Connect with us

ಬಹಿರಂಗ

ಭಾರತ ಸಂವಿಧಾನಕ್ಕೆ ‘ಭೂತ’ಚೇಷ್ಟೆ

Published

on

  • ದೇವನೂರ ಮಹಾದೇವ

ಮ್ಮ ಸಂವಿಧಾನಕ್ಕೆ 60 ವರ್ಷಗಳ ಇತಿಹಾಸ. ಆದರೆ ಸಾವಿರಾರು ವರ್ಷಗಳ ಇತಿಹಾಸವಿರುವ ಇಂದೂ ಕೂಡ ಅಗೋಚರವಾಗಿ ಆಳ್ವಿಕೆ ನಡೆಸುತ್ತಿರುವ ಅಲಿಖಿತ ಸಂವಿಧಾನವೂ ಒಂದಿದೆ. ಇದು ಭಾರತದ ಮನೋಭೂಮಿಕೆಯಲ್ಲಿದೆ. ಇದು ಭೂತಕಾಲದ ಸಂವಿಧಾನ. ಇದು ಭಾರತದ ಸುಪ್ತಪ್ರಜ್ಞೆಯ ಆಳದಲ್ಲಿದೆ. ಈ ಎರಡರ ನಡುವೆ ಯುದ್ಧ ಜರುಗುತ್ತಿದೆ. ಭೂತಕಾಲದ ಸಂವಿಧಾನವೂ ಇಲ್ಲಿ ಬಲವಾಗಿದೆ. ಹಾಗಾಗಿ ನಮ್ಮ ವರ್ತಮಾನ ಸಂವಿಧಾನದ ಆಸೆಗಳು ತೆವಳುತ್ತಿವೆ.

ಈ ನನ್ನ ಮಾತುಗಳಲ್ಲಿ ಹೊಸತೇನೂ ಇಲ್ಲ. ನಿಮ್ಮ ನಡುವೆ ನಾನೇ ಸ್ಪಷ್ಟ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವೆ. ಈ ಚಿಂತೆ ಮತ್ತು ಚಿಂತನೆಗಳನ್ನು ಉದಾಹರಣೆಗಳ ಮೂಲಕ ಸ್ಪಷ್ಟ ಮಾಡಿಕೊಳ್ಳಲು ಪ್ರಯತ್ನಿಸುವೆ.

ಬಹಳ ಹಿಂದೆ, ಡಾ.ಯು.ಆರ್.ಅನಂತಮೂರ್ತಿಯವರು ಇಂಗ್ಲಿಷ್ ವಿಭಾಗದಲ್ಲಿದ್ದಾಗ, ಅವರನ್ನು ಭೇಟಿ ಮಾಡಲು ಹಿರಿಯರೊಬ್ಬರು ಬಂದಿದ್ದರು. ತುಂಬಾ ಶುಭ್ರವಾಗಿದ್ದರು. ಮೈತುಂಬಾ ಬಿಳಿ ಬಟ್ಟೆ. ಜುಟ್ಟು ನಾಮ ಇತ್ತು. ಅವರು ಮಾತಾಡಿ ಹೋದ ಮೇಲೆ ಅನಂತಮೂರ್ತಿಯವರು ‘ಈಗ ಬಂದಿದ್ದವರು ವೇದ ಉಪನಿಷತ್ ಪುರಾಣ ಪಾರಂಗತರು’ ಎಂದರು. ಜೊತೆಗೆ- ‘ಇವರು ತಾವೇ ತಮ್ಮ ಅಡಿಗೆ ಮಾಡಿಕೊಂಡು ಊಟ ಮಾಡುವುದು’ ಎಂದೂ ಹೇಳಿದರು.

ಇದು ಯಾಕೋ ನನ್ನ ಮನಸ್ಸಲ್ಲಿ ಉಳಿದುಬಿಟ್ಟಿತು. ತನ್ನ ಕೈಯಾರ ಮಾಡಿದ್ದನ್ನು ಮಾತ್ರ ಊಟ ಮಾಡುವ ಇವರಿಗೆ ವೇದ ಉಪನಿಷತ್‍ಗಳು ಹೇಳಿಕೊಟ್ಟಿದ್ದೇನು ಎಂಬ ಪ್ರಶ್ನೆ ನನ್ನೊಳಗೆ ಉಳಿದುಬಿಟ್ಟಿತು. ಈಗ ಅನ್ನಿಸುತ್ತ್ತಿದೆ- ಇವರ ಕಠೋರ ಮಡಿಯ ಅಸ್ತಿತ್ವದಲ್ಲೆ ಅಸ್ಪೃಶ್ಯತೆಯ ಪ್ರಚಾರ ಕಾರ್ಯವೂ ಅಂತರ್ಗತವಾಗಿದೆ ಅಂತ. ಇವರನ್ನು ಅರ್ಥ ಮಾಡಿಕೊಳ್ಳೋಣ. ಅಂದರೆ ಇವರನ್ನು ಪಳೆಯುಳಿಕೆ ಎಂದು ಭಾವಿಸಿದರೆ ಸಮಸ್ಯೆ ಇಲ್ಲ. ಆದರೆ ಅವರ ಮಡಿಯನ್ನು ಪಾರಂಪರಿಕ ಮೌಲ್ಯ ಎಂದು ಗೌರವಿಸಿದರೆ ಅಪಾಯ ಆರಂಭವಾಗುತ್ತದೆ.

ಇನ್ನೊಂದು ಭೀಕರ ಉದಾಹರಣೆ ಕೊಡುತ್ತೇನೆ. ಪುರಿ ಜಗದ್ಗುರು ಅಸೃಶ್ಯತೆಯನ್ನು ಎತ್ತಿ ಹಿಡಿದಾಗ ಭಾರತ ತಲ್ಲಣಿಸಲಿಲ್ಲ. ಭೀಕರ ಉದಾಹರಣೆ ಎಂದು ನನ್ನ ಸಮಾಧಾನಕ್ಕಾಗಿ ಹೇಳಿಕೊಂಡೆ ಅಷ್ಟೆ. ಆದರೆ ಅದು ಭೀಕರವಾಗಿ ಸಮಾಜಕ್ಕೆ ತಟ್ಟಲೇ ಇಲ್ಲ. ಪುರಿ ಜಗದ್ಗುರು ಅಸಹ್ಯವಾಗಿ ನಮಗೆ ಕಾಣಲೇ ಇಲ್ಲ.

ಯಾಕೆಂದರೆ ನಮ್ಮ ವರ್ತಮಾನದ ಪ್ರಜ್ಞೆಯ ಸಂವಿಧಾನವು ಸಮಾನತೆಯನ್ನು ಮೌಲ್ಯ ಮಾಡಿದರೆ, ಭೂತಕಾಲದ ಸುಪ್ತಪ್ರಜ್ಞೆಯ ಸಂವಿಧಾನಕ್ಕೆ ಶ್ರೇಣೀಕೃತ ಸಮಾಜದ ಅಸ್ಪೃಶ್ಯತೆ, ಜಾತಿತಾರತಮ್ಯಗಳೇ ಮೌಲ್ಯವಾಗಿದೆ. ಭೂತದ ಕಪ್ಪುಹಣ ಇಂದೂ ಚಲಾವಣೆಯಲ್ಲಿದೆ. ಹೀಗಿರುವಾಗ ಸಮಾಜ ಯಾಕಾಗಿ ತಲ್ಲಣಿಸಬೇಕು? ಹೀಗಿದ್ದಾಗ ವರ್ತಮಾನದ ಸಂವಿಧಾನದ ಆಸೆಗಳು ತೆವಳದೆ ಮತ್ತೇನು ಮಾಡಲು ಸಾಧ್ಯ?

ಹಾಗೆ ಇಂದು ಚರ್ಚಿತವಾಗುತ್ತಿರುವ ಮತಾಂತರ ನಿಷೇಧದ ಪ್ರಸ್ತಾಪಕ್ಕೆ ಬಂದರೂ ಇಲ್ಲೂ ಕಾಣುವುದು ಇದನ್ನೇ. ಹಾಲಿ ಬಿಜೆಪಿ ಕರ್ನಾಟಕ ಸರ್ಕಾರ ಹಾಗೂ ಪೇಜಾವರ ಮಠಾಧೀಶರಾದಿಗಳು ಈ ಮತಾಂತರ ನಿಷೇಧಕ್ಕಾಗಿ ಹಾತೊರೆಯುತ್ತಿದೆ. ಶೂದ್ರನೊಬ್ಬ ನಿಮ್ಮ ಬ್ರಾಹ್ಮಣ ಜಾತಿಗೆ ಸೇರುತ್ತೇನೆಂದರೆ ಆಕಾಶ ನೋಡುವ ಮಠಾಧಿಪತಿಗಳು ಹಾಗೆ ಬ್ರಾಹ್ಮಣ ಜಾತಿಗೆ ನನ್ನನು ವರ್ಗಾವಣೆ ಮಾಡಿ ಎಂದು ಶೂದ್ರ ಕೇಳಿದರೆ ಇದು ತನ್ನ ವ್ಯಾಪ್ತಿಗೆ ಬರುವುದಿಲ್ಲವೆನ್ನುವ ಸರ್ಕಾರ, ಮತಾಂತರ ನಿಷೇಧಕ್ಕೆ ಚಿಂತಿಸುತ್ತಿರುವ ಕ್ರೌರ್ಯವು ಗಾಬರಿ ಹುಟ್ಟಿಸುತ್ತದೆ.

ಇರಲಿ, ಮತಾಂತರದ ಚಲನೆಯು ಭಾರತದಲ್ಲಿ ಇದ್ದುದರಿಂದಲೇ ಇಲ್ಲಿ ಅನೇಕಾನೇಕ ಧರ್ಮಗಳಿರುವುದು. ಈಗ ಹಾಲಿ ಭಾರತದಲ್ಲಿ ಮತಾಂತರಕ್ಕೆ ಅವಕಾಶವಿರುವ ಜೈನ, ಬೌದ್ಧ, ಸಿಖ್ ಹಾಗೂ ಕೆಲವು ಲಿಂಗಾಯತ ಪರಂಪರೆಯ ಧರ್ಮಗಳಿವೆ. ಲಿಂಗಾಯತವು ತನ್ನ ಜಾತಿ ಬಿಟ್ಟರೆ, ಭಾರತದ ದುಡಿಯುವ ವರ್ಗದ ಅಂದರೆ ತಳಸಮುದಾಯಗಳ ಧರ್ಮವಾಗಬಹುದಾದ ಸತ್ವವು ಅದರೊಳಗೆ ಇನ್ನೂ ಕುಟುಕುಜೀವದಂತೆ ಹುದುಗಿದೆ. ಇವುಗಳಲ್ಲಿ ನಿಧಾನವಾಗಿಯಾದರೂ ಮತಾಂತರ ಜರಗುತ್ತಲೇ ಇದೆ.

ನಮ್ಮ ಕಣ್ಣೆದುರೇ ಉಪನಿಷದ್ ದ್ರವ್ಯದಿಂದ ಧರ್ಮವಾಗಿ ಹುಟ್ಟು ಪಡೆಯಬಹುದಾಗಿದ್ದ ‘ಪರಮಹಂಸಧರ್ಮ’ವೊಂದು ಗತಿಸಿ ಬಿಟ್ಟಿತು. ಆ ಎಳೆಧರ್ಮದ ಕುತ್ತಿಗೆಗೆ ಜನಿವಾರ ಬಿಗಿದುಬಿಟ್ಟರು. ಇಂದು ರಾಮಕೃಷ್ಣಾಶ್ರಮಗಳು ಭೋಜನಶಾಲೆ ಮತ್ತು ವೇದಾಂತ ಕಥಾಕಾಲಕ್ಷೇಪ ತಾಣಗಳಾಗಿಬಿಟ್ಟಿವೆ. ಇದು ಈ ಸ್ಥಿತಿಯಿಂದ ಜಿಗಿದು ಎದ್ದರೆ ಇಂದೂ ಧರ್ಮವಾಗಬಹುದು. ಇಂದು ಸಂಘ ಪರಿವಾರವು ಹೇಳುತ್ತಿರುವ ಹಿಂದೂ ಧರ್ಮವು ಇಸ್ಲಾಂಗೆ ಪ್ರತಿಸ್ಪರ್ಧಿಯಾಗಿದ್ದು ಕೇವಲ ಇಸ್ಲಾಮಿನ ಮೂಲಭೂತವಾದೀ ಗುಣ ಲಕ್ಷಣಗಳನ್ನು ಮಾತ್ರ ತಾನು ಪಡೆದುಕೊಂಡು ಒಂದು ರೀತಿಯಲ್ಲಿ ನಮ್ಮ ಕಣ್ಣ ಮುಂದೆ ಈಗ ಜರುಗುತ್ತಿರುವುದು ‘ಹಿಂದ್‍ಇಸ್ಲಾಮೀ’ ನವಧರ್ಮವೊಂದರ ಉದಯದಂತೆಯೂ ಇದು ಕಾಣುತ್ತದೆ.

ಇಂದು ನಮ್ಮ ನಡುವೆ, ಸ್ಥಗಿತಗೊಂಡ ಸಾಮಾಜಿಕ ಪದ್ಧತಿಯೇ ಹಿಂದು ಎಂಬ ಧರ್ಮವಾಗಿ ಈ ಪದ್ಧತಿಯು ಎಲ್ಲಾ ಧರ್ಮಗಳಿಗಿಂತಲೂ ಪ್ರಬಲವಾಗಿದೆ. ಶ್ರೇಣಿಯ ಸಮಾಜಕ್ಕಾಗಿ ಇರುವ ಕಾನೂನು ಕಟ್ಟಳೆಗಳೇ ‘ಹಿಂದು ಧರ್ಮ’ ಎಂದಾಗಿದೆ, ಈ ಶ್ರೇಣಿಯ ಕಾನೂನು ಕಟ್ಟಳೆಗಳೇ ಇಲ್ಲಿ ಧರ್ಮವಾಗಿದೆ. ಇದು ಸಾವಿರಾರು ವರ್ಷಗಳಿಂದಲೂ ಧರ್ಮದ ವೇಷ ಹಾಕಿಕೊಂಡು ವಂಚಿಸಿ ವಂಚಿಸಿ ತನ್ನನ್ನು ಧರ್ಮವೆಂದೇ ಭಾವಿಸುವಂತೆ ಮಾಡಿಬಿಟ್ಟಿದೆ.

ತನ್ನ ವಂಚನೆಗಳಿಗೆ ಭಾರತದ ಮಹೋನ್ನತ ಜ್ಞಾನಶಾಖೆಗಳಾದ ದರ್ಶನಗಳನ್ನೂ ಬೌದ್ಧ-ಜೈನ ಧರ್ಮಗಳನ್ನೂ ಮಾತಾಡುವ ವಸ್ತುವಾಗಿ ಬಳಸಿಕೊಂಡಿದೆ. ದೇವರನ್ನೂ ಅವತಾರ ಎತ್ತಿಸಿದೆ. ಇದೆಲ್ಲಾ ಯಾತಕ್ಕಾಗಿ ಅಂದರೆ- ಶ್ರೇಣೀಕೃತ ಜಾತಿ ವರ್ಣ ಕಟ್ಟುಪಾಡುಗಳನ್ನು ಸುಪ್ತಪ್ರಜ್ಞೆಯಲ್ಲಿ ಸ್ಥಾಪಿಸುವುದಕ್ಕಾಗಿ. ಅದಕ್ಕಾಗೇ ಯಾವ ರಾಜ ಬಂದರೂ ರಾಜಧರ್ಮ ಅಂದರೆ ವರ್ಣವ್ಯವಸ್ಥೆಯನ್ನು ಕಾಪಾಡುವುದೇ ಆಗಿತ್ತು.

ಹಿಂದು ಆಗಿರುವುದೆಂದರೆ-ಇದ್ದ ಕಡೆ ಇರುವ ಶ್ರೇಣಿಯಲ್ಲಿ ಬಿದ್ದಿರು-ಎಂದೇ ಅರ್ಥ. ಇಲ್ಲಿರಬೇಕೆ? ಇಲ್ಲಿ ಅಸಮಾನತೆ ಕಟ್ಟಳೆಗಳ ವ್ಯಾಘ್ರನು ಧರ್ಮದ ಗೋಮುಖ ವೇಷದಲ್ಲಿದ್ದಾನೆ. ಹಿಂದೂ ಗೋಮುಖ ವ್ಯಾಘ್ರನಲ್ಲಿ ವ್ಯಾಘ್ರನ ಸಾಯಿಸಿದರೆ-ಅಂದರೆ ಶ್ರೇಣೀಕೃತ ಜಾತಿ ಕಟ್ಟಳೆ, ಅಸ್ಪೃಶ್ಯತೆಗಳ ಸಾಯಿಸಿದರೆ-ಇದೂ ಒಂದು ಧರ್ಮವಾಗಬಹುದು. ಇದು ಸಾಧ್ಯವೆ?

ಆದರೆ ಇದು ಸಾಧ್ಯವೇ ಎಂದು ಶ್ರೀ ಪೇಜಾವರರನ್ನು ಪ್ರಾತಿನಿಧಿಕ ಮಾಡಿಕೊಂಡು ಕೇಳುತ್ತಿದ್ದೇನೆ. ಅವತಾರ ಎತ್ತಿಸಿಯಾದರೂ ಜಾತಿಯ ಶ್ರೇಣಿಯು ಇಲ್ಲದಂತೆ ಹಿಂದೂ ಸಮಾಜ ರೂಪಿಸಿ ಅದನ್ನು ಧರ್ಮ ಮಾಡಲು ಸಾಧ್ಯವಿದೆಯೆ? ಇದಾಗದಿದ್ದರೆ, ಹಿಂದೂ ಸಮಾಜದ ದೇವಸ್ಥಾನ, ಮಠ, ಇತ್ಯಾದಿಗಳಲ್ಲಿ ಮಠಾಧೀಶ ಸ್ಥಾನ ಪೂಜೆ ಕಾರ್ಯ ಇತ್ಯಾದಿ ನಿರ್ವಹಣೆಗಳಲ್ಲಿ ಸಕಲೆಂಟು ಜಾತಿಗೂ ಪರ್ಯಾಯ ವ್ಯವಸ್ಥೆ ತರಲಾದರೂ ಸಾಧ್ಯವಿದೆಯೆ? ಉಡುಪಿಯಲ್ಲಿ ಅಷ್ಟಮಠಗಳ ಬದಲು ನವಮಠಗಳ ಪರ್ಯಾಯಕ್ಕಾಗಿ, ಡಿಮ್ಯಾಂಡ್ ಇಟ್ಟು ಕಾಯುತ್ತಿರುವವನಂತೆ ಇರುವ ಕನಕ ಇನ್ನೆಷ್ಟು ದಿನ ಕಾಯಬೇಕು? ಅಥವಾ ಅವನು ಹೊರಗಿರುವುದೇ ಧರ್ಮವೆ?

ನೀವು ದಲಿತ ಕೇರಿಗೆ ಪಾದವಿಟ್ಟರೆ ಅದನ್ನೆ ಧನ್ಯ ಎಂದುಕೊಳ್ಳುವ ಆ ದಲಿತ ಕೇರಿಯ ಮಗುವೊಂದು ನಿಮ್ಮನ್ನು ಪ್ರೀತಿಸಿ `ನಾನೂ ನಿಮ್ಮೊಡನೆ ಬರುತ್ತೇನೆ, ನನಗೂ ನೀವಾಗುವ ಆಸೆ’ ಎಂದರೆ ನೀವೇನು ಮಾಡುತ್ತೀರಿ? ಇಲ್ಲಿ ನೀವು ಅಂದರೆ ನೀವೇ ಅಲ್ಲ. ನಿಮ್ಮಂತೆ ಇರುವ ಎಲ್ಲರಿಗೂ ಇದು ಎದುರಾಗುತ್ತಿಲ್ಲ ಯಾಕೆ? ನಿಮ್ಮದೂ ಪತನದ ಸ್ಥಿತಿಯಲ್ಲವೇ? ನಿಮ್ಮಂಥವರಿಗೆ ಇಂಥವುಗಳನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಯಾಕೆಂದರೆ ಇಂಥವರ ದೇಹದೊಳಗಿನ ಆತ್ಮಸಾಕ್ಷಿ ಅಥವಾ ಸಾಕ್ಷಿಪ್ರಜ್ಞೆಯು ನೇಣಿಗೆ ಹಾಕಲ್ಪಟ್ಟಿರುತ್ತದೆ.

ಏಕೆಂದರೆ ಭಾರತದ ಸಮಾಜದ ಸುಪ್ತ ಮನಸ್ಸು ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೆ ಮೌಲ್ಯ ಮಾಡಿಬಿಟ್ಟಿದೆ. ಇದನ್ನು ಬಿತ್ತುವವರನ್ನು ಪೂಜ್ಯರು, ಶ್ರೀಶ್ರೀಶ್ರೀ, ಮಾತಾಡಿದರೆ ಆಶೀರ್ವಚನ, ಆಧ್ಯಾತ್ಮಿಕ ಚಿಂತಕರು, ಪರಮ ಪೂಜ್ಯರು ಇತ್ಯಾದಿ ಪಟ್ಟಕಟ್ಟಿದೆ.

ಈ ಪ್ರಭಾವಕ್ಕೆ ಒಳಗಾದವರೇ ಭಾರತದ ಸಂವಿಧಾನದ ಆಶಯಗಳನ್ನು ನಿರ್ಧರಿಸುವ ನಿರ್ವಹಿಸುವ ನಿರ್ಣಾಯಕ ಸ್ಥಾನಗಳಲ್ಲಿ ಹೆಚ್ಚಾಗಿ ಇರುವಾಗ, ಕಳೆದ ವರ್ಷದ ರಾಜ್ಯ ಬಜೆಟ್‍ನಲ್ಲಿ ದಲಿತರಿಗೆ ಮೀಸಲಿಟ್ಟ 4 ಸಾವಿರ ಕೋಟಿಗಳಲ್ಲಿ ಅರ್ಧದಷ್ಟನ್ನು ಕಾಟಾಚಾರಕ್ಕೆ ಖರ್ಚುಮಾಡಿ ಉಳಿಕೆ ಅರ್ಧವನ್ನು ಲ್ಯಾಪ್ಸ್ ಮಾಡಿರುವ ಕ್ರಿಯೆ ಇಲ್ಲಿ ಸಹಜವಲ್ಲವೆ? ದಲಿತರ ಮೀಸಲಾತಿ ಉದ್ಯೋಗದಲ್ಲಿ ದಲಿತೇತರರು ನುಸುಳಿ ಪಡೆಯುತ್ತಿರುವುದು ಇಲ್ಲಿ ಸಹಜ ಕ್ರಿಯೆ ತಾನೆ? ನಮಗೆ ಅನ್ಯಾಯಗಳು, ಅನ್ಯಾಯಗಳಾಗಿ ಬಂದು ಮುಟ್ಟುತ್ತಿಲ್ಲ.

ಕನ್ನಡದಲ್ಲಿ ಒಂದು ಪದ ಇದೆ- `ಪಾಪ’ ಅಂತ. ಇದನ್ನು ಪಾಪ (Sin)ಕ್ಕೂ ಬಳಸುತ್ತಾರೆ, ಹಾಗೇ ಕರುಣೆ (pity)ಗೂ ಬಳಸುತ್ತಾರೆ. ಪಾಪಕ್ಕೆ ಬಳಸಿದರೆ ಪಾಪಿಷ್ಟ ಆಗುತ್ತಾನೆ. ಕರುಣೆಗೆ ಬಳಸಿದರೆ ಪಾಪದವನು ಆಗುತ್ತಾನೆ. ಪಾಪದವನು ಒಂದು ಪಟ್ಟು ಪತನಗೊಂಡವನಾಗಿದ್ದರೆ, ಪಾಪಿಷ್ಟನು ನೂರು ಪಟ್ಟು ಪತನಗೊಂಡವನಾಗಿರುತ್ತಾನೆ. ಅಸ್ಪೃಶ್ಯತೆಗೆ ಅಥವಾ ತಾರತಮ್ಯಕ್ಕೆ ಒಳಗಾದವರು ಪಾಪದವರು ಆಗುತ್ತಾರೆ.

ಯಾಕೆಂದರೆ ಇವರ ಮನೋಭೂಮಿಕೆಯಲ್ಲಿ ಅಸ್ಪೃಶ್ಯತೆ ತಾರತಮ್ಯ ಇರುವುದಿಲ್ಲ. ಆದರೆ ಯಾರು ಅಸ್ಪೃಶ್ಯತೆ, ತಾರತಮ್ಯ ಆಚರಿಸುತ್ತಾರೋ ಅವರ ಮನೋಭೂಮಿಕೆಯಲ್ಲಿ ಅಸ್ಪೃಶ್ಯತೆ ತಾರತಮ್ಯಗಳೇ ತುಂಬಿರುತ್ತವೆ. ಈ ನಿಜದ ಎದುರು ಅಸ್ಪೃಶ್ಯತೆ ತಾರತಮ್ಯ ಆಚರಿಸುವವರು ಪಾಪಿಷ್ಟರಾಗುತ್ತಾರೆ. ‘ಗುಲಾಮನನ್ನು ಪಳಗಿಸಲು ಹೆಣಗುವ ಮಾಲೀಕನ ಮನಸ್ಸಿನ ತುಂಬಾ ಗುಲಾಮತನ ತುಂಬಿರುತ್ತದೆ’ -ಎಂಬ ಹೆಗಲ್‍ನ ನುಡಿಯ ನಿಜದಂತೆ.

ನಾವು ನಮ್ಮ ಸಮಾಜವನ್ನು ನೋಡುವ ನೋಟಕ್ಕೆ ಈ ನಿಜದ ದರ್ಶನವಾದರೆ ಇದು ಸಂವಿಧಾನದ ಆಶಯಗಳತ್ತ ನಾವಿಟ್ಟ ಮೊದಲ ಹೆಜ್ಜೆಯಾಗುತ್ತದೆ. ಇದು ಕಡು ಕಷ್ಟ. ಭಾರತೀಯ ಮನಸ್ಸಿನ ನಡೆ ಮತ್ತು ನುಡಿ ಸೀಳಿಹೋಗಿದೆ. ಅಸ್ಪೃಶ್ಯತೆ ಪಾಪ ಎಂದರೆ ಹೌದೆನ್ನುವ ಭಾರತೀಯ ಮನಸ್ಸು ಅದೇ ಅಸ್ಪೃಶ್ಯತೆ ಆಚರಿಸುವವರು ಪಾಪಿಷ್ಟರು ಎಂದರೆ ಬೆಚ್ಚಿ ಬೀಳುತ್ತದೆ. ವ್ಯವಹಾರಕ್ಕೆ ವೇದವನ್ನು ನಡೆದುಕೊಂಡು, ಆದರ್ಶಕ್ಕೆ ವೇದಾಂತ ಎಂದರೆ ಉಪನಿಷತ್ತನ್ನು ಮಾತಿನ ಕಾಲಕ್ಷೇಪ ಮಾಡಿದ್ದೇ ಕಾರಣವೂ ಇರಬಹುದು.

ಆದರೆ ಈ ಪಾಪದವರೂ ಎಚ್ಚರದ ಸ್ಥಿತಿಯಲ್ಲಿ ಇಲ್ಲ. ಮಧ್ಯಮ ಜಾತಿಗೆ ಸೇರಿದ ನನ್ನ ಗೆಳೆಯನೊಬ್ಬ- “ಒಂದು ಚೋಟುದ್ದ ಬ್ರಾಹ್ಮಣ ಹುಡುಗ ಅವನು. ನಮ್ಮ ವಯಸ್ಸಾದ ಅಪ್ಪನಿಗೇನೆ `ಏನಯ್ಯ ಗೌಡ, ಚೆನ್ನಾಗಿದ್ದೀಯಾ?’ ಅಂತ ಏಕವಚನದಲ್ಲಿ ಕೇಳ್ತಾನಲ್ಲಯ್ಯ!” ಎಂದು ಕುಪಿತನಾಗಿ ಹೇಳಿದ. ನಾನು ಅವನಿಗೆ ‘ಸರಿಯಪ್ಪ, ನೀನು ಚಿಕ್ಕವನಾಗಿದ್ದಾಗ ನಮ್ಮ ಜಾತಿಯ ವಯಸ್ಸಾದವರಿಗೆ ಯಾವ ವಚನದಲ್ಲಿ ಕರೆಯುತ್ತಿದ್ದೆ?’ ಎಂದು ಕೇಳಿದೆ. ಇಂಥವರಲ್ಲಿ ಸ್ವಾಭಿಮಾನದ ಎಚ್ಚರ ಅಂದರೆ ತನ್ನದು ಮಾತ್ರ ಆಗಿರುತ್ತದೆ, ಇನ್ನೊಂದರ ಪರಿವೆ ಇರುವುದಿಲ್ಲ.

ಹಾಗೇ ದಲಿತರ ಮನಸ್ಥಿತಿಗೆ ಬಂದರೂ ಸಣ್ಣ ಪುಟ್ಟದಾದರೂ ಇದನ್ನೇ ಕಾಣುತ್ತೇವೆ. ಭಾರತದ ಬಹುತೇಕ ಸಮುದಾಯಗಳು ಹೀಗೇ ಇವೆ. ರಸಾಯನಶಾಸ್ತ್ರದಲ್ಲಿ ಬರುವ ಪರ್ಯಾಪ್ತ ದ್ರಾವಣ (Saturated solution)ದಂತೆ ಎಲ್ಲಾ ಜಾತಿಗಳು ತಂತಮ್ಮ ಕೊನೆ ಸ್ಥಿತಿ ತಲುಪಿ, ಅಸ್ಪೃಶ್ಯತೆ ತಾರತಮ್ಯಗಳು ನಡೆದು ಬಂದ ಪದ್ಧತಿಗಳಾಗಿ ಎಚ್ಚರವಿಲ್ಲದೆ ತಮಗೆ ತಾವೇ ನಡೆದುಕೊಂಡು ಬರುತ್ತಿವೆ. ನಾವು ಅದರೊಳಗೇ ಸಂಪೂರ್ಣ ಮುಳುಗಿಹೋಗಿರುವುದರಿಂದ ಅದರ ಐಬನ್ನು ಅರಿವಿಗೆ ತಂದುಕೊಳ್ಳುವುದಕ್ಕೇ ಹರಸಾಹಸ ಪಡಬೇಕಿದೆ.

ಈಗ ಭಾರತದಲ್ಲಿ ವರ್ತಮಾನದ ಸಂವಿಧಾನವೇನೊ ಪಾಪದವರನ್ನು ಮೇಲೆತ್ತಲು ಕೈಚಾಚಿದೆ. ಆದರೆ ಭೂತಕಾಲದ ಸಂವಿಧಾನ ಕಾಲೆಳೆಯುತ್ತಿದೆ. ಈ ಪಾಪದವರೂ ಎಚ್ಚರದಲ್ಲಿಲ್ಲ. ಸಂವಿಧಾನದ ಆಶಯಗಳ ಕಾಲೆಳೆಯುವ ಪಾಪಿಷ್ಟರಾದರೋ ಸಮಾಜದಲ್ಲಿ ಗಣ್ಯರೆನ್ನಿಸಿಕೊಂಡಿದ್ದಾರೆ. ಇವರ ವಂಶಸ್ಥರೇ ಇವರ ಪ್ರಭಾವದಲ್ಲಿರುವವರೇ ನಿರ್ಧರಿಸುವವರು ನಿರ್ವಹಿಸುವವರು ಆಗಿದ್ದಾರೆ. ಸಂವಿಧಾನದ ಆಸೆಗಳು ಈಡೇರುವುದಾದರೂ ಹೇಗೆ?

ಬಸ್ಸು ರೈಲು ಕಾರಣಕ್ಕಾಗಿ ಅಕ್ಕಪಕ್ಕ ಕೂತಿದ್ದೇವೆ. ಹೊಟೇಲ್ ಕಾರಣಕ್ಕಾಗಿ ಸಹಪಂಕ್ತಿ ಭೋಜನ ಮಾಡಿದ್ದೇವೆ. ನೌಕರಿ ಕಾರಣಕ್ಕಾಗಿ ಒಟ್ಟಾಗಿ ಓಡಾಡಿದ್ದೇವೆ, ಅಲ್ಲಿ ಇಲ್ಲಿ ಮದುವೆಗಳೂ ಆಗಿವೆ. ಇಲ್ಲಿ ಆಗುತ್ತಿರುವ ಬದಲಾವಣೆಗಳು ಹೆಚ್ಚಾಗಿ ಬಹಿರಂಗ ಒತ್ತಡದವು. ಅಂತರಂಗ ಕತ್ತಲಲ್ಲೆ ಇದೆ.

ಏನೇನು ಮಾಡಬಹುದಿತ್ತು? ಮೊದಲ ಹೆಜ್ಜೆಯಾಗಿ, ವರ್ತಮಾನದ ಸಂವಿಧಾನದ ಆಶಯಗಳಿಗೆ ತಕ್ಕಂತೆ ಪ್ರಜೆಗಳನ್ನು ರೂಪಿಸಲು ಶಿಕ್ಷಣ ಕ್ಷೇತ್ರವನ್ನು ತೆಪ್ಪ ಮಾಡಿಕೊಳ್ಳಬಹುದಿತ್ತು. ಶಿಕ್ಷಣ ಪಡೆಯುವ ಎಳೆಯರು ಆ ವಿದ್ಯೆಯಲ್ಲೆ ನಾಗರಿಕರೂ ಆಗುವಂತೆ ಶಿಕ್ಷಣವನ್ನೂ ರೂಪಿಸಬಹುದಿತ್ತು. ಸಮಾಜದಲ್ಲಿ ಅಸ್ಪೃಶ್ಯತೆ ತಾರತಮ್ಯ ಆಚರಿಸುವವರ ಬಗ್ಗೆ ಆ ಪದ್ಧತಿಗಳ ಬಗ್ಗೆ ಇರುವ ಭಯ ಭಕ್ತಿಗಳಲ್ಲಿ- ಭಯ ಇರಲಿ, ಆದರೆ ಭಕ್ತಿಯನ್ನು ಇಲ್ಲದಂತೆ ಮಾಡಬೇಕಿತ್ತು. ಭಕ್ತಿಯು ಅಪಮೌಲ್ಯವನ್ನೇ ಮೌಲ್ಯವಾಗಿಸಿ ಬಿಡಲೂಬಹುದು.

ಈ ಅಪಾಯದ ಅರಿವು ನಮಗಿರಬೇಕಿತ್ತು. ಈ ಅರಿವು ನಮಗೆ ಇದ್ದಿದ್ದರೆ.. ನಮ್ಮ ಶಿಕ್ಷಣದ ಪಠ್ಯ, ನಾವು ನೋಡುವ ದೃಷ್ಟಿಕೋನ ಎಲ್ಲವೂ ಹೊಸತಾಗಿ ಬಿಡುತ್ತಿತ್ತು. ಆಗ ಕೇವಲ ಮನುಷ್ಯ ಪ್ರಜ್ಞೆ ಕೆಲಸ ಮಾಡುತ್ತದೆ. ಆಗ ತಾರತಮ್ಯ ಮೌಲ್ಯವಾಗಿಸುವವರು ಪಳೆಯುಳಿಕೆಗಳಂತೆ ನಮ್ಮ ಸಮಾಜಶಾಸ್ತ್ರಜ್ಞರಿಗೆ ಕಾಣಬಹುದು. ಆಗ ಇಂಥವು ಸಾಮಾಜಿಕ ಸಾಂಸ್ಕೃತಿಕ ಅನಿಷ್ಟ ಪದ್ಧತಿಗಳು ಎಂದೋ ಅಥವಾ ಸಾಮಾಜಿಕ ಸಮಸ್ಯೆಗಳು ಎಂದೋ ಅಧ್ಯಯನದ ವಸ್ತುವಾಗುತ್ತಿತ್ತು.

ರಾಜ್ಯಶಾಸ್ತ್ರದಲ್ಲಿ- ಸಂವಿಧಾನ ಅನುಷ್ಠಾನಕ್ಕೆ ಇರುವ ತೊಡಕುಗಳ ಪಟ್ಟಿಯಲ್ಲಿ ಇದೂ ಸೇರ್ಪಡೆಯಾಗುತ್ತಿತ್ತು. ಮನಃಶಾಸ್ತ್ರದ ಸಮ್ಮೋಹಿನಿ ತಜ್ಞರು ಈ ಸುಪ್ತಪ್ರಜ್ಞೆಯ ತಾರತಮ್ಯಗಳನ್ನು ತಮ್ಮ ಅಧ್ಯಯನ ವಿಷಯ ಎಂದು ಪರಿಗಣಿಸಿ ಭೂತೋಚ್ಛಾಟನೆಯ ವಿಧಿವಿಧಾನಗಳನ್ನು ಕಂಡು ಹಿಡಿಯುವ ಪ್ರಯತ್ನಗಳೂ ಆಗುತ್ತಿದ್ದವು. ಶಿಕ್ಷಣತಜ್ಞರಿಂದ ಸಂವಿಧಾನದ ಆಶಯಗಳಿಗೆ ಪಠ್ಯ ರಚನೆಯಾಗುತ್ತಿತ್ತು -ಹೀಗೆ.

ಆದರೆ ಭಾರತದ ಶಿಕ್ಷಣ ಕ್ಷೇತ್ರಕ್ಕೆ ಬಂದರೆ ಇಲ್ಲೂ ಏನಾಗಿದೆ? ಹಿಂದೆ ದ್ವಿಜರಲ್ಲದವರಿಗೆ ವಿದ್ಯೆ ವಂಚಿಸಲ್ಪಟ್ಟಿತ್ತು. ಈಗ ವರ್ತಮಾನದ ಸಂವಿಧಾನದಲ್ಲಿ ವಿದ್ಯೆ ಎಲ್ಲರಿಗೂ ಮುಕ್ತವಾಗಿದೆ, ನಿಜ. ಆದರೆ ಕೊಟ್ಟಂತೆ ಕಾಣಿಸುತ್ತ ಸಹಜವಾಗೇ ಹೊರಗಿಡುವ ಸಂಚೂ ಜೊತೆಗೇ ಜರುಗುತ್ತಿದೆ. ಏಕರೂಪದ ಶಿಕ್ಷಣ ಪದ್ಧತಿ ಇಲ್ಲದೆ, ಪ್ರಾಥಮಿಕ ಶಿಕ್ಷಣದಲ್ಲಾದರೂ ಮಾತೃಭಾಷೆ ಮಾಧ್ಯಮವಾಗದೆ, ಕಡ್ಡಾಯ ಶಿಕ್ಷಣದಲ್ಲಿ ಕಡ್ಡಾಯ ಇಲ್ಲದೆ, ಮುಖ್ಯವಾಗಿ ಗ್ರಾಮೀಣ ಭಾರತವು ಸಹಜವೊ ಎಂಬಂತೆ ಹೊರ ಹಾಕಲ್ಪಡುತ್ತಿದೆ.

ಎಲ್ಲರಿಗೂ ಶಿಕ್ಷಣ ನೀಡಬೇಕೆಂಬ ಆಧುನಿಕ ಪ್ರಜ್ಞೆಯನ್ನು, ಶಿಕ್ಷಣ ಕೊಡಬಾರದೆನ್ನುವ ಸನಾತನ ಸುಪ್ತಪ್ರಜ್ಞೆಯೂ ನಿಯಂತ್ರಿಸುತ್ತಿರುವುದರ ಪರಿಣಾಮದಿಂದ ಇದಾಗುತ್ತಿರಬಹುದೇನೊ. ಇಲ್ಲೂ ತಾರತಮ್ಯವೇ. ಇದಕ್ಕೆ ನಾವು ಬೆಚ್ಚುತ್ತಿಲ್ಲ, ಬೆದರುತ್ತಿಲ್ಲ. ಮೊದಲು ಶಿಕ್ಷಣ ಕ್ಷೇತ್ರದಲ್ಲಿ ನಾವು ಎಚ್ಚೆತ್ತುಕೊಂಡು ಮನುಷ್ಯರಾದರೆ ಉಳಿದುದೆಲ್ಲಾ ತಂತಾನೆ ಕಾಣಬಹುದೇನೋ.

ಭಾರತದ ಇಂದಿನ ಸ್ಥಿತಿಗೆ ಒಂದು ಚಿತ್ರಣ ಕೊಟ್ಟು ಮುಗಿಸುತ್ತೇನೆ. ತುಂಬಾ ಹಿಂದೆ, ಹಳ್ಳಿಯೊಂದರಲ್ಲಿ ದಲಿತರಿಗೆ ಪ್ರವೇಶವಿಲ್ಲದ ಕಾರಣಕ್ಕೆ ಗಲಾಟೆಯಾಗಿ ಅಲ್ಲಿಗೆ ಹೋಗಿದ್ದೆವು. ಹೋಗಿ ನೋಡಿದರೆ, ಆ ಹೊಟೇಲ್ ಅಂದರೆ ಅದು ಜಗುಲಿ ಮೇಲೆ ತೆಂಗಿನ ಗರಿ ಕಟ್ಟಿದ ಒಂದು ಕತ್ತಲು ತುಂಬಿದ ಜೋಪಡಿಯಾಗಿತ್ತು. ಅಲ್ಲಿ ನೊಣಗಳ ಸಾಮ್ರಾಜ್ಯವಿತ್ತು. ಬಚ್ಚಲು ಪಕ್ಕದಲ್ಲೆ ಹರಿಯುತ್ತ ಮೂಗು ಮುಚ್ಚಿಕೊಂಡು ಏನಾರು ತಿನ್ನಬೇಕಿತ್ತು.

ಈ ಹೊಟೇಲ್ ಪ್ರವೇಶಕ್ಕೆ ದಲಿತರು ಹಾತೊರೆಯುತ್ತಿದ್ದರು. ಆ ದೃಶ್ಯ ನೋಡಿದ ನನ್ನ ಜೊತೆಗಿದ್ದ ಶ್ರೀಕೃಷ್ಣಆಲನಹಳ್ಳಿ ‘ಅಯ್ಯೋ ಮಾದೇವ, ಇಲ್ಲಿ ದಲಿತರು ಏನನ್ನೂ ತಿನ್ನದಿದ್ದರೇನೇ ಆರೋಗ್ಯವಲ್ಲವೆ?’ ಎಂದಿದ್ದರು. ಅದಕ್ಕೆ ನಾನು ‘ಪ್ರವೇಶ ಕೇಳುತ್ತಿರುವುದು ಮನಸ್ಸಿನ ಒಳಕ್ಕೆ’ ಎಂದಿದ್ದೆ.

ಭಾರತದ ಸ್ಥಿತಿಯೂ ಹೆಚ್ಚುಕಮ್ಮಿ ಆ ಹೊಟೇಲ್‍ನ ಕತೆಯಂತೆಯೇ ಇದೆ. ಇಲ್ಲಿ ಕೊಳಕುತನವಿದೆ, ಅನಾರೋಗ್ಯವಿದೆ, ಬಡತನವಿದೆ, ಅಜ್ಞಾನವು ತುಂಬಿದೆ. ಇಷ್ಟಿದ್ದೂ ಹೀಗಿದ್ದೂ ಭಾರತವು ಸ್ವಾತಂತ್ರ್ಯ ಪಡೆದ ನಂತರ ರಾಜರ ಆಳ್ವಿಕೆ ಕೊನೆಗೊಳಿಸಿದ್ದೂ, ವಯಸ್ಕರ ಮತದಾನ ಪದ್ಧತಿ ತಂದಿದ್ದೂ, ತನ್ನ ಮಿತಿಗಳೊಡನೆ ಶಿಕ್ಷಣವನ್ನು ಸರ್ವರಿಗೂ ಮುಕ್ತಗೊಳಿಸಿದ್ದೂ, ಭೂಸುಧಾರಣೆ, ಮೀಸಲಾತಿ ಇತ್ಯಾದಿ ಈ ನೆಲದಲ್ಲಿ ಸಂಭವಿಸಿರುವುದು ಸಾಮಾನ್ಯ ಸಂಗತಿಗಳೇನೂ ಅಲ್ಲ.

ಇದಕ್ಕೆ ಕಾರಣ- ಭಾರತದಲ್ಲಿ ಬುದ್ಧ, ವಚನಕಾರರಂಥವರ ಮಹೋನ್ನತ ಪರಂಪರೆಯ ಬೆಳಕು ಇರುವುದೂ ಅವರು ಉಸಿರಾಡಿದ ಗಾಳಿ ಅವರಿಟ್ಟ ಹೆಜ್ಜೆ ಗುರುತುಗಳು ಇರುವುದೂ ಈ ಮಹೋನ್ನತ ಪರಂಪರೆಯೂ ಭಾರತದ ಉನ್ನತ ಮನಸ್ಸುಗಳನ್ನು ಒಂದಿಷ್ಟು ಸೆಳೆದು ಕೈಹಿಡಿದು ನಡೆಸುತ್ತಿರುವುದೂ ಕಾರಣವಾಗಿರಬಹುದು. ಈ ಉನ್ನತ ಪರಂಪರೆಯ ಹೆಜ್ಜೆಗಳನ್ನು ಗುರುತಿಸಿ ನಾವು ಹೆಜ್ಜೆ ಇಟ್ಟರೆ ಆಗ ಸಂವಿಧಾನದ ಆಸೆಗಳು ಕೈಗೂಡಲೂಬಹುದು.

(‘ಎದೆಗೆ ಬಿದ್ದ ಅಕ್ಷರ’ ಸಂಕಲನದಿಂದ ಆಯ್ದ ಒಂದು ಬರಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

Trending