ಬಹಿರಂಗ
ನಿಷ್ಕ್ರಿಯತೆ ಉನ್ಮಾದದ ನಡುವೆ ಪ್ರಜಾಸತ್ತೆಯ ರಕ್ಷಣೆಗಾಗಿ
- ನಾ ದಿವಾಕರ
ಪ್ರಜಾಪ್ರಭುತ್ವ ಎಂದರೆ ಅದು ಕೇವಲ ಒಂದು ಆಡಳಿತ ವ್ಯವಸ್ಥೆ ಅಲ್ಲ, ಒಂದು ನಾಗರಿಕ ಸಮಾಜವನ್ನು ಮಾನವೀಯ ಮೌಲ್ಯಗಳ ಚೌಕಟ್ಟಿನಲ್ಲಿ ಬಂಧಿಸುವ ಒಂದು ಸಂವೇದನಾಶೀಲ ತತ್ವ . ಈ ಸಂವೇದನೆಯನ್ನು ಕಳೆದುಕೊಂಡ ಯಾವುದೇ ಸಮಾಜ ಸುಲಭವಾಗಿ ಸರ್ವಾಧಿಕಾರದತ್ತ ಹೊರಳಿಬಿಡುತ್ತದೆ. ತನ್ನೊಳಗಿನ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡ ಮನುಷ್ಯ ತನ್ನ ಸುತ್ತಲಿನ ಶೋಷಣೆಗೆ, ಹಿಂಸೆಗೆ, ಅನ್ಯಾಯಗಳಿಗೆ ಕುರುಡಾಗಿಬಿಡುತ್ತಾನೆ.
ಸ್ವಾಭಾವಿಕವಾಗಿಯೇ ಒಂದು ಸಮಾಜವೂ ಇದೇ ಸನ್ನಿವೇಶವನ್ನು ಎದುರಿಸುತ್ತದೆ. ರಾಜಕೀಯವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಒಪ್ಪಿಕೊಳ್ಳುವ ಒಂದು ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ನೆಲೆಗಟ್ಟಿನಲ್ಲೂ ಪ್ರಜಾಪ್ರಭುತ್ವ ಸ್ಥಾಪಿತವಾದಲ್ಲಿ ಮಾತ್ರ ಒಂದು ಸಮ ಸಮಾಜದ ನಿರ್ಮಾಣ ಸಾಧ್ಯ ಎಂದು ಡಾ ಬಿ ಆರ್ ಅಂಬೇಡ್ಕರ್ ಪ್ರತಿಪಾದಿಸುತ್ತಾರೆ.
ಆತ್ಮನಿರ್ಭರ ಭಾರತದ ಇಂದಿನ ಪರಿಸ್ಥಿತಿಯನ್ನು ನೋಡಿದರೆ ಈ ದಾರ್ಶನಿಕ ದೃಷ್ಟಿಕೋನ ಎಷ್ಟು ವಾಸ್ತವತೆಯಿಂದ ಕೂಡಿತ್ತು ಎನಿಸುತ್ತದೆ. ಇಂದು ರಾಜಕೀಯ ನೆಲೆಯಲ್ಲಿ ಭಾರತ ಪ್ರಜಾಪ್ರಭುತ್ವದ ತಳಹದಿಯನ್ನೇ ಕಳೆದುಕೊಳ್ಳುತ್ತಿದೆ. ಗ್ರಾಂಥಿಕವಾಗಿ ಭಾರತದ ಶ್ರೇಷ್ಠ ಸಂವಿಧಾನ ಸುರಕ್ಷಿತವಾಗಿಯೇ ಇದ್ದರೂ, ಮೌಲಿಕವಾಗಿ ಸಂವಿಧಾನದ ಒಂದೊಂದೇ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ದಿನಬೆಳಗಾದರೆ ಸಂವಿಧಾನದ ಧ್ಯಾನ ಮಾಡುವ ಅಸಂಖ್ಯಾತ ಜನಪ್ರತಿನಿಧಿಗಳು ಮೌನವಾಗಿಯೇ ಎಲ್ಲವನ್ನೂ ಸಹಿಸಿಕೊಳ್ಳುತ್ತಿದ್ದಾರೆ. ಉನ್ಮತ್ತ ಮನಸ್ಥಿತಿ ತಲುಪಿರುವ ನಾಗರಿಕ ಸಮಾಜದ ಬೃಹತ್ ವರ್ಗ ಸಂಪೂರ್ಣ ನಿಷ್ಕ್ರಿಯವಾಗಿದೆ.
ಅಸಮಾನತೆ, ಅಸಹಿಷ್ಣುತೆ ಮತ್ತು ಶ್ರೇಷ್ಠತೆಯ ವ್ಯಸನದೊಂದಿಗೇ ಶತಮಾನಗಳನ್ನು ಕಳೆದಿರುವ ಭಾರತೀಯ ಸಮಾಜ ತನ್ನ ಸಾಂಪ್ರದಾಯಿಕ ಪೊರೆಯನ್ನು ಇನ್ನೂ ಸಂಪೂರ್ಣವಾಗಿ ಕಳಚಿಹಾಕಿಲ್ಲ ಎನ್ನುವುದು ಕಳೆದ ಹಲವು ವರ್ಷಗಳಲ್ಲಿ ಸ್ಪಷ್ಟವಾಗಿ ಸಾಬೀತಾಗಿದೆ. ಅನ್ಯಾಯಗಳನ್ನು ಸಹಿಸಿಕೊಳ್ಳುವುದನ್ನು ಸಹಿಷ್ಣುತೆ ಎನ್ನುವುದಾದರೆ ಭಾರತ ಸಹಿಷ್ಣುತೆಯ ಕರ್ಮಭೂಮಿ ಎಂದೇ ಹೇಳಬಹುದು. ಇದು ವಾಸ್ತವವೂ ಹೌದು.
ಇಲ್ಲಿ ನ್ಯಾಯಾನ್ಯಾಯಗಳ ನಿಷ್ಕರ್ಷೆಯಾಗುವುದು ಮನುಜ ಭೂಮಿಕೆಯ ಮೇಲಲ್ಲ. ಜಾತಿ-ಧರ್ಮ-ಸಮುದಾಯದ ಅಸ್ಮಿತೆಗಳ ಭೂಮಿಕೆಯ ಮೇಲೆ. ಅನ್ಯಾಯಕ್ಕೊಳಗಾದವರ, ದೌರ್ಜನ್ಯಕ್ಕೊಳಗಾದವರ ಸಮಾಜೋ ಸಾಂಸ್ಕೃತಿಕ ಅಸ್ಮಿತೆಗಳು ನ್ಯಾಯದ ಪರಾಮರ್ಶೆಗೆ ವೇದಿಕೆಯಾಗುತ್ತವೆ. ಭಾರತದ ಸಾಂಪ್ರದಾಯಿಕ ಸಮಾಜ ಎಷ್ಟು ಬಲಿಷ್ಠವಾಗಿದೆ ಎಂದರೆ ತುಳಿತಕ್ಕೊಳಗಾದ ಸಮುದಾಯದಿಂದಲೇ ಬೆಳೆದು ನಿಂತವರೂ ಸಹ ತಮ್ಮೆದುರಿನ ದೌರ್ಜನ್ಯಕ್ಕೆ ಕುರುಡಾಗಿಬಿಡುತ್ತಾರೆ. ಇದು ನಮ್ಮ ದೇಶದ ಸಾಂಸ್ಕೃತಿಕ ನಾಗರಿಕತೆ ಶತಮಾನಗಳಿಂದ ಸೃಷ್ಟಿಸಿರುವ ವಿಕೃತ ವಾತಾವರಣದ ಫಲ.
ತಮ್ಮ ಅಧಿಕಾರ, ಅಸ್ತಿತ್ವ ಮತ್ತು ರಾಜಕೀಯ ಪ್ರಾಬಲ್ಯ ಕಾಪಾಡಿಕೊಳ್ಳಲು ದೇಶಾದ್ಯಂತ ನೂರಾರು ಮಸಣಗಳನ್ನು ಸೃಷ್ಟಿಸಿ, ಸಾವಿರಾರು ಜನರ ಹತ್ಯೆಗೈದಿರುವ ಒಂದು ರಾಜಕೀಯ ಆಡಳಿತ ವ್ಯವಸ್ಥೆಯಲ್ಲಿ , ಜನಸಾಮಾನ್ಯರ ಶವಸಂಸ್ಕಾರಕ್ಕೆ ಸೂಕ್ತವಾದ ಸ್ಮಶಾನ ಇಲ್ಲದಿರುವುದನ್ನು ನೋಡಿದರೆ ನಾವು ಎಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಅರಿವಾಗುತ್ತದೆ. ಇದು ಕೇವಲ ಒಂದು ಕೊರಟಗೆರೆಯ ಪ್ರಶ್ನೆಯಲ್ಲ.
ತುಮಕೂರು ಬಳಿ ಇರುವ ಕೊರಟಗೆರೆಯಲ್ಲಿ ದಲಿತ ಕುಟುಂಬದ ಒಂದು ಹಸುಳೆಯ ಶವಕ್ಕೆ ಮಣ್ಣುಮಾಡಲು ಅವಕಾಶವೀಯದೆ, ಹೂತ ಶವವನ್ನು ಹೊರಕ್ಕೆ ತೆಗೆಸುವಷ್ಟು ಕ್ರೌರ್ಯ ನಮ್ಮ ನಡುವೆ ಇದೆ. ಈ ಘಟನೆಗೆ ಕಾರಣವಾದವರ ವಿಕೃತಿ, ಕ್ರೌರ್ಯ ಜಾತಿ ಪೀಡಿತ ಸಮಾಜದ ಒಂದು ಆಯಾಮವನ್ನು ತೋರಿಸಿದರೆ, ಈ ಘಟನೆಯ ಬಗ್ಗೆ ಪ್ರತಿಕ್ರಯಿಸಲೂ ಮುಂದಾಗದೆ ನಿಷ್ಕ್ರಿಯ ಮೌನ ವಹಿಸಿರುವ ಚುನಾಯಿತ ಪ್ರತಿನಿಧಿಗಳು, ಮಾಧ್ಯಮಗಳು ಮತ್ತು ನಾಗರಿಕ ಸಮಾಜ ಈ ಸಮಾಜದ ನಿರ್ಲಜ್ಜತೆಯನ್ನು ಹೊರಗೆಡಹಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ, 21ನೆಯ ಶತಮಾನದ ಮೂರನೆಯ ದಶಕದಲ್ಲೂ ಸಹ, ನಾವು ಹಲವಾರು ಕೊರಟಗೆರೆಗಳನ್ನು ಕಂಡಿದ್ದೇವೆ. ಒಂದೆಡೆ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸುವ ಸಮಾಜವೇ ಮತ್ತೊಂದೆಡೆ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಸಂತ್ರಸ್ತೆಯೊಬ್ಬಳ ಶವಸಂಸ್ಕಾರವನ್ನು ರಾತ್ರೋರಾತ್ರಿ ನಡೆಸುತ್ತದೆ.. ಇಲ್ಲಿ ಹೂಳಲಾಗಿದ್ದ ಶವವನ್ನು ಹೊರಗೆಳೆಯಲಾಗುತ್ತದೆ ಅಲ್ಲಿ ಶವದ ಸುಳಿವು ಸಿಗದಂತೆ ಸುಟ್ಟುಹಾಕಲಾಗುತ್ತದೆ.
ಎರಡೂ ಶವಗಳು ಸಾಂಪ್ರದಾಯಿಕ ಭಾರತದ ದೃಷ್ಟಿಯಲ್ಲಿ ಬಹಿಷ್ಕೃತವೇ ಆಗಿರುವುದು ಕಾಕತಾಳೀಯವೇನಲ್ಲ. ಈ ಎರಡು ವೈಪರೀತ್ಯಗಳ ನಡುವೆ ಒಂದು ನಾಗರಿಕತೆಯ ಎಳೆಯನ್ನು ಶೋಧಿಸಲು ಈ ದೇಶದ ಕೆಲವೇ ಕೆಲವು ಮನಸುಗಳು ಹಾತೊರೆಯುತ್ತಿವೆ. ಮತ್ತೊಂದೆಡೆ ನಾಗರಿಕ ಸಮಾಜದ ಒಂದು ವರ್ಗ ನಿಷ್ಕ್ರಿಯ ಮೌನ ವಹಿಸುತ್ತದೆ.
ಹುಟ್ಟಿನಿಂದ ಸಾಯುವವರೆಗೂ ಜಾತಿಯ ಚೌಕಟ್ಟಿನಲ್ಲೇ ಬದುಕು ಸವೆಸುವ ಭಾರತೀಯ ಸಮಾಜ ಮಸಣದಲ್ಲೂ ಜಾತಿ ಸೂಚಕಗಳನ್ನು ಹುಡುಕುವುದು ದುರಂತ ಅಲ್ಲವೇ ? ಹೂಳುವವರಿಗೆ ಅಸ್ಮಿತೆಯ ಪ್ರಶ್ನೆ ಕಾಡುವುದು ಸಹಜ ಆದರೆ ಹೂತು ಹೋಗುವ ಜೀವಕ್ಕೆ ಯಾವ ಅಸ್ಮಿತೆ ಇರಲು ಸಾಧ್ಯ ? ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನನ್ನು ಜಾತಿಯಿಂದಲೇ ಗುರುತಿಸಿಕೊಳ್ಳುತ್ತಾನೆ ಎಂದು ಅಂಬೇಡ್ಕರ್ ಹೇಳಿದ್ದುದು ಎಷ್ಟು ಮಾರ್ಮಿಕ ಅಲ್ಲವೇ ?
ಸಾವಿನ ನಂತರವೂ ಜಾತಿಯ ಭೂತ ನಮ್ಮ ಬೆನ್ನೇರಿರುತ್ತದೆ, ನಾವು ಜಾತಿಯ ಬೆನ್ನಟ್ಟಿ ನಡೆದಿರುತ್ತೇವೆ. ನಮ್ಮ ಅಂತರ್ ಪ್ರಜ್ಞೆಯನ್ನು ಪ್ರಕ್ಷುಬ್ಧಗೊಳಿಸುವ ಕೊರಟಗೆರೆಯಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ, ನಾವು ಸಂವಿಧಾನದ ರಕ್ಷಣೆಗೆ ಪಣ ತೊಡುತ್ತಲೇ ಇದ್ದೇವೆ.
70 ವರ್ಷಗಳ ನಂತರವೂ ಅಂಬೇಡ್ಕರ್ ಕನಸಿನ ಸಾಮಾಜಿಕ ಪ್ರಜಾಪ್ರಭುತ್ವವನ್ನು , ಗಾಂಧಿ ಕನಸಿನ ನಿರ್ಭೀತ ಪ್ರಾಮಾಣಿಕ ಸಮಾಜವನ್ನು ಸಾಧಿಸಲು ಸಾಧ್ಯವಾಗದ ಭಾರತ ಈಗ ರಾಜಕೀಯ ಪ್ರಜಾಪ್ರಭುತ್ವವನ್ನೂ ಕಳೆದುಕೊಳ್ಳುತ್ತಿದೆ. ಆರ್ಥಿಕವಾಗಿ ಭಾರತದ ಬಹುಸಂಖ್ಯೆಯ ಜನರು ಈಗಾಗಲೇ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ.
ತಾವೇ ಕಟ್ಟಿ ಬೆಳೆಸಿದ ಬೃಹತ್ ಸಾರ್ವಜನಿಕ ಉದ್ದಿಮೆಗಳು, ಸಂಸ್ಥೆಗಳು ತಮ್ಮ ಕಣ್ಣೆದುರಿನಲ್ಲೇ ಖಾಸಗಿ ಬಂಡವಾಳಿಗರ ಪಾಲಾಗುತ್ತಿರುವುದನ್ನು ಸಂಭ್ರಮಿಸುವ ಮಧ್ಯಮ ವರ್ಗದ ಉನ್ಮತ್ತರ ನಡುವೆಯೇ ಅಸಹಾಯಕರಂತೆ ಕಾಣುವ ಒಂದು ವರ್ಗವೂ ನಮ್ಮ ನಡುವೆ ಇದೆ. 136 ಕೋಟಿ ಜನಸಂಖ್ಯೆಗೆ ಅನ್ನ ಬೆಳೆಯುವ ರೈತ ಸಮುದಾಯ ತನ್ನ ನೆಲೆಯನ್ನು ಉಳಿಸಿಕೊಳ್ಳಲು 119 ದಿನಗಳಿಂದಲೂ ಹೋರಾಡುತ್ತಿದೆ.
ಮುಂಬರುವ ದಿನಗಳಲ್ಲಿ ಈ ರೈತಾಪಿಯೊಡನೆ ಕಾರ್ಮಿಕ ವರ್ಗವೂ ಸೇರಿಕೊಳ್ಳುತ್ತದೆ. ಸಂಘಟಿತ/ಅಸಂಘಟಿತ ಕಾರ್ಮಿಕ ವಲಯ ದಿನದಿಂದ ದಿನಕ್ಕೆ ಅನಿಶ್ಚಿತತೆಯನ್ನೇ ಎದುರಿಸುತ್ತಿದ್ದು ದೇಶದ ಸಕಲ ಸಂಪನ್ಮೂಲಗಳೂ ಖಾಸಗಿ ಕಾರ್ಪೋರೇಟ್ ಬಂಡವಾಳಿಗರ ಪಾಲಾಗುತ್ತಿರುವ ಸಂದರ್ಭದಲ್ಲಿ ದುಡಿಯುವ ವರ್ಗಗಳ ನಾಳಿನ ಪ್ರಶ್ನೆ ಜಟಿಲವಾಗುತ್ತಿದೆ. ಏಪ್ರಿಲ್ 1 ರಿಂದ ಜಾರಿಯಾಗಲಿರುವ ಹೊಸ ಕಾರ್ಮಿಕ ಸಂಹಿತೆಗಳು ಶ್ರಮಜೀವಿಗಳ ಬದುಕುವ ಹಕ್ಕನ್ನೂ ಕಸಿದುಕೊಳ್ಳುವ ಕರಾಳ ಅಧ್ಯಾಯವನ್ನು ತೆರೆಯಲಿವೆ.
ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ, ಜೀವನೋಪಾಯದ ರಕ್ಷಣೆಗಾಗಿ ಉದ್ಯಮಗಳನ್ನು ಕಳೆದುಕೊಳ್ಳುವ ಸ್ವಾವಲಂಬಿ ಭಾರತ ಸತ್ತುಹೋಗಿದೆ. ಇಂದು ಉದ್ಯಮಿಗಳ ಹಿತಾಸಕ್ತಿ ಕಾಪಾಡಲು ನಮ್ಮ ರಾಜಕೀಯ ವ್ಯವಸ್ಥೆ ಕಾರ್ಮಿಕರ ಹಿತಾಸಕ್ತಿಗಳನ್ನು ಬಲಿಕೊಡಲು ಸಿದ್ಧವಾಗಿದೆ. ಅಳಿವು ಉಳಿವಿನ ಪ್ರಶ್ನೆ ಎದುರಾದಾಗ ಸಹಜವಾಗಿಯೇ ಕಾರ್ಮಿಕರು ಇದ್ದುದರಲ್ಲಿ ತೃಪ್ತಿಪಟ್ಟುಕೊಳ್ಳುವ ಸಾಂಪ್ರದಾಯಿಕ ಬದುಕನ್ನು ಅಪ್ಪಿಕೊಂಡುಬಿಡುತ್ತಾರೆ.
ಈ ಜಟಿಲ ಸವಾಲುಗಳ ನಡುವೆಯೇ ಭಾರತದ “ ಪ್ರಗತಿಪರ-ಜನಪರ ” ಹೋರಾಟಗಳು, ಸಂಘರ್ಷದ ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಮೂಲತಃ ಊಳಿಗಮಾನ್ಯ ಧೋರಣೆಯನ್ನೇ ಪ್ರತಿಪಾದಿಸುವ ರೈತ ಸಂಘಟನೆಗಳು ಒಂದು ಪ್ರಜಾಸತ್ತಾತ್ಮಕ ಹೋರಾಟಕ್ಕೆ ಹೊಸ ಆಯಾಮವನ್ನು ನೀಡಿರುವುದು ವಿಡಂಬನೆ ಎನಿಸಿದರೂ, ಚಾರಿತ್ರಿಕವೂ ಆಗಿದೆ. ಮುಂಬರುವ ದಿನಗಳ ಕಾರ್ಮಿಕ ಸಂಘರ್ಷಗಳಿಗೆ ಈ ರೈತ ಮುಷ್ಕರ ಸ್ಫೂರ್ತಿಯಾಗಲಿಕ್ಕೂ ಸಾಕು.
ಈ ಹೋರಾಟದ ಗರ್ಭದಲ್ಲೇ ನೂರಾರು ಜೀವನ್ಮುಖಿ ಸಂಘರ್ಷಗಳು ಅಡಗಿರುವುದನ್ನು ಗಮನಿಸುವುದು ಸಮಾಜೋ ಆರ್ಥಿಕ ಮತ್ತು ರಾಜಕೀಯ ಪ್ರಜಾಪ್ರಭುತ್ವಕ್ಕಾಗಿ ಹಂಬಲಿಸುವ ಮನಸುಗಳ ಆದ್ಯತೆಯೂ ಆಗಬೇಕಿದೆ. ಏಕೆಂದರೆ ರೈತರ ಇಂದಿನ ಹೋರಾಟ ಸಮಸ್ತ ಜನತೆಯ ಹೋರಾಟವೂ ಆಗಿದೆ.
ಈ ನಡುವೆಯೇ ನಮ್ಮ ರಾಜಕೀಯ ಪ್ರಜಾಪ್ರಭುತ್ವದ ಸ್ಥಾವರಗಳು, ಸ್ತಂಭಗಳು ಕುಸಿಯುತ್ತಿವೆ. ಪ್ರಜಾತಂತ್ರದ ನಾಲ್ಕನೆಯ ಸ್ತಂಭ ಎನ್ನಲಾಗುವ ಮಾಧ್ಯಮಗಳು ಈಗಾಗಲೇ ಕುಸಿದು ಭೂತಳಕ್ಕೆ ಸೇರಿರುವುದರಿಂದ ಉಳಿದ ಸ್ಥಾವರ-ಸ್ತಂಭಗಳನ್ನಾದರೂ ಉಳಿಸಿಕೊಳ್ಳುವ, ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ. ಈ ಸಾಂಸ್ಥಿಕ ಪ್ರಜಾಪ್ರಭುತ್ವದ ತಳಹದಿ ಭಾರತದ ಒಕ್ಕೂಟ ವ್ಯವಸ್ಥೆ. ಇಂದು ಒಕ್ಕೂಟ ವ್ಯವಸ್ಥೆಯೇ ಅಪಾಯದ ಅಂಚಿನಲ್ಲಿರುವುದನ್ನು ದೆಹಲಿ ಸರ್ಕಾರದ ಸುತ್ತಲಿನ ಬೆಳವಣಿಗೆಗಳಲ್ಲಿ ಕಾಣುತ್ತಿದ್ದೇವೆ.
ಸಂವಿಧಾನ ವಿಧಿ 370ನ್ನು ರದ್ದುಪಡಿಸಿ, ಜಮ್ಮು ಕಾಶ್ಮೀರ ರಾಜ್ಯದ ಭಾಗವಾಗಿದ್ದ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದಾಗಲೇ, ಭಾರತದ ಒಕ್ಕೂಟ ವ್ಯವಸ್ಥೆಗೆ ಸಂಚಕಾರ ಎದುರಾಗುವ ಸೂಚನೆಗಳು ದೊರೆತಿದ್ದವು. ಈಗ ದೇಶದ ರಾಜಧಾನಿಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿರುವ ದೆಹಲಿಯ “ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ” 2021 ಜಾರಿಯಾದರೆ ಬಹುಶಃ ಮುಂಬರುವ ದಿನಗಳಲ್ಲಿ ದೆಹಲಿಯ ಜನತೆ ಮತಗಟ್ಟೆಗಳಿಂದ ಶಾಶ್ವತವಾಗಿ ದೂರ ಉಳಿಯಬಹುದು. ಏಕೆಂದರೆ ದೆಹಲಿಯ ಪ್ರಜೆಗಳು ಚುನಾಯಿಸುವ ಸರ್ಕಾರದ ಯಾವುದೇ ನಿರ್ಧಾರಗಳು ಊರ್ಜಿತವಾಗಬೇಕಾದರೆ ಲೆಫ್ಟಿನೆಂಟ್ ಜನರಲ್ ಸಮ್ಮತಿ ಪಡೆಯಬೇಕಾಗುತ್ತದೆ.
ದೆಹಲಿಯ ವಿಧಾನಸಭೆ ಅಂಗೀಕರಿಸುವ ಯಾವುದೇ ಕಾಯ್ದೆಯಲ್ಲಿ ಉಲ್ಲೇಖವಾಗುವ ‘ಸರಕಾರ’ ಎನ್ನುವ ಪದವನ್ನು ‘ಲೆಫ್ಟಿನೆಂಟ್ ಗವರ್ನರ್’ ಎಂದೇ ಪರಿಭಾವಿಸಲಾಗುತ್ತದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ. ಅಂದರೆ ದೆಹಲಿ ಸರ್ಕಾರ ಅನುಮೋದಿಸುವ ಯಾವುದೇ ಮಸೂದೆಗೆ ಅಂಗೀಕಾರ ನೀಡಲು ಲೆಫ್ಟಿನೆಂಟ್ ಗವರ್ನರ್ ನಿರಾಕರಿಸಬಹುದು ಅಥವಾ ರಾಷ್ಟ್ರಪತಿ ಕಚೇರಿಗೆ ರವಾನಿಸಬಹುದು. ಇನ್ನೂ ಆತಂಕಕಾರಿ ಅಂಶ ಎಂದರೆ ದೆಹಲಿಯ ಕಾರ್ಯಾಂಗ ಯಾವುದೇ ಕಾರ್ಯವನ್ನು ಕೈಗೊಳ್ಳುವ ಮುನ್ನ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಪಡೆಯಬೇಕಾಗುತ್ತದೆ.
ಕೇಂದ್ರಾಡಳಿತ ದೆಹಲಿಗೆ ವಿಶೇಷ ಸ್ಥಾನಮಾನ ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಸಂವಿಧಾನದ ಅನುಚ್ಚೇದ 293(ಎಎ)ನ್ನು ಆಧರಿಸಿ ತೀರ್ಪು ನೀಡಿತ್ತು. ಈ ಅನುಚ್ಚೇದವನ್ನು ಈವರೆಗೂ ತಿದ್ದುಪಡಿ ಮಾಡಲಾಗಿಲ್ಲ. ಹಾಗಾಗಿ ಇದರ ಅನ್ವಯ ರೂಪಿಸಲಾಗಿರುವ ದೆಹಲಿಯ ಆಡಳಿತ ವ್ಯವಸ್ಥೆಯನ್ನು ಬದಲಾಯಿಸುವ ಯಾವುದೇ ಮಸೂದೆ ಅಸಾಂವಿಧಾನಿಕ ಮತ್ತು ಕಾನೂನುಬಾಹಿರವಾಗುತ್ತವೆ. ಕೇಂದ್ರ ಸರ್ಕಾರ ಈ ದುಸ್ಸಾಹಸಕ್ಕೆ ಕೈಹಾಕಿದೆ.
ಈ ತೀರ್ಪಿನ ಅನುಸಾರ ದೆಹಲಿ ಸರ್ಕಾರ ಜಾರಿಗೊಳಿಸುವ ಯಾವುದೇ ಕಾನೂನು ಕಾಯ್ದೆಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್ಗೆ ಮಾಹಿತಿ ನೀಡಬೇಕಾಗುತ್ತದೆ. ಒಂದು ವೇಳೆ ಭಿನ್ನಾಭಿಪ್ರಾಯ ತಲೆದೋರಿದರೆ ಅದನ್ನು ರಾಷ್ಟ್ರಪತಿಯವರ ಸಮ್ಮತಿಗೆ ಕಳುಹಿಸುವ ಅವಕಾಶವೂ ಇರುತ್ತದೆ. ಆದರೆ ರಾಷ್ಟ್ರಪತಿಯವರ ಸಮ್ಮತಿ ಪಡೆಯುವುದು ಕೇವಲ ಅಪವಾದವಾಗಿರಬೇಕಷ್ಟೇ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಚುನಾಯಿತ ಜನಪ್ರತಿನಿಧಿಗಳು ಮತದಾರರಿಗೆ ಮತ್ತು ಸಾರ್ವಭೌಮ ಪ್ರಜೆಗಳಿಗೆ ಉತ್ತರದಾಯಿತ್ವ ಹೊಂದಿರುವುದು ಪ್ರಜಾತಂತ್ರದ ಲಕ್ಷಣವಾಗಿದ್ದು ಸರ್ಕಾರದ ಯಾವುದೇ ಯೋಜನೆ, ಕಾಯ್ದೆ ಕಾನೂನುಗಳನ್ನು ಜನರಿಂದ ಚುನಾಯಿತರಾದ ಪ್ರತಿನಿಧಿಗಳೇ ನಿರ್ಧರಿಸಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದರೆ ಒಂದೆಡೆ ಸಂವಿಧಾನವನ್ನೂ ಮತ್ತೊಂದೆಡೆ ದೇಶದ ಸರ್ವೋಚ್ಚ ನ್ಯಾಯಾಲಯವನ್ನೂ ಧಿಕ್ಕರಿಸಿ ಕೇಂದ್ರ ಸರ್ಕಾರ ಹೊಸ ಮಸೂದೆಗೆ ಅಂಗೀಕಾರ ನೀಡಿದೆ.
ಕಳೆದ ಹಲವು ವರ್ಷಗಳಿಂದಲೂ ದೆಹಲಿಯಲ್ಲಿ ಅಧಿಕಾರ ಹಿಡಿಯಲು ಹೆಣಗಾಡುತ್ತಿರುವ ಬಿಜೆಪಿ ಈ ರೀತಿಯ ವಾಮಮಾರ್ಗದಿಂದ ತನ್ನ ಅಧಿಪತ್ಯ ಸಾಧಿಸಲು ಲೆಫ್ಟಿನೆಂಟ್ ಗವರ್ನರ್ ಕಚೇರಿಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.
ಈ ಮಸೂದೆಯ ಬಗ್ಗೆ ಸಹಜವಾಗಿಯೇ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಇದು ಕೇವಲ ಒಂದು ಭೂ ಪ್ರದೇಶದ, ಪ್ರಾಂತ್ಯದ , ರಾಜ್ಯದ ಪ್ರಶ್ನೆಯಲ್ಲ. ಇದು ಭಾರತದ ಗಣತಂತ್ರ ವ್ಯವಸ್ಥೆಯ, ಒಕ್ಕೂಟ ವ್ಯವಸ್ಥೆಯ ಮತ್ತು ಸಾಂವಿಧಾನಿಕ ನಿಯಮಗಳ ಪ್ರಶ್ನೆ. ಇಂದು ದೆಹಲಿಯಲ್ಲಾದುದೇ ನಾಳೆ ಪಾಂಡಿಚೆರಿಯಲ್ಲಿ ಆಗಬಹುದು. ಅಲ್ಲಿಯೂ ಚುನಾವಣೆ ನಡೆಯಲಿದೆ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗದೆ ಹೋದರೆ ಅಲ್ಲಿಯೂ ಲೆಫ್ಟಿನೆಂಟ್ ಗವರ್ನರ್ ಆಳಲು ಅವಕಾಶ ಕಲ್ಪಿಸಬಹುದು. ಡಿಯು ಮತ್ತು ಡಮನ್, ಅಂಡಮಾನ್ ಮತ್ತು ನಿಕೋಬಾರ್, ಲಡಾಖ್ ಹೀಗೆ ಎಲ್ಲ ಕೇಂದ್ರಾಡಳಿತ ಪ್ರದೇಶಗಳೂ ವಸ್ತುಶಃ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಅಧಿಪತ್ಯಕ್ಕೆ ಒಳಪಡುವ ಸಾಧ್ಯತೆಗಳಿವೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಮಸೂದೆಯನ್ನು ಆಡಳಿತ ಪಕ್ಷದಲ್ಲಿರುವ ಎಲ್ಲ ಸಂವಿಧಾನ ಪ್ರೇಮಿಗಳೂ ವಿರೋಧಿಸಬೇಕಿತ್ತಲ್ಲವೇ ? ಡಾ ಅಂಬೇಡ್ಕರ್ ಅವರ ಸಾಂವಿಧಾನಿಕ ಚಿಂತನಾ ವಾಹಿನಿಯಲ್ಲಿ ಪ್ರಮುಖವಾದ ತೊರೆಗಳೆಂದರೆ ಈ ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಹಾಗೂ ಇದಕ್ಕೆ ಪೂರಕವಾದ ಮೂಲಭೂತ ಹಕ್ಕುಗಳು. ತಮ್ಮ ಪಕ್ಷಕ್ಕೆ ನಿಷ್ಠೆಯಿಂದಿರಬೇಕು ಎನ್ನುವುದು ಎಲ್ಲ ರಾಜಕಾರಣಿಗಳ ಮೂಲ ಮಂತ್ರ , ಇದು ಸಹಜ. ಆದರೆ ಸಂವಿಧಾನವನ್ನೇ ಅಪಮೌಲ್ಯಗೊಳಿಸುವ ಕಾಯ್ದೆ ಕಾನೂನುಗಳನ್ನು ಜಾರಿಗೊಳಿಸಿದಾಗಲೂ ಸ್ವಾಮಿನಿಷ್ಠೆಯಿಂದಿರುವುದು ಅಧಿಕಾರ ದಾಹದ ದ್ಯೋತಕವಾಗಷ್ಟೇ ಕಾಣುತ್ತದೆ.
ಮುಂದೊಂದು ದಿನ ಬೆಳಗಾವಿ ವಿವಾದ ರಾಜಕೀಯ ಲಾಭ ನಷ್ಟಗಳ ಕೇಂದ್ರ ಬಿಂದುವಾದರೆ, ಬೆಳಗಾವಿ ಸುತ್ತಲಿನ ವಿವಾದಿತ ಪ್ರದೇಶಗಳನ್ನೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ, ಇದೇ ನಿಯಮವನ್ನು ಜಾರಿಗೊಳಿಸಬಹುದಲ್ಲವೇ ? ಒಂದು ರಾಜ್ಯದ ಭಾಗವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವ ಪರಂಪರೆಗೆ ಲಡಾಖ್ ನಾಂದಿ ಹಾಡಿದೆ ಅಲ್ಲವೇ ?
ಸಂವಿಧಾನ ಶಿಲ್ಪಿಗಳ ಸಾಮಾಜಿಕ ಪ್ರಜಾಪ್ರಭುತ್ವದ ಕನಸು ಕನಸಾಗಿಯೇ ಉಳಿದಿದೆ, ಈಗ ರಾಜಕೀಯ ಪ್ರಜಾಪ್ರಭುತ್ವದ ಕನಸೂ ಮಣ್ಣುಪಾಲಾಗುತ್ತಿದೆ. ಆರ್ಥಿಕ ಪ್ರಜಾಪ್ರಭುತ್ವದ ಕನಸು ಹಂತಹಂತವಾಗಿ ಅವಸಾನ ಕಾಣುತ್ತಿದೆ. ಈ ಹೊತ್ತಿನಲ್ಲೂ ದೇಶದ ಸುಶಿಕ್ಷಿತ ಹಿತವಲಯದ ವರ್ಗ ಉನ್ಮಾದದಿಂದ ಹೊರಬರದೆ ಇರುವುದು ಅಚ್ಚರಿ ಮೂಡಿಸುತ್ತದೆ. ಭಾರತ ಖಂಡಿತವಾಗಿಯೂ ಹೀಗಿರಲಿಲ್ಲ. “ ನಾನು ಅಂಬೇಡ್ಕರ್ ಅವರನ್ನೇ ಅನುಸರಿಸುತ್ತೇನೆ, ಅಂಬೇಡ್ಕರ್ ಹೊರತು ಮತ್ತಾರನ್ನೂ ಅನುಸರಿಸುವುದಿಲ್ಲ, ಅಂಬೇಡ್ಕರ್ ಹೇಳಿರುವುದೇ ಸತ್ಯ , ಸಂವಿಧಾನದ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದಾಗಿ ಪ್ರಮಾಣೀಕರಿಸುತ್ತೇನೆ ” ಎಂದು ನಿತ್ಯ ಭಜನೆ ಮಾಡುವ ನಮ್ಮ ಎಲ್ಲ ಜನಪ್ರತಿನಿಧಿಗಳು ತಮಗೆ ಸಂವಿಧಾನದ ಪರಿಜ್ಞಾನ ಇಲ್ಲ ಎಂದು ಒಪ್ಪಿಕೊಳ್ಳಲಿ ಅಥವಾ ಸಂವಿಧಾನದ ಬಗ್ಗೆ ಕೊಂಚಮಟ್ಟಿಗೆ ಅರಿವು ಇದ್ದರೂ ಇಂತಹ ಪ್ರಜಾತಂತ್ರ ವಿರೋಧಿ ಕಾನೂನು, ಕಾಯ್ದೆ, ಮಸೂದೆಗಳನ್ನು ವಿರೋಧಿಸಿ ದನಿ ಎತ್ತಲಿ. ಒಂದೆರಡು ಅವಧಿಯ ಅಧಿಕಾರದ ಸವಿಯುಂಡು ಜನಪ್ರತಿನಿಧಿಗಳು ಶಾಶ್ವತವಾಗಿ ಮಣ್ಣಾಗಿ ಹೋಗುತ್ತಾರೆ. ಇಂದಿನ ಪೀಳಿಗೆ ಮುಂದೊಂದು ದಿನ ಇಲ್ಲವಾಗುತ್ತದೆ.
ಆದರೆ ಪ್ರಜಾಸತ್ತಾತ್ಮಕ ಭಾರತ ಶಾಶ್ವತವಾಗಿ ಉಳಿದಿರಬೇಕಲ್ಲವೇ ? ಇಂದು ದೇಶದ ಸಾರ್ವಭೌಮ ಪ್ರಜೆಗಳು ವಿಶ್ವಾಸಪೂರ್ವಕವಾಗಿ ತಮ್ಮ ಪ್ರತಿನಿಧಿಗಳನ್ನು ಸಂಸತ್ತಿಗೆ, ವಿಧಾನಸಭೆಗಳಿಗೆ ಆಯ್ಕೆ ಮಾಡಿ ಕಳಿಸಿರುವುದು “ ಈ ದೇಶದ ಸಂವಿಧಾನ ಬಯಸುವಂತಹ ಪ್ರಜಾಪ್ರಭುತ್ವವನ್ನು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ” ಸಂರಕ್ಷಿಸಲೆಂದೇ ಅಲ್ಲವೇ ? ತಾವು ಅಲಂಕರಿಸಿರುವ ಅಧಿಕಾರಪೀಠಗಳು, ಸವಿಯುತ್ತಿರುವ ಸವಲತ್ತು ಸೌಲಭ್ಯಗಳು ಈ ದೇಶದ ಪ್ರತಿಯೊಬ್ಬ ಸಾರ್ವಭೌಮ ಪ್ರಜೆಯ ಆಸ್ತಿ ಎಂಬ ಪರಿವೆ ಜನಪ್ರತಿನಿಧಿಗಳಲ್ಲಿರಬೇಕಲ್ಲವೇ ? ಈ ಪರಿವೆ ಇಲ್ಲದಿರುವುದರಿಂದಲೇ ಭಾರತ ಅನಾಹುತಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇತ್ತ ಸಾಮಾಜಿಕ ಪ್ರಜಾಪ್ರಭುತ್ವವೂ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವವೂ ಇಲ್ಲದೆ ಸೊರಗುವಂತಾಗಿದೆ.
ಜನಪ್ರತಿನಿಧಿಗಳ ಮೇಲಿರುವಷ್ಟೇ ನೈತಿಕ, ಸಾಂವಿಧಾನಿಕ ಹೊಣೆ ಜನತೆಯ ಮೇಲೆಯೂ ಇರುತ್ತದೆ. ಕಳೆದ ಒಂದು ದಶಕದ ಉನ್ಮತ್ತ ರಾಜಕಾರಣಕ್ಕೆ ಬಲಿಯಾಗಿ ತಮ್ಮ ಸ್ವಪ್ರಜ್ಞೆಯನ್ನೇ ಕಳೆದುಕೊಂಡಂತಿರುವ ಒಂದು ಬೃಹತ್ ಮಧ್ಯಮ ವರ್ಗ ಮತ್ತು ಯುವ ಪೀಳಿಗೆ ತಮ್ಮ ಕಣ್ಣೆದುರಿನ ಅಪಾಯಗಳನ್ನು ಅರಿತುಕೊಳ್ಳಬೇಕಿದೆ. ಇವರ ಕಣ್ಣುಗಳಿಗೆ ಕವಿದಿರುವ ಪೊರೆಯನ್ನು ಕಳಚಿಹಾಕಲು ಜಾಗೃತಿ ಮೂಡಿಸುವ ಹೊಣೆಗಾರಿಕೆ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಸಕ್ರಿಯವಾಗಿರುವ ಸಂಘಟನೆಗಳ ಮೇಲೆಯೂ ಇದೆ. ಸಾಹಿತಿ ಕಲಾವಿದರು, ವಿಜ್ಞಾನಿಗಳು, ವಿದ್ಯಾರ್ಥಿ ಯುವಜನತೆ, ವೈದ್ಯಕೀಯ ಲೋಕ ಮತ್ತು ಮಣ್ಣ ಋಣಕ್ಕೆ ಬದ್ಧರಾದ ಪ್ರತಿಯೊಬ್ಬ ಪ್ರಜೆಯಲ್ಲೂ ಈ ಜಾಗೃತಿ ಮೂಡದೆ ಹೋದರೆ ಬಹುಶಃ ಭಾರತೀಯ ಪ್ರಜಾಪ್ರಭುತ್ವ ಎನ್ನುವ ಕಲ್ಪನೆಯೇ ವಸ್ತು ಸಂಗ್ರಹಾಲಯದಲ್ಲಿ ನೋಡಬಹುದಾದ ಪಳೆಯುಳಿಕೆಯಾಗಿಬಿಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

