ದಿನದ ಸುದ್ದಿ

ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು..!

Published

on

  • ಪ್ರೀತಿ.ಟಿ.ಎಸ್, ದಾವಣಗೆರೆ

ಬೇಂದ್ರೆಯವರು “ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು, ಕಳೆದ ದುಃಖಗಳಲ್ಲಿ ನೆನೆದಂತೆಯೆ” ಎಂದು ತಮ್ಮ ಸಖೀ ಗೀತದಲ್ಲಿ ಹಾಡುತ್ತಾರೆ. ಆದರೆ ಈ ಹೊಸ ವರ್ಷದಲ್ಲಿ ಕಹಿದಿನಗಳ ನೆನಪೇ ಬೇಡ, ಸಿಹಿ ಕಹಿ ಕನಸುಗಳನ್ನು ಕಂಡಂತಹ ಎಳೆತನದ, ಕೆಳೆತನದ ದಿನಗಳ ನೆನಪೇ ಸ್ಥಿರವಾಗಿರಲಿ; ಕಾಲನ ಹೊಡೆತಕ್ಕೆ ಆ ಕನಸುಗಳ ನೆನಪು ಮರೆಯಾಗದಿರಲಿ.

ಹೊಸ ವರ್ಷದಲ್ಲಿ ಇದೆಂತ ಬರಿತ್ತಿದ್ದಾರೆ ಅಂತೀರ! ನಿಮಗಿಂದು ಬರೀ ಹೊಸ ವರುಷ. ಆದರೆ ನನಗೋ ನನ್ನ ಜೀವನ ಪಾವನವಾಗಿಸುವ ದಿನ. ಯಾಕೇ ಗೊತ್ತಾ? ನನ್ನ ಸಾಹಿತ್ಯ ಕ್ಷೇತ್ರಕ್ಕೆ ಅನುಕರಿಣಿಸಿ, ಸಮಾಜ ಕ್ಷೇತ್ರದಲ್ಲಿ ನನ್ನನ್ನ ತೊಡಗುವಂತೆ ಮಾಡಿ, ಕಿಂಚಿತಾದರೂ ನನ್ನಲ್ಲಿ ದಯೆ, ಕರುಣೆ, ವಿಶ್ವಾಸ, ಪ್ರೀತಿ ಹೀಗೆ ಅನೇಕ ಭಾವಗಳನ್ನ ಚಿಕ್ಕಂದಿನಿಂದ ತಿದ್ದಿ ತೀಡಿದ ನನ್ನ ತಂದೆ ತಾಯಿಯ ಜನುಮ ದಿನ.

ಹೊಸ ವರುಷಕ್ಕಿಂತ ಇವರೀರ್ವರ ಜನುಮವೇ ಅದೇನೋ ಸಂಭ್ರಮ. ಅದೇನೋ ಸಡಗರ. ಹಳೆಯ ನೆನಪಿನ ಬುತ್ತಿಯನ್ನು ಮುಚ್ಚಿಟ್ಟು ಹೊಸ ಜೀವನದ ಪಯಣಕ್ಕೆ ಅದೇನೋ ಕಾತುರದಿಂದ ಗಡಿಬಿಡಿಯಾಗುವಾಗ ಅಪ್ಪಾಜಿ ಬಂದು ಹಾದಿಯಲ್ಲಿ ಕಲ್ಲು- ಮುಳ್ಳುಗಳಿರಬಹುದು ಎಚ್ಚರ! ಆದರೆ ಅದನ್ನು ಎದುರಿಸಿ ಮುನ್ನಡೆದಾಗಲೇ ಸುಖ ಸಾಗರ ಎಂಬ ಅವರ ಆಶಯದ ನುಡಿ ಮಾತುಗಳು ಬಹುಶಃ ಇಂದು ನನ್ನನ್ನು ಇಲ್ಲಿಯವರೆಗೂ ತಂದು ನಿಲ್ಲಿಸಿದೆ.

ಮಾಮೂಲೀ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ತಂದೆ-ತಾಯಿಯ ಪೋಸ್ಟ್ ಹಾಕಿ ವಿಶ್ ಮಾಡಿದ್ರೆ ಮುಗಿತಿತ್ತು. ಆದರೆ ಈ ಭಾರಿ, ನನಗಾಗುತ್ತಿರುವುದು ವಿಚಿತ್ರ ಅನುಭವ. ಸಾವಿರ ನೋವು, ದುಃಖ-ದುಮ್ಮಾನಗಳು ಎದೆಯಲ್ಲಿದ್ರು ನಮ್ಮ ಮುಂದೆ ತೋರಿಸದೆ ಮನಸ್ಸಲ್ಲೇ ಇಟ್ಟು ಕೊರಗುತ್ತ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಸಂಸ್ಕೃತಿ, ನಾಡು-ನುಡಿ, ಸಂಸ್ಕಾರವನ್ನು ಭಿತ್ತುತ್ತ ಬಂದಿದ್ದಾರೆ. ಸುಖದಲ್ಲೆ ಬೆಳೆದ ನಮಗೆ ಕಹಿ ಜೀವನದ ಅನುಭವ ಕಡಿಮೆಯೇ!

ಅಪ್ಪಜಿ-ಅಮ್ಮನ ಆಸೆಯಂತೆ ಮಾಸ್ಟರ್ ಆಫ್ ಜರ್ನಲಿಸಂ ಅಲ್ಲಿ ಎರಡು ಬಂಗಾರದ ಪದಕ ಗೆದ್ದು ಅವರಿಗೆ ನೀಡಿ ಆಸೆ ತೀರಿಸಿದ ನಂತರವಷ್ಟೇ ತಿಳಿದ್ದದ್ದು. ಜೀವನದ ಆಳವೆಷ್ಟು ಎಂದು? ಅಪ್ಪಾಜಿ ಅಮ್ಮನನ್ನು ಬಿಟ್ಟು ಕೆಲಸ ಹುಡುಕುತ್ತ ಬೆಂಗಳೂರಿಗೆ ಬಂದಾಗ ನಿಜವಾದ ರೋಧನೆ, ನೋವು, ಒಂಟಿತನ, ಕಷ್ಟ, ಉಪವಾಸ, ಅನ್ನದ ಬೆಲೆ ಹೀಗೆ ಬದುಕಿನ ಅಷ್ಟು ಪಾಠಗಳು ತಿಳಿಯುತ್ತ ಹೋದದ್ದು. ಎಂತಹ ಒದ್ದಾಟದಲ್ಲೂ ನನ್ನ ತಂದೆ-ತಾಯಿಗೆ ತಿಳಿಸದೆ ನಗ್ತ ನಗ್ತ ಮಾತಾಡಿದ್ರು ಕ್ಷಣಮಾತ್ರದಲ್ಲಿ ಅಪ್ಪಜಿ ಮಾತ್ರ ನನ್ನ ನಗುವಿನ ಹಿಂದಿನ ದುಃಖನ ಗುರುತಿಸಿ, ಮತ್ತಷ್ಟು ಬಲ ತುಂಬುತ್ತ ಬಂದವರು.

ಜನವರಿ 1 ಬಂತೆಂದರೆ ಅಪ್ಪಾಜಿ ಅಮ್ಮನ ಹುಟ್ಟು ಹಬ್ಬ. ಈ ಭಾರಿ ನಾನು ನಿಮಗೆನೂ ಮಾಡಿದೇನು? ಕಡೆಪಕ್ಷ ಅವರ ಮುಂದೆ ಹೋಗಿ ನಿಂತು ಶುಭಾಶಯ ತಿಳಿಸಿ ಬಂದು ಬಿಡಲೇ ಎಂದರೆ ಕೈಯಲ್ಲಿ ಕಾಸಿಲ್ಲ. ಇಲ್ಲಿಂದಲೇ ಶುಭಾಶಯ ತಿಳಿಸಿ ಸುಮ್ಮನಾಗಿ ಬಿಡಲೇ ಎಂದರೆ ಮನಸ್ಸು ಒಪ್ಪುತ್ತಿಲ್ಲ. ಇದೀಗ ದುಡಿತ್ತಿದ್ದಿನಾದರು ಕಣ್ಣ ಮುಂದಿರುವ ಅಷ್ಟು ಹೊಣೆಗಾರಿಕೆಗಳು ನನ್ನನ್ನ ಕಟ್ಟಿಹಾಕ್ತಿದೆ. ಈ ಗೊಂದಲದ ನಡುವೇ ಈ ಲೇಖನ ನಿಮಗಾಗಿ.

ಅಪ್ಪಜಿ-ಅಮ್ಮ ಈ ಭಾರಿ ಹೊಸ ವರುಷದ ಹೊಸ ಆಚರಣೆ ಸಾಧ್ಯವಾಗದಿದ್ದರು ಬೇಸರಿಸದಿರಿ. ಯಾಕೆಂದರೆ ನಿಮಗಾಗಿ ನೀವು ಕಂಡ ಹೊಸ ಕನಸಿನ ಗೂಡೊಂದನ್ನ ಹೊತ್ತು ತರುತ್ತಿದ್ದೇನೆ. ತಂದ ದಿನವೇ ನಿಮ್ಮ ಈ ಜನುಮೋತ್ಸವವನ್ನು ಆಚರಿಸ್ತೇನೆ. ಇದನ್ನ ನಿಮ್ಮೊಡನೇ ಹೇಳಬಹುದಿತ್ತಾದರು, ನನ್ನ ಸಹಪಯಣಿಗರೊಡನೆ ಹಂಚಿಕೊಂಡ ಈ ಕನಸುಗಳು ನಮ್ಮ ಬಾಳಿನ ಮುಂದಿನ ಪಯಣದ ಬುತ್ತಿಯಾಗುತ್ತದೆ ಎಂಬುದು ನನ್ನ ಭಾವನೆ.

ಇಂತಹ ಅದೆಷ್ಟೋ ಅನುಭವಗಳು ಮನೆ ಬಿಟ್ಟು, ತಂದೆ ತಾಯಿಯ ಆಶಯವನ್ನು ನೆನಸಾಗಿಸೋ ಸಾವಿರ ಕನಸುಗಳನ್ನು ಹೊತ್ತು ಬಂದ ಅದೆಷ್ಟೋ ಮನಸ್ಸುಗಳಿಗೆ ಆಗಿರುತ್ತೆ. ಇನ್ನು ಕೆಲವರಿಗೆ ಇಡೀ ವರ್ಷದ ಶ್ರಮದಾಯಕ ದುಡಿಮೆ ಬಳಿಕ ಮನಸ್ಸು ಸ್ವಲ್ಪ ವಿಶ್ರಾಂತಿಯನ್ನು, ಮನೋರಂಜನೆಯನ್ನು ಬಯಸುತ್ತದೆ. ಕುಟುಂಬದ ಬಂಧವನ್ನು ಗಟ್ಟಿಗೊಳಿಸಲು ಮತ್ತು ಪ್ರೀತಿ, ಅನುಬಂಧವನ್ನು ಬಿತ್ತಲು ಹೊಸವರ್ಷವೊಂದು ಸುವರ್ಣಾವಕಾಶ. ನಮ್ಮ ಎಲ್ಲ ಕೆಲಸಕ್ಕೆ ಸ್ವಲ್ಪ ಸಮಯ ವಿಶ್ರಾಂತಿ ಕೊಟ್ಟು ರಿಲ್ಯಾಕ್ಸ್ ಮಾಡುವ ಮೂಲಕ ಸಂಭ್ರಮ, ಸಡಗರಕ್ಕೆ ಅಣಿಯಾಗೋಣ. ನಿಮ್ಮೆಲ್ಲರ ಆಸೆ, ನಿರೀಕ್ಷೆಗಳು ನೆರವೇರಲಿ ಎಂದು ಮನಸ್ಸಲ್ಲೆ ಪ್ರಾರ್ಥಿಸುತ್ತಾ, ಮುಸ್ಸಂಜೆ ಕವಿಯುತ್ತಿರುವಾಗಲೂ ಮರುದಿನದ ಬೆಳಗು ಆಶಾಕಿರಣವನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version