ರಾಜಕೀಯ
ಭಾರತವನ್ನು ಅಮೆರಿಕನ್ ರಥದ ಇನ್ನೊಂದು ಗಾಲಿಯಾಗಿಸುತ್ತಿರುವ ಮೋದಿ
- ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ.
ವಾಷಿಂಗ್ಟನ್ನಲ್ಲಿ ನಡೆದ ಮಾಧ್ಯಮ ಗೋಷ್ಠಿಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ವಿನಂತಿಸಿಕೊಂಡಿದ್ದಾರೆ ಎಂದು ಹೇಳಲಾದ ಚಿತ್ರವು ತಳಮಳಕಾರೀ ಪರಿಣಾಮವನ್ನು ಉಂಟು ಮಾಡಿದೆ. ಗೋಷ್ಠಿಯಲ್ಲಿ ಅವರೊಂದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಉಪಸ್ಥಿತರಿದ್ದರು. ಮಧ್ಯಸ್ಥಿಕೆ ವಹಿಸುವಂತೆ ಮೋದಿ ಕೇಳಿದ್ದಾರೋ ಇಲ್ಲವೋ ಎನ್ನುವುದು ಇಲ್ಲಿ ಮುಖ್ಯವಲ್ಲ. ಆದರೆ ಮೋದಿಯವರ ವಿದೇಶಾಂಗ ನೀತಿ ಎಷ್ಟು ಆಭಾಸಕಾರಿಯಾಗಿ ಪರಿಣಮಿಸಿದೆ ಎನ್ನುವುದನ್ನು ಈ ಪ್ರಕರಣ ಬಹಿರಂಗಪಡಿಸುತ್ತದೆ ಎನ್ನುವುದು ಗಮನಾರ್ಹವಾಗಿದೆ.
ಪಾಕಿಸ್ತಾನ ಕುರಿತ ಅಮೆರಿಕದ ಧೋರಣೆಯಲ್ಲಿ ಯಾವ ರೀತಿಯ ಬದಲಾವಣೆ ಉಂಟಾಗಿದೆ ಎಂಬುದನ್ನು ಇಮ್ರಾನ್ ಖಾನ್ರ ಅಮೆರಿಕ ಭೇಟಿಯು ದೃಢಪಡಿಸುತ್ತದೆ. ಅಫಘಾನಿಸ್ತಾನದಿಂದ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳಲು ಟ್ರಂಪ್ ಬಯಸಿರುವ ಹಿನ್ನೆಲೆಯಲ್ಲಿ ತಾಲಿಬಾನ್ ಮಾತುಕತೆಗೆ ಬರುವ ವಿಚಾರದಲ್ಲಿ ಪಾಕಿಸ್ತಾನದ ಪಾತ್ರ ನಿರ್ಣಾಯಕವಾಗಲಿದೆ. ಇಮ್ರಾನ್ ಖಾನ್ರ ಭೇಟಿಯು ತಾಲಿಬಾನ್ ಜೊತೆಗೆ ಶಾಂತಿ ಮಾತುಕತೆಯಲ್ಲಿ ಆಗಿರುವ ಪ್ರಗತಿಗೆ ಸಿಕ್ಕಿರುವ ಮಾನ್ಯತೆಯಂತೆ ಆಗಿದೆ. ಇದರ ಶ್ರೇಯಸ್ಸನ್ನು ಪಾಕಿಸ್ತಾನಕ್ಕೆ ಸಲಲಿಸಲಾಗಿದೆ.. ಈ ಇಡೀ ಪ್ರಕ್ರಿಯೆಯಲ್ಲಿ ಭಾರತವನ್ನು ಹೊರಗಿಡಲಾಗಿದೆ ಎನ್ನುವುದೇ ಏಕೈಕ ಸಮಸ್ಯೆಯಾಗಿದೆ.
ತನ್ನೆಲ್ಲ ವಿಚಾರಗಳನ್ನು ಅಮೆರಿಕಕ್ಕೆ ಬಿಟ್ಟುಕೊಟ್ಟ ಮೋದಿ ಸರಕಾರ ಈಗ ಹಠಾತ್ತನೆ ಒಂದು ಮುಜುಗರದ ಪರಿಸ್ಥಿತಿಗೆ ಸಿಲುಕಿ ಕೊಂಡಿದೆ. ಟ್ರಂಪ್ಗಾದರೋ ಅಫಘಾನಿಸ್ತಾನದಿಂದ ಹೊರಹೋಗುವುದು ಮತ್ತು ಕಾಶ್ಮೀರ ಸಮಸ್ಯೆ ಒಂದಕ್ಕೊಂದು ತಳಕು ಹಾಕಿಕೊಂಡಿದೆ- ಪಾಕಿಸ್ತಾನ ಬಯಸುವುದು ಕೂಡ ಇದನ್ನೇ.
ಕಳೆದ ಐದು ವರ್ಷಗಳಲ್ಲಿ ಮೋದಿಯವರು ಒಂದೊಂದೇ ಹೆಜ್ಜೆಯಾಗಿ ಅಮೆರಿಕದ ಭೌಗೊಳಿಕ-ರಾಜಕೀಯ ಕಾರ್ಯತಂತ್ರಕ್ಕೆ ಭಾರತವನ್ನು ಜೋಡಿಸಿದ್ದರು. ಅವರು ಅಮೆರಿಕದ ಇಂಡೊ-ಪೆಸಿಫಿಕ್ ವ್ಯೂಹಕ್ಕೆ ಬಲಿಬಿದ್ದರು; ಮಿಲಿಟರಿ ಸಾಗಾಣಿಕೆ ಒಪ್ಪಂದಕ್ಕೆ ಸಹಿಹಾಕುವ ಮೂಲಕ ಅಮೆರಿಕದ ಸೇನಾ ಕಾರ್ಯಾಚರಣೆಗಳಿಗೆ ಭಾರತದ ನೆಲೆಗಳನ್ನು ಬಳಸಿಕೊಳ್ಳುವ ಹಕ್ಕನ್ನು ಅಮೆರಿಕಕ್ಕೆ ಅವರು ಕೊಟ್ಟರು. ಅಮೆರಿಕದ ದೊಡ್ಡ ರಕ್ಷಣಾ ಪಾಲುದಾರನಾಗುವ ಮೂಲಕ ಮೋದಿ ಸರಕಾರವು ಭಾರತದ ಮಿಲಿಟರಿಯು ಅಮೆರಿಕದ ಸಶಸ್ತ್ರ ಪಡೆಗಳೊಂದಿಗೆ ಸಿಲುಕಿಕೊಳ್ಳುವ ಇತರ ಒಡಂಬಡಿಕೆಗಳಿಗೂ ಸಹಿ ಹಾಕಲು ಮುಂದಾಯಿತು.
ಒಂದು ಅಡಿಯಾಳು ಮಿತ್ರನಾಗಿ ಅಮೆರಿಕಕ್ಕೆ ಭಾರತ ಬಾಲಾಕೋಟ್ನಲ್ಲಿ ನಡೆದ ತನ್ನ ಪ್ರತೀಕಾರದ ವೈಮಾನಿಕ ದಾಳಿಯ ಬಗ್ಗೆ ಮಾಹಿತಿ ಒದಗಿಸಿತು. ಭಾರತೀಯ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದ ನಂತರ ಪೈಲಟ್ ಅಭಿನಂದನ್ರನ್ನು ಬಿಡುಗಡೆ ಮಾಡಲಾಗುವುದು ಎಂದು ಮೊದಲು ಪ್ರಕಟಿಸಿದ್ದು ಟ್ರಂಪ್. ತನ್ನ ಆಡಳಿತ ತೀವ್ರ ಒತ್ತಡ ಹೇರಿದ್ದರಿಂದಲೇ ಹಫೀಜ್ ಸಯೀದ್ನನ್ನು ಬಂಧಿಸಲಾಯಿತು ಎಂದೂ ಟ್ರಂಪ್ ಹೇಳಿಕೊಂಡಿದ್ದಾರೆ.
ಈ ರೀತಿಯಾಗಿ ಭಾರತದೊಂದಿಗೆ ಎಲ್ಲಾ ಅನುಕೂಲಗಳನ್ನು ಅಮೆರಿಕಾ ಪಡೆಯುತ್ತಿದ್ದು, ಪಾಕಿಸ್ತಾನ ವಿಷಯದಲ್ಲಿ ಮಧ್ಯಸ್ಥಿಕೆಗೆ ಭಾರತ ನಿರಂತರವಾಗಿ ಅಮೆರಿಕಾಕ್ಕೆ ಮನವಿ ಮಾಡುತ್ತಿರುವುದರಿಂದ, ಟ್ರಂಪ್ ಇದೀಗ ಭಾರತವು ಕಾಶ್ಮೀರ ವಿಚಾರವನ್ನು ಅಮೆರಿಕಾದ ಇಷ್ಟಕ್ಕೆ ತಕ್ಕಂತೆ ನಿರ್ವಹಿಸಬೇಕು ಎಂದು ಸಂಕೇತ ನೀಡುತ್ತಿದ್ದಾರೆ.
ಭಾರತವು ಅಮೆರಿಕದ ಆದೇಶಗಳಿಗೆ ಮಣಿದು ಇರಾನ್ ಮತ್ತು ವೆನಿಜುವೆಲಾದಿಂದ ತೈಲ ಖರೀದಿಯನ್ನು ನಿಲ್ಲಿಸಿದೆ. ಇಷ್ಟೆಲ್ಲಾ ವಿಧೇಯತೆಯಿಂದ ಹಿಂಬಾಲಿಸಿದ ನಂತರವೂ ಅಫಘಾನಿಸ್ತಾನದಲ್ಲಿ ಪರಿವರ್ತನೆಯ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಹತ್ವದ ಪಾತ್ರವನ್ನು ಟ್ರಂಪ್ ವಹಿಸುತ್ತಿರುವ ದೃಶ್ಯ ನಿಜಕ್ಕೂ ಬಹಳ ನೋವಿನ ಸಂಗತಿಯಾಗಿರಬೇಕು.
ದ್ವಿಪಕ್ಷೀಯ ಸಂಬಂಧದಲ್ಲಿ ಯಾವ ವಿಚಾರಗಳನ್ನು ಎತ್ತಿಕೊಳ್ಳಬೇಕು ಮತ್ತು ಅದರ ಧಾಟಿ ಹೇಗಿರಬೇಕು ಎಂದು ಆದೇಶಿಸುವುದು ಅಮೆರಿಕಾಕ್ಕೆ ಸಾಧ್ಯವಾಗಿದೆ. ಇದರಿಂದ ಉದ್ಭವಿಸಿರುವ ದುರಹಂಕಾರದ ಫಲವೇ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಈ ಟ್ರಂಪ್ ಹೇಳಿಕೆ. ಟ್ರಂಪ್ ಹೇಳಿಕೆಯನ್ನು ಎದುರಿಸುವ ಸಲುವಾಗಿ ಭಾರತೀಯ ಅಧಿಕೃತ ಮೂಲಗಳು ಒಸಾಕಾದಲ್ಲಿ ಟ್ರಂಪ್-ಮೋದಿ ಭೇಟಿಯ ಸಂದರ್ಭದಲ್ಲಿ ಇರಾನ್, ೫ಜಿ, ವಾಣಿಜ್ಯ ಮತ್ತು ರಕ್ಷಣೆ- ಹೀಗೆ ನಾಲ್ಕು ವಿಷಯಗಳನ್ನು ಮಾತ್ರ ಚರ್ಚಿಸಲಾಗಿತ್ತು ಎಂದು ತಿಳಿಸಿವೆ. ಈ ಅಜೆಂಡಾವೇ ಸಂಬಂಧವು ಯಾವ ಕಡೆಗೆ ವಾಲಿದೆ ಎಂಬುದನ್ನು ತೋರಿಸುತ್ತದೆ-ಎಲ್ಲವೂ ಅಮೆರಿಕದ ಪರವೇ ವಾಲಿದೆ.
ಭಾರತ ತೈಲ ಆಮದು ಸೇರಿದಂತೆ ಇರಾನ್ ಜತೆಗಿನ ಎಲ್ಲಾ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳಬೇಕು ಎನ್ನುವುದು ಅಮೆರಿಕದ ಬಯಕೆಯಾಗಿದೆ. ಚೀನಾ ಕಂಪೆನಿ ಹುವೆಯ್ ಅನ್ನು ಭಾರತ ಒಳಗೊಳಿಸಬಾರದು ಹಾಗೂ ಭಾರತದಲ್ಲಿ ೫ಜಿ ಜಾಲ ಅಭಿವೃದ್ಧಿ ಪಡಿಸುವಲ್ಲಿ ಅದಕ್ಕೆ ಯಾವುದೇ ಪಾತ್ರವನ್ನು ವಹಿಸಬಾರದು ಎನ್ನುವುದು ಅಮೆರಿಕದ ಇಚ್ಛೆಯಾಗಿದೆ. ವಾಣಿಜ್ಯ ವಿಚಾರದಲ್ಲಿ ಹೇಳುವುದಾದರೆ ಟ್ರಂಪ್ ಈಗಾಗಲೇ ಭಾರತದ ವಿರುದ್ಧ ಅನೇಕ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗೂ ಭಾರತವು ಸುಂಕದರಗಳನ್ನು ಇಳಿಸಬೇಕು ಮತ್ತು ಹೆಚ್ಚೆಚ್ಚು ಅಮೆರಿಕದ ವಸ್ತುಗಳನ್ನು ಖರೀದಿಸಬೇಕು ಎಂಬುದು ಅಮೆರಿಕದ ಬಯಕೆಯಾಗಿದೆ. ಅಂತಿಮವಾಗಿ, ರಕ್ಷಣಾ ಅಜೆಂಡಾವೆಂದರೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಮತ್ತು ರಕ್ಷಣಾ ಸಾಮಗ್ರಿಗಳನ್ನು ಖರೀದಿಸಬೇಕೆಂದೇ ಅದರ ಅರ್ಥವಿದ್ದಿರಬೇಕು.
ಈ ಏಕಮುಖ ರಸ್ತೆಯಲ್ಲಿ ಸಾಗಿದ ಮೇಲೆ, ಭಾರತವು ಅಮೆರಿಕದ ರಥದ ಎರಡು ಚಕ್ರಗಳಲ್ಲಿ ಒಂದು ಚಕ್ರವಾಗುವ ಸಂಭವವನ್ನು ಮೋದಿ ಎದುರಿಸಬೇಕಾಗಿ ಬಂದಿದೆ. ಪಾಕಿಸ್ತಾನ ಅದರ ಇನ್ನೊಂದು ಗಾಲಿಯಾಗಿದೆ. ತಾಲಿಬಾನ್ ಅಫಘಾನಿಸ್ತಾನವನ್ನು ವಶಪಡಿಸಿಕೊಂಡ ಮೇಲೆ ಅದರ ಪ್ರತ್ಯಾಘಾತವನ್ನು ಕೂಡ ಅವರು ಎದುರಿಸಬೇಕಾಗುತ್ತದೆ.
–ಪ್ರಕಾಶ್ ಕಾರಟ್
ಅನು:ವಿಶ್ವ
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.




