ದಿನದ ಸುದ್ದಿ
ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು : ಐಪಿಎಸ್ ಅಧಿಕಾರಿ ಅಣ್ಣಾಮಲೈ ಭಾವನಾತ್ಮಕ ಪತ್ರ, ಮಿಸ್ ಮಾಡ್ದೆ ಓದಿ
ಸ್ನೇಹಿತರೇ ಮತ್ತು ನನ್ನ ಹಿತೈಷಿಗಳೇ,
ಎಲ್ಲರಿಗೂ ನಮಸ್ಕಾರ. ನನ್ನ ರಾಜೀನಾಮೆ ಕುರಿತು ಪ್ರಕಟವಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಕೆಲವೊಂದು ವಿಜಯಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.
ಇಂದು, ಮೇ 28, 2019 ರಂದು ನಾನು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇದರ ಆಡಳಿತಾತ್ಮಕ ಪ್ರಕ್ರಿಯೆ ಮುಗಿಯಲು ಕೆಲ ಸಮಯ ತಗಲಬಹುದು. ಈ ಕುರಿತು ಚರ್ಚೆಯಾಗುತ್ತಿರುವ ಎಲ್ಲಾ ಊಹಾಪೋಹಗಳಿಗೆ ಪೂರ್ಣವಿರಾಮವಿಡಲು ನಾನೇ ಖುದ್ದು ಇದನ್ನು ಬರೆಯುತ್ತಿದ್ದೇನೆ.
6 ತಿಂಗಳ ಸುದೀರ್ಘವಾದ ಗಹನ ಚಿಂತನೆಯ ಬಳಿಕ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಕಳೆದ 9 ವರ್ಷಗಳಿಂದ ನಾನು ಈ ಸೇವೆಯಲ್ಲಿದ್ದು, ಪ್ರತಿ ಕ್ಷಣಗಳನ್ನು ‘ಖಾಕಿ’ ತತ್ವಕ್ಕೆ ಬದ್ಧವಾಗಿ ನಡೆದುಕೊಂಡು ಬಂದಿದ್ದೇನೆ. ಈ ಖಾಕಿಯಲ್ಲಿ ಸಿಗುವ ಹೆಮ್ಮೆಯ ಕ್ಷಣ ಹಾಗೂ ಸಹೋದ್ಯೋಗಿಗಳೊಂದಿಗೆ ಕಳೆದ ಕ್ಷಣಗಳು ಅವಿಸ್ಮರಣಿಯ. ಒಂದರ್ಥದಲ್ಲಿ ಪೊಲೀಸ್ ಸೇವೆಯೆಂದರೆ ದೇವರಿಗೆ ಅತೀ ಇಷ್ಟವಾದುದು ಎಂದು ನಾನು ನಂಬಿದ್ದೇನೆ. ಅತೀ ಒತ್ತಡದಲ್ಲಿ ನಿರ್ವಹಿಸುವ ಈ ಕೆಲಸದಲ್ಲಿ ಕುಂದು ಕೊರತೆಗಳು ಸಾಮಾನ್ಯ. ಅದೆಷ್ಟೋ ಕಾರ್ಯಕ್ರಮಗಳನ್ನು ನಾನು ಮಿಸ್ ಮಾಡಿದ್ದೇನೆ; ಹಲವು ಬಾರಿ ನನ್ನ ಕಷ್ಟಕಾಲದಲ್ಲಿ ನಿಂತವರ ಜೊತೆ ನನಗೆ ನಿಲ್ಲಲಿಕ್ಕಾಗಲಿಲ್ಲ, ಹಲವೊಮ್ಮೆ ಅಸಹಾಯಕತನ ಅನುಭವಿಸದ್ದೇನೆ; ಕೆಲವೊಮ್ಮೆ, ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿದ್ದೇನೆ.
ಕಳೆದ ವರ್ಷ ಕೈಲಾಶ ಮಾನಸಸರೋವರಕ್ಕೆ ನೀಡಿದ ಭೇಟಿ ನನ್ನ ಕಣ್ಣನ್ನು ತೆರೆಸಿದೆ. ಅದು, ಜೀವನದಲ್ಲಿ ಆದ್ಯತೆಯ ವಿಷಯಗಳನ್ನು ನನಗೆ ತಿಳಿಸಿಕೊಟ್ಟಿದೆ. ಮಧುಕರ್ ಶೆಟ್ಟಿ ಸರ್ ನಿಧನವು ಜೀವನದೊಳಗೆ ಮತ್ತೊಮ್ಮೆ ಆತ್ಮಾವಲೋಕನ ಮಾಡಲು ಪ್ರೇರೇಪಿಸಿದೆ.
ಎಲ್ಲಾ ಒಳ್ಳೆ ಕೆಲಸಗಳು ಒಂದು ದಿನ ಕೊನೆಯಾಗಲೇ ಬೇಕು, ಹಾಗೇಯೇ ನನ್ನ ಖಾಕಿ ದಿನಗಳೂ.. ಈ ನಿಟ್ಟಿನಲ್ಲಿ, ಹಿಂದೆನೇ ನಿರ್ಧಾರ ತೆಗೆದುಕೊಂಡಿದ್ದೆಯಾದರೂ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜೀನಾಮೆ ನೀಡಿ ಸರ್ಕಾರಕ್ಕೆ ಸಮಸ್ಯೆ ಉಂಟುಮಾಡುವುದು ಸರಿ ಎನಿಸಲಿಲ್ಲ. ನನ್ನ ರಾಜೀನಾಮೆಯಿಂದ ನಿಮಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ. ಪ್ರಾಮಾಣಿಕವಾಗಿ ಹೇಳೋದಾದರೆ, ನಾನಿದನ್ನು ಈಗ ಮಾಡಲೇಬೇಕು. ಈ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ನನ್ನ ಜೊತೆ ನಿಂತ ನನ್ನ ಆಪ್ತ ಸ್ನೇಹಿತೆ, ನನ್ನ ಮಡದಿಗೆ ಇದು ಬಹಳ ಭಾವನಾತ್ಮಕ ಸನ್ನಿವೇಶ.
ಮುಂದೇನು?
ನನ್ನ ಮುಂದಿನ ನಡೆಯೇನು ಎಂದು ತಿಳಿಯಲು ಬಯಸುವವರಿಗೆ ಹೇಳೋದಾದರೆ, ಬಹಳ ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳಲು, ನಾನೊಬ್ಬ ಸಣ್ಣ ಮನುಷ್ಯ. ನಾನು ಜೀವನದಲ್ಲಿ ಕಳೆದುಕೊಂಡಿರುವ ಸಣ್ಣ ಪುಟ್ಟ ಸಂತೋಷಗಳನ್ನು ಮತ್ತೆ ಪಡೆಯಲು ಸಮಯ ಕಳೆಯಬೇಕು. ಬೆಳೆಯುತ್ತಿರುವ ನನ್ನ ಮಗನಿಗೆ ಒಳ್ಳೆ ತಂದೆಯಾಗಬೇಕು. ಆತನಿಗೆ ನನ್ನ ಅಗತ್ಯವಿದೆ.
ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು. ನಾನೀಗ ಪೊಲೀಸ್ ಅಧಿಕಾರಿಯಲ್ಲ, ನಾನೇ ಸಾಕಿದ ಕುರಿಗಳೂ ನಾನು ಹೇಳಿದ ಮಾತನ್ನು ಕೇಳುತ್ತವೋ, ಇಲ್ಲ ಗೊತ್ತಿಲ್ಲ. ಸಿಕ್ಕಿರುವ ಅವಕಾಶಗಳ ಬಗ್ಗೆ ಮಾತನಾಡಲು ನನ್ನಂಥ ನಶ್ವರ ಮನುಷ್ಯನಿಗೆ, ಜೀವನವು ಸಿಕ್ಕಿರುವ ಒಂದು ಬಲುದೊಡ್ಡ ಅವಕಾಶ.
ನನ್ನ ವೃತ್ತಿ ಜೀವನದ ಪ್ರತಿ ಹೆಜ್ಜೆಯಲ್ಲೂ, ನ್ಯಾಯದ ಹೋರಾಟದಲ್ಲಿ ನನ್ನ ಜೊತೆ ನಿಂತ ಕಾರ್ಕಳ, ಉಡುಪಿ ಮತ್ತು ಬೆಂಗಳೂರಿನ ಜನರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಅಪೂರ್ಣವಾಗಿದ್ದ ನನ್ನನ್ನು ಪರಿಪೂರ್ಣ ಮನುಷ್ಯನಾಗಿ ರೂಪಿಸಿದ್ದು ಈ ಜನ. ನನಗೆ ವೃತ್ತಿಪಾಠವನ್ನು ಕಲಿಸಿದ ಹಿರಿಯ ಸಹದ್ಯೋಗಿಗಳ ಮಾರ್ಗದರ್ಶನ ಹಾಗೂ ವೃತ್ತಿನಿಷ್ಠರಾಗಿರುವ ಕಿರಿಯ ಸಹದ್ಯೋಗಿಗಳನ್ನು ನಾನು ಬಹಳ ಮಿಸ್ ಮಾಡುವೆ. ಹಿರಿಯ ಕಿರಿಯ ಪೇದೆಗಳನ್ನೂ ಅಷ್ಟೇ ಮಿಸ್ ಮಾಡುವೆ. ನಾನು ಅವರಿಗಾಗಿ ಜೀವಿಸಿದ್ದೇನೆ, ಅವರ ಹಕ್ಕು-ಉತ್ತಮ ಜೀವನ ಗುಣಮಟ್ಟ ಅವರಿಗೆ ಸಿಗುವಂತಾಗಲು ನಾನು ಪರಿಶ್ರಮ ಪಟ್ಟಿದ್ದೇನೆ.
ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಾನು ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ನನಗಿದೆ. ಒಂದು ವೇಳೆ ನನ್ನಿಂದ ಯಾವುದೇ ತಪ್ಪಾಗಿದ್ದರೂ, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ನಾನೂ ನಿಮ್ಮಂತೆ ಒಬ್ಬ ಮನುಷ್ಯ.
ನಾನು ನಿಮ್ಮೆಲ್ಲರನ್ನು ಮಿಸ್ ಮಾಡ್ತೇನೆ, ವಿಶೇಷವಾಗಿ ನಿಮ್ಮಲ್ಲೆರ ಪ್ರೀತಿ ಹಾಗೂ ವಿಶ್ವಾಸವನ್ನು.
ನಿಮ್ಮ ಪ್ರೀತಿಯ
ಅಣ್ಣಾಮಲೈ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

