Connect with us

ದಿನದ ಸುದ್ದಿ

ಚಳ್ಳಕೆರೆ | ಇಸ್ರೋದ ಮತ್ತೊಂದು ಸಾಧನೆ : ‘ಪುಷ್ಪಕ್‌’ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ

Published

on

ಸುದ್ದಿದಿನ,ಚಳ್ಳಕೆರೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಪರೀಕ್ಷಾ ವಲಯದಿಂದ ’ಪುಷ್ಪಕ್’ ಹೆಸರಿನ ಮರುಬಳಕೆ ಉಡಾವಣಾ ವಾಹನದ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಗೊಳಿಸಿದೆ. ಇದು ಮೂರನೇ ಹಾಗೂ ಕೊನೆಯ ಪ್ರಾಯೋಗಿಕ ಉಡಾವಣೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಬೆಳಗ್ಗೆ 7 ಗಂಟೆ 10 ನಿಮಿಷಕ್ಕೆ ಪ್ರಯೋಗ ನಡೆಸಿದ್ದು, ಲ್ಯಾಂಡಿಂಗ್ ಯಶಸ್ವಿಯಾಗಿರುವುದಾಗಿ ಹೇಳಿದೆ. ರಾಕೇಟ್ ಉಡಾವಣೆ ಮಾಡಿದ ಬಳಿಕ ಸುಮಾರು 4.5 ಕಿಲೋಮೀಟರ್ ಎತ್ತರದಲ್ಲಿ ಹಾರಾಟ ನಡೆಸಿದ ನಂತರ ಸುರಕ್ಷಿತವಾಗಿ ಕೆಳಗಿಳಿಯಿತು.

ಇದರೊಂದಿಗೆ ಮರು ಬಳಕೆ ಮಾಡಬಹುದಾದ ರಾಕೇಟ್ ತಂತ್ರಜ್ಞಾನದಲ್ಲಿ ಇಸ್ರೊ ಮಹತ್ವದ ಸಾಧನೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದೆ. ಇಸ್ರೋ ಮತ್ತೊಂದು ಮೈಲುಗಲ್ಲು ಸಾಧಿಸಿದ್ದು, ಮೂರನೇ ಹಾಗೂ ಅಂತಿಮ ಪ್ರಾಯೋಗಿಕ ಪರೀಕ್ಷೆಯಲ್ಲಿ ಪುಷ್ಪಕ್ ತನ್ನ ನಿರ್ದಿಷ್ಟ ಸ್ಥಾನದಲ್ಲಿ ಲ್ಯಾಂಡ್ ಆಗಿದೆ ಎಂದು ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ

Published

on

ಸುದ್ದಿದಿನ,ದಾವಣಗೆರೆ:ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರು ಜನರ ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.

ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ– ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು 

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.

ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ  ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’  ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ  ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು.  ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.

ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ  ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.

ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್‌ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending