರಜಾಪ್ರಭುತ್ವದ ಕನಸು ಹಂತಹಂತವಾಗಿ ಅವಸಾನ ಕಾಣುತ್ತಿದೆ. ಈ ಹೊತ್ತಿನಲ್ಲೂ ದೇಶದ ಸುಶಿಕ್ಷಿತ ಹಿತವಲಯದ ವರ್ಗ ಉನ್ಮಾದದಿಂದ ಹೊರಬರದೆ ಇರುವುದು ಅಚ್ಚರಿ ಮೂಡಿಸುತ್ತದೆ. ಭಾರತ ಖಂಡಿತವಾಗಿಯೂ ಹೀಗಿರಲಿಲ್ಲ. “ ನಾನು ಅಂಬೇಡ್ಕರ್ ಅವರನ್ನೇ ಅನುಸರಿಸುತ್ತೇನೆ, ಅಂಬೇಡ್ಕರ್ ಹೊರತು ಮತ್ತಾರನ್ನೂ ಅನುಸರಿಸುವುದಿಲ್ಲ, ಅಂಬೇಡ್ಕರ್ ಹೇಳಿರುವುದೇ ಸತ್ಯ , ಸಂವಿಧಾನದ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದಾಗಿ ಪ್ರಮಾಣೀಕರಿಸುತ್ತೇನೆ ” ಎಂದು ನಿತ್ಯ ಭಜನೆ ಮಾಡುವ ನಮ್ಮ ಎಲ್ಲ ಜನಪ್ರತಿನಿಧಿಗಳು ತಮಗೆ ಸಂವಿಧಾನದ ಪರಿಜ್ಞಾನ ಇಲ್ಲ ಎಂದು ಒಪ್ಪಿಕೊಳ್ಳಲಿ ಅಥವಾ ಸಂವಿಧಾನದ ಬಗ್ಗೆ ಕೊಂಚಮಟ್ಟಿಗೆ ಅರಿವು ಇದ್ದರೂ ಇಂತಹ ಪ್ರಜಾತಂತ್ರ ವಿರೋಧಿ ಕಾನೂನು, ಕಾಯ್ದೆ, ಮಸೂದೆಗಳನ್ನು ವಿರೋಧಿಸಿ ದನಿ ಎತ್ತಲಿ. ಒಂದೆರಡು ಅವಧಿಯ ಅಧಿಕಾರದ ಸವಿಯುಂಡು ಜನಪ್ರತಿನಿಧಿಗಳು ಶಾಶ್ವತವಾಗಿ ಮಣ್ಣಾಗಿ ಹೋಗುತ್ತಾರೆ. ಇಂದಿನ ಪೀಳಿಗೆ ಮುಂದೊಂದು ದಿನ ಇಲ್ಲವಾಗುತ್ತದೆ.
ಆದರೆ ಪ್ರಜಾಸತ್ತಾತ್ಮಕ ಭಾರತ ಶಾಶ್ವತವಾಗಿ ಉಳಿದಿರಬೇಕಲ್ಲವೇ ? ಇಂದು ದೇಶದ ಸಾರ್ವಭೌಮ ಪ್ರಜೆಗಳು ವಿಶ್ವಾಸಪೂರ್ವಕವಾಗಿ ತಮ್ಮ ಪ್ರತಿನಿಧಿಗಳನ್ನು ಸಂಸತ್ತಿಗೆ, ವಿಧಾನಸಭೆಗಳಿಗೆ ಆಯ್ಕೆ ಮಾಡಿ ಕಳಿಸಿರುವುದು “ ಈ ದೇಶದ ಸಂವಿಧಾನ ಬಯಸುವಂತಹ ಪ್ರಜಾಪ್ರಭುತ್ವವನ್ನು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ” ಸಂರಕ್ಷಿಸಲೆಂದೇ ಅಲ್ಲವೇ ? ತಾವು ಅಲಂಕರಿಸಿರುವ ಅಧಿಕಾರಪೀಠಗಳು, ಸವಿಯುತ್ತಿರುವ ಸವಲತ್ತು ಸೌಲಭ್ಯಗಳು ಈ ದೇಶದ ಪ್ರತಿಯೊಬ್ಬ ಸಾರ್ವಭೌಮ ಪ್ರಜೆಯ ಆಸ್ತಿ ಎಂಬ ಪರಿವೆ ಜನಪ್ರತಿನಿಧಿಗಳಲ್ಲಿರಬೇಕಲ್ಲವೇ ? ಈ ಪರಿವೆ ಇಲ್ಲದಿರುವುದರಿಂದಲೇ ಭಾರತ ಅನಾಹುತಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇತ್ತ ಸಾಮಾಜಿಕ ಪ್ರಜಾಪ್ರಭುತ್ವವೂ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವವೂ ಇಲ್ಲದೆ ಸೊರಗುವಂತಾಗಿದೆ.
ಜನಪ್ರತಿನಿಧಿಗಳ ಮೇಲಿರುವಷ್ಟೇ ನೈತಿಕ, ಸಾಂವಿಧಾನಿಕ ಹೊಣೆ ಜನತೆಯ ಮೇಲೆಯೂ ಇರುತ್ತದೆ. ಕಳೆದ ಒಂದು ದಶಕದ ಉನ್ಮತ್ತ ರಾಜಕಾರಣಕ್ಕೆ ಬಲಿಯಾಗಿ ತಮ್ಮ ಸ್ವಪ್ರಜ್ಞೆಯನ್ನೇ ಕಳೆದುಕೊಂಡಂತಿರುವ ಒಂದು ಬೃಹತ್ ಮಧ್ಯಮ ವರ್ಗ ಮತ್ತು ಯುವ ಪೀಳಿಗೆ ತಮ್ಮ ಕಣ್ಣೆದುರಿನ ಅಪಾಯಗಳನ್ನು ಅರಿತುಕೊಳ್ಳಬೇಕಿದೆ. ಇವರ ಕಣ್ಣುಗಳಿಗೆ ಕವಿದಿರುವ ಪೊರೆಯನ್ನು ಕಳಚಿಹಾಕಲು ಜಾಗೃತಿ ಮೂಡಿಸುವ ಹೊಣೆಗಾರಿಕೆ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಸಕ್ರಿಯವಾಗಿರುವ ಸಂಘಟನೆಗಳ ಮೇಲೆಯೂ ಇದೆ. ಸಾಹಿತಿ ಕಲಾವಿದರು, ವಿಜ್ಞಾನಿಗಳು, ವಿದ್ಯಾರ್ಥಿ ಯುವಜನತೆ, ವೈದ್ಯಕೀಯ ಲೋಕ ಮತ್ತು ಮಣ್ಣ ಋಣಕ್ಕೆ ಬದ್ಧರಾದ ಪ್ರತಿಯೊಬ್ಬ ಪ್ರಜೆಯಲ್ಲೂ ಈ ಜಾಗೃತಿ ಮೂಡದೆ ಹೋದರೆ ಬಹುಶಃ ಭಾರತೀಯ ಪ್ರಜಾಪ್ರಭುತ್ವ ಎನ್ನುವ ಕಲ್ಪನೆಯೇ ವಸ್ತು ಸಂಗ್ರಹಾಲಯದಲ್ಲಿ ನೋಡಬಹುದಾದ ಪಳೆಯುಳಿಕೆಯಾಗಿಬಿಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


