ದಿನದ ಸುದ್ದಿ
ದಾವಣಗೆರೆ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ | ಅರ್ಹರಿಗೆ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ಮದ್ಯವರ್ತಿಗಳ ಹಾವಳಿ ತಡೆಗಟ್ಟಲು ಕ್ರಮ : ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜಗಳೂರು ತಾಲ್ಲೂಕು ಗಡಿ ಭಾಗದ ಅಂಚಿನಲ್ಲಿರುವ ಬಸವನಕೋಟೆ ಹಾಗೂ ಅಗಸನಹಳ್ಳಿ ಗ್ರಾಮಗಳು ಜಿಲ್ಲೆಯ ಆಡಳಿತದ ಮುಖ್ಯಸ್ಥರ ಸ್ವಾಗತಕ್ಕೆ ತಳಿರು ತೋರಣಗಳಿಂದ ನವವಧುವಿನಂತೆ ಸಿಂಗಾರಗೊಂಡಿದ್ದವು.
ಉಭಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಕಟೌಟ್ಗಳು ರಾರಾಜಿಸುತ್ತಿದ್ದವು. ಗ್ರಾಮದ ಸಮಸ್ಯೆಗಳ ಪರಿಹಾರದ ನಿರೀಕ್ಷೆಯ ಕಣ್ಣುಗಳು ಜಿಲ್ಲಾಧಿಕಾರಿಗಳ ಬರುವಿಕೆಯ ಹಾದಿಯನ್ನೇ ಎದುರು ನೋಡುತ್ತಿದ್ದವು.
ಕೆಲವು ಜನರ ಕೈಯಲ್ಲಿ ಸರ್ಕಾರಿ ಸವಲತ್ತು ಪಡೆಯಲು ವಯಕ್ತಿಕ ಅರ್ಜಿಗಳಿದ್ದರೆ, ಇನ್ನು ಕೆಲವರ ಕೈಯಲ್ಲಿ ಗ್ರಾಮದ ಜನರ ಹಿತಾಸಕ್ತಿಗಾಗಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳ ಬೇಡಿಕೆಯನ್ನು ಹೊತ್ತ ಅರ್ಜಿಗಳಿದ್ದವು.
ಇದು ‘ಜಿಲ್ಲಾಧಿಕಾರಿಗಳ ನಡಿಗೆ- ಗ್ರಾಮಗಳ ಕಡೆಗೆ’ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಏರ್ಪಡಿಸಲು ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಡಳಿತ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕಾಗಿ ನಿಗದಿಪಡಿಸಲಾಗಿದ್ದ ಬಸವನಕೋಟೆ ಹಾಗೂ ಅಗಸನಹಳ್ಳಿ ಗ್ರಾಮಗಳಲ್ಲಿ ಶನಿವಾರ ಕಂಡುಬಂದ ದೃಶ್ಯಗಳಿವು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ವಾಹನವನ್ನು ಬಿಟ್ಟು, ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳ ಸಮೇತ ಕೆಎಸ್ಆರ್ಟಿಸಿ ಬಸ್ ಮೂಲಕವೇ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಬಸವನಕೋಟೆ ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಭವ್ಯ ಸ್ವಾಗತವನ್ನೇ ಏರ್ಪಡಿಸಿದ್ದರು.
ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ ಪ್ರಸಕ್ತ ವರ್ಷದ ಮೊದಲ ಗ್ರಾಮ ವಾಸ್ತವ್ಯ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಜಗಳೂರು ತಾಲ್ಲೂಕು ಬಸವನಕೋಟೆಯ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಉದ್ಘಾಟಿಸಿದರು.
ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮೊದಲು ಜಗಳೂರಿನ ಬಸವನಕೋಟೆ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆರಂಭಿಸಿದರು, ನಂತರ ಅಗಸನಹಳ್ಳಿಯಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು.
ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ ಮಾಡಬೇಕು ಎಂಬ ಸರ್ಕಾರದ ಮಾರ್ಗಸೂಚಿಯಂತೆ ಈ ಬಾರಿ ಜಗಳೂರು ತಾಲ್ಲೂಕಿನ ಅಗಸನಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ಬಸವನಕೋಟೆ ಗ್ರಾಮದ ಜನರಿಂದ ಅಹವಾಲನ್ನು ಸ್ವೀಕರಿಸಿ ಸಾಧ್ಯವಾದಲ್ಲಿ ಇಲ್ಲಿಯೇ ಪರಿಹಾರ ಸೂಚಿಸುತ್ತೇವೆ ಎಂದು ಭರವಸೆ ಮೂಡಿಸಿದರು.
ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಬೇಕೆಂದರೂ ಮಧ್ಯವರ್ತಿಗಳು ಹಾಗೂ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಅವರಿಗೆ ಹಣ ನೀಡದಿದ್ದರೆ ಕೆಲಸ ಆಗುವುದಿಲ್ಲ ಎಂಬ ಅಪವಾದವಿದೆ. ಈ ಕಾರಣದಿಂದ ಏಜೆಂಟರು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸರ್ಕಾರದ ಎಲ್ಲಾ ಸವಲತ್ತುಗಳನ್ನು ಯಾವುದೇ ಖರ್ಚಿಲ್ಲದೇ ನೇರವಾಗಿ ನಿಮ್ಮ ಬಾಗಿಲಿಗೆ ತಲುಪಿಸುವ ಸದ್ದುದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾಮದ ಕೇರಿ ಕೇರಿಗೂ ಓಡಾಡಿ ಖುದ್ದಾಗಿ ಸಾರ್ವಜನಿಕರಿಂದ ಅಲ್ಲಿಯ ಸಮಸ್ಯೆಗಳು, ವಾಸ್ತವತೆ ಕುರಿತು ತಿಳಿದುಕೊಂಡಿದ್ದೇನೆ. ಗ್ರಾಮಸ್ಥರು ತಮಗೆ ಸಿಗುವ ಸವಲತ್ತುಗಳ ಕುರಿತು ಪ್ರಾಮಾಣಿಕವಾಗಿ ಹೇಳಿದ್ದು, ಸಮಸ್ಯೆಗಳನ್ನು ತಿಳಿಸಿದ್ದಾರೆ. ಈ ಗ್ರಾಮದಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಸತ್ಯ ದರ್ಶನವಾಗಿದೆ. ಗ್ರಾಮದಲ್ಲಿ ಸಾಕಷ್ಟು ಕೆಲಸ ಮಾಡಲು ಬಾಕಿ ಉಳಿದಿದ್ದು ಅದನ್ನು ಪೂರೈಸಲು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ, ಸಂಧ್ಯಾ ಸುರಕ್ಷಾ ಯೋಜನೆಯಡಿ ಬಸವನಕೋಟೆಯಲ್ಲಿ 23 ಅರ್ಜಿ, ಅಗಸನಹಳ್ಳಿ ಗ್ರಾಮದಲ್ಲಿ 8 ಅರ್ಜಿ ಸೇರಿದಂತೆ ಒಟ್ಟು 31 ಅರ್ಜಿ ಬಂದಿದ್ದು ಅದರ ಮಂಜೂರಾತಿ ಆದೇಶಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ವೃದ್ಧಾಪ್ಯ ವೇತನ ಯೋಜನೆಯಡಿ ಬಸವನಕೋಟೆಯಲ್ಲಿ 31, ಅಗಸನಹಳ್ಳಿಯಲ್ಲಿ 07 ಸೇರಿದಂತೆ ಒಟ್ಟು 38 ಅರ್ಜಿಗಳು ಬಂದಿದ್ದು, ಅರ್ಹರೆಲ್ಲರಿಗೂ ಮಂಜೂರಾತಿ ಆದೇಶ ನೀಡಲಾಗುವುದು.
ಇನ್ನು ವಿಧವವೇತನ ಯೋಜನೆಯಡಿ ಬಸವನಕೋಟೆಯಲ್ಲಿ 4, ಅಗಸನಹಳ್ಳಿಯಲ್ಲಿ 01, ಒಟ್ಟು 5 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಮಂಜೂರು ಆದೇಶಗಳನ್ನು ನೀಡಲಾಗುವುದು ಹಾಗೂ 03 ಅಂಗವಿಕಲರ ಮಾಸಾಶನ ಮಂಜೂರಾತಿ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯ ಗ್ರಾಮಸ್ಥರು ಮಗುವೊಂದನ್ನು ತೋರಿಸಿ ಮಗುವಿನ ಖಾಯಿಲೆ ಗುಣಮುಖ ಮಾಡಲು ಖಾಸಗಿ ಆಸ್ಪತ್ರೆಗೆ ಸೇರಿಸಿ ಇಂಜೆಕ್ಷನ್ ಮಾಡಿಸಿದ್ದರ ಪರಿಣಾಮ ಇಂದು ವಾಸಿಮಾಡಲಾಗದ ಸ್ಥಿತಿಗೆ ತಲುಪಿದೆ. ಚಿಕಿತ್ಸೆ ನೀಡಿ ಗುಣಮುಖರಾಗಲು ಸಾಧ್ಯವೇ ಇಲ್ಲದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದು, ಮಗುವಿನ ಸಂಪೂರ್ಣ ಚಿಕಿತ್ಸೆಗಾಗಿ ಜಿಲ್ಲಾಡಳಿತದ ವತಿಯಿಂದ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಗುಣಮುಖರನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.
ಈ ಗ್ರಾಮದಲ್ಲಿ ಬಹಳಷ್ಟು ಜನ ಅಂಗವಿಕಲರ ವೇತನ ತೆಗೆದುಕೊಳ್ಳುತ್ತಿದ್ದಾರೆ. ಅವರ ಪೈಕಿ ಕೆಲವರು ಶೇ.75 ಕ್ಕಿಂತ ಹೆಚ್ಚು ಜನರು ಅಂಗವೈಕಲ್ಯವಿದ್ದರು ಸಹ ಸರಿಯಾದ ಪ್ರಮಾಣಪತ್ರ ಸಿಗದೆ ಸರ್ಕಾರಿ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ರೂ. 1400 ಪಿಂಚಣಿ ಪಡೆಯಲು ಈ ಗ್ರಾಮದಲ್ಲಿ ಸುಮಾರು 6-7 ಜನರು ಅರ್ಹರಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಎಲ್ಲಾ ಸೌಲಭ್ಯಗಳನ್ನು ವಿಳಂಬ ರಹಿತವಾಗಿ ವಿತರಿಸಲಾಗುತ್ತದೆ ಎಂದರು.
ಈ ಊರಿಗೆ ಅನೇಕ ಕೆಲಸ ಮಾಡಲು ಬಾಕಿ ಇದ್ದು ರಸ್ತೆ, ಚರಂಡಿ ಸ್ವಚ್ಚತೆ, ರಾಜಕಾಲುವೆ ನಿರ್ಮಾಣ, ಆಸ್ಪತ್ರೆಯಲ್ಲಿ ವೈದ್ಯರನ್ನು ಒದಗಿಸಲಾಗುವುದು. ಹಾಗೂ ಈ ಗ್ರಾಮದಿಂದ ಹರಪನಹಳ್ಳಿ, ಉಜ್ಜಯಿನಿ, ಕೊಟ್ಟೂರು ಮತ್ತು ದಾವಣಗೆರೆಗೆ ಸರ್ಕಾರಿ ಬಸ್ಸಿನ ಸೌಲಭ್ಯಗಳನ್ನು ನೀಡುವ ವ್ಯವಸ್ಥೆಯನ್ನು ಒದಗಿಸಲು ಜಿಲ್ಲಾಡಳಿತ ಮುಂದಾಗಿದ್ದು, ಇದರಿಂದ ಅನೇಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾದರಿಯಾಗಲಿದೆ ಎಂದು ವಿದ್ಯಾರ್ಥಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ಭರವಸೆ ಮೂಡಿಸಿದರು.
ಜಿಲ್ಲಾ ಕೇಂದ್ರದಲ್ಲಿ ಅನೇಕ ವಸತಿ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ದಾವಣಗೆರೆಯತ್ತ ಮುಖ ಮಾಡಿ ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಮಟ್ಟಕ್ಕೆ ಏರಬೇಕು. ಅಲ್ಲದೇ ಈ ಗ್ರಾಮಗಳಲ್ಲಿ ಖಾಸಗಿ ಬಸ್ಸುಗಳ ಹಾವಳಿ ತುಸು ಹೆಚ್ಚಾಗೆ ಇದ್ದು, ಮುಂದಿನ ದಿನಗಳಲ್ಲಿ ಜನರ ಅನುಕೂಲಕ್ಕಾಗಿ ಸರ್ಕಾರಿ ಬಸ್ಸುಗಳ ಸವಲತ್ತುಗಳನ್ನು ಒದಗಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ10 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ11 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ11 hours agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ11 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !





