ದಿನದ ಸುದ್ದಿ
ದಾವಣಗೆರೆ | ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ : ನ್ಯಾ.ನಾಗಮೋಹನ ದಾಸ್
ಸುದ್ದಿದಿನ,ದಾವಣಗೆರೆ : ದೇಶದ ಬಹುತ್ವವನ್ನು ರಕ್ಷಿಸಿಕೊಂಡು ಬರುತ್ತಿರುವ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ, ಅರ್ಥೈಸಿಕೊಂಡು ಅದರಂತೆ ನಡೆಯಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ, ಸಹಯಾನ ಮತ್ತು ಸಮುದಾಯ ಕರ್ನಾಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜು. 19 ರ ರಂದು ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ಸಂವಿಧಾನ ಓದು ಕಾರ್ಯಗಾರ’ ಉದ್ಘಾಟಿಸಿ ಮಾತನಾಡಿ, ಪಿಪಿಟಿ ಪ್ರದರ್ಶನದ ಮೂಲಕ ಭಾರತ ಸಂವಿಧಾನ ರಚನೆ, ಮೂಲತತ್ವಗಳು-ಸವಾಲುಗಳು ಕುರಿತು ವಿವರಣೆ ನೀಡಿದರು.
ರಾಜಕೀಯ ಅಧಿಕಾರ ಎಂದರೇನು ಎಂಬುದನ್ನು ತಿಳಿಯಬೇಕು. ಕಾನೂನು ಮಾಡುವುದು ಶಾಸಕಾಂಗ, ಇದನ್ನು ಜಾರಿಗೆ ತರುವುದು ಕಾರ್ಯಾಂಗ ಮತ್ತು ಈ ಕಾನೂನುಗಳನ್ನು ಉಲ್ಲಂಘನೆ ಮಾಡಿದರೆ ಶಿಕ್ಷಿಸುವುದು ನ್ಯಾಯಾಂಗ. ಈ ಅಂಗಗಳ ಕಾರ್ಯವೈಖರಿ ನಿಯಂತ್ರಿಸುವುದು ಸಂವಿಧಾನ. ಹಿಂದೆ ರಾಜರುಗಳ ಕೈಯಲ್ಲಿ ಈ ಎಲ್ಲ ಅಧಿಕಾರಿಗಳಿದ್ದವು. ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆ ಬಂತು. ಇಂದು 199 ರಾಷ್ಟ್ರಗಳ ಪೈಕಿ 190 ರಾಷ್ಟ್ರಗಳು ತಮ್ಮದೇ ಆದ ಸಂವಿಧಾನವನ್ನು ಹೊಂದಿವೆ.
ನಾವು ನಮ್ಮ ಸಂವಿಧಾನವನ್ನು ಓದಿ ಅರ್ಥೈಸಿಕೊಂಡು ಅದರಂತೆ ನಡೆಯಬೇಕು. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಲ್ಲಿ ಪಠ್ಯದಲ್ಲಿ ಅಳವಡಿಸಿರುವ ಸಂವಿಧಾನವನ್ನು ವಿದ್ಯಾರ್ಥಿಗಳು ಕೇವಲ 35 ಅಂಕ ಪಡೆಯುವ ಉದ್ದೇಶದಿಂದ ಓದುತ್ತಿದ್ದಾರೆ. ಹೀಗಾದರೆ ಇದನ್ನು ಅರ್ಥೈಸಿಕೊಂಡು ಇದರ ಆಶಯಗಳನ್ನು ಮೈಗೂಡಿಸಿಕೊಳ್ಳಲು ಹೇಗೆ ಸಾಧ್ಯ. ಸಂವಿಧಾನವನ್ನು ಎಲ್ಲರೂ ತಿಳಿಯಬೇಕೆಂಬ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂವಿಧಾನ ಓದು ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.
ಭಾರತ 1947 ರಲ್ಲಿ ಸ್ವಾತಂತ್ರ್ಯ ಪಡೆದ ದೇಶ. 1950 ರಲ್ಲಿ ವಿಶ್ವದಲ್ಲೇ ಅತಿದೊಡ್ಡ ಮತ್ತು ಮಹತ್ತರವಾದ ಸಂವಿಧಾನವನ್ನು ರಚಿಸಿತು. ಸಂವಿಧಾನ ಜಾರಿಯಾದ ಈ 70 ವರ್ಷಗಳಲ್ಲಿ ನಾವು ಸಾಧಿಸಿದ್ದೇನು ಎಂಬ ಪ್ರಶ್ನೆಗೆ ಉತ್ತರ ಹಿಂದೆ ಸುಮಾರು 600 ರಾಜರು ನಮ್ಮನ್ನು ಆಳುತ್ತಿದ್ದರು. ಅದು ಬದಲಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದು, ದೇಶಕ್ಕೆ ಗಡಿ ನಿಗದಿಯಾಗಿ, ಸಂವಿಧಾನ ಬಂದ ನಂತರ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕಟ್ಟಲಾಯಿತು. ರಾಜಕೀಯ, ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ, ಶೈಕ್ಷಣಿಕ ಹೀಗೆ ಅನೇಕ ವಲಯಗಳಲ್ಲಿ ಉತ್ತಮ ಬದಲಾವಣೆಗಳನ್ನು ಕಂಡಿದ್ದೇವೆ. ಬಡತನ ಕಡಿಮೆಯಾಗಿದೆ, ಶಿಕ್ಷಣ ಮಟ್ಟ ಹೆಚ್ಚಿದೆ, ಮಹಿಳೆ, ದಲಿತರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರು ಅಭಿವೃದ್ದಿ ಹೊಂದುತ್ತಿದ್ದಾರೆ. ಇಂದು ಎಲ್ಲ ಕ್ಷೇತ್ರದಲ್ಲಿ ಮಹಿಳೆ ಇದ್ದಾಳೆ. ಹಿಂದುಳಿದ, ಕೆಳಜಾತಿಯವರು ಉನ್ನತ ಸ್ಥಾನಲ್ಲಿದ್ದಾರೆ ಎಂದರೆ ಇದಕ್ಕೆ ಸಂವಿಧಾನ ಕೊಟ್ಟ ಅವಕಾಶಗಳೇ ಕಾರಣ. ಆದರೆ ಇಂತಹ ಸಂವಿಧಾನದ ಮಹತ್ವ ಅರಿಯಬೇಕಿದೆ. ಇದನ್ನು ಓದಿ ಅದರಂತೆ ನಡೆಯುವ ತುರ್ತು ಇದೆ.
ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಕಥೆ ಕಾದಂಬರಿ ಓದಿದಂತಲ್ಲ. ಭಾರತ ದೇಶವನ್ನು ತಿಳಿಯದೇ ಭಾರತದ ಸಂವಿಧಾನವನ್ನು ತಿಳಿಯಲು ಸಾಧ್ಯವಿಲ್ಲ. ದೇಶದ ಜನರು ಇಲ್ಲಿಯ ಇತಿಹಾಸ, ಧರ್ಮ, ಜಾತಿ, ಸಾಮಾಜಿಕ ಸಂಬಂಧಗಳು, ಆರ್ಥಿಕ ಸಂಬಂಧಗಳು, ಮೌಲ್ಯ, ಸಂಸ್ಕøತಿ ತಿಳಿಯದೇ ಸಂವಿಧಾನ ತಿಳಿಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ದೇಶವನ್ನು ತಿಳಿಯಬೇಕೆಂದರು.
ದೇಶದ ಬಹುತ್ವವನ್ನು ರಕ್ಷಿಸುತ್ತಿರುವ ನಮ್ಮ ಸಂವಿಧಾನವನ್ನು ತಿಳಿಯಬೇಕಾದರೆ ಮೊದಲು ನಮ್ಮ ದೇಶವನ್ನು ತಿಳಿಯಬೇಕು. ಸುಮಾರು 4635 ಜನಾಂಗಗಳು, 325 ಭಾಷೆಗಳು, 25 ಲಿಪಿಗಳೊಂದಿಗೆ ಸಹಜೀವನ ನಡೆಸುತ್ತಿರುವ ಬಹುತ್ವದ ದೇಶ ನಮ್ಮದು. ಈ ಬಹುತ್ವ ಅರ್ಥವಾಗಬೇಕಾದರೆ ನಮ್ಮ ಮೂಲ ನಮಗೆ ತಿಳಿಯಬೇಕು. ನಮ್ಮ ಸಾಮಾಜಿಕ, ಆರ್ಥಿಕ ಸಂಬಂಧಗಳು ಅರ್ಥವಾಗದೇ ಹೋದರೆ ಕಲ್ಯಾಣ ರಾಜ್ಯದ ಅರ್ಥ ಆಗುವುದಿಲ್ಲ. ನಮ್ಮದು ಹಳ್ಳಿಗಳ ದೇಶ. ಸುಮಾರು 6.50 ಲಕ್ಷ ಹಳ್ಳಿಗಳಿವೆ. ದೇಶದಲ್ಲಿ ಮಿಶ್ರ ಆರ್ಥಿಕತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಮಲ್ಟಿ ನ್ಯಾಷನಲ್, ಟ್ರಾನ್ಸ್ನ್ಯಾಷನಲ್ ಕಂಪೆನಿಗಳು ಕೇವಲ ಮಾರುಕಟ್ಟೆಯನ್ನಲ್ಲ ಬದಲಾಗಿ ಮನಸ್ಸುಗಳನ್ನು ನಿಯಂತ್ರಿಸುತ್ತಿರುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಸಮಾನತೆ, ಧರ್ಮ, ಅಹಿಂಸೆ, ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಧಾರವಾಗಿದ್ದು, ಸಂವಿಧಾನ ಬಂದ ನಂತರ ಅನೇಕ ಉತ್ತಮ ಬದಲಾವಣೆಗಳು ಆಗಿವೆ. ಆದರೂ ನಮ್ಮ ಮುಂದೆ ಇಂದಿಗೂ ಅನೇಕ ಸವಾಲುಗಳು ಮತ್ತು ಸಮಸ್ಯೆಗಳಿವೆ. ಅನೇಕರು ಸಂವಿಧಾನವನ್ನೇ ದೂಷಿಸುತ್ತಿದ್ದಾರೆ. ದೋಷ ಇರುವುದು ಸಂವಿಧಾನದಲ್ಲಲ್ಲ. ಬದಲಾಗಿ ಇದನ್ನು ಅನುಷ್ಟಾನಗೊಳಿಸುವವರಲ್ಲಿದೆ.
ಎಲ್ಲರೂ ಸಂವಿಧಾನ ಅರ್ಥೈಸಿಕೊಂಡು ಅದರಂತೆ ನಡೆಯುವಲ್ಲಿ ಹೆಜ್ಜೆ ಇಡಬೇಕಿದೆ. ಈ ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ಸವಾಲು ಮತ್ತು ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕುಲಕರ್ಣಿ ಅಂಬಾದಾಸ್ ಜಿ, ದೇಶದಲ್ಲಿ ಪ್ರತಿ ಧರ್ಮಗಳಿಗೆ ಇರುವ ಒಂದೊಂದು ಪವಿತ್ರ ಗ್ರಂಥಗಳಂತೆ ಇಡೀ ಭಾರತ ದೇಶಕ್ಕೆ ಸಂವಿಧಾನ ಒಂದು ಪವಿತ್ರ ಗ್ರಂಥವಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಓದಿ, ಅರ್ಥೈಸಿಕೊಂಡು ಮತ್ತೊಬ್ಬರಿಗೆ ಓದುವ ಹಾಗೆ ಉತ್ತೇಜಿಸಬೇಕು. ಸಂವಿಧಾನವನ್ನು ಓದಿ ತಿಳಿದುಕೊಂಡಲ್ಲಿ ಅಪರಾಧಗಳು ನಡೆಯುವುದು ಕಡಿಮೆಯಾಗುತ್ತವೆ ಎಂದರು.
ಸಂವಿಧಾನ ಮೂಲಭೂತ ಹಕ್ಕುಗಳೊಂದಿಗೆ ಮೂಲಭೂತ ಕರ್ತವ್ಯಗಳನ್ನು ನೀಡಿದ್ದು, ಅವುಗಳನ್ನು ನಿರ್ವಹಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಪ್ರಮುಖ ಜವಾಬ್ದಾರಿಯಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಿರುವ ಶಿಕ್ಷಕರು ಸಂವಿಧಾನವನ್ನು ಓದಿಕೊಂಡು ವಿದ್ಯಾರ್ಥಿಗಳು ಸಂವಿಧಾನ ಓದಿ ತಿಳಿಯುವಂತೆ ಪ್ರೇರೇಪಿಸಬೇಕು. ಆಗ ಈ ಕಾರ್ಯಕ್ರಮ ಆಯೋಜಿಸಿದಕ್ಕೂ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮಾತನಾಡಿ, ಇಂದು ಸಂವಿಧಾನ ಓದು ಅಭಿಯಾನ ಕೈಗೊಳ್ಳುವ ಮೂಲಕ ಸಾಮಾನ್ಯರ ಕೈಗೆ ಸಂವಿಧಾನ ಓದು ಪುಸ್ತಕ ದೊರಕುವಂತೆ ಮಾಡಿರುವ ನ್ಯಾಯಾಮೂರ್ತಿ ನಾಗಮೋಹನ್ ದಾಸ್ರವರ ಕಾರ್ಯ ಶ್ಲಾಘನೀಯ. ಇವರು ನಮ್ಮ ಸಂವಿಧಾನದ ಕುರಿತು ಅತ್ಯಂತ ಸರಳವಾಗಿ ಬರೆದು ಎಲ್ಲರಿಗೂ ದೊರಕುವಂತೆ ಮಾಡಿದ್ದಾರೆ. ಈ ಪುಸ್ತಕ ಭಾರತದ ಇತಿಹಾಸದೊಂದಿಗೆ ತುಲನಾತ್ಮಕವಾಗಿ ರಚಿತವಾಗಿದ್ದು ಕಥಾ ಪುಸ್ತಕದಂತೆ ಓದಿಸಿಕೊಂಡು ಹೋಗುತ್ತದೆ. ಇಂತಹ ಪುಸ್ತಕಗಳು ಎಲ್ಲಾ ಶಾಲಾ ಮಕ್ಕಳ ಕೈಯಲ್ಲಿದ್ದರೆ ಮಕ್ಕಳಿಗೆ ಪ್ರಾರಂಭದಿಂದಲೇ ಸಂವಿಧಾನದ ಕುರಿತು ಪ್ರಜ್ಞೆ ಬೆಳೆಯುತ್ತದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಒಬ್ಬರು ಇಂದು ಸಾಮಾನ್ಯರ ನಡುವೆ ಬಂದು ಸಂವಿಧಾನ ಓದು ಎನ್ನುವ ಅಭಿಯಾನಕ್ಕೆ ಕೈಜೋಡಿಸುತ್ತಿರುವುದಕ್ಕೆ ಅಭಿನಂದನೀಯವಾಗಿದ್ದು ಅವರ ಈ ಸಾಮಾಜಿಕ ಕಾಳಜಿಗೆ ಯಶಸ್ಸು ಸಿಗಲೆಂದು ಆಶಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಾನೂನುಗಳ ತಾಯಿಯಾಗಿರುವ ನಮ್ಮ ಸಂವಿಧಾನವನ್ನು ಅತ್ಯಂತ ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪುಸ್ತಕ ಬರೆದು, ಅದರ ಕುರಿತು ರಾಜ್ಯಾದ್ಯಂತ ಅಭಿಯಾನದ ಮೂಲಕ ತಿಳಿಸುತ್ತಿರುವ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ರವರು ಉತ್ತಮ ವಾಗ್ಮಿ ಮತ್ತು ಸಾಹಿತಿ ಆಗಿದ್ದು, ನ್ಯಾಯಾಮೂರ್ತಿ ನಾಗಮೋಹನ್ದಾಸ್ ಇವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952 ಫೆ. 12 ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್.ನಾಗಪ್ಪ, ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ, ಅಖಿಲ ಭಾರತ ವಕೀಲರ ಸಂಘಟನೆ, ಯಂಗ್ ಅಡ್ವೊಕೇಟ್ಸ್ ಫೋರಂ ಮತ್ತು ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯಲ್ಲಿ ಸದಸ್ಯರಾಗಿ, ಕಾರ್ಯದರ್ಶಿಯವಾಗಿ ಸಕ್ರಿಯ ಪಾತ್ರವಹಿಸಿದ್ದಾರೆ ಎಂದರು.
ಜಿ.ಪಂನ ಸಿಇಓ ಹೆಚ್.ಬಸವರಾಜೇಂದ್ರ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡೀಗೇರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್, ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ, ಸರ್ಕಾರಿ ಅಭಿಯೋಜಕ ವಿ.ಎಸ್.ಪಾಟೀಲ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಿಎಚ್ಓ ಡಾ.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಜಯ್ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು, ಆಶಾಕಾರ್ಯಕರ್ತೆರು, ವಕೀಲರು ಸೇರಿದಂತೆ ಇತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ


