ದಿನದ ಸುದ್ದಿ
ದಾವಣಗೆರೆ | ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ : ನ್ಯಾ.ನಾಗಮೋಹನ ದಾಸ್
ಸುದ್ದಿದಿನ,ದಾವಣಗೆರೆ : ದೇಶದ ಬಹುತ್ವವನ್ನು ರಕ್ಷಿಸಿಕೊಂಡು ಬರುತ್ತಿರುವ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ, ಅರ್ಥೈಸಿಕೊಂಡು ಅದರಂತೆ ನಡೆಯಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ, ಸಹಯಾನ ಮತ್ತು ಸಮುದಾಯ ಕರ್ನಾಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜು. 19 ರ ರಂದು ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ಸಂವಿಧಾನ ಓದು ಕಾರ್ಯಗಾರ’ ಉದ್ಘಾಟಿಸಿ ಮಾತನಾಡಿ, ಪಿಪಿಟಿ ಪ್ರದರ್ಶನದ ಮೂಲಕ ಭಾರತ ಸಂವಿಧಾನ ರಚನೆ, ಮೂಲತತ್ವಗಳು-ಸವಾಲುಗಳು ಕುರಿತು ವಿವರಣೆ ನೀಡಿದರು.
ರಾಜಕೀಯ ಅಧಿಕಾರ ಎಂದರೇನು ಎಂಬುದನ್ನು ತಿಳಿಯಬೇಕು. ಕಾನೂನು ಮಾಡುವುದು ಶಾಸಕಾಂಗ, ಇದನ್ನು ಜಾರಿಗೆ ತರುವುದು ಕಾರ್ಯಾಂಗ ಮತ್ತು ಈ ಕಾನೂನುಗಳನ್ನು ಉಲ್ಲಂಘನೆ ಮಾಡಿದರೆ ಶಿಕ್ಷಿಸುವುದು ನ್ಯಾಯಾಂಗ. ಈ ಅಂಗಗಳ ಕಾರ್ಯವೈಖರಿ ನಿಯಂತ್ರಿಸುವುದು ಸಂವಿಧಾನ. ಹಿಂದೆ ರಾಜರುಗಳ ಕೈಯಲ್ಲಿ ಈ ಎಲ್ಲ ಅಧಿಕಾರಿಗಳಿದ್ದವು. ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆ ಬಂತು. ಇಂದು 199 ರಾಷ್ಟ್ರಗಳ ಪೈಕಿ 190 ರಾಷ್ಟ್ರಗಳು ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ.
ನಾವು ನಮ್ಮ ಸಂವಿಧಾನವನ್ನು ಓದಿ ಅರ್ಥೈಸಿಕೊಂಡು ಅದರಂತೆ ನಡೆಯಬೇಕು. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಲ್ಲಿ ಪಠ್ಯದಲ್ಲಿ ಅಳವಡಿಸಿರುವ ಸಂವಿಧಾನವನ್ನು ವಿದ್ಯಾರ್ಥಿಗಳು ಕೇವಲ 35 ಅಂಕ ಪಡೆಯುವ ಉದ್ದೇಶದಿಂದ ಓದುತ್ತಿದ್ದಾರೆ. ಹೀಗಾದರೆ ಇದನ್ನು ಅರ್ಥೈಸಿಕೊಂಡು ಇದರ ಆಶಯಗಳನ್ನು ಮೈಗೂಡಿಸಿಕೊಳ್ಳಲು ಹೇಗೆ ಸಾಧ್ಯ. ಸಂವಿಧಾನವನ್ನು ಎಲ್ಲರೂ ತಿಳಿಯಬೇಕೆಂಬ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂವಿಧಾನ ಓದು ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.
ಭಾರತ 1947 ರಲ್ಲಿ ಸ್ವಾತಂತ್ರ್ಯ ಪಡೆದ ದೇಶ. 1950 ರಲ್ಲಿ ವಿಶ್ವದಲ್ಲೇ ಅತಿದೊಡ್ಡ ಮತ್ತು ಮಹತ್ತರವಾದ ಸಂವಿಧಾನವನ್ನು ರಚಿಸಿತು. ಸಂವಿಧಾನ ಜಾರಿಯಾದ ಈ 70 ವರ್ಷಗಳಲ್ಲಿ ನಾವು ಸಾಧಿಸಿದ್ದೇನು ಎಂಬ ಪ್ರಶ್ನೆಗೆ ಉತ್ತರ ಹಿಂದೆ ಸುಮಾರು 600 ರಾಜರು ನಮ್ಮನ್ನು ಆಳುತ್ತಿದ್ದರು. ಅದು ಬದಲಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು, ದೇಶಕ್ಕೆ ಗಡಿ ನಿಗದಿಯಾಗಿ, ಸಂವಿಧಾನ ಬಂದ ನಂತರ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಟ್ಟಲಾಯಿತು. ರಾಜಕೀಯ, ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ, ಶೈಕ್ಷಣಿಕ ಹೀಗೆ ಅನೇಕ ವಲಯಗಳಲ್ಲಿ ಉತ್ತಮ ಬದಲಾವಣೆಗಳನ್ನು ಕಂಡಿದ್ದೇವೆ. ಬಡತನ ಕಡಿಮೆಯಾಗಿದೆ, ಶಿಕ್ಷಣ ಮಟ್ಟ ಹೆಚ್ಚಿದೆ, ಮಹಿಳೆ, ದಲಿತರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರು ಅಭಿವೃದ್ದಿ ಹೊಂದುತ್ತಿದ್ದಾರೆ. ಇಂದು ಎಲ್ಲ ಕ್ಷೇತ್ರದಲ್ಲಿ ಮಹಿಳೆ ಇದ್ದಾಳೆ. ಹಿಂದುಳಿದ, ಕೆಳಜಾತಿಯವರು ಉನ್ನತ ಸ್ಥಾನಲ್ಲಿದ್ದಾರೆ ಎಂದರೆ ಇದಕ್ಕೆ ಸಂವಿಧಾನ ಕೊಟ್ಟ ಅವಕಾಶಗಳೇ ಕಾರಣ. ಆದರೆ ಇಂತಹ ಸಂವಿಧಾನದ ಮಹತ್ವ ಅರಿಯಬೇಕಿದೆ. ಇದನ್ನು ಓದಿ ಅದರಂತೆ ನಡೆಯುವ ತುರ್ತು ಇದೆ.
ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ. ಭಾರತ ದೇಶವನ್ನು ತಿಳಿಯದೇ ಭಾರತದ ಸಂವಿಧಾನವನ್ನು ತಿಳಿಯಲು ಸಾಧ್ಯವಿಲ್ಲ. ದೇಶದ ಜನರು ಇಲ್ಲಿಯ ಇತಿಹಾಸ, ಧರ್ಮ, ಜಾತಿ, ಸಾಮಾಜಿಕ ಸಂಬಂಧಗಳು, ಆರ್ಥಿಕ ಸಂಬಂಧಗಳು, ಮೌಲ್ಯ, ಸಂಸ್ಕøತಿ ತಿಳಿಯದೇ ಸಂವಿಧಾನ ತಿಳಿಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ದೇಶವನ್ನು ತಿಳಿಯಬೇಕೆಂದರು.
ದೇಶದ ಬಹುತ್ವವನ್ನು ರಕ್ಷಿಸುತ್ತಿರುವ ನಮ್ಮ ಸಂವಿಧಾನವನ್ನು ತಿಳಿಯಬೇಕಾದರೆ ಮೊದಲು ನಮ್ಮ ದೇಶವನ್ನು ತಿಳಿಯಬೇಕು. ಸುಮಾರು 4635 ಜನಾಂಗಗಳು, 325 ಭಾಷೆಗಳು, 25 ಲಿಪಿಗಳೊಂದಿಗೆ ಸಹಜೀವನ ನಡೆಸುತ್ತಿರುವ ಬಹುತ್ವದ ದೇಶ ನಮ್ಮದು. ಈ ಬಹುತ್ವ ಅರ್ಥವಾಗಬೇಕಾದರೆ ನಮ್ಮ ಮೂಲ ನಮಗೆ ತಿಳಿಯಬೇಕು. ನಮ್ಮ ಸಾಮಾಜಿಕ, ಆರ್ಥಿಕ ಸಂಬಂಧಗಳು ಅರ್ಥವಾಗದೇ ಹೋದರೆ ಕಲ್ಯಾಣ ರಾಜ್ಯದ ಅರ್ಥ ಆಗುವುದಿಲ್ಲ. ನಮ್ಮದು ಹಳ್ಳಿಗಳ ದೇಶ. ಸುಮಾರು 6.50 ಲಕ್ಷ ಹಳ್ಳಿಗಳಿವೆ. ದೇಶದಲ್ಲಿ ಮಿಶ್ರ ಆರ್ಥಿಕತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಮಲ್ಟಿ ನ್ಯಾಷನಲ್, ಟ್ರಾನ್ಸ್ನ್ಯಾಷನಲ್ ಕಂಪೆನಿಗಳು ಕೇವಲ ಮಾರುಕಟ್ಟೆಯನ್ನಲ್ಲ ಬದಲಾಗಿ ಮನಸ್ಸುಗಳನ್ನು ನಿಯಂತ್ರಿಸುತ್ತಿರುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಸಮಾನತೆ, ಧರ್ಮ, ಅಹಿಂಸೆ, ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಧಾರವಾಗಿದ್ದು, ಸಂವಿಧಾನ ಬಂದ ನಂತರ ಅನೇಕ ಉತ್ತಮ ಬದಲಾವಣೆಗಳು ಆಗಿವೆ. ಆದರೂ ನಮ್ಮ ಮುಂದೆ ಇಂದಿಗೂ ಅನೇಕ ಸವಾಲುಗಳು ಮತ್ತು ಸಮಸ್ಯೆಗಳಿವೆ. ಅನೇಕರು ಸಂವಿಧಾನವನ್ನೇ ದೂಷಿಸುತ್ತಿದ್ದಾರೆ. ದೋಷ ಇರುವುದು ಸಂವಿಧಾನದಲ್ಲಲ್ಲ. ಬದಲಾಗಿ ಇದನ್ನು ಅನುಷ್ಟಾನಗೊಳಿಸುವವರಲ್ಲಿದೆ.
ಎಲ್ಲರೂ ಸಂವಿಧಾನ ಅರ್ಥೈಸಿಕೊಂಡು ಅದರಂತೆ ನಡೆಯುವಲ್ಲಿ ಹೆಜ್ಜೆ ಇಡಬೇಕಿದೆ. ಈ ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ಸವಾಲು ಮತ್ತು ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕುಲಕರ್ಣಿ ಅಂಬಾದಾಸ್ ಜಿ, ದೇಶದಲ್ಲಿ ಪ್ರತಿ ಧರ್ಮಗಳಿಗೆ ಇರುವ ಒಂದೊಂದು ಪವಿತ್ರ ಗ್ರಂಥಗಳಂತೆ ಇಡೀ ಭಾರತ ದೇಶಕ್ಕೆ ಸಂವಿಧಾನ ಒಂದು ಪವಿತ್ರ ಗ್ರಂಥವಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಓದಿ, ಅರ್ಥೈಸಿಕೊಂಡು ಮತ್ತೊಬ್ಬರಿಗೆ ಓದುವ ಹಾಗೆ ಉತ್ತೇಜಿಸಬೇಕು. ಸಂವಿಧಾನವನ್ನು ಓದಿ ತಿಳಿದುಕೊಂಡಲ್ಲಿ ಅಪರಾಧಗಳು ನಡೆಯುವುದು ಕಡಿಮೆಯಾಗುತ್ತವೆ ಎಂದರು.
ಸಂವಿಧಾನ ಮೂಲಭೂತ ಹಕ್ಕುಗಳೊಂದಿಗೆ ಮೂಲಭೂತ ಕರ್ತವ್ಯಗಳನ್ನು ನೀಡಿದ್ದು, ಅವುಗಳನ್ನು ನಿರ್ವಹಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಪ್ರಮುಖ ಜವಾಬ್ದಾರಿಯಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಿರುವ ಶಿಕ್ಷಕರು ಸಂವಿಧಾನವನ್ನು ಓದಿಕೊಂಡು ವಿದ್ಯಾರ್ಥಿಗಳು ಸಂವಿಧಾನ ಓದಿ ತಿಳಿಯುವಂತೆ ಪ್ರೇರೇಪಿಸಬೇಕು. ಆಗ ಈ ಕಾರ್ಯಕ್ರಮ ಆಯೋಜಿಸಿದಕ್ಕೂ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮಾತನಾಡಿ, ಇಂದು ಸಂವಿಧಾನ ಓದು ಅಭಿಯಾನ ಕೈಗೊಳ್ಳುವ ಮೂಲಕ ಸಾಮಾನ್ಯರ ಕೈಗೆ ಸಂವಿಧಾನ ಓದು ಪುಸ್ತಕ ದೊರಕುವಂತೆ ಮಾಡಿರುವ ನ್ಯಾಯಾಮೂರ್ತಿ ನಾಗಮೋಹನ್ ದಾಸ್ರವರ ಕಾರ್ಯ ಶ್ಲಾಘನೀಯ. ಇವರು ನಮ್ಮ ಸಂವಿಧಾನದ ಕುರಿತು ಅತ್ಯಂತ ಸರಳವಾಗಿ ಬರೆದು ಎಲ್ಲರಿಗೂ ದೊರಕುವಂತೆ ಮಾಡಿದ್ದಾರೆ. ಈ ಪುಸ್ತಕ ಭಾರತದ ಇತಿಹಾಸದೊಂದಿಗೆ ತುಲನಾತ್ಮಕವಾಗಿ ರಚಿತವಾಗಿದ್ದು ಕಥಾ ಪುಸ್ತಕದಂತೆ ಓದಿಸಿಕೊಂಡು ಹೋಗುತ್ತದೆ. ಇಂತಹ ಪುಸ್ತಕಗಳು ಎಲ್ಲಾ ಶಾಲಾ ಮಕ್ಕಳ ಕೈಯಲ್ಲಿದ್ದರೆ ಮಕ್ಕಳಿಗೆ ಪ್ರಾರಂಭದಿಂದಲೇ ಸಂವಿಧಾನದ ಕುರಿತು ಪ್ರಜ್ಞೆ ಬೆಳೆಯುತ್ತದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಒಬ್ಬರು ಇಂದು ಸಾಮಾನ್ಯರ ನಡುವೆ ಬಂದು ಸಂವಿಧಾನ ಓದು ಎನ್ನುವ ಅಭಿಯಾನಕ್ಕೆ ಕೈಜೋಡಿಸುತ್ತಿರುವುದಕ್ಕೆ ಅಭಿನಂದನೀಯವಾಗಿದ್ದು ಅವರ ಈ ಸಾಮಾಜಿಕ ಕಾಳಜಿಗೆ ಯಶಸ್ಸು ಸಿಗಲೆಂದು ಆಶಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಾನೂನುಗಳ ತಾಯಿಯಾಗಿರುವ ನಮ್ಮ ಸಂವಿಧಾನವನ್ನು ಅತ್ಯಂತ ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪುಸ್ತಕ ಬರೆದು, ಅದರ ಕುರಿತು ರಾಜ್ಯಾದ್ಯಂತ ಅಭಿಯಾನದ ಮೂಲಕ ತಿಳಿಸುತ್ತಿರುವ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ರವರು ಉತ್ತಮ ವಾಗ್ಮಿ ಮತ್ತು ಸಾಹಿತಿ ಆಗಿದ್ದು, ನ್ಯಾಯಾಮೂರ್ತಿ ನಾಗಮೋಹನ್ದಾಸ್ ಇವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952 ಫೆ. 12 ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್.ನಾಗಪ್ಪ, ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ, ಅಖಿಲ ಭಾರತ ವಕೀಲರ ಸಂಘಟನೆ, ಯಂಗ್ ಅಡ್ವೊಕೇಟ್ಸ್ ಫೋರಂ ಮತ್ತು ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯಲ್ಲಿ ಸದಸ್ಯರಾಗಿ, ಕಾರ್ಯದರ್ಶಿಯವಾಗಿ ಸಕ್ರಿಯ ಪಾತ್ರವಹಿಸಿದ್ದಾರೆ ಎಂದರು.
ಜಿ.ಪಂನ ಸಿಇಓ ಹೆಚ್.ಬಸವರಾಜೇಂದ್ರ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡೀಗೇರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್, ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ, ಸರ್ಕಾರಿ ಅಭಿಯೋಜಕ ವಿ.ಎಸ್.ಪಾಟೀಲ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಿಎಚ್ಓ ಡಾ.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಜಯ್ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು, ಆಶಾಕಾರ್ಯಕರ್ತೆರು, ವಕೀಲರು ಸೇರಿದಂತೆ ಇತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.
ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.
ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ…
ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?
ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.
ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.
ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿಮ್ಮದು ದರೋಡೆಕೋರ ಸರಕಾರವಲ್ಲವೇ?
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..
ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

