ಬಹಿರಂಗ
ಭಾರತ ಸಂವಿಧಾನಕ್ಕೆ ‘ಭೂತ’ಚೇಷ್ಟೆ
- ದೇವನೂರ ಮಹಾದೇವ
ನಮ್ಮ ಸಂವಿಧಾನಕ್ಕೆ 60 ವರ್ಷಗಳ ಇತಿಹಾಸ. ಆದರೆ ಸಾವಿರಾರು ವರ್ಷಗಳ ಇತಿಹಾಸವಿರುವ ಇಂದೂ ಕೂಡ ಅಗೋಚರವಾಗಿ ಆಳ್ವಿಕೆ ನಡೆಸುತ್ತಿರುವ ಅಲಿಖಿತ ಸಂವಿಧಾನವೂ ಒಂದಿದೆ. ಇದು ಭಾರತದ ಮನೋಭೂಮಿಕೆಯಲ್ಲಿದೆ. ಇದು ಭೂತಕಾಲದ ಸಂವಿಧಾನ. ಇದು ಭಾರತದ ಸುಪ್ತಪ್ರಜ್ಞೆಯ ಆಳದಲ್ಲಿದೆ. ಈ ಎರಡರ ನಡುವೆ ಯುದ್ಧ ಜರುಗುತ್ತಿದೆ. ಭೂತಕಾಲದ ಸಂವಿಧಾನವೂ ಇಲ್ಲಿ ಬಲವಾಗಿದೆ. ಹಾಗಾಗಿ ನಮ್ಮ ವರ್ತಮಾನ ಸಂವಿಧಾನದ ಆಸೆಗಳು ತೆವಳುತ್ತಿವೆ.
ಈ ನನ್ನ ಮಾತುಗಳಲ್ಲಿ ಹೊಸತೇನೂ ಇಲ್ಲ. ನಿಮ್ಮ ನಡುವೆ ನಾನೇ ಸ್ಪಷ್ಟ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವೆ. ಈ ಚಿಂತೆ ಮತ್ತು ಚಿಂತನೆಗಳನ್ನು ಉದಾಹರಣೆಗಳ ಮೂಲಕ ಸ್ಪಷ್ಟ ಮಾಡಿಕೊಳ್ಳಲು ಪ್ರಯತ್ನಿಸುವೆ.
ಬಹಳ ಹಿಂದೆ, ಡಾ.ಯು.ಆರ್.ಅನಂತಮೂರ್ತಿಯವರು ಇಂಗ್ಲಿಷ್ ವಿಭಾಗದಲ್ಲಿದ್ದಾಗ, ಅವರನ್ನು ಭೇಟಿ ಮಾಡಲು ಹಿರಿಯರೊಬ್ಬರು ಬಂದಿದ್ದರು. ತುಂಬಾ ಶುಭ್ರವಾಗಿದ್ದರು. ಮೈತುಂಬಾ ಬಿಳಿ ಬಟ್ಟೆ. ಜುಟ್ಟು ನಾಮ ಇತ್ತು. ಅವರು ಮಾತಾಡಿ ಹೋದ ಮೇಲೆ ಅನಂತಮೂರ್ತಿಯವರು ‘ಈಗ ಬಂದಿದ್ದವರು ವೇದ ಉಪನಿಷತ್ ಪುರಾಣ ಪಾರಂಗತರು’ ಎಂದರು. ಜೊತೆಗೆ- ‘ಇವರು ತಾವೇ ತಮ್ಮ ಅಡಿಗೆ ಮಾಡಿಕೊಂಡು ಊಟ ಮಾಡುವುದು’ ಎಂದೂ ಹೇಳಿದರು.
ಇದು ಯಾಕೋ ನನ್ನ ಮನಸ್ಸಲ್ಲಿ ಉಳಿದುಬಿಟ್ಟಿತು. ತನ್ನ ಕೈಯಾರ ಮಾಡಿದ್ದನ್ನು ಮಾತ್ರ ಊಟ ಮಾಡುವ ಇವರಿಗೆ ವೇದ ಉಪನಿಷತ್ಗಳು ಹೇಳಿಕೊಟ್ಟಿದ್ದೇನು ಎಂಬ ಪ್ರಶ್ನೆ ನನ್ನೊಳಗೆ ಉಳಿದುಬಿಟ್ಟಿತು. ಈಗ ಅನ್ನಿಸುತ್ತ್ತಿದೆ- ಇವರ ಕಠೋರ ಮಡಿಯ ಅಸ್ತಿತ್ವದಲ್ಲೆ ಅಸ್ಪೃಶ್ಯತೆಯ ಪ್ರಚಾರ ಕಾರ್ಯವೂ ಅಂತರ್ಗತವಾಗಿದೆ ಅಂತ. ಇವರನ್ನು ಅರ್ಥ ಮಾಡಿಕೊಳ್ಳೋಣ. ಅಂದರೆ ಇವರನ್ನು ಪಳೆಯುಳಿಕೆ ಎಂದು ಭಾವಿಸಿದರೆ ಸಮಸ್ಯೆ ಇಲ್ಲ. ಆದರೆ ಅವರ ಮಡಿಯನ್ನು ಪಾರಂಪರಿಕ ಮೌಲ್ಯ ಎಂದು ಗೌರವಿಸಿದರೆ ಅಪಾಯ ಆರಂಭವಾಗುತ್ತದೆ.
ಇನ್ನೊಂದು ಭೀಕರ ಉದಾಹರಣೆ ಕೊಡುತ್ತೇನೆ. ಪುರಿ ಜಗದ್ಗುರು ಅಸೃಶ್ಯತೆಯನ್ನು ಎತ್ತಿ ಹಿಡಿದಾಗ ಭಾರತ ತಲ್ಲಣಿಸಲಿಲ್ಲ. ಭೀಕರ ಉದಾಹರಣೆ ಎಂದು ನನ್ನ ಸಮಾಧಾನಕ್ಕಾಗಿ ಹೇಳಿಕೊಂಡೆ ಅಷ್ಟೆ. ಆದರೆ ಅದು ಭೀಕರವಾಗಿ ಸಮಾಜಕ್ಕೆ ತಟ್ಟಲೇ ಇಲ್ಲ. ಪುರಿ ಜಗದ್ಗುರು ಅಸಹ್ಯವಾಗಿ ನಮಗೆ ಕಾಣಲೇ ಇಲ್ಲ.
ಯಾಕೆಂದರೆ ನಮ್ಮ ವರ್ತಮಾನದ ಪ್ರಜ್ಞೆಯ ಸಂವಿಧಾನವು ಸಮಾನತೆಯನ್ನು ಮೌಲ್ಯ ಮಾಡಿದರೆ, ಭೂತಕಾಲದ ಸುಪ್ತಪ್ರಜ್ಞೆಯ ಸಂವಿಧಾನಕ್ಕೆ ಶ್ರೇಣೀಕೃತ ಸಮಾಜದ ಅಸ್ಪೃಶ್ಯತೆ, ಜಾತಿತಾರತಮ್ಯಗಳೇ ಮೌಲ್ಯವಾಗಿದೆ. ಭೂತದ ಕಪ್ಪುಹಣ ಇಂದೂ ಚಲಾವಣೆಯಲ್ಲಿದೆ. ಹೀಗಿರುವಾಗ ಸಮಾಜ ಯಾಕಾಗಿ ತಲ್ಲಣಿಸಬೇಕು? ಹೀಗಿದ್ದಾಗ ವರ್ತಮಾನದ ಸಂವಿಧಾನದ ಆಸೆಗಳು ತೆವಳದೆ ಮತ್ತೇನು ಮಾಡಲು ಸಾಧ್ಯ?
ಹಾಗೆ ಇಂದು ಚರ್ಚಿತವಾಗುತ್ತಿರುವ ಮತಾಂತರ ನಿಷೇಧದ ಪ್ರಸ್ತಾಪಕ್ಕೆ ಬಂದರೂ ಇಲ್ಲೂ ಕಾಣುವುದು ಇದನ್ನೇ. ಹಾಲಿ ಬಿಜೆಪಿ ಕರ್ನಾಟಕ ಸರ್ಕಾರ ಹಾಗೂ ಪೇಜಾವರ ಮಠಾಧೀಶರಾದಿಗಳು ಈ ಮತಾಂತರ ನಿಷೇಧಕ್ಕಾಗಿ ಹಾತೊರೆಯುತ್ತಿದೆ. ಶೂದ್ರನೊಬ್ಬ ನಿಮ್ಮ ಬ್ರಾಹ್ಮಣ ಜಾತಿಗೆ ಸೇರುತ್ತೇನೆಂದರೆ ಆಕಾಶ ನೋಡುವ ಮಠಾಧಿಪತಿಗಳು ಹಾಗೆ ಬ್ರಾಹ್ಮಣ ಜಾತಿಗೆ ನನ್ನನು ವರ್ಗಾವಣೆ ಮಾಡಿ ಎಂದು ಶೂದ್ರ ಕೇಳಿದರೆ ಇದು ತನ್ನ ವ್ಯಾಪ್ತಿಗೆ ಬರುವುದಿಲ್ಲವೆನ್ನುವ ಸರ್ಕಾರ, ಮತಾಂತರ ನಿಷೇಧಕ್ಕೆ ಚಿಂತಿಸುತ್ತಿರುವ ಕ್ರೌರ್ಯವು ಗಾಬರಿ ಹುಟ್ಟಿಸುತ್ತದೆ.
ಇರಲಿ, ಮತಾಂತರದ ಚಲನೆಯು ಭಾರತದಲ್ಲಿ ಇದ್ದುದರಿಂದಲೇ ಇಲ್ಲಿ ಅನೇಕಾನೇಕ ಧರ್ಮಗಳಿರುವುದು. ಈಗ ಹಾಲಿ ಭಾರತದಲ್ಲಿ ಮತಾಂತರಕ್ಕೆ ಅವಕಾಶವಿರುವ ಜೈನ, ಬೌದ್ಧ, ಸಿಖ್ ಹಾಗೂ ಕೆಲವು ಲಿಂಗಾಯತ ಪರಂಪರೆಯ ಧರ್ಮಗಳಿವೆ. ಲಿಂಗಾಯತವು ತನ್ನ ಜಾತಿ ಬಿಟ್ಟರೆ, ಭಾರತದ ದುಡಿಯುವ ವರ್ಗದ ಅಂದರೆ ತಳಸಮುದಾಯಗಳ ಧರ್ಮವಾಗಬಹುದಾದ ಸತ್ವವು ಅದರೊಳಗೆ ಇನ್ನೂ ಕುಟುಕುಜೀವದಂತೆ ಹುದುಗಿದೆ. ಇವುಗಳಲ್ಲಿ ನಿಧಾನವಾಗಿಯಾದರೂ ಮತಾಂತರ ಜರಗುತ್ತಲೇ ಇದೆ.
ನಮ್ಮ ಕಣ್ಣೆದುರೇ ಉಪನಿಷದ್ ದ್ರವ್ಯದಿಂದ ಧರ್ಮವಾಗಿ ಹುಟ್ಟು ಪಡೆಯಬಹುದಾಗಿದ್ದ ‘ಪರಮಹಂಸಧರ್ಮ’ವೊಂದು ಗತಿಸಿ ಬಿಟ್ಟಿತು. ಆ ಎಳೆಧರ್ಮದ ಕುತ್ತಿಗೆಗೆ ಜನಿವಾರ ಬಿಗಿದುಬಿಟ್ಟರು. ಇಂದು ರಾಮಕೃಷ್ಣಾಶ್ರಮಗಳು ಭೋಜನಶಾಲೆ ಮತ್ತು ವೇದಾಂತ ಕಥಾಕಾಲಕ್ಷೇಪ ತಾಣಗಳಾಗಿಬಿಟ್ಟಿವೆ. ಇದು ಈ ಸ್ಥಿತಿಯಿಂದ ಜಿಗಿದು ಎದ್ದರೆ ಇಂದೂ ಧರ್ಮವಾಗಬಹುದು. ಇಂದು ಸಂಘ ಪರಿವಾರವು ಹೇಳುತ್ತಿರುವ ಹಿಂದೂ ಧರ್ಮವು ಇಸ್ಲಾಂಗೆ ಪ್ರತಿಸ್ಪರ್ಧಿಯಾಗಿದ್ದು ಕೇವಲ ಇಸ್ಲಾಮಿನ ಮೂಲಭೂತವಾದೀ ಗುಣ ಲಕ್ಷಣಗಳನ್ನು ಮಾತ್ರ ತಾನು ಪಡೆದುಕೊಂಡು ಒಂದು ರೀತಿಯಲ್ಲಿ ನಮ್ಮ ಕಣ್ಣ ಮುಂದೆ ಈಗ ಜರುಗುತ್ತಿರುವುದು ‘ಹಿಂದ್ಇಸ್ಲಾಮೀ’ ನವಧರ್ಮವೊಂದರ ಉದಯದಂತೆಯೂ ಇದು ಕಾಣುತ್ತದೆ.
ಇಂದು ನಮ್ಮ ನಡುವೆ, ಸ್ಥಗಿತಗೊಂಡ ಸಾಮಾಜಿಕ ಪದ್ಧತಿಯೇ ಹಿಂದು ಎಂಬ ಧರ್ಮವಾಗಿ ಈ ಪದ್ಧತಿಯು ಎಲ್ಲಾ ಧರ್ಮಗಳಿಗಿಂತಲೂ ಪ್ರಬಲವಾಗಿದೆ. ಶ್ರೇಣಿಯ ಸಮಾಜಕ್ಕಾಗಿ ಇರುವ ಕಾನೂನು ಕಟ್ಟಳೆಗಳೇ ‘ಹಿಂದು ಧರ್ಮ’ ಎಂದಾಗಿದೆ, ಈ ಶ್ರೇಣಿಯ ಕಾನೂನು ಕಟ್ಟಳೆಗಳೇ ಇಲ್ಲಿ ಧರ್ಮವಾಗಿದೆ. ಇದು ಸಾವಿರಾರು ವರ್ಷಗಳಿಂದಲೂ ಧರ್ಮದ ವೇಷ ಹಾಕಿಕೊಂಡು ವಂಚಿಸಿ ವಂಚಿಸಿ ತನ್ನನ್ನು ಧರ್ಮವೆಂದೇ ಭಾವಿಸುವಂತೆ ಮಾಡಿಬಿಟ್ಟಿದೆ.
ತನ್ನ ವಂಚನೆಗಳಿಗೆ ಭಾರತದ ಮಹೋನ್ನತ ಜ್ಞಾನಶಾಖೆಗಳಾದ ದರ್ಶನಗಳನ್ನೂ ಬೌದ್ಧ-ಜೈನ ಧರ್ಮಗಳನ್ನೂ ಮಾತಾಡುವ ವಸ್ತುವಾಗಿ ಬಳಸಿಕೊಂಡಿದೆ. ದೇವರನ್ನೂ ಅವತಾರ ಎತ್ತಿಸಿದೆ. ಇದೆಲ್ಲಾ ಯಾತಕ್ಕಾಗಿ ಅಂದರೆ- ಶ್ರೇಣೀಕೃತ ಜಾತಿ ವರ್ಣ ಕಟ್ಟುಪಾಡುಗಳನ್ನು ಸುಪ್ತಪ್ರಜ್ಞೆಯಲ್ಲಿ ಸ್ಥಾಪಿಸುವುದಕ್ಕಾಗಿ. ಅದಕ್ಕಾಗೇ ಯಾವ ರಾಜ ಬಂದರೂ ರಾಜಧರ್ಮ ಅಂದರೆ ವರ್ಣವ್ಯವಸ್ಥೆಯನ್ನು ಕಾಪಾಡುವುದೇ ಆಗಿತ್ತು.
ಹಿಂದು ಆಗಿರುವುದೆಂದರೆ-ಇದ್ದ ಕಡೆ ಇರುವ ಶ್ರೇಣಿಯಲ್ಲಿ ಬಿದ್ದಿರು-ಎಂದೇ ಅರ್ಥ. ಇಲ್ಲಿರಬೇಕೆ? ಇಲ್ಲಿ ಅಸಮಾನತೆ ಕಟ್ಟಳೆಗಳ ವ್ಯಾಘ್ರನು ಧರ್ಮದ ಗೋಮುಖ ವೇಷದಲ್ಲಿದ್ದಾನೆ. ಹಿಂದೂ ಗೋಮುಖ ವ್ಯಾಘ್ರನಲ್ಲಿ ವ್ಯಾಘ್ರನ ಸಾಯಿಸಿದರೆ-ಅಂದರೆ ಶ್ರೇಣೀಕೃತ ಜಾತಿ ಕಟ್ಟಳೆ, ಅಸ್ಪೃಶ್ಯತೆಗಳ ಸಾಯಿಸಿದರೆ-ಇದೂ ಒಂದು ಧರ್ಮವಾಗಬಹುದು. ಇದು ಸಾಧ್ಯವೆ?
ಆದರೆ ಇದು ಸಾಧ್ಯವೇ ಎಂದು ಶ್ರೀ ಪೇಜಾವರರನ್ನು ಪ್ರಾತಿನಿಧಿಕ ಮಾಡಿಕೊಂಡು ಕೇಳುತ್ತಿದ್ದೇನೆ. ಅವತಾರ ಎತ್ತಿಸಿಯಾದರೂ ಜಾತಿಯ ಶ್ರೇಣಿಯು ಇಲ್ಲದಂತೆ ಹಿಂದೂ ಸಮಾಜ ರೂಪಿಸಿ ಅದನ್ನು ಧರ್ಮ ಮಾಡಲು ಸಾಧ್ಯವಿದೆಯೆ? ಇದಾಗದಿದ್ದರೆ, ಹಿಂದೂ ಸಮಾಜದ ದೇವಸ್ಥಾನ, ಮಠ, ಇತ್ಯಾದಿಗಳಲ್ಲಿ ಮಠಾಧೀಶ ಸ್ಥಾನ ಪೂಜೆ ಕಾರ್ಯ ಇತ್ಯಾದಿ ನಿರ್ವಹಣೆಗಳಲ್ಲಿ ಸಕಲೆಂಟು ಜಾತಿಗೂ ಪರ್ಯಾಯ ವ್ಯವಸ್ಥೆ ತರಲಾದರೂ ಸಾಧ್ಯವಿದೆಯೆ? ಉಡುಪಿಯಲ್ಲಿ ಅಷ್ಟಮಠಗಳ ಬದಲು ನವಮಠಗಳ ಪರ್ಯಾಯಕ್ಕಾಗಿ, ಡಿಮ್ಯಾಂಡ್ ಇಟ್ಟು ಕಾಯುತ್ತಿರುವವನಂತೆ ಇರುವ ಕನಕ ಇನ್ನೆಷ್ಟು ದಿನ ಕಾಯಬೇಕು? ಅಥವಾ ಅವನು ಹೊರಗಿರುವುದೇ ಧರ್ಮವೆ?
ನೀವು ದಲಿತ ಕೇರಿಗೆ ಪಾದವಿಟ್ಟರೆ ಅದನ್ನೆ ಧನ್ಯ ಎಂದುಕೊಳ್ಳುವ ಆ ದಲಿತ ಕೇರಿಯ ಮಗುವೊಂದು ನಿಮ್ಮನ್ನು ಪ್ರೀತಿಸಿ `ನಾನೂ ನಿಮ್ಮೊಡನೆ ಬರುತ್ತೇನೆ, ನನಗೂ ನೀವಾಗುವ ಆಸೆ’ ಎಂದರೆ ನೀವೇನು ಮಾಡುತ್ತೀರಿ? ಇಲ್ಲಿ ನೀವು ಅಂದರೆ ನೀವೇ ಅಲ್ಲ. ನಿಮ್ಮಂತೆ ಇರುವ ಎಲ್ಲರಿಗೂ ಇದು ಎದುರಾಗುತ್ತಿಲ್ಲ ಯಾಕೆ? ನಿಮ್ಮದೂ ಪತನದ ಸ್ಥಿತಿಯಲ್ಲವೇ? ನಿಮ್ಮಂಥವರಿಗೆ ಇಂಥವುಗಳನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಯಾಕೆಂದರೆ ಇಂಥವರ ದೇಹದೊಳಗಿನ ಆತ್ಮಸಾಕ್ಷಿ ಅಥವಾ ಸಾಕ್ಷಿಪ್ರಜ್ಞೆಯು ನೇಣಿಗೆ ಹಾಕಲ್ಪಟ್ಟಿರುತ್ತದೆ.
ಏಕೆಂದರೆ ಭಾರತದ ಸಮಾಜದ ಸುಪ್ತ ಮನಸ್ಸು ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೆ ಮೌಲ್ಯ ಮಾಡಿಬಿಟ್ಟಿದೆ. ಇದನ್ನು ಬಿತ್ತುವವರನ್ನು ಪೂಜ್ಯರು, ಶ್ರೀಶ್ರೀಶ್ರೀ, ಮಾತಾಡಿದರೆ ಆಶೀರ್ವಚನ, ಆಧ್ಯಾತ್ಮಿಕ ಚಿಂತಕರು, ಪರಮ ಪೂಜ್ಯರು ಇತ್ಯಾದಿ ಪಟ್ಟಕಟ್ಟಿದೆ.
ಈ ಪ್ರಭಾವಕ್ಕೆ ಒಳಗಾದವರೇ ಭಾರತದ ಸಂವಿಧಾನದ ಆಶಯಗಳನ್ನು ನಿರ್ಧರಿಸುವ ನಿರ್ವಹಿಸುವ ನಿರ್ಣಾಯಕ ಸ್ಥಾನಗಳಲ್ಲಿ ಹೆಚ್ಚಾಗಿ ಇರುವಾಗ, ಕಳೆದ ವರ್ಷದ ರಾಜ್ಯ ಬಜೆಟ್ನಲ್ಲಿ ದಲಿತರಿಗೆ ಮೀಸಲಿಟ್ಟ 4 ಸಾವಿರ ಕೋಟಿಗಳಲ್ಲಿ ಅರ್ಧದಷ್ಟನ್ನು ಕಾಟಾಚಾರಕ್ಕೆ ಖರ್ಚುಮಾಡಿ ಉಳಿಕೆ ಅರ್ಧವನ್ನು ಲ್ಯಾಪ್ಸ್ ಮಾಡಿರುವ ಕ್ರಿಯೆ ಇಲ್ಲಿ ಸಹಜವಲ್ಲವೆ? ದಲಿತರ ಮೀಸಲಾತಿ ಉದ್ಯೋಗದಲ್ಲಿ ದಲಿತೇತರರು ನುಸುಳಿ ಪಡೆಯುತ್ತಿರುವುದು ಇಲ್ಲಿ ಸಹಜ ಕ್ರಿಯೆ ತಾನೆ? ನಮಗೆ ಅನ್ಯಾಯಗಳು, ಅನ್ಯಾಯಗಳಾಗಿ ಬಂದು ಮುಟ್ಟುತ್ತಿಲ್ಲ.
ಕನ್ನಡದಲ್ಲಿ ಒಂದು ಪದ ಇದೆ- `ಪಾಪ’ ಅಂತ. ಇದನ್ನು ಪಾಪ (Sin)ಕ್ಕೂ ಬಳಸುತ್ತಾರೆ, ಹಾಗೇ ಕರುಣೆ (pity)ಗೂ ಬಳಸುತ್ತಾರೆ. ಪಾಪಕ್ಕೆ ಬಳಸಿದರೆ ಪಾಪಿಷ್ಟ ಆಗುತ್ತಾನೆ. ಕರುಣೆಗೆ ಬಳಸಿದರೆ ಪಾಪದವನು ಆಗುತ್ತಾನೆ. ಪಾಪದವನು ಒಂದು ಪಟ್ಟು ಪತನಗೊಂಡವನಾಗಿದ್ದರೆ, ಪಾಪಿಷ್ಟನು ನೂರು ಪಟ್ಟು ಪತನಗೊಂಡವನಾಗಿರುತ್ತಾನೆ. ಅಸ್ಪೃಶ್ಯತೆಗೆ ಅಥವಾ ತಾರತಮ್ಯಕ್ಕೆ ಒಳಗಾದವರು ಪಾಪದವರು ಆಗುತ್ತಾರೆ.
ಯಾಕೆಂದರೆ ಇವರ ಮನೋಭೂಮಿಕೆಯಲ್ಲಿ ಅಸ್ಪೃಶ್ಯತೆ ತಾರತಮ್ಯ ಇರುವುದಿಲ್ಲ. ಆದರೆ ಯಾರು ಅಸ್ಪೃಶ್ಯತೆ, ತಾರತಮ್ಯ ಆಚರಿಸುತ್ತಾರೋ ಅವರ ಮನೋಭೂಮಿಕೆಯಲ್ಲಿ ಅಸ್ಪೃಶ್ಯತೆ ತಾರತಮ್ಯಗಳೇ ತುಂಬಿರುತ್ತವೆ. ಈ ನಿಜದ ಎದುರು ಅಸ್ಪೃಶ್ಯತೆ ತಾರತಮ್ಯ ಆಚರಿಸುವವರು ಪಾಪಿಷ್ಟರಾಗುತ್ತಾರೆ. ‘ಗುಲಾಮನನ್ನು ಪಳಗಿಸಲು ಹೆಣಗುವ ಮಾಲೀಕನ ಮನಸ್ಸಿನ ತುಂಬಾ ಗುಲಾಮತನ ತುಂಬಿರುತ್ತದೆ’ -ಎಂಬ ಹೆಗಲ್ನ ನುಡಿಯ ನಿಜದಂತೆ.
ನಾವು ನಮ್ಮ ಸಮಾಜವನ್ನು ನೋಡುವ ನೋಟಕ್ಕೆ ಈ ನಿಜದ ದರ್ಶನವಾದರೆ ಇದು ಸಂವಿಧಾನದ ಆಶಯಗಳತ್ತ ನಾವಿಟ್ಟ ಮೊದಲ ಹೆಜ್ಜೆಯಾಗುತ್ತದೆ. ಇದು ಕಡು ಕಷ್ಟ. ಭಾರತೀಯ ಮನಸ್ಸಿನ ನಡೆ ಮತ್ತು ನುಡಿ ಸೀಳಿಹೋಗಿದೆ. ಅಸ್ಪೃಶ್ಯತೆ ಪಾಪ ಎಂದರೆ ಹೌದೆನ್ನುವ ಭಾರತೀಯ ಮನಸ್ಸು ಅದೇ ಅಸ್ಪೃಶ್ಯತೆ ಆಚರಿಸುವವರು ಪಾಪಿಷ್ಟರು ಎಂದರೆ ಬೆಚ್ಚಿ ಬೀಳುತ್ತದೆ. ವ್ಯವಹಾರಕ್ಕೆ ವೇದವನ್ನು ನಡೆದುಕೊಂಡು, ಆದರ್ಶಕ್ಕೆ ವೇದಾಂತ ಎಂದರೆ ಉಪನಿಷತ್ತನ್ನು ಮಾತಿನ ಕಾಲಕ್ಷೇಪ ಮಾಡಿದ್ದೇ ಕಾರಣವೂ ಇರಬಹುದು.
ಆದರೆ ಈ ಪಾಪದವರೂ ಎಚ್ಚರದ ಸ್ಥಿತಿಯಲ್ಲಿ ಇಲ್ಲ. ಮಧ್ಯಮ ಜಾತಿಗೆ ಸೇರಿದ ನನ್ನ ಗೆಳೆಯನೊಬ್ಬ- “ಒಂದು ಚೋಟುದ್ದ ಬ್ರಾಹ್ಮಣ ಹುಡುಗ ಅವನು. ನಮ್ಮ ವಯಸ್ಸಾದ ಅಪ್ಪನಿಗೇನೆ `ಏನಯ್ಯ ಗೌಡ, ಚೆನ್ನಾಗಿದ್ದೀಯಾ?’ ಅಂತ ಏಕವಚನದಲ್ಲಿ ಕೇಳ್ತಾನಲ್ಲಯ್ಯ!” ಎಂದು ಕುಪಿತನಾಗಿ ಹೇಳಿದ. ನಾನು ಅವನಿಗೆ ‘ಸರಿಯಪ್ಪ, ನೀನು ಚಿಕ್ಕವನಾಗಿದ್ದಾಗ ನಮ್ಮ ಜಾತಿಯ ವಯಸ್ಸಾದವರಿಗೆ ಯಾವ ವಚನದಲ್ಲಿ ಕರೆಯುತ್ತಿದ್ದೆ?’ ಎಂದು ಕೇಳಿದೆ. ಇಂಥವರಲ್ಲಿ ಸ್ವಾಭಿಮಾನದ ಎಚ್ಚರ ಅಂದರೆ ತನ್ನದು ಮಾತ್ರ ಆಗಿರುತ್ತದೆ, ಇನ್ನೊಂದರ ಪರಿವೆ ಇರುವುದಿಲ್ಲ.
ಹಾಗೇ ದಲಿತರ ಮನಸ್ಥಿತಿಗೆ ಬಂದರೂ ಸಣ್ಣ ಪುಟ್ಟದಾದರೂ ಇದನ್ನೇ ಕಾಣುತ್ತೇವೆ. ಭಾರತದ ಬಹುತೇಕ ಸಮುದಾಯಗಳು ಹೀಗೇ ಇವೆ. ರಸಾಯನಶಾಸ್ತ್ರದಲ್ಲಿ ಬರುವ ಪರ್ಯಾಪ್ತ ದ್ರಾವಣ (Saturated solution)ದಂತೆ ಎಲ್ಲಾ ಜಾತಿಗಳು ತಂತಮ್ಮ ಕೊನೆ ಸ್ಥಿತಿ ತಲುಪಿ, ಅಸ್ಪೃಶ್ಯತೆ ತಾರತಮ್ಯಗಳು ನಡೆದು ಬಂದ ಪದ್ಧತಿಗಳಾಗಿ ಎಚ್ಚರವಿಲ್ಲದೆ ತಮಗೆ ತಾವೇ ನಡೆದುಕೊಂಡು ಬರುತ್ತಿವೆ. ನಾವು ಅದರೊಳಗೇ ಸಂಪೂರ್ಣ ಮುಳುಗಿಹೋಗಿರುವುದರಿಂದ ಅದರ ಐಬನ್ನು ಅರಿವಿಗೆ ತಂದುಕೊಳ್ಳುವುದಕ್ಕೇ ಹರಸಾಹಸ ಪಡಬೇಕಿದೆ.
ಈಗ ಭಾರತದಲ್ಲಿ ವರ್ತಮಾನದ ಸಂವಿಧಾನವೇನೊ ಪಾಪದವರನ್ನು ಮೇಲೆತ್ತಲು ಕೈಚಾಚಿದೆ. ಆದರೆ ಭೂತಕಾಲದ ಸಂವಿಧಾನ ಕಾಲೆಳೆಯುತ್ತಿದೆ. ಈ ಪಾಪದವರೂ ಎಚ್ಚರದಲ್ಲಿಲ್ಲ. ಸಂವಿಧಾನದ ಆಶಯಗಳ ಕಾಲೆಳೆಯುವ ಪಾಪಿಷ್ಟರಾದರೋ ಸಮಾಜದಲ್ಲಿ ಗಣ್ಯರೆನ್ನಿಸಿಕೊಂಡಿದ್ದಾರೆ. ಇವರ ವಂಶಸ್ಥರೇ ಇವರ ಪ್ರಭಾವದಲ್ಲಿರುವವರೇ ನಿರ್ಧರಿಸುವವರು ನಿರ್ವಹಿಸುವವರು ಆಗಿದ್ದಾರೆ. ಸಂವಿಧಾನದ ಆಸೆಗಳು ಈಡೇರುವುದಾದರೂ ಹೇಗೆ?
ಬಸ್ಸು ರೈಲು ಕಾರಣಕ್ಕಾಗಿ ಅಕ್ಕಪಕ್ಕ ಕೂತಿದ್ದೇವೆ. ಹೊಟೇಲ್ ಕಾರಣಕ್ಕಾಗಿ ಸಹಪಂಕ್ತಿ ಭೋಜನ ಮಾಡಿದ್ದೇವೆ. ನೌಕರಿ ಕಾರಣಕ್ಕಾಗಿ ಒಟ್ಟಾಗಿ ಓಡಾಡಿದ್ದೇವೆ, ಅಲ್ಲಿ ಇಲ್ಲಿ ಮದುವೆಗಳೂ ಆಗಿವೆ. ಇಲ್ಲಿ ಆಗುತ್ತಿರುವ ಬದಲಾವಣೆಗಳು ಹೆಚ್ಚಾಗಿ ಬಹಿರಂಗ ಒತ್ತಡದವು. ಅಂತರಂಗ ಕತ್ತಲಲ್ಲೆ ಇದೆ.
ಏನೇನು ಮಾಡಬಹುದಿತ್ತು? ಮೊದಲ ಹೆಜ್ಜೆಯಾಗಿ, ವರ್ತಮಾನದ ಸಂವಿಧಾನದ ಆಶಯಗಳಿಗೆ ತಕ್ಕಂತೆ ಪ್ರಜೆಗಳನ್ನು ರೂಪಿಸಲು ಶಿಕ್ಷಣ ಕ್ಷೇತ್ರವನ್ನು ತೆಪ್ಪ ಮಾಡಿಕೊಳ್ಳಬಹುದಿತ್ತು. ಶಿಕ್ಷಣ ಪಡೆಯುವ ಎಳೆಯರು ಆ ವಿದ್ಯೆಯಲ್ಲೆ ನಾಗರಿಕರೂ ಆಗುವಂತೆ ಶಿಕ್ಷಣವನ್ನೂ ರೂಪಿಸಬಹುದಿತ್ತು. ಸಮಾಜದಲ್ಲಿ ಅಸ್ಪೃಶ್ಯತೆ ತಾರತಮ್ಯ ಆಚರಿಸುವವರ ಬಗ್ಗೆ ಆ ಪದ್ಧತಿಗಳ ಬಗ್ಗೆ ಇರುವ ಭಯ ಭಕ್ತಿಗಳಲ್ಲಿ- ಭಯ ಇರಲಿ, ಆದರೆ ಭಕ್ತಿಯನ್ನು ಇಲ್ಲದಂತೆ ಮಾಡಬೇಕಿತ್ತು. ಭಕ್ತಿಯು ಅಪಮೌಲ್ಯವನ್ನೇ ಮೌಲ್ಯವಾಗಿಸಿ ಬಿಡಲೂಬಹುದು.
ಈ ಅಪಾಯದ ಅರಿವು ನಮಗಿರಬೇಕಿತ್ತು. ಈ ಅರಿವು ನಮಗೆ ಇದ್ದಿದ್ದರೆ.. ನಮ್ಮ ಶಿಕ್ಷಣದ ಪಠ್ಯ, ನಾವು ನೋಡುವ ದೃಷ್ಟಿಕೋನ ಎಲ್ಲವೂ ಹೊಸತಾಗಿ ಬಿಡುತ್ತಿತ್ತು. ಆಗ ಕೇವಲ ಮನುಷ್ಯ ಪ್ರಜ್ಞೆ ಕೆಲಸ ಮಾಡುತ್ತದೆ. ಆಗ ತಾರತಮ್ಯ ಮೌಲ್ಯವಾಗಿಸುವವರು ಪಳೆಯುಳಿಕೆಗಳಂತೆ ನಮ್ಮ ಸಮಾಜಶಾಸ್ತ್ರಜ್ಞರಿಗೆ ಕಾಣಬಹುದು. ಆಗ ಇಂಥವು ಸಾಮಾಜಿಕ ಸಾಂಸ್ಕೃತಿಕ ಅನಿಷ್ಟ ಪದ್ಧತಿಗಳು ಎಂದೋ ಅಥವಾ ಸಾಮಾಜಿಕ ಸಮಸ್ಯೆಗಳು ಎಂದೋ ಅಧ್ಯಯನದ ವಸ್ತುವಾಗುತ್ತಿತ್ತು.
ರಾಜ್ಯಶಾಸ್ತ್ರದಲ್ಲಿ- ಸಂವಿಧಾನ ಅನುಷ್ಠಾನಕ್ಕೆ ಇರುವ ತೊಡಕುಗಳ ಪಟ್ಟಿಯಲ್ಲಿ ಇದೂ ಸೇರ್ಪಡೆಯಾಗುತ್ತಿತ್ತು. ಮನಃಶಾಸ್ತ್ರದ ಸಮ್ಮೋಹಿನಿ ತಜ್ಞರು ಈ ಸುಪ್ತಪ್ರಜ್ಞೆಯ ತಾರತಮ್ಯಗಳನ್ನು ತಮ್ಮ ಅಧ್ಯಯನ ವಿಷಯ ಎಂದು ಪರಿಗಣಿಸಿ ಭೂತೋಚ್ಛಾಟನೆಯ ವಿಧಿವಿಧಾನಗಳನ್ನು ಕಂಡು ಹಿಡಿಯುವ ಪ್ರಯತ್ನಗಳೂ ಆಗುತ್ತಿದ್ದವು. ಶಿಕ್ಷಣತಜ್ಞರಿಂದ ಸಂವಿಧಾನದ ಆಶಯಗಳಿಗೆ ಪಠ್ಯ ರಚನೆಯಾಗುತ್ತಿತ್ತು -ಹೀಗೆ.
ಆದರೆ ಭಾರತದ ಶಿಕ್ಷಣ ಕ್ಷೇತ್ರಕ್ಕೆ ಬಂದರೆ ಇಲ್ಲೂ ಏನಾಗಿದೆ? ಹಿಂದೆ ದ್ವಿಜರಲ್ಲದವರಿಗೆ ವಿದ್ಯೆ ವಂಚಿಸಲ್ಪಟ್ಟಿತ್ತು. ಈಗ ವರ್ತಮಾನದ ಸಂವಿಧಾನದಲ್ಲಿ ವಿದ್ಯೆ ಎಲ್ಲರಿಗೂ ಮುಕ್ತವಾಗಿದೆ, ನಿಜ. ಆದರೆ ಕೊಟ್ಟಂತೆ ಕಾಣಿಸುತ್ತ ಸಹಜವಾಗೇ ಹೊರಗಿಡುವ ಸಂಚೂ ಜೊತೆಗೇ ಜರುಗುತ್ತಿದೆ. ಏಕರೂಪದ ಶಿಕ್ಷಣ ಪದ್ಧತಿ ಇಲ್ಲದೆ, ಪ್ರಾಥಮಿಕ ಶಿಕ್ಷಣದಲ್ಲಾದರೂ ಮಾತೃಭಾಷೆ ಮಾಧ್ಯಮವಾಗದೆ, ಕಡ್ಡಾಯ ಶಿಕ್ಷಣದಲ್ಲಿ ಕಡ್ಡಾಯ ಇಲ್ಲದೆ, ಮುಖ್ಯವಾಗಿ ಗ್ರಾಮೀಣ ಭಾರತವು ಸಹಜವೊ ಎಂಬಂತೆ ಹೊರ ಹಾಕಲ್ಪಡುತ್ತಿದೆ.
ಎಲ್ಲರಿಗೂ ಶಿಕ್ಷಣ ನೀಡಬೇಕೆಂಬ ಆಧುನಿಕ ಪ್ರಜ್ಞೆಯನ್ನು, ಶಿಕ್ಷಣ ಕೊಡಬಾರದೆನ್ನುವ ಸನಾತನ ಸುಪ್ತಪ್ರಜ್ಞೆಯೂ ನಿಯಂತ್ರಿಸುತ್ತಿರುವುದರ ಪರಿಣಾಮದಿಂದ ಇದಾಗುತ್ತಿರಬಹುದೇನೊ. ಇಲ್ಲೂ ತಾರತಮ್ಯವೇ. ಇದಕ್ಕೆ ನಾವು ಬೆಚ್ಚುತ್ತಿಲ್ಲ, ಬೆದರುತ್ತಿಲ್ಲ. ಮೊದಲು ಶಿಕ್ಷಣ ಕ್ಷೇತ್ರದಲ್ಲಿ ನಾವು ಎಚ್ಚೆತ್ತುಕೊಂಡು ಮನುಷ್ಯರಾದರೆ ಉಳಿದುದೆಲ್ಲಾ ತಂತಾನೆ ಕಾಣಬಹುದೇನೋ.
ಭಾರತದ ಇಂದಿನ ಸ್ಥಿತಿಗೆ ಒಂದು ಚಿತ್ರಣ ಕೊಟ್ಟು ಮುಗಿಸುತ್ತೇನೆ. ತುಂಬಾ ಹಿಂದೆ, ಹಳ್ಳಿಯೊಂದರಲ್ಲಿ ದಲಿತರಿಗೆ ಪ್ರವೇಶವಿಲ್ಲದ ಕಾರಣಕ್ಕೆ ಗಲಾಟೆಯಾಗಿ ಅಲ್ಲಿಗೆ ಹೋಗಿದ್ದೆವು. ಹೋಗಿ ನೋಡಿದರೆ, ಆ ಹೊಟೇಲ್ ಅಂದರೆ ಅದು ಜಗುಲಿ ಮೇಲೆ ತೆಂಗಿನ ಗರಿ ಕಟ್ಟಿದ ಒಂದು ಕತ್ತಲು ತುಂಬಿದ ಜೋಪಡಿಯಾಗಿತ್ತು. ಅಲ್ಲಿ ನೊಣಗಳ ಸಾಮ್ರಾಜ್ಯವಿತ್ತು. ಬಚ್ಚಲು ಪಕ್ಕದಲ್ಲೆ ಹರಿಯುತ್ತ ಮೂಗು ಮುಚ್ಚಿಕೊಂಡು ಏನಾರು ತಿನ್ನಬೇಕಿತ್ತು.
ಈ ಹೊಟೇಲ್ ಪ್ರವೇಶಕ್ಕೆ ದಲಿತರು ಹಾತೊರೆಯುತ್ತಿದ್ದರು. ಆ ದೃಶ್ಯ ನೋಡಿದ ನನ್ನ ಜೊತೆಗಿದ್ದ ಶ್ರೀಕೃಷ್ಣಆಲನಹಳ್ಳಿ ‘ಅಯ್ಯೋ ಮಾದೇವ, ಇಲ್ಲಿ ದಲಿತರು ಏನನ್ನೂ ತಿನ್ನದಿದ್ದರೇನೇ ಆರೋಗ್ಯವಲ್ಲವೆ?’ ಎಂದಿದ್ದರು. ಅದಕ್ಕೆ ನಾನು ‘ಪ್ರವೇಶ ಕೇಳುತ್ತಿರುವುದು ಮನಸ್ಸಿನ ಒಳಕ್ಕೆ’ ಎಂದಿದ್ದೆ.
ಭಾರತದ ಸ್ಥಿತಿಯೂ ಹೆಚ್ಚುಕಮ್ಮಿ ಆ ಹೊಟೇಲ್ನ ಕತೆಯಂತೆಯೇ ಇದೆ. ಇಲ್ಲಿ ಕೊಳಕುತನವಿದೆ, ಅನಾರೋಗ್ಯವಿದೆ, ಬಡತನವಿದೆ, ಅಜ್ಞಾನವು ತುಂಬಿದೆ. ಇಷ್ಟಿದ್ದೂ ಹೀಗಿದ್ದೂ ಭಾರತವು ಸ್ವಾತಂತ್ರ್ಯ ಪಡೆದ ನಂತರ ರಾಜರ ಆಳ್ವಿಕೆ ಕೊನೆಗೊಳಿಸಿದ್ದೂ, ವಯಸ್ಕರ ಮತದಾನ ಪದ್ಧತಿ ತಂದಿದ್ದೂ, ತನ್ನ ಮಿತಿಗಳೊಡನೆ ಶಿಕ್ಷಣವನ್ನು ಸರ್ವರಿಗೂ ಮುಕ್ತಗೊಳಿಸಿದ್ದೂ, ಭೂಸುಧಾರಣೆ, ಮೀಸಲಾತಿ ಇತ್ಯಾದಿ ಈ ನೆಲದಲ್ಲಿ ಸಂಭವಿಸಿರುವುದು ಸಾಮಾನ್ಯ ಸಂಗತಿಗಳೇನೂ ಅಲ್ಲ.
ಇದಕ್ಕೆ ಕಾರಣ- ಭಾರತದಲ್ಲಿ ಬುದ್ಧ, ವಚನಕಾರರಂಥವರ ಮಹೋನ್ನತ ಪರಂಪರೆಯ ಬೆಳಕು ಇರುವುದೂ ಅವರು ಉಸಿರಾಡಿದ ಗಾಳಿ ಅವರಿಟ್ಟ ಹೆಜ್ಜೆ ಗುರುತುಗಳು ಇರುವುದೂ ಈ ಮಹೋನ್ನತ ಪರಂಪರೆಯೂ ಭಾರತದ ಉನ್ನತ ಮನಸ್ಸುಗಳನ್ನು ಒಂದಿಷ್ಟು ಸೆಳೆದು ಕೈಹಿಡಿದು ನಡೆಸುತ್ತಿರುವುದೂ ಕಾರಣವಾಗಿರಬಹುದು. ಈ ಉನ್ನತ ಪರಂಪರೆಯ ಹೆಜ್ಜೆಗಳನ್ನು ಗುರುತಿಸಿ ನಾವು ಹೆಜ್ಜೆ ಇಟ್ಟರೆ ಆಗ ಸಂವಿಧಾನದ ಆಸೆಗಳು ಕೈಗೂಡಲೂಬಹುದು.
(‘ಎದೆಗೆ ಬಿದ್ದ ಅಕ್ಷರ’ ಸಂಕಲನದಿಂದ ಆಯ್ದ ಒಂದು ಬರಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ16 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ15 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


