Connect with us

ದಿನದ ಸುದ್ದಿ

ಆಡಳಿತ ವ್ಯವಸ್ಥೆಗೆ ಬೇಕಿದೆ ತುರ್ತು ಚಿಕಿತ್ಸೆ

Published

on

  • ನಾ ದಿವಾಕರ

ನವ ಭಾರತದ ಆಡಳಿತ ವ್ಯವಸ್ಥೆ ಕ್ರಮೇಣ ತನ್ನ ಪ್ರಜಾತಂತ್ರ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದೆ, ವ್ಯವಸ್ಥೆ ಕುಸಿಯುತ್ತಿದೆ, ಹದಗೆಡುತ್ತಿದೆ ಎಂದು ಕ್ಷಣಕ್ಷಣಕ್ಕೂ ಪರಿತಪಿಸುತ್ತಿದ್ದ ಪ್ರಜ್ಞಾವಂತ ನಾಗರಿಕರು ಇನ್ನು ಚಿಂತಿಸಬೇಕಿಲ್ಲ. ಏಕೆಂದರೆ ವ್ಯವಸ್ಥೆ ಕುಸಿದುಹೋಗಿದೆ.

ಪ್ರಜಾತಂತ್ರ ಮತ್ತು ಸಾಂವಿಧಾನಿಕ ಮೌಲ್ಯಗಳು ಇನ್ನೂ ಉಳಿದಿದೆ ಎನ್ನುವುದಾದರೆ ಅದು ಕೇವಲ ಗ್ರಾಂಥಿಕವಾಗಿ ಮಾತ್ರ ಎನ್ನುವುದು ಮನದಟ್ಟಾಗಿದೆ. ಮತ್ತಷ್ಟು ಕುಸಿದು ಪಾತಾಳಕ್ಕೆ ಹೋಗುವ ಮುನ್ನ ಎಚ್ಚೆತ್ತುಕೊಳ್ಳುವುದು ನಮ್ಮ ಮುಂದಿರುವ ಸವಾಲು. ಸ್ವತಂತ್ರ ಭಾರತ ತನ್ನ ಮೂಲ ತಳಪಾಯವನ್ನೇ ಕಳೆದುಕೊಂಡು ಬೆತ್ತಲಾಗುತ್ತಿರುವಂತೆಯೇ ದೇಶದ ಅಂತಃಸತ್ವವನ್ನು ಕಾಪಾಡುವ ಸ್ತಂಭಗಳು ಸತ್ವಹೀನವಾಗಿವೆ.

ಒಂದು ಪ್ರಜಾತಂತ್ರ ವ್ಯವಸ್ಥೆ ಊರ್ಜಿತವಾಗಲು ಮುಖ್ಯವಾಗಿ ಬೇಕಿರುವುದು ಆಡಳಿತ ನಿರ್ವಹಣೆ ನಡೆಸುವ ಸಾಂವಿಧಾನಿಕ ಸಂಸ್ಥೆಗಳ ಬದ್ಧತೆ ಮತ್ತು ಈ ಸಂಸ್ಥೆಗಳನ್ನು ನಿರ್ವಹಿಸುವ ವ್ಯಕ್ತಿಗಳ ಪ್ರಾಮಾಣಿಕತೆ. ಇವೆರಡೂ ಪರಸ್ಪರ ಪೂರಕವಾಗಿ ಇದ್ದಾಗ ಮಾತ್ರ ಪ್ರಜಾಸತ್ತೆ ತನ್ನ ಘನತೆ ಗೌರವ ಉಳಿಸಿಕೊಳ್ಳಲು ಸಾಧ್ಯ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯವೈಖರಿ ಮತ್ತು ದಕ್ಷತೆ ಮತ್ತು ಈ ಸಾಂವಿಧಾನಿಕ ಅಂಗಗಳ ಮೂಲಕ ದೇಶದ ಸಾರ್ವಭೌಮ ಪ್ರಜೆಗಳನ್ನು ಪ್ರತಿನಿಧಿಸುವ ವ್ಯಕ್ತಿಗಳಲ್ಲಿನ ಸಾಂವಿಧಾನಿಕ ಪ್ರಜ್ಞೆ ಮತ್ತು ಪ್ರಾಮಾಣಿಕತೆ, ಇವು ಪ್ರಜಾತಂತ್ರ ವ್ಯವಸ್ಥೆಯ ಬುನಾದಿ. ಈ ಬುನಾದಿಯ ಮೇಲೆ ನಿಂತಿರುವ ಮೂರೂ ಆಡಳಿತ ಅಂಗಗಳು ಮತ್ತು ಇವುಗಳನ್ನು ಸದಾ ಜಾಗೃತಗೊಳಿಸಲು ಇರುವ ಮಾಧ್ಯಮ ವಲಯ ನಾಲ್ಕು ಸ್ತಂಭಗಳು.

ಭಾರತದ ದುರಂತ ಎಂದರೆ ನ್ಯಾಯಾಂಗವನ್ನು ಹೊರತುಪಡಿಸಿದರೆ ಉಳಿದೆಲ್ಲ ಅಂಗಗಳೂ ತಮ್ಮ ಅಂತಃಸತ್ವವನ್ನು ಕಳೆದುಕೊಂಡು ನಿಸ್ತೇಜವಾಗಿವೆ. ಒಂದೆರಡು ಪ್ರಸಂಗಗಳನ್ನು ಹೊರತುಪಡಿಸಿದರೆ ನ್ಯಾಯಾಂಗ ಇನ್ನೂ ಸಹ ಜನತೆಯ ವಿಶ್ವಾಸವನ್ನು ಉಳಿಸಿಕೊಂಡುಬಂದಿದೆ. ಆದರೆ ಇತ್ತೀಚಿನ ದಿನಗಳ ಕೆಲವು ಬೆಳವಣಿಗೆಗಳು ಆಶಾದಾಯಕವಾಗಿಲ್ಲ ಎಂದಷ್ಟೇ ಹೇಳಬಹುದು.

ಕಾರ್ಯಾಂಗದಲ್ಲಿ ಪ್ರಾಮಾಣಿಕತೆ ಉಳಿಯಲು ಅವಶ್ಯವಾಗಿ ಬೇಕಾದ ಶಾಸಕಾಂಗದ ದಕ್ಷತೆ ಮತ್ತು ಸಂವಿಧಾನ ಬದ್ಧತೆಯನ್ನು ಭಾರತದ ಆಳುವ ವರ್ಗಗಳು ಎಂದೋ ಕಳೆದುಕೊಂಡಿವೆ. ಇತ್ತೀಚಿನ ದಿನಗಳಲ್ಲಿ ದಕ್ಷತೆ ಎನ್ನುವ ಪದವೇ ಸಾಪೇಕ್ಷವಾಗುತ್ತಿದ್ದು, ಬದ್ಧತೆ ಸಂಪೂರ್ಣ ನಶಿಸಿಹೋಗಿದೆ.

ಪಕ್ಷ ನಿಷ್ಠೆಯನ್ನು ಬದಿಗಿಟ್ಟು, ವಸ್ತುನಿಷ್ಟವಾಗಿ ನೋಡಿದರೆ ಇದನ್ನು ಗ್ರಹಿಸುವುದು ಸುಲಭ. ಇಂದು ಭಾರತದ ಸಾರ್ವಭೌಮ ಪ್ರಜೆಗಳಾದ ನಾವು ಆಯ್ಕೆ ಮಾಡುತ್ತಿರುವ ಜನಪ್ರತಿನಿಧಿಗಳ ಹಿನ್ನೆಲೆ ಮತ್ತು ಅವರ ಧೋರಣೆಯನ್ನು (ಕೆಲವು ಅಪವಾದಗಳನ್ನು ಹೊರತುಪಡಿಸಿ) ಸೂಕ್ಷ್ಮವಾಗಿ ಗಮನಿಸಿದರೆ ಆಡಳಿತ ದಕ್ಷತೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದೇ ವ್ಯರ್ಥ ಎನಿಸುತ್ತದೆ.

ಒಂದು ವರದಿಯ ಪ್ರಕಾರ ಇತ್ತೀಚೆಗಷ್ಟೇ ಮುಗಿದ ಬಿಹಾರ ಚುನಾವಣೆಗಳಲ್ಲಿ ಶೇ 68ರಷ್ಟು ಚುನಾಯಿತ ಪ್ರತಿನಿಧಿಗಳು ಅಪರಾಧದ ಹಿನ್ನೆಲೆಯುಳ್ಳವರಾಗಿದ್ದಾರೆ. ಇದು ನಮಗೆ ಒಂದು ಗಂಭೀರ ವಿಚಾರ ಎನಿಸುತ್ತಲೇ ಇಲ್ಲ. ಏಕೆಂದರೆ ರಾಜಕಾರಣದಲ್ಲಿ ಅಪರಾಧದ ಹಿನ್ನೆಲೆ ಇಲ್ಲದವರ ಸಂಖ್ಯೆ ಕ್ಷೀಣಿಸುತ್ತಿದೆ. ಮತ್ತೊಂದೆಡೆ ಪಕ್ಷ ರಾಜಕಾರಣದ ಸ್ವಾರ್ಥ ಹಿತಾಸಕ್ತಿಗಳು ಅಪರಾಧಿಗಳಿಗೆ ಶ್ರೀರಕ್ಷೆ ಒದಗಿಸಲು ಸದಾ ಸಿದ್ಧವಾಗಿರುತ್ತವೆ.

ಆದರೂ ನಾವು, ಭಾರತ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಬೆನ್ನುತಟ್ಟಿಕೊಳ್ಳುತ್ತಿದ್ದೇವೆ. ಏಕೆಂದರೆ ಸಾಮಾನ್ಯ ಪರಿಭಾಷೆಯಲ್ಲಿ ಭ್ರಷ್ಟಾಚಾರ ಎಂದರೆ ಹಣಕಾಸು ಅವ್ಯವಹಾರ ಮಾತ್ರವೇ ನಿಷ್ಕರ್ಷೆಗೊಳಪಡುತ್ತದೆ. ನೈತಿಕ ಭ್ರಷ್ಟಾಚಾರವನ್ನು ನಾವೂ ಸಹ, ಅಂದರೆ ಪ್ರಜ್ಞೆ ಇರುವ ಪ್ರಜೆಗಳೂ ಸಹ, ಈ ಭ್ರಷ್ಟಾಚಾರದ ವ್ಯಾಪ್ತಿಗೆ ಒಳಪಡಿಸಿಲ್ಲ. ಹಾಗೊಮ್ಮೆ ನಾವು ಭಾವಿಸಿದರೆ ಇಂದು ಭಾರತದ ಶಾಸಕಾಂಗವನ್ನು ಪ್ರತಿನಿಧಿಸುವವರ ಪೈಕಿ ಶೇ 90ರಷ್ಟು ಪ್ರತಿನಿಧಿಗಳು ಅನರ್ಹರಾಗಿಬಿಡುತ್ತಾರೆ.

ಏಕೆಂದರೆ ಇಡೀ ಶಾಸಕಾಂಗವೇ ನೈತಿಕತೆಯನ್ನು ಕಳೆದುಕೊಂಡಿದೆ. ಸಣ್ಣ ಪುಟ್ಟ ವಂಚನೆಯಿಂದ ಹಿಡಿದು ಸಾಮೂಹಿಕ ಹತ್ಯಾಕಾಂಡ, ಅತ್ಯಾಚಾರ ಮತ್ತು ಭಯೋತ್ಪಾದನೆಯವರೆಗೂ ಎಲ್ಲ ಅಪರಾಧಗಳ ತುಣುಕುಗಳನ್ನು ನಮ್ಮ ಶಾಸನ ಸಭೆಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ನಮ್ಮ ಗ್ರಹಿಕೆಯಲ್ಲಿನ ದೋಷ ಮತ್ತು ನಾಗರಿಕ ಪ್ರಜ್ಞೆಯ ಕೊರತೆ.

ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡುವ ಬಿಜೆಪಿಯ ಘೋಷಣೆ ಸಾಕಾರಗೊಳ್ಳುವುದು ಕಷ್ಟವೇನಲ್ಲ. ಶಾಸಕರ ಖರೀದಿ ಪ್ರಕ್ರಿಯೆ ಈಗ ಅಸಾಂವಿಧಾನಿಕ ಎನ್ನುವ ಕನಿಷ್ಟ ಪ್ರಜ್ಞೆಯನ್ನೂ ಕಳೆದುಕೊಂಡಿರುವ ನವ ಭಾರತದ ಸಮಾಜದಲ್ಲಿ ಇದು “ ಆಲಿಬಾಬಾ ಮತ್ತು 40 ಕಳ್ಳರು” ಕತೆಯಂತೆ ಅನಾವರಣಗೊಳ್ಳುತ್ತಾ ಹೋಗುತ್ತದೆ.

ಜನಾದೇಶಕ್ಕಿಂತಲೂ ಸರ್ಕಾರಗಳನ್ನು ರಚಿಸುವ ಸಂದರ್ಭದಲ್ಲಿನ ಧನಾದೇಶವೇ ಹೆಚ್ಚು ಪ್ರಾಶಸ್ತ್ಯ ಪಡೆಯುತ್ತಿರುವ ಒಂದು ವಿಕೃತ ಪ್ರಜಾತಂತ್ರದಲ್ಲಿ ನಾವು ಸುಖಿಸುತ್ತಿದ್ದೇವೆ. ಹಾಗಾಗಿ ಭ್ರಷ್ಟರು, ಕೊಲೆ ಆರೋಪ ಹೊತ್ತವರು, ಗೂಂಡಾಗಿರಿ ಮಾಡಿದವರು, ಕಪ್ಪುಹಣದ ವಾರಸುದಾರರು ಎಲ್ಲರೂ ಸಹ ತಮ್ಮ ಅಂತಿಮ ಆಶ್ರಯ ತಾಣವನ್ನು, ಅಂದರೆ ಆಡಳಿತಾರೂಢ ಪಕ್ಷಗಳನ್ನು, ಅರಸುತ್ತಲೇ ಚುನಾವಣೆ ಎನ್ನಲಾಗುವ ಪ್ರಜಾತಾಂತ್ರಿಕ ಪ್ರಹಸನದಲ್ಲಿ ಪಾಲ್ಗೊಳ್ಳುತ್ತಾರೆ.

ಕೆಲವು ಸೂಕ್ಷ್ಮ ಸಂಗತಿಗಳನ್ನು ಗಮನಿಸೋಣ

ಶಾಸಕರ ಖರೀದಿ ಅಥವಾ ಹರಾಜು ಪ್ರಹಸನ, ಹರಾಜು ಪ್ರಕ್ರಿಯೆಯಿಂದ ತಾಂತ್ರಿಕವಾಗಿ “ಜನಪ್ರತಿನಿಧಿ” ಎನ್ನಲಾಗುವ ಭೌತಿಕ ಸರಕುಗಳನ್ನು ರಕ್ಷಿಸಲು ರೆಸಾರ್ಟ್‍ಗಳಲ್ಲಿ ತಾತ್ಕಾಲಿಕವಾಗಿ ಶೇಖರಿಸಿಡುವುದು (ಈ ಕಸರತ್ತಿಗೆ ತಗಲುವ ವೆಚ್ಚವನ್ನು ಭರಿಸಲು ಒಬ್ಬ ಕಾರ್ಪೋರೇಟ್ ಅಥವಾ ರಿಯಲ್ ಎಸ್ಟೇಟ್ ಉದ್ಯಮಿ ಇರುತ್ತಾನೆ).

ಚುನಾಯಿತರಾದ ಕೆಲವೇ ತಿಂಗಳುಗಳ ನಂತರ ಜನಪ್ರತಿನಿಧಿಗಳು ತಮ್ಮ ಶಾಸಕ/ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಪಕ್ಷದ ಲಾಂಛನ ಹೊತ್ತು ಅದೇ ಜನತೆಯಿಂದ ಪುನರಾಯ್ಕೆಯಾಗುವುದು (ಇಲ್ಲಿ ತೊಡಗಿಸಲಾಗುವ, ಹೆಚ್ಚಿನ ಚುನಾವಣಾ ವೆಚ್ಚ , ಅಂದರೆ ರಾಜಕೀಯ ಬಂಡವಾಳವನ್ನೂ ಸಹ ಕಾರ್ಪೋರೇಟ್ ಉದ್ಯಮಿಗಳು ಭರಿಸುತ್ತಾರೆ).

ಯಾವುದೋ ಹಗರಣದಲ್ಲಿ ಸಿಲುಕಿ ಇನ್ನೇನು ಶಿಕ್ಷೆಯಾಗುತ್ತದೆ ಎನ್ನುವ ಕ್ಷಣದಲ್ಲಿ ತಮ್ಮ ತವರುಮನೆ ತೊರೆದು ಆಡಳಿತಾರೂಢ ಪಕ್ಷಕ್ಕೆ ಜಿಗಿದು ಆರೋಪ ಮುಕ್ತರಾಗುವುದು ಮತ್ತು ಹೊಸ ಮನೆಯಲ್ಲಿ ಒಂದು ಉನ್ನತ ಹುದ್ದೆ ಪಡೆದು ಪ್ರಾಮಾಣಿಕತೆಯ ಪಾಠ ಪ್ರವಚನ ಮಾಡುವುದು.

ತಾವು ಬಯಸಿದ ಹುದ್ದೆ ಅಥವಾ ಅನುಕೂಲಗಳು ಸರ್ಕಾರದಲ್ಲಿ ದೊರೆಯದೆ ಹೋದರೆ ಒತ್ತಡದ ರಾಜಕಾರಣ ಮಾಡುವ ಮೂಲಕ ಸರ್ಕಾರಗಳನ್ನು ಅಸ್ಥಿರಗೊಳಿಸಿ ತಮ್ಮ ಸ್ಥಾನ/ಮಾನ ಕಾಪಾಡಿಕೊಳ್ಳಲು ಶ್ರಮಿಸುವುದು. –

ಇವೆಲ್ಲವೂ ಸ್ವತಂತ್ರ ಭಾರತದ ರಾಜಕೀಯ ಅವಿಷ್ಕಾರಗಳು ಮತ್ತು ಕಳೆದ ಹತ್ತು ಹನ್ನೆರಡು ವರ್ಷಗಳಲ್ಲಿ ಅಧಿಕೃತವಾಗಿ ಮಾನ್ಯತೆ ಪಡೆದಿರುವಂತಹ ವಿದ್ಯಮಾನಗಳು. ಅದರೂ ನಾವು ನಮ್ಮ ದೇಶ ಬಯಲುಶೌಚ ಮುಕ್ತವಾಗಿದೆ ಎಂದು ಬೆನ್ನುತಟ್ಟಿಕೊಳ್ಳುತ್ತಿದ್ದೇವೆ.

2016ರ ನೋಟು ಅಮಾನ್ಯೀಕರಣದ ನಂತರ ಭಾರತ ಕಪ್ಪುಹಣ ಮುಕ್ತವಾಗಿದೆ ಎಂದು ನಾವೇ ಜಗಜ್ಜಾಹೀರಾಗುವಂತೆ ಘೋಷಿಸಿಕೊಂಡಿರುವುದರಿಂದ ಚುನಾವಣೆಗಳಲ್ಲಿ ಹಂಚಲಾಗುವ ಹಣ, ಸೀರೆ, ಹೆಂಡ, ಟಿವಿ, ಲ್ಯಾಪ್ ಟಾಪ್, ಮೊಬೈಲ್, ಸೆಟ್ ಟಾಪ್ ಬಾಕ್ಸ್ ಇವೆಲ್ಲವೂ ಅಧಿಕೃತ ಖರ್ಚಿನ ವ್ಯಾಪ್ತಿಗೇ ಒಳಪಡುತ್ತವೆ. ಯಾರು ಎಷ್ಟು ಹಂಚಿದ್ದಾರೆ ಎನ್ನುವುದಷ್ಟೇ ಚರ್ಚೆಗೊಳಗಾಗುವುದೇ ಹೊರತು, ಈ ಹರಿದು ಹಂಚುವ ದುಷ್ಟ ಪರಂಪರೆಯ ವಿರುದ್ಧ ದನಿ ಎತ್ತುವ ಪರಿಜ್ಞಾನವನ್ನೂ ನಮ್ಮ ಸಮಾಜ ಕಳೆದುಕೊಂಡುಬಿಟ್ಟಿದೆ.

ಏಕೆಂದರೆ ಇಂತಹ ಪ್ರಕರಣಗಳನ್ನು ಆಲಿಸಿ, ವಿಚಾರಣೆ ನಡೆಸಿ, ಶಿಕ್ಷೆ ವಿಧಿಸುವಂತಹ ಒಂದು ನ್ಯಾಯ ವ್ಯವಸ್ಥೆಯನ್ನು ಆಳುವ ವರ್ಗಗಳು ರೂಪಿಸಿಯೇ ಇಲ್ಲ. ನಾಗರಿಕರು ಸಲ್ಲಿಸುವ ಅರ್ಜಿಗಳು ಸಾಕ್ಷ್ಯಾಧಾರಗಳಿಲ್ಲದೆ ಕಸದ ಬುಟ್ಟಿ ಸೇರುತ್ತವೆ. ಕಣ್ಣೆದುರಿನಲ್ಲೇ ದೇಹಗಳು ಸುಟ್ಟು ಕರಕಲಾದರೂ ಸಾಕ್ಷ್ಯ ಹೇಳಲಾಗದ ದೇಶದಲ್ಲಿ ಇಂತಹ ಕ್ಷುಲ್ಲಕ (?) ಘಟನೆಗಳಿಗೆ ಸಾಕ್ಷ್ಯ ಹೇಗೆ ತಾನೇ ದೊರೆಯಲು ಸಾಧ್ಯ ?

ನಮ್ಮ ವ್ಯವಸ್ಥೆಯೊಳಗಿನ ಈ ಅವ್ಯವಸ್ಥೆಯನ್ನು ಸರಿಪಡಿಸಲು, ಈ ದುರವಸ್ಥೆಯಿಂದ ಹೊರಬರಲು ಸಂವಿಧಾನದ ಎರಡು ಅಂಗಗಳು ಇನ್ನೂ ಸಾರ್ವಭೌಮ ಪ್ರಜೆಗಳ ಪಾಲಿಗೆ ಲಭ್ಯವಿದೆ. ಒಂದು ನ್ಯಾಯಾಂಗ ಮತ್ತೊಂದು ಮಾಧ್ಯಮ ವಲಯ. ನ್ಯಾಯಾಂಗ ವ್ಯವಸ್ಥೆಯಲ್ಲಿ , ಸಂಭವಿಸಿದ ಘಟನೆಗಿಂತಲೂ ಸಾಕ್ಷ್ಯಾಧಾರಗಳೇ ಪ್ರಧಾನವಾಗುವುದರಿಂದ ಕೆಲವೊಮ್ಮೆ ನಡೆದ ಅಪರಾಧಗಳು ನಡೆದೇ ಇಲ್ಲ ಎಂದು ತೀರ್ಪು ನೀಡಲಾಗುತ್ತದೆ.

ಇದನ್ನು ದೋಷ ಎನ್ನಲಾಗುವುದಿಲ್ಲ. ಏಕೆಂದರೆ ಸಾಂವಿಧಾನಿಕವಾಗಿ ಅಕ್ರಮ ಎಂದು ಪರಿಗಣಿಸಲ್ಪಡುವ ಯಾವುದೇ ಒಂದು ದುಷ್ಕೃತ್ಯಕ್ಕೆ ಅಥವಾ ಕುಕೃತ್ಯಕ್ಕೆ ಸಾಕ್ಷಿ ಪುರಾವೆ ಒದಗಿಸಬೇಕಿರುವುದು ಆಡಳಿತಾರೂಢ ಸರ್ಕಾರ. ಅಪರಾಧಿಗಳಿಗೆ ರಕ್ಷಣೆ ನೀಡುವುದರ ಮೂಲಕವೇ ಅಧಿಕಾರ ಅನುಭವಿಸುವ ಸರ್ಕಾರಗಳಿಂದ ಇದನ್ನು ನಿರೀಕ್ಷಿಸುವುದೂ ತಪ್ಪಲ್ಲವೇ ?

ಇನ್ನು ಈ ಸಾಕ್ಷ್ಯಾಧಾರಗಳನ್ನು ಒದಗಿಸುವ ನೈತಿಕ ಮತ್ತು ಸಾಂವಿಧಾನಿಕ ಹೊಣೆ ಮಾಧ್ಯಮಗಳ ಮೇಲಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಭಾರತದ ಸುದ್ದಿ ಮಾಧ್ಯಮಗಳು ಮತ್ತು ವಿದ್ಯುನ್ಮಾನ ಸುದ್ದಿಮನೆಗಳು ಈ ನೈತಿಕತೆಯನ್ನು ಬಹುಮಟ್ಟಿಗೆ ಕಳೆದುಕೊಂಡಿವೆ.

ಕಳೆದ ಎರಡು ದಶಕಗಳಲ್ಲಿ ತಮ್ಮ ಸ್ವಂತಿಕೆ, ಸ್ವಾಯತ್ತತೆ ಮತ್ತು ಸ್ವಾಭಿಮಾನಿ ನೆಲೆಯನ್ನು ಕಳೆದುಕೊಂಡಿರುವ ಬಹುಪಾಲು ಮಾಧ್ಯಮ ಮನೆಗಳು ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲಿರುವುದರಿಂದ, ಕಾರ್ಪೋರೇಟ್ ಪ್ರೇರಿತ ರಾಜಕಾರಣ ಮತ್ತು ರಾಜಕೀಯ ಪ್ರೇರಿತ ಔದ್ಯಮಿಕ ಹಿತಾಸಕ್ತಿಗಳ ನಡುವೆ ಸಿಲುಕಿ ತಮ್ಮ ನೈತಿಕ ಹೊಣೆಯನ್ನು ಮರೆತಿವೆ. ಹಾಗಾಗಿ ಈ ದೇಶದ ಸಾಮಾನ್ಯ ಪ್ರಜೆಗಳು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳಿಗೆ, ತಮ್ಮ ಹಿತಾಸಕ್ತಿಯ ವಿರುದ್ಧ ನಡೆಯುವ ಅಕ್ರಮಗಳಿಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಒಂದು ಮಾರ್ಗವನ್ನೇ ಕಳೆದುಕೊಂಡಂತಾಗಿದೆ.

ಕಳೆದ ಆರು ವರ್ಷಗಳಲ್ಲಿ, ಅಧಿಕಾರ ಪೀಠಕ್ಕೆ ಹತ್ತಿರುವಾಗುವುದೇ ಮಾಧ್ಯಮ ಮನೆಗಳ, ಸಮೂಹಗಳ ಆದ್ಯತೆಯಾಗಿರುವುದರಿಂದ ಸುದ್ದಿಮನೆಗಳ ಸಂಪಾದಕರು ತಮ್ಮ ಸಾಂಸ್ಥಿಕ ಮತ್ತು ವ್ಯಕ್ತಿಗತ ಸ್ವಾಯತ್ತತೆ ಹಾಗೂ ಸ್ವಾಭಿಮಾನ ಎರಡನ್ನೂ ಅಧಿಕಾರಸ್ಥರಿಗೆ ಒತ್ತೆ ಇಟ್ಟಿರುವುದನ್ನು ಗಮನಿಸುತ್ತಲೇ ಇದ್ದೇವೆ.

ಹೀಗಿರುವುದರಿಂದಲೇ ಮಾಧ್ಯಮ ಲೋಕದ ದಿಗ್ಗಜರಿಗೂ ಅಭಯಹಸ್ತ, ಶ್ರೀರಕ್ಷೆ, ಅಕ್ಷಯ ವಸ್ತ್ರ ಸದಾ ಸಿದ್ಧವಾಗಿರುತ್ತದೆ. ಇತ್ತೀಚಿನ ಅರ್ನಾಬ್ ಗೋಸ್ವಾಮಿ ಪ್ರಕರಣ ಒಂದು ನಿದರ್ಶನವಷ್ಟೇ. ಈ ಪ್ರಕರಣದಲ್ಲಿ ಗೋಸ್ವಾಮಿಗೆ ಜಾಮೀನು ದೊರೆತದ್ದು ಆಕ್ಷೇಪಾರ್ಹವೇನಲ್ಲ. ಜಾಮೀನು ಒಬ್ಬ ಆರೋಪಿಯ ಕಾನೂನಾತ್ಮಕ ಹಕ್ಕು ಎಂದೇ ಭಾವಿಸಲಾಗುತ್ತದೆ.

ಆದರೆ ಗೋಸ್ವಾಮಿಗೆ ದೊರೆತಷ್ಟೇ ಶೀಘ್ರಗತಿಯಲ್ಲಿ 80ರ ವೃದ್ಧ ಸ್ಟಾನ್ ಸ್ವಾಮಿಗೆ ಏಕೆ ಜಾಮೀನು ದೊರೆಯುವುದಿಲ್ಲ ಎನ್ನುವ ಪ್ರಶ್ನೆ ಜಟಿಲವಾಗಿಯೇ ಉಳಿಯುತ್ತದೆ. ಮತ್ತದೇ ಸಮಸ್ಯೆ, ಸಾಕ್ಷ್ಯಾಧಾರಗಳನ್ನು ಒದಗಿಸುವವರು ಯಾರು ಎನ್ನುವುದು.

ಆದರೆ ನಮ್ಮ ಮುಂದಿರುವ ಪ್ರಶ್ನೆ ಗೋಸ್ವಾಮಿ ಅಲ್ಲ. ಸ್ಟಾನ್ ಸ್ವಾಮಿ ಮತ್ತು ಅವರಂತೆಯೇ ಯಾವುದೇ ಅಪರಾಧ ಮಾಡದೆಯೇ, ಜಾಮೀನು ಸಹ ಪಡೆಯಲಾಗದೆ ಸೆರೆವಾಸ ಅನುಭವಿಸುತ್ತಿರುವ ನೂರಾರು ಕಾರ್ಯಕರ್ತರು, ಹೋರಾಟಗಾರರು, ವಿದ್ವಾಂಸರು ಮತ್ತು ಲೇಖಕ-ಕಲಾವಿದರು. ಇವರು ಸಮಸ್ತ ಭಾರತವನ್ನು ಪ್ರತಿನಿಧಿಸುವ ಮನಸ್ಸನ್ನು ಹೊತ್ತವರು.

ಇದು ನಮ್ಮ ಮುಂದಿನ ಜಟಿಲ ಸಮಸ್ಯೆಯ ಒಂದು ಅಂಶ ಮಾತ್ರ. ಪ್ರಧಾನವಾಗಿ ನಮ್ಮೆದುರು ಇರುವುದು ಈ ದೇಶದ ಸಾಮಾಜಿಕ-ರಾಜಕೀಯ ವ್ಯವಸ್ಥೆಯ ದೌರ್ಬಲ್ಯ ಮತ್ತು ಆ ದೌರ್ಬಲ್ಯ ಏನು ಎಂದು ಗ್ರಹಿಸಲು ಸಾಧ್ಯವಾಗದ ನಾಗರಿಕರ ದೌರ್ಬಲ್ಯ. ಸಂವಿಧಾನ ಮತ್ತು ಆಡಳಿತ ವ್ಯವಸ್ಥೆ ಕುಸಿಯುತ್ತಿದ್ದರೆ ಅದಕ್ಕೆ ಕಾರಣ ವ್ಯವಸ್ಥೆಯ ಅಡಿಪಾಯವೇ ದುರ್ಬಲವಾಗಿದೆ, ಆಧಾರ ಸ್ತಂಭಗಳು ಶಿಥಿಲವಾಗುತ್ತಿವೆ.

ಈ ಸ್ತಂಭಗಳಿಗೆ ಒಂದು ಭೌತಿಕ ಸ್ವರೂಪ ಇಲ್ಲ, ಅಲ್ಲವೇ ? ಈ ದೇಶದ 130 ಕೋಟಿಗೂ ಹೆಚ್ಚು ಜನರನ್ನು ಸಾಂಕೇತಿಕವಾಗಿ ಈ ಸ್ತಂಭಗಳು ಪ್ರತಿನಿಧಿಸುತ್ತವೆ. ಈ ಬೃಹತ್ ಜನಸಂಖ್ಯೆಯಲ್ಲಿ ಶೇ 10ರಷ್ಟು ಜನರಲ್ಲಿ ನಾಗರಿಕ ಪ್ರಜ್ಞೆ, ಸಾಂವಿಧಾನಿಕ ಮೌಲ್ಯಗಳ ಅರಿವು, ಪ್ರಜಾತಂತ್ರದ ರಕ್ಷಣೆಯ ಪರಿಜ್ಞಾನ ಮತ್ತು ಜಾಗೃತಿ ಮೂಡಿಸಿದಲ್ಲಿ ಈ ಜನಸಂಖ್ಯೆಯೇ ಬೃಹದಾಕಾರದ ಸ್ತಂಭವಾಗಿ ದೇಶದ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವುದರಿಂದ ತಪ್ಪಿಸಲು ಸಾಧ್ಯ. ಈ ನಿಟ್ಟಿನಲ್ಲಿ ರಾಜಕಾರಣ ನಿಮಿತ್ತ ಮಾತ್ರ.
ರಾಜಕೀಯ ಪಕ್ಷಗಳು ನೆಪ ಮಾತ್ರ.

ಬದಲಾವಣೆ, ಕತ್ತಲಿನಿಂದ ಬೆಳಕಿನೆಡೆಗೆ ಮುನ್ನಡೆಸುವ ಬದಲಾವಣೆ, ಬೇಕೆಂದರೆ ಈ ನಿಮಿತ್ತಗಳಿಂದಾಚೆಗೂ ಪ್ರಯತ್ನಗಳು ಸಾಧ್ಯ. ಸದ್ಯದ ಪರಿಸ್ಥಿತಿಯಲ್ಲಿ ಅರೆ ಜ್ಞಾನದಿಂದಲೋ, ಅಜ್ಞಾನದಿಂದಲೋ ಉನ್ಮಾದಕ್ಕೊಳಗಾಗಿ, ಸಮೂಹ ಸನ್ನಿಗೆ ಬಲಿಯಾಗಿರುವ ಯುವ ಪೀಳಿಗೆಯನ್ನು ಈ ಪ್ರಯತ್ನಗಳಲ್ಲಿ ತೊಡಗುವಂತೆ ಮಾಡುವುದು ಪ್ರಜ್ಞಾವಂತ ನಾಗರಿಕ ಸಮಾಜದ ಆದ್ಯತೆಯಾಗಬೇಕು.ಆಲೋಚನೆ ಮಾಡೋಣವೇ ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending