ದಿನದ ಸುದ್ದಿ
ಜಗಳೂರು ತಾಲ್ಲೂಕು ಹಿಂದುಳಿದ ಹಾಗೂ ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ತೊಡೆದು ಹಾಕುತ್ತೇವೆ : ಶಾಸಕ ಎಸ್.ವಿ. ರಾಮಚಂದ್ರಪ್ಪ
ಸುದ್ದಿದಿನ, ದಾವಣಗೆರೆ : ಕೆರೆಗಳನ್ನು ತುಂಬಿಸುವುದು, ನೀರಾವರಿ, ಶುದ್ಧ ಕುಡಿಯುವ ನೀರು ಯೋಜನೆಗಳನ್ನು ಸಾಕಾರಗೊಳಿಸುವ ಮೂಲಕ ಜಗಳೂರು ತಾಲ್ಲೂಕು ಹಿಂದುಳಿದ ಹಾಗೂ ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ತೊಡೆದುಹಾಕುವ ಕಾರ್ಯ ಶೀಘ್ರ ಮಾಡಲಾಗುವುದು ಎಂದು ಜಗಳೂರು ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರಪ್ಪ ಹೇಳಿದರು.
ಶನಿವಾರ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,57 ಕೆರೆಗೆ ನೀರು ತುಂಬಿಸುವ ಯೋಜನೆ ಕೆಲವೇ ದಿನಗಳಲ್ಲಿ ಚಾಲನೆ ದೊರೆಯಲಿದೆ. ರೂ.1200 ಕೋಟಿಯ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆಯಾಗಿಸಲು ಕ್ರಮ ವಹಿಸಿದ್ದು, ತಾಲ್ಲೂಕನ್ನು ಹಸಿರೀಕರಣ ಮಾಡುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.
ಈಗಾಗಲೇ ತಾಲ್ಲೂಕಿಗೆ ಸಾಕಷ್ಟು ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತೇವೆ. ವಾಲ್ಮೀಕಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾದ ನಂತರ ಜಗಳೂರು ವಿಧಾನಸಭೆ ಕ್ಷೇತ್ರಕ್ಕೆ ಸ್ವಯಂ ಉದ್ಯೋಗ ನೇರ ಸಾಲಕ್ಕೆ ರೂ.1.35 ಕೋಟಿ, 176 ಗಂಗಾ ಕಲ್ಯಾಣಕ್ಕೆ ರೂ.6.16 ಕೋಟಿ, ಉದ್ಯಮಶೀಲತೆಗೆ ರೂ.79 ಲಕ್ಷ ಸೇರಿದಂತೆ ನಿಗಮದ ಮೂಲಕ ಒಟ್ಟು ರೂ.8.37 ಕೋಟಿ ಅನುದಾನವನ್ನು ಫಲಾನುಭವಿಗಳಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪುವಂತೆ ಮಾಡುತ್ತೇವೆ ಎಂದು ಭರವಸೆ ಮೂಡಿಸಿದರು.
ತಹಶೀಲ್ದಾರ್ ನಾಗವೇಣಿ ಮಾತನಾಡಿ, ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಸ್ಥಳೀಯ ಸಮಸ್ಯೆಗಳನ್ನು ಇಲ್ಲಿಯೇ ಪರಿಹಾರ ಮಾಡುವಲ್ಲಿ ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ ಎಂದರು.
ಪಹಣಿ ತಿದ್ದುಪಡಿಗಾಗಿ 22 ಅರ್ಜಿಗಳು ಬಂದಿವೆ. ಪೌತಿ ಖಾತೆಗೆ 8 ಅರ್ಜಿ ಸ್ವೀಕೃತವಾಗಿದ್ದು, ಪೌತಿ ಖಾತೆಯ ಆಂದೋಲನಕ್ಕೆ ಕ್ರಮವಹಿಸಲಾಗಿದೆ. ಜಮೀನು ಸಕ್ರಮೀಕರಣ ಕೋರಿ ನಮೂನೆ 53 ರಲ್ಲಿ 13 ಅರ್ಜಿಗಳು ಹಾಗೂ ನಮೂನೆ 57ರಲ್ಲಿ 89 ಅರ್ಜಿಗಳು ಬಂದಿದ್ದು, ಈ ಕುರಿತ ಸಮಿತಿ ಸಭೆಗಳಲ್ಲಿ ಎಲ್ಲಾ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಲಾಗುವುದು. ಬಸವನಕಟ್ಟೆ ಗ್ರಾಮಕ್ಕೆ ಈಗಾಗಲೇ ಸರ್ವೇ ನಂ 23ಎ ಅಡಿ 2 ಎಕರೆ ಜಾಗವನ್ನು ಸ್ಮಶಾನಕ್ಕಾಗಿ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಕೊಟ್ರೇಶ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದೇಶ್, ಗ್ರಾ.ಪಂ. ಉಪಾಧ್ಯಕ್ಷೆ ಮರಿಯಮ್ಮನವರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಲ್ಲನಾಯಕ್ ಸೇರಿದಂತೆ ಗ್ರಾಮಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಅಗಸನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಿಡಗಳನ್ನು ನೆಡುವ ಕಾರ್ಯದಲ್ಲಿ ಪಾಲ್ಗೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243