Connect with us

ದಿನದ ಸುದ್ದಿ

ಭಾರತದ ಸಂವಿಧಾನ ದಿನದ ಮಹತ್ವ

Published

on

  • ಸಿದ್ದು.ಮಮದಾಪೂರ, ವಿಜಯಪುರ

ಭಾರತದ ಸಂವಿಧಾನ ಇಡೀ ಪ್ರಪಂಚದ ಗಮನವನ್ನೇ ಸೆಳೆದಿರುವುದು ನಮಗೆ ಹೆಮ್ಮೆ ತರುವ ವಿಷಯ. ಸಂವಿಧಾನ ಎಂಬುವುದು ಜೀವನದ ಪ್ರಮುಖ ಘಟ್ಟ, ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವುದು ಹಾಗೂ ಸಂವಿಧಾನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ.

ಭಾರತದ ಆಡಳಿತ ವ್ಯವಸ್ಥೆ ಸಂವಿಧಾನದ ಮೇಲೆ ಅವಲಂಬಿತವಾಗಿದ್ದು, ದೇಶ ಅತೀ ವೇಗದಲ್ಲಿ ಆರ್ಥಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ, ಮುಂತಾದ ಎಲ್ಲಾ ರಂಗಗಳಲ್ಲಿಯೂ ಬೆಳೆಯುತ್ತಿರಲು ಸಂವಿಧಾನ ಬಹುಮುಖ್ಯ ಪಾತ್ರ ವಹಿಸುತ್ತಿದೆ.

ಸಂವಿಧಾನದ ಮಹತ್ವದ ತಿಳಿಯಬೇಕು

ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಸಂವಿಧಾನ ಎಂದು ಹೇಳಲಾಗುತ್ತದೆ. ಇದು ಸದ್ಯ 448 ವಿಧಿಗಳು 12 ಪರಿಚ್ಛೇದಗಳು 101 ತಿದ್ದುಪಡಿಗಳನ್ನು ಹೊಂದಿದೆ. ಇಂತಹ ಬೃಹತ್ ಸಂವಿಧಾನವು ಜನೆವರಿ 26 1950 ರಂದು ಇದನ್ನು ಜಾರಿಗೆ ತರಲಾಯಿತು. ಆ ದಿನವನ್ನು ಗಣರಾಜ್ಯ ದಿನ ಎಂದು ಗೊಷಿಸಲಾಯಿತು.

ಆದರೆ ಇದಕ್ಕೂ ಮುಂಚೆ ನವಂಬರ್ 26 ರಂದು ಸಂಸತ್ತಿನ ಶಾಸನ ಸಭೆಯಲ್ಲಿ ಅಂಬೇಡ್ಕರರು ಸಂವಿಧಾನವನ್ನು ಮಂಡಿಸಿ ಮಾತನಾಡಿದ ದಿನವನ್ನೇ ಈಗ ಸಂವಿಧಾನದ ದಿನ ಎಂದು ಆಚರಿಸಲಾಗುತ್ತಿದೆ. ಅಂಬೇಡ್ಕರರವರು ಅಂದು ನವಂಬರ್ 26ರಂದು ಶಾಸನ ಸಭೆಯಲ್ಲಿ ಮಾತನಾಡುತ್ತಾ “ಜನವರಿ 26, 1950ರಂದು ನಾವು ವೈರುಧ್ಯಗಳ ಬದುಕಿಗೆ ಕಾಲಿಡಲಿದ್ದೇವೆ.‌

ರಾಜಕೀಯದಲ್ಲಿ, ನಮಗೆ ಸಮಾನತೆಯಿರುತ್ತದೆ ಆದರೆ ಸಾಮಾಜಿಕ ಹಾಗೂ ಆರ್ಥಿಕ ಸಂರಚನೆಗಳಲ್ಲಿ ಅಸಮಾನತೆಯಿರುತ್ತದೆ; ಒಬ್ಬ ಮನುಷ್ಯ ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸುತ್ತಲೇ ಹೋಗುತ್ತಿರುತ್ತೇವೆ. ಈ ವೈರುಧ್ಯಗಳ ಬದುಕನ್ನು ಎಷ್ಟು ದಿನ ಹೀಗೇ ಮುಂದುವರೆಸಿಕೊಂಡು ಹೋಗುತ್ತೇವೆ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಬದುಕಿನಲ್ಲಿ ಸಮಾನತೆಯ ನಿರಾಕರಣೆಯನ್ನು ಎಷ್ಟು ದಿನ ಹೀಗೇ ಮುಂದುವರೆಸುತ್ತೇವೆ?

ಬಹಳ ಕಾಲ ಹೀಗೇ ಇದು ಮುಂದುವರೆಯಿತೆಂದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನೇ ತೊಂದರೆಗೆ ಸಿಲುಕಿಸುತ್ತಿದ್ದೇವೆ ಎಂದೇ ಅರ್ಥ. ನಾವು ಆದಷ್ಟು ಬೇಗನೇ ಈ ವೈರುಧ್ಯವನ್ನು ನಿವಾರಿಸಿಕೊಳ್ಳಬೇಕು. ಇಲ್ಲವಾದರೆ ಅಸಮಾನತೆಯಿಂದ ನರಳುತ್ತಿರುವವರು ಈ ಸಂವಿಧಾನ ರಚನಾ ಸಭೆಯು ಇಷ್ಟು ಶ್ರಮವಹಿಸಿ ಕಟ್ಟಿರುವ ಪ್ರಜಾಪ್ರಭುತ್ವದ ಸೌಧವನ್ನೇ ಪುಡಿಗಟ್ಟಿಬಿಡುತ್ತಾರಷ್ಟೆ” ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ರವರು ಶಾಸನ ಸಭೆಯ ಮುಂದೆ ಇಡುತ್ತಾರೆ.

ಆದ್ದರಿಂದ ಸರ್ಕಾರವು ಈ ದಿನವನ್ನು ಸ್ಮರಣಿಯ ಗೊಳಿಸುವ ಸಲುವಾಗಿ ಭಾರತ ಸರ್ಕಾರವು 2015 ರಲ್ಲಿ ಅಂಬೇಡ್ಕರರ 125ನೇ ಜನ್ಮೊತ್ಸವದ ಆಚರಣೆಯ ಸಂಧರ್ಭದಲ್ಲಿ ನವಂಬರ್ 19 ರಂದು ತನ್ನ ಗೆಜೆಟ್ನಲ್ಲಿ ನವಂಬರ್ 26 ನ್ನು ಸಂವಿಧಾನ ದಿವಸ್ ಎಂದು ಪ್ರಕಟಣೆಯನ್ನು ಹೊರಡಿಸಿತು.ಅಂದಿನಿಂದ ಇದನ್ನು ಸಂವಿಧಾನದ ಮಹತ್ವ ಮತ್ತು ಅಂಬೇಡ್ಕರರ ವಿಚಾರಧಾರೆಗಳನ್ನು ಜನರಲ್ಲಿ ಬಿತ್ತುವ ನಿಟ್ಟಿನಲ್ಲಿ ಈ ದಿನವನ್ನು ಸರ್ಕಾರ ಅಧಿಕೃತವಾಗಿ ಆಚರಿಸುತ್ತಾ ಬರುತ್ತಿದೆ.ಇದಕ್ಕೂ ಮೊದಲು ಈ ದಿನವನ್ನು ಕಾನೂನು ದಿನ ಎಂದು ಸಹ ಆಚರಿಸಲಾಗುತಿತ್ತು.

ಪ್ರಧಾನಿ ಮೋದಿಯವರು 2015 ರ ಅಂಬೇಡ್ಕರ್ ರವರ ವರ್ಷಪೂರ್ತಿ ಆಚರಣೆಗೆ ಚಾಲನೆಯನ್ನು ಮುಂಬೈನ ಅಂದು ಮಿಲ್ಸ್ ಕಂಪೌಂಡ್ ನಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿಸುವದರ ಮೂಲಕ ಚಾಲನೆ ನೀಡಿದರು. ಈ ದಿನದಂದು ಸರ್ಕಾರವು ಪ್ರತಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಿಧ್ಯಾರ್ಥಿಗಳಿಗೆ ಓದಿಸಲಾಗುತ್ತದೆ. ಆದರೆ ಈ ವರ್ಷ ಕೋವಿಡ್ 19 ಕೊರೊನಾ ರೋಗದಿಂದ ಇರುವುದರಿಂದ ಸರ್ಕಾರಿ ಇಲಾಖೆಯಲ್ಲಿ ಆಚರಣೆ ಮಾಡಲು ಆದೇಶ ನೀಡಿದೆ…

ಭಾರತ ಸಂವಿಧಾನದ ಸ್ವಾರಸ್ಯಗಳಿವು..!

  • ಭಾರತದಲ್ಲಿ ಸಂವಿಧಾನವನ್ನು 1949ರ ನವೆಂಬರ್ 26ರಂದು ಸ್ವೀಕರಿಸಲಾಯಿತು. ಇದು 1950ರ ಜನವರಿ 26ರಂದು ಅನುಷ್ಠಾನಕ್ಕೆ ಬಂತು.
  • ಭಾರತದ ಸಂವಿಧಾನವು ಟೈಪ್ ಮಾಡಿರುವುದಲ್ಲ ಅಥವಾ ಮುದ್ರಿತವೂ ಅಲ್ಲ. ಅದನ್ನು ಕೈಯಲ್ಲಿ ಬರೆಯಲಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿದೆ.
  • ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ ಸಂರಕ್ಷಿಸಲಾಗಿದ್ದು, ಇದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.
  • ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ.
  • ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತದ ಪರಿಕಲ್ಪನೆಗಳನ್ನು ಫ್ರಾನ್ಸ್ ಸಂವಿಧಾನದಿಂದ ಪಡೆಯಲಾಗಿದೆ.
  • ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದೆ.
  • ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆ
    ಸುಪ್ರೀಂಕೋರ್ಟ್ ಕಾರ್ಯನಿರ್ವಹಣೆಯ ಕಾನೂನನ್ನು ಜಪಾನ್‍ನಿಂದ ಎರವಲು ಪಡೆಯಲಾಗಿದೆ.
  • ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ.
  • ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳಿವೆ.
  • ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರು.
  • ಇದರ ಕರಡನ್ನು 1949ರ ನವೆಂಬರ್‍ನಲ್ಲಿ ಸಲ್ಲಿಸಲಾಯಿತು. ಸಲ್ಲಿಕೆ ಬಳಿಕ ಅದನ್ನು ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು.
  • ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ ದಾಖಲೆಗೆ ಸಹಿ ಮಾಡಿದರು.
  • 1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ (ಜಾರಿಗೆ ) ಬಂತು.ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ (ಜ.26) ಅಳವಡಿಸಿಕೊಳ್ಳಲಾಯಿತು.
  • ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲೊಂದು ಎಂದು ಹೇಳಲಾಗಿದೆ. ಏಕೆಂದರೆ ಇದಕ್ಕೆ ಕಾಲಕಾಲಕ್ಕೆ ತಿದ್ದುಪಡಿ ತರಬಹುದು.

ನಮ್ಮ ದೇಶದಲ್ಲಿ ಅಭಿವೃದ್ಧಿ ಸಾಧಿಸಲು, ನಮ್ಮ ಸಂವಿಧಾನ ಭಾತೃತ್ವ, ಸಹೋದರತೆ, ಸಮಾನತೆಯ ನೆಲೆಯಿಂದ ಕೂಡಿದೆ. ಮಹಿಳೆಯರು, ದಲಿತರು, ಬುಡಕಟ್ಟು ಸಮುದಾಯ ಸೇರಿ ಎಲ್ಲ ವರ್ಗೀಯ ಜನರು ತಲೆ ಎತ್ತಿ ಬದುಕಲು ಸಂವಿಧಾನ ಅವಕಾಶ ಕಲ್ಪಸಿಕೊಟ್ಟಿದೆ.

ಸಂವಿಧಾನ ಧ್ವನಿ ಇರದವರಿಗೆ, ಧ್ವನಿಯಾಗುವ ಮೂಲಕ ಅವರ ಹಕ್ಕುಗಳನ್ನು ತಂದುಕೊಟ್ಟಿದೆ. ಇಂಥ ಸಂವಿಧಾನ ಕೊಡುಗೆಯಾಗಿ ನೀಡಿದ ಡಾ| ಅಂಬೇಡ್ಕರ ಅವರಿಗೆ ಭಾರತೀಯರಾದ ನಾವೆಲ್ಲ ಸದಾ ಋಣಿಯಾಗಿರಬೇಕು. ದೇಶದಲ್ಲಿ ಹಲವಾರು ಜಾತಿ, ಧರ್ಮ, ಮತ, ಪಂಗಡಗಳಿದ್ದರೂ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸ್ವತಂತ್ರವಾಗಿ ಸಂತಸದಿಂದ ಬದುಕಲು ಸಂವಿಧಾನವೇ ಕಾರಣವಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending