ಬಹಿರಂಗ
ಸಂವಿಧಾನ ರಚನೆಯಲ್ಲಿ ಡಾ. ಬಾಬೂ ಜಗಜೀವನ್ ರಾಮ್ ಅವರ ಪಾತ್ರ
- ಡಾ. ಷಕೀಬ್ ಎಸ್ ಕಣದ್ಮನೆ, ನವಿಲೇಹಾಳ್
ಭಾರತೀಯ ಇತಿಹಾಸದಲ್ಲಿ ವರ್ಣಬೇಧ ನೀತಿಯನ್ನು ತಲತಲಾಂತರದಿಂದ ಕಾಣಬಹುದು, ರಾಜಮಹರಾಜರ ಕಾಲದಲ್ಲಿಯೂ ಕ್ರೂರ ವರ್ತನೆಗಳು, ನೀತಿ ನಿಯಮಗಳು, ದಲಿತ ಬಲಿತ, ಮೇಲು ಕೀಳುಗಳೆಂಬ ಪರಿಕಲ್ಪನೆಗಳು ನಮ್ಮ ನಾಡಿನಲ್ಲಿ ಕಾಣಬಹುದು. ಇದು ಬರಿಯ ರಾಜರ ಕಾಲದಲ್ಲಿ ಅಷ್ಟೇ ಅಲ್ಲದೆ, ಬ್ರಿಟಿಷರ ಆಡಳಿತದ ಕಾಲಘಟ್ಟದಲ್ಲಿಯೂ ಸಹ ಅಷ್ಟೇ ಕ್ರೂರತನವನ್ನು ಮೀರಿತ್ತು.
ದಲಿತರು ಓಣಿಯಲ್ಲಿ ಓಡಾಡುವಂತಿರಲಿಲ್ಲ, ಅವರು ನಡೆದಾಡಿದ ಜಾಗದಲ್ಲಿ ದಲಿತರು ಬಂದರೆ ಮೈಲಿಗೆ ಎಂದು ಮಡಿ ಮೈಲಿಗೆಗಳ ಕಾನ್ಸೆಪ್ಟ್ಗಳ ಆಧಾರದಲ್ಲಿ ದಲಿತರನ್ನು ಕೀಳಾಗಿ ನೋಡುವ ಕಾಲಘಟ್ಟದಲ್ಲಿ ದಲಿತರಿಗೆ ಶಿಕ್ಷಣ ವ್ಯವಸ್ಥೆಯಂತೂ ಕನಸಿನ ಮಾತು. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಅಕ್ಷರ ಜ್ಞಾನಕ್ಕಾಗಿ ಹೋರಾಡಿದ ಅನೇಕ ದಲಿತ ಮುಖಂಡರುಗಳಲ್ಲಿ ನಮಗೆ ತಟ್ಟನೆ ನೆನಪಿಗೆ ಬರುವುದು ಡಾ. ಬಿ.ಆರ್. ಅಂಬೇಡ್ಕರ್. ಇವರ ಹೋರಾಟ ಅಷ್ಟಿಷ್ಟಲ್ಲ, ಹಾಗೇ ಇವರ ಸಮಕಾಲೀನರಾದ ಬಿಹಾರ ಮೂಲದ ಡಾ. ಬಾಬೂ ಜಗಜೀವನ್ ರಾಮ್ ಎಂಬುವರು ಕೂಡ ದಲಿತರ ಧನಿಯಾಗಿ, ಧಮನೀತರ ಪರವಾಗಿ ಸೆಟೆದೆದ್ದು ನಿಂತ ಧೀಮಂತ ರಾಜಕಾರಣಿಗಳಲ್ಲಿ ಇವರು ಮೊದಲಿಗರು.
ಡಾ. ಬಾಬೂ ಜಗಜೀವನರಾಮರು ಬಿಹಾರದ ಚಾಂದ್ವಾ ಗ್ರಾಮದಲ್ಲಿ ಏಪ್ರಿಲ್ 5,1908 ರಂದು ಭಾರತೀಯ ಜಾತಿ ವ್ಯವಸ್ಥೆಯ ಚಮರ್ ಜಾತಿಯಲ್ಲಿ ಜನಿಸಿದರು. ಇವರಿಗೆ ಓರ್ವ ಹಿರಿಯ ಸಹೋದರ ಮತ್ತು ಮೂವರು ಸಹೋದರಿಯರು ಇದ್ದು, ಇವರ ತಂದೆ ಬ್ರಿಟಿಷ್ ಇಂಡಿಯನ್ ಆರ್ಮಿಯಲ್ಲಿ ಸೇವೆ ಸಲ್ಲಿಸಿದ ಶೋಭಿರಾಮ್ ಮತ್ತು ತಾಯಿ ವಸಂತಿ ದೇವಿ ಆಗಿದ್ದರು.
ಬಾಬೂಜಿಯವರು 1914ರಲ್ಲಿ ಶಾಲೆಗೆ ಪ್ರವೇಶ ಪಡೆಯುತ್ತಾರೆ, ಇಲ್ಲಿಂದ 1920 ರಲ್ಲಿ ರ್ಹಾ ನಗರದಲ್ಲಿನ ಅಗರ್ವಾಲ್ ಮಿಡಲ್ ಸ್ಕೂಲಿಗೆ ಸೇರುತ್ತಾರೆ, ಇಲ್ಲಿಯೇ ಇವರು ಮೊದಲ ಬಾರಿಗೆ ಇಂಗ್ಲೀಷ್ ಬೋಧನೆಯನ್ನು ಪಡೆದರು.1922 ರಲ್ಲಿ ಅದೇ ಪಟ್ಟಣದ ಟೌನ್ ಸ್ಕೂಲಿಗೆ ಸೇರುತ್ತಾರೆ. ಈ ಶಾಲೆಯಲ್ಲಿ ನಡೆದ ಒಂದು ಸಣ್ಣ ಘಟನೆ ಬಾಬೂಜಿಯವರ ಜೀವನದಲ್ಲಿ ಮಹತ್ತರವಾದ ಪರಿಣಾಮ ಬೀರಿತು.
ಆ ಘಟನೆ ಯಾವುದೆಂದರೆ ಟೌನ್ ಸ್ಕೂಲಿನಲ್ಲಿ ಕುಡಿಯುವ ನೀರಿಗಾಗಿ ಎರಡು ಕುಂಡಗಳನ್ನು ಇರಿಸಲಾಗಿತ್ತು, ಅದರಲ್ಲಿ ಒಂದು ಹಿಂದೂಗಳಿಗೆ ಮತ್ತೊಂದು ಮುಸ್ಲೀಮರಿಗೆ ಎಂದು ಪ್ರತ್ಯೇಕ ಮಾಡಲಾಗಿತ್ತು. ಇದರಲ್ಲಿ ಬಾಬೂಜಿಯವರು ಹಿಂದೂಗಳದ್ದಾಗಿದ್ದ ಕುಂಡದ ನೀರನ್ನು ಕುಡಿಯುತ್ತಾರೆ, ಇವರು ಅಸ್ಪೃಶ್ಯರಾಗಿದ್ದ ಕಾರಣ ಈ ವಿಷಯ ಶಾಲೆಯ ಮುಖ್ಯ ಶಿಕ್ಷಕರಿಗೆ ತಿಳಿಯುತ್ತದೆ, ಈ ವಿಷಯದಿಂದ ಬಾಬೂಜಿಯವರು ತಮ್ಮ ಜೀವನದಲ್ಲಿಯೇ ಮೊದಲ ಬಾರಿಗೆ ಜಾತಿ ತಾರತಮ್ಯವನ್ನು ಶಾಲಾ ಹಂತದಲ್ಲಿಯೇ ಎದುರಿಸಬೇಕಾಯಿತು.
ಆದರೂ ಅವರು ವಿಚಲಿತರಾಗದೆ ಶಾಲೆಯಲ್ಲಿ ಇಡುತ್ತಿದ್ದ ನೀರಿನ ಕುಂಡಗಳನ್ನು ಹೊಡೆದು ಹಾಕುತ್ತಿದ್ದರೂ, ಪದೇ ಪದೇ ನೀರಿನ ಕುಂಡಗಳು ಹೊಡೆಯುತ್ತಿದ್ದದ್ದನ್ನು ಗಮನಿಸಿದ ಶಾಲಾ ಆಡಳಿತ ಮಂಡಳಿ. ವಿಷಯದ ಆಳವನ್ನು ದಲಿತ ಸಮುದಾಯದ ವಿದ್ಯಾರ್ಥಿಗಳಿಗೂ ಸಹ ಒಂದು ಪ್ರತ್ಯೇಕ ನೀರಿನ ಕುಂಡಗಳನ್ನಿಡುವ ಪದ್ಧತಿಯನ್ನ ಅನುಸರಿಸಿತು. ಇದು ಇವರ ಮೊದಲ ಪ್ರತಿಭಟನೆ ಅಥವಾ ಹೋರಾಟ ಎಂದರೆ ತಪ್ಪಾಗಲಾರದು.
1925ರಲ್ಲಿ ಬಾಬೂಜಿಯವರು ಮಾಡಿದ ಸ್ವಾಗತ ಭಾಷಣವೇ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯಕ್ಕೆ ಸೇರಲು ಕಾರಣವಾಯಿತು. ಮೆಟ್ರಿಕ್ಯುಲೇಷನ್ ಅನ್ನು ಮೊದಲ ವಿಭಾಗದಲ್ಲಿ ಉತ್ತೀರ್ಣರಾಗಿ 1927ರಲ್ಲಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯಕ್ಕೆ ಸೇರಿದರು. ಇಲ್ಲಿ ಇವರಿಗೆ ಬಿರ್ಲಾ ವಿದ್ಯಾರ್ಥಿ ವೇತನವನ್ನು ನೀಡಲಾಯಿತು, ಇಲ್ಲಿಯೇ ಇವರು ಇಂಟರ್ ಸೈನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಹಿಂದೂ ಬನಾರಸ್ ವಿಶ್ವವಿದ್ಯಾನಿಲಯದಲ್ಲಿ ಇದ್ದಾಗ ಇವರು ಪರಿಶಿಷ್ಠ ಜಾತಿಗಳನ್ನು ಸಂಘಟಿಸಿ ಸಾಮಾಜಿಕ ತಾರತಮ್ಯದ ವಿರುದ್ಧ ಪ್ರತಿಭಟಿಸಿದರು. ನಂತರದಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಮುಂದುವರೆಸಿ 1931 ರಲ್ಲಿ ಬಿ.ಎಸ್ಸಿ ಪದವಿ ಪಡೆದರು.
ಬಾಬೂಜಿಯವರ ರಾಜಕೀಯ ಸಾಧನೆ
- ಸತತ 30 ವರ್ಷಗಳ ಕಾಲ ಕೇಂದ್ರ ವಿಧಾನ ಸಭೆಯ ಸದಸ್ಯರಾಗಿ ಸೇವೆಯನ್ನು ಸಲ್ಲಿಸಿದರು.
- ಇವರು ಭಾರತೀಯ ಕ್ಯಾಬಿನೆಟ್ನಲ್ಲಿ ಧೀರ್ಘಕಾಲ ಸೇವೆ ಸಲ್ಲಿಸಿದ ಕ್ಯಾಬಿನೆಟ್ ಮಂತ್ರಿ ಎಂಬ ದಾಖಲೆಯನ್ನು ಹೊಂದಿದ್ದಾರೆ.
ಕೇಂದ್ರ ಕಾರ್ಮಿಕ ಮಂತ್ರಿಯಾಗಿ 1946 ರಿಂದ 1952 ರ ವರೆಗೆ
- ಕೇಂದ್ರ ಸಂಪರ್ಕ ಸಚಿವರಾಗಿ 1952 ರಿಂದ 1956 ರ ವರೆಗೆ
- ಕೇಂದ್ರ ಸಾರಿಗೆ ಮತ್ತು ರೈಲ್ವೆ ಸಚಿವರಾಗಿ 1956 ರಿಂದ1962 ರ ವರೆಗೆ
- ಕೇಂದ್ರ ಸಾರಿಗೆ ಮತ್ತು ಸಂಪರ್ಕ ಸಚಿವರಾಗಿ 1962 ರಿಂದ 1963 ರ ವರೆಗೆ
- ಕೇಂದ್ರ ಕಾರ್ಮಿಕ ಉದ್ಯೋಗ ಮತ್ತು ಪುನರ್ವಸತಿ ಸಚಿವರಾಗಿ 1966ರಿಂದ 1967 ರ ವರೆಗೆ
- ಕೇಂದ್ರ ಆಹಾರ ಮತ್ತು ಕೃಷಿ ಸಚಿವರಾಗಿ1967 ರಿಂದ 1970 ರವರೆಗೆ
- ಕೇಂದ್ರ ರಕ್ಷಣಾ ಸಚಿವರಾಗಿ 1970 ರಿಂದ1974 ಮತ್ತು 1977-1979ರವರೆಗೆ ಎರಡು ಅವಧಿಯಲ್ಲಿ ಕಾಣಬಹುದು.
- ಕೇಂದ್ರ ಕೃಷಿ ಮತ್ತು ನೀರಾವರಿ ಸಚಿವರಾಗಿ1974 ರಿಂದ 1977ರ ವರೆಗೆ
- ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ಸಿನ ಅಧ್ಯಕ್ಷರಾಗಿ ಸೇವೆ
- ಕಾಂಗ್ರೇಸ್ ಫಾರ್ ಡೆಮಾಕ್ರಸಿ ಪಕ್ಷದ ಸ್ಥಾಪಕ ಸದಸ್ಯರಾಗಿದ್ದರು ಹಾಗೂ 1977ರಲ್ಲಿ ಜನತಾ ಪಕ್ಷದೊಂದಿಗೆ ಉತ್ತಮ ಹೊಂದಾಣಿಕೆ ಹೊಂದಿದ್ದರು.
- ಜನವರಿ24,1979 ರಿಂದ ಜುಲೈ 28,1979 ರ ವರೆಗೆ ಭಾರತದ ಉಪಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
- 1976ಸಪ್ಟೆಂಬರ್ ನಿಂದ ಏಪ್ರಿಲ್ 1983ರ ವರೆಗೆ ಸ್ಕೌಟ್ ಅಂಡ್ ಗೈಡ್ಸ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಸಂವಿಧಾನ ರಚನೆಯಲ್ಲಿ ಬಾಬೂಜಿಯವರ ಪಾತ್ರ
ಕಾರ್ಮಿಕ ಇಲಾಖೆಯನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸುತ್ತಿರುವಾಗಲೇ ಅವರೊಬ್ಬ ಭವಿಷ್ಯದ ಮೇರು ಸಂಸದೀಯ ಪಟು ಎಂಬ ಕುರುಹುಗಳನ್ನು ಪರಿಚಯಿಸಿದರು. ಇಂತಹ ಸಮಯದಲ್ಲಿ ದೇಶಕ್ಕೆ ಕ್ಯಾಬಿನೆಟ್ ಆಯೋಗದ ಆಗಮನವು ಸ್ವಾತಂತ್ರ್ಯದ ಆಶಾಕಿರಣವನ್ನು ಮೂಡಿಸತೊಡಗಿತ್ತು. ಇದನ್ನು ಗಳಿಸುವುದರ ಜೊತೆಗೆ ಮಧ್ಯಾಂತರ ಸರ್ಕಾರ ದೇಶೀಯ ಸಂವಿಧಾನವೊAದನ್ನು ರಚಿಸಲು ಮುಂದಾಯಿತು.
ಈ ಮಹತ್ವದ ಕಾರ್ಯವನ್ನು ನೆರವೇರಿಸಲು ವಿವಿಧ ಪ್ರಾಂತ್ಯಗಳಿಂದ ಸಂವಿಧಾನ ಶಾಸಕಾಂಗ ಸಭೆಗೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿತ್ತು. ಆವಾಗ ಬಾಬೂಜಿ ಬಿಹಾರದಲ್ಲಿ ಸ್ಪರ್ಧಿಸಿ ಚುನಾಯಿತರಾದರೆ, ಬಾಂಬೆಯಲ್ಲಿ ಸ್ಪರ್ಧಿಸಿದ ಅಂಬೇಡ್ಕರ್ಗೆ ಬಿ.ಜಿ ಖೇರ್ ಎಸಗಿದ ದ್ರೋಹದಿಂದ ಸೋಲಾಯಿತು. ಮಂಡಲ ಎಂಬ ಬಂಗಾಳದ ದಲಿತ ಪ್ರತಿನಿಧಿ ರಾಜಿನಾಮೆ ನೀಡಿ ಅವರನ್ನು ಅಲ್ಲಿಂದ ಸ್ಪರ್ಧಿಸಿ ಆಯ್ಕೆಗೊಳ್ಳುವಂತೆ ಅವಕಾಶ ಕಲ್ಪಿಸಿದರು.
ಬಂಗಾಳದ ವಿಭಜನೆಯ ತರುವಾಯ ಅಂಬೇಡ್ಕರ್ ಸದಸ್ಯತ್ವವನ್ನು ಕಳೆದುಕೊಂಡರು. ಅಂಬೇಡ್ಕರಿಲ್ಲದ ಸಂವಿಧಾನ ಶಾಸಕಾಂಗ ಸಭೆ ಅಪ್ರಯೋಜಕವೆಂದು ಭಾವಿಸಿದ ಮಧ್ಯಾಂತರ ಸರ್ಕಾರ ವಿಧಿಯಿಲ್ಲದೆ ಚುನಾಯಿಸಿ ಬರಮಾಡಿಕೊಂಡಿತು. ಕೇವಲ ಸದಸ್ಯರಾಗಿದ್ದುಕೊಂಡು ದಲಿತರ ಮತ್ತು ಇತರ ಶೋಷಿತರ ವರ್ಗಗಳ ಹಿತಾಸಕ್ತಿಯನ್ನು ಕಾಪಾಡಲು ಮುಂದಾಗಿದ್ದ ಅವರಿಗೆ ದೇಶದ ಸಮಗ್ರತೆಯನ್ನು ಪ್ರತಿಬಿಂಬಿಸುವ ಮಹತ್ವದ ಹೊರೆ ಅವರ ಹೆಗಲ ಮೇಲಿತ್ತು.
28 ಜನ ದಲಿತ ಪ್ರತಿನಿಧಿಗಳ ಪೈಕಿ ಡಾ. ಬಾಬೂ ಜಗಜೀವನರಾಮ್ ಕೂಡ ಅಗ್ರಮಾನ್ಯ ಸ್ಥಾನದಲ್ಲಿ ಗುರುತಿಸಿಕೊಂಡಿದ್ದವರು. ಅವರು ಸಂವಿಧಾನದ ಐದು ಪ್ರಮುಖ ಸ್ಥಾಯಿ ಸಮಿತಿಗಳ ಸದಸ್ಯರಾಗಿ ತಮ್ಮ ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿದರು.
ಡಾ. ಬಾಬೂ ಜಗಜೀವನ್ ರಾಮ್ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ರವರು ಸದಸ್ಯರಾಗಿದ್ದ ಸಂವಿಧಾನ ರಚನಾ ಸ್ಥಾಯಿ ಸಮಿತಿಗಳು
ಡಾ. ಬಾಬೂ ಜಗಜೀವನ್ ರಾಮ್ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜ್ಯಾಂಗ ಸಭೆಯ ಸದನ ಸ್ಥಾಯಿ ಸಮಿತಿಗಳು
- ಕಾನೂನುಗಳ ನಿಯಮಾವಳಿ ಸಮಿತಿ
- ಮೂಲಭೂತ ಹಕ್ಕುಗಳು, ಅಲ್ಪಸಂಖ್ಯಾತರ ಹಾಗೂ ಬುಡಕಟ್ಟು ಮತ್ತು ಹೊರತುಪಡಿಸಿದ ಸಲಹಾ ಸಮಿತಿ
- ಸಲಹಾ ಸಮಿತಿಯ ಉಪ ಸಮಿತಿ; ಅಲ್ಪಸಂಖ್ಯಾತರ ಸಮಿತಿ
- ಸಂಯುಕ್ತ ರಾಜ್ಯಾಂಗ ಸಮಿತಿ
- ಹೊರತು ಪಡಿಸಿದ ಮತ್ತು ಭಾಗಶಃ ಹೊರತುಪಡಿಸಿದ ಪ್ರದೇಶಗಳ ಉಪಸಮಿತಿ
- ಡಾ. ಬಿ.ಆರ್ ಅಂಬೇಡ್ಕರ್ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜ್ಯಾಂಗ ಸಭೆಯ ಸದನ ಸ್ಥಾಯಿ ಸಮಿತಿಗಳು
- ರಾಜ್ಯಾಂಗ ಸಭೆಯ ಮೇಲಿನ ಕಾರ್ಯಗಳ ಸಮಿತಿ
- ರಾಷ್ಟ್ರೀಯ ಧ್ವಜ ಹಂಗಾಮಿ ಸಮಿತಿ
- ಮೂಲಭೂತ ಹಕ್ಕುಗಳು, ಅಲ್ಪಸಂಖ್ಯಾತರ ಹಾಗೂ ಬುಡಕಟ್ಟು ಮತ್ತು ಹೊರತುಪಡಿಸಿದ ಸಲಹಾ ಸಮಿತಿ
- ಮೂಲಭೂತ ಹಕ್ಕುಗಳ ಉಪಸಮಿತಿ
- ಸಲಹಾ ಸಮಿತಿಯ ಉಪ ಸಮಿತಿ; ಅಲ್ಪಸಂಖ್ಯಾತರ ಸಮಿತಿ
- ಸಂಯುಕ್ತ ರಾಜ್ಯಾಂಗ ಸಮಿತಿ
- ಶ್ರೇಷ್ಠ ನ್ಯಾಯಾಲಯದ ಹಂಗಾಮಿ ಸಮಿತಿ.
ಬಾಬೂಜಿ ಗಾಂಧೀವಾದವನ್ನು ಎಂದೂ ಕುರುಡಾಗಿ ಆರಾಧಿಸಿದವರಲ್ಲ. ಅಸ್ಪೃಶ್ಯತೆಯ ಆಚರಣೆಯ ವಿಚಾರದಲ್ಲಿ ಅವರೆಂದೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡವರಲ್ಲ. ಒಮ್ಮೆ ಅವರು ಹಿಂದೂ ಮಹಾಸಭಾದ ಬಿಹಾರದ ಘಟಕ ಅಸ್ಪೃಶ್ಯತಾ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅವರ ನೆಚ್ಚಿನ ರಾಜಕೀಯ ಗುರುವಾಗಿದ್ದ ಡಾ. ರಾಜೇಂದ್ರ ಪ್ರಸಾದರು ಸ್ವತಃ ಭಾಗವಹಿಸಿದ್ದರು. ಆ ಸಮಯದಲ್ಲಿ ಸಂಪ್ರದಾಯವಾದಿ ಹಿಂದೂಗಳೆಲ್ಲಾ ಬೆಚ್ಚಿ ಬೀಳುವಂತಹ ಮಾತುಗಳನ್ನಾಡಿ ಬಿಟ್ಟರು. ಅದೇನೆಂದರೆ ‘ನಿಮ್ಮ ಈ ನಯವಂಚಕತನದಿಂದ ಅಸ್ಪೃಶ್ಯತೆಯ ಕಳಂಕವನ್ನು ತೊಡೆಯಲಾರಿರಿ. ನಿಮ್ಮಲ್ಲಿ ಸವರ್ಣೀಯತೆ ಎಲ್ಲಿಯವರೆಗೆ ಜಾಗೃತವಾಗಿರುತ್ತದೆಯೋ ಅಲ್ಲಿಯವರೆಗೂ ಅಸ್ಪೃಶ್ಯತೆಯನ್ನು ಉಚ್ಛಾಟಿಸಲು ಸಾಧ್ಯವಿಲ್ಲ.
ನಿಮ್ಮಲ್ಲಿ ಒಬ್ಬರಾದರೂ ನಿದರ್ಶನ ಪೂರಕವಾಗಿಯಾದರೂ, ಅಸ್ಪೃಶ್ಯತೆಯನ್ನು ತೊಲಗಿಸಲು ಯಾವುದಾದರೊಂದು ಕ್ರಮ ಕೈಗೊಂಡಿರುವಿರಾ ಎಂದು ಕೇಳುತ್ತೇನೆ. ಈಗಿನ್ನೂ ಉಪದೇಶ, ಭಾಷಣ, ವ್ಯಾಖ್ಯಾನ ಸಾಕು. ನಿಮ್ಮ ವೈಯಕ್ತಿಕ ಹಾಗೂ ಸಾಮೂಹಿಕ ವರ್ತನೆಯಿಂದ ಅಸ್ಪೃಶ್ಯತೆಯ ನಿರ್ಮೂಲನಾ ಕಾರ್ಯಕ್ರಮಗಳನ್ನು ಕಾರ್ಯಗತ ಮಾಡಿ ತೋರಿಸಿರಿ’. ಎಂದು ತಮ್ಮ ನೇರನುಡಿಗಳಿಂದ ಚುಚ್ಚಿ ಹಿಂದೂ ಸಮಾಜವನ್ನು ಎಚ್ಚರಿಸಿದರು.
ಅವರು ಸಂವಿಧಾನದ ಅಲ್ಪಸಂಖ್ಯಾತರ ಉಪಸಮಿತಿಗೆ ಸದಸ್ಯರಾಗಿದ್ದುಕೊಂಡು ಸಂವಿಧಾನದಲ್ಲಿ ಸೇರ್ಪಡೆಯಾಗಬೇಕಿದ್ದಂತಹ ಅವಕಾಶ ಮತ್ತು ರಕ್ಷಣಾ ಸ್ವರೂಪಗಳ ಬಗ್ಗೆ ಸುಧೀರ್ಘವಾದ ಲಿಖಿತ ಮನವಿಯೊಂದನ್ನು ಸಮರ್ಪಿಸಿದರು. ಇದರಲ್ಲಿ ದಲಿತರು ಮತ್ತು ಇತರ ಶೋಷಿತರು ಪಡೆದುಕೊಳ್ಳಬೇಕಾದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ, ನ್ಯಾಯಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಬಗೆಗೆ ಸವಿವರವಾಗಿ ಚರ್ಚಿಸಿ ಉಲ್ಲೇಖಿಸಿದರು.
ಅವರು ಶಾಸಕಾಂಗ ಸಭೆಯಲ್ಲಿ ಅಸ್ಪೃಶ್ಯತೆಯ ಕುರಿತು ಮಂಡಿಸಿದಾಗ ಕೇವಲ ಹಿಂದೂ ಧರ್ಮೀಯರು ಮಾತ್ರ ಆಚರಿಸುವ ಅಸ್ಪೃಶ್ಯತೆಗೆ ಕಡಿವಾಣ ಹಾಕುವುದರ ಬದಲು ಭಾರತೀಯರೆಲ್ಲರೂ ಆಚರಿಸುವ ಭಿನ್ನ ಬಗೆಯ ಅಸ್ಪೃಶ್ಯತೆಯನ್ನು ತೊಡೆದುಹಾಕಲು ಆಗ್ರಹಿಸಿದರು. ಈ ಉದ್ದೇಶಕ್ಕಾಗಿ ಅವರು ಮೂರು ನಿರ್ಣಾಯಕಗಳನ್ನು ವಿಧಿಸಲು ಕೋರಿದ್ದರು. ಅವುಗಳೆಂದರೆ;
- ಯಾವುದೇ ಭಿನ್ನತೆ ಅಥವಾ ತಾರತಮ್ಯವಿಲ್ಲದೆ ಹಿಂದೂ ಸಮಾಜದ ಎಲ್ಲಾ ಜಾತಿಗಳಿಗೆ ಎಲ್ಲಾ ಹಿಂದೂ ದೇವಾಲಯಗಳು ತೆರೆದಿರಬೇಕು(ಪ್ರವೇಶವಿರಬೇಕು)
- ಯಾವುದೇ ಜಾತಿಯವರಿಗೆ ಸೇರಿದ ನೀರು ಅಥವಾ ಆಹಾರಗಳು ಹಿಂದೂ ಸಮಾಜದ ಯಾವುದೇ ಇತರ ಜಾತಿಯವರು ಮುಟ್ಟಿದ ಮಾತ್ರಕ್ಕೆ ಮೈಲಿಗೆಯಾಗತಕ್ಕದ್ದಲ್ಲ.
- ಹಿಂದೂಗಳು ಯಾವುದೇ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಎಲ್ಲಾ ಜತಿಯ ಹಿಂದೂಗಳು ಯಾವುದೇ ಭೇದವಿಲ್ಲದೆ ಭಾಗವಹಿಸುವಂತಾಗಬೇಕು.
ಬಹುಶಃ ಈ ಮೂರು ಅಂಶಗಳ ಮೇಲೆ ಬಾಬೂಜಿಯವರು ಅಸ್ಪೃಶ್ಯತೆಯ ನಿರ್ಮೂಲನೆಯ ವಿಚಾರದಲ್ಲಿ ಅಂಬೇಡ್ಕರ್ರಂತೆಯೇ ತಮ್ಮ ಭಾವನೆಗಳನ್ನು ಘನೀಕರಿಸಿಕೊಂಡಿದ್ದವರು. ಅವರು ಅತ್ಯಂತ ಪ್ರಾಯೋಗಿಕವಾಗಿದ್ದಂತಹ ಅನುಭವದ ವಿಚಾರಗಳನ್ನು ಸಂವಿಧಾನದ ರಚನಾ ಸಂದರ್ಭದಲ್ಲಿ ಧಾರೆಯೆರೆದರು. ಅನೇಕ ಸಂಧರ್ಬದಲ್ಲಿ ಬಾಬೂಜಿ ಅಂಬೇಡ್ಕರ್ ನಿರಂತರ ಹೋರಾಟಗಳಿಗೆ ಮೌನ ಬೆಂಬಲಿಗರಾಗಿದ್ದರು.ಉದ್ಯೋಗ ಮೀಸಲಾತಿಯಲ್ಲಿ ಬಡ್ತಿಯನ್ನು ದೊರಕಿಸಿಕೊಟ್ಟರು .
ಮೀಸಲಾತಿ ಮೇಲಿನ ಚರ್ಚೆಗಳು ಸಂವಿಧಾನ ರಚನಾ ಸಂದರ್ಭದಲ್ಲಿ ಬಂದಾಗ ಅನೇಕ ಸವರ್ಣೀಯರು ಇದರ ಅಳವಡಿಕೆಯನ್ನು ವಿರೋಧಿಸಿದರು. ಮತ್ತೆ ಕೆಲವರು ಇದನ್ನು ಸಂವಿಧಾನದ ಅಳವಡಿಕೆಯ ನಂತರ ಕೇವಲ ಆಡಳಿತಾತ್ಮಕ ಕಾನೂನುಗಳಿಂದ ದೊರಕಿಸಿಕೊಡಬಹುದೆಂಬ ಸಲಹೆಗಳನ್ನು ನೀಡಿದರು. ಆದರೆ ಅಲ್ಪಸಂಖ್ಯಾತರ ಉಪಸಮಿತಿಯ ಸದಸ್ಯರಾಗಿದ್ದ ಬಾಬೂಜಿ ಇದನ್ನು ಬಲವಾಗಿ ತಿರಸ್ಕರಿಸಿದರು.
ಇದರ ಬದಲು ಮೀಸಲಾತಿಯನ್ನು 40 ವರ್ಷಗಳ ಕಾಲಾವಧಿಗೆ ನಿಗಧಿಪಡಿಸಬೇಕೆಂದು ಸಭೆಯ ಮುಂದೆ ಸೂಚಿಸಿದರು. ಇದರ ಬದಲು ಅಂಬೇಡ್ಕರ್ ಪ್ರತಿ 10 ವರ್ಷಕ್ಕೊಮ್ಮೆ ನವೀಕರಿಸಿಕೊಳ್ಳಬೇಕೆಂಬ ಸಲಹೆಯನ್ನು ನೀಡಿದರು. ಇದರ ಒಳ ಮರ್ಮವನ್ನು ಅರಿ ಬಾಬೂಜಿ ದಲಿತರ ಸಂಘಟನಾ ಶಕ್ತಿ ಇಮ್ಮಡಿಗೊಳಿಸುತ್ತದೆಂಬ ಆಶಾಭಾವನೆಯನ್ನು ಹೊಂದಿದ್ದರು.
ಅಂಬೇಡ್ಕರ್ ಪರಿನಿರ್ವಾಣದ ನಂತರ ಅವರ ಸಂವಿಧಾನವನ್ನು ಕಾಯಬೇಕಾದ ಜವಬ್ದಾರಿ ಮತ್ತು ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯು ಬಾಬೂಜಿಯವರ ಮೇಲಿತ್ತು. ಉದ್ಯೋಗದಲ್ಲಿ ಪರಿಶಿಷ್ಠರಿಗೆ ಮೀಸಲಾತಿಯ ಅವಕಾಶವಿದ್ದರೂ ಅದರೊಳಗೆ ಬಡ್ತಿಗೆ ಅವಕಾಶವಿರಲಿಲ್ಲ. ಅವರು 1962 ರಲ್ಲಿ ರೈಲ್ವೆ ಮಂತ್ರಿಗಳಾಗಿದ್ದಾಗ ಪ್ರಕರಣವೊಂದು ನ್ಯಾಯಾಲಯದ ಮೆಟ್ಟಿಲೇರಿತು. ಕೆ. ರಂಗಾಚಾರಿಯೆದುರು ರೈಲ್ವೆ ಜನರಲ್ ಮ್ಯಾನೇಜರ್ ತೀರ್ಪಿನಡಿ ಬಾಬೂಜಿ ಇಡೀ ಸಮಸ್ತ ದಲಿತ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸಂಸತ್ತಿನ ಒಳಗೆ ಮತ್ತು ಹೊರಗೆ ಸಂಘಟನಾತ್ಮಕ ಹೋರಾಟ ಆರಂಭಿಸಿದರು.
ಇವರ ತುಡಿತವನ್ನರಿತ ಅಂದಿನ ಕಾಂಗ್ರೇಸ್ ಸರ್ಕಾರ ಉದ್ಯೋಗ ಮೀಸಲಾಯಿತಿಯಲ್ಲಿ ಬಡ್ತಿಯನ್ನು ನೀಡುವ ಸಲುವಾಗಿ ಸಂವಿಧಾನದ ಅದರ ಪರಿಚ್ಛೇದಗಳಿಗೆ ಅಗತ್ಯ ತಿದ್ದುಪಡಿಯನ್ನು ತರಲು ಮುಂದಾಯಿತು. ಬಹುಶಃ ಇಂತಹ ಅವಕಾಶವನ್ನೇನಾದರೂ ಬಾಬೂಜಿ ಸದುಪಯೋಗಪಡಿಸಿಕೊಳ್ಳದೆ ಹೋಗಿದ್ದರೆ ಮೀಸಲಾತಿ ಪಡೆಯುತ್ತಿರುವ ಎಲ್ಲಾ ಜಾತಿಯ ಉದ್ಯೋಗಸ್ಥರಿಂದು ಮುಂಬಡ್ತಿ ಮಡೆಯಲು ಸಾಧ್ಯವಾಗುತ್ತಿರಲಿಲ್ಲ. ಅವರ ಸಮಯೋಚಿತ ನಿರ್ಧಾರದ ಫಲವಾಗಿ ಇಂದು ದಲಿತರು ಮತ್ತು ಹಿಂದುಳಿದವರು ಮೀಸಲಾಯಿತಿಯ ಹೆಚ್ಚಿನ ಫಲಗಳನ್ನು ಅನುಭವಿಸುವಂತಾಗಿದೆ.
ಗ್ರಂಥ ಋಣ
- ಬಾಬು ಜಗಜೀವನರಾಮ್ – ಪ್ರೊ.ಟಿ.ಯಲ್ಲಪ್ಪ ಬೂತಯ್ಯ
- ಬಾಬೂಜಿ ಚಿಂತನ ಮಂಥನ – ಸಂಪಾದಕ ಮೈಲಹಳ್ಳಿ ರೇವಣ್ಣ- ಪ್ರಸಾರಾಂಗ, ಮೈಸೂರು 2010
- ಡಾ.ಬಾಬುಜಗಜೀವನರಾಮ್ ಸಾಮಾಜಿಕ ಬದಲಾವಣೆಯ ಸಂಕೇತ ಮತ್ತು ಒಂದು ಕಾಲಘಟ್ಟದ ವ್ಯಕ್ತಿ – ಸಂಪಾದಕ ಅಥವಾ ಹೆಚ್. ವೆಂಕಟೇಶ್ ಇಳಾ ಮುದ್ರಣ, ಬೆಂಗಳೂರು 2009
- ಭಾರತದ ಜಾತಿ ಪದ್ಧತಿಯ ಸವಾಲುಗಳು – ಪ್ರೊ.ಗೌರಮ್ಮ, ಪ್ರೊ. ಯಲ್ಲಪ್ಪ ಬೂತಯ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

