Connect with us

ಭಾವ ಭೈರಾಗಿ

ಮನುಷ್ಯ ಏಕಾಂಗಿಯಾಗುತ್ತಿದ್ದಾನೆಯೇ?

Published

on

ನುಷ್ಯನು ಸಹ ಜೀವಿ ಹಾಗೂ ಸಂಘ ಜೀವಿಯೂ ಎಂದು, ಮೊದಲಿನಿಂದಲೂ ಸಹ ಜೀವನ ನಡೆಸಲು ಇಷ್ಟಪಡುತ್ತಾನೆ ಒಬ್ಬಂಟಿಯಾಗಿರಲು ಅವನ ಮನಸ್ಸು ಒಪ್ಪುವುದಿಲ್ಲ. ಎಂದು ಹಿಂದಿನ ಕಾಲದಲ್ಲಿ ಹೇಳಬಹುದಿತ್ತು. ಆದರೆ ಇಂದಿನ ದಿನಗಳಲ್ಲಿ ಎಲ್ಲವೂ ತಲೆಕೆಳಗಾಗಿ ಸಂಘಜೀವಿಯಾದ ಮನುಷ್ಯನು ಏಕಾಂಗಿಯಾಗಿ ತನ್ನ ಪಾಡಿಗೆ ತಾನು ಜೀವನ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ತನ್ನ ಕೆಲಸಗಳಿಗೆ ಅಥವಾ ಅನಿವಾರ್ಯ ಸನ್ನಿವೇಶ ಬಂದೊದಗಿದ್ದಲ್ಲಿ ಮಾತ್ರ ಎಲ್ಲರನ್ನು ಆಮಂತ್ರಿಸಿ, ಬೆರೆತು ನಂತರ ಮರೆತು ಪುನಃ ಏಕಾಂಗಿಯಾಗಿ ಜೀವಿಸುತ್ತಿರುವುದು ಸಾಮಾನ್ಯವಾಗಿದೆ.

ಹಿಂದಿನ ಕಾಲದಲ್ಲಿ ಎಳೆಯರಾಗಿದ್ದಾಗ ಮಕ್ಕಳು ತಮ್ಮ ಅಕ್ಕಪಕ್ಕದ ಮನೆಯಲ್ಲಿರುವ ಮಕ್ಕಳನ್ನು ಸ್ನೇಹ ಮಾಡಿಕೊಂಡು ಗೋಲಿ, ಲಗೋರಿ, ಚಿನ್ನಿ ದಾಂಡ್ಲು, ಕಬ್ಬಡಿ, ಹೀಗೆ ನಾನಾ ತರಹದ ಆಟವನ್ನು ಆಡುತ್ತಾ ಗೆಳೆಯರೊಂದಿಗೆ ಕಾಲ ಕಳೆದು ಅಕಸ್ಮಾತ್ ಯಾರೂ ಇಲ್ಲದಿದ್ದ ಪಕ್ಷದಲ್ಲಿ ಅಪ್ಪ ಅಮ್ಮನ ಜೊತೆಯಲ್ಲಿ, ಅಣ್ಣ, ತಮ್ಮ ಮತ್ತು ತಂಗಿ, ಇವರೊಂದಿಗೆ ಆಟವಾಡಿ ನಲಿಯುತ್ತಾ ಆಟದ ಜೊತೆಗೆ ಪಾಠವನ್ನು ಕಲಿಯುತ್ತಾ ತನ್ನ ಬಾಲ್ಯದ ದಿನಗಳನ್ನು ಕಳೆಯುತ್ತಿದ್ದುದ್ದನ್ನು ನೋಡಿದ್ದೇವೆ. ದೊಡ್ಡವರಾದಂತೆ ಶಾಲೆ ಕಾಲೇಜಿಗೆ ಸೇರಿ ಅಲ್ಲಿಯ ಸಹಪಾಠಿಗಳ ಜೊತೆಗೆ ಆಟವಾಡಿ ಸಿನಿಮಾ ನಾಟಕದಂತಹ ಮನೋರಂಜನೆ ಪಡೆದು, ಓದು ಮುಗಿದ ನಂತರ ಕಾಲೇಜಿನ ಸಹಪಾಠಿಗಳು ಬೇರೆ ಬೇರೆ ಕೆಲಸಕ್ಕೆ ಸೇರಿದಾಗ ಯಾವ ಸ್ನೇಹಿತರೂ ಇಲ್ಲದೆ ಸ್ವಲ್ಪ ಸಮಯ ಬೇಸರವಾಗುವುದೆಂದು, ಹಳೆಯ ಸಹಪಾಠಿಗಳ ಒಡನಾಟವನ್ನು ಮರೆಯಲಾಗದೆ ತನ್ನ ಹಳೆಯ ಸ್ನೇಹಿತರಿಗೆ ದೂರವಾಣಿ ಮೂಲಕ ಸಂಪರ್ಕವನ್ನು ಇಟ್ಟುಕೊಳ್ಳಬಯಸುವವರು ಇರುವುದರಿಂದ ಕಾಲೇಜಿನ ಶಿಕ್ಷಣ ಮುಗಿಯುವವರೆಗೂ ಏಕಾಂಗಿಯಾಗಿರುವ ಅನುಭವವೇ ಇಲ್ಲದಂತೆ ಆಗಿರುತ್ತದೆ. ಆದರೆ ಈಗ ಕಾಲವು ಸಂಪೂರ್ಣ ಬದಲಾಗಿದೆ. ಶಾಲೆಯಲ್ಲಿರುವ ತನಕ ಆಟ ಪಾಠಗಳು, ಮನೆಗೆ ಬಂದ ತಕ್ಷಣ ಇದೆಲ್ಲವೂ ಮಾಯವಾಗುತ್ತದೆ. ತಂದೆ ತಾಯಿ ಕೆಲಸಕ್ಕೆ ಹೋದಲ್ಲಿ ಮಕ್ಕಳು ಪಕ್ಕದ ಮನೆಯಲ್ಲಿ ಇರುವ ಸನ್ನಿವೇಶ ಸೃಷ್ಠಿಯಾಗಿದೆ. ಆದರೆ ಇತ್ತೀಚೆಗೆ ಎಲ್ಲವೂ ತಲೆಕೆಳಗಾಗಿ, ಅನೇಕ ಕಡೆ ಕೆಲವು ಹುಡುಗರು ಮೂರು ಕಡ್ಡಿಗಳನ್ನು ಅಥವಾ ಕಲ್ಲುಗಳನ್ನು ತಮ್ಮ ಮನೆಯ ಮುಂದೆ ಇಟ್ಟುಕೊಂಡು ಕ್ರಿಕೆಟ್ ಆಟವನ್ನು ಮಾತ್ರ ಆಡುತ್ತಿದ್ದು, ಬೇಸರವಾದರೆ ಅದನ್ನು ಬಿಟ್ಟು ಮೊಬೈಲ್‍ಗಳಲ್ಲಿ ಆಟವಾಡುವುದು ಇತ್ತೀಚಿನ ಹವ್ಯಾಸವಾಗಿದೆ.

ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ಅನೇಕ ಬಡಾವಣೆಗಳು ತಲೆ ಎತ್ತಿದ್ದು, ಎಲ್ಲಿಂದಲೋ ಜನಗಳು ಬಂದು ವಾಸಮಾಡುತ್ತಿರುವುದರಿಂದ ಇವರಿಗೆ ಪಕ್ಕದ ಮನೆಯ ಸಂಪರ್ಕ ಕೂಡ ಇರುವುದಿಲ್ಲ. ಹೊಸ ಜನಗಳು ಹೊಸ ಪ್ರದೇಶ ಯಾರು? ಹೇಗೋ? ಎಂಬ ಆತಂಕವು ಮನೆ ಮಾಡಿ ಯಾರ ಸಂಪರ್ಕವನ್ನು ಬೆಳೆಸಿಕೊಳ್ಳಲು ಹೋಗುವುದಿಲ್ಲ. ತಾವಾಯಿತು ತಮ್ಮ ಉದ್ಯೋಗವಾಯಿತು ಎಂಬಂತೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಒಬ್ಬರ ಸಂಪರ್ಕ ಇನ್ನೊಬ್ಬರಿಗೆ ಇಲ್ಲದಂತಾಗಿ ಎಲ್ಲರೂ ಏಕಾಂಗಿ ಬದುಕನ್ನು ಸಾಗಿಸುವಂತಹ ಸನ್ನಿವೇಶ ಬಲವಂತವಾಗಿ ಮನುಷ್ಯನ ಮೇಲೆ ಹೇರಿದಂತಾಗಿರುವುದು ಕಟು ಸತ್ಯ. ಹೊಸ ಬಡಾವಣೆಗಳಲ್ಲಿ ಪಕ್ಕದ ಮನೆಗಳಲ್ಲಿ ಏನಾದರೂ ಸಾವು ಸಂಭವಿಸಿದರೂ ಹೋಗಿ ನೋಡವುದೇ ಇಲ್ಲದಂತಾಗಿದ್ದು, ತಮ್ಮ ಮನೆಯ ಮಹಡಿ ಮೇಲೆ ನಿಂತು ಕಾರ್ಯಗಳನ್ನು ನೋಡುತ್ತಿರುವುದು ಕಂಡು ಬಂದಿರುವ ದೃಶ್ಯಗಳು. ದೂರದ ಊರಿನಿಂದ ಬಂದಿರುವ ನೆಂಟರು ಅಥವಾ ಸ್ನೇಹಿತರು ಬಂದು ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸುವಂತ ಪರಿಸ್ಥಿತಿ ಬಂದೊದಗಿರುವುದು ಮನುಷ್ಯನು ಏಕಾಂಗಿಯಾಗುತ್ತಿರುವುದಕ್ಕೆ ನಿದರ್ಶನವಾಗಿದೆ.

ಹಳೆಯ ಪಟ್ಟಣ ಹಳ್ಳಿಗಳಲ್ಲಿ ವಾಸಿಸುವವರು ಮಾತ್ರ ಇನ್ನೂ ಸ್ವಲ್ಪ ಭಿನ್ನವಾದ ರೀತಿಯ ಜೀವನ ಸಾಗಿಸುತ್ತಿರುವುದು ಕಂಡು ಬಂದಿದ್ದು, ಆದರೂ ಹಳ್ಳಿ ಹಾಗೂ ಸಣ್ಣ ಸಣ್ಣ ಪಟ್ಟಣದಲ್ಲಿರುವ ಯುವಕರು ಯುವತಿಯರು ಜೀವನೋಪಾಯಕ್ಕೆ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಸೇರಿಕೊಂಡು ಬೆಳಿಗ್ಗೆ ಪಟ್ಟಣಕ್ಕೆ ಬಂದರೆ ಮನೆಗೆ ವಾಪಸಾಗುವುದು ಸೂರ್ಯ ಮುಳುಗಿ ದೀಪ ಬೆಳಗಿದ ನಂತರವಷ್ಟೇ. ಹೀಗಿದ್ದಾಗ ಯಾರನ್ನೂ ಮಾತನಾಡಿಸದ ಸನ್ನಿವೇಶ ಬಂದಿದೆ. ಹಾಗಾಗಿ ಪರಿಚಯವಿದ್ದರೂ ಕೆಲಸದ ಒತ್ತಡದಿಂದ ಹೆಚ್ಚಿಗೆ ಒಟ್ಟಾಗಿ ಕಾಲ ಕಳೆಯಲು ಆಗುವುದಿಲ್ಲ. ಎಲ್ಲರಿಗೂ ಅವರದೇ ಆದ ಸಂಸಾರ ತಾಪತ್ರಯ, ವೈಯುಕ್ತಿಕ ದ್ವೇಷ ಹೀಗೆ ಹಲವಾರು ಕಾರಣಗಳಿಂದ ಒಬ್ಬರೊನ್ನೊಬ್ಬರು ಬೆರೆತು ಮಾತಾಡಿ ಕಾಲ ಕಳೆಯುವಂತಹ ದಿನಗಳು ನೋಡಲು ಎಲ್ಲೂ ಕಾಣ ಸಿಗುವುದಿಲ್ಲ. ಹಳ್ಳಿಗಳಲ್ಲಿ ಬೇಸಾಯದ ಕೆಲಸ ಮುಗಿದಿದ್ದರೆ ಬಿಡುವಿನ ವೇಳೆಯಲ್ಲಿ ಕೆಲವು ಸ್ನೇಹಿತರುಗಳು ಒಂದುಗೂಡಿ ಮಾತಾಡುತ್ತಾ ಕಾಲ ಕಳೆಯಬಹುದು.

ಕಾಲೇಜು ಓದು ಮುಗಿಸಿ ಕೆಲಸಕ್ಕೆ ಸೇರಿದ ನಂತರ ವಾತಾವರಣವೇ ಸಂಪೂರ್ಣ ಬದಲಾವಣೆಯಾಗಿದ್ದು, ಕೆಲಸ ಮಾಡುವ ಸ್ಥಳಗಳಲ್ಲಿ ದೊರೆಯುವ ಸ್ನೇಹಿತರ ಮನೋಭಾವವೇ ಬೇರೆ ರೀತಿಯದ್ದಾಗಿರುತ್ತದೆ. ಕಾಲೇಜಿನಲ್ಲಿ ಸ್ನೇಹಿತರೊಡನೆ ಆಟವಾಡಿದ್ದಂತೆ ಕೆಲಸದ ಜೊತೆಗಾರರೊಡನೆ ಆಟ ಆಡುವುದಕ್ಕೆ ಆಗುವುದಿಲ್ಲ. ಕಾಲೇಜಿನ ದಿನಗಳಲ್ಲಿ ಯಾವ ರೀತಿಯ ಯೋಚನೆ ಇಲ್ಲದೆ ಬಹಳ ಖುಷಿಯಿಂದ “ವಿದ್ಯಾರ್ಥಿ ಜೀವನವೇ ಚಿನ್ನದ ಜೀವನ ಇದ್ದಂತೆ” ಎಂದು ಎಲ್ಲರೊಡನೆ ಬೆರೆತು ಹಾಡಿ ಕುಣಿದು ಕುಪ್ಪಳಿಸಿ ಆಟವಾಡುವಂತಹ ಸನ್ನಿವೇಶ ಇಲ್ಲಿ ಬರುವುದೇ ಇಲ್ಲ. ಎಲ್ಲರಿಗೂ ಅವರದ್ದೇ ಆದ ಸಂಸಾರದ ಜವಾಬ್ದಾರಿಯು ಹೆಗಲೇರಿರುತ್ತದೆ. ಇದರ ಜೊತೆಗೆ ಕೆಲಸದ ಒತ್ತಡ, ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ತವಕ, ವಾಹನದ ದಟ್ಟಣೆ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹೋಗುವುದೇ ಒಂದು ದೊಡ್ಡ ಸಾಧನೆಯಾಗಿರುತ್ತದೆ. ಕೆಲಸದ ಸಮಯದಲ್ಲಿ ಸಿಗುವ ಬಿಡುವಿನ ವೇಳೆ ಎಂದರೆ ಊಟದ ಸಮಯ ಕೇವಲ 30 ರಿಂದ 45 ನಿಮಿಷಗಳು ಇರಬಹುದು. ಆದರೆ ಇಷ್ಟು ಕ್ಲುಪ್ತ ಸಮಯದಲ್ಲಿ ಊಟ ಮಾಡಿ ಹೋಗುವುದಕ್ಕೆ ಸಾಲುವುದಿಲ್ಲ. ಮನೆಯಿಂದ ಊಟದ ಡಬ್ಬಿ ತೆಗೆದುಕೊಂಡು ಹೋಗಿದ್ದರೆ ಮಾತ್ರ ಎಲ್ಲರ ಜೊತೆ ಬೆರೆತು ಮಾತಾಡುತ್ತಾ ಊಟ ಮಾಡಿ ಇರುವ ಸ್ವಲ್ಪ ಸಮಯದಲ್ಲಿ ವಿರಮಿಸಬಹುದು. ಊಟ ಮಾಡಲು ಹೋಟೆಲನ್ನು ಅವಲಂಬಿಸಿದ್ದರೆ ಸ್ವಲ್ಪ ವಿರಾಮವೂ ಸಿಗುವುದಿಲ್ಲ. ಬೆಳಿಗ್ಗೆ ಹೋದರೆ ವಾಪಸ್ ಬರುವುದೇ ರಾತ್ರಿಯಾಗಿರುತ್ತದೆ. ಇಂತಹ ಸನ್ನಿವೇಶಗಳಲ್ಲಿ ಆಟ ಹಾಡು ಎಲ್ಲವೂ ಮರೆತಂತೆ ಆಗಿರುತ್ತದೆ. ವಾರಕ್ಕೊಂದು ರಜೆ ಸಿಕ್ಕಿದರೆ ಅದನ್ನು ಮನೆಯಲ್ಲಿರುವ ಬೇರೆ ಕೆಲಸ ನಿರ್ವಹಿಸುವುದಕ್ಕೆ ಸಾಲುವುದಿಲ್ಲ.

ವಿವಾಹವಾಗಿದ್ದರೆ ಮಾತ್ರ ತನ್ನ ಪತ್ನಿಯೇ ಸ್ನೇಹಿತೆ ಅಥವಾ ಸಂಗಾತಿ ಎಂಬುದಾಗಿ ಜೊತೆಯಲ್ಲಿ ಕಾಲ ಕಳೆಯಬಹುದು. ಒಳ್ಳೆಯ ಮಡದಿ ದೊರೆತು ಎಲ್ಲರಲ್ಲೂ ಹೊಂದಿಕೊಂಡು ಹೋಗುವಂತಹ ಮನಸ್ಸುಳ್ಳವಳಾದರೆ ಮಾತ್ರ ತಾನು ಏಕಾಂಗಿ ಎಂಬುದನ್ನು ಮರೆತು ಸಂತೋಷದಿಂದ ಕಾಲ ಕಳೆಯಬಹುದು. ಇಲ್ಲದಿದ್ದರೆ ಮದುವೆಯಾದರೂ ಏಕಾಂಗಿಯಂತೆ ಬದುಕನ್ನು ಸಾಗಿಸಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಕಛೇರಿಯಲ್ಲಿ ಒಂದು ರೀತಿಯ ಕೆಲಸದ ಕಿರಿ ಕಿರಿಯಾಗಿ, ಮನೆಯಲ್ಲಿ ಮಡದಿಯ ಕಿರಿಕಿರಿ ಉಂಟಾದರೆ ಎಲ್ಲಿ ಹೋಗಿ ಬದುಕುವುದು ಎಂಬ ಆಲೋಚನೆ ಹಾಗೂ ಜೀವನದಲ್ಲಿಯೇ ಜಿಗುಪ್ಸೆ ಉಂಟಾಗುತ್ತದೆ. ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಜೀವನವನ್ನು ದೂಡುವಂತ ಸನ್ನಿವೇಶ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಇದರ ಜೊತೆಗೆ ಹೆತ್ತವರ ಯೋಗಕ್ಷೇಮ, ಮಡದಿ ಮಕ್ಕಳ ಯೋಗಕ್ಷೇಮ ಇವೆಲ್ಲವನ್ನೂ ನೋಡಿ ಕೊಳ್ಳುವುದೇ ಒಂದು ಸಾಹಸದಂತೆ ಆಗಿರುತ್ತದೆ. ಕಛೇರಿಯಿಂದ ಬಂದೊಡನೇ ಶಾಪಿಂಗ್‍ಗೆ ಮಕ್ಕಳಿಗೆ ಮೈಯಲ್ಲಿ ಹುಷಾರಿಲ್ಲದಿದ್ದರೆ ವೈದ್ಯರನ್ನು ನೋಡಲು ಹೋಗಬೇಕಾದ ಪ್ರಸಂಗ ಬರಬಹುದು. ಇವೆಲ್ಲ ಕಾರ್ಯಗಳು ಮುಗಿಯುವ ಹೊತ್ತಿಗೆ ಸುಸ್ತಾಗಿ ಹಾಸಿಗೆ ಕಂಡರೆ ಸಾಕು ಎಂಬಂತೆ ಆಗಿದ್ದರೆ ಏನೂ ಕೇಳದೆ ಸೇರಿದ್ದನ್ನು ತಿಂದು ಹೋಗಿ ಮಲಗಿಬಿಡಬಹುದು. ಏನೂ ಕೆಲಸವಿಲ್ಲದಿದ್ದರೆ ಮನೋರಂಜನೆಗಾಗಿ ದೂರದರ್ಶನವನ್ನು ವೀಕ್ಷಿಸುತ್ತಾ ಕಾಲ ಕಳೆಯಬಹುದು. ಹೀಗಾಗಿ ಯಾರೊಬ್ಬರ ಒಡನಾಟವೂ ಸಿಗುವುದಿಲ್ಲ. ಸಿಕ್ಕಿದರೂ ಅಪರೂಪವಾಗಿರುತ್ತದೆ. ಸಾಲು ಸಾಲು ರಜೆ ಸಿಕ್ಕಿದರೆ ತನ್ನ ಸಂಸಾರದವರೊಡನೆ ದೂರ ಪ್ರವಾಸ ಕೈಗೊಂಡು, ತನ್ನ ಸಂಸಾರದ ಸದಸ್ಯರ ಜೊತೆ ಮಾತ್ರ ಸುತ್ತಾಡಿ ಬರಬಹುದು. ಆರ್ಥಿಕವಾಗಿ ಸದೃಡನಾಗಿದ್ದರೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಳ್ಳ ಬಹುದು. ಬರುವ ಸಂಬಳದಲ್ಲಿ ಸಂಸಾರ ನಿರ್ವಹಣೆ ಮಾಡಬೇಕು, ಇದರ ಜೊತೆಗೆ ಮಕ್ಕಳ ವಿದ್ಯಾಭ್ಯಾಸದ ಖರ್ಚು, ಹಬ್ಬಗಳಲ್ಲಿ ಮಕ್ಕಳಿಗೆ ಹೊಸ ಬಟ್ಟೆ ಖರೀದಿಸಲು ಆಗುವ ಖರ್ಚು, ಮನೆಯವರಿಗೆ ಆರೋಗ್ಯ ಎರುಪೇರಾದರೆ ವೈದ್ಯಕೀಯ ವೆಚ್ಚ ಇವೆಲ್ಲವನ್ನೂ ಸರಿದೂಗಿಸಬೇಕಾದ ಪ್ರಸಂಗ ಇರುತ್ತದೆ. ಇವೆಲ್ಲದರ ನಡುವೆ ಪ್ರವಾಸದ ಖರ್ಚುನ್ನು ಹೊಂದಿಸಲು ಬಹಳ ಕಷ್ಟವಾಗಿ ಮನೆಯ ಸಂಸಾರದ ಖರ್ಚು ಸರಿದೂಗಿದರೆ ಸಾಕು ಎಂದು ಯಾವ ಪ್ರವಾಸವೂ ಬೇಡ ಎಂದು ಕೈಚೆಲ್ಲಬಹುದು.

ಈಗಿನ ಕಾಲದಲ್ಲಿ ವಿಜ್ಞಾನ ಮುಂದುವರೆದು ಮನೆ ಮನೆಯಲ್ಲಿಯೂ ಟಿ.ವಿ. ನೂರಾರು ಚಾನಲ್ ಗಳು ವಿಧ ವಿಧವಾದ ಕಾರ್ಯಕ್ರಮಗಳು ಪ್ರಸಾರವಾಗುತ್ತಿರುವುದರಿಂದ ಎಲ್ಲರೂ ಟಿ.ವಿಗೆ ದಾಸರಾಗಿರುವ ಸನ್ನಿವೇಶ ಸೃಷ್ಠಿಯಾಗಿದೆ. ಒಳ್ಳೆಯ ಕಾರ್ಯಕ್ರಮ ಪ್ರಸಾರವಾಗುತ್ತಾ ಇರುವ ಸಮಯದಲ್ಲಿ ಅಪರೂಪಕ್ಕೆ ಯಾರಾದರೂ ಸ್ನೇಹಿತರು ಅಥವಾ ನೆಂಟರೋ ಬಂದರೆ ಈ ಕಡೆ ಕಾರ್ಯಕ್ರಮ ನೋಡಲು ಆಸೆ ಸ್ನೇಹಿತರನ್ನು ಮಾತಾಡಿಸಬೇಕಾಗಿರುವ ಅನಿವಾರ್ಯ ಸನ್ನಿವೇಶ ಬಂದು ಏಕಪ್ಪಾ ಇವರು ಈ ಹೊತ್ತಿನಲ್ಲಿ ಬಂದರೂ ಎಂದು ಪಶ್ಚಾತ್ತಾಪ ಪಟ್ಟರೂ ಆಶ್ಚರ್ಯವಿಲ್ಲ. ಟಿ.ವಿಯ ಮುಂದೆ ಕುಳಿತರೆ ಯಾರೂ ಬೇಡ ಎಂಬ ಮನೋಭಾವ ಬಂದು ಬಿಟ್ಟಿರುತ್ತದೆ. ಪ್ರಪಂಚದ ಆಗುಹೋಗುಗಳು ಜೊತೆಗೆ ಮನರಂಜನೆ ಕಾರ್ಯಕ್ರಮಗಳು ಒಂದೇ ಸಮನೆ ಬಿತ್ತರವಾಗುತ್ತಿರುವಾಗ ಬೇರೆ ಜನಗಳ ಒಡನಾಟವೇಕೆ ಎಂಬ ಮನೋಭಾವ ಬಂದಿದೆ. ಇದೂ ಸಾಲದೆಂಬಂತೆ ಪ್ರತಿಯೊಬ್ಬರ ಬಳಿಯಲ್ಲೂ ಮೊಬೈಲ್ ಬಂದಿರುವುದರಿಂದ ಎಲ್ಲರೂ ತಮ್ಮದೇ ಆದ ಲೋಕದಲ್ಲಿ ಮೈಮರೆತಿರುತ್ತಾರೆ. ಬೆಳಿಗಿನಿಂದ ದಿನಪೂರ್ತಿ ದೂರದರ್ಶನದ ಕಾರ್ಯಕ್ರಮಗಳು, ಫೇಸ್ ಬುಕ್, ವಾಟ್ಸಾಪ್ ಹಾಗೂ ಇನ್ನಿತರೆ ಸಂದೇಶ ರವಾನಿಸುವ ಮಾದ್ಯಮಗಳು ಹಾಡು, ನೃತ್ಯ ಸಿನಿಮಾ ಕ್ರೀಡೆ ಹೀಗೆ ಅನೇಕ ಮನರಂಜನೆ ಕೈಯಲ್ಲೇ ನೋಡಬೇಕಾದರೆ ಬೇರೆಯವರ ಸಹವಾಸ ನಮಗೇಕೆ ಬೇಕು ಎನ್ನುವ ಮನೋಭಾವನೆ ಮನೆ ಮಾಡಿರುತ್ತದೆ. ಏಕಾಂಗಿ ಯಾಗಿ ಕಾರ್ಯಕ್ರಮ ವೀಕ್ಷಿಸುತ್ತಾ ಕುಳಿತು ಹೊತ್ತಿಗೆ ಸರಿಯಾಗಿ ಊಟ ತಿಂಡಿ ಕುಳಿತಲ್ಲಿಗೆ ಬರುವುದರಿಂದ ಬೇರೆ ಯೋಚನೆಯನ್ನು ಕನಸು ಮನಸ್ಸಿನಲ್ಲಿಯೂ ಮಾಡದಂತ ಸನ್ನಿವೇಶ ಬಂದಿದ್ದು, ಮನುಷ್ಯನು ಏಕಾಂಗಿಯಾಗಿ ತನ್ನದೇ ಆದ ಲೋಕದಲ್ಲಿ ವಿಹರಿಸುವಂತೆ ಆಗಿದೆ. ವಿದ್ಯಾರ್ಥಿಯ ರಾದಿಯಾಗಿ ಎಲ್ಲರೂ ಇದಕ್ಕೆ ಮಾರುಹೋಗಿದ್ದು, ಬೇರೆಯವರೊಡನೆ ಕಲೆತು ಆಟ ಆಡುವುದು ಅಪರೂಪವಾಗಿದೆ. ಮೊಬೈಲ್‍ನಲ್ಲಿಯೇ ಅಥವಾ ಕಂಪ್ಯೂಟರ್‍ನಲ್ಲಿ ಯಾವುದಾದರೂ ಗೇಮನ್ನು ಆಡುತ್ತಾ ಕಾಲ ಕಳೆಯುವ ಅದೆಷ್ಟೋ ಮಂದಿಗೆ ಏಕಾಂಗಿ ಬದುಕೇ ಹಿತವಾಗಿರುವಂತೆ ಗೋಚರಿಸುತ್ತಿದೆ.

ಒಟ್ಟಿನಲ್ಲಿ ಹೇಳುವುದಾದರೆ ವಿಜ್ಞಾನದ ಅವಿಷ್ಕಾರದಿಂದ ಪ್ರಪಂಚದ ಆಗುಹೋಗುಗಳನ್ನು ಎಲ್ಲರೂ ತಮ್ಮ ತಮ್ಮ ಅಂಗೈಯಲ್ಲಿರುವ ಮೊಬೈಲ್‍ನಲ್ಲಿ ನೋಡುವಂತಹ ಅವಕಾಶ ಒದಗಿಬಂದಿರುವುದರಿಂದ ಪ್ರಪಂಚವೇ ಕಿರಿದಾಗುತ್ತಾ ಇದೆಯೇನೋ ಎಂಬಂತೆ ಭಾಸವಾಗಿದ್ದು, ಅದಕ್ಕೆ ತಕ್ಕಂತೆ ಸಂಘ ಜೀವಿಯಾಗಿದ್ದ ಮನುಷ್ಯನು ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗುತ್ತಿರುವುದು ನಿಜಕ್ಕೂ ವಿಷಾದನೀಯ ವಾದ ಸಂಗತಿಯಾಗಿದೆ.

ಲೇಖಕರು: ಎನ್.ಮುರಳೀಧರ್
ಕಾವ್ಯನಾಮ: ಮುರಳಿಮಂಗಲಧರೆ
ವಕೀಲರು
ನೆಲಮಂಗಲ

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ಅಂಕಣ17 hours ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ4 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ5 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ6 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

Trending