ದಿನದ ಸುದ್ದಿ

ಕೋವಿಡ್ ಸೋಂಕು ಪ್ರಕರಣಗಳ ಹೆಚ್ಚಳ ಹಿನ್ನೆಲೆ; ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಅನುಷ್ಠಾನಕ್ಕೆ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ನಿರಂತರ ಅನುಷ್ಠಾನ, ನಿಗಾ ವಹಿಸುವುದು ಮತ್ತು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿದೆ.

ಈ ಐದು ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, ಈ ವಾರದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಾಗೂ ಸಕ್ರಿಯ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳು ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಪರೀಕ್ಷೆ, ಸೋಂಕು ಪತ್ತೆ ಹಚ್ಚುವಿಕೆ, ಚಿಕಿತ್ಸೆ ಮತ್ತು ಲಸಿಕೆ ನೀಡಿಕೆಯ ಮೇಲೆ ನಿರಂತರವಾಗಿ ನಿಗಾವಹಿಸಬೇಕು. ಕೋವಿಡ್ ನಿಯಂತ್ರಣದ ಸೂಕ್ತ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ಕೆಲವು ರಾಜ್ಯಗಳಲ್ಲಿ ಮಾತ್ರ ಸೋಂಕು ಹೆಚ್ಚಳದ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ಹರಡುವಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುವುದು ಅಗತ್ಯವಾಗಿದೆ ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version