ಬಹಿರಂಗ
ಆರ್ಥಿಕ ಸಂಕಟಗಳ ಜತೆ ಈಗ ಬೆಲೆಯೇರಿಕೆಯ ಹೊರೆ
- ನವ-ಉದಾರವಾದಿ ಧೋರಣೆಗಳಿಂದ ಉಂಟಾಗಿರುವ ಕೆಟ್ಟಪರಿಸ್ಥಿತಿ ನೋಟುರದ್ಧತಿ ಮತ್ತು ಕೆಟ್ಟದಾಗಿ ರೂಪಿಸಿ, ಜಾರಿಗೊಳಿಸಿದ ಜಿಎಸ್ಟಿಯಿಂದಾಗಿ ಮತ್ತಷ್ಟು ಉಲ್ಬಣಗೊಂಡು ಆರ್ಥಿಕ ಬೆಳವಣಿಗೆ ಕುಸಿಯುವಂತೆ ಮಾಡಿದೆ. ಈಗ ಅದಕ್ಕೆ ಜೀವನಾವಶ್ಯಕ ಸಾಮಗ್ರಿಗಳಲ್ಲಿ ತೀವ್ರ ಹಣದುಬ್ಬರದ ಸಮಸ್ಯೆಯೂ ಸೇರಿಕೊಂಡಿದೆ. ಜನಸಾಮಾನ್ಯರು ಒಂದೆಡೆಯಲ್ಲಿ, ಇಳಿಯುತ್ತಿರುವ ಕೂಲಿ-ಸಂಬಳಗಳು ಮತ್ತು ಏರುತ್ತಿರುವ ನಿರುದ್ಯೋಗ, ಇನ್ನೊಂದೆಡೆಯಲ್ಲಿ ಆಹಾರ ಸಾಮಗ್ರಿಗಳು ಮತ್ತು ಇತರ ಆವಶ್ಯಕ ಸರಕುಗಳ ಬೆಲೆಯೇರಿಕೆಗಳ ಎರಡೆರಡು ಹೊರೆಗಳನ್ನು ಹೊರಬೇಕಾಗಿ ಬಂದಿದೆ. ಮೋದಿ ಸರಕಾರದ ಹಾನಿಕಾರಕ ಧೋರಣೆಗಳಿಗೆ ಜನಗಳ ಪ್ರತಿರೋಧವನ್ನು ಕಟ್ಟಿ ಬೆಳೆಸುವುದು ಮತ್ತು ವರ್ಗ ಹಾಗೂ ಸಾಮೂಹಿಕ ಹೋರಾಟಗಳನ್ನು ತೀವ್ರಗೊಳಿಸುವುದಲ್ಲದೆ ಈಗ ಬೇರೆ ಯಾವ ಮಾರ್ಗವೂ ಇಲ್ಲವಾಗಿದೆ.
-ಪ್ರಕಾಶ ಕಾರಟ್
ಭಾರತೀಯ ಅರ್ಥವ್ಯವಸ್ಥೆ ಭೀಷಣ ಇಕ್ಕಟ್ಟಿನಲ್ಲಿ ಸಿಲುಕಿದೆ. ಸರಕಾರ 2019-20ರಲ್ಲಿ ಜಿಡಿಪಿ ಬೆಳವಣಿಗೆ ದರ 5% ಇರಬಹುದು ಎಂದು ಲೆಕ್ಕ ಹಾಕಿ ಹೇಳಿದೆ. ಇದು ಜುಲೈ 2019ರಲ್ಲಿ ಮಂಡಿಸಿದ ಬಜೆಟಿನಲ್ಲಿ ಅಂದಾಜು ಮಾಡಿದ್ದ ದರಕ್ಕಿಂತ ಪೂರ್ಣ 2%ದಷ್ಟು ಕಡಿಮೆ. ಬಹುಶಃ ವಾಸ್ತವ ಜಿಡಿಪಿ ದರ ಇನ್ನೂ ಕೆಟ್ಟದಾಗಿರಬಹುದು, ಏಕೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಬೆಳವಣಿಗೆ ದರ 4.6% ಇರಬಹುದು ಎಂಬ ಅಂದಾಜಿಗೆ ಬಂದಿದೆ. ಆದರೆ ಆರ್ಥಿಕ ರಂಗದಲ್ಲಿನ ಮೋದಿ ಅನಾಹುತದ ಕತೆ ಇಲ್ಲಿಗೇ ಮುಗಿಯುವುದಿಲ್ಲ.
ಇತ್ತೀಚಿನ ಸುದ್ದಿ ಎಂದರೆ ಹಣದುಬ್ಬರ ದರ ಡಿಸೆಂಬರ್ 2019ರಲ್ಲಿ 7.35%ಕ್ಕೆ ಏರಿದೆ. ಇದು ಜುಲೈ 2014ರ ನಂತರದ ಅತಿ ಹೆಚ್ಚಿನ ಹಣದುಬ್ಬರ ದರ. ಬಳಕೆದಾರ ಸೂಚ್ಯಂಕ ಈ ದರದಲ್ಲಿ ಏರಿದ್ದರೆ, ಆಹಾರ ಸಾಮಗ್ರಿಗಳ ಸೂಚ್ಯಂಕ ಇನ್ನೂ ಹೆಚ್ಚು, 14.12% ದಷ್ಟು. ಈರುಳ್ಳಿ, ಆಲೂಗಡ್ಡೆ, ತರಕಾರಿಗಳು ಹಾಗೂ ಬೇಳೆಕಾಳುಗಳ ಬೆಲೆಗಳಲ್ಲಿ ತೀವ್ರ ಏರಿಕೆ ಉಂಟಾಗಿದೆ. ಸಗಟು ಬೆಲೆ ಸೂಚ್ಯಂಕ ಡಿಸೆಂಬರ್ನಲ್ಲಿ 2.6%ಕ್ಕೇರಿದೆ.
ಇದು ಕೂಡ ಕಳೆದ ಏಳು ತಿಂಗಳಲ್ಲೇ ಅತಿ ಹೆಚ್ಚಿನ ದರ. ಪೆಟ್ರೋಲ್ ಮತ್ತು ಡಿಸೆಲ್ ದರಗಳು 2019ರ ಇಡೀ ವರ್ಷದಲ್ಲಿ ಸತತವಾಗಿ ಏರುತ್ತ ಬಂದಿವೆ, ಡೀಸೆಲ್ ಬೆಲೆಯಲ್ಲಿ ಲೀಟರಿಗೆ ರೂ.5.10 ಮತ್ತು ಪೆಟ್ರೋಲ್ ಬೆಲೆಗಳಲ್ಲಿ ರೂ.6.30 ಏರಿಕೆಯಾಗಿದೆ. ಇದು ಹಣದುಬ್ಬರವನ್ನು ಹೆಚ್ಚಿಸಿದೆ. ಮಧ್ಯ-ಪ್ರಾಚ್ಯ ಪ್ರದೇಶದಲ್ಲಿ ಇರಾನ್ ಬಗ್ಗೆ ಅಮೆರಿಕಾದ ಆಕ್ರಮಣಕಾರೀ ನಿಲುವಿನಿಂದಾಗಿ ಉಂಟಾಗಿರುವ ಸೆಳೆತಗಳನ್ನು ನೋಡಿದರೆ, ಈ ವಿಷಯದಲ್ಲಿಯೂ ಪರಿಸ್ಥಿತಿ ಸುಧಾರಿಸುವ ಸಾಧ್ಯತೆಗಳು ಕಾಣುತ್ತಿಲ್ಲ.
ಭಾರತೀಯ ಅರ್ಥವ್ಯವಸ್ಥೆ ಒಂದು ಸ್ಥಗಿತತೆಯತ್ತ ಜಾರುತ್ತಿದೆಯಷ್ಟೇ ಅಲ್ಲ, ಅದೇ ವೇಳೆಗೆ ಹಣದುಬ್ಬರವನ್ನೂ ಎದುರಿಸುತ್ತಿದೆ ಎಂದು ಹಲವು ಆರ್ಥಿಕ ತಜ್ಞರು ಗಮನಿಸಿದ್ದಾರೆ. ಅಂದರೆ, ಭಾರತದ ಅರ್ಥವ್ಯವಸ್ಥೆ ಈಗ ಸ್ಥಗಿತುಬ್ಬರ(ಸ್ಟಾಗ್ಫ್ಲೇಶನ್)ವನ್ನು ಅನುಭವಿಸುತ್ತಿದೆ- ಬೆಲೆಗಳು ಏರುತ್ತಿವೆ ಮತ್ತು ಉತ್ಪಾದನೆಯ ಬೆಳವಣಿಗೆ ನಿಧಾನಗೊಳ್ಳುತ್ತಿದೆ.
ಹಣಕಾಸು ಮಂತ್ರಿಗಳು ಜುಲೈ 2019ರಲ್ಲಿ ಮಂಡಿಸಿದ ಬಜೆಟ್ ಚಿಂದಿಯಾಗಿ ಬಿಟ್ಟಿದೆ. ಅದರಲ್ಲಿ ಪ್ರಸ್ತುತ ಪಡಿಸಿದ ಅಂಕೆ-ಸಂಖ್ಯೆಗಳೆಲ್ಲವೂ ಸಂಪೂರ್ಣವಾಗಿ ಏರುಪೇರಾಗಿವೆ- ಅಲ್ಲಿ ಹೇಳಿರುವ ಮೊತ್ತಕ್ಕೂ ಈಗ ಕಾಣುತ್ತಿರುವ ಮೊತ್ತಕ್ಕೂ ಅಪಾರ ಅಂತರ ಉಂಟಾಗಿದೆ. ಸರಕಾರ, ಅರ್ಥವ್ಯವಸ್ಥೆ ನಿಧಾನಗೊಳ್ಳುತ್ತಿದೆ ಎಂದು ಅಧಿಕೃತವಾಗಿ ಒಪ್ಪಿಕೊಳ್ಳದಿದ್ದರೂ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸಲಿಕ್ಕೆಂದು ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಹೇಳುತ್ತಿದೆ.
ಆದರೆ ಅವೆಲ್ಲವೂ ಭಾರತೀಯ ದೊಡ್ಡ ಬಂಡವಳಿಗರು ಮತ್ತು ವಿದೇಶಿ ಹಣಕಾಸು ಬಂಡವಾಳಕ್ಕೆ ಅಪಾರ ತೆರಿಗೆ ರಿಯಾಯ್ತಿಗಳನ್ನು ಒದಗಿಸುವ ಕ್ರಮಗಳಷ್ಟೇ. ಅದು ಕೈಗೊಂಡ ಮೊದಲ ಕ್ರಮವೆಂದರೆ ಬಜೆಟಿನಲ್ಲಿ ವಿಧಿಸಿದ್ದ ಬಂಡವಾಳ ಗಳಿಕೆ ತೆರಿಗೆಯ ಮೇಲಿನ ಸರ್ಚಾರ್ಜನ್ನು ತೆಗೆದು ವಿದೇಶಿ ಹೂಡಿಕೆದಾರರನ್ನು ಸಮಾಧಾನಗೊಳಿಸುವುದು. ನಂತರ, ರಫ್ತುಗಳಿಗೆ 50,000ಕೋಟಿ ರೂ.ಗಳ ಮತ್ತು ರಿಯಲ್ ಎಸ್ಟೇಟ್ ಮತ್ತು ವಸತಿ ವಲಯಕ್ಕೆ 20,000 ಕೋಟಿ ರೂ.ಗಳ ಸಬ್ಸಿಡಿಗಳ ಪ್ರಕಟಣೆ ಮಾಡಲಾಯಿತು.
ಅರ್ಥವ್ಯವಸ್ಥೆ ಏನೇನೂ ಉತ್ತಮಗೊಳ್ಳದಿದ್ದಾಗ, ಕಾರ್ಪೊರೇಟ್ ತೆರಿಗೆ ದರವನ್ನು 22%ಕ್ಕೆ ಇಳಿಸಿ ಕಾರ್ಪೊರೇಟ್ ವಲಯಕ್ಕೆ 1.45 ಲಕ್ಷ ಕೋಟಿ ರೂ.ಗಳ ಭಾರೀ ಕೊಡುಗೆಯನ್ನು ನೀಡಲಾಯಿತು. ಇದಕ್ಕೆ ಮೊದಲು 400 ಕೋಟಿ ರೂ,ಗಳಿಗಿಂತ ಹೆಚ್ಚಿನ ವಹಿವಾಟು ಇದ್ದ ಕಂಪನಿಗಳಿಗೆ 30% ಮತ್ತು ಇತರೆಲ್ಲ ಕಂಪನಿಗಳಿಗೆ 25% ಕಾರ್ಪೊರೇಟ್ ತೆರಿಗೆ ಇತ್ತು. ಇದರ ಫಲಿತಾಂಶವೆಂದರೆ, ರಿಝರ್ವ್ ಬ್ಯಾಂಕ್ನ್ನು ದಬಾಯಿಸಿ ಅದರ ಗಳಿಕೆಯ 1.76ಲಕ್ಷ ಕೋಟಿ ರೂ.ಗಳನ್ನು ಪಡೆದುಕೊಂಡ ನಂತರವೂ ಸರಕಾರದ ಹಣಕಾಸು ಕೊರತೆ ಮತ್ತಷ್ಟು ಹೆಚ್ಚುವಂತಾಗಿದೆ.
ಅರ್ಥವ್ಯವಸ್ಥೆ ನಿಧಾನಗೊಳ್ಳುತ್ತಿರುವುದರಿಮದಾಗಿ ತೆರಿಗೆ ಸಂಗ್ರಹಗಳೂ ಬಜೆಟಿನಲ್ಲಿ ಅಂದಾಜು ಮಾಡಿದ್ದಕ್ಕಿಂತ ಬಹಳ ಕೆಳಮಟ್ಟದಲ್ಲಿವೆ. ಇದು ಮುಖ್ಯವಾಗಿ ರಾಜ್ಯಗಳನ್ನು ಬಾಧಿಸಿದೆ, ಏಕೆಂದರೆ ಇದರಿಂದಾಗಿ ಅವುಗಳಿಗೆ ಕೇಂದ್ರ ಸರಕಾರ ತಾನು ಕೊಡಬೇಕಾಗಿರುವ ಜಿಎಸ್ಟಿ ಪರಿಹಾರ ಪಾವತಿಗಳನ್ನು ಮುಂದೂಡಿದೆ. ಸರಕಾರದ ಕ್ರಮಗಳು ಅರ್ಥವ್ಯವಸ್ಥೆಯಲ್ಲಿನ ಬೇಡಿಕೆಯ ಬಿಕ್ಕಟ್ಟನ್ನು ನಿಭಾಯಿಸಲು ಏನೂ ಮಾಡಲಿಲ್ಲ, ಆದರೆ ಸರಕಾರದ ಆದಾಯಗಳನ್ನು ಮಾತ್ರ ಇಳಿಸಿತು.
ಮನರೇಗ ಯೋಜನೆಗೆ ಹಣಕಾಸು ನೀಡಿಕೆಯನ್ನು ವಿಸ್ತರಿಸುವುದು, ಕೃಷಿ, ಗ್ರಾಮೀಣ ಮೂಲರಚನೆ ಮತ್ತು ಸಾಮಾಜಿಕ ವಲಯಗಳಲ್ಲಿ ಸಾರ್ವಜನಿಕ ಹೂಡಿಕೆಗಳನ್ನು ಹೆಚ್ಚಿಸುವುದು ಮತ್ತು ನಗರಪ್ರದೇಶಗಳಲ್ಲೂ ಒಂದು ಉದ್ಯೋಗ ಖಾತ್ರಿ ಯೋಜನೆಯನ್ನು ಆರಂಭಿಸುವುದು ಮುಂತಾದ ಜನಗಳ ಕೈಗಳಲ್ಲಿ ಹಣವನ್ನು ಇಡಬಹುದಾಗಿದ್ದ ಕ್ರಮಗಳನ್ನು ಅನುಸರಿಸುವ ಬದಲು, ಆಮೂಲಕ ಕೃಷಿಯ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಬದಲು, ಸರಕಾರ ಈ ಎಲ್ಲ ವಲಯಗಳಲ್ಲೂ ಹಣನೀಡಿಕೆಯಲ್ಲಿ ಕಡಿತ ಮಾಡುತ್ತಿದೆ.
ಮುಂದಿನ ಆರು ವರ್ಷಗಳಲ್ಲಿ ಮೂಲರಚನೆಯಲ್ಲಿ 102 ಲಕ್ಷ ಕೋಟಿ ರೂ.ಗಳನ್ನು ಹೂಡಲಾಗುವುದು ಎಂದು ಬಹಳಷ್ಟು ಪ್ರಚಾರ ಮಾಡಲಾಯಿತು. ಆದರೆ ಐದು ವರ್ಷಗಳಲ್ಲಿ ಹಾಗೆ ಮಾಡುವ ವಚನ ದುರ್ಬಲಗೊಂಡಿದೆ, ಮಾತ್ರವಲ್ಲ, ಅದು ಪ್ರಚಾರ ಮಾಡಿದ ಪ್ರಮಾಣದ ಹತ್ತಿರವೂ ಬರುವಂತೆ ಕಾಣುತ್ತಿಲ್ಲ. ಇದಕ್ಕೆ 39% ಮಾತ್ರ ಭಾರತ ಸರಕಾರದಿಂದ ಬರುತ್ತದೆ, 39% ಎಲ್ಲ ರಾಜ್ಯಗಳಿಂದ ಬರುತ್ತದೆ ಮತ್ತು ಉಳಿದ 22% ಖಾಸಗಿ ವಲಯದಿಂದ ಬರುತ್ತದೆ ಎಂದು ಕೇಂದ್ರ ಸರಕಾರ ಹೇಳುತ್ತಿದೆ.
ಆದರೆ ಈಗ ನೋಟುರದ್ಧತಿ, ಜಿಎಸ್ಟಿಯ ಒಡ್ಡೊಡ್ಡಾದ ಜಾರಿ ಮತ್ತು ಕಾರ್ಪೊರೇಟ್ಗಳಿಗೆ ಕೇಂದ್ರ ಸರಕಾರದ ತೆರಿಗೆ ಬಕ್ಷೀಸುಗಳು ರಾಜ್ಯಗಳ ಹಣಕಾಸು ಪರಿಸ್ಥಿತಿಯನ್ನು ಸಂಪೂರ್ಣವಾಗಿ ಬಿಗಡಾಯಿಸಿರುವಾಗ, ಮತ್ತು ಆರ್ಥಿಕ ಸ್ಥಗಿತತೆಯ ಅಂಚಿನಲ್ಲಿ ಬಂದು ನಿಂತಿರುವಾಗ ಹಾಗೂ ಸ್ಥಗಿತುಬ್ಬರವನ್ನು ಅನುಭವಿಸುತ್ತಿರುವಾಗ, ಈ ದೊಡ್ಡ ಯೋಜನೆಯ ಪ್ರಕಟಣೆ ಬಹುಮಟ್ಟಿಗೆ ಟೊಳ್ಳು ಬಡಾಯಿಯೇ ಆಗಿದೆ.
ಸರಕಾರ ಈಗ ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ತನ್ನ ಪಾಲನ್ನು ಬೃಹತ್ ಪ್ರಮಾಣದಲ್ಲಿ ಮತ್ತು ಅತ್ಯಂತ ಕಡಿಮೆ ಬೆಲೆಗಳಲ್ಲಿ ಮಾರಿಕೊಳ್ಳಲು ಮುಂದಾಗಿದೆ. ಹಲವು ಲಾಭದಾಯಕ ಉದ್ದಿಮೆಗಳನ್ನು ಕಡಿದು ಹಾಕಿ ದೇಶಕ್ಕೆ ಸದ್ಯದಲ್ಲೂ ಮತ್ತು ಭವಿಷ್ಯದಲ್ಲೂ ಅಪಾರ ಹಾನಿಗಳನ್ನು ತರುತ್ತಿದೆ. ಇದನ್ನು ಯಾವ ರೀತಿಯಲ್ಲೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಸರಕಾರದ ಮಾಹಿತಿಗಳೇ ಬೃಹತ್ ಪ್ರಮಾಣದ ನಿರುದ್ಯೋಗ ಇದೆ, ಕೃಷಿ ಸಂಕಟ ಮುಂದುವರೆಯುತ್ತಿದೆ ಮತ್ತು ತಲಾಬಳಕೆ ಖರ್ಚು ಇಳಿಮುಖಗೊಂಡಿದೆ, ಗ್ರಾಮೀಣ ಭಾರತದಲ್ಲಿ 2011-12ರಿಂದ 2017-18ರ ನಡುವೆ 8.8% ದಷ್ಟು ಇಳಿದಿದೆ ಎಂದು ತೋರಿಸುತ್ತಿವೆ. ಪ್ರಥಮತಃ ನವ-ಉದಾರವಾದಿ ಧೋರಣೆಗಳಿಂದ ಉಂಟಾಗಿರುವ ಇಂತಹ ಕೆಟ್ಟಪರಿಸ್ಥಿತಿ ನೋಟುರದ್ಧತಿ ಮತ್ತು ಕೆಟ್ಟದಾಗಿ ರೂಪಿಸಿ, ಜಾರಿಗೊಳಿಸಿದ ಜಿಎಸ್ಟಿಯಿಂದಾಗಿ ಮತ್ತಷ್ಟು ಉಲ್ಬಣಗೊಂಡು ಆರ್ಥಿಕ ಬೆಳವಣಿಗೆ ಕುಸಿಯುವಂತೆ ಮಾಡಿದೆ.
ಈಗ ಅದಕ್ಕೆ ಜೀವನಾವಶ್ಯಕ ಸಾಮಗ್ರಿಗಳಲ್ಲಿ ತೀವ್ರ ಹಣದುಬ್ಬರದ ಸಮಸ್ಯೆಯೂ ಸೇರಿಕೊಂಡಿದೆ. ಈ ಸರಕಾರ ತನ್ನ ಸ್ವಭಾವದಿಂದಾಗಿ, ಇಂತಹ ಧೋರಣೆಗಳನ್ನು ಕೈಬಿಟ್ಟು, ಅರ್ಥವ್ಯವಸ್ಥೆಯಲ್ಲಿ ಬೇಡಿಕೆಯನ್ನು ಸ್ಫುರಿಸುವ ಹಾಗೂ ಬೃಹತ್ಪ್ರಮಾಣದಲ್ಲಿ ಸಾರ್ವಜನಿಕ ಹೂಡಿಕೆಗಳ ಮೂಲಕ ಪೂರೈಕೆಯ ಮೂಲರಚನೆಗಳನ್ನು ಉತ್ತಮ ಪಡಿಸಬೇಕು ಎನ್ನುವ ಸಲಹೆಗಳಿಗೆ ಕಿವಿಗೊಡುವುದಿಲ್ಲ. ತದ್ವಿರುದ್ಧವಾಗಿ ಅದು ಅಂತರ್ರಾಷ್ಟ್ರೀಯ ಹಣಕಾಸು ಬಂಡವಾಳ ಮತ್ತು ದೇಶೀ ಗುತ್ತೇದಾರಿ ಬಂಡವಾಳದ ಆಗ್ರಹದಂತೆ ಶ್ರಮ ಮಾರುಕಟ್ಟೆ ಹಾಗೂ ಭೂಮಿ ಮಾರುಕಟ್ಟೆಯನ್ನು ಮತ್ತಷ್ಟು ಉದಾರೀಕರಿಸುವ ಪ್ರಯತ್ನವನ್ನೇ ಮಾಡುತ್ತದೆ.
ಜನಸಾಮಾನ್ಯರು ಒಂದೆಡೆಯಲ್ಲಿ, ಇಳಿಯುತ್ತಿರುವ ಕೂಲಿ-ಸಂಬಳಗಳು ಮತ್ತು ಏರುತ್ತಿರುವ ನಿರುದ್ಯೋಗ, ಇನ್ನೊಂದೆಡೆಯಲ್ಲಿ ಆಹಾರ ಸಾಮಗ್ರಿಗಳು ಮತ್ತು ಇತರ ಆವಶ್ಯಕ ಸರಕುಗಳ ಬೆಲೆಯೇರಿಕೆಗಳ ಎರಡೆರಡು ಹೊರೆಗಳನ್ನು ಹೊರಬೇಕಾಗಿ ಬಂದಿದೆ.
ಮೋದಿ ಸರಕಾರದ ಹಾನಿಕಾರಕ ಧೋರಣೆಗಳಿಗೆ ಜನಗಳ ಪ್ರತಿರೋಧವನ್ನು ಕಟ್ಟಿ ಬೆಳೆಸುವುದು ಮತ್ತು ವರ್ಗ ಹಾಗೂ ಸಾಮೂಹಿಕ ಹೋರಾಟಗಳನ್ನು ತೀವ್ರಗೊಳಿಸುವುದಲ್ಲದೆ ಈಗ ಬೇರೆ ಯಾವ ಮಾರ್ಗವೂ ಇಲ್ಲವಾಗಿದೆ.
(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ7 days agoಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ
-
ದಿನದ ಸುದ್ದಿ6 days agoಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
-
ದಿನದ ಸುದ್ದಿ6 days agoಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
-
ದಿನದ ಸುದ್ದಿ6 days agoಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
-
ಸಿನಿ ಸುದ್ದಿ6 days agoಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
-
ನಿತ್ಯ ಭವಿಷ್ಯ6 days agoಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?


