ದಿನದ ಸುದ್ದಿ
ಚಿತ್ರದುರ್ಗ ಜಿಲ್ಲೆಗೆ ಜಗಳೂರು ಸೇರ್ಪಡೆ; ಕಾವೇರಿದ ಹೋರಾಟ
ಸುದ್ದಿದಿನ ದಾವಣಗೆರೆ: ಶತಮಾನದಲ್ಲಿ ಏಳು ದಶಕ ಬರ ಕಂಡಿರುವ ಜಗಳೂರು ತಾಲೂಕಿನಲ್ಲಿ ಈಗ ಚಿತ್ರದುರ್ಗ ಜಿಲ್ಲೆಗೆ ಸೇರಬೇಕೆಂಬ ಹೋರಾಟದ ಕಾವು ತೀವ್ರವಾಗುತ್ತಿದೆ. ಸಾಮಾಜಿಕ, ಆರ್ಥಿಕ ಸೌಲಭ್ಯಗಳಿಂದ ಜಗಳೂರು ದಾವಣಗೆರೆ ಜಿಲ್ಲೆಯಾಗುವ ಮೊದಲು ಚಿತ್ರದುರ್ಗ ಜಿಲ್ಲೆಯಲ್ಲಿತ್ತು. ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಇದು ಜಗಳೂರು ತಾಲೂಕಿನ ಜನರಲ್ಲಿ ಹೋರಾಟಕ್ಕೆ ಸಜ್ಜಾಗಲು ಕಾರಣವಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ, ಹೊನ್ನಾಳಿ, ಹರಿಹರ, ದಾವಣಗೆರೆ, ಹರಪನಹಳ್ಳಿ, ಜಗಳೂರು ಸೇರಿ ಆರು ತಾಲೂಕುಗಳಿವೆ. ಜಗಳೂರು ಹೊರತು ಪಡಿಸಿ ಉಳಿದ ತಾಲೂಕುಗಳಿಗೆ ಅಭಿವೃದ್ಧಿಯಲ್ಲಿ ಮುಂದಿವೆ. ಆದರೆ, ಜಗಳೂರು ಎಲ್ಲದ್ದಕ್ಕೂ ದಾವಣಗೆರೆ, ಚಿತ್ರದುರ್ಗ ಅಲಂಬಿಸಬೇಕಿದೆ. ದಾವಣಗೆರೆ ೫೦ ಕಿಮೀ, ಚಿತ್ರದುರ್ಗ ೪೦ ಕಿಮೀ ಅಂತರದಲ್ಲಿವೆ. ಆದರೆ, ಅಂತರಕ್ಕಿಂತ ಹೆಚ್ಚಾಗಿ ಜಗಳೂರು ತಾಲೂಕಿನ ಜನತೆ ಚಿತ್ರದುರ್ಗ ಜಿಲ್ಲೆಯೊಂದಿಗೆ ಭಾವನಾತ್ಮಕ, ವೈವಾಹಿಕ ಸಂಬಂಧ ಬೆಸೆದುಕೊಂಡಿದೆ.
ಜಗಳೂರಿಗಿಲ್ಲ ಜಲಮೂಲ
ಜಗಳೂರು ತಾಲೂಕಿನಲ್ಲಿ ಯಾವುದೇ ಜಲಮೂಲಗಳಿಲ್ಲ. ಬರಪೀಡಿತ ತಾಲೂಕು ಆಗಿರುವುದರಿಂದ ಅಂತರ್ಜಲವೂ ಅಷ್ಟಕಷ್ಟೇ, ಒಂದು ಕೊಳವೆಬಾವಿ ಹಾಕಿಸಿದರೆ 800ರಿಂದ 1000 ಅಡಿಯಲ್ಲಿ ನೀರು ಸಿಗುತ್ತದೆ. ಇದಕ್ಕೆ ಲಕ್ಷಾಂತರ ರೂಪಾಯಿ ಸುರಿಯಬೇಕು. ಆರ್ಥಿಕ ಹಿಂದುಳಿದ ಜನರು ಇರುವುದರಿಂದ ಕೊಳವೆಬಾವಿಗೆ ಲಕ್ಷಾಂತರ ಸುರಿದರೆ ಅವರ ಜೀವನ ಪಾತಾಳಕ್ಕಿಳಿಯುತ್ತಿದೆ. ಸೌಲಭ್ಯ ವಂಚಿತ, ಬರಪೀಡಿತ ಜಗಳೂರು ತಾಲ್ಲೂಕನ್ನು ಪುನಃ ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಹೋರಾಟ ಚುರುಕು ಪಡೆದುಕೊಳ್ಳುತ್ತಿದೆ.
ಮಳೆ ಬಾರದೇ ಬಿತ್ತಿದ ಬೆಳೆಗಳು ಒಣಗಿ ಹೋಗಿದ್ದರೂ ಸಹ ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ದೇಶವೆಂದು ಘೋಷಣೆ ಮಾಡಿಲ್ಲ. ನೀರಾವರಿ ಪ್ರದೇಶ ಹೊಂದಿರುವ ಹರಿಹರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡುವ ಮೂಲಕ ತಾಲ್ಲೂಕಿಗೆ ಮಲತಾಯಿ ಧೋರಣೆ ಮಾಡಿದೆ.
ಬಳ್ಳಾರಿಗೆ ಸೇರಿದ ಹರಪನಹಳ್ಳಿ; ಜಗಳೂರು ಕ್ಯಾತೆ
ಭಾಗಶಃ ನೀರಾವರಿ ಭೂಮಿ ಹೊಂದಿರುವ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದೆ. ಹರಪನಹಳ್ಳಿ ತಾಲೂಕಿನ ಜನತೆಗೆ ಹೈದರಾಬಾದ್ ಕರ್ನಾಟಕ ಸೌಲಭ್ಯ ಸಿಗಲಿದೆ. ಇದನ್ನೇ ಮುಂದಿಟ್ಟುಕೊಂಡಿರುವ ಜಗಳೂರು ತಾಲೂಕಿನ ಮುಖಂಡರು ನಮ್ಮನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಬಿಡಿ ಎಂಬ ಪಟ್ಟಹಿಡಿದಿದ್ದಾರೆ. ಜಗಳೂರು ತಾಲೂಕು ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳು, ವಿದರ್ಭ ಪ್ಯಾಕೇಜ್, ನಂಜುಂಡುಪ್ಪ ವರದಿಯ ಸೌಲಭ್ಯಗಳಿಂದ ವಂಚಿತವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸೇರಿಸಿದರೆ ನಮಗೆ ಈ ಸೌಲಭ್ಯ ಸಿಗಲಿದೆ ಎಂಬ ಆಶಯ ಹೊಂದಿದ್ದಾರೆ.
ಹೋರಾಟಕ್ಕೆ ಮಾಜಿ ಬೆಂಬಲ, ಹಾಲಿ ಶಾಸಕರಿಂದ ಕಾದು ನೋಡುವ ತಂತ್ರ
ಚಿತ್ರದುರ್ಗ ಜಿಲ್ಲೆಗೆ ಜಗಳೂರು ತಾಲೂಕು ಸೇರಿಸಲು ರೂಪಿಸುತ್ತಿರುವ ಹೋರಾಟಕ್ಕೆ ಮಾಜಿ ಶಾಸಕ ಎಚ್.ಪಿ. ರಾಜೇಶ್ ಬೆಂಬಲ ಸೂಚಿಸಿದ್ದಾರೆ. ಆದರೆ, ಹಾಲಿ ಶಾಸಕ ಎಸ್.ವಿ. ರಾಮಚಂದ್ರ ಕಾದು ನೋಡುವ ತಂತ್ರ ಬಳಸಿದ್ದು, ಇತ್ತ ಬೆಂಬಲವೂ ಇಲ್ಲ, ಅತ್ತ ವಿರೋಧವೂ ಇಲ್ಲ ಎಂಬಂತೆ ತಟಸ್ಥರಾಗಿದ್ದಾರೆ. ಆದರೆ, ಮಾಜಿ ಶಾಸಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜಗಳೂರು ತಾಲೂಕನ್ನು ದಾವಣಗೆರೆ ಜಿಲ್ಲೆಗೆ ಸೇರಿಸಿ ಇಪ್ಪತ್ತು ವರ್ಷಗಳಾದರೂ ಅಭಿವೃದ್ಧಿ ಕಂಡಿಲ್ಲ. ಹಾಗಾಗಿ ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವುದು ಅನಿವಾರ್ಯ ಎಂಬ ಅಭಿಪ್ರಾಯ ಹೊಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ18 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ14 hours agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

