ಬಹಿರಂಗ
ನಿಷ್ಕ್ರಿಯತೆ ಉನ್ಮಾದದ ನಡುವೆ ಪ್ರಜಾಸತ್ತೆಯ ರಕ್ಷಣೆಗಾಗಿ
- ನಾ ದಿವಾಕರ
ಪ್ರಜಾಪ್ರಭುತ್ವ ಎಂದರೆ ಅದು ಕೇವಲ ಒಂದು ಆಡಳಿತ ವ್ಯವಸ್ಥೆ ಅಲ್ಲ, ಒಂದು ನಾಗರಿಕ ಸಮಾಜವನ್ನು ಮಾನವೀಯ ಮೌಲ್ಯಗಳ ಚೌಕಟ್ಟಿನಲ್ಲಿ ಬಂಧಿಸುವ ಒಂದು ಸಂವೇದನಾಶೀಲ ತತ್ವ . ಈ ಸಂವೇದನೆಯನ್ನು ಕಳೆದುಕೊಂಡ ಯಾವುದೇ ಸಮಾಜ ಸುಲಭವಾಗಿ ಸರ್ವಾಧಿಕಾರದತ್ತ ಹೊರಳಿಬಿಡುತ್ತದೆ. ತನ್ನೊಳಗಿನ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡ ಮನುಷ್ಯ ತನ್ನ ಸುತ್ತಲಿನ ಶೋಷಣೆಗೆ, ಹಿಂಸೆಗೆ, ಅನ್ಯಾಯಗಳಿಗೆ ಕುರುಡಾಗಿಬಿಡುತ್ತಾನೆ.
ಸ್ವಾಭಾವಿಕವಾಗಿಯೇ ಒಂದು ಸಮಾಜವೂ ಇದೇ ಸನ್ನಿವೇಶವನ್ನು ಎದುರಿಸುತ್ತದೆ. ರಾಜಕೀಯವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಒಪ್ಪಿಕೊಳ್ಳುವ ಒಂದು ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ನೆಲೆಗಟ್ಟಿನಲ್ಲೂ ಪ್ರಜಾಪ್ರಭುತ್ವ ಸ್ಥಾಪಿತವಾದಲ್ಲಿ ಮಾತ್ರ ಒಂದು ಸಮ ಸಮಾಜದ ನಿರ್ಮಾಣ ಸಾಧ್ಯ ಎಂದು ಡಾ ಬಿ ಆರ್ ಅಂಬೇಡ್ಕರ್ ಪ್ರತಿಪಾದಿಸುತ್ತಾರೆ.
ಆತ್ಮನಿರ್ಭರ ಭಾರತದ ಇಂದಿನ ಪರಿಸ್ಥಿತಿಯನ್ನು ನೋಡಿದರೆ ಈ ದಾರ್ಶನಿಕ ದೃಷ್ಟಿಕೋನ ಎಷ್ಟು ವಾಸ್ತವತೆಯಿಂದ ಕೂಡಿತ್ತು ಎನಿಸುತ್ತದೆ. ಇಂದು ರಾಜಕೀಯ ನೆಲೆಯಲ್ಲಿ ಭಾರತ ಪ್ರಜಾಪ್ರಭುತ್ವದ ತಳಹದಿಯನ್ನೇ ಕಳೆದುಕೊಳ್ಳುತ್ತಿದೆ. ಗ್ರಾಂಥಿಕವಾಗಿ ಭಾರತದ ಶ್ರೇಷ್ಠ ಸಂವಿಧಾನ ಸುರಕ್ಷಿತವಾಗಿಯೇ ಇದ್ದರೂ, ಮೌಲಿಕವಾಗಿ ಸಂವಿಧಾನದ ಒಂದೊಂದೇ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ದಿನಬೆಳಗಾದರೆ ಸಂವಿಧಾನದ ಧ್ಯಾನ ಮಾಡುವ ಅಸಂಖ್ಯಾತ ಜನಪ್ರತಿನಿಧಿಗಳು ಮೌನವಾಗಿಯೇ ಎಲ್ಲವನ್ನೂ ಸಹಿಸಿಕೊಳ್ಳುತ್ತಿದ್ದಾರೆ. ಉನ್ಮತ್ತ ಮನಸ್ಥಿತಿ ತಲುಪಿರುವ ನಾಗರಿಕ ಸಮಾಜದ ಬೃಹತ್ ವರ್ಗ ಸಂಪೂರ್ಣ ನಿಷ್ಕ್ರಿಯವಾಗಿದೆ.
ಅಸಮಾನತೆ, ಅಸಹಿಷ್ಣುತೆ ಮತ್ತು ಶ್ರೇಷ್ಠತೆಯ ವ್ಯಸನದೊಂದಿಗೇ ಶತಮಾನಗಳನ್ನು ಕಳೆದಿರುವ ಭಾರತೀಯ ಸಮಾಜ ತನ್ನ ಸಾಂಪ್ರದಾಯಿಕ ಪೊರೆಯನ್ನು ಇನ್ನೂ ಸಂಪೂರ್ಣವಾಗಿ ಕಳಚಿಹಾಕಿಲ್ಲ ಎನ್ನುವುದು ಕಳೆದ ಹಲವು ವರ್ಷಗಳಲ್ಲಿ ಸ್ಪಷ್ಟವಾಗಿ ಸಾಬೀತಾಗಿದೆ. ಅನ್ಯಾಯಗಳನ್ನು ಸಹಿಸಿಕೊಳ್ಳುವುದನ್ನು ಸಹಿಷ್ಣುತೆ ಎನ್ನುವುದಾದರೆ ಭಾರತ ಸಹಿಷ್ಣುತೆಯ ಕರ್ಮಭೂಮಿ ಎಂದೇ ಹೇಳಬಹುದು. ಇದು ವಾಸ್ತವವೂ ಹೌದು.
ಇಲ್ಲಿ ನ್ಯಾಯಾನ್ಯಾಯಗಳ ನಿಷ್ಕರ್ಷೆಯಾಗುವುದು ಮನುಜ ಭೂಮಿಕೆಯ ಮೇಲಲ್ಲ. ಜಾತಿ-ಧರ್ಮ-ಸಮುದಾಯದ ಅಸ್ಮಿತೆಗಳ ಭೂಮಿಕೆಯ ಮೇಲೆ. ಅನ್ಯಾಯಕ್ಕೊಳಗಾದವರ, ದೌರ್ಜನ್ಯಕ್ಕೊಳಗಾದವರ ಸಮಾಜೋ ಸಾಂಸ್ಕೃತಿಕ ಅಸ್ಮಿತೆಗಳು ನ್ಯಾಯದ ಪರಾಮರ್ಶೆಗೆ ವೇದಿಕೆಯಾಗುತ್ತವೆ. ಭಾರತದ ಸಾಂಪ್ರದಾಯಿಕ ಸಮಾಜ ಎಷ್ಟು ಬಲಿಷ್ಠವಾಗಿದೆ ಎಂದರೆ ತುಳಿತಕ್ಕೊಳಗಾದ ಸಮುದಾಯದಿಂದಲೇ ಬೆಳೆದು ನಿಂತವರೂ ಸಹ ತಮ್ಮೆದುರಿನ ದೌರ್ಜನ್ಯಕ್ಕೆ ಕುರುಡಾಗಿಬಿಡುತ್ತಾರೆ. ಇದು ನಮ್ಮ ದೇಶದ ಸಾಂಸ್ಕೃತಿಕ ನಾಗರಿಕತೆ ಶತಮಾನಗಳಿಂದ ಸೃಷ್ಟಿಸಿರುವ ವಿಕೃತ ವಾತಾವರಣದ ಫಲ.
ತಮ್ಮ ಅಧಿಕಾರ, ಅಸ್ತಿತ್ವ ಮತ್ತು ರಾಜಕೀಯ ಪ್ರಾಬಲ್ಯ ಕಾಪಾಡಿಕೊಳ್ಳಲು ದೇಶಾದ್ಯಂತ ನೂರಾರು ಮಸಣಗಳನ್ನು ಸೃಷ್ಟಿಸಿ, ಸಾವಿರಾರು ಜನರ ಹತ್ಯೆಗೈದಿರುವ ಒಂದು ರಾಜಕೀಯ ಆಡಳಿತ ವ್ಯವಸ್ಥೆಯಲ್ಲಿ , ಜನಸಾಮಾನ್ಯರ ಶವಸಂಸ್ಕಾರಕ್ಕೆ ಸೂಕ್ತವಾದ ಸ್ಮಶಾನ ಇಲ್ಲದಿರುವುದನ್ನು ನೋಡಿದರೆ ನಾವು ಎಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಅರಿವಾಗುತ್ತದೆ. ಇದು ಕೇವಲ ಒಂದು ಕೊರಟಗೆರೆಯ ಪ್ರಶ್ನೆಯಲ್ಲ.
ತುಮಕೂರು ಬಳಿ ಇರುವ ಕೊರಟಗೆರೆಯಲ್ಲಿ ದಲಿತ ಕುಟುಂಬದ ಒಂದು ಹಸುಳೆಯ ಶವಕ್ಕೆ ಮಣ್ಣುಮಾಡಲು ಅವಕಾಶವೀಯದೆ, ಹೂತ ಶವವನ್ನು ಹೊರಕ್ಕೆ ತೆಗೆಸುವಷ್ಟು ಕ್ರೌರ್ಯ ನಮ್ಮ ನಡುವೆ ಇದೆ. ಈ ಘಟನೆಗೆ ಕಾರಣವಾದವರ ವಿಕೃತಿ, ಕ್ರೌರ್ಯ ಜಾತಿ ಪೀಡಿತ ಸಮಾಜದ ಒಂದು ಆಯಾಮವನ್ನು ತೋರಿಸಿದರೆ, ಈ ಘಟನೆಯ ಬಗ್ಗೆ ಪ್ರತಿಕ್ರಯಿಸಲೂ ಮುಂದಾಗದೆ ನಿಷ್ಕ್ರಿಯ ಮೌನ ವಹಿಸಿರುವ ಚುನಾಯಿತ ಪ್ರತಿನಿಧಿಗಳು, ಮಾಧ್ಯಮಗಳು ಮತ್ತು ನಾಗರಿಕ ಸಮಾಜ ಈ ಸಮಾಜದ ನಿರ್ಲಜ್ಜತೆಯನ್ನು ಹೊರಗೆಡಹಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ, 21ನೆಯ ಶತಮಾನದ ಮೂರನೆಯ ದಶಕದಲ್ಲೂ ಸಹ, ನಾವು ಹಲವಾರು ಕೊರಟಗೆರೆಗಳನ್ನು ಕಂಡಿದ್ದೇವೆ. ಒಂದೆಡೆ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸುವ ಸಮಾಜವೇ ಮತ್ತೊಂದೆಡೆ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಸಂತ್ರಸ್ತೆಯೊಬ್ಬಳ ಶವಸಂಸ್ಕಾರವನ್ನು ರಾತ್ರೋರಾತ್ರಿ ನಡೆಸುತ್ತದೆ.. ಇಲ್ಲಿ ಹೂಳಲಾಗಿದ್ದ ಶವವನ್ನು ಹೊರಗೆಳೆಯಲಾಗುತ್ತದೆ ಅಲ್ಲಿ ಶವದ ಸುಳಿವು ಸಿಗದಂತೆ ಸುಟ್ಟುಹಾಕಲಾಗುತ್ತದೆ.
ಎರಡೂ ಶವಗಳು ಸಾಂಪ್ರದಾಯಿಕ ಭಾರತದ ದೃಷ್ಟಿಯಲ್ಲಿ ಬಹಿಷ್ಕೃತವೇ ಆಗಿರುವುದು ಕಾಕತಾಳೀಯವೇನಲ್ಲ. ಈ ಎರಡು ವೈಪರೀತ್ಯಗಳ ನಡುವೆ ಒಂದು ನಾಗರಿಕತೆಯ ಎಳೆಯನ್ನು ಶೋಧಿಸಲು ಈ ದೇಶದ ಕೆಲವೇ ಕೆಲವು ಮನಸುಗಳು ಹಾತೊರೆಯುತ್ತಿವೆ. ಮತ್ತೊಂದೆಡೆ ನಾಗರಿಕ ಸಮಾಜದ ಒಂದು ವರ್ಗ ನಿಷ್ಕ್ರಿಯ ಮೌನ ವಹಿಸುತ್ತದೆ.
ಹುಟ್ಟಿನಿಂದ ಸಾಯುವವರೆಗೂ ಜಾತಿಯ ಚೌಕಟ್ಟಿನಲ್ಲೇ ಬದುಕು ಸವೆಸುವ ಭಾರತೀಯ ಸಮಾಜ ಮಸಣದಲ್ಲೂ ಜಾತಿ ಸೂಚಕಗಳನ್ನು ಹುಡುಕುವುದು ದುರಂತ ಅಲ್ಲವೇ ? ಹೂಳುವವರಿಗೆ ಅಸ್ಮಿತೆಯ ಪ್ರಶ್ನೆ ಕಾಡುವುದು ಸಹಜ ಆದರೆ ಹೂತು ಹೋಗುವ ಜೀವಕ್ಕೆ ಯಾವ ಅಸ್ಮಿತೆ ಇರಲು ಸಾಧ್ಯ ? ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನನ್ನು ಜಾತಿಯಿಂದಲೇ ಗುರುತಿಸಿಕೊಳ್ಳುತ್ತಾನೆ ಎಂದು ಅಂಬೇಡ್ಕರ್ ಹೇಳಿದ್ದುದು ಎಷ್ಟು ಮಾರ್ಮಿಕ ಅಲ್ಲವೇ ?
ಸಾವಿನ ನಂತರವೂ ಜಾತಿಯ ಭೂತ ನಮ್ಮ ಬೆನ್ನೇರಿರುತ್ತದೆ, ನಾವು ಜಾತಿಯ ಬೆನ್ನಟ್ಟಿ ನಡೆದಿರುತ್ತೇವೆ. ನಮ್ಮ ಅಂತರ್ ಪ್ರಜ್ಞೆಯನ್ನು ಪ್ರಕ್ಷುಬ್ಧಗೊಳಿಸುವ ಕೊರಟಗೆರೆಯಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ, ನಾವು ಸಂವಿಧಾನದ ರಕ್ಷಣೆಗೆ ಪಣ ತೊಡುತ್ತಲೇ ಇದ್ದೇವೆ.
70 ವರ್ಷಗಳ ನಂತರವೂ ಅಂಬೇಡ್ಕರ್ ಕನಸಿನ ಸಾಮಾಜಿಕ ಪ್ರಜಾಪ್ರಭುತ್ವವನ್ನು , ಗಾಂಧಿ ಕನಸಿನ ನಿರ್ಭೀತ ಪ್ರಾಮಾಣಿಕ ಸಮಾಜವನ್ನು ಸಾಧಿಸಲು ಸಾಧ್ಯವಾಗದ ಭಾರತ ಈಗ ರಾಜಕೀಯ ಪ್ರಜಾಪ್ರಭುತ್ವವನ್ನೂ ಕಳೆದುಕೊಳ್ಳುತ್ತಿದೆ. ಆರ್ಥಿಕವಾಗಿ ಭಾರತದ ಬಹುಸಂಖ್ಯೆಯ ಜನರು ಈಗಾಗಲೇ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ.
ತಾವೇ ಕಟ್ಟಿ ಬೆಳೆಸಿದ ಬೃಹತ್ ಸಾರ್ವಜನಿಕ ಉದ್ದಿಮೆಗಳು, ಸಂಸ್ಥೆಗಳು ತಮ್ಮ ಕಣ್ಣೆದುರಿನಲ್ಲೇ ಖಾಸಗಿ ಬಂಡವಾಳಿಗರ ಪಾಲಾಗುತ್ತಿರುವುದನ್ನು ಸಂಭ್ರಮಿಸುವ ಮಧ್ಯಮ ವರ್ಗದ ಉನ್ಮತ್ತರ ನಡುವೆಯೇ ಅಸಹಾಯಕರಂತೆ ಕಾಣುವ ಒಂದು ವರ್ಗವೂ ನಮ್ಮ ನಡುವೆ ಇದೆ. 136 ಕೋಟಿ ಜನಸಂಖ್ಯೆಗೆ ಅನ್ನ ಬೆಳೆಯುವ ರೈತ ಸಮುದಾಯ ತನ್ನ ನೆಲೆಯನ್ನು ಉಳಿಸಿಕೊಳ್ಳಲು 119 ದಿನಗಳಿಂದಲೂ ಹೋರಾಡುತ್ತಿದೆ.
ಮುಂಬರುವ ದಿನಗಳಲ್ಲಿ ಈ ರೈತಾಪಿಯೊಡನೆ ಕಾರ್ಮಿಕ ವರ್ಗವೂ ಸೇರಿಕೊಳ್ಳುತ್ತದೆ. ಸಂಘಟಿತ/ಅಸಂಘಟಿತ ಕಾರ್ಮಿಕ ವಲಯ ದಿನದಿಂದ ದಿನಕ್ಕೆ ಅನಿಶ್ಚಿತತೆಯನ್ನೇ ಎದುರಿಸುತ್ತಿದ್ದು ದೇಶದ ಸಕಲ ಸಂಪನ್ಮೂಲಗಳೂ ಖಾಸಗಿ ಕಾರ್ಪೋರೇಟ್ ಬಂಡವಾಳಿಗರ ಪಾಲಾಗುತ್ತಿರುವ ಸಂದರ್ಭದಲ್ಲಿ ದುಡಿಯುವ ವರ್ಗಗಳ ನಾಳಿನ ಪ್ರಶ್ನೆ ಜಟಿಲವಾಗುತ್ತಿದೆ. ಏಪ್ರಿಲ್ 1 ರಿಂದ ಜಾರಿಯಾಗಲಿರುವ ಹೊಸ ಕಾರ್ಮಿಕ ಸಂಹಿತೆಗಳು ಶ್ರಮಜೀವಿಗಳ ಬದುಕುವ ಹಕ್ಕನ್ನೂ ಕಸಿದುಕೊಳ್ಳುವ ಕರಾಳ ಅಧ್ಯಾಯವನ್ನು ತೆರೆಯಲಿವೆ.
ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, ಜೀವನೋಪಾಯದ ರಕ್ಷಣೆಗಾಗಿ ಉದ್ಯಮಗಳನ್ನು ಕಳೆದುಕೊಳ್ಳುವ ಸ್ವಾವಲಂಬಿ ಭಾರತ ಸತ್ತುಹೋಗಿದೆ. ಇಂದು ಉದ್ಯಮಿಗಳ ಹಿತಾಸಕ್ತಿ ಕಾಪಾಡಲು ನಮ್ಮ ರಾಜಕೀಯ ವ್ಯವಸ್ಥೆ ಕಾರ್ಮಿಕರ ಹಿತಾಸಕ್ತಿಗಳನ್ನು ಬಲಿಕೊಡಲು ಸಿದ್ಧವಾಗಿದೆ. ಅಳಿವು ಉಳಿವಿನ ಪ್ರಶ್ನೆ ಎದುರಾದಾಗ ಸಹಜವಾಗಿಯೇ ಕಾರ್ಮಿಕರು ಇದ್ದುದರಲ್ಲಿ ತೃಪ್ತಿಪಟ್ಟುಕೊಳ್ಳುವ ಸಾಂಪ್ರದಾಯಿಕ ಬದುಕನ್ನು ಅಪ್ಪಿಕೊಂಡುಬಿಡುತ್ತಾರೆ.
ಈ ಜಟಿಲ ಸವಾಲುಗಳ ನಡುವೆಯೇ ಭಾರತದ “ ಪ್ರಗತಿಪರ-ಜನಪರ ” ಹೋರಾಟಗಳು, ಸಂಘರ್ಷದ ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಮೂಲತಃ ಊಳಿಗಮಾನ್ಯ ಧೋರಣೆಯನ್ನೇ ಪ್ರತಿಪಾದಿಸುವ ರೈತ ಸಂಘಟನೆಗಳು ಒಂದು ಪ್ರಜಾಸತ್ತಾತ್ಮಕ ಹೋರಾಟಕ್ಕೆ ಹೊಸ ಆಯಾಮವನ್ನು ನೀಡಿರುವುದು ವಿಡಂಬನೆ ಎನಿಸಿದರೂ, ಚಾರಿತ್ರಿಕವೂ ಆಗಿದೆ. ಮುಂಬರುವ ದಿನಗಳ ಕಾರ್ಮಿಕ ಸಂಘರ್ಷಗಳಿಗೆ ಈ ರೈತ ಮುಷ್ಕರ ಸ್ಫೂರ್ತಿಯಾಗಲಿಕ್ಕೂ ಸಾಕು.
ಈ ಹೋರಾಟದ ಗರ್ಭದಲ್ಲೇ ನೂರಾರು ಜೀವನ್ಮುಖಿ ಸಂಘರ್ಷಗಳು ಅಡಗಿರುವುದನ್ನು ಗಮನಿಸುವುದು ಸಮಾಜೋ ಆರ್ಥಿಕ ಮತ್ತು ರಾಜಕೀಯ ಪ್ರಜಾಪ್ರಭುತ್ವಕ್ಕಾಗಿ ಹಂಬಲಿಸುವ ಮನಸುಗಳ ಆದ್ಯತೆಯೂ ಆಗಬೇಕಿದೆ. ಏಕೆಂದರೆ ರೈತರ ಇಂದಿನ ಹೋರಾಟ ಸಮಸ್ತ ಜನತೆಯ ಹೋರಾಟವೂ ಆಗಿದೆ.
ಈ ನಡುವೆಯೇ ನಮ್ಮ ರಾಜಕೀಯ ಪ್ರಜಾಪ್ರಭುತ್ವದ ಸ್ಥಾವರಗಳು, ಸ್ತಂಭಗಳು ಕುಸಿಯುತ್ತಿವೆ. ಪ್ರಜಾತಂತ್ರದ ನಾಲ್ಕನೆಯ ಸ್ತಂಭ ಎನ್ನಲಾಗುವ ಮಾಧ್ಯಮಗಳು ಈಗಾಗಲೇ ಕುಸಿದು ಭೂತಳಕ್ಕೆ ಸೇರಿರುವುದರಿಂದ ಉಳಿದ ಸ್ಥಾವರ-ಸ್ತಂಭಗಳನ್ನಾದರೂ ಉಳಿಸಿಕೊಳ್ಳುವ, ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ. ಈ ಸಾಂಸ್ಥಿಕ ಪ್ರಜಾಪ್ರಭುತ್ವದ ತಳಹದಿ ಭಾರತದ ಒಕ್ಕೂಟ ವ್ಯವಸ್ಥೆ. ಇಂದು ಒಕ್ಕೂಟ ವ್ಯವಸ್ಥೆಯೇ ಅಪಾಯದ ಅಂಚಿನಲ್ಲಿರುವುದನ್ನು ದೆಹಲಿ ಸರ್ಕಾರದ ಸುತ್ತಲಿನ ಬೆಳವಣಿಗೆಗಳಲ್ಲಿ ಕಾಣುತ್ತಿದ್ದೇವೆ.
ಸಂವಿಧಾನ ವಿಧಿ 370ನ್ನು ರದ್ದುಪಡಿಸಿ, ಜಮ್ಮು ಕಾಶ್ಮೀರ ರಾಜ್ಯದ ಭಾಗವಾಗಿದ್ದ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದಾಗಲೇ, ಭಾರತದ ಒಕ್ಕೂಟ ವ್ಯವಸ್ಥೆಗೆ ಸಂಚಕಾರ ಎದುರಾಗುವ ಸೂಚನೆಗಳು ದೊರೆತಿದ್ದವು. ಈಗ ದೇಶದ ರಾಜಧಾನಿಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿರುವ ದೆಹಲಿಯ “ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ” 2021 ಜಾರಿಯಾದರೆ ಬಹುಶಃ ಮುಂಬರುವ ದಿನಗಳಲ್ಲಿ ದೆಹಲಿಯ ಜನತೆ ಮತಗಟ್ಟೆಗಳಿಂದ ಶಾಶ್ವತವಾಗಿ ದೂರ ಉಳಿಯಬಹುದು. ಏಕೆಂದರೆ ದೆಹಲಿಯ ಪ್ರಜೆಗಳು ಚುನಾಯಿಸುವ ಸರ್ಕಾರದ ಯಾವುದೇ ನಿರ್ಧಾರಗಳು ಊರ್ಜಿತವಾಗಬೇಕಾದರೆ ಲೆಫ್ಟಿನೆಂಟ್ ಜನರಲ್ ಸಮ್ಮತಿ ಪಡೆಯಬೇಕಾಗುತ್ತದೆ.
ದೆಹಲಿಯ ವಿಧಾನಸಭೆ ಅಂಗೀಕರಿಸುವ ಯಾವುದೇ ಕಾಯ್ದೆಯಲ್ಲಿ ಉಲ್ಲೇಖವಾಗುವ ‘ಸರಕಾರ’ ಎನ್ನುವ ಪದವನ್ನು ‘ಲೆಫ್ಟಿನೆಂಟ್ ಗವರ್ನರ್’ ಎಂದೇ ಪರಿಭಾವಿಸಲಾಗುತ್ತದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ. ಅಂದರೆ ದೆಹಲಿ ಸರ್ಕಾರ ಅನುಮೋದಿಸುವ ಯಾವುದೇ ಮಸೂದೆಗೆ ಅಂಗೀಕಾರ ನೀಡಲು ಲೆಫ್ಟಿನೆಂಟ್ ಗವರ್ನರ್ ನಿರಾಕರಿಸಬಹುದು ಅಥವಾ ರಾಷ್ಟ್ರಪತಿ ಕಚೇರಿಗೆ ರವಾನಿಸಬಹುದು. ಇನ್ನೂ ಆತಂಕಕಾರಿ ಅಂಶ ಎಂದರೆ ದೆಹಲಿಯ ಕಾರ್ಯಾಂಗ ಯಾವುದೇ ಕಾರ್ಯವನ್ನು ಕೈಗೊಳ್ಳುವ ಮುನ್ನ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಪಡೆಯಬೇಕಾಗುತ್ತದೆ.
ಕೇಂದ್ರಾಡಳಿತ ದೆಹಲಿಗೆ ವಿಶೇಷ ಸ್ಥಾನಮಾನ ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಸಂವಿಧಾನದ ಅನುಚ್ಚೇದ 293(ಎಎ)ನ್ನು ಆಧರಿಸಿ ತೀರ್ಪು ನೀಡಿತ್ತು. ಈ ಅನುಚ್ಚೇದವನ್ನು ಈವರೆಗೂ ತಿದ್ದುಪಡಿ ಮಾಡಲಾಗಿಲ್ಲ. ಹಾಗಾಗಿ ಇದರ ಅನ್ವಯ ರೂಪಿಸಲಾಗಿರುವ ದೆಹಲಿಯ ಆಡಳಿತ ವ್ಯವಸ್ಥೆಯನ್ನು ಬದಲಾಯಿಸುವ ಯಾವುದೇ ಮಸೂದೆ ಅಸಾಂವಿಧಾನಿಕ ಮತ್ತು ಕಾನೂನುಬಾಹಿರವಾಗುತ್ತವೆ. ಕೇಂದ್ರ ಸರ್ಕಾರ ಈ ದುಸ್ಸಾಹಸಕ್ಕೆ ಕೈಹಾಕಿದೆ.
ಈ ತೀರ್ಪಿನ ಅನುಸಾರ ದೆಹಲಿ ಸರ್ಕಾರ ಜಾರಿಗೊಳಿಸುವ ಯಾವುದೇ ಕಾನೂನು ಕಾಯ್ದೆಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್ಗೆ ಮಾಹಿತಿ ನೀಡಬೇಕಾಗುತ್ತದೆ. ಒಂದು ವೇಳೆ ಭಿನ್ನಾಭಿಪ್ರಾಯ ತಲೆದೋರಿದರೆ ಅದನ್ನು ರಾಷ್ಟ್ರಪತಿಯವರ ಸಮ್ಮತಿಗೆ ಕಳುಹಿಸುವ ಅವಕಾಶವೂ ಇರುತ್ತದೆ. ಆದರೆ ರಾಷ್ಟ್ರಪತಿಯವರ ಸಮ್ಮತಿ ಪಡೆಯುವುದು ಕೇವಲ ಅಪವಾದವಾಗಿರಬೇಕಷ್ಟೇ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಚುನಾಯಿತ ಜನಪ್ರತಿನಿಧಿಗಳು ಮತದಾರರಿಗೆ ಮತ್ತು ಸಾರ್ವಭೌಮ ಪ್ರಜೆಗಳಿಗೆ ಉತ್ತರದಾಯಿತ್ವ ಹೊಂದಿರುವುದು ಪ್ರಜಾತಂತ್ರದ ಲಕ್ಷಣವಾಗಿದ್ದು ಸರ್ಕಾರದ ಯಾವುದೇ ಯೋಜನೆ, ಕಾಯ್ದೆ ಕಾನೂನುಗಳನ್ನು ಜನರಿಂದ ಚುನಾಯಿತರಾದ ಪ್ರತಿನಿಧಿಗಳೇ ನಿರ್ಧರಿಸಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದರೆ ಒಂದೆಡೆ ಸಂವಿಧಾನವನ್ನೂ ಮತ್ತೊಂದೆಡೆ ದೇಶದ ಸರ್ವೋಚ್ಚ ನ್ಯಾಯಾಲಯವನ್ನೂ ಧಿಕ್ಕರಿಸಿ ಕೇಂದ್ರ ಸರ್ಕಾರ ಹೊಸ ಮಸೂದೆಗೆ ಅಂಗೀಕಾರ ನೀಡಿದೆ.
ಕಳೆದ ಹಲವು ವರ್ಷಗಳಿಂದಲೂ ದೆಹಲಿಯಲ್ಲಿ ಅಧಿಕಾರ ಹಿಡಿಯಲು ಹೆಣಗಾಡುತ್ತಿರುವ ಬಿಜೆಪಿ ಈ ರೀತಿಯ ವಾಮಮಾರ್ಗದಿಂದ ತನ್ನ ಅಧಿಪತ್ಯ ಸಾಧಿಸಲು ಲೆಫ್ಟಿನೆಂಟ್ ಗವರ್ನರ್ ಕಚೇರಿಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.
ಈ ಮಸೂದೆಯ ಬಗ್ಗೆ ಸಹಜವಾಗಿಯೇ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಇದು ಕೇವಲ ಒಂದು ಭೂ ಪ್ರದೇಶದ, ಪ್ರಾಂತ್ಯದ , ರಾಜ್ಯದ ಪ್ರಶ್ನೆಯಲ್ಲ. ಇದು ಭಾರತದ ಗಣತಂತ್ರ ವ್ಯವಸ್ಥೆಯ, ಒಕ್ಕೂಟ ವ್ಯವಸ್ಥೆಯ ಮತ್ತು ಸಾಂವಿಧಾನಿಕ ನಿಯಮಗಳ ಪ್ರಶ್ನೆ. ಇಂದು ದೆಹಲಿಯಲ್ಲಾದುದೇ ನಾಳೆ ಪಾಂಡಿಚೆರಿಯಲ್ಲಿ ಆಗಬಹುದು. ಅಲ್ಲಿಯೂ ಚುನಾವಣೆ ನಡೆಯಲಿದೆ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗದೆ ಹೋದರೆ ಅಲ್ಲಿಯೂ ಲೆಫ್ಟಿನೆಂಟ್ ಗವರ್ನರ್ ಆಳಲು ಅವಕಾಶ ಕಲ್ಪಿಸಬಹುದು. ಡಿಯು ಮತ್ತು ಡಮನ್, ಅಂಡಮಾನ್ ಮತ್ತು ನಿಕೋಬಾರ್, ಲಡಾಖ್ ಹೀಗೆ ಎಲ್ಲ ಕೇಂದ್ರಾಡಳಿತ ಪ್ರದೇಶಗಳೂ ವಸ್ತುಶಃ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಅಧಿಪತ್ಯಕ್ಕೆ ಒಳಪಡುವ ಸಾಧ್ಯತೆಗಳಿವೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಮಸೂದೆಯನ್ನು ಆಡಳಿತ ಪಕ್ಷದಲ್ಲಿರುವ ಎಲ್ಲ ಸಂವಿಧಾನ ಪ್ರೇಮಿಗಳೂ ವಿರೋಧಿಸಬೇಕಿತ್ತಲ್ಲವೇ ? ಡಾ ಅಂಬೇಡ್ಕರ್ ಅವರ ಸಾಂವಿಧಾನಿಕ ಚಿಂತನಾ ವಾಹಿನಿಯಲ್ಲಿ ಪ್ರಮುಖವಾದ ತೊರೆಗಳೆಂದರೆ ಈ ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಹಾಗೂ ಇದಕ್ಕೆ ಪೂರಕವಾದ ಮೂಲಭೂತ ಹಕ್ಕುಗಳು. ತಮ್ಮ ಪಕ್ಷಕ್ಕೆ ನಿಷ್ಠೆಯಿಂದಿರಬೇಕು ಎನ್ನುವುದು ಎಲ್ಲ ರಾಜಕಾರಣಿಗಳ ಮೂಲ ಮಂತ್ರ , ಇದು ಸಹಜ. ಆದರೆ ಸಂವಿಧಾನವನ್ನೇ ಅಪಮೌಲ್ಯಗೊಳಿಸುವ ಕಾಯ್ದೆ ಕಾನೂನುಗಳನ್ನು ಜಾರಿಗೊಳಿಸಿದಾಗಲೂ ಸ್ವಾಮಿನಿಷ್ಠೆಯಿಂದಿರುವುದು ಅಧಿಕಾರ ದಾಹದ ದ್ಯೋತಕವಾಗಷ್ಟೇ ಕಾಣುತ್ತದೆ.
ಮುಂದೊಂದು ದಿನ ಬೆಳಗಾವಿ ವಿವಾದ ರಾಜಕೀಯ ಲಾಭ ನಷ್ಟಗಳ ಕೇಂದ್ರ ಬಿಂದುವಾದರೆ, ಬೆಳಗಾವಿ ಸುತ್ತಲಿನ ವಿವಾದಿತ ಪ್ರದೇಶಗಳನ್ನೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ, ಇದೇ ನಿಯಮವನ್ನು ಜಾರಿಗೊಳಿಸಬಹುದಲ್ಲವೇ ? ಒಂದು ರಾಜ್ಯದ ಭಾಗವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವ ಪರಂಪರೆಗೆ ಲಡಾಖ್ ನಾಂದಿ ಹಾಡಿದೆ ಅಲ್ಲವೇ ?
ಸಂವಿಧಾನ ಶಿಲ್ಪಿಗಳ ಸಾಮಾಜಿಕ ಪ್ರಜಾಪ್ರಭುತ್ವದ ಕನಸು ಕನಸಾಗಿಯೇ ಉಳಿದಿದೆ, ಈಗ ರಾಜಕೀಯ ಪ್ರಜಾಪ್ರಭುತ್ವದ ಕನಸೂ ಮಣ್ಣುಪಾಲಾಗುತ್ತಿದೆ. ಆರ್ಥಿಕ ಪ್ರಜಾಪ್ರಭುತ್ವದ ಕನಸು ಹಂತಹಂತವಾಗಿ ಅವಸಾನ ಕಾಣುತ್ತಿದೆ. ಈ ಹೊತ್ತಿನಲ್ಲೂ ದೇಶದ ಸುಶಿಕ್ಷಿತ ಹಿತವಲಯದ ವರ್ಗ ಉನ್ಮಾದದಿಂದ ಹೊರಬರದೆ ಇರುವುದು ಅಚ್ಚರಿ ಮೂಡಿಸುತ್ತದೆ. ಭಾರತ ಖಂಡಿತವಾಗಿಯೂ ಹೀಗಿರಲಿಲ್ಲ. “ ನಾನು ಅಂಬೇಡ್ಕರ್ ಅವರನ್ನೇ ಅನುಸರಿಸುತ್ತೇನೆ, ಅಂಬೇಡ್ಕರ್ ಹೊರತು ಮತ್ತಾರನ್ನೂ ಅನುಸರಿಸುವುದಿಲ್ಲ, ಅಂಬೇಡ್ಕರ್ ಹೇಳಿರುವುದೇ ಸತ್ಯ , ಸಂವಿಧಾನದ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದಾಗಿ ಪ್ರಮಾಣೀಕರಿಸುತ್ತೇನೆ ” ಎಂದು ನಿತ್ಯ ಭಜನೆ ಮಾಡುವ ನಮ್ಮ ಎಲ್ಲ ಜನಪ್ರತಿನಿಧಿಗಳು ತಮಗೆ ಸಂವಿಧಾನದ ಪರಿಜ್ಞಾನ ಇಲ್ಲ ಎಂದು ಒಪ್ಪಿಕೊಳ್ಳಲಿ ಅಥವಾ ಸಂವಿಧಾನದ ಬಗ್ಗೆ ಕೊಂಚಮಟ್ಟಿಗೆ ಅರಿವು ಇದ್ದರೂ ಇಂತಹ ಪ್ರಜಾತಂತ್ರ ವಿರೋಧಿ ಕಾನೂನು, ಕಾಯ್ದೆ, ಮಸೂದೆಗಳನ್ನು ವಿರೋಧಿಸಿ ದನಿ ಎತ್ತಲಿ. ಒಂದೆರಡು ಅವಧಿಯ ಅಧಿಕಾರದ ಸವಿಯುಂಡು ಜನಪ್ರತಿನಿಧಿಗಳು ಶಾಶ್ವತವಾಗಿ ಮಣ್ಣಾಗಿ ಹೋಗುತ್ತಾರೆ. ಇಂದಿನ ಪೀಳಿಗೆ ಮುಂದೊಂದು ದಿನ ಇಲ್ಲವಾಗುತ್ತದೆ.
ಆದರೆ ಪ್ರಜಾಸತ್ತಾತ್ಮಕ ಭಾರತ ಶಾಶ್ವತವಾಗಿ ಉಳಿದಿರಬೇಕಲ್ಲವೇ ? ಇಂದು ದೇಶದ ಸಾರ್ವಭೌಮ ಪ್ರಜೆಗಳು ವಿಶ್ವಾಸಪೂರ್ವಕವಾಗಿ ತಮ್ಮ ಪ್ರತಿನಿಧಿಗಳನ್ನು ಸಂಸತ್ತಿಗೆ, ವಿಧಾನಸಭೆಗಳಿಗೆ ಆಯ್ಕೆ ಮಾಡಿ ಕಳಿಸಿರುವುದು “ ಈ ದೇಶದ ಸಂವಿಧಾನ ಬಯಸುವಂತಹ ಪ್ರಜಾಪ್ರಭುತ್ವವನ್ನು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ” ಸಂರಕ್ಷಿಸಲೆಂದೇ ಅಲ್ಲವೇ ? ತಾವು ಅಲಂಕರಿಸಿರುವ ಅಧಿಕಾರಪೀಠಗಳು, ಸವಿಯುತ್ತಿರುವ ಸವಲತ್ತು ಸೌಲಭ್ಯಗಳು ಈ ದೇಶದ ಪ್ರತಿಯೊಬ್ಬ ಸಾರ್ವಭೌಮ ಪ್ರಜೆಯ ಆಸ್ತಿ ಎಂಬ ಪರಿವೆ ಜನಪ್ರತಿನಿಧಿಗಳಲ್ಲಿರಬೇಕಲ್ಲವೇ ? ಈ ಪರಿವೆ ಇಲ್ಲದಿರುವುದರಿಂದಲೇ ಭಾರತ ಅನಾಹುತಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇತ್ತ ಸಾಮಾಜಿಕ ಪ್ರಜಾಪ್ರಭುತ್ವವೂ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವವೂ ಇಲ್ಲದೆ ಸೊರಗುವಂತಾಗಿದೆ.
ಜನಪ್ರತಿನಿಧಿಗಳ ಮೇಲಿರುವಷ್ಟೇ ನೈತಿಕ, ಸಾಂವಿಧಾನಿಕ ಹೊಣೆ ಜನತೆಯ ಮೇಲೆಯೂ ಇರುತ್ತದೆ. ಕಳೆದ ಒಂದು ದಶಕದ ಉನ್ಮತ್ತ ರಾಜಕಾರಣಕ್ಕೆ ಬಲಿಯಾಗಿ ತಮ್ಮ ಸ್ವಪ್ರಜ್ಞೆಯನ್ನೇ ಕಳೆದುಕೊಂಡಂತಿರುವ ಒಂದು ಬೃಹತ್ ಮಧ್ಯಮ ವರ್ಗ ಮತ್ತು ಯುವ ಪೀಳಿಗೆ ತಮ್ಮ ಕಣ್ಣೆದುರಿನ ಅಪಾಯಗಳನ್ನು ಅರಿತುಕೊಳ್ಳಬೇಕಿದೆ. ಇವರ ಕಣ್ಣುಗಳಿಗೆ ಕವಿದಿರುವ ಪೊರೆಯನ್ನು ಕಳಚಿಹಾಕಲು ಜಾಗೃತಿ ಮೂಡಿಸುವ ಹೊಣೆಗಾರಿಕೆ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಸಕ್ರಿಯವಾಗಿರುವ ಸಂಘಟನೆಗಳ ಮೇಲೆಯೂ ಇದೆ. ಸಾಹಿತಿ ಕಲಾವಿದರು, ವಿಜ್ಞಾನಿಗಳು, ವಿದ್ಯಾರ್ಥಿ ಯುವಜನತೆ, ವೈದ್ಯಕೀಯ ಲೋಕ ಮತ್ತು ಮಣ್ಣ ಋಣಕ್ಕೆ ಬದ್ಧರಾದ ಪ್ರತಿಯೊಬ್ಬ ಪ್ರಜೆಯಲ್ಲೂ ಈ ಜಾಗೃತಿ ಮೂಡದೆ ಹೋದರೆ ಬಹುಶಃ ಭಾರತೀಯ ಪ್ರಜಾಪ್ರಭುತ್ವ ಎನ್ನುವ ಕಲ್ಪನೆಯೇ ವಸ್ತು ಸಂಗ್ರಹಾಲಯದಲ್ಲಿ ನೋಡಬಹುದಾದ ಪಳೆಯುಳಿಕೆಯಾಗಿಬಿಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ5 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


