ದಿನದ ಸುದ್ದಿ
ಕೈಗಾರಿಕೆ ಸ್ಥಾಪನೆ ಮಾಡುವ ಉದ್ಯಮಿಗಳಿಗೆ 24 ಗಂಟೆಯೊಳಗೆ ಸೌಲಭ್ಯ : ಸಚಿವ ಮುರುಗೇಶ್ ನಿರಾಣಿ
ಸುದ್ದಿದಿನ,ಬೆಂಗಳೂರು : ಕೈಗಾರಿಕೆ ಸ್ಥಾಪನೆಯನ್ನು ರಾಜ್ಯದ ಯಾವುದೇ ಭಾಗಗಳಲ್ಲಿ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಇಪ್ಪತ್ತನಾಲ್ಕು ಗಂಟೆಯೊಳಗಡೆ ಜಮೀನು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಬದ್ದವಾಗಿದೆ ಎಂದು ಸಚಿವ ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ವಿಧಾನಸಭೆಯಲ್ಲಿ ಹೇಳಿದರು.
ಕರ್ನಾಟಕದಲ್ಲಿ ಕೈಗಾರಿಕೆಗಳನ್ನ ಸಮಗ್ರವಾಗಿ ಅಭಿವೃದ್ದಿಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಶಾಸಕ ಯಶವಂತರಾಯವಿಠಲಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದರೆ ಎಲ್ಲ ರೀತಿಯ ಸೌಕರ್ಯವನ್ನು ಕಲ್ಪಿಸಿಕೊಡಲು ಸಿದ್ದ ಎಂದು ತಿಳಿಸಿದರು.
ಸಮಗ್ರ ಕೈಗಾರಿಕೆ ಅಭಿವೃದ್ದಿಗಾಗಿ ಪ್ರತಿ ಜಿಲ್ಲೆಯಲ್ಲೂ ಒಂದು ಸಾವಿರ ಎಕರೆ ಹಾಗೂ ತಾಲ್ಲೂಕು ಮಟ್ಟದಲ್ಲಿ 100 ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿಯೇ ಮೀಸಲಿಡಲು ತೀರ್ಮಾನಿಸಿದ್ದೇವೆ ಎಂದರು.
ವಾರದೊಳಗೆ ಅಧಿಸೂಚನೆ ರಾಮನಗರ ಜಿಲ್ಲೆ ಮಾಗಡಿ ನಗರದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ ವತಿಯಿಂದ ಕೈಗಾರಿಕಾ ವಲಯ ಸ್ಥಾಪನೆ ಮಾಡಲು ಒಂದು ವಾರದೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು.
ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಮಾಗಡಿಯಲ್ಲಿ ಕೆಐಎಡಿಬಿ ವತಿಯಿಂದ ಕೈಗಾರಿಕಾ ವಲಯ ಸ್ಥಾಪನೆ ಮಾಡಲು 3 ಸಾವಿರ ಎಕರೆ ಜಮೀನನ್ನು ಗುರುತಿಸಿದ್ದೇವೆ. ಸ್ವತಃ ನಾನೇ ಅಕಾರಿಗಳ ಜೊತೆ ಈ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ.
ಇಲ್ಲಿ ಕೈಗಾರಿಕಾ ವಲಯ ಅಗತ್ಯವಿರುವುದು ಗಮನಕ್ಕೆ ಬಂದಿದೆ. ಒಂದು ವಾರದೊಳಗೆ ಕೈಗಾರಿಕಾ ವಲಯ ಸ್ಥಾಪಿಸಲು ಅಸೂಚನೆ ಹೊರಡಿಸುವುದಾಗಿ ತಿಳಿಸಿದರು.
ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ
ಡಾ.ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿ ಪ್ರಾರಂಭವಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಕೊಡಬೇಕೆಂಬ ನಿಯಮದಲ್ಲಿ ನಾವು ಯಾವುದೇ ರಾಜೀಯಾಗುವ ಪ್ರಶ್ನೆಯೇ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಶಾಸಕಿ ರೂಪಾಲಿ ಸಂತೋಷ್ ನಾಯಕ್ ಪರವಾಗಿ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಯಾವುದೇ ಭಾಗದಲ್ಲೂ ಹೊಸದಾಗಿ ಕೈಗಾರಿಕೆ ಸ್ಥಾಪನೆ ಮಾಡಿದರೆ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗಗಳನ್ನು ನೀಡಲೇಬೇಕು. ಇದು ನಮ್ಮ ಸರ್ಕಾರದ ಬದ್ದತೆ. ವಿಶೇಷವಾಗಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ, ಆದ್ಯತೆ ನೀಡಲಿದ್ದೇವೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243