ರಾಜಕೀಯ
ಮಾತು, ಮೌನ ಮತ್ತು ಮಿಥ್ಯಾವಾಸ್ತವ
ಈಗ ಮಾತುಗಳದ್ದೇ ಆರ್ಭಟ. ಮಾತು, ಪ್ರತಿಮಾತು, ದಿಢೀರನೆ ಪ್ರತಿಕ್ರಿಯಿಸಿಬಿಡುವ ಸಿಟ್ಟು-ಸೆಡವಿನ ಪ್ರವೃತ್ತಿಗಳ ವಿಜೃಂಭಣೆ. ನಾಯಕರೆನ್ನಿಸಿಕೊಂಡು ಜನಪ್ರಿಯಗೊಂಡವರ ವಿರುದ್ಧ ಯಾರೂ ಉಸಿರೆತ್ತುವ ಹಾಗಿಲ್ಲ. ಆರಾಧನೆಯ ಗುಂಗಿನೊಳಗೆ ಪ್ರಶ್ನಿಸಿದವರನ್ನು ಸುಮ್ಮನಾಗಿಸಿಬಿಡುವ ಜಾಯಮಾನಗಳದ್ದೇ ಪ್ರಭಾವಳಿ. ಅನುಭವಕ್ಕೆ ಬಂದ ಮತ್ತು ಕಣ್ಣಮುಂದಿನ ವಾಸ್ತವಗಳನ್ನು ನೋಡಿಯೂ ನೋಡದಂತಿದ್ದು ಎಲ್ಲರ ಹಾಗೆ ಹೊಗಳುವ ಮನೋವೃತ್ತಿಯನ್ನು ಒತ್ತಾಯಪೂರ್ವಕವಾಗಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ. ಇಂಥದ್ದೊಂದು ವಾತಾವರಣವನ್ನೇ ಸಮಕಾಲೀನ ರಾಜಕಾರಣ ನಿರೀಕ್ಷಿಸುತ್ತಿದೆ. ಮಾತು ಮತ್ತು ಮೌನಗಳ ಚಾಣಾಕ್ಷಯುತ ನಿರ್ವಹಣೆಯ ಮೂಲಕ ಅದು ಹೊಸ ಪೀಳಿಗೆಯ ಯೋಚಿಸುವ ಶಕ್ತಿಯನ್ನು ಕೊಂದುಬಿಟ್ಟಿದೆ. ಅಧಿಕಾರರೂಢ ಮತ್ತು ವಿರೋಧ ಪಕ್ಷಗಳು ಯಾವುದು ವಾಸ್ತವವಲ್ಲವೋ ಅದನ್ನು ಸೃಷ್ಟಿಸಿ ಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ವಾಸ್ತವವನ್ನು ಮುಚ್ಚಿಟ್ಟು ಭಾವುಕ ಸಂಗತಿಗಳ ದಾಳಗಳನ್ನು ಎಸೆದು ಪ್ರಜಾಪ್ರಭುತ್ವದ ಅಖಾಡದ ಸಂವೈಧಾನಿಕ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿವೆ.
ಈಗ ನಮಗೆ ಎಂಥ ರಾಜಕಾರಣ ಬೇಕಾಗಿದೆ ಎಂದರೆ ನಮ್ಮ ಬದುಕು ಅದರಿಂದ ಉದ್ಧರಿಸಲ್ಪಡುವಂತಿರಬೇಕು. ಈ ನಮ್ಮ ಬದುಕಿನ ವ್ಯಾಪ್ತಿಯೊಳಗೆ ಎಲ್ಲ ಧರ್ಮಗಳವರೂ ಇರಬೇಕು. ಎಲ್ಲ ಜಾತಿಗಳವರೂ ಇರಬೇಕು. ಅವರವರ ನಂಬಿಕೆಗಳ ಭಾವಜಗತ್ತನ್ನು ಮತ್ತಷ್ಟು ಉದಾತ್ತಗೊಳಿಸುವ ಪ್ರಯತ್ನಗಳಿಗೆ ಅಲ್ಲಿ ಅವಕಾಶವಿರಬೇಕು. ಆ ಮೂಲಕ ಹೊಸ ವಿಶ್ವಾಸಾರ್ಹತೆ ಮೂಡಬೇಕು. ಅಪನಂಬಿಕೆ ಮತ್ತು ಮೂಢನಂಬಿಕೆಗಳ ಜಾಡ್ಯಗಳನ್ನು ತೊರೆಯುವ ಹೃದಯವೈಶಾಲ್ಯತೆ ನೆಲೆಗೊಳ್ಳಬೇಕು. ಹಾಗಾಗುವ ಹಾಗೆ ರಾಜಕಾರಣವು ನಾಯಕತ್ವವನ್ನು ಚಿಗುರಿಸಬೇಕು. ಮಾತಿನ ಭಾಷಿಕ ಅಬ್ಬರದ ಬದಲು ಮಿತಭಾಷಿಕ ಸೌಜನ್ಯವನ್ನು ಸೃಷ್ಟಿಸಬೇಕು.
ಘಾಸಿಗೊಳ್ಳುತ್ತಿರುವ ಆಯ್ಕೆ ಹಕ್ಕು
ಹಾಗೆ ಆಗುತ್ತಿಲ್ಲ. ಸ್ವಾತಂತ್ರ್ಯಾನಂತರ ಹಲವು ದಶಕಗಳಾದರೂ ಭಾರತದ ಕನಸುಗಳ್ಯಾವುವೂ ಸಾಕಾರಗೊಳ್ಳಲಿಲ್ಲ ಮತ್ತು ಅಧಿಕಾರದಲ್ಲಿದ್ದ ಹಿಂದಿನವರು ಉದ್ದೇಶಪೂರ್ವಕವಾಗಿ ಆ ಕನಸುಗಳನ್ನು ಸಾಕಾರಗೊಳಿಸುವುದರ ಕಡೆಗೆ ಗಮನಹರಿಸಲಿಲ್ಲ ಎಂಬ ಕೊರಗುಗಳನ್ನು ಮುಂದಿಡುತ್ತಲೇ ತಮ್ಮ ಪರವಾದ ಅಲೆಯನ್ನು ಸೃಷ್ಟಿಸಿಕೊಂಡ ರಾಜಕೀಯ ಪಡೆಗಳು ಅಧಿಕಾರಕ್ಕೆ ಬಂದ ತಕ್ಷಣ ಮತ್ತದೇ ಸ್ಥಗಿತತೆಯ ಜಾಡ್ಯವನ್ನೇ ಪರಮಲಕ್ಷಣವಾಗಿಸಿಕೊಂಡಿವೆ. ಯಾವುದನ್ನು ವಿರೋಧಿಸಿ ಅಧಿಕಾರಕ್ಕೆ ಬರುತ್ತಾರೋ ಅವರೇ ತಾವು ಹಿಂದೆ ವಿರೋಧಿಸಿದ್ದ ನಡೆಯನ್ನೇ ಮರುಪ್ರತಿಷ್ಠಾಪಿಸಿಕೊಳ್ಳುವುದು ರಾಜಕಾರಣಿ, ರಾಜಕೀಯ ಪಕ್ಷಗಳ ಅಲಿಖಿತ ಕಡ್ಡಾಯ ನಿಯಮವಾಗಿಬಿಟ್ಟಿದೆಯೇನೋ ಎಂದು ಭಾಸವಾಗುತ್ತಿದೆ. ಈ ವಿಚಿತ್ರ ನಡೆಗಳು ಭಾರತದ ಪ್ರಜೆಗಳ ಆಯ್ಕೆಯ ಹಕ್ಕನ್ನು ಘಾಸಿಗೊಳಿಸಿವೆ.
ನಿರ್ಲಿಪ್ತ ಭಾವ
ಅಧಿಕಾರದಲ್ಲಿದ್ದವರನ್ನು ಪ್ರಶ್ನಿಸಬೇಕು ಎಂಬ ಮನೋಭಾವವು ವಿರೋಧ ಪಕ್ಷಗಳಿಂದ ಪ್ರಚೋದಿತವಾಗಬೇಕಿಲ್ಲ. ಮಾಧ್ಯಮಗಳ ವಿಶ್ಲೇಷಣೆಗಳನ್ನೇ ನೆಚ್ಚಿಕೊಂಡು ಪ್ರಶ್ನಿಸುವ ಅಗತ್ಯವಿಲ್ಲ. ಈ ದೇಶದ ಸಂವಿಧಾನ ಒದಗಿಸಿರುವ ಪ್ರಶ್ನಿಸುವ ಅವಕಾಶವನ್ನು ಬಳಸಿಕೊಳ್ಳುವ ವಿವೇಕ ನಮ್ಮೆಲ್ಲರದ್ದಾಗಿರಬೇಕು. ಈ ವಿವೇಕವನ್ನು ಪ್ರಖರಗೊಳಿಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಗಮನಾರ್ಹ ಪಾತ್ರನಿರ್ವಹಿಸಬೇಕು. ಪ್ರಶ್ನೆ ಕೇಳುವ ಸಾಧ್ಯತೆಗಳನ್ನು ವರ್ತಮಾನದ ರಾಜಕಾರಣ ಹೇಗೆ ಮೊಟಕುಗೊಳಿಸುತ್ತಿದೆ ಎಂದರೆ ಕಣ್ಣಮುಂದೆ ಎಷ್ಟೆಲ್ಲಾ ಊನಗಳಿದ್ದರೂ, ಸ್ವತಃ ವ್ಯವಸ್ಥೆಯ ಲೋಪಗಳ ಕಾರಣಕ್ಕಾಗಿಯೇ ನೋವು ಅನುಭವಿಸಿದರೂ ಅವುಗಳ ಬಗ್ಗೆ ಮಾತನಾಡಬಾರದು ಎಂಬ ನಿರ್ಲಿಪ್ತ ಭಾವವನ್ನೇ ನೆಚ್ಚಿಕೊಳ್ಳುವಂತೆ ಒತ್ತಡಗಳು ಸೃಷ್ಟಿಯಾಗುತ್ತಿವೆ.
ಪ್ರತಿಮೆಯ ನೆಗೆತ!
ಅಧಿಕಾರಕ್ಕೆ ಹತ್ತಿರವಾಗುವ ರಹಸ್ಯ ಕಾರ್ಯಸೂಚಿಯೊಂದಿಗೆ ರಾಜಕೀಯ ಪಡೆಗಳು ಇತಿಹಾಸದ ಮೌಲಿಕ ಸಂಸ್ಥೆಯನ್ನು ತಮ್ಮ ಹತಾರೆಗಳೊಂದಿಗೆ ಈಗಾಗಲೇ ಪ್ರವೇಶಿಸಿಬಿಟ್ಟಿವೆ. ಈಗಾಗಲೇ ಆಗಿಹೋದ ಸಂಗತಿಯೊಂದರ ವಿವರವನ್ನು ತಮ್ಮ ಉದ್ದೇಶಕ್ಕೆ ತಿರುಗಿಸಿಕೊಳ್ಳುವ ಚಾಣಾಕ್ಷ ನಡೆಗಳೊಂದಿಗೆ ಅವು ಯಶಸ್ಸು ಸಾಧಿಸುತ್ತಿವೆ. ಈಗಾಗಲೇ ಆಗಿಹೋದವರನ್ನು ಟೀಕಿಸುವ ಹುಮ್ಮಸ್ಸಿನಲ್ಲಿ ಸದ್ಯಕ್ಕೆ ಸರಿಯಾದ ಹಾದಿ ತೋರಿಸುವ ಆದರ್ಶದ ಐತಿಹಾಸಿಕ ಪರಂಪರೆಯ ಮೌಲಿಕತೆಯನ್ನು ಉದ್ದೇಶಪೂರ್ವಕವಾಗಿ ಹಿನ್ನೆಲೆಗೆ ಸರಿಸಲಾಗುತ್ತಿದೆ. ಈ ಹಿಂದಿನವರು ವಿಜೃಂಭಿಸಿದ ಪ್ರತಿಮಾ ರಾಜಕಾರಣವು ಇದೀಗ ಹೊಸದೊಂದು ನೆಗೆತ ನೆಗೆದಿದೆ ಅಷ್ಟೇ. ಯಾರ ಆದರ್ಶಗಳನ್ನು ನಾವು ಬದುಕಿನೊಳಗೆ ಅಳವಡಿಸಿಕೊಳ್ಳುತ್ತಾ ಸಾಗುವ ಬದಲು ಅವುಗಳನ್ನು ನಾಮ್ಕೇವಾಸ್ತೆ ಎಂಬಂತೆ ನೆನಪಿಸಿಕೊಳ್ಳುತ್ತಾ ಅವರ ಮೂರ್ತಿಗಳನ್ನು ಆರಾಧಿಸಿದೆವು. ಹಾಗೆ ಆರಾಧಿಸುವ ಹಾಗೆ ನಮ್ಮ ಮೇಲೆ ಭಾವುಕ ಪ್ರಭಾವವನ್ನು ಬೀರಲಾಯಿತು. ಈಗ ಆ ತರಹದ ಪ್ರಭಾವ ದಟ್ಟವಾಗಿ ಪ್ರತಿಮಾ ರಾಜಕಾರಣ ಹೊಸದೊಂದು ಕಾರ್ಯಸೂಚಿಯನ್ನು ಕಾರ್ಯಗತಗೊಳಿಸುವುದರ ಕಡೆಗೆ ಕಾರ್ಯೋನ್ಮುಖವಾಗಿದೆ.
ಇತಿಹಾಸ ತಿರುಚುವ ರೋಚಕ ಶೈಲಿ
ಇತಿಹಾಸವನ್ನು ಜನಪ್ರಿಯ ಶೈಲಿಯಲ್ಲಿ ತಿರುಚುವ ನಕಾರಾತ್ಮಕ ಶೈಲಿಯು ಒಂದು ಟ್ರೆಂಡ್ನ ರೂಪದಲ್ಲಿ ಇದೀಗ ಅಸ್ತಿತ್ವದಲ್ಲಿದೆ. ಈಗಾಗಲೇ ಆಗಿಹೋದ ಇತಿಹಾಸದಲ್ಲಿ ನಾವು ನಿಖರ ವಿವರಗಳ ಆಧಾರದಲ್ಲಿ ಮಹತ್ವದ ವ್ಯಕ್ತಿತ್ವಗಳ ಕೊಡುಗೆಗಳನ್ನು ಗ್ರಹಿಸಿಕೊಂಡಿರುತ್ತೇವೆ. ಆ ಕೊಡುಗೆಗಳು ವರ್ತಮಾನ ಮತ್ತು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ರೀತಿಯಲ್ಲಿಯೇ ಚರ್ಚಿತವಾಗಬೇಕು ಎಂಬ ಎಚ್ಚರವನ್ನೂ ಇದೇ ಇತಿಹಾಸದ ವಿವೇಚನಾತ್ಮಕ ವಿಶ್ಲೇಷಣೆಗಳು ನಮ್ಮೊಳಗೆ ನೆಲೆಗೊಳಿಸಿರುತ್ತವೆ. ರಾಜಕೀಯ ಪಡೆಗಳ ಕಾರ್ಯಸೂಚಿಗಳು ಈ ವಿವೇಚನಾತ್ಮಕ ಎಚ್ಚರದ ಪ್ರಜ್ಞೆಯನ್ನು ಒಡೆದುಬಿಡುತ್ತವೆ. ಇಲ್ಲಿಯವರೆಗೆ ಸರಿಯಾಗಿ ಗ್ರಹಿಸಿದವರ ತಲೆಮಾರಿನ ಪ್ರಜ್ಞೆಯನ್ನು ಛಿದ್ರಗೊಳಿಸಿದ್ದಲ್ಲದೇ ಹೊಸ ಪೀಳಿಗೆಯೊಳಗೂ ಅನುಮಾನಗಳನ್ನು ಬಿತ್ತಿ ಅಧಿಕಾರದ ಗಮ್ಯವನ್ನು ತಲುಪಿಕೊಳ್ಳುವ ಹುನ್ನಾರಗಳು ತೀವ್ರಗೊಳ್ಳುವ ಹಾಗೆಯೇ ಈ ಒಡೆಯುವಿಕೆಯು ಅಗಾಧವಾಗಿರುತ್ತದೆ. ಅಹಿಂಸೆಯಿಂದಲಷ್ಟೇ ಸ್ವಾತಂತ್ರ್ಯ ಹೋರಾಟಕ್ಕೆ ಯಶಸ್ಸು ದಕ್ಕಲಿಲ್ಲ, ಗಾಂಧೀಜಿಯೊಬ್ಬರಿಂದಲೇ ಎಲ್ಲವೂ ಆಗಲಿಲ್ಲ, ಹಿಂಸೆಗೆ ಪ್ರಚೋದನೆ ನೀಡಿದವರು ಇಲ್ಲದಿದ್ದರೆ ಸ್ವಾತಂತ್ರ್ಯ ದಕ್ಕುತ್ತಿರಲಿಲ್ಲ, ಸಂವಿಧಾನವನ್ನು ಈ ದೇಶದ ಆಚಾರ-ವಿಚಾರಗಳಿಗೆ ಅನುಗುಣವಾಗಿ ಬದಲಿಸಬೇಕು, ಅದರಲ್ಲಿ ಅನೇಕ ಸಮಸ್ಯೆಗಳಿವೆ, ಇಂಥವರ ಬದಲು ಇಂಥವರು ಪ್ರಧಾನಿಯಾಗಿದ್ದಿದ್ದರೆ ಈ ದೇಶದ ಚಿತ್ರಣವೇ ಬದಲಾಗಿಬಿಟ್ಟಿರುತ್ತಿತ್ತು… – ಹೀಗೆ ವಿವಿಧ ರೀತಿಗಳಲ್ಲಿ ತರಹೇವಾರಿ ವಿತಂಡವಾದಿ ದೃಷ್ಟಿಕೋನಗಳನ್ನು ಹರಿಬಿಟ್ಟು ಇತಿಹಾಸದ ಸಾಂಸ್ಥಿಕ ಮೌಲ್ಯಕ್ಕೆ ಧಕ್ಕೆಯುಂಟುಮಾಡಲಾಗುತ್ತಿದೆ.
ಭಾವುಕ ಸರೋವರಕ್ಕೆ ವಿಷ ಬೆರೆಕೆ
ಒಂದು ಕಡೆಗೆ ದೇವರು, ಧರ್ಮ, ನಂಬಿಕೆಗಳ ಕುರಿತ ಜಿಜ್ಞಾಸೆ. ಮತ್ತೊಂದು ಕಡೆಗೆ ಯಾತನೆಗಳೊಂದಿಗೇ ಬದುಕು ದೂಡುವ ಅನಿವಾರ್ಯತೆ ಎದುರಿಸುತ್ತಿರುವ ಜನರು. ಸಮಸ್ಯೆಗಳನ್ನು ನಿವಾರಿಸುವ ಮಹತ್ವದ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದ್ದ ಅಧಿಕಾರರೂಢ ಆಡಳಿತಾತ್ಮಕ ವ್ಯವಸ್ಥೆಯು ತನ್ನ ಪಾಡಿಗೆ ತಾನಿರುತ್ತಾ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುತ್ತಾ ಸಹನಶೀಲತೆಯು ಭಾರತೀಯ ಪರಂಪರೆಯ ಬಹುದೊಡ್ಡ ಹೆಮ್ಮೆ ಎಂಬುದನ್ನೇ ಮುನ್ನೆಲೆಗೆ ತರುತ್ತದೆ. ಬದಲಾವಣೆಗೆ ಕಾಯಬೇಕು, ಸಮಸ್ಯೆಗಳಿದ್ದರೆ ಸಹಿಸಿಕೊಳ್ಳಬೇಕು, ಒಂದಲ್ಲ ಒಂದು ದಿವಸ ಅವು ಪರಿಹಾರ ಕಾಣುತ್ತವೆ, ಅದಕ್ಕಾಗಿಯೇ ನಾವು ಶ್ರಮಿಸುತ್ತಿರುವುದು ಎಂದು ಅಧಿಕಾರರೂಢ ರಾಜಕಾರಣ ನಂಬಿಸುತ್ತದೆ. ಪ್ರಶ್ನೆಗಳು, ಪ್ರತಿರೋಧದ ಅಲೆ ಶುರುವಾಗುತ್ತಿದ್ದಂತೆ ದೇವರು, ಧರ್ಮ ಮತ್ತು ನಂಬಿಕೆಗಳಿಗೆ ಸಂಬಂಧಿಸಿದ ಭಾವುಕ ಸಂಗತಿಗಳ ಸರೋವರಕ್ಕೆ ಕಲ್ಲೆಸೆದು ವೈರುಧ್ಯದ ಅಲೆಗಳನ್ನೇಳಿಸಿಬಿಡುತ್ತದೆ.ಶುದ್ಧ ತಿಳಿವಿನ ತಿಳಿನೀರಿನೊಳಗೆ ಧರ್ಮ, ಜಾತಿ, ಲಿಂಗ ಬೇಧದ ವಿವಾದದ ವಿಷವನ್ನು ಬೆರೆಸಿ ರಾಡಿ ಎಬ್ಬಿಸಿಬಿಡುತ್ತದೆ.
ಸ್ವಯಂದ್ವಂದ್ವಗಳ ಒದ್ದಾಟ
ಇದಾವುದರ ಅರಿವಿಲ್ಲದ ಮುಗ್ಧ ಜನರು ದೇವರೇ ಅವತಾರವೆತ್ತಿ ಮುಂದೊಂದು ದಿನ ತಮ್ಮ ಸಮಸ್ಯೆಗೆ ಪರಿಹಾರ ನೀಡುತ್ತಾರೆ ಅಂದುಕೊಳ್ಳುತ್ತಾ, ತಮ್ಮ ಬದುಕನ್ನು ಉದ್ಧರಿಸಿಕೊಳ್ಳುವ ಸಂವಿಧಾನಾತ್ಮಕ ಅವಕಾಶಗಳನ್ನು ನಿರಾಕರಿಸುತ್ತಾ ಅದೇ ರಾಡಿಯೊಳಗೇ ಸಿಲುಕಿ ಹೊರಬರಲಾಗದೇ ಒದ್ದಾಡುತ್ತಿರುತ್ತಾರೆ. ದೇವಾಲಯ ಪ್ರವೇಶಿಸಬೇಕೇ? ಬೇಡವೇ? ಪ್ರವೇಶಿಸದಿದ್ದರೆ ಏನಾಗುತ್ತದೆ? ಪ್ರವೇಶಿಸಿದರೆ ಏನಾಗುತ್ತದೆ? ದೇವಾಲಯ ಪ್ರವೇಶದ ಮೂಲಕವೇ ಭಾರತದ ಸಮಾನತೆಯ ಕನಸು ಸಾಕಾರಗೊಳ್ಳುವ ಮೊದಲ ಹೆಜ್ಜೆ ಶುರುವಾಗಬೇಕು? ಎಂಬ ಪ್ರಶ್ನೆಗಳನ್ನೇ ದೃಷ್ಟಿಯಲ್ಲಿರಿಸಿಕೊಂಡ ಚರ್ಚೆಗಳೇ ಪ್ರಧಾನ ಆದ್ಯತೆ ಪಡೆದುಕೊಂಡುಬಿಡುತ್ತವೆ. ದೇವಾಲಯದೊಳಗೆ ಪ್ರವೇಶ ಸರಿಯೇ ತಪ್ಪೇ? ದೇವಸ್ಥಾನದೊಳಗೆ ಪ್ರವೇಶಿಸಿ ಆಮೇಲೆ ದೇವರು ಕುಪಿತಗೊಂಡರೆ? ಈ ತರಹದ ಸ್ವಯಂದ್ವಂದ್ವಗಳೊಂದಿಗೆ ಜನರು ಒದ್ದಾಡುವ ಹಾಗೆ ವಿಚಿತ್ರ ಸನ್ನಿವೇಶ ಸೃಷ್ಟಿಯಾಗುತ್ತದೆ. ಅಂಥ ಒದ್ದಾಟವನ್ನೇ ರಾಜಕಾರಣ ತನ್ನ ಸಂಕುಚಿತ ಇರುವಿಕೆಯನ್ನು ನಿರಂತರವಾಗಿ ಚಾಲ್ತಿಯಲ್ಲಿರಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತದೆ.
ತಿರುಚಿದ ವಿವರಗಳ ವೈಭವ!
ಸರಿಯಾಗಿ ಆಲೋಚಿಸುವ ಮತ್ತು ಸರಿಯಾಗಿ ಆಲೋಚಿಸದ ಎರಡು ಗುಂಪುಗಳಲ್ಲಿ ಚಿಂತಕರು ವಿಭಜಿಸಲ್ಪಡುತ್ತಿದ್ದಾರೆ. ಸರಿಯಾಗಿ ಆಲೋಚಿಸುವ ಗುಂಪಿನೊಳಗೂ ಸರಿಯಾಗಿ ಆಲೋಚಿಸದವರೂ ಇರಬಹುದು. ಅಂಥವರು ಅತ್ಯಂತ ವಿವೇಚನಾಪೂರ್ಣವಾಗಿ ಯೋಚಿಸಿ ಪ್ರತಿಕ್ರಿಯಿಸುವವರು. ಓದಿಕೊಳ್ಳುವ, ತಿಳಿದುಕೊಳ್ಳುವ, ಇತಿಹಾಸಕ್ಕೆ ಅಪಚಾರ ಬಗೆಯದ ಸಂಯಮದ ವ್ಯಕ್ತಿತ್ವಗಳವರು ಅವರು. ಈ ಗುಂಪಿನಲ್ಲಿಯೂ ಸರಿಯಾಗಿ ಆಲೋಚಿಸದವರೂ ಸಿಗಬಹುದು. ಸರಿಯಾಗಿ ಯೋಚಿಸುವ ಮತ್ತು ಯೋಚಿಸದ ಸಮ್ಮಿಶ್ರ ಗುಂಪಿಗೆ ಪ್ರತಿಯಾಗಿ ಮತ್ತೊಂದು ಗುಂಪು ಯೋಚಿಸುವ ಸಹನೆಯನ್ನೇ ಹೊಂದಿರುವುದಿಲ್ಲ. ಯಥಾಸ್ಥಿತಿ ವಾದಗಳನ್ನೇ ಅತ್ಯಂತ ರಂಜನೀಯವಾಗಿ ಬಿಂಬಿಸುವುದರಲ್ಲಿಯೇ ಖುಷಿ ಕಾಣುವವರು ಇವರು. ತಾವೂ ಯೋಚಿಸುವುದಿಲ್ಲ, ಇನ್ನೊಬ್ಬರು ಯೋಚಿಸುವುದಕ್ಕೂ ಬಿಡುವುದಿಲ್ಲ. ಅಂಥ ಕೆಟಗರಿಯವರು. ಇಂಥ ಗುಂಪುಗಳ ವೈರುಧ್ಯಗಳನ್ನೇ ಇವತ್ತಿನ ರಾಜಕಾರಣವು ತನ್ನ ಮೂಗಿನ ನೇರಕ್ಕೆ ಬಳಸಿಕೊಂಡು ಹೊಸಪೀಳಿಗೆಯನ್ನು ದಾರಿ ತಪ್ಪಿಸುವ ತನ್ನ ಅಜೆಂಡಾವನ್ನು ಅನುಷ್ಠಾನಗೊಳಿಸುತ್ತಿದೆ. ಇತಿಹಾಸದ ಯಾವ ಗಂಧಗಾಳಿ ಗೊತ್ತಿಲ್ಲದವರ ಮುಂದೆ ತಿರುಚಿದ ವಿವರಗಳನ್ನು ಮುಂದಿಟ್ಟಾಗ ಸಹಜವಾಗಿಯೇ ಆರಾಧನಾ ಭಾವ ಹುಟ್ಟಿಕೊಳ್ಳುತ್ತದೆ.
ಚಿಂತಕರ ಅಪಹರಣ
ಈಗಿನ ವೈಚಿತ್ರ್ಯವೆಂದರೆ ಈ ಆರಾಧನೆಯ ಭಾವೋನ್ಮಾದವು ಸರಿಯಾಗಿ ಆಲೋಚಿಸಬೇಕಾದ ಚಿಂತಕರನ್ನೂ ಆವರಿಸಿಕೊಂಡಿದೆ. ತಮಗಿರುವ ಯೋಚಿಸುವ ಶಕ್ತಿಯನ್ನು ಅಧಿಕಾರದಲ್ಲಿರುವವರ ಸುಪರ್ದಿಗೆ ಒಪ್ಪಿಸಿ ಅವರು ಇಟ್ಟ ಹೆಜ್ಜೆಗಳೆಲ್ಲವೂ ಸರಿ ಎಂಬ ಮೂಢನಂಬಿಕೆಯೊಂದಿಗೆ ಇದ್ದು, ಆ ಮೌಢ್ಯವನ್ನು ವರ್ಣರಂಜಿತ ಪದಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಗುಂಪಿನಲ್ಲಿ ಈಗಾಗಲೇ ಜನಪ್ರಿಯರಾದ ಲೇಖಕರಿದ್ದಾರೆ. ಸುದಿ ಮಾಧ್ಯಮ ಪ್ರತಿನಿಧಿಸುವ ಹಿರಿಯ ಪತ್ರಕರ್ತರಿದ್ದಾರೆ. ನಟರುಗಳಿದ್ದಾರೆ. ನಟಿಯರಿದ್ದಾರೆ. ತಮ್ಮ ಪ್ರತಿಭೆಯ ಮೂಲಕ ಪಡೆದ ಜನರ ಮನ್ನಣೆಯನ್ನು ಅವರು ಅಧಿಕಾರದಲ್ಲಿರುವವರನ್ನು ಆರಾಧಿಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದೇ ಆರಾಧನಾ ಮನೋಭಾವನೆಯನ್ನು ಜನರೂ ತಾಳುವಂತೆ ಪ್ರಚೋದಿಸುತ್ತಿದ್ದಾರೆ.
ವಿತಂಡವಾದಿ ಸರಳಸೂತ್ರ
ಇಂಥ ಸಂದರ್ಭದಲ್ಲೆಲ್ಲಾ ಅವರು ಸರಳ ಸೂತ್ರವನ್ನು ಅಳವಡಿಸಿಕೊಳ್ಳುತ್ತಾರೆ. ಅಧಿಕಾರದಲ್ಲಿರುವವರನ್ನು ನೀವು ಪ್ರಶ್ನಿಸುತ್ತೀರಿ ಎಂದಾದರೆ, ಯಾರನ್ನು ಆಯ್ಕೆ ಮಾಡುತ್ತೀರಿ? ಇಂಥವರನ್ನಾ? ಎಂದು ಎಸೆದದ್ದಷ್ಟೇ ಅಲ್ಲ, ಇತಿಹಾಸದಲ್ಲಿ ಆಗಿಹೋದ ನಕಾರಾತ್ಮಕ ಸಂಗತಿಗಳನ್ನು ದೇವರು, ಧರ್ಮ ಮತ್ತು ನಂಬಿಕೆಗಳಂತಹ ವಿಷಯಗಳಿಗೆ ತಳುಕು ಹಾಕಿ ಸರಳೀಕರಿಸಿ ವಿತಂಡವಾದವನ್ನು ಮುಂದಿಡುತ್ತಾರೆ. ಟಿವಿ ಚಾನಲ್ಗಳ ಆ್ಯಂಕರ್ಗಳು, ‘ಸುದ್ದಿಮಿತ್ರರು’ ಈ ವಿತಂಡವಾದದ ಒಳಗೇ ಲಭ್ಯವಾಗುವ ವಿವರಗಳನ್ನೇ ಆಧರಿಸಿ ತಾವೇನೋ ಮಹತ್ವದ್ದನ್ನು ಸಂಶೋಧಿಸಿದ್ದೇವೆ ಎನ್ನುವಂತೆ ಮಾತನಾಡುತ್ತಾರೆ. ಈ ಬಗೆಯ ದಾರಿ ತಪ್ಪಿಸುವ ಆಟ ಬಹಳ ದಿವಸಗಳ ಕಾಲ ನಡೆಯುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿದ್ದರೂ ನಡೆದಷ್ಟು ದಿವಸ ಮಾಧ್ಯಮಗಳಿಗೆ ಲಾಭ ದಕ್ಕಿದರೆ ಸಾಕಲ್ಲವೇ ಎಂಬ ಭಂಡಧೈರ್ಯದೊಂದಿಗೆ ಇರುತ್ತಾರೆ.
ಪ್ರಶ್ನಿಸಬೇಕು, ದ್ವೇಷಿಸಬಾರದು
ಪ್ರಶ್ನಿಸಬೇಕು, ದ್ವೇಷಿಸಬಾರದು. ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದವರನ್ನು ತಾರ್ಕಿಕವಾಗಿ ಪ್ರಶ್ನಿಸಿ ಸರಿಹಾದಿಯಲ್ಲಿರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಚಿಂತಕರು ನಿರ್ವಹಿಸಬೇಕು. ಯಾರೇ ಅಧಿಕಾರಕ್ಕೆ ಬಂದರೂ ಅವರನ್ನು ಎಚ್ಚರಿಸಬೇಕು. ಜನರು ಸರಿಯಾಗಿ ಆಲೋಚಿಸುವಂತೆ ಪ್ರೇರಣೆ ನೀಡಬೇಕು. ಚಿಂತಕರು ಮುಖ್ಯವಾಗಿ ಯಾವುದೇ ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿರುವುದಿಲ್ಲ ಎಂಬ ವಿಶ್ವಾಸ ಜನರಲ್ಲಿದೆ. ಆ ವಿಶ್ವಾಸವನ್ನು ಕಳೆದುಕೊಳ್ಳಬಾರದು. ಈ ದೇಶದ ಉನ್ನತ ಹುದ್ದೆಯಿಂದ ಕೆಳಹಂತಗಳ ಆಡಳಿತಾತ್ಮಕ ಸಂಸ್ಥೆಗಳನ್ನು ಪ್ರತಿನಿಧಿಸುವ ನಾಯಕರೆನ್ನಿಸಿಕೊಂಡವರೆಲ್ಲರೂ ನಮಗೆ ಮುಖ್ಯ. ಅವರು ಆ ಹುದ್ದೆಗಳನ್ನು ಅಲಂಕರಿಸಿದ ನಂತರ ಅವರ ಹೊಣೆಗಾರಿಕೆ ಹೆಚ್ಚುತ್ತಲೇ ಇರುತ್ತದೆ ಎಂಬುದನ್ನು ಚಿಂತಕರೆನ್ನಿಸಿಕೊಂಡವರು ನೆನಪಿಸುತ್ತಲೇ ಇರಬೇಕು. ಆದರೆ, ಇಂಥ ಜವಾಬ್ದಾರಿಯನ್ನು ಕೆಲವೇ ಕೆಲವು ಬದ್ಧತೆಯುಳ್ಳವರು ನಿರ್ವಹಿಸುತ್ತಿದ್ದಾರೆ. ಉಳಿದ ಅನೇಕರು ಅಧಿಕಾರದಲ್ಲಿರುವವರ ಬಗ್ಗೆ ಅಂಧಾಭಿಮಾನ ಪ್ರದರ್ಶಿಸುತ್ತಿದ್ದಾರೆ. ಇಂಥವರನ್ನೇ ಬಳಸಿಕೊಂಡು ರಾಜಕೀಯ ಪಡೆಗಳು ತಮ್ಮ ರಹಸ್ಯ ಕಾರ್ಯಸೂಚಿಯನ್ನು ಪ್ರಯೋಗಿಸುತ್ತಿವೆ. ಚಿಂತಕರ ಆ ಪಂಥ ಮತ್ತು ಈ ಪಂಥಗಳನ್ನು ಪರಸ್ಪರ ಸಂಘರ್ಷಕ್ಕಿಳಿಸಿ ಇತಿಹಾಸದ ವ್ಯಾಪ್ತಿಯನ್ನು ಸಂಕುಚಿತಗೊಳಿಸಿ ತಮ್ಮ ಅಧಿಕಾರದಾಹದ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆ.
–ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ3 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ2 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ1 day agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ1 day agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ1 day agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

