ದಿನದ ಸುದ್ದಿ
ಲೈಸೆನ್ಸ್ ಶುಲ್ಕ ಬಾಕಿ: ಖಾಸಗಿ ಟೆಲಿಕಾಂ ಕಂಪನಿಗಳ ದಕ್ಷತೆ ಮತ್ತು ಸರಕಾರಕ್ಕೆ ನ್ಯಾಯಾಲಯದ ತರಾಟೆ
- “ಸಂಚಾರ್ ಭವನ”ದಲ್ಲಿರುವ ಕೆಲವು ಕಿರಿಯ ಅಧಿಕಾರಿಗಳು ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ನಿರ್ದೇಶನವನ್ನು ಕೊಟ್ಟಿದ್ದಾರೆ ಎಂದರೆ ನಂಬಬಹುದೇ?. ಇಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರ ಹೇಳಿದ ವಿಪುಲ ಹಣಬಲದ ಟಿಪ್ಪಣಿಯನ್ನು ನೆನಪಿಸಿಕೊಳ್ಳದಿರಲು ಸಾಧ್ಯವಿಲ್ಲ. ಇದಲ್ಲದೆ, ಗಂಭೀರ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ಸರಕಾರ 1.47 ಲಕ್ಷ ಕೋಟಿ ರೂ.ಗಳ ಒಂದು ಭಾರೀ ಮೊತ್ತವನ್ನು ಪಡೆಯಲು ಅನುವು ಮಾಡಿಕೊಟ್ಟ ಸುಪ್ರಿಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಲು ಉತ್ಸುಕವಾಗಿಲ್ಲ ಏಕೆ ಎಂಬ ಪ್ರಶ್ನೆಯೂ ಏಳುತ್ತದೆ. 2007ರಿಂದ 2012 ರ ನಡುವೆ ತನ್ನ ಒಡೆತನದ ಬಿಎಸ್ಎನ್ಎಲ್ನ್ನು ದುರ್ಬಲಗೊಳಿಸಿ, ಈ ಖಾಸಗಿ ಕಂಪನಿಗಳು ಅಪಾರ ಲಾಭಗಳನ್ನು ಪೇರಿಸಲು ಅವಕಾಶ ಕಲ್ಪಿಸಿದ ಸರಕಾರ ಮಾತ್ರವೇ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕು.
ಪಿ. ಅಭಿಮನ್ಯು
ಫೆಬ್ರುವರಿ 14, 2020 ರಂದು ಸುಪ್ರಿಂ ಕೋರ್ಟ್, ಲೈಸೆನ್ಸ್ ಶುಲ್ಕ ಬಾಕಿಯನ್ನು ತೆರದೆ ತಪ್ಪಿಸಿಕೊಳ್ಳುತ್ತಿರುವ ಖಾಸಗಿ ಟೆಲಿಕಾಂ ಕಂಪನಿಗಳನ್ನು ಕಾಪಾಡುವ ಪ್ರಯತ್ನ ನಡೆಸುತ್ತಿದೆ ಎಂದು ಸರಕಾರವನ್ನು ತರಾಟೆಗೆ ತಗೊಂಡಿತು. ವೊಡಾಫೋನ್ ಇಂಡಿಯ, ಏರ್ಟೆಲ್ ಮತ್ತು ಟಾಟಾ ಟೆಲಿಸರ್ವಿಸಸ್ ಇವು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸದೇ ಇರುವುದಕ್ಕೆ ತೀವ್ರ ಟೀಕೆಗೆ ಒಳಗಾಗಿರುವ ಖಾಸಗಿ ಟೆಲಿಕಾಂ ಕಂಪನಿಗಳು.
ಅಕ್ಟೋಬರ್ 24, 2019ರಂದು ನ್ಯಾಯ ಮೂರ್ತಿಗಳಾದ ಅರುಣ್ ಮಿಶ್ರ, ಎಸ್.ಅಬ್ದುಲ್ ನಝೀರ್ ಮತ್ತು ಎಂ.ಆರ್.ಷಾ ಇದ್ದ ಸುಪ್ರಿಂ ಕೋರ್ಟ್ ಪೀಠ ಈ ಮೂರು ಕಂಪನಿಗಳು ಲೈಸೆನ್ಸ್ ಶುಲ್ಕ ಬಾಕಿ ರೂ.1.47 ಲಕ್ಷ ಕೋಟಿ ರೂ.ಗಳನ್ನು ಮೂರು ವಾರದೊಳಗೆ ಪಾವತಿ ಮಾಡಬೇಕು ಎಂದು ಆದೇಶಿಸಿತು. ಈ ಆದೇಶದ ಪ್ರಕಾರ ವೊಡಾಫೋನ್ 53,038 ಕೋಟಿ ರೂ., ಏರ್ಟೆಲ್ 35,586 ಕೊಟಿ ರೂ. ಮತ್ತು ಟಾಟಾ ಟೆಲಿಸರ್ವಿಸಸ್ 13,823 ಕೋಟಿ ರೂ.ಗಳನ್ನು ಪಾವತಿ ಮಾಡಬೇಕಾಗಿದೆ. ಆದರೆ ಈ ಆದೇಶದ ನಂತರ ನಾಲ್ಕು ತಿಂಗಳು ಕಳೆದರೂ ಈ ಖಾಸಗಿ ಕಂಪನಿಗಳು ಒಂದು ರೂಪಾಯಿಯನ್ನೂ ತೆರಲಿಲ್ಲ.
ಸುಪ್ರಿಂ ಕೋರ್ಟ್ ಅತ್ಯಂತ ಕೋಪೋದ್ರಿಕ್ರ ಗೊಂಡದ್ದು, ಇದಕ್ಕಿಂತ ಹೆಚ್ಚಾಗಿ, ಈ ಖಾಸಗಿ ಕಂಪನಿಗಳಿಂದ ಈ ಬಾಕಿಗಳನ್ನು ವಸೂಲಿ ಮಾಡಲು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದ ದೂರಸಂಪರ್ಕ ಇಲಾಖೆ ತನ್ನ ಕರ್ತವ್ಯ ನಿರ್ವಹಿಸುವ ಬದಲಿಗೆ, ಈ ಪಾವತಿಯನ್ನು ತಪ್ಪಿಸಿಕೊಳ್ಳಲು ಅದೇ ಅನುಕೂಲ ಕಲ್ಪಿಸಿಕೊಟ್ಟದ್ದು. ಜನವರಿ 23, 2020ರಂದು ಇಲಾಖೆ, ಸುಪ್ರಿಂ ಕೋರ್ಟ್ ಆದೇಶದಂತೆ ಈ ಟೆಲಿಕಾಂ ಕಂಪನಿಗಳಿಂದ ಯಾವುದೇ ಬಾಕಿ ಪಾವತಿಗೆ ಒತ್ತಾಯ ಹಾಕಬಾರದು ಎಂದು ಅಕೌಂಟೆಂಟ್ ಜನರಲ್ಗೆ ನಿರ್ದೇಶನ ನೀಡಿತು, ಮತ್ತು ಮುಂದಿನ ಆದೇಶದ ವರೆಗೆ, ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳಬಾರದು ಎಂದೂ ಹೇಳಿತು.
ಈ ನಿರ್ದೇಶನವನ್ನು ಪ್ರಸ್ತಾಪಿಸುತ್ತ ನ್ಯಾಯಮೂರ್ತಿ ಅರುಣ್ ಮಿಶ್ರ ಇಲ್ಲಿ ಎಷ್ಟೊಂದು ಹಣಬಲ ಇದೆ, ನನಗೆ ಬಹಳ ಯಾತನೆಯಾಗುತ್ತಿದೆ, ಈ ವ್ಯವಸ್ಥೆಯಲ್ಲಿ ಈ ನ್ಯಾಯಾಲಯದಲ್ಲಿ ಕೆಲಸ ಮಾಡಬಾರದು ಎಂದು ನನಗನಿಸುತ್ತಿದೆ ಎಂದು ಟಿಪ್ಪಣಿ ಮಾಡಿದರು.
ಈ ಮೊಕದ್ದಮೇ ಆರಂಭವಾದದ್ದು, 1999ರಲ್ಲಿ. 1995ರಲ್ಲಿ ಖಾಸಗಿ ಕಂಪನಿಗಳಿಗೆ ಟೆಲಿಕಾಂ ಸೇವೆಗಳನ್ನು ಒದಗಿಸಲು ಲೈಸೆನ್ಸ್ಗಳನ್ನು ಕೊಡಲಾಯಿತು. ಲೈಸೆನ್ಸ್ ಶರತ್ತುಗಳ ಪ್ರಕಾರ ಈ ಕಂಪನಿಗಳು ಒಂದು ನಿಗದಿತ ಲೈಸೆನ್ಸ್ ಶುಲ್ಕವನ್ನು ತೆರಬೇಕಾಗಿತ್ತು. ಆದರೆ 1995ರಿಂದ 1999ರ ವರೆಗೂ ಈ ಕಂಪನಿಗಳು ಯಾವುದೇ ಲೈಸೆನ್ಸ್ ಶುಲ್ಕವನ್ನು ತೆರಲಿಲ್ಲ. ಹೀಗೆ ಬಾಕಿಯಾದ ಶುಲ್ಕಗಳ ಮೊತ್ತ ಹಲವು ಸಾವಿರ ಕೋಟಿ ರೂ.ಗಳಿಗೇರಿತು. 1999ರಲ್ಲಿ ಆಗಿನ ಪ್ರಧಾನ ಮಂತ್ರಿ ವಾಜಪೇಯಿರುವರು ಉದಾರ ಮನಸ್ಸಿನಿಂದ ಸಂಪೂರ್ಣ ಲೈಸೆನ್ಸ್ ಶುಲ್ಕಗಳಿಗೆ ವಿನಾಯ್ತಿ ನೀಡಿದರು. ಅಲ್ಲದೆ, ನಿಗದಿತ ಲೈಸೆನ್ಸ್ ಶುಲ್ಕದ ಮಾದರಿಯ ಬದಲಿಗೆ, ರೆವಿನ್ಯೂ ಪಾಲುದಾರಿಕೆಯ ಮಾದರಿಯನ್ನು ತಂದರು.
ಇದರ ಪ್ರಕಾರ ಖಾಸಗಿ ಟೆಲಿಕಾಂ ಕಂಪನಿಗಳು, ತಮ್ಮ ರೆವಿನ್ಯೂ ಗಳಿಕೆಯ ಒಂದು ಭಾಗವನ್ನು ಲೈಸೆನ್ಸ್ ಶುಲ್ಕವಾಗಿ ತೆರಬೇಕು. ಆರಂಭದಲ್ಲಿ ಇದನ್ನು 15ಶೇ. ಎಂದು ನಿಗದಿ ಮಾಡಲಾಯಿತು, ನಂತರ ಇದನ್ನು 13ಶೇ.ಕ್ಕೆ ಇಳಿಸಲಾಯಿತು, ಅಂತಿಮವಾಗಿ 8ಶೇ. ಎಂದು ನಿಗದಿ ಮಾಡಲಾಯಿತು.
ಈ ರೆವಿನ್ನೂ ಪಾಲುದಾರಿಕೆ ಮಾದರಿಯನ್ನು ಬಳಸಿಕೊಂಡು ಈ ಟೆಲಿಕಾಂ ಕಂಪನಿಗಳು ತಮ್ಮ ರೆವಿನ್ಯೂ ಸಂಗ್ರಹವನ್ನು ಸತತವಾಗಿ ಕಡಿಮೆಗೊಳಿಸಿ ತೋರಿಸಲಾರಂಭಿಸಿ, ಸರಕಾರಕ್ಕೆ ಲೈಸೆನ್ಸ್ ಶುಲ್ಕವನ್ನು ವಂಚಿಸಿದರು. ದೂರಸಂಪರ್ಕ ಇಲಾಖೆ ಹೊರಗಣ ಆಡಿಟರ್ಗಳಿಂದ ನಡೆಸಿದ ತಪಾಸಣೆಗಳು ಈ ವಂಚನೆಯನ್ನು ತೋರಿಸಿಕೊಟ್ಟವು. ಇದರಿಂದಾಗಿ, ಅವು ಲೈಸೆನ್ಸ್ ಶುಲ್ಕ ತೆರುವಂತೆ ಮಾಡಲಾಯಿತು.
ಇದಲ್ಲದೆ, ಆರಂಭದಿಂದಲೇ, ಈ ಖಾಸಗಿ ಕಂಪನಿಗಳು ಎಜಿಆರ್(ಸರಿಹೊಂದಿಸಿದ ಒಟ್ಟು ರೆವಿನೂ ಆದಾಯ)ದ ಲೆಕ್ಕಾಚಾರದಲ್ಲಿ ಕೈಚಳಕ ನಡೆಸಿಕೊಂಡು ಬಂದವು. ಈ ಎಜಿಆರ್ನಲ್ಲಿ ಟೆಲಿಕಾಂ ಸೇವೆಯಿಂದ ಬರುವ ಆದಾಯವನ್ನು ಮಾತ್ರ ತೆಗೆದುಕೊಳ್ಳಬೇಕು, ಹ್ಯಾಂಡ್ಸೆಟ್ಗಳ ಮಾರಾಟ, ರದ್ದಿಗಳು ಇತ್ಯಾದಿಗಳಿಂದ ಬರುವ ಆದಾಯಗಳು ಇದರ ವ್ಯಾಪ್ತಿಗೆ ಬರುವುದಿಲ್ಲ ಎಂಬ ನಿಲುವು ತಳೆದವು. ಆದರೆ ಸರಕಾರ ಎಜಿಆರ್ನಲ್ಲಿ ಇವೆಲ್ಲ ಆದಾಯಗಳೂ ಸೇರುತ್ತವೆ ಎಂಬ ನಿಲುವು ತಳೆಯಿತು (ಆದರೆ ಈಗಿನ ಸರಕಾರ ಅಂತಹ ನಿಲುವು ತಳೆಯಬಾರದಿತ್ತು ಎಂದು ಖೇದಗೊಳ್ಳುತ್ತಿರಬಹುದು). ಈ ವಿವಾದ ಬಹಳ ವರ್ಷಗಳ ಕಾಲ ನೆನೆಗುದಿಗೆ ಬಿದ್ದಿತ್ತು. ಕಳೆದ ಅಕ್ಟೋಬರ್ ೨೪ರಂದು ಸುಪ್ರಿಂ ಕೋರ್ಟ್ ಆದೇಶದೊಂದಿಗೆ ಅದು ಇತ್ಯರ್ಥಗೊಂಡಿತು.
ನ್ಯಾಯಮೂರ್ತಿ ಅರುಣ್ ಮಿಶ್ರರವರ ಫೆಬ್ರುವರಿ 14, 2020ರ ಟಿಪ್ಪಣಿಯಿಂದ ಖಂಡಿತವಾಗಿಯೂ ಎರಡು ಪ್ರಶ್ನೆಗಳು ಏಳುತ್ತವೆ. ಮೊದಲನೆಯದ್ದು, ಜನವರಿ 23ರಂದು ದೂರಸಂಪರ್ಕ ಇಲಾಖೆ ಅಕೌಂಟೆಂಟ್ ಜನರಲ್ರಿಗೆ ಕೊಟ್ಟ ನಿರ್ದೇಶನಕ್ಕೆ ಸಂಬಂಧಪಟ್ಟಿದೆ. ದೂರಸಂಪರ್ಕ ಇಲಾಖೆಯ ಇಬ್ಬರು ಡೆಸ್ಕ್ ಅಧಿಕಾರಿಗಳು ಇಂತಹ ನಿರ್ದೇಶನಕ್ಕೆ ಹೊಣೆಗಾರರು ಎಂದು ಅಕೌಂಟೆಂಟ್ ಜನರಲ್ ತುಷಾರ್ ಮೆಹ್ತ ನ್ಯಾಯಾಲಯಕ್ಕೆ ತಿಳಿಸಿದರು. ಈ ಬಗ್ಗೆ ದೂರಸಂಪರ್ಕ ಮಂತ್ರಿಗಳಿಗಾಲೀ, ಇಲಾಖೆಯ ಕಾರ್ಯದರ್ಶಿಗಳಿಗಾಗಲಿ ತಿಳಿದೇ ಇರಲಿಲ್ಲ ಎಂದು ಹೇಳಲಾಗಿದೆ. ಆದರೆ ಸಂಚಾರ್ ಭವನದಲ್ಲಿರುವ ಕೆಲವು ಡೆಸ್ಕ್ ಅಧಿಕಾರಿಗಳು ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ಇಂತಹ ನಿರ್ದೇಶನವನ್ನು ಕೊಟ್ಟಿದ್ದಾರೆ ಎಂದರೆ ನಂಬುವುದು ಕಷ್ಟವೇ. ಇಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರ ಹೇಳಿದ ವಿಪುಲ ಹಣಬಲದ ಟಿಪ್ಪಣಿಯನ್ನು ನೆನಪಿಸಿಕೊಳ್ಳದಿರಲು ಸಾಧ್ಯವಿಲ್ಲ.
ಎರಡನೆಯ ಪ್ರಶ್ನೆಯೆಂದರೆ, ಗಂಭೀರ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ಸರಕಾರ 1.47 ಲಕ್ಷ ಕೋಟಿ ರೂ.ಗಳ ಒಂದು ಭಾರೀ ಮೊತ್ತವನ್ನು ಪಡೆಯಲು ಅನುವು ಮಾಡಿಕೊಟ್ಟ ಸುಪ್ರಿಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಲು ಉತ್ಸುಕವಾಗಿಲ್ಲ ಏಕೆ ಎಂಬುದು.
ಈ ಖಾಸಗಿ ಟೆಲಿಕಾಂ ಕಂಪನಿಗಳ, ಅದರಲ್ಲೂ ವೊಡಾಫೋನ್ನ ಆರ್ಥಿಕ ಪರಿಸ್ಥಿತಿ ಎಷ್ಟು ನಾಜೂಕಾಗಿದೆಯೆಂದರೆ, ಇಷ್ಟೊಂದು ದೊಡ್ಡ ಮೊತ್ತವನ್ನು ಅವು ಎಲ್ಲಿಂದ ತಾನೇ ಹೊಂದಿಸ ಬಲ್ಲವು ಎಂದು ಮಾಧ್ಯಮಗಳು ಕಣ್ಣೀರು ಹಾಕುತ್ತಿವೆ. ಆದರೆ ಈ ಕಂಪನಿಗಳು ಭಾರತೀಯ ಟೆಲಿಕಾಂ ಉದ್ಯಮದಲ್ಲಿ ಗಳಿಸಿದ ಅಪಾರ ಸಂಪತ್ತು, ಅದರಲ್ಲೂ, 2007ರಿಂದ 2012 ರ ನಡುವೆ ಸರಕಾರವೇ ತನ್ನ ಒಡೆತನದ ಬಿಎಸ್ಎನ್ಎಲ್ನ್ನು ದುರ್ಬಲಗೊಳಿಸುತ್ತಿದ್ದ ಅವಧಿಯಲ್ಲಿ ಪೇರಿಸಿಟ್ಟ ದೈತ್ಯಪ್ರಮಾಣದ ಲಾಭಗಳು ಎಲ್ಲ ಎಲ್ಲಿಗೆ ಹೋದವು? ಸರಕಾರ ಮಾತ್ರವೇ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕು.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.
ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ
ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.
2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.
₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.
ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.
ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?
ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್ ಖರೀದಿ, ಬಸ್ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.
₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್ ಖರೀದಿ, ವೇತನ, ಡೀಸೆಲ್, ಪಿಎಫ್ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.
ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್ ಬಸ್ಗಳ ಜತೆಗೆ ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.
ಸಕಾಲಿಕ ಪಾವತಿಯೇ ಪರಿಹಾರವೇ?
ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

ದಿನದ ಸುದ್ದಿ
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!
ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.
http://Visit : www.suddidina.com
ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್ ಉದ್ದ ಹಾಗೂ 59.14 ಮೀಟರ್ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.
ಒಣಭೂಮಿಗೆ ಹಸಿರು ಹೊದಿಸಿದ ನೀರು
ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತದೆ.
ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.
ಕುಡಿಯುವ ನೀರಿಗೂ ಭದ್ರೆಯೇ ಆಸರೆ
ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.
ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು
ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್ ಘನ ಮೀಟರ್ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್ ಸ್ಟೋರೇಜ್ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.
ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.
ಭದ್ರೆಯ ಅಂಕಿ-ಅಂಶಗಳು
- ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
- ಅಣೆಕಟ್ಟು ಎತ್ತರ: 59.14 ಮೀಟರ್
- ಅಣೆಕಟ್ಟು ಉದ್ದ: 1,708 ಮೀಟರ್
- ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
- ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್
- ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.

ದಿನದ ಸುದ್ದಿ
ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ
ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.
| ಹೈಲೈಟ್ಸ್: |
|
http://Visit : www.suddidina.com
ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?
ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.
ಹೊಸ ಸಾಲಿನಲ್ಲೂ ಅದೇ ಕಥೆ
2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.
ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ
ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.
2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ
- 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
- ಮೊದಲ ಕಂತಿಗೆ ಅನುಮೋದನೆ: 61
- ಪ್ರೋತ್ಸಾಹ ಧನ ಪಾವತಿ: 00
- ಅಪೂರ್ಣ ಅರ್ಜಿಗಳು: 392
- ತಿರಸ್ಕಾರಗೊಂಡ ಅರ್ಜಿಗಳು: 02
ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ
ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.
ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ7 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


