ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.



